Home Blog

ಆ.25ರಂದು ಜೇಸಿ ಫ್ರೀಡಂ ಕಪ್ ಫುಟ್ಬಾಲ್ ಪಂದ್ಯಾವಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜೇಸಿ ಹೈಸ್ಕೂಲ್ ಮೈದಾನದಲ್ಲಿ ಆ.25ರಂದು ಒಂಬತ್ತನೇ ವರ್ಷದ ಜೇಸಿ ಫ್ರೀಡಂ ಕಪ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದ್ದು, 15ರಿಂದ 20 ಶಾಲಾ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಉಪ ಪೊಲೀಸ್ ಅಧೀಕ್ಷಕ ವಿದ್ಯಾನಂದ ನಾಯಕ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ ಎಂದು ಜೇಸಿ ಪ್ರೌಢಶಾಲೆ ಅಧ್ಯಕ್ಷ ವಾಸಣ್ಣ ಕುರಡಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಬಾಲಕಿಯರ ತಂಡಗಳು ಸೆಣಸಲಿರುವುದು ವಿಶೇಷ. ಕೆಎಲ್‌ಇ ಪ್ರೌಢಶಾಲೆ ಹಾಗೂ ಜೇಸಿ ಪ್ರೌಢಶಾಲೆಯ ವಿದ್ಯಾರ್ಥಿನಿಯರ ನಡುವೆ ಸ್ನೇಹಪರ ಪಂದ್ಯ ನಡೆಯಲಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಾಲಕಿಯರ ಫುಟ್ಬಾಲ್ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆಸುವುದು, ದೈಹಿಕ ಹಾಗೂ ಮಾನಸಿಕ ಸದೃಢತೆ ಹೆಚ್ಚಿಸುವುದು ಮತ್ತು ವಿವಿಧ ಶಾಲೆಗಳ ಮಕ್ಕಳಲ್ಲಿ ಸಹಕಾರ ಮನೋಭಾವ ಬೆಳೆಸುವ ಉದ್ದೇಶದಿಂದ 2016-17ರಲ್ಲಿ ಪಂದ್ಯಾವಳಿ ಆರಂಭಿಸಲಾಯಿತು. ಸತತ ಒಂಬತ್ತು ವರ್ಷಗಳಿಂದ ಪಂದ್ಯಾವಳಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ಸವಿಸ್ಮರಣೆ ಹಾಗೂ ಮಕ್ಕಳಲ್ಲಿ ರಾಷ್ಟ್ರೀಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಗಸ್ಟ್‌ನಲ್ಲಿಯೇ ಪಂದ್ಯಾವಳಿ ಆಯೋಜಿಸಲಾಗುತ್ತಿದ್ದು, ಅದಕ್ಕೆ ‘ಜೇಸಿ ಫ್ರೀಡಂ ಕಪ್’ ಎಂದು ಹೆಸರಿಡಲಾಗಿದೆ. ಶಿಕ್ಷಣ ಇಲಾಖೆ ಹಾಗೂ ವಿವಿಧ ಶಾಲೆಗಳಿಂದ ಉತ್ತಮ ಸಹಕಾರ ದೊರೆಯುತ್ತಿದೆ ಎಂದರು.

ಮೊದಲ ವರ್ಷ 11 ಶಾಲೆಗಳ ತಂಡಗಳು ಭಾಗವಹಿಸಿದ್ದವು. ಪ್ರತಿ ವರ್ಷ ತಂಡಗಳ ಸಂಖ್ಯೆ ಹೆಚ್ಚುತ್ತಿರುವುದು ಪಂದ್ಯಾವಳಿಯ ಯಶಸ್ಸಿಗೆ ಸಾಕ್ಷಿಯಾಗಿದೆ. ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಗದು ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿಜೇತ ತಂಡಕ್ಕೆ ₹25 ಸಾವಿರ ನಗದು, ಆಕರ್ಷಕ ರೋಲಿಂಗ್ ಶೀಲ್ಡ್ ಹಾಗೂ ವಿನ್ನಿಂಗ್ ಟ್ರೋಫಿ, ರನ್ನರ್‌ಅಪ್ ತಂಡಕ್ಕೆ ₹12 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಅತ್ಯುತ್ತಮ ಗೋಲ್‌ಕೀಪರ್ ಮತ್ತು ಸ್ಟ್ರೈಕರ್‌ಗೆ ತಲಾ ₹2 ಸಾವಿರ ನಗದು, ಆಕರ್ಷಕ ಶೀಲ್ಡ್ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.

ಸುದ್ದಿಗೋಷ್ಠಿಯಲ್ಲಿ ವೈಶಾಕ್ ಬಂಗಾರಶೆಟ್ಟರ, ಪ್ರಕಾಶ ಎಕ್ಕಾಬಕ್ಕಿ, ರಾಮಚಂದ್ರ ಮೋನೆ, ಫರ್ಹಾನಾ, ಜ್ಯೋತಿ ಹಾಗೂ ಶಿವಕುಮಾರ ಉಪಸ್ಥಿತರಿದ್ದರು.

ಗದಗ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ ; 1.20 ಲಕ್ಷ ಹೆಸರುಗಳಿಗೆ ಕೊಕ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ 65-ಶಿರಹಟ್ಟಿ (ಪ.ಜಾ), 66-ಗದಗ, 67-ರೋಣ ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಕರಡು ಮತದಾರರ ಯಾದಿಯನ್ನು ಆ.24ರಂದು ಪ್ರಕಟಿಸಲಾಗಿದೆ. ಮತದಾರರು ಕರಡು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್‌ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕರಡು ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆ.24ರಿಂದ ಸೆ.23ರವರೆಗೆ ಅವಕಾಶವಿದೆ. ಭಾರತದಲ್ಲಿನ ಬೇರೆ ಯಾವುದೇ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ಹಾಗೂ ಅ.1, 2026ಕ್ಕೆ 18 ವರ್ಷ ಪೂರ್ಣಗೊಳ್ಳುವವರು ನಮೂನೆ–6ರಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. 2026ರ ಅರ್ಹತಾ ದಿನಾಂಕಗಳಾದ ಜ.1, ಏ.1 ಅಥವಾ ಜು.1ರಂದು 18 ವರ್ಷ ಪೂರ್ಣಗೊಳ್ಳುವವರೂ ಕರಡು ಮತದಾರರ ಪಟ್ಟಿ ಪ್ರಕಟಣೆಯ ದಿನದಿಂದ ನಮೂನೆ–6ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಲಾಗುವುದು.

