Home Blog

ರಾಜ್ಯದಲ್ಲಿ ಮತ್ತೆ ಮಳೆ ಚುರುಕು; ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಲಘು ಹಾಗೂ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮಳೆಯೂ ಸುರಿಯಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಿಎಂ ಡಿಕೆ ಶಿವಕುಮಾರ್!

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ರಾತ್ರಿ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಶಾಸಕ ರವಿ ಗಣಿಗ ಕೂಡ ಮುಖ್ಯಮಂತ್ರಿ ಅವರೊಂದಿಗೆ ಉಪಸ್ಥಿತರಿದ್ದರು. ಸಿಎಂ ಹಾಗೂ ಇತರ ನಾಯಕರು ಶ್ರೀಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿ ಆಶೀರ್ವಾದ ಪಡೆದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಶಾಸಕ ರವಿ ಗಣಿಗ, ಈ ಭೇಟಿಗೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಮುಖ್ಯಮಂತ್ರಿ ಅವರೊಂದಿಗೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಸಚಿವ ಎನ್. ಚಲುವರಾಯಸ್ವಾಮಿ ಕೂಡ ಇದೇ ಮಾತನ್ನು ಪುನರುಚ್ಚರಿಸಿ, ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಆದ್ದರಿಂದ ಸಿಎಂ ಅವರೊಂದಿಗೆ ಬಂದು ಶ್ರೀಗಳ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇವೆ. ಈ ವೇಳೆ ಯಾವುದೇ ರಾಜಕೀಯ ವಿಷಯಗಳ ಕುರಿತು ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾದರೂ, ನಾಯಕರು ಇದು ಕೇವಲ ಸೌಹಾರ್ದ ಹಾಗೂ ಆಶೀರ್ವಾದ ಪಡೆಯುವ ಉದ್ದೇಶದ ಭೇಟಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿ ಪ್ರಕಟ: ರಾಜ್ಯದ 200 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಗೌರವ!

ಬೆಂಗಳೂರು: 2025-26ನೇ ಸಾಲಿನ ಡಿಜಿ & ಐಜಿಪಿ ಕಮಾಂಡೇಷನ್ ಡಿಸ್ಕ್ ಪ್ರಶಸ್ತಿಗೆ ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ ವರ್ಷಪೂರ್ತಿ ಸಲ್ಲಿಸಿದ ಅತ್ಯುತ್ತಮ ಸೇವೆ, ಕರ್ತವ್ಯ ನಿಷ್ಠೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಡಿಜಿ ಹಾಗೂ ಐಜಿಪಿ ಎಂ.ಎ. ಸಲೀಂ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಐಜಿಪಿ ಶಶಿಕುಮಾರ್, ಡಿಐಜಿಪಿ ಭೀಮಾಶಂಕರ್ ಗುಳೇದ್, ಡಿಸಿಪಿ ಅಕ್ಷಯ್ ಮಚೀಂದ್ರ ಹಾಗೂ ಎಸಿಪಿ ರಾಜೇಶ್ ಎಲ್.ವೈ ಸೇರಿದಂತೆ ಒಟ್ಟು 200 ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಾನ ಪಡೆದಿದ್ದಾರೆ.

ಈ ಪ್ರಶಸ್ತಿ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಷಮತೆ, ಸೇವಾ ಮನೋಭಾವ ಹಾಗೂ ಇಲಾಖೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಗೌರವಗಳಲ್ಲಿ ಒಂದಾಗಿದೆ.

 

ಚಿನ್ನ ಬಿಡಿಸಿಕೊಳ್ಳಲು ಹೋದ ಅಪ್ಪ-ಮಗನ ಮೇಲೆ ಗುಂಡಿನ ದಾಳಿ; ಶಾಲಾ ಬಾಲಕಿಗೂ ತಗುಲಿದ ಗುಂಡು!

ಧಾರವಾಡ: ಗಿರವಿ ಇಟ್ಟಿದ್ದ ಚಿನ್ನವನ್ನು ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ಗಲಾಟೆ ನಡೆದು, ಚಿನ್ನದಂಗಡಿ ಮಾಲೀಕ ಗುಂಡು ಹಾರಿಸಿದ ಘಟನೆ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಅಪ್ಪ-ಮಗ ಗಂಭೀರವಾಗಿ ಗಾಯಗೊಂಡಿದ್ದು, ಶಾಲೆಯಿಂದ ಮನೆಗೆ ತೆರಳುತ್ತಿದ್ದ 10 ವರ್ಷದ ಬಾಲಕಿಯೊಬ್ಬಳಿಗೂ ಗುಂಡು ತಗುಲಿದೆ.

