ಬೆಂಗಳೂರು: 2026ರ ಐಪಿಎಲ್ ಫೈನಲ್ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವುದು ಅನುಮಾನಾಸ್ಪದವಾಗಿದ್ದು, ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ತವರೂರಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ಫೈನಲ್ ಹಾಗೂ ಒಂದು ಪ್ಲೇಆಫ್ ಪಂದ್ಯ ನಡೆಯಬೇಕೆಂದು ನಿರೀಕ್ಷಿಸಲಾಗಿತ್ತು. ಆದರೆ ಉಚಿತ ಟಿಕೆಟ್ ವಿತರಣೆಗೆ ಸಂಬಂಧಿಸಿದ ವಿವಾದ ಇದೀಗ ಈ ನಿರ್ಧಾರಕ್ಕೆ ಅಡ್ಡಿಯಾಗುತ್ತಿದೆ ಎನ್ನಲಾಗಿದೆ.
ಐಪಿಎಲ್ ಸಂಪ್ರದಾಯದಂತೆ ಹಾಲಿ ಚಾಂಪಿಯನ್ ತಂಡದ ತವರು ಕ್ರೀಡಾಂಗಣದಲ್ಲೇ ಫೈನಲ್ ಪಂದ್ಯ ಆಯೋಜಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲೇ ಫೈನಲ್ ನಡೆಯಲಿದೆ ಎಂಬ ನಿರೀಕ್ಷೆ ಇತ್ತು.
ಆದರೆ ರಾಜ್ಯದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಂಸದರಾಗಿ ಒಟ್ಟು ಸುಮಾರು 299 ಜನಪ್ರತಿನಿಧಿಗಳಿಗೆ ತಲಾ ಎರಡು ಉಚಿತ ಟಿಕೆಟ್ಗಳನ್ನು ನೀಡಲಾಗುತ್ತಿದೆ. ಇದೀಗ ಈ ಸಂಖ್ಯೆಯನ್ನು ತಲಾ ನಾಲ್ಕುರಿಂದ ಐದು ಟಿಕೆಟ್ಗಳಿಗೆ ಹೆಚ್ಚಿಸುವಂತೆ ಒತ್ತಡ ಕೇಳಿಬರುತ್ತಿದೆ ಎಂದು ತಿಳಿದುಬಂದಿದೆ.
ಈ ಬೆಳವಣಿಗೆಯಿಂದಾಗಿ ಹೆಚ್ಚುವರಿ ಟಿಕೆಟ್ ವ್ಯವಸ್ಥೆ ಮಾಡುವುದು ಕ್ರಿಕೆಟ್ ಸಂಸ್ಥೆಗಳಿಗೆ ಸವಾಲಾಗಿದ್ದು, ಈ ‘ಎಂಎಲ್ಎ ಟಿಕೆಟ್ ಕಿರಿಕಿರಿ’ಯಿಂದ ದೂರ ಉಳಿಯಲು ಬಿಸಿಸಿಐ ಫೈನಲ್ ಪಂದ್ಯವನ್ನು ಬೇರೆ ಕ್ರೀಡಾಂಗಣಕ್ಕೆ ಸ್ಥಳಾಂತರಿಸುವ ಆಯ್ಕೆಯನ್ನು ಪರಿಗಣಿಸುತ್ತಿದೆ ಎನ್ನಲಾಗಿದೆ.
ಕಳೆದ ಸೀಸನ್ನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವಿಗೀಡಾದ ಬಳಿಕ ಪ್ರಮುಖ ಪಂದ್ಯಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿತ್ತು. ಇತ್ತೀಚೆಗೆ ಮತ್ತೆ ಪಂದ್ಯ ಆಯೋಜನೆಗೆ ಅನುಮತಿ ದೊರೆತಿದ್ದರೂ, ಈಗ ಉಚಿತ ಟಿಕೆಟ್ ವಿವಾದ ಹೊಸ ತಲೆನೋವಾಗಿ ಪರಿಣಮಿಸಿದೆ.