ನಮೂನೆ–6ರಲ್ಲಿ ಅರ್ಜಿ ಸಲ್ಲಿಸುವವರು ಘೋಷಣಾ ಪತ್ರ, ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಅರ್ಜಿಯಲ್ಲಿ ನಮೂದಿಸಿರುವ ವಿಳಾಸದಲ್ಲಿ ಸಾಮಾನ್ಯ ನಿವಾಸಿಯಾಗಿರುವುದಕ್ಕೆ ಸೂಕ್ತ ದಾಖಲೆ ಹಾಗೂ ವಯಸ್ಸಿನ ದಾಖಲೆಗಳನ್ನು ಸಲ್ಲಿಸಬೇಕು.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಮೂನೆ–7ರಲ್ಲಿ ಅರ್ಜಿ ಸಲ್ಲಿಸಬೇಕು. ನಿವಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ, ಯಾವುದೇ ತಿದ್ದುಪಡಿಯಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಪಡೆಯುವುದು ಅಥವಾ ಅಂಗವಿಕಲ ವ್ಯಕ್ತಿ ಎಂದು ಗುರುತಿಸಲು ಮನವಿ ಸಲ್ಲಿಸುವುದಕ್ಕೆ ನಮೂನೆ–8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹಕ್ಕು ಮತ್ತು ಆಕ್ಷೇಪಣೆಗಳನ್ನು ECINET ಮೊಬೈಲ್ ಆ್ಯಪ್, “voters.eci.gov.in” ವೆಬ್‌ಸೈಟ್, ಸಂಬಂಧಪಟ್ಟ ಮತಗಟ್ಟೆಯ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್‌ಒ), ಮತದಾರ ನೋಂದಣಾಧಿಕಾರಿ ಅಥವಾ ತಹಶೀಲ್ದಾರರ ಕಚೇರಿಯಲ್ಲಿ ಸಲ್ಲಿಸಬಹುದು. ಆ.24ರಿಂದ ಸೆ.23ರವರೆಗೆ ಸ್ವೀಕರಿಸುವ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ಅ.27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಎಸ್‌ಐಆರ್ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಪ್ರಚಾರ ಕೈಗೊಳ್ಳಲಾಗಿದೆ. ಅನಕ್ಷರಸ್ಥ ಮತದಾರರಿಗೆ ಬಿಎಲ್‌ಒಗಳು ಮತದಾರರ ಪಟ್ಟಿಯ ವಿವರಗಳನ್ನು ಓದಿ ತಿಳಿಸಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ 1,428 ಸೈನಿಕ ಮತದಾರರಿದ್ದಾರೆ.

ಈ ಸಂದರ್ಭದಲ್ಲಿ ವಿಧಾನಸಭಾ ಮತಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳಾದ ಗಂಗಪ್ಪ ಎಂ., ಬಸನಗೌಡ ಕೋಟೂರ, ನಂದಾ ಹಣಬರಟ್ಟಿ, ಎಸ್.ಡಿ. ಪಾಟೀಲ ಹಾಗೂ ಚುನಾವಣಾ ಶಾಖೆಯ ತಹಸೀಲ್ದಾರ್ ಸಂತೋಷ ಹಿರೇಮಠ ಉಪಸ್ಥಿತರಿದ್ದರು.

1.20 ಲಕ್ಷ ಮತದಾರರ ಹೆಸರು ಕೈಬದಲು

ಜೂ.16ರಂದು ಜಿಲ್ಲೆಯಲ್ಲಿ ಒಟ್ಟು 9,02,947 ಮತದಾರರು ನೋಂದಣಿಯಾಗಿದ್ದರು. ಎಸ್‌ಐಆರ್ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ಹಿಂದಿರುಗಿಸದ ಮತದಾರರ ಭೌತಿಕ ಪರಿಶೀಲನೆ ನಡೆಸಿದ್ದು, ಒಟ್ಟು 1,20,715 ಮತದಾರರನ್ನು ಎಎಸ್‌ಡಿಡಿಒ (ಗೈರುಹಾಜರಿ, ಸ್ಥಳಾಂತರ, ಮೃತ, ನಕಲು ಮತ್ತು ಇತರೆ) ಎಂದು ಗುರುತಿಸಲಾಗಿದೆ.

ಇವರ ಪೈಕಿ 5,192 ಮಂದಿ ಪತ್ತೆಯಾಗದ ಅಥವಾ ಗೈರುಹಾಜರಿರುವವರು, 71,280 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡವರು, 30,318 ಮಂದಿ ಮೃತಪಟ್ಟವರು, 13,537 ಮಂದಿ ಈಗಾಗಲೇ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವವರು ಹಾಗೂ 388 ಮಂದಿ ಇತರೆ ವರ್ಗಕ್ಕೆ ಸೇರಿದವರಾಗಿದ್ದಾರೆ.

ಎಎಸ್‌ಡಿಡಿಒ ಮತದಾರರ ಪಟ್ಟಿಯು ಬಿಎಲ್‌ಒ ಅಥವಾ ಮತದಾರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದ್ದು, ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗಿದೆ.

ಕರಡು ಪಟ್ಟಿಯಲ್ಲಿ 7.82 ಲಕ್ಷ ಮತದಾರರು

1,20,715 ಹೆಸರುಗಳನ್ನು ಕೈಬಿಟ್ಟ ಬಳಿಕ ಕರಡು ಮತದಾರರ ಪಟ್ಟಿಯಲ್ಲಿ 3,92,460 ಪುರುಷರು, 3,89,723 ಮಹಿಳೆಯರು ಹಾಗೂ 49 ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 7,82,232 ಮತದಾರರಿದ್ದಾರೆ.

ಜಿಲ್ಲೆಯಲ್ಲಿ ಆ.24ರಂತೆ ಒಟ್ಟು 983 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜೂ.16ರಂದು 967 ಮತಗಟ್ಟೆಗಳಿದ್ದು, ಇದೀಗ 16 ಮತಗಟ್ಟೆಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ 20,891 ಅಸಂಗತತೆ ಅಥವಾ ಅಸಮಂಜಸತೆ (ಅನಾಮಲೀಸ್) ಪ್ರಕರಣಗಳು ಹಾಗೂ 5,084 ಮ್ಯಾಪಿಂಗ್ ಲಿಂಕ್ ಆಗದ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು 25,975 ಮತದಾರರಿಗೆ ನೋಟಿಸ್‌ ಹಂಚಿಕೆ ಮಾಡಬೇಕಾಗಿದೆ. ಸಂಬಂಧಪಟ್ಟ ಮತದಾರರು ಸೂಕ್ತ ದಾಖಲೆಗಳನ್ನು ಬಿಎಲ್‌ಒಗಳಿಗೆ ಒದಗಿಸಿದ ಬಳಿಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತವೂ ಮಹತ್ವದ್ದಾಗಿದೆ. ಆದ್ದರಿಂದ ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ಮತದಾರರ ಪಟ್ಟಿಯಲ್ಲಿರುವ ವಿವರಗಳನ್ನು ಸ್ವತಃ ಪರಿಶೀಲಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡುಬಂದಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಸರಿಪಡಿಸಿಕೊಳ್ಳಬೇಕು. ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.

— ಸಿ.ಎನ್.ಶ್ರೀಧರ್, ಜಿಲ್ಲಾಧಿಕಾರಿ, ಗದಗ

Mantralaya: ಆ.27ರಿಂದ 7 ದಿನ ರಾಯರ 355ನೇ ಆರಾಧನಾ ಮಹೋತ್ಸವ; ಏನೇನು ವಿಶೇಷ ಗೊತ್ತಾ?