ಜೀರಿಗವಾಡ ಗ್ರಾಮದ ನಿಂಗಪ್ಪ ಹೊರಕೇರಿ ಹಾಗೂ ಅವರ ಪುತ್ರ ಸಿದ್ದಪ್ಪ ಹೊರಕೇರಿ ನಾಲ್ಕು ವರ್ಷಗಳ ಹಿಂದೆ ಗರಗ ಗ್ರಾಮದ ಚಿನ್ನದಂಗಡಿ ಮಾಲೀಕ ಮೌನೇಶ್ ಬಳಿ ಸುಮಾರು 40 ಗ್ರಾಂ ಚಿನ್ನವನ್ನು 60 ಸಾವಿರ ರೂ. ಸಾಲಕ್ಕೆ ಗಿರವಿ ಇಟ್ಟಿದ್ದರು. ಇದೀಗ ಹಣವನ್ನು ಮರುಪಾವತಿಸಿ ಚಿನ್ನವನ್ನು ಬಿಡಿಸಿಕೊಳ್ಳಲು ಮುಂದಾದ ಅವರು, ಚಿನ್ನವನ್ನು ಹಿಂದಿರುಗಿಸುವಂತೆ ಅಥವಾ ಪ್ರಸ್ತುತ ಮಾರುಕಟ್ಟೆ ದರದ ಹಣವನ್ನು ನೀಡುವಂತೆ ಕೇಳಿದ್ದಾರೆ.

ಆದರೆ, ಗಿರವಿ ಇಟ್ಟಿದ್ದ ಚಿನ್ನವನ್ನು ಮುರುಗಡೆ ಮಾಡಲಾಗಿದೆ ಎಂದು ಮೌನೇಶ್ ತಿಳಿಸಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಉಂಟಾಗಿ, ಅದು ತೀವ್ರ ಸ್ವರೂಪ ಪಡೆದುಕೊಂಡಿದೆ. ಇದೇ ವೇಳೆ ಮೌನೇಶ್ ತನ್ನ ಬಳಿ ಇದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಸಿದ್ದಪ್ಪ ಹೊರಕೇರಿಗೆ ಹೊಟ್ಟೆ ಭಾಗಕ್ಕೆ, ನಿಂಗಪ್ಪ ಹೊರಕೇರಿಗೆ ಹೊಟ್ಟೆ ಹಾಗೂ ಕಾಲಿಗೆ ಗುಂಡು ತಗುಲಿದ್ದು, ಗಂಭೀರ ಗಾಯಗಳಾಗಿವೆ. ಇದೇ ವೇಳೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಗರಗ ಗ್ರಾಮದ 10 ವರ್ಷದ ಬಾಲಕಿಯ ಕಾಲಿಗೂ ಗುಂಡು ತಗುಲಿದೆ.

ಗಾಯಾಳುಗಳನ್ನು ತಕ್ಷಣ ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಗುಂಜನ್ ಆರ್ಯ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಿನ್ನದ ವ್ಯವಹಾರಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಲಾಟೆ ನಡೆದಿದ್ದು, ರಿವಾಲ್ವರ್‌ನಿಂದ ಗುಂಡು ಹಾರಿಸಲಾಗಿದೆ. ಎಷ್ಟು ಸುತ್ತು ಗುಂಡು ಹಾರಿಸಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬಾಲಕಿಗೆ ಗುಂಡು ತಗುಲಿರುವುದು ದುರದೃಷ್ಟಕರವಾಗಿದ್ದು, ಆಕೆಗೆ ಈ ವಿವಾದದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಆರೋಪಿ ಮೌನೇಶ್‌ನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

 

ಹಲ್ಲು, ಹೃದಯ, ಜೀರ್ಣಕ್ರಿಯೆ… ಲವಂಗದಿಂದ ಸಿಗುವ 5 ಪ್ರಮುಖ ಆರೋಗ್ಯ ಪ್ರಯೋಜನಗಳು!

0

ಅಡುಗೆ ಮನೆಯಲ್ಲಿ ಸುಲಭವಾಗಿ ಸಿಗುವ ಮಸಾಲೆ ಪದಾರ್ಥಗಳಲ್ಲಿ ಲವಂಗ ಕೂಡ ಒಂದು.

