Home Blog

Tipu Cutout Row: ಪಾಕ್ ಪರ ಹಾಡು ಪೋಸ್ಟ್ ಮಾಡಿದ ಆರೋಪ; ಚಿಕ್ಕಮಗಳೂರಿನಲ್ಲಿ ಪ್ರಮುಖ ಆರೋಪಿ ಅರೆಸ್ಟ್!

0

ಚಿಕ್ಕಮಗಳೂರು: ಜಿಲ್ಲೆಯ ಟಿಪ್ಪು ನಗರದ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಟಿಪ್ಪು ನಗರದ ನಿವಾಸಿ ಅಫ್ರಿದ್ (23) ಎಂದು ಗುರುತಿಸಲಾಗಿದೆ. ಖಾಸಗಿ ಕಾರು ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಅಫ್ರಿದ್, ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಂ ಖಾತೆಯನ್ನು ನಿರ್ವಹಿಸುತ್ತಿದ್ದ ಎನ್ನಲಾಗಿದೆ. ಇದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಆರೋಪ ಆತನ ಮೇಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಫ್ರಿದ್ ಹಾಗೂ ಮತ್ತೊಬ್ಬ ಆರೋಪಿ ರೋಷನ್ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ:

ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿವಾದಾತ್ಮಕ ವಿಡಿಯೋವನ್ನು ಸೃಷ್ಟಿಸಿ ಪೋಸ್ಟ್ ಮಾಡಿದವರಷ್ಟೇ ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದವರು ಹಾಗೂ ವಾಟ್ಸಾಪ್, ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿಕೊಂಡವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚೆಗೆ ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಸುಮಾರು 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿತ್ತು. ಈ ಕಟೌಟ್‌ ಹಿನ್ನೆಲೆಯಲ್ಲಿಟ್ಟು ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಅಳವಡಿಸಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು ಎನ್ನಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ವಿಡಿಯೋ ಹರಡುವಿಕೆಯಲ್ಲಿ ಭಾಗಿಯಾಗಿರುವ ಇತರರ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆ ರಾಜ್ಯ ರಾಜಕಾರಣದಲ್ಲೂ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ನಡುವೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ.

ಬೆಂಗಳೂರಿನಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್; ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು!

0

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಹಿಂಬದಿಯಿಂದ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ 33 ವರ್ಷದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದಿದೆ.

ಮೃತರನ್ನು ನವೀನ್ (33) ಎಂದು ಗುರುತಿಸಲಾಗಿದೆ. ಕಗ್ಗದಾಸಪುರ ಮುಖ್ಯ ರಸ್ತೆಯ ವಿಜ್ಞಾನ ನಗರ ಸಿಗ್ನಲ್‌ನಲ್ಲಿ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ನವೀನ್ ಅವರು ಬೈಕ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಏಕಾಏಕಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನವೀನ್ ಬೈಕ್‌ನಿಂದ ಸುಮಾರು 50 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಜೀವನ್ ಭೀಮಾನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ 63 ವರ್ಷದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಪಘಾತದ ಸಂಪೂರ್ಣ ಮಾಹಿತಿ ಹಾಗೂ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

ಸರ್ವರ್ ಕೈಕೊಟ್ಟು ಅನ್ನಭಾಗ್ಯ ಅಕ್ಕಿಗೆ ಪರದಾಟ; ಬೆಳಗ್ಗೆಯಿಂದ ಕಾದು ಕಾದು ಹೈರಾಣಾದ ಫಲಾನುಭವಿಗಳು!

0

ಗದಗ: ಅನ್ನಭಾಗ್ಯ ಯೋಜನೆಯಡಿ ಪಡಿತರ ಅಕ್ಕಿ ಪಡೆಯಲು ಬಂದ ಫಲಾನುಭವಿಗಳು ಸರ್ವರ್ ಸಮಸ್ಯೆಯಿಂದ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪರದಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.

ನಗರದ ಎಪಿಎಂಸಿ ಯಾರ್ಡ್‌ನಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಫಲಾನುಭವಿಗಳು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಸರ್ವರ್ ಸಮಸ್ಯೆಯಿಂದ ವಿತರಣೆ ಪ್ರಕ್ರಿಯೆ ಆರಂಭವಾಗದೆ, ಬೆಳಗ್ಗೆಯಿಂದ ಸುಮಾರು ಮೂರು ಗಂಟೆಗಳ ಕಾಲ ಕಾದು ನಿಲ್ಲುವಂತಾಯಿತು.