0

ರಾಯಚೂರು: ಮಂತ್ರಾಲಯದಲ್ಲಿ ಗುರು ರಾಯರ 355ನೇ ಆರಾಧನಾ ಮಹೋತ್ಸವ ಆಗಸ್ಟ್ 27ರಿಂದ ಸೆಪ್ಟೆಂಬರ್ 2ರವರೆಗೆ ಏಳು ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಆರಾಧನಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಆಗಸ್ಟ್ 29, 30 ಮತ್ತು 31ರಂದು ಪರಿಮಳ ತೀರ್ಥ ಪುಷ್ಕರಣಿಯಲ್ಲಿ ರಾತ್ರಿ ವೇಳೆ ಮೂರು ದಿನಗಳ ಕಾಲ ತೆಪ್ಪೋತ್ಸವ ನಡೆಯಲಿದೆ. ಆಗಸ್ಟ್ 29ರಂದು ರಾಯರ ಪೂರ್ವಾರಾಧನೆ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತದೆ. ಸಂಜೆ ಸಾಧಕರಿಗೆ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ಆಗಸ್ಟ್ 30ರಂದು ರಾಯರ ಮಧ್ಯಾರಾಧನೆ ಹಿನ್ನೆಲೆಯಲ್ಲಿ ಸುವರ್ಣ ರಥೋತ್ಸವ ನಡೆಯಲಿದೆ. ಆಗಸ್ಟ್ 31ರಂದು ರಾಯರ ಉತ್ತರಾರಾಧನೆ ಅಂಗವಾಗಿ ರಾಜಬೀದಿಯಲ್ಲಿ ಅದ್ಧೂರಿ ಮಹಾರಥೋತ್ಸವ ಜರುಗಲಿದೆ. ಈ ವೇಳೆ ಹೆಲಿಕಾಪ್ಟರ್ ಮೂಲಕ ರಥಕ್ಕೆ ಪುಷ್ಪವೃಷ್ಟಿ ಮಾಡಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆಯಲ್ಲಿ ಭಕ್ತರ ಪುಣ್ಯ ಸ್ನಾನಕ್ಕಾಗಿ ಶವರ್ ವ್ಯವಸ್ಥೆ ಕಲ್ಪಿಸಲಾಗುವುದು. ಇದರ ಜೊತೆಗೆ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ವಾಹನಗಳ ಪಾರ್ಕಿಂಗ್‌ಗೆ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತರು ಹಾಗೂ ದಾನಿಗಳ ನೆರವಿನಿಂದ ನಿರ್ಮಾಣವಾಗಿರುವ ಥೀಮ್ ಪಾರ್ಕ್, ಮುಖ್ಯರಸ್ತೆಯ ಕಾರಿಡಾರ್ ಹಾಗೂ ಎಸ್‌ಟಿಪಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಆರಾಧನಾ ಮಹೋತ್ಸವಕ್ಕೆ ದೇಶದ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

Eid Milad Holiday: ಉಡುಪಿ, ದಕ್ಷಿಣ ಕನ್ನಡಕ್ಕೆ ನಾಳೆಯೇ ರಜೆ; ಆ.26ರ ಬದಲು ಆ.25ಕ್ಕೆ ಬದಲಾವಣೆ!

0

ಬೆಂಗಳೂರು: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ನಾಳೆ, ಆಗಸ್ಟ್ 25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ರಾಜ್ಯದಾದ್ಯಂತ ಆಗಸ್ಟ್ 26ರಂದು ಈದ್ ಮಿಲಾದ್ ರಜೆ ಇದ್ದರೂ, ಈ ಎರಡು ಕರಾವಳಿ ಜಿಲ್ಲೆಗಳಿಗೆ ಮಾತ್ರ ಒಂದು ದಿನ ಮುಂಚಿತವಾಗಿ ರಜೆ ನೀಡಲಾಗಿದೆ.

ಸ್ಥಳೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈದ್ ಮಿಲಾದ್ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.

ಜಿಲ್ಲಾಧಿಕಾರಿಗಳ ಮನವಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರ, ಆಗಸ್ಟ್ 25ರಂದು ಎರಡೂ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ನೀಡುವಂತೆ ಆದೇಶಿಸಿದೆ. ಈ ಕುರಿತು ಸರ್ಕಾರದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಆ.26ಕ್ಕೆ ರಜೆ:

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಆಗಸ್ಟ್ 26ರಂದು ಸಾರ್ವತ್ರಿಕ ರಜೆ ಮುಂದುವರಿಯಲಿದೆ.

ಹೀಗಾಗಿ ಕರಾವಳಿಯ ಈ ಎರಡು ಜಿಲ್ಲೆಗಳ ಜನರಿಗೆ ನಾಳೆಯೇ ರಜೆ, ರಾಜ್ಯದ ಉಳಿದ ಭಾಗದವರಿಗೆ ಆಗಸ್ಟ್ 26ರಂದು ರಜೆ ಇರಲಿದೆ.

ಮಲೆನಾಡಿನಲ್ಲಿ ಮಳೆ ಆರ್ಭಟ; ಬಿಸಿಲೆ ಘಾಟ್‌ನಲ್ಲಿ ಮರ ಬಿದ್ದು ಸಂಚಾರ ಸ್ಥಗಿತ!

0

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬಿಸಿಲೆ ಘಾಟ್‌ ಪ್ರದೇಶದಲ್ಲಿ ಭಾರೀ ಗಾಳಿ-ಮಳೆಯಿಂದ ಮರಗಳು ಧರೆಗುರುಳಿವೆ. ಪರಿಣಾಮ ಬಿಸಿಲೆ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಬಿಸಿಲೆ ಘಾಟ್‌ ಮಾರ್ಗದ ರಾಜ್ಯ ಹೆದ್ದಾರಿಯಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಸಾರಿಗೆ ಬಸ್‌ಗಳು ಸೇರಿದಂತೆ ನೂರಾರು ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿವೆ.

ಮಧ್ಯಾಹ್ನದಿಂದಲೇ ವಾಹನಗಳು ಹಾಗೂ ಸಾರಿಗೆ ಬಸ್‌ಗಳು ಮುಂದೆ ಸಾಗಲಾಗದೆ ನಿಂತಲ್ಲೇ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ದಾರಿ ಮಧ್ಯೆ ಸಿಲುಕಿದ ಪ್ರವಾಸಿಗರು ಹಾಗೂ ಪ್ರಯಾಣಿಕರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆಗೆ ಬಿದ್ದಿರುವ ಮರಗಳನ್ನು ತೆರವುಗೊಳಿಸುವ ಕಾರ್ಯ ವಿಳಂಬವಾಗುತ್ತಿರುವುದಕ್ಕೆ ಪ್ರಯಾಣಿಕರು ಹಾಗೂ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಅವರು ಆಗ್ರಹಿಸಿದ್ದಾರೆ.

ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಘಾಟ್‌ ಪ್ರದೇಶಗಳಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

3 ದಿನ ಮೊದಲೇ ವಿಧಾನಮಂಡಲ ಅಧಿವೇಶನ ಅಂತ್ಯ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

0

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆ ನಡುವೆಯೇ ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಿಗದಿತ ಅವಧಿಗೆ ಮೂರು ದಿನ ಮುಂಚಿತವಾಗಿಯೇ ಅಂತ್ಯಗೊಂಡಿದೆ.