ಇದು ಆಹಾರಕ್ಕೆ ರುಚಿ ಮತ್ತು ಸುವಾಸನೆ ನೀಡುವುದಷ್ಟೇ ಅಲ್ಲ, ಅನೇಕ ಆರೋಗ್ಯ ಪ್ರಯೋಜನಗಳನ್ನೂ ಹೊಂದಿದೆ. ಲವಂಗದಲ್ಲಿರುವ ಯೂಜಿನಾಲ್, ಆಂಟಿಆಕ್ಸಿಡೆಂಟ್‌ಗಳು ಮತ್ತು ಪೋಷಕಾಂಶಗಳು ದೇಹವನ್ನು ಹಲವು ಕಾಯಿಲೆಗಳಿಂದ ರಕ್ಷಿಸಲು ನೆರವಾಗುತ್ತವೆ. ಪ್ರತಿದಿನ 1 ಅಥವಾ 2 ಲವಂಗಗಳನ್ನು ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳನ್ನು ಪಡೆಯಬಹುದು.

ರೋಗನಿರೋಧಕ ಶಕ್ತಿ ಹೆಚ್ಚಳ:

ಲವಂಗದಲ್ಲಿ ವಿಟಮಿನ್ ಸಿ ಹಾಗೂ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು ಸಮೃದ್ಧವಾಗಿದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ. ಇದರಿಂದ ಸೋಂಕುಗಳು ಹಾಗೂ ಋತುಮಾನದ ಕಾಯಿಲೆಗಳ ವಿರುದ್ಧ ಹೋರಾಡಲು ಸಹಕಾರಿಯಾಗುತ್ತದೆ.

ಬಾಯಿ ಮತ್ತು ಹಲ್ಲಿನ ಆರೋಗ್ಯಕ್ಕೆ ಉತ್ತಮ:

ಲವಂಗದಲ್ಲಿ ನೈಸರ್ಗಿಕ ಆಂಟಿಬ್ಯಾಕ್ಟೀರಿಯಲ್ ಹಾಗೂ ಆಂಟಿಫಂಗಲ್ ಗುಣಗಳಿವೆ. ಲವಂಗವನ್ನು ಜಗಿಯುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ. ಹಲ್ಲಿನ ನೋವು, ಒಸಡುಗಳ ಉರಿಯೂತ ಹಾಗೂ ಬಾಯಿಯಲ್ಲಿನ ಬ್ಯಾಕ್ಟೀರಿಯಾಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆ ಸುಧಾರಣೆ:

ಗ್ಯಾಸ್ಟ್ರಿಕ್, ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಮಲಬದ್ಧತೆ ಸಮಸ್ಯೆಗಳಿಂದ ಬಳಲುವವರಿಗೆ ಲವಂಗ ಉತ್ತಮ ನೆರವಾಗುತ್ತದೆ. ಇದು ಜೀರ್ಣರಸಗಳ ಉತ್ಪಾದನೆಯನ್ನು ಉತ್ತೇಜಿಸಿ ಆಹಾರ ಸುಲಭವಾಗಿ ಜೀರ್ಣವಾಗಲು ಸಹಕಾರಿಯಾಗುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ನೆರವು:

ಕೆಲವು ಅಧ್ಯಯನಗಳ ಪ್ರಕಾರ, ಲವಂಗದಲ್ಲಿರುವ ಯೂಜಿನಾಲ್ ಮತ್ತು ಫ್ಲೇವನಾಯ್ಡ್‌ಗಳು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಸುಧಾರಿಸಲು ನೆರವಾಗಬಹುದು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯವಾಗುತ್ತದೆ.

ಹೃದಯ ಮತ್ತು ಯಕೃತ್ತಿನ ಆರೋಗ್ಯಕ್ಕೆ ಸಹಕಾರಿ:

ಲವಂಗದಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತವೆ. ಜೊತೆಗೆ ಯಕೃತ್ತಿನಲ್ಲಿ ಸಂಗ್ರಹವಾಗುವ ಹಾನಿಕಾರಕ ವಿಷಪದಾರ್ಥಗಳನ್ನು ಹೊರಹಾಕುವಲ್ಲಿ ಸಹಕಾರಿಯಾಗುತ್ತದೆ.

ಲವಂಗವನ್ನು ಹೇಗೆ ಸೇವಿಸಬಹುದು?

  • ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ 1–2 ಲವಂಗಗಳನ್ನು ಜಗಿಯಬಹುದು.
  • ಲವಂಗವನ್ನು ನೀರಿನಲ್ಲಿ ಕುದಿಸಿ ಅದರ ನೀರನ್ನು ಕುಡಿಯಬಹುದು.
  • ಚಹಾ ಅಥವಾ ಕಷಾಯದಲ್ಲಿ ಸೇರಿಸಿ ಸೇವಿಸಬಹುದು.

ಲವಂಗ ಆರೋಗ್ಯಕ್ಕೆ ಪ್ರಯೋಜನಕಾರಿಯಾದರೂ, ಅತಿಯಾಗಿ ಸೇವಿಸುವುದು ಸೂಕ್ತವಲ್ಲ. ಯಾವುದೇ ಆರೋಗ್ಯ ಸಮಸ್ಯೆ, ಮಧುಮೇಹ ಅಥವಾ ಔಷಧ ಸೇವನೆ ಇದ್ದರೆ ವೈದ್ಯರ ಸಲಹೆಯೊಂದಿಗೆ ಬಳಸುವುದು ಉತ್ತಮ.

ಸಮಾಜಮುಖಿ ವ್ಯಕ್ತಿಗಳು ಸದಾ ಸ್ಮರಣೀಯರು: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ವ್ಯಕ್ತಿಯ ಬದುಕಿನ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ಅವರನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದ ಗಿಡ್ನಂದಿ ಅವರ ಸಂಸ್ಮರಣ ಗ್ರಂಥ ‘ಸದಾಶಿವಾನಂದ’ ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಿಕ್ಷಕರಾಗಿದ್ದ ಶಿವಾನಂದ ಗಿಡ್ನಂದಿ ಅವರು ಬೋಧನೆಯ ಜೊತೆಗೆ ಸಾಹಿತ್ಯ, ಸಂಸ್ಕೃತಿ ಮತ್ತು ಸಂಘಟನಾ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕವಿಯಾಗಿ, ಸಂಘಟಕರಾಗಿ ಹಾಗೂ ಉತ್ತಮ ಬೋಧಕರಾಗಿ ಗದಗದ ಸಾಂಸ್ಕೃತಿಕ ಶ್ರೀಮಂತಿಕೆಗೆ ತಮ್ಮದೇ ಆದ ಕಾಣಿಕೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತರಾಗದೆ ಸಮಾಜ ಮತ್ತು ಸಂಸ್ಕೃತಿಯ ಬೆಳವಣಿಗೆಯಲ್ಲೂ ಪಾತ್ರ ವಹಿಸಬೇಕು. ಶಿವಾನಂದ ಗಿಡ್ನಂದಿ ಅವರು ಉತ್ತಮ ಶಿಕ್ಷಕ, ಸಾಹಿತಿ ಹಾಗೂ ಸಂಘಟಕರಾಗಿ ಸಮಾಜಕ್ಕೆ ಮಾದರಿಯಾಗಿದ್ದರು ಎಂದರು.

ಪ್ರೊ. ಚಂದ್ರಶೇಖರ ವಸ್ತ್ರದ ಮಾತನಾಡಿ, ಗಿಡ್ನಂದಿ ಅವರು ಉತ್ತಮ ವಾಗ್ಮಿ, ನಿರೂಪಕ ಹಾಗೂ ಕವಿಯಾಗಿದ್ದು ಸಾಹಿತ್ಯ ವಲಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು ಎಂದು ಹೇಳಿದರು.

ಗ್ರಂಥವನ್ನು ಪರಿಚಯಿಸಿದ ಡಾ. ಎಚ್.ಬಿ. ಪೂಜಾರ ಅವರು, ಈ ಕೃತಿಯಲ್ಲಿ ಶಿವಾನಂದ ಗಿಡ್ನಂದಿ ಅವರ ವ್ಯಕ್ತಿತ್ವ, ಸಾಹಿತ್ಯ ಸಾಧನೆ, ಕವಿತೆಗಳು ಹಾಗೂ ಲೇಖನಗಳನ್ನು ಒಳಗೊಂಡ ಸಮಗ್ರ ಚಿತ್ರಣ ನೀಡಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ಗಿಡ್ನಂದಿ ಅವರು ನೀಡಿದ ಕೊಡುಗೆ ಅಪಾರವಾಗಿದ್ದು, ಅವರ ಸೇವಾ ಪರಂಪರೆಯನ್ನು ಕುಟುಂಬ ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ಸಂಗತಿ ಎಂದರು.

ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿ ದೊರೆಸ್ವಾಮಿಮಠದ ಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, ಸಾಹಿತ್ಯ ಪರಿಷತ್ತಿನಲ್ಲಿ ಗಿಡ್ನಂದಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾಗಿದ್ದು, ಅವರ ಜೀವನ ಸಾಧನೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಆಶಿಸಿದರು.

ನಿವೃತ್ತ ಉಪನ್ಯಾಸಕ ಎಸ್.ಜಿ. ಕಡೇಮನಿ ಮಾತನಾಡಿ, ಶಿವಾನಂದ ಗಿಡ್ನಂದಿ ಅವರು ಶಿಕ್ಷಣ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಬಹುಮುಖ ಪ್ರತಿಭೆಯಾಗಿದ್ದರು ಎಂದು ಹೇಳಿದರು.

ವೇದಿಕೆಯಲ್ಲಿ ಮಹಾದೇವಪ್ಪ ಕಡೇಮನಿ, ಶಕುಂತಲಾ ಗಿಡ್ನಂದಿ ಉಪಸ್ಥಿತರಿದ್ದರು. ಮಂಜುಳಾ ವೆಂಕಟೇಶಯ್ಯ ಕವನ ವಾಚಿಸಿದರು. ಡಾ. ದತ್ತಪ್ರಸನ್ನ ಪಾಟೀಲ ನಿರೂಪಿಸಿದರು. ರಾಹುಲ ಗಿಡ್ನಂದಿ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು.

“ಬದುಕಿರುವ ಅವಧಿಗಿಂತ ಸಮಾಜಕ್ಕಾಗಿ ಮಾಡಿದ ಕಾರ್ಯಗಳೇ ವ್ಯಕ್ತಿಯನ್ನು ಸದಾ ಸ್ಮರಣೀಯರನ್ನಾಗಿಸುತ್ತವೆ.”

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

ಡ್ರಗ್ಸ್‌ನಿಂದ ಯುವಕರ ಕನಸುಗಳು ನಾಶ: ಐಜಿಪಿ ಸಂದೀಪ್ ಪಾಟೀಲ್ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಕೇವಲ ಪೊಲೀಸ್ ಇಲಾಖೆಯಿಂದ ಸಾಧ್ಯವಿಲ್ಲ. ಸಾರ್ವಜನಿಕರು, ಪೋಷಕರು, ಶಿಕ್ಷಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಈ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ್ ಹೇಳಿದರು.

ಅಂತರರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಮಾದಕ ವ್ಯಸನ ಮುಕ್ತ ಗದಗ ವಾಕ್‌ಥಾನ್-2026’ ಕಾರ್ಯಕ್ರಮಕ್ಕೆ ನಗರದ ಗಾಂಧಿ ವೃತ್ತದಲ್ಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು.

ಯುವಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿ ವೈದ್ಯ, ಇಂಜಿನಿಯರ್, ಪೊಲೀಸ್ ಅಧಿಕಾರಿ, ಕ್ರೀಡಾಪಟು ಸೇರಿದಂತೆ ದೊಡ್ಡ ಕನಸುಗಳಿರುತ್ತವೆ. ಆದರೆ ಡ್ರಗ್ಸ್‌ನಂತಹ ದುಶ್ಚಟಗಳಿಗೆ ಒಮ್ಮೆ ಬಲಿಯಾದರೆ ಆ ಎಲ್ಲ ಕನಸುಗಳು ನುಚ್ಚುನೂರಾಗುತ್ತವೆ. ಹೀಗಾಗಿ ಯಾವುದೇ ಕಾರಣಕ್ಕೂ ಮಾದಕ ವಸ್ತುಗಳತ್ತ ಆಕರ್ಷಿತರಾಗಬಾರದು ಎಂದು ಕಿವಿಮಾತು ಹೇಳಿದರು.