ಅಕ್ಕಿ ಪಡೆಯುವ ನಿರೀಕ್ಷೆಯಲ್ಲಿ ಬಂದ ವೃದ್ಧರು, ಮಹಿಳೆಯರು ಸೇರಿದಂತೆ ನೂರಾರು ಫಲಾನುಭವಿಗಳು ಬಿಸಿಲಿನಲ್ಲಿಯೇ ಸರತಿ ಸಾಲಿನಲ್ಲಿ ನಿಂತು ತಮ್ಮ ಸರದಿ ಬರುವುದನ್ನು ಕಾಯಬೇಕಾಯಿತು. ಅಂಗಡಿಯ ಮುಂದೆ ಜನದಟ್ಟಣೆ ಹೆಚ್ಚಾಗಿದ್ದರೂ ಸರ್ವರ್ ಸಮಸ್ಯೆ ಬಗೆಹರಿಯದ ಕಾರಣ ಫಲಾನುಭವಿಗಳಲ್ಲಿ ಅಸಮಾಧಾನ ಹೆಚ್ಚಾಯಿತು.

ಕೈಯಲ್ಲಿ ಚೀಲ; ಎದುರು ಸರ್ವರ್ ಸಮಸ್ಯೆ!

ಪಡಿತರ ಅಕ್ಕಿ ಪಡೆಯಲು ಚೀಲ ಹಿಡಿದುಕೊಂಡು ಬಂದಿದ್ದ ಫಲಾನುಭವಿಗಳು ಸರ್ವರ್ ಯಾವಾಗ ಸರಿಯಾಗುತ್ತದೆ ಎಂದು ಕಾದು ಕುಳಿತ ದೃಶ್ಯ ಕಂಡುಬಂತು. ಕೆಲವರು ಹಲವು ಗಂಟೆಗಳ ಕಾಲ ಕಾಯ್ದರೂ ಪಡಿತರ ಪಡೆಯಲು ಸಾಧ್ಯವಾಗದೆ ನಿರಾಸೆಯಿಂದ ಮನೆಗೆ ಮರಳುವ ಸ್ಥಿತಿ ನಿರ್ಮಾಣವಾಯಿತು.

ಗದಗ ಜಿಲ್ಲೆಯಾದ್ಯಂತ ಇದೇ ರೀತಿಯ ಸರ್ವರ್ ಸಮಸ್ಯೆ ಎದುರಾಗಿದೆ ಎಂದು ಫಲಾನುಭವಿಗಳು ದೂರಿದರು. ಪ್ರತಿ ತಿಂಗಳು ಪಡಿತರಕ್ಕಾಗಿ ನ್ಯಾಯಬೆಲೆ ಅಂಗಡಿಗೆ ಬರುವ ಬಡ ಕುಟುಂಬಗಳು ತಾಂತ್ರಿಕ ಸಮಸ್ಯೆಯಿಂದ ಪದೇಪದೇ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದುಡಿಮೆ ಬಿಟ್ಟು ಪಡಿತರಕ್ಕಾಗಿ ಕಾಯುವ ಸ್ಥಿತಿ:

ದಿನಗೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುವ ಅನೇಕ ಕುಟುಂಬಗಳ ಸದಸ್ಯರು ಬೆಳಗ್ಗೆಯೇ ಕೆಲಸಕ್ಕೆ ತೆರಳುವ ಬದಲು ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಯಿತು. ಗಂಟೆಗಟ್ಟಲೆ ಕಾಯಬೇಕಾದ ಕಾರಣ ಆ ದಿನದ ದುಡಿಮೆಯೂ ಕೈತಪ್ಪುವ ಆತಂಕ ಫಲಾನುಭವಿಗಳಲ್ಲಿದೆ.

“ಮನೆಯಲ್ಲಿ ಅಕ್ಕಿ ಖಾಲಿಯಾಗಿದೆ. ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಬೆಳಗ್ಗೆಯಿಂದ ಬಂದು ನಿಂತಿದ್ದರೂ ಸರ್ವರ್ ಸಮಸ್ಯೆಯಿಂದ ಅಕ್ಕಿ ಸಿಗುತ್ತಿಲ್ಲ” ಎಂದು ಫಲಾನುಭವಿಗಳು ಅಳಲು ತೋಡಿಕೊಂಡರು.

ಆಹಾರ ಇಲಾಖೆ ವಿರುದ್ಧ ಆಕ್ರೋಶ:

ಸರ್ವರ್ ಸಮಸ್ಯೆ ಪ್ರತಿಬಾರಿಯೂ ಫಲಾನುಭವಿಗಳನ್ನೇ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದು, ಆಹಾರ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದರು.

ತಾಂತ್ರಿಕ ಸಮಸ್ಯೆ ಇದ್ದಲ್ಲಿ ಅದನ್ನು ಶೀಘ್ರ ಬಗೆಹರಿಸಿ, ಪಡಿತರ ವಿತರಣೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಬಡವರು, ವೃದ್ಧರು ಮತ್ತು ಮಹಿಳೆಯರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ತಪ್ಪಿಸಬೇಕು ಎಂದು ಒತ್ತಾಯಿಸಿದರು.

ಪಡಿತರ ಪಡೆಯಲು ಬರುವ ಫಲಾನುಭವಿಗಳಿಗೆ ಅನಗತ್ಯ ತೊಂದರೆಯಾಗದಂತೆ ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ಬಾಕಿ ಇರುವ ಪಡಿತರವನ್ನು ಸಮರ್ಪಕವಾಗಿ ವಿತರಿಸಬೇಕು. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತೊಂದರೆಯಾಗದಂತೆ ಆಹಾರ ಇಲಾಖೆ ಅಧಿಕಾರಿಗಳು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.