ಆಗಸ್ಟ್ 13ರಿಂದ 27ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಆಗಸ್ಟ್ 24ರಂದೇ ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

‘ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ’:

ಅಧಿವೇಶನವನ್ನು ಅವಧಿಗೂ ಮುನ್ನವೇ ಅಂತ್ಯಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 20-30 ವರ್ಷಗಳಲ್ಲಿ ಮೊದಲ ಬಾರಿಗೆ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಭಾಧ್ಯಕ್ಷರು ಸದನವನ್ನು ಸರಿಯಾದ ರೀತಿಯಲ್ಲಿ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅಶೋಕ್, ವಾಲ್ಮೀಕಿ ನಿಗಮದ ಹಣ ದುರುಪಯೋಗದ ವಿಚಾರದಲ್ಲಿ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ದಲಿತರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಆ ಹಣವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

‘ಭ್ರಷ್ಟಾಚಾರ ಬಯಲಾಗುವ ಭಯ’:

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಹಿಂಬಾಗಿಲಿನಿಂದ ಓಡಿ ಹೋಗಿದೆ ಎಂದು ಆರೋಪಿಸಿದ ಅವರು, ಭ್ರಷ್ಟಾಚಾರ ಬಯಲಾಗುವ ಭಯದಿಂದ ಸಚಿವ ಬಿ. ನಾಗೇಂದ್ರ ಅವರನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಆರೋಪಿಸಿದರು.

ವಾಲ್ಮೀಕಿ ನಿಗಮದ ಹಣದ ದುರುಪಯೋಗದ ಕುರಿತು ಸರ್ಕಾರವೇ ₹85 ಕೋಟಿ ಹಗರಣ ಎಂದು ಒಪ್ಪಿಕೊಂಡಿತ್ತು. ಇಷ್ಟಾದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಭಂಡತನದಿಂದ ವರ್ತಿಸುತ್ತಿದೆ ಎಂದು ವಿಜಯೇಂದ್ರ ಟೀಕಿಸಿದರು.

ರಾಜ್ಯಪಾಲರಿಗೆ ಬಿಜೆಪಿ ದೂರು:

ಇನ್ನು ಸಚಿವ ಬಿ. ನಾಗೇಂದ್ರ ವಿಚಾರವಾಗಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದಿಂದ ಲೋಕಭವನದವರೆಗೆ ಪಾದಯಾತ್ರೆ ನಡೆಸಿದರು.

ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿ ವಾಲ್ಮೀಕಿ ನಿಗಮ ಹಗರಣ ಹಾಗೂ ಸಚಿವ ನಾಗೇಂದ್ರ ವಿಚಾರದಲ್ಲಿ ದೂರು ಸಲ್ಲಿಸಿದರು. ಈ ವೇಳೆ ಜೆಡಿಎಸ್ ಶಾಸಕರೂ ಉಪಸ್ಥಿತರಿದ್ದರು.

ವಾಲ್ಮೀಕಿ ನಿಗಮದ ಹಣ ದುರುಪಯೋಗದ ವಿಚಾರದಲ್ಲಿ ಸರ್ಕಾರ ಮತ್ತು ವಿಪಕ್ಷಗಳ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ವಿಧಾನಮಂಡಲ ಅಧಿವೇಶನ ಅವಧಿಗೂ ಮುನ್ನವೇ ಅಂತ್ಯಗೊಂಡಿದೆ. ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ವಿಡಿಯೋ ಪೋಸ್ಟ್; ಓರ್ವ ಅರೆಸ್ಟ್!

0

ಚಿಕ್ಕಮಗಳೂರು: ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಬಂಧಿತನನ್ನು ರೋಷನ್ ಎಂದು ಗುರುತಿಸಲಾಗಿದೆ. ಟಿಪ್ಪು ಸುಲ್ತಾನ್ ಕಟೌಟ್‌ ಇರುವ ವಿಡಿಯೋಗೆ ದೇಶವಿರೋಧಿ ಹಾಡು ಅಳವಡಿಸಿ, ಅದನ್ನು ವಾಟ್ಸಾಪ್, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ವಿಡಿಯೋ ಹಂಚಿಕೊಳ್ಳಲಾಗಿದೆ ಎಂಬ ಆರೋಪದಡಿ ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪೈಕಿ ರೋಷನ್‌ನನ್ನು ಬಂಧಿಸಲಾಗಿದ್ದು, ಅಪ್ರಾಪ್ತರು ಸೇರಿದಂತೆ ಉಳಿದ ಆರು ಮಂದಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಡಿಯೋವನ್ನು ಯಾರು ಸೃಷ್ಟಿಸಿದರು, ಹಾಡನ್ನು ಯಾರು ಅಳವಡಿಸಿದರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಯಾರು ಮೊದಲು ಹಂಚಿಕೊಂಡರು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಹಿನ್ನೆಲೆ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದುಬರಬೇಕಿದೆ.

ಬೆಂಗಳೂರು ಪಾರ್ಕಿಂಗ್ ನಿಯಮ: ಶುಲ್ಕ ವಿಧಿಸದಂತೆ ಸಿಎಂಗೆ ರಾಮಲಿಂಗಾರೆಡ್ಡಿ ಪತ್ರ!

0

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೊಳಿಸಲು ಮುಂದಾಗಿರುವ ಹೊಸ ಪಾರ್ಕಿಂಗ್ ನಿಯಮಗಳ ಕುರಿತು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮನೆ ಮುಂದೆ ವಾಹನ ನಿಲುಗಡೆಗೆ ಶುಲ್ಕ ವಿಧಿಸದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು ನಗರದಲ್ಲಿ ರಸ್ತೆ ಬದಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಪ್ರಸ್ತಾವಿಸಲಾಗಿದೆ. ಇದರ ಭಾಗವಾಗಿ ವಾರ್ಷಿಕ ₹15 ಸಾವಿರದಿಂದ ₹25 ಸಾವಿರದವರೆಗೆ ಪಾರ್ಕಿಂಗ್ ಶುಲ್ಕ ವಿಧಿಸುವ ಪ್ರಸ್ತಾವನೆ ಕುರಿತು ಸಾರ್ವಜನಿಕರಿಂದ ವಿವಿಧ ಅಭಿಪ್ರಾಯಗಳು ಹಾಗೂ ಆತಂಕಗಳು ವ್ಯಕ್ತವಾಗುತ್ತಿವೆ.

