ಮಡಿಕೇರಿ: ದುಬಾರೆ ಆನೆ ಶಿಬಿರದಲ್ಲಿ ನಡೆದ ಪ್ರವಾಸಿ ಮಹಿಳೆಯ ದಾರುಣ ಸಾವಿನ ಬಳಿಕ ಕರ್ನಾಟಕ ಅರಣ್ಯ ಇಲಾಖೆ ದೊಡ್ಡ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಯಾವುದೇ ಸಾಕಾನೆ ಶಿಬಿರದಲ್ಲಿ ಪ್ರವಾಸಿಗರು ಆನೆಗಳ ಹತ್ತಿರ ಹೋಗಲು ಅವಕಾಶ ಇರುವುದಿಲ್ಲ. ಕನಿಷ್ಠ 100 ಅಡಿ ದೂರದಲ್ಲೇ ನಿಂತು ಆನೆಗಳ ಸ್ನಾನ ಹಾಗೂ ಚಟುವಟಿಕೆ ವೀಕ್ಷಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ.
ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯದ ಎಲ್ಲ ಸಾಕಾನೆ ಶಿಬಿರಗಳಿಗೆ ಹೊಸ ಪ್ರಮಾಣಿತ ಕಾರ್ಯಾಚರಣೆ ವಿಧಾನ (SOP) ಜಾರಿಗೆ ತರಲು ಆದೇಶಿಸಿದ್ದಾರೆ.
ದುಬಾರೆ ಶಿಬಿರದಲ್ಲಿ ಎರಡು ಆನೆಗಳ ಕಾದಾಟದ ವೇಳೆ ಪ್ರವಾಸಿಗ ಮಹಿಳೆ ಸಿಲುಕಿ ಸಾವನ್ನಪ್ಪಿದ ಘಟನೆ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆ ಆಗಿದೆ. ಇದೇ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ.
ಹೊಸ ಮಾರ್ಗಸೂಚಿ ಪ್ರಕಾರ, ಪ್ರವಾಸಿಗರು ಆನೆಗಳೊಂದಿಗೆ ಫೋಟೋ ಅಥವಾ ಸೆಲ್ಫಿ ತೆಗೆದುಕೊಳ್ಳುವುದು ಸಂಪೂರ್ಣ ನಿಷೇಧ. ಆನೆ ಮೈತೊಳೆಯುವ ಸಂದರ್ಭ ಹತ್ತಿರ ಹೋಗಲು ಅವಕಾಶ ಇರುವುದಿಲ್ಲ. ಪ್ರವಾಸಿಗರ ಕೈಯಿಂದ ಬಾಳೆಹಣ್ಣು, ಬೆಲ್ಲ, ಕಬ್ಬು ಸೇರಿದಂತೆ ಯಾವುದೇ ಆಹಾರವನ್ನು ಆನೆಗಳಿಗೆ ನೀಡುವುದನ್ನೂ ನಿಷೇಧಿಸಲಾಗಿದೆ.
ಈಗಾಗಲೇ ಚಾರಣಪಥಗಳ ಸುರಕ್ಷತೆಗಾಗಿ ಎಸ್ಒಪಿ ರೂಪಿಸುವ ಕಾರ್ಯ ಆರಂಭವಾಗಿದ್ದು, ಅದೇ ಮಾದರಿಯಲ್ಲಿ ಸಾಕಾನೆ ಶಿಬಿರಗಳಲ್ಲೂ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲಾಗುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಾಳೆಯಿಂದಲೇ ಎಲ್ಲಾ ಶಿಬಿರಗಳಲ್ಲಿ ಹೊಸ ನಿಯಮಗಳನ್ನು ಅನುಷ್ಠಾನಗೊಳಿಸಲು ಸಿದ್ಧತೆ ಆರಂಭಿಸಿದ್ದಾರೆ.