Kodagu Rain: ಕಾವೇರಿ ತವರು ಕೊಡಗಿನಲ್ಲಿ ಧಾರಾಕಾರ ಮಳೆ; ತ್ರಿವೇಣಿ ಸಂಗಮ ಜಲಾವೃತ

0

ಮಡಿಕೇರಿ: ರಾಜ್ಯದ ಕೆಲವೆಡೆ ಮಳೆ ಕೊರತೆ ಎದುರಾಗಿರುವ ನಡುವೆ ಕಾವೇರಿಯ ತವರು ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರಿಂದ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ ಈ ಮಳೆಗಾಲದಲ್ಲಿ ಮೂರನೇ ಬಾರಿಗೆ ಸಂಪೂರ್ಣ ಜಲಾವೃತಗೊಂಡಿದೆ.

ಹಾರಂಗಿ ಜಲಾಶಯಕ್ಕೂ ಹೆಚ್ಚಿದ ಒಳಹರಿವು:

ಜಿಲ್ಲೆಯ ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ.

ನಿರಂತರ ಮಳೆಯಿಂದಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕಾಫಿ, ಮೆಣಸು ಬೆಳೆಗಾರರಲ್ಲಿ ಆತಂಕ:

ಇನ್ನು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೂ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ.

ನಿರಂತರ ಮಳೆಯಿಂದ ಕಾಫಿ ತೋಟಗಳಲ್ಲಿರುವ ಹೂವು ಹಾಗೂ ಕಾಯಿಗಳು ಉದುರುವ ಸಾಧ್ಯತೆ ಇದ್ದು, ಇದರಿಂದ ಇಳುವರಿ ಮೇಲೆ ಪರಿಣಾಮ ಬೀರುವ ಭೀತಿ ಬೆಳೆಗಾರರನ್ನು ಕಾಡುತ್ತಿದೆ.

ಒಂದೆಡೆ ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ಕೊಡಗಿನಲ್ಲಿ ವರುಣನ ಅಬ್ಬರದಿಂದ ಕಾವೇರಿ ಉಕ್ಕಿ ಹರಿಯುತ್ತಿರುವುದು ಗಮನ ಸೆಳೆದಿದೆ.

ಕರಾವಳಿಗೆ ಇಂದು ಸರ್ಕಾರಿ ರಜೆ; ದಕ್ಷಿಣ ಕನ್ನಡ, ಉಡುಪಿಯಲ್ಲಿ ಈದ್ ಮಿಲಾದ್ ಸಂಭ್ರಮ

0

ಬೆಂಗಳೂರು: ಈದ್ ಮಿಲಾದ್‌ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು  ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಈದ್ ಮಿಲಾದ್‌ ಆಚರಣೆ ಆಗಸ್ಟ್ 25ರಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಜೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ.

ರಾಜ್ಯದಾದ್ಯಂತ ಈದ್ ಮಿಲಾದ್‌ ಹಬ್ಬದ ಪ್ರಯುಕ್ತ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿತ್ತು. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಪರಿಸ್ಥಿತಿ ಹಾಗೂ ಹಬ್ಬದ ಆಚರಣೆಯ ದಿನಾಂಕವನ್ನು ಪರಿಗಣಿಸಿ ಒಂದು ದಿನ ಮುಂಚಿತವಾಗಿ ರಜೆ ನೀಡಲಾಗಿದೆ.

ಜಿಲ್ಲಾಧಿಕಾರಿಗಳ ಮನವಿ ಪರಿಗಣಿಸಿದ ಸರ್ಕಾರ;

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈದ್ ಮಿಲಾದ್‌ ಆಚರಣೆಯನ್ನು ಆಗಸ್ಟ್ 25ರಂದು ನಡೆಸಲಾಗುತ್ತಿರುವ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ದಿನಾಂಕ ಬದಲಾಯಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು.

ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದೇ ಈ ಎರಡು ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ.

ಉಳಿದ ಜಿಲ್ಲೆಗಳಲ್ಲಿ ಆ.26ರಂದು ರಜೆ:

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತುಪಡಿಸಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಆಗಸ್ಟ್ 26ರಂದು ಈದ್ ಮಿಲಾದ್‌ ಸಾರ್ವತ್ರಿಕ ರಜೆ ಮುಂದುವರಿಯಲಿದೆ.

ಹೀಗಾಗಿ ಕರಾವಳಿಯ ಎರಡು ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಸರ್ಕಾರಿ ಕಚೇರಿಗಳು ಸೇರಿದಂತೆ ರಜೆಗೆ ಒಳಪಡುವ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಅನ್ವಯವಾಗಲಿದೆ.

ಕಪ್ಪತಗುಡ್ಡದ ಮಡಿಲಲ್ಲಿ ಕವಿಗಳ ಸಮಾಗಮ; ಕವಿತೆಗಳ ಕಲರವ!