ನಗರದಲ್ಲಿ ವಾಹನಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಪಾರ್ಕಿಂಗ್‌ನಿಂದ ಉಂಟಾಗುತ್ತಿರುವ ಸಂಚಾರ ಸಮಸ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂಬುದನ್ನು ರಾಮಲಿಂಗಾರೆಡ್ಡಿ ಒಪ್ಪಿಕೊಂಡಿದ್ದಾರೆ. ಆದರೆ, ಪಾರ್ಕಿಂಗ್ ನಿಯಮ ರೂಪಿಸುವ ಸಂದರ್ಭದಲ್ಲಿ ಸಾಮಾನ್ಯ ನಾಗರಿಕರ ಆರ್ಥಿಕ ಪರಿಸ್ಥಿತಿಯನ್ನೂ ಪರಿಗಣಿಸುವುದು ಅತ್ಯಂತ ಮುಖ್ಯ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಮಧ್ಯಮ ವರ್ಗ ಹಾಗೂ ಸಾಮಾನ್ಯ ಕುಟುಂಬಗಳು ಆರ್ಥಿಕ ಒತ್ತಡ ಎದುರಿಸುತ್ತಿವೆ. ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಜಿಎಸ್‌ಟಿ ಹಾಗೂ ಟೋಲ್ ಸೇರಿದಂತೆ ಹಲವು ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಾಹನ ಹೊಂದಿರುವ ಕುಟುಂಬಗಳ ಮೇಲೆ ಹೆಚ್ಚುವರಿಯಾಗಿ ಪಾರ್ಕಿಂಗ್ ಶುಲ್ಕ ವಿಧಿಸುವುದು ಮತ್ತಷ್ಟು ಆರ್ಥಿಕ ಹೊರೆಯಾಗಬಹುದು ಎಂದು ಸಚಿವರು ಹೇಳಿದ್ದಾರೆ.

ಕರ್ನಾಟಕ ಸರ್ಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಿಸಲು ಹಾಗೂ ಆರ್ಥಿಕವಾಗಿ ನೆರವಾಗಲು ಹಲವು ಜನಪರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಕುಟುಂಬಗಳ ಮೇಲೆ ಮತ್ತೊಂದು ಅನಿವಾರ್ಯ ಆರ್ಥಿಕ ಹೊರ ಬೀಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರದಲ್ಲಿ ದೊಡ್ಡ ನಿವೇಶನ ಅಥವಾ ಸ್ವಂತ ಮನೆ ಹೊಂದಿರುವ ಕೆಲವರು ತಮ್ಮ ವಾಹನಗಳನ್ನು ಮನೆಯ ಆವರಣದಲ್ಲೇ ನಿಲ್ಲಿಸಬಹುದು. ಆದರೆ, ಬಹುತೇಕ ಮಧ್ಯಮ ವರ್ಗದ ಕುಟುಂಬಗಳು ಸೀಮಿತ ಜಾಗದ ಮನೆಗಳು ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ತಮ್ಮ ವಾಹನಗಳನ್ನು ಮನೆಯೊಳಗೆ ನಿಲ್ಲಿಸಲು ಅಗತ್ಯವಾದ ಸ್ಥಳದ ಕೊರತೆಯನ್ನು ಎದುರಿಸುತ್ತಿದ್ದಾರೆ.

ಹೊಸ ಕಟ್ಟಡ ನಿರ್ಮಾಣದ ನಿಯಮಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಸ್ವಾಗತಾರ್ಹ. ಆದರೆ, ಬೆಂಗಳೂರಿನ ಹಳೆಯ ಕಟ್ಟಡಗಳು ಹಾಗೂ ಹಳೆಯ ವಸತಿ ಪ್ರದೇಶಗಳಲ್ಲಿ ಇಂದಿನ ವಾಹನಗಳ ಸಂಖ್ಯೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಬಹುತೇಕ ಸಂದರ್ಭಗಳಲ್ಲಿ ಸಾಧ್ಯವಾಗುವುದಿಲ್ಲ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಹೀಗಾಗಿ ಪಾರ್ಕಿಂಗ್ ಶುಲ್ಕದ ವಿಚಾರದಲ್ಲಿ ಆತುರದ ನಿರ್ಧಾರ ಕೈಗೊಳ್ಳದೆ, ಬೆಂಗಳೂರಿನ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ.

 

ಬೆಂಗಳೂರಿನ ಖಾಲಿ ನಿವೇಶನಗಳಿಗೆ ನೋಟಿಸ್‌: ತ್ವರಿತ ಸ್ವಚ್ಛತಾ ಕಾರ್ಯಕ್ಕೆ ಕೃಷ್ಣ ಬೈರೇಗೌಡ ಸೂಚನೆ

0

ಬೆಂಗಳೂರು: ನಗರದ ಐದೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸ್ವಚ್ಛಗೊಳಿಸಬೇಕಾದ ಖಾಲಿ ನಿವೇಶನಗಳನ್ನು ಗುರುತಿಸಿ, ಮಾಲೀಕರಿಗೆ ನೋಟಿಸ್‌ ನೀಡಿ ತ್ವರಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯಕ್ಕೆ ಸಂಬಂಧಿಸಿದಂತೆ ಸೋಮವಾರ ನಡೆದ ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಸಚಿವರು, ನಿವೇಶನಗಳ ಮಾಲೀಕರು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಆಗಸ್ಟ್‌ 22ರವರೆಗೆ ಗಡುವು ನೀಡಲಾಗಿತ್ತು. ಆದರೆ, ಕೆಲವೇ ಪ್ರದೇಶಗಳಲ್ಲಿ ಶೇ.20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವಚ್ಛತಾ ಕಾರ್ಯ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ ನಗರದ ಎಲ್ಲಾ ಖಾಲಿ ನಿವೇಶನಗಳಲ್ಲೂ ಪರಿಣಾಮಕಾರಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಐದೂ ನಗರ ಪಾಲಿಕೆಗಳು ಅಗತ್ಯ ಸಿದ್ಧತೆ ಮಾಡಿಕೊಂಡು ಕಾರ್ಯಾಚರಣೆ ನಡೆಸಬೇಕು. ಸ್ವಚ್ಛತಾ ಕಾರ್ಯಕ್ಕೆ ತಗಲುವ ವೆಚ್ಚವನ್ನು ಸಂಬಂಧಪಟ್ಟ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆ ಮೂಲಕ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

ನಿವೇಶನಗಳ ಗುರುತಿಸಿ ನೋಟಿಸ್‌ ನೀಡಲು ಸೂಚನೆ

ಸ್ವಚ್ಛತಾ ಕಾರ್ಯ ಅಗತ್ಯವಿರುವ ಖಾಲಿ ನಿವೇಶನಗಳನ್ನು ಕಂದಾಯ ಅಧಿಕಾರಿಗಳು ಗುರುತಿಸಿ ಪಟ್ಟಿ ಮಾಡಬೇಕು. ಪಟ್ಟಿ ಮಾಡಲಾದ ನಿವೇಶನಗಳಿಗೆ ಮಾರ್ಷಲ್‌ಗಳು ಹಾಗೂ ಕಿರಿಯ ಆರೋಗ್ಯ ಪರಿವೀಕ್ಷಕರು ನೋಟಿಸ್‌ ಅಂಟಿಸಬೇಕು.