ಜೂನ್ 26ರಂದು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಹಿನ್ನೆಲೆಯಲ್ಲಿ ವಾರಪೂರ್ತಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಡ್ರಗ್ಸ್ ಮಾರಾಟಗಾರರಷ್ಟೇ ಅಲ್ಲ, ಮಾದಕ ವಸ್ತುಗಳನ್ನು ಸೇವಿಸುವವರ ಮೇಲೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ, ಕುಟುಂಬ ಹಾಗೂ ಸಮಾಜದ ಮೇಲೂ ಗಂಭೀರ ಪರಿಣಾಮ ಬೀರುತ್ತದೆ. ಸ್ನೇಹಿತರ ಒತ್ತಡಕ್ಕೆ ಮಣಿದು ಒಮ್ಮೆ ಡ್ರಗ್ಸ್ ಸೇವಿಸಿದರೂ ಅದು ಜೀವಮಾನವಿಡೀ ವ್ಯಸನಿಯಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಕಾನೂನು ಕ್ರಮಗಳ ಜೊತೆಗೆ ಜನಜಾಗೃತಿಯೂ ಅಗತ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮ ಹಾಗೂ ಮನೆಗಳಲ್ಲಿ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಮೂಲಕ ಸಮಾಜ ಪರಿವರ್ತನೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಐಎಂಎ ಹಿರಿಯ ಅಧ್ಯಕ್ಷ ಡಾ. ಪ್ಯಾರೇಲಾಲ್ ಮುಲಾನಿ ಮಾತನಾಡಿ, ಮಾದಕ ವ್ಯಸನದಿಂದ ಹೊರಬರಲು ಕೇವಲ ಔಷಧಿಗಳಷ್ಟೇ ಸಾಕಾಗುವುದಿಲ್ಲ. ಯೋಗ, ಮನೋವೈದ್ಯಕೀಯ ಚಿಕಿತ್ಸೆ, ಸೈಕೋಥೆರಪಿ ಹಾಗೂ ಕೌನ್ಸೆಲಿಂಗ್ ಅಗತ್ಯವಾಗಿದೆ ಎಂದು ಹೇಳಿದರು.

ಗಾಂಧಿ ವೃತ್ತದಿಂದ ಆರಂಭವಾದ ವಾಕ್‌ಥಾನ್ ರೋಟರಿ ವೃತ್ತ, ಭೂಮರೆಡ್ಡಿ ವೃತ್ತ, ಹಳೆ ಡಿಸಿ ಕಚೇರಿ ಮಾರ್ಗವಾಗಿ ಬಸವೇಶ್ವರ ಮೂರ್ತಿ ಬಳಿಯ ಭೀಷ್ಮಕೆರೆಯವರೆಗೆ ಸಂಚರಿಸಿತು.

“ಮಾದಕ ವ್ಯಸನ ಜೀವನ ಮಸಣ”, “ನಮ್ಮೆಲ್ಲರ ನಡೆ ಮಾದಕ ವ್ಯಸನ ಮುಕ್ತತೆಯ ಕಡೆ”, “ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ” ಎಂಬ ಘೋಷಣೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಮೊಳಗಿದವು. ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಮಹಾಂತೇಶ್ ಸಜ್ಜನ, ಡಿಎಸ್‌ಪಿ ಮುರ್ತುಜಾ ಖಾದ್ರಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಮ್ಸ್ ನರ್ಸಿಂಗ್ ಕಾಲೇಜು, ಲಯನ್ಸ್ ಕ್ಲಬ್, ಎಎಸ್‌ಎಸ್ ಕಾಲೇಜು, ಸಂಕಲ್ಪ ನರ್ಸಿಂಗ್ ಕಾಲೇಜು, ಕೆಎಲ್‌ಇ ಪ್ಯಾರಾಮೆಡಿಕಲ್ ಕಾಲೇಜು, ಬಸವೇಶ್ವರ ಪ್ಯಾರಾಮೆಡಿಕಲ್ ಕಾಲೇಜು, ಸಿಎಸ್‌ಐ ನರ್ಸಿಂಗ್ ಕಾಲೇಜು, ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು, ಆರ್‌ಡಿಪಿಆರ್ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

“ಡ್ರಗ್ಸ್‌ನಂತಹ ದುಶ್ಚಟಗಳಿಗೆ ಬಲಿಯಾದರೆ ಯುವಕರ ಎಲ್ಲ ಕನಸುಗಳು ನುಚ್ಚುನೂರಾಗುತ್ತವೆ. ‘ಸೇ ನೋ ಟು ಡ್ರಗ್ಸ್’ ಎಂಬ ಸಂಕಲ್ಪವನ್ನು ಜೀವನದುದ್ದಕ್ಕೂ ಪಾಲಿಸಬೇಕು.”