0

ವಿಜಯಸಾಕ್ಷಿ ಸುದ್ದಿ, ಗದಗ: ಮನುಷ್ಯ ಪರಿಸರದ ಕೂಸು. ಪ್ರಕತಿಯ ಎಲ್ಲ ಅಂಶಗಳನ್ನು ಒಳಗೊಂಡೇ ಮಾನವ ರೂಪುಗೊಂಡಿದ್ದು, ಪರಿಸರದಲ್ಲಿನ ಪ್ರತಿಯೊಂದು ಚಟುವಟಿಕೆಯ ಪ್ರಭಾವವೂ ಮನುಷ್ಯನ ದೇಹದ ಮೇಲಾಗುತ್ತದೆ. ಹೀಗಾಗಿ ಕವಿ ಸದಾ ಪರಿಸರ ಪ್ರೇಮ ಬೆಳೆಸಿಕೊಂಡು, ತನ್ನ ಕವಿತೆಗಳ ಮೂಲಕ ಪ್ರಕೃತಿಯ ಋಣ ತೀರಿಸುವ ಪ್ರಯತ್ನ ಮಾಡಬೇಕು. ಕವಿಯಲ್ಲಿ ಪರಿಸರ ಪ್ರಜ್ಞೆ ಸದಾ ಜಾಗೃತವಾಗಿರಬೇಕು ಹಾಗೂ ಅದು ಕಾವ್ಯದಲ್ಲಿ ಪ್ರತಿಬಿಂಬಿಸಬೇಕು ಎಂದು ಸಾಹಿತಿ ಡಿ.ವಿ. ಬಡಿಗೇರ ಹೇಳಿದರು.

ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ತಾಲೂಕುಗಳ ಕನ್ನಡ ಸಾಹಿತ್ಯ ಪರಿಷತ್ತುಗಳ ಆಶ್ರಯದಲ್ಲಿ ಕಪ್ಪತಗುಡ್ಡದ ಸೆರಗಿನ ದೇವರೆಡ್ಡಿ ಅಗಸನಕೊಪ್ಪ ಕೃಷಿ ಆಶ್ರಮದಲ್ಲಿ ನಡೆದ ಜಿಲ್ಲಾ ಮಟ್ಟದ ಕವಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಕೃತಿಯ ಆರಾಧನೆಯನ್ನು ಎಲ್ಲ ಕವಿಗಳು ಮಾಡಿಕೊಂಡು ಬಂದಿದ್ದಾರೆ. ಕುವೆಂಪು ಹಾಗೂ ಬೇಂದ್ರೆ ಅವರ ಕಾವ್ಯಗಳಲ್ಲಿ ಪ್ರಕೃತಿ ಪ್ರೇಮ ಹಾಸುಹೊಕ್ಕಾಗಿದೆ. ಪ್ರಕೃತಿಯಲ್ಲಿ ನಿತ್ಯ ನಡೆಯುವ ಕ್ರಿಯೆಗಳನ್ನು ಪ್ರತಿಮೆ ಹಾಗೂ ರೂಪಕಗಳನ್ನಾಗಿಸಿಕೊಂಡು ಅವರು ಅದ್ಭುತ ಕಾವ್ಯವನ್ನು ಸೃಷ್ಟಿಸಿದ್ದಾರೆ ಎಂದು ಬಡಿಗೇರ ತಿಳಿಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ‘ಪಕ್ಷಿಕಾಶಿ’ ಕವಿತೆಗಳನ್ನು ವಾಚಿಸಿದರು.

ಸಾನ್ನಿಧ್ಯ ವಹಿಸಿದ್ದ ಡೋಣಿ ನಂದಿವೇರಿ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಮಾತನಾಡಿ, ಕಾವ್ಯ, ಸಾಹಿತ್ಯ ಹಾಗೂ ಕವನಗಳು ಕವಿಯ ಒಳತುಡಿತದಿಂದ ರೂಪುಗೊಳ್ಳುತ್ತವೆ. ಪರಿಸರದಿಂದ ದೊರೆಯುವ ಏಕಾಂತತೆ ಕವನ ರಚನೆಗೆ ಪೂರಕವಾಗಿರುತ್ತದೆ ಎಂದರು.

ಮನುಷ್ಯ ಪರಿಸರದಿಂದ ದೂರವಾಗುತ್ತಾ ರೋಗಗಳನ್ನು ಹತ್ತಿರ ಮಾಡಿಕೊಳ್ಳುತ್ತಿದ್ದಾನೆ. ಕವಿಗಳು ಕಪ್ಪತಗುಡ್ಡದ ಪರಿಸರದ ಮಡಿಲಿಗೆ ಆಗಮಿಸಿರುವುದು ತವರುಮನೆಗೆ ಬಂದಂತಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಹಿರಿಯ ಕವಿಗಳು ಕಿರಿಯ ಕವಿಗಳನ್ನು ಪ್ರೋತ್ಸಾಹಿಸುವ ಮೂಲಕ ಕಾವ್ಯವು ಹುಲುಸಾಗಿ ಹಾಗೂ ಸತ್ವಯುತವಾಗಿ ಬೆಳೆಯಲು ಸಹಕರಿಸಬೇಕು ಎಂದರು.

ಈ ಹಿನ್ನೆಲೆಯಲ್ಲಿ ಕವಿಗಳ ಸಮಾಗಮದ ಉದ್ದೇಶವನ್ನು ಈ ಸಮ್ಮೇಳನ ಹೊಂದಿದೆ. ಯುವ ಕವಿಗಳು ಹೆಚ್ಚು ಓದು ಹಾಗೂ ಚರ್ಚೆಗಳ ಮೂಲಕ ಕಾವ್ಯ ಪರಂಪರೆಯನ್ನು ಮುಂದುವರಿಸಬೇಕು ಎಂದು ಹೇಳಿದರು.

ವಲಯ ಅರಣ್ಯಾಧಿಕಾರಿ ಮಂಜುನಾಥ ಮೇಗಲಮನಿ ಕಪ್ಪತಗುಡ್ಡದ ಜೀವವೈವಿಧ್ಯತೆ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ಚಂದ್ರಶೇಖರ ವಸ್ತ್ರದ, ಡಾ. ಬಿ.ಜಿ. ಪಾಟೀಲ, ದೇವರೆಡ್ಡಿ ಅಗಸನಕೊಪ್ಪ, ಸುಶೀಲಮ್ಮ ಅಗಸನಕೊಪ್ಪ, ರಮಾಕಾಂತ ಕಮತಗಿ, ಎಂ.ಜಿ. ಗಚ್ಚಣ್ಣವರ, ಸುರೇಶ ಕುಂಬಾರ, ಡಿ.ಎಲ್. ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಿಶೋರಬಾಬು ಸ್ವಾಗತಿಸಿದರು. ಈಶ್ವರ ಮೆಡ್ಲೇರಿ ನಿರೂಪಿಸಿದರು. ಡಿ.ಎಸ್. ಬಾಪುರಿ ವಂದಿಸಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಕವಿಗಳು ಕವಿ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಧ್ವಜಾರೋಹಣ ಹಾಗೂ ಭುವನೇಶ್ವರಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಕೂಲಿಕಾರ್ಮಿಕರಿಗೆ ಆರೋಗ್ಯ ತಪಾಸಣೆ; ಕೆಮ್ಮಣ್ಣುಗುಂಡಿ ಕೆರೆ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿರಹಟ್ಟಿ ತಾಲ್ಲೂಕಿನ ವಡವಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ, ಕೆಮ್ಮಣ್ಣುಗುಂಡಿ ಕೆರೆಯಲ್ಲಿ ವಿ.ಬಿ.ಜಿ.-ಆರ್‌ಎಎಂಜಿ (VBG-RAMG) ಯೋಜನೆಯಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸರ್ಕಾರದ ಆದೇಶದಂತೆ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರಿಗೆ ಸಮಾನವಾಗಿ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದ್ದು, ಪ್ರತಿ ಕುಟುಂಬಕ್ಕೆ 125 ದಿನಗಳ ಕೆಲಸ ಒದಗಿಸಲಾಗುತ್ತಿದೆ. ಶಿರಹಟ್ಟಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಅವರ ನಿರ್ದೇಶನದಂತೆ ಕಾಮಗಾರಿ ಆರಂಭಿಸಲಾಯಿತು.

ಯೋಜನೆಯಡಿ ಕೆಲಸ ಪಡೆಯಲು ಕೂಲಿ ಕಾರ್ಮಿಕರಿಂದ ನಮೂನೆ-6ರಲ್ಲಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಅರ್ಜಿ ಸಲ್ಲಿಸಿದವರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ.

ಕಾಮಗಾರಿ ಆರಂಭಕ್ಕೂ ಮುನ್ನ ಕೂಲಿ ಕಾರ್ಮಿಕರಿಗೆ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಆರೋಗ್ಯ ಸಿಬ್ಬಂದಿಗಳಾದ ಪ್ರತಿಭಾ ಸಿದ್ದರಡ್ಡಿ, ಮಾಂತೇಶ ತಿಮ್ಮಾಪೂರ ಹಾಗೂ ಆಶಾ ಕಾರ್ಯಕರ್ತೆ ನಾಗರತ್ನಾ ತಿಕ್ಕುಂಡಿ ಅವರ ನೇತೃತ್ವದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು.

ವಡವಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ಶಿರಹಟ್ಟಿ ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪ್ರಶಾಂತ ಆರ್. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಆರೋಗ್ಯ ತಪಾಸಣೆ ಮತ್ತು ಕಾಮಗಾರಿ ಆರಂಭದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಎಚ್.ಟಿ. ತಳವಾರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎ.ಎಂ. ಹೀರೆಮಠ, ಇಂಜಿನಿಯರ್ ಲಿಂಗರಾಜು ಅರಸಿಣದ, ಸಿಬ್ಬಂದಿ ಮಂಜುನಾಥ ರಾಜೂರ, ಮೇಟೆಗಳಾದ ನಾಗರಾಜ ತಂಗೋಡ, ಅಶೋಕ ದಾಸರ, ನಾಗರಾಜ ಇಟಗಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.

ಈದ್ ಮಿಲಾದ್ ದಿನ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪವಿತ್ರ ಈದ್ ಮಿಲಾದ್ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ‘ಡ್ರೈ ಡೇ’ ಘೋಷಿಸುವಂತೆ ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ವತಿಯಿಂದ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ಕುರಿತು ಮುಖ್ಯಮಂತ್ರಿ ಅವರಿಗೆ ಗದಗ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಮಹಾಸಭಾ ಪದಾಧಿಕಾರಿಗಳು, ಪ್ರವಾದಿ ಹಜರತ್ ಮಹಮ್ಮದ್ (ಸ್ವ) ಅವರ ಪವಿತ್ರ ಜನ್ಮದಿನವಾದ ಈದ್ ಮಿಲಾದ್ ಮುಸ್ಲಿಂ ಸಮುದಾಯಕ್ಕೆ ಅತ್ಯಂತ ಮಹತ್ವದ ದಿನವಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾದಿ ಹಜರತ್ ಮಹಮ್ಮದ್ (ಸ್ವ) ಅವರು ಪ್ರೀತಿ, ಕರುಣೆ, ಶಾಂತಿ, ಸಮಾನತೆ, ಸಹೋದರತ್ವ ಹಾಗೂ ಸೌಹಾರ್ದತೆಯ ಸಂದೇಶ ಸಾರಿದ್ದರು. ಮನುಷ್ಯರೆಲ್ಲರೂ ಒಂದೇ ಮಾನವ ಕುಟುಂಬದವರು ಎಂಬ ಮಹಾನ್ ಸಂದೇಶವನ್ನು ನೀಡಿದ ಅವರು, ಪರಸ್ಪರ ಪ್ರೀತಿ, ಗೌರವ, ಸಹಬಾಳ್ವೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಬದುಕುವ ಆದರ್ಶವನ್ನು ತಮ್ಮ ಜೀವನದ ಮೂಲಕ ಜಗತ್ತಿಗೆ ತೋರಿಸಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಈದ್ ಮಿಲಾದ್ ದಿನದ ಪಾವಿತ್ರ್ಯ ಹಾಗೂ ಮಹತ್ವವನ್ನು ಗೌರವಿಸುವುದರ ಜತೆಗೆ ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹೋದರತ್ವದ ವಾತಾವರಣವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಡ್ರೈ ಡೇ ಘೋಷಿಸಬೇಕು ಎಂದು ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಇದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಬೇಡಿಕೆಯಲ್ಲ. ಶಾಂತಿ, ಮಾನವೀಯತೆ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಗೌರವಿಸುವ ಕರ್ನಾಟಕದ ಸಮಸ್ತ ಜನತೆಯ ಆಶಯವಾಗಿದೆ. ಹೀಗಾಗಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಈದ್ ಮಿಲಾದ್ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸುವ ಕುರಿತು ಸೂಕ್ತ ಆದೇಶ ಹೊರಡಿಸಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್. ನಾಗರಕಟ್ಟೆ ಮನವಿ ಮಾಡಿದ್ದಾರೆ.

ಮನವಿಯನ್ನು ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿಗಳು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ, ಕುತುಬುದ್ದೀನ್ ಶೇಖ, ಅಬ್ದುಲರಜ್ಜಾಕ ಮಂಗಳೂರು, ರಫೀಕ್ ಈಟಿ, ಸಲೀಂ ಕರಡಿ, ಯಾಸಿನ್ ಮುಲ್ಲಾ, ಅಫ್ಜಲ್ ಮನಿಯಾರ್, ಜೋಹರ ಮುಂಡರಗಿ, ಇಮ್ರಾನ್ ತಹಶೀಲ್ದಾರ್, ಮೀರಾಸಾಬ ಇರಕಲ್, ನಿಜಾಮುದ್ದೀನ್ ಕಾಟಾಪುರ್, ರಹೀಂ ಸಾಬ್ ದೊಡ್ಡಮನಿ, ಸಲೀಂ ನಾಲಬಂದ, ಮಕ್ತುಂ ಹುಸೇನ್ ಜಮಾದಾರ್ ಸೇರಿದಂತೆ ಹಲವಾರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಗಣೇಶ ವಿಸರ್ಜನೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಭೀಷ್ಮ ಕೆರೆಯಲ್ಲಿ ಚರಂಡಿ ಕೊಳಚೆ ನೀರು ಹಾಗೂ ಹಂದಿ, ನಾಯಿಗಳ ತ್ಯಾಜ್ಯ ಸೇರಿ ನೀರು ಕಲುಷಿತಗೊಂಡಿದ್ದು, ಇಂತಹ ನೀರಿನಲ್ಲಿ ಶ್ರದ್ಧಾಭಕ್ತಿಯಿಂದ ಪೂಜಿಸಿದ ಗಣೇಶ ಮೂರ್ತಿಗಳನ್ನು ವಿಸರ್ಜಿಸುವುದು ಭಕ್ತರ ಭಾವನೆಗಳಿಗೆ ನೋವುಂಟು ಮಾಡುತ್ತಿದೆ. ಹೀಗಾಗಿ ಗಣೇಶ ವಿಸರ್ಜನೆಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸುದರ್ಶನ ಚಕ್ರ ಯುವ ಮಂಡಳ ಗದಗ-ಬೆಟಗೇರಿ ನಗರಸಭೆಗೆ ಮನವಿ ಮಾಡಿದೆ.

ಈ ಕುರಿತು ಸೋಮವಾರ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ ಮಂಡಳದ ಅಧ್ಯಕ್ಷ ರಾಘವೇಂದ್ರ ಹಬೀಬ ಅವರು, ಗಣೇಶ ವಿಸರ್ಜನೆಗೆ ಇನ್ನೂ ಸಾಕಷ್ಟು ಕಾಲಾವಕಾಶವಿರುವುದರಿಂದ ಕೂಡಲೇ ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಒತ್ತಾಯಿಸಿದರು.

ಗದಗ ನಗರದಲ್ಲಿ ಹಲವು ವರ್ಷಗಳಿಂದ ಭೀಷ್ಮ ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ನಗರದ ಚರಂಡಿ ನೀರು ಹಾಗೂ ಹಂದಿಗಳ ತ್ಯಾಜ್ಯ ನೇರವಾಗಿ ಕೆರೆಗೆ ಸೇರುತ್ತಿದ್ದು, ಕೆರೆಯ ನೀರು ಕಲುಷಿತಗೊಂಡಿದೆ. ಇದರಿಂದ ಕೆರೆಯ ಪಾವಿತ್ರ್ಯವೂ ಹಾಳಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭಕ್ತರು ಐದು, ಒಂಬತ್ತು, ಹನ್ನೊಂದು, ಇಪ್ಪತ್ತೊಂದು ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಪೂಜಿಸಿ, ಕೊನೆಗೆ ಕೊಳಕು ಹಾಗೂ ದುರ್ವಾಸನೆಯ ನೀರಿನಲ್ಲಿ ವಿಸರ್ಜಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ನೋವುಂಟು ಮಾಡುವ ಸಂಗತಿಯಾಗಿದೆ. ಆದ್ದರಿಂದ ಭಕ್ತರ ಭಾವನೆಗಳಿಗೆ ಬೆಲೆ ನೀಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೃತಕ ಹೊಂಡ ನಿರ್ಮಿಸಲು ಆಗ್ರಹ

ಭೀಷ್ಮ ಕೆರೆಯ ಪಕ್ಕದಲ್ಲಿಯೇ ಸುಮಾರು 60×100 ಅಡಿ ಅಳತೆಯ ತಾತ್ಕಾಲಿಕ ಕೃತಕ ಹೊಂಡ ನಿರ್ಮಿಸಿ, ಅದರಲ್ಲಿ ಶುದ್ಧ ನೀರು ತುಂಬಿಸುವ ವ್ಯವಸ್ಥೆ ಮಾಡಬೇಕು. ಇದರಿಂದ ಭಕ್ತರು ಯಾವುದೇ ಅಳುಕಿಲ್ಲದೆ ಶ್ರದ್ಧಾಭಕ್ತಿಯಿಂದ ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ಅನುಕೂಲವಾಗಲಿದೆ. ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಹೊಂಡ ನಿರ್ಮಾಣಕ್ಕೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಂಡಳದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರಾಘವೇಂದ್ರ ಹಬೀಬ, ಮಾರುತಿ ದಹಿಂಡೆ, ವಿಜಯ ಬನಹಟ್ಟಿ, ರಾಜು ನಾಯ್ಕರ್, ವಿಜಯ ಸೋಳಂಕಿ, ರತ್ನಾ ಕುರುಗೋಡ, ಆಕಾಶ್ ಗುಜ್ಜರ, ಸಾಗರ ಮಡಿವಾಳರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶೈಕ್ಷಣಿಕ ಪ್ರಗತಿಗೆ ಲಿಂಗರಾಜ ದೇಸಾಯಿ ಅವರ ದೂರದೃಷ್ಟಿಯೇ ಪ್ರೇರಣೆ: ಜ. ಅಭಿನವ ಬೂದಿಶ್ವರ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಲಿಂಗಾಯತ ಸಮಾಜದ ಶೈಕ್ಷಣಿಕ ಪ್ರಗತಿಗೆ ತ್ಯಾಗವೀರ ಶ್ರೀ ಶಿರಸಂಗಿ ಲಿಂಗರಾಜ ದೇಸಾಯಿ ಅವರ ದೂರದೃಷ್ಟಿ, ತ್ಯಾಗ ಹಾಗೂ ಸೇವಾ ಮನೋಭಾವವೇ ಪ್ರಮುಖ ಪ್ರೇರಣೆಯಾಗಿದೆ. ಸಮಾಜದ ಭವಿಷ್ಯವನ್ನು ದೂರದೃಷ್ಟಿಯಿಂದ ಕಂಡು ಶಿಕ್ಷಣಕ್ಕೆ ಅವರು ನೀಡಿದ ಮಹತ್ವದಿಂದಾಗಿ ಇಂದು ಲಿಂಗಾಯತ ಸಮಾಜದವರು ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ಹೊಸಳ್ಳಿಯ ಪೂಜ್ಯ ಜ. ಅಭಿನವ ಬೂದಿಶ್ವರ ಮಹಾಸ್ವಾಮಿಗಳು ಹೇಳಿದರು.

ನಗರದ ಕುಡುವಕ್ಕಲಿಗರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಲಿಂಗಾಯತ ಕುಡುವಕ್ಕಲಿಗರ ಸಂಘದ 14ನೇ ವಾರ್ಷಿಕ ಮಹಾಸಭೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ತ್ಯಾಗವೀರ ಲಿಂಗರಾಜ ದೇಸಾಯಿ ಅವರ 120ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸ್ವಾಮೀಜಿ, ಸಮಸ್ತ ಲಿಂಗಾಯತ ಸಮಾಜದ ಅಭಿವೃದ್ಧಿಗೆ ಲಿಂಗರಾಜ ದೇಸಾಯಿ ನೀಡಿದ ಕೊಡುಗೆ ಅಪಾರ. ಶಿಕ್ಷಣ, ಸಮಾಜಸೇವೆ ಹಾಗೂ ರೈತರ ಹಿತಕ್ಕಾಗಿ ಅವರು ಕೈಗೊಂಡ ಕಾರ್ಯಗಳು ಅವರ ಮಹಾನ್ ತ್ಯಾಗ ಮತ್ತು ಸಮಾಜಮುಖಿ ಚಿಂತನೆಗೆ ಸಾಕ್ಷಿಯಾಗಿವೆ ಎಂದರು.

ಲಿಂಗರಾಜ ದೇಸಾಯಿ ಅವರ ದೂರದೃಷ್ಟಿ ಹಾಗೂ ಸೇವಾ ಮನೋಭಾವವನ್ನು ಇಂದಿನ ಪೀಳಿಗೆ ಆದರ್ಶವಾಗಿಸಿಕೊಂಡು ಸಮಾಜದ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

ಸಂಘದ ಕೋಶಾಧ್ಯಕ್ಷ ಎ.ಎಸ್. ಪಾಟೀಲ ಮಾತನಾಡಿ, ಲಿಂಗರಾಜ ದೇಸಾಯಿ ಅವರು ಕಾಶಿಯಲ್ಲಿ ಅಧ್ಯಯನ ಪೀಠ ಸ್ಥಾಪಿಸುವಲ್ಲಿ ವಹಿಸಿದ ಪಾತ್ರ ಹಾಗೂ ಬರಗಾಲದ ಸಂದರ್ಭದಲ್ಲಿ ಕೆರೆ-ಕಟ್ಟೆಗಳನ್ನು ನಿರ್ಮಿಸಿ ರೈತರಿಗೆ ನೆರವಾದ ಸೇವೆಯನ್ನು ಸ್ಮರಿಸಿದರು.

ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ್ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರು, ಇಬ್ಬರು ಮಾಜಿ ಸೈನಿಕರು, ಶ್ರೇಷ್ಠ ರೈತರು, ಗೌರವ ಡಾಕ್ಟರೇಟ್ ಪದವಿ ಪಡೆದವರು ಹಾಗೂ ಪರ್ವತಾರೋಹಿಯನ್ನು ಸನ್ಮಾನಿಸಲಾಯಿತು.

ಕುಡುವಕ್ಕಲಿಗರ ಭವನದ ನಿರ್ಮಾಣಕ್ಕೆ ನೆರವಾಗುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಬಂಪರ್ ಲಾಟರಿ ಯೋಜನೆಯ ಡ್ರಾ ನೆರವೇರಿಸಲಾಯಿತು. ಸಂಘದ ಕಾರ್ಯದರ್ಶಿ ಶರಣಪ್ಪ ದಿಡ್ಡಿಮನಿ ವಾರ್ಷಿಕ ವರದಿ ಹಾಗೂ ಆಯವ್ಯಯ ಪತ್ರಿಕೆ ಮಂಡಿಸಿದರು. ಸಭೆಯಲ್ಲಿ ಚರ್ಚಿಸಿ ಅದನ್ನು ಅನುಮೋದಿಸಲಾಯಿತು.

ಸಮಾಜದ ಹಿರಿಯರಾದ ಕಲ್ಲನಗೌಡ್ರ, ಈರಪ್ಪಣ್ಣ ಬಿಸನಹಳ್ಳಿ, ವಿ.ಜಿ. ಕನಾಜ, ಸಿ.ಎನ್. ಜನಯಿ ಹಾಗೂ ವಿ.ಕೆ. ಬಳಗೇರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಯಲ್ಲಪ್ಪಗೌಡ ಸಂಕನಗೌಡ ಪ್ರಾರ್ಥಿಸಿದರು. ಪ್ರಶಾಂತ ಕನಾಜ ನಿರೂಪಿಸಿದರು.