ಬಳಿಕ ನಗರ ಪಾಲಿಕೆಗಳ ವತಿಯಿಂದಲೇ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಕೃಷ್ಣ ಬೈರೇಗೌಡ ನಿರ್ದೇಶನ ನೀಡಿದ್ದಾರೆ. ಇದೇ ಗುರುವಾರದಿಂದ ಎಲ್ಲಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಆರಂಭಿಸಬೇಕು. ಮುಂದಿನ ಸೋಮವಾರದಿಂದ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತೆಗಾಗಿ ಜೆಸಿಬಿ, ಟಿಪ್ಪರ್‌, ಟ್ರ್ಯಾಕ್ಟರ್‌ ಹಾಗೂ ಅಗತ್ಯ ಸಿಬ್ಬಂದಿ ಸೇರಿದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸ್ವಚ್ಛತಾ ಕಾರ್ಯ ಕೈಗೊಳ್ಳಲು ಅಗತ್ಯವಿರುವ ಏಜೆನ್ಸಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆಯೂ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನೈಸ್ ಕಂಪನಿ ಖರೀದಿ ಮಾಡುತ್ತಿರುವುದು ಸಿಎಂ ಡಿ.ಕೆ.ಶಿವಕುಮಾರ್! ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

0

ಬೆಂಗಳೂರು:  ರಾಜ್ಯದ ಈಗಿನ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ (ಟೇಕ್ ಓವರ್) ಮಾಡಲು ಹೊರಟಿರುವ ವ್ಯಕ್ತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪೋಟಕ ಸಂಗತಿಯನ್ನು ಬಹಿರಂಗಪಡಿಸಿದರು. ನನಗಿರುವ ಮಾಹಿತಿ ಪ್ರಕಾರ ಬೇನಾಮಿ ಕಂಪನಿಗಳ ಮೂಲಕ ಈ ಮುಖ್ಯಮಂತ್ರಿಯೇ ನೈಸ್ ಕಂಪನಿಯನ್ನು ಖರೀದಿ ಮಾಡಲು ಹೊರಟಿದ್ದಾರೆ. ರೈತರಿಗೊಂದು ಕಾನೂನು, ಮುಖ್ಯಮಂತ್ರಿಗೆ ಇನ್ನೊಂದು ಕಾನೂನು ಇದೆಯಾ ಈ ರಾಜ್ಯದಲ್ಲಿ? ಬಿಎಂಐಸಿ ಯೋಜನೆ ಹೆಸರಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಹೊಡೆಲು ಸಂಚು ರೂಪಿಸಿದ್ದಾರೆ. ನಾನಿಲ್ಲಿ ಕೂತು ಸಂತೆಭಾಷಣ ಮಾಡುತ್ತಿಲ್ಲ. ಮುಂದಿನ ವಾರ ದಾಖಲೆ ಸಮೇತ ಹೇಳುತ್ತೇನೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಕೇಂದ್ರ ಕಚೇರಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ರಾಜ್ಯದ ಈಗಿನ ಮುಖ್ಯಮಂತ್ರಿ ನೈಸ್ ಅಕ್ರಮಗಳಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಈ ಮುಖ್ಯಮಂತ್ರಿಯೇ ರಾಷ್ಟ್ರದಲ್ಲಿಯೇ ಅತಿ ದೊಡ್ಡ ಭೂ ಲೂಟಿಯ ಮಹಾನಾಯಕ ಎಂದು ಅವರು ಗಂಭೀರ ಆರೋಪ ಮಾಡಿದರು.

ವಿಧಾನಸೌಧದ ಮೂರನೇ ಮಾಡಿಯಲ್ಲಿ ಕೂತು ಈ ಮುಖ್ಯಮಂತ್ರಿ ನೇರ ವ್ಯವಹಾರಕ್ಕೆ ಇಳಿದಿದ್ದಾರೆ. ನೈಸ್ ಕಂಪನಿಯನ್ನು ಯಾರು ಟೇಕ್ ಓವರ್ ಮಾಡುತ್ತಿದ್ದಾರೆ ಎಂಬುದನ್ನು ತಾಕತ್ತಿದ್ದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಹೇಳಲಿ. ಯೋಜನೆಯನ್ನು ಯಾರು ಸ್ವಾಧೀನ ಮಾಡಿಕೊಳ್ಳುತ್ತಿದ್ದಾರೆ?ಬೇನಾಮಿ ಕಂಪನಿಗಳ ಮೂಲಕ ಯಾರು ಯಾರು ಈ ವ್ಯವಹಾರಕ್ಕೆ ಇಳಿದಿದ್ದಾರೆ ಎಂಬ ಮಾಹಿತಿ ನನಗಿದೆ. ಈ ಮುಖ್ಯಮಂತ್ರಿ ಎದೆ ಮುಟ್ಟಿಕೊಂಡು ಮಾತನಾಡಲಿ. ಈ ಬಗ್ಗೆ ರಾಜ್ಯದ ಜನತೆಯ ಮುಂದೆ ಸತ್ಯವನ್ನು ಬಾಯಿ ಬಿಡಲಿ ಎಂದು ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದರು.

ವಿದ್ಯಾರ್ಥಿ, ಯುವ ಸಮೂಹಕ್ಕೆ ಕರೆ ನೀಡಿದ ಕೇಂದ್ರ ಸಚಿವರು:

ನೈಸ್ ಯೋಜನೆ ಇಡೀ ದೇಶದಲ್ಲಿಯೇ ಅತೀ ದೊಡ್ಡ ಭೂ ಹಗರಣ. ಇದು ಸ್ಕ್ಯಾಮ್ ಫಾರ್ ಸ್ಕಿಮ್ ಎನ್ನುವ ರೀತಿಯಲ್ಲಿದೆ. ಈ ಅಕ್ರಮದ ವಿರುದ್ಧ ಇಡೀ ರಾಜ್ಯವೇ ತಿರುಗಿ ಬೀಳಬೇಕಿದೆ. ಯುವಕರು, ವಿದ್ಯಾರ್ಥಿಗಳು ಇದನ್ನು ಪ್ರಶ್ನೆ ಮಾಡಬೇಕಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಕರೆ ನೀಡಿದರು. ಈ ಮುಖ್ಯಮಂತ್ರಿಗೂ ನೈಸ್ ಯೋಜನೆಗೂ ಇರುವ ಸಂಬಂಧವೇನು? ನೈಸ್ ಜೊತೆ ಸಿಎಂ ಒಡಂಬಡಿಕೆ ಏನು? ಈ ಕಂಪನಿಯ ಮಾಲೀಕರ ಜೊತೆ ಈ ವ್ಯಕ್ತಿಗೆ ಇರುವ ಸಂಬಂಧಗಳು ಮತ್ತು ವ್ಯವಹಾರಗಳು ಏನು? ಧೈರ್ಯವಿದ್ದರೆ ಜನರ ಮುಂದೆ ಈ ಬಗ್ಗೆ ಮಾತನಾಡಲಿ. ನಾನು ಸತ್ಯ ಹೇಳುವುದಕ್ಕೆ ಅಂಜುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ನೈಸ್ ರಸ್ತೆ ಅಕ್ರಮದ ಬಗ್ಗೆ ರಾಜ್ಯ ಸರಕಾರ ಮೌನಕ್ಕೆ ಶರಣಾಗಿದೆ. ಯೋಜನಾ ಚೌಕಟ್ಟು ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆ ಆಗಿದೆ. ಈ ಸರ್ಕಾರ ನೈಸ್ ಕಂಪನಿ ಜತೆ ನೇರವಾಗಿ ಕುಮ್ಮಕ್ಕಾಗಿದೆ ಎಂದು ಅವರು ದೂರಿದರು. ರೈತರ ಭೂಸ್ವಾಧೀನವಾಗಿ 20 ವರ್ಷಗಳೇ ಆಗಿದೆ. ರೈತರಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ. ಆದರೆ, ರೈತರಿಂದ ಕಿತ್ತುಕೊಂಡ ಭೂಮಿಯನ್ನು ಮನಸೋಇಚ್ಛೆ ಮಾರಾಟ ಮಾಡಿಕೊಂಡಿದೆ.