– ಸಂದೀಪ್ ಪಾಟೀಲ್, ಐಜಿಪಿ, ಬೆಳಗಾವಿ ಉತ್ತರ ವಲಯ

ಡ್ರಗ್ಸ್ ಜಾಲದ ವಿರುದ್ಧ ಗದಗ ಪೊಲೀಸರ ಖಡಕ್ ಕ್ರಮ

ಕಳೆದ ಒಂದು ವರ್ಷದಲ್ಲಿ ಗದಗ ಜಿಲ್ಲಾ ಪೊಲೀಸರು ಮಾದಕ ವಸ್ತುಗಳ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಿ 27 ಪ್ರಕರಣಗಳನ್ನು ದಾಖಲಿಸಿ 52 ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಬೆಳಗಾವಿ, ವಿಜಯಪುರ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳ ಪೈಕಿ ಮೊದಲ ಬಾರಿಗೆ ಗದಗ ಜಿಲ್ಲೆಯಲ್ಲಿ ಪಿಐಟಿ-ಎನ್‌ಡಿಪಿಎಸ್ (PIT NDPS) ಕಾಯ್ದೆಯಡಿ ಕುಖ್ಯಾತ ಡ್ರಗ್ ಪೆಡ್ಲರ್ ವಿರುದ್ಧ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿದೆ ಎಂದು ಐಜಿಪಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದರು.

ಮಾದಕ ವಸ್ತುಗಳ ಜಾಲ ಬೇರುಸಹಿತ ಕಿತ್ತೊಗೆಯಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ಮುಂದುವರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಎಚ್.ಕೆ. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗದಗ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ. ಲಮಾಣಿ ಆಗ್ರಹಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ಈ ಹಿಂದೆ ನೀರಾವರಿ, ಕೃಷಿ, ಜವಳಿ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಲ್ಲಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಗದಗ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ಕಾರ್ಯಕ್ಷಮತೆ ಮತ್ತು ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಪಕ್ಷದ ನಿಷ್ಠಾವಂತ ಹಾಗೂ ಅನುಭವಿ ರಾಜಕಾರಣಿಯಾಗಿರುವ ಎಚ್.ಕೆ. ಪಾಟೀಲ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಳೆಗಾಗಿ ಸೋಮೇಶ್ವರನಿಗೆ ಅಹೋರಾತ್ರಿ ಜಲಾಭಿಷೇಕ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಟ್ಟಣದ ಐತಿಹಾಸಿಕ ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆ ಹಾಗೂ ರೈತರ ಒಳಿತಿಗಾಗಿ ಸೋಮವಾರ ಮುಂಜಾನೆಯಿಂದ ಅಹೋರಾತ್ರಿ ವಿಶೇಷ ಜಲಾಭಿಷೇಕ, ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಯಿತು.

ಬೆಳಗ್ಗೆ 6 ಗಂಟೆಯಿಂದ ಆರಂಭವಾದ ಜಲಾಭಿಷೇಕವು 24 ಗಂಟೆಗಳ ಕಾಲ ನಿರಂತರವಾಗಿ ನಡೆಯುತ್ತಿದ್ದು, ಶಿವಲಿಂಗದ ಮೇಲೆ ನಿರಂತರವಾಗಿ ಜಲಧಾರೆ ಹರಿಯುತ್ತಿದೆ. ಮಳೆಯ ಅಭಾವದಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಕ್ತರು ಮತ್ತು ರೈತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಶ್ರೀ ಸೋಮೇಶ್ವರ ಭಕ್ತರ ಸೇವಾ ಟ್ರಸ್ಟ್ ಕಮಿಟಿ, ದೇವಸ್ಥಾನ ಅರ್ಚಕರ ಸಮಿತಿ ಹಾಗೂ ಸೋಮೇಶ್ವರ ಜಾತ್ರಾ ಕಮಿಟಿ ಸಂಯುಕ್ತವಾಗಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿವೆ. ಅರ್ಚಕರಾದ ಚಿಕ್ಕರಸ ಪೂಜಾರ, ರಾಘವೇಂದ್ರ ಪೂಜಾರ ಹಾಗೂ ಕೃಷ್ಣಾಜಿ ಪೂಜಾರ ಅವರ ನೇತೃತ್ವದಲ್ಲಿ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿತು.

ಪೂಜೆಯ ಬಳಿಕ ಭಕ್ತರಿಗೆ ನೆನೆಗಡಲೆ ಹಾಗೂ ಬೆಲ್ಲದ ಪ್ರಸಾದ ವಿತರಿಸಲಾಯಿತು. ದೇವಸ್ಥಾನದ ಆವರಣದಲ್ಲಿ ನೂರಾರು ಭಕ್ತರು ಸೇರಿ “ಓಂ ನಮಃ ಶಿವಾಯ” ಮಂತ್ರ ಜಪಿಸಿ ಮಳೆಗಾಗಿ ಪ್ರಾರ್ಥಿಸಿದರು. ಸಂಜೆಯಿಂದ ವಿವಿಧ ಭಜನಾ ತಂಡಗಳು ಭಾಗವಹಿಸಿ ಭಕ್ತಿ ಸೇವೆ ಸಲ್ಲಿಸಿದವು.

ಮಂಗಳವಾರ ಬೆಳಗ್ಗೆ 8 ಗಂಟೆಯವರೆಗೆ ಜಲಾಭಿಷೇಕ ಮುಂದುವರಿಯಲಿದ್ದು, ನಂತರ ವೇದಘೋಷಗಳ ಮಧ್ಯೆ ಮಹಾ ರುದ್ರಾಭಿಷೇಕ ನಡೆಯಲಿದೆ. ಬಳಿಕ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಗುರುರಾಜ ಪಾಟೀಲಕುಲಕರ್ಣಿ, ಸುರೇಶ ರಾಚನಾಯ್ಕರ, ಚನ್ನಪ್ಪ ಜಗಲಿ, ಸೋಮಣ್ಣ ಬಂಡಿವಾಡ, ಜಿ.ಎಸ್. ಗುಡಗೇರಿ, ವಿರುಪಾಕ್ಷ ಆದಿ, ನಂದೀಶ ಬಂಡಿವಾಡ, ಮಯೂರಗೌಡ ಪಾಟೀಲ, ಜಯಪ್ರಕಾಶ ಹೊಟ್ಟಿ, ಚಂಬಣ್ಣ ಬಾಳಿಕಾಯಿ, ಕುಬೇರಪ್ಪ ಮಹಾಂತಶೆಟ್ಟರ, ಶಿವಯೋಗಿ ಅಂಕಲಕೋಟಿ ಸೇರಿದಂತೆ ಟ್ರಸ್ಟ್ ಕಮಿಟಿ, ಅರ್ಚಕರ ಸಮಿತಿ, ಜಾತ್ರಾ ಕಮಿಟಿ, ಪುರಾಣ ಕಮಿಟಿ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

ಭಗವಾನ್ ವಿರುದ್ಧ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹಿಂದೂ ಧರ್ಮ, ಪ್ರಭು ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಜೂನ್ 9ರಂದು ನಡೆದ ಕಾರ್ಯಕ್ರಮದಲ್ಲಿ ಪ್ರೊ. ಕೆ.ಎಸ್. ಭಗವಾನ್ ಅವರು ಹಿಂದೂ ಧರ್ಮ, ಶ್ರೀರಾಮ ಹಾಗೂ ಧಾರ್ಮಿಕ ಆಚರಣೆಗಳ ಕುರಿತು ನೀಡಿದ ಹೇಳಿಕೆಗಳು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ಸಮಾಜದಲ್ಲಿ ಉದ್ವಿಗ್ನತೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಅವರ ಭಾಷಣದ ವಿಡಿಯೋ, ಧ್ವನಿಮುದ್ರಣ ಸೇರಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ಅನ್ವಯವಾಗುವ ಕಾನೂನು ವಿಧಿಗಳಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಮಂಜುನಾಥ ಮಾಗಡಿ, ಹೊನ್ನಪ್ಪ ವಡ್ಡರ, ಶಿವರಾಜ ಪಟ್ಟಣಶೆಟ್ಟಿ, ಗಜೇಂದ್ರಗೌಡ ಪಾಟೀಲ, ನಾಗರಾಜ ಚಿಂಚಲಿ, ಎಚ್.ಎಸ್. ವಾಲಿ, ಡಿ.ಎಂ. ಕೋಟಗಿ, ಶಂಕರ ಬ್ಯಾಡಗಿ, ಮಲ್ಲಪ್ಪಗೌಡರ, ಮುತ್ತು ನೀರಲಗಿ, ಜಿ.ಎಸ್. ಮಲ್ಲಪ್ಪಗೌಡರ, ಫಕ್ಕೀರಪ್ಪ ಹಾವನೂರು, ಯಲ್ಲಪ್ಪಗೌಡ ಪಾಟೀಲ ಸೇರಿದಂತೆ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಹಾಗೂ ಧರ್ಮಪ್ರೇಮಿಗಳು ಉಪಸ್ಥಿತರಿದ್ದರು.

error: Content is protected !!