ಅಲ್ಲದೆ ಒಪ್ಪಂದದಂತೆ 111 ಕಿ.ಮೀ. ರಸ್ತೆಯನ್ನು ನೈಸ್ ನಿರ್ಮಾಣ ಮಾಡಬೇಕಿತ್ತು. ಆದರೆ ಕೇವಲ 5 ಕಿಲೋಮೀಟರ್ ರಸ್ತೆಯನ್ನಷ್ಟೇ ನಿರ್ಮಿಸಿದೆ. ಹೀಗೆ ಯೋಜನಾ ಚೌಕಟ್ಟು ಒಪ್ಪಂದದ ಎಲ್ಲ ಅಂಶಗಳನ್ನು ಸಾರಾಸಗಟ್ಟಾಗಿ ಉಲ್ಲಂಘನೆ ಮಾಡಿದ ಮೇಲೆಯೂ ಅನೇಕ ವರ್ಷಗಳಿಂದ ನೈಸ್ ಕಂಪನಿ ತನ್ನ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಂದ ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪಿಸಿದರು.

ಇಷ್ಟೆಲ್ಲಾ ಅಕ್ರಮಗಳನ್ನು ಎಸಿಗಿರುವ ಕಾರಣದಿಂದಲೇ ರಾಜ ಹೈಕೋರ್ಟ್ ನೈಸ್ ಯೋಜನೆಯ ಬಗ್ಗೆ ಕಠಿಣವಾದ ಶಬ್ದಗಳ ಮೂಲಕ ತನ್ನ ಅಭಿಪ್ರಾಯವನ್ನು ದಾಖಲಿಸಿದೆ. ನ್ಯಾಯಾಲಯದ ಅಭಿಪ್ರಾಯವನ್ನು ಈಗಾಗಲೇ ಗಣನೆಗೆ ತೆಗೆದುಕೊಂಡು ಸರ್ಕಾರ ನೈಸ್ ವಿರುದ್ಧ ಕ್ರಮ ಜರುಗಿಸಬೇಕಿತ್ತು. ದುರಂತವೆಂದರೆ ರಾಜ್ಯದ ಮುಖ್ಯಮಂತ್ರಿಯೇ ನೇರವಾಗಿ ನೈಸ್ ಕಂಪನಿ ಜೊತೆ ಶಾಮೀಲಾಗಿದ್ದಾರೆ ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಸಾರ್ವಜನಿಕವಾಗಿ ಇಷ್ಟೆಲ್ಲ ವಿರೋಧ ಮತ್ತು ಆಕ್ರೋಶ ವ್ಯಕ್ತವಾಗುತ್ತಿದ್ದರು ನೈಸ್ ರಸ್ತೆಗಳಲ್ಲಿ ಟೋಲ್ ಸಂಗ್ರಹ ನಿಲ್ಲುತ್ತಿಲ್ಲ. ಟೋಲ್ ಸಂಗ್ರಹಕ್ಕೆ ಈ ಸರ್ಕಾರವೇ ಒತ್ತಾಸೆಯಾಗಿ ನಿಂತಿದೆ. ಅಲ್ಲಿ ಸುಲಿಗೆ ಮಾಡುವ ಹಣವನ್ನು ಇವರೆಲ್ಲರೂ ಹಂಚಿಕೊಳ್ಳುತ್ತಿದ್ದಾರೆ. ಬಡವಾನ ಸವಾರರ ರಕ್ತವನ್ನು ಹೀರುವ ಕೆಲಸ ನಡೆಯುತ್ತಿದೆ. ರಾಜ್ಯದ ಯುವಜನರು ಈ ಅಕ್ರಮವನ್ನು ನೋಡುತ್ತಾ ಸುಮ್ಮನೆ ಕುಳಿತುಕೊಳ್ಳಬಾರದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ನನಗೆ ತಿಳಿದ ಮಟ್ಟಿಗೆ ರಾಷ್ಟ್ರದ ಇತಿಹಾಸದಲ್ಲಿಯೇ ಬೃಹತ್ತಾದ ಭೂಹಾಗರಣ ನೈಸ್ ಅಕ್ರಮವಾಗಿದೆ. ನ್ಯಾಯಾಲವೂ ಕೂಡ ಇದೊಂದು ಹಗರಣದಂತೆ ಕಾಣುತ್ತಿದೆ ಎಂದು ಅಭಿಪ್ರಾಯಪಟ್ಟಿದೆ. ಆಡಳಿತ ನಡೆಸುವ ರಾಜಕಾರಣಿಗಳೇ ಶಾಮೀಳಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ನ್ಯಾಯಾಲಯಗಳಿಗೆ ತಪ್ಪು ಮಾಹಿತಿಗಳನ್ನು ಕೊಟ್ಟು ಸರ್ಕಾರಕ್ಕೆ ಛೀಮಾರಿ ಹಾಕಿಸುವ ದುಷ್ಕೃತ್ಯ ನಡೆದಿದೆ. ಸ್ಕೀಂ ಫಾರ್ ಸ್ಕ್ಯಾಮ್ ಯೋಜನೆ ಇದು. ಇದೆಲ್ಲವನ್ನು ನೋಡಿಕೊಂಡು ನಾವು ಮೌನಕ್ಕೆ ಶರಣಾಗಲು ಸಾಧ್ಯವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ನಾವೆಲ್ಲರೂ ಒಗ್ಗಟ್ಟಾಗಿ ಸೇರಿ ಈ ಅಕ್ರಮದ ವಿರುದ್ಧ ಹೋರಾಟ ನಡೆಸಬೇಕಿದೆ. ಹೋರಾಟ ಎಂದರೆ ನಾವೆಲ್ಲರೂ ಹೋಗಿ ಟೋಲ್ ಪ್ಲಾಝಗಳಾಗೆ ಆ ಗಳಿಗೆ ನುಗ್ಗಬೇಕು ಎಂದಲ್ಲ. ಆ ರೀತಿ ಮಾಡುವುದಿದ್ದರೆ ಯಾವತ್ತೂ ನೈಸ್ ಟೋಲ್ ಕೇಂದ್ರಗಳಿಗೆ ಜನರನ್ನು ನುಗ್ಗಿಸಿಬಿಡುತ್ತಿದ್ದೆ. ಶಾಂತಿಯುತ ಹೋರಾಟ ನಡೆಸುವುದು ನಮ್ಮ ಉದ್ದೇಶ. ನೀವು ಕೂತಿರುವ ಈ ಕಚೇರಿಯ ಹೆಸರು ಜೆಪಿ ಭವನ. ಲೋಕ ನಾಯಕ ಜಯಪ್ರಕಾಶನಾರಾಯಣ ಅವರ ಸ್ಪೂರ್ತಿ ಮತ್ತು ಆದರ್ಶದ ನೆಲೆಗಟ್ಟಿನ ಮೇಲೆ ನಮ್ಮ ಪಕ್ಷ ನಿಂತಿದೆ. ಇಂದಿರಾ ಗಾಂಧಿ ಅವರು ಈ ರಾಷ್ಟ್ರದ ಮೇಲೆ ಹೇರಿದ ತುರ್ತು ಪರಿಸ್ಥಿತಿಯ ವಿರುದ್ಧ ಇಡೀ ರಾಷ್ಟ್ರವನ್ನೇ ಸಂಘಟಿಸಿ ಹೋರಾಟ ನಡೆಸಿದ ಮಹಾನ್ ನಾಯಕರು ಅವರು. ಹೀಗಾಗಿ ನಮ್ಮ ಹೋರಾಟ ಶಾಂತಿ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಕೇಂದ್ರ ಸಚಿವರು ಯುವಕರು ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕಿವಿಮಾತು ಹೇಳಿದರು.

ಟೋಲ್ ಸಂಗ್ರಹ ಮಾಡುತ್ತಿರುವುದೇ ಮಹಾನ್ ಅಕ್ರಮ ಎಂದ ಸಚಿವ ಕುಮಾರಸ್ವಾಮಿ ಅವರು; ಇದರ ಬಗ್ಗೆ ತನಿಖೆ ಮಾಡಿದರೆ ಬಹುದೊಡ್ಡ ಅಕ್ರಮ ಬೈಲಿಗೆ ಬರುತ್ತದೆ. ಸಂಘಟಿತವಾಗಿ ಸರ್ಕಾರವನ್ನು ಶಾಮೀಲು ಮಾಡಿಸಿಕೊಂಡು ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಅಕ್ರಮ ವಯಸ್ಸಿದ್ದರೆ ಎಂತಹ ಕುಖ್ಯಾತ ಹಗರಣ ಸೃಷ್ಟಿಯಾಗುತ್ತದೆ ಎಂಬುದಕ್ಕೆ ನೈಸ್ ಹಗರಣ ಜಲಂತ ಸಾಕ್ಷಿ ಎಂದು ಸಚಿವರು ಒತ್ತಿ ಹೇಳಿದರು.

ಬೆಂಗಳೂರು ಜನರಷ್ಟೇ ಅಲ್ಲ ರಾಜ್ಯದ ಎಲ್ಲ ಭಾಗದ ಜನರು ನೈಸ್ ಅಕ್ರಮದಿಂದ ನೋವು ಅನುಭವಿಸುತ್ತಿದ್ದಾರೆ. ಯುವ ಸಮುದಾಯ ನೈಸಕ್ರಮಗಳ ಬಗ್ಗೆ ಮನೆ ಮನೆಗೂ ಮಾಹಿತಿ ಕೊಡಬೇಕು. ಬೀದಿ ಬೀದಿಗಳಲ್ಲಿ ಹೋರಾಟ ನಡೆಸಬೇಕು. ಯಾರೂ ಕೂಡ ಟೋಲ್ ಕಟ್ಟದಿರಲು ಜಾಗೃತಿ ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.

ಉದ್ಯಾನವನಗಳನ್ನು ನುಂಗಲು ಸರಕಾರ ಸಂಚು:

ರಿಯಲ್ ಎಸ್ಟೇಟ್ ದಂಧೆಕೋರರಿಗೆ ಜೇಬು ತುಂಬಿಸಲು ಕಂಡಕಂಡ ಭೂಮಿಯನ್ನು ನೋಟಿಫಿಕೇಷನ್ ಮಾಡುತ್ತಿರುವ ಈ ರಾಜ್ಯ ಸರಕಾರ ಈಗ ಅಭಿವೃದ್ಧಿ ನೆಪ ಹೇಳಿ ಬೆಂಗಳೂರಿನ ಉದ್ಯಾನವನಗಳನ್ನು ನುಂಗಲು ಸಂಚು ರೂಪಿಸಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ವಿಶಾಲವಾಗಿರುವ ಉದ್ಯಾನವನಗಳು, ಆಟದ ಮೈದಾನಗಳನ್ನು ಸ್ವಾಹಾ ಮಾಡಲು ಈ ಕೆಟ್ಟ ಸರಕಾರ ಹೊರಟಿದೆ. ಪಾರ್ಕ್ ಗಳ 5% ಜಾಗವನ್ನು ಸಾರ್ವಜನಿಕ ಉದ್ದೇಶಕ್ಕೆ ಎಂದು ನೆಪ ಮಾಡಿಕೊಂಡು ಕೊಳ್ಳೆ ಹೊಡೆಯಲು ಸಂಚು ಹೂಡಿದೆ.

ವಿಧಾನಸೌಧದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಜೆಡಿಎಸ್ ಮತ್ತು ಬಿಜೆಪಿ ಹೋರಾಟ ಮಾಡುತ್ತಿದ್ದರೆ ಈ ಸರಕಾರ ಅದಕ್ಕೆ ಬೇಕಾದ ಬಿಲ್ ಪಾಸು ಮಾಡಿಕೊಂಡಿದೆ. ಈ ಮೂಲಕ ಬೆಂಗಳೂರಿನ ಲಂಗ್ ಸ್ಪೇಸ್ ಅನ್ನು ನಾಶ ಮಾಡಲು ಹೊರಟಿದೆ. ಅದರ ಜತೆಗೆ ಮನೆಯ ಮುಂದೆ ಕಾರು ನಿಲ್ಲಿಸಿದರೂ ವರ್ಷಕ್ಕೆ ₹25,000 ಕಟ್ಟಬೇಕಂತೆ! ದಿವಾಳಿ ಆಗಿರುವ ಈ ಸರಕಾರ ಜನರ ಜೇಬಿಗೆ ಕೈಹಾಕಿದೆ ಎಂದು ಎಂದು ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ಬೇನಾಮಿ ಆಸ್ತಿ ಇದ್ದರೆ ತೋರಿಸಿ, ರಾಜಕೀಯ ನಿವೃತ್ತಿಯಾಗುತ್ತೇನೆ:

ಕುಮಾರಸ್ವಾಮಿ ಬೇನಾಮಿ ಆಸ್ತಿಗಳನ್ನು ಹೊಂದಿದ್ದಾರೆ ಎಂದು ಯಾರೋ ಮಾತನಾಡಿರುವುದರನ್ನು ಗಮನಿಸಿದ್ದೇನೆ. ನನ್ನ ಬೇನಾಮಿ ಆಸ್ತಿ ಯಾವುದಾದರೂ ಇದ್ದರೆ ತೋರಿಸಲಿ. ಈ ಸರಕಾರಕ್ಕೆ ನಾನು ನೇರ ಸವಾಲು ಹಾಕುತ್ತೇನೆ. ಅಂತಹ ಯಾವುದಾದರೂ ಅಸ್ತಿ ಇದ್ದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು.