Home Blog

ಜಿಎಸ್‌ಪಿಗೆ ಸಚಿವ ಸ್ಥಾನ ಕೊಡಿ: ಅಭಿನವ ಚನ್ನಬಸವ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ಮತಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ಪಕ್ಷನಿಷ್ಠೆ ಹಾಗೂ ಸೇವಾ ಹಿರಿತನಕ್ಕೆ ಗೌರವ ಸಲ್ಲಿಸಬೇಕು ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ಅಧಿಕಾರಕ್ಕಿಂತ ಪಕ್ಷವೇ ಮುಖ್ಯ ಎಂಬ ಸಿದ್ಧಾಂತದೊಂದಿಗೆ ರಾಜಕೀಯ ಜೀವನ ಸಾಗಿಸಿರುವ ಜಿ.ಎಸ್.ಪಿ. ಅವರು ಪಕ್ಷದ ಏಳು-ಬೀಳುಗಳಲ್ಲಿ ಸಮಾನವಾಗಿ ಭಾಗಿಯಾಗಿದ್ದು, ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ.

ರೋಣ ಮತಕ್ಷೇತ್ರದ ಅಭಿವೃದ್ಧಿಗೆ ಜಿ.ಎಸ್. ಪಾಟೀಲ ಅವರು ಮಹತ್ವದ ಕೊಡುಗೆ ನೀಡಿದ್ದು, ಜನರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿದ್ದಾರೆ. ಅವರ ಅನುಭವ, ಜನಪರ ಕಾಳಜಿ ಹಾಗೂ ಪಕ್ಷದ ಮೇಲಿನ ಬದ್ಧತೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಜಿ.ಎಸ್.ಪಿ. ಅವರ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆ ಈಡೇರಿಸಬೇಕು ಎಂದು ಅಭಿನವ ಚನ್ನಬಸವ ಸ್ವಾಮೀಜಿ ಒತ್ತಾಯಿಸಿದ್ದಾರೆ.

ನಶಾ ಮುಕ್ತ ಭಾರತ ಅಭಿಯಾನಕ್ಕೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಹಾಗೂ ಐಕ್ಯೂಎಸಿ ಆಶ್ರಯದಲ್ಲಿ “ನಶಾ ಮುಕ್ತ ಭಾರತ ಅಭಿಯಾನ”ದ ಅಂಗವಾಗಿ ಹಮ್ಮಿಕೊಂಡಿರುವ ಆರು ದಿನಗಳ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ವಿ.ಟಿ. ನಾಯ್ಕ ಅವರು ಸಸಿಗೆ ನೀರುಣಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯುವ ಸಮುದಾಯವನ್ನು ಮಾದಕ ವ್ಯಸನದಿಂದ ದೂರವಿರಿಸಿ ಆರೋಗ್ಯಕರ ಜೀವನಶೈಲಿಯತ್ತ ಕೊಂಡೊಯ್ಯುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅಭಿಯಾನದ ಅಂಗವಾಗಿ ವನಮಹೋತ್ಸವ, ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ, ಚಿತ್ರಕಲಾ ಸ್ಪರ್ಧೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಕುಟುಂಬ ಜೀವನದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಯುವಜನರಲ್ಲಿ ಜಾಗೃತಿ ಮೂಡಿಸಿ ವ್ಯಸನಮುಕ್ತ ಸಮಾಜ ನಿರ್ಮಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಬಿ.ಪಿ. ಜೈನ್ ಮಾತನಾಡಿ, ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದು ಹೇಳಿದರು. ಯುವಕರು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ. ಸುನಿತಾ ನಾಯಕ, ಪ್ರೊ. ಸಲ್ಮಾ ಬೆಳಗಾಂ, ಪ್ರಶಾಂತ್ ಹೊಂಬಾಳಿ, ಪ್ರೊ. ಈಶ್ವರ ಯಾವಗಲ್, ಪ್ರೊ. ಮೋಹನ್ ಡಿ., ಪ್ರೊ. ಸುನಿತಾ ತಿರ್ಲಾಪುರ, ಸವಿತಾ ಇಬ್ಬನಿ, ಭಾಗ್ಯಶ್ರೀ ಕುರಿ, ಯಶವಂತ್ ಯಾವಗಲ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಎನ್‌ಎಸ್‌ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಮಾದಕ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ ಹಾಗೂ ಕುಟುಂಬದ ಭವಿಷ್ಯವನ್ನು ಹಾಳು ಮಾಡುವ ದೊಡ್ಡ ಸಾಮಾಜಿಕ ಪಿಡುಗಾಗಿದೆ. ಯುವಜನತೆ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ನಶಾ ಮುಕ್ತ ಭಾರತ ನಿರ್ಮಾಣ ಸಾಧ್ಯ.”

– ಡಾ. ವಿ.ಟಿ. ನಾಯ್ಕ, ಪ್ರಾಚಾರ್ಯರು, ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್

‘ಮನೆಗೊಂದು ಗಿಡ, ಊರಿಗೊಂದು ವನ’ ಅಭಿಯಾನಕ್ಕೆ ಕರೆ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, “ಮನೆಗೊಂದು ಗಿಡ-ಊರಿಗೊಂದು ವನ” ಎಂಬ ಸಂಕಲ್ಪದೊಂದಿಗೆ ಪ್ರತಿಯೊಬ್ಬರೂ ಪರಿಸರ ಉಳಿವಿಗೆ ಕೈಜೋಡಿಸಬೇಕು ಎಂದು ಅಮ್ಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥೆ ಹಾಗೂ ಸಮಾಜಸೇವಕಿ ಡಾ. ಸಾಹಿರಾ ಬಾನು ಕರೆ ನೀಡಿದರು.

ಪಟ್ಟಣದ ಸೋನಿಯಾ ಗಾಂಧಿನಗರದಲ್ಲಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನಶೈಲಿಯಿಂದ ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಾಗತಿಕ ತಾಪಮಾನ ಏರಿಕೆ ಮನುಕುಲಕ್ಕೆ ಗಂಭೀರ ಸವಾಲಾಗಿ ಪರಿಣಮಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮರಗಳ ಸಂರಕ್ಷಣೆ ಮತ್ತು ವೃಕ್ಷಾರೋಪಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಹಾಗೂ ಅಮ್ಮ ಸಂಸ್ಥೆಯ ನಿರ್ದೇಶಕಿ ರೇಷ್ಮಾ ಸಿಕಂದರ್ ಮಾತನಾಡಿ, ಪರಿಸರವನ್ನು ನಿರ್ಲಕ್ಷಿಸಿದರೆ ಭವಿಷ್ಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪಾಲಕರು ಮಕ್ಕಳನ್ನು ಬೆಳೆಸುವಷ್ಟೇ ಕಾಳಜಿಯಿಂದ ಗಿಡಗಳನ್ನು ಬೆಳೆಸಿ ಸಂರಕ್ಷಿಸಬೇಕು ಎಂದು ತಿಳಿಸಿದರು.

ವಾಯು ಮಾಲಿನ್ಯ, ಜಲ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪರಿಸರ ಸಮತೋಲನ ಕಾಪಾಡುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಯಶೋಧ ಮಂಜುನಾಥ್, ಅಮ್ಮ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಶಿಯಾ ಬೇಗಂ, ನಿರ್ದೇಶಕಿ ನಜ್ಮಾ, ರೋಹಿಣಿ ಗುರುರಾಜ್, ಆಶಾ ಕಾರ್ಯಕರ್ತೆ ಮುದ್ದಕ್ಕ ಸೇರಿದಂತೆ ಅಮ್ಮ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

“ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ‘ಮನೆಗೊಂದು ಗಿಡ, ಊರಿಗೊಂದು ವನ’ ಎಂಬುದು ನಮ್ಮ ಮೂಲಮಂತ್ರವಾಗಬೇಕು.”

– ಡಾ. ಸಾಹಿರಾ ಬಾನು, ಅಮ್ಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥೆ

ಮೋದಿ ಶಾಂತ ನಾಯಕ, ಆದರೆ ನಿರ್ಧಾರಗಳಲ್ಲಿ ದೃಢ: ಟ್ರಂಪ್ ಮೆಚ್ಚುಗೆ!

0

ಪ್ಯಾರಿಸ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಂತ, ಸಂಯಮಶೀಲ ಹಾಗೂ ನಿರ್ಧಾರ ತೆಗೆದುಕೊಳ್ಳುವಲ್ಲಿ ಅತ್ಯಂತ ದೃಢ ನಾಯಕ ಎಂದು ಬಣ್ಣಿಸಿದ್ದಾರೆ.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದರು.

“ನನ್ನ ಸ್ವಭಾವ ಎಲ್ಲರಿಗೂ ಗೊತ್ತಿದೆ. ಆದರೆ ಮೋದಿ ಅವರು ಹೊರಗಿನಿಂದ ನೋಡಲು ತುಂಬಾ ಶಾಂತವಾಗಿ ಹಾಗೂ ಸಮಚಿತ್ತದಿಂದ ಕಾಣಿಸುತ್ತಾರೆ. ಆದರೆ ನಿರ್ಧಾರ ತೆಗೆದುಕೊಳ್ಳುವಾಗ ಅತ್ಯಂತ ದೃಢವಾಗಿ ನಡೆದುಕೊಳ್ಳುತ್ತಾರೆ” ಎಂದು ಟ್ರಂಪ್ ಹೇಳಿದ್ದಾರೆ.

ಇದೇ ವೇಳೆ ಭಾರತ-ಅಮೆರಿಕ ಸಂಬಂಧಗಳ ಕುರಿತು ಮಾತನಾಡಿದ ಅವರು, ತಾವು ಅಧ್ಯಕ್ಷರಾಗಿರುವವರೆಗೆ ಭಾರತಕ್ಕೆ ಶ್ವೇತಭವನದಲ್ಲಿ ಉತ್ತಮ ಸ್ನೇಹಿತನಿರುವುದಾಗಿ ಹೇಳಿದರು.

“ಇಲ್ಲಿರುವ ಪ್ರತಿಯೊಬ್ಬರೂ ಭಾರತವನ್ನು ಪ್ರೀತಿಸುತ್ತಾರೆ. ಮೋದಿ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠವಾಗಿದೆ. ವೈಯಕ್ತಿಕವಾಗಿಯೂ ಹಾಗೂ ಎರಡು ದೇಶಗಳ ನಡುವೆಯೂ ಅತ್ಯಂತ ಆತ್ಮೀಯ ಬಾಂಧವ್ಯವಿದೆ” ಎಂದು ಟ್ರಂಪ್ ತಿಳಿಸಿದರು.

ಭಾರತದ ಮೇಲೆ ಯಾವುದೇ ದಾಳಿ ನಡೆದರೂ ಅಮೆರಿಕ ಬೆಂಬಲವಾಗಿ ನಿಲ್ಲಲಿದೆ ಹಾಗೂ ಅಗತ್ಯ ನೆರವು ನೀಡಲಿದೆ ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದರು.

ಬಿಡದಿ ಟೌನ್‌ಶಿಪ್ ವಿರುದ್ಧ ಜೂ. 21ಕ್ಕೆ ಶಕ್ತಿ ಪ್ರದರ್ಶನ

0

ವಿಜಯಸಾಕ್ಷಿ ಸುದ್ದಿ, ಗದಗ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೂನ್ 21ರಂದು ಅಂಚಿಪುರ ಗ್ರಾಮದಿಂದ ಹೊಸೂರು ಗ್ರಾಮದವರೆಗೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ರೈತ ಹೋರಾಟದಲ್ಲಿ ಜಿಲ್ಲೆಯ ರೈತ ಮುಖಂಡರು ಹಾಗೂ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜೆಡಿಎಸ್ ಮುಖಂಡ ವೆಂಕನಗೌಡ ಗೋವಿಂದಗೌಡ್ರು ಕರೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅವಧಿಯಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೂಪುಗೊಂಡಿತ್ತು. ಆದರೆ ಈಗಿನ ಸರ್ಕಾರ ಅದನ್ನು ಸಂಪೂರ್ಣವಾಗಿ ರಿಯಲ್ ಎಸ್ಟೇಟ್ ಯೋಜನೆಯಾಗಿ ಪರಿವರ್ತಿಸಲು ಮುಂದಾಗಿದೆ ಎಂದು ಆರೋಪಿಸಿದರು.

ಈಗಿನ ಯೋಜನೆಗೂ ಕುಮಾರಸ್ವಾಮಿ ಅವರ ಯೋಜನೆಗೂ ಯಾವುದೇ ಸಂಬಂಧವಿಲ್ಲ. ಆದರೂ ಯೋಜನೆಯನ್ನು ಕುಮಾರಸ್ವಾಮಿ ಅವರೊಂದಿಗೆ ತಳುಕು ಹಾಕಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ವ್ಯಾಪ್ತಿಗೆ ಒಳಪಡುವ 514 ರೈತರ ಪೈಕಿ 480 ರೈತರು ಭೂಮಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಸರ್ಕಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಬಾಕಿ ಇರುವಾಗ ರೈತರ ಭೂಮಿ ಕಸಿದುಕೊಳ್ಳುವ ಪ್ರಯತ್ನ ನಡೆಯಬಾರದು. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಬೀಜ ಮತ್ತು ಗೊಬ್ಬರ ಸಮರ್ಪಕವಾಗಿ ಪೂರೈಕೆಯಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ ಕುರಿತ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಜನರು ಗ್ಯಾರಂಟಿ ಯೋಜನೆಗಳನ್ನು ನಂಬಿಯೇ ಮತ ನೀಡಿದ್ದಾರೆ. ಹೀಗಾಗಿ ಯಾವುದೇ ಬದಲಾವಣೆ ಮಾಡದೆ ಯೋಜನೆಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಜೂನ್ 21ರಂದು ನಡೆಯಲಿರುವ ರೈತ ಹೋರಾಟದಲ್ಲಿ ಗದಗ ಜಿಲ್ಲೆಯಿಂದ ಸುಮಾರು 200ಕ್ಕೂ ಹೆಚ್ಚು ರೈತರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಸವರಾಜ ಅಪ್ಪಣ್ಣವರ, ಜಿ.ಕೆ. ಕೊಳ್ಳಿಮಠ, ಪ್ರಫುಲ್ ಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಬಿಡದಿ ಟೌನ್‌ಶಿಪ್ ಯೋಜನೆಯಿಂದ ರೈತರ ಭೂಮಿಗೆ ಅನ್ಯಾಯವಾಗಬಾರದು. ರೈತರ ಹಕ್ಕುಗಳ ರಕ್ಷಣೆಗೆ ಜೂನ್ 21ರ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.”

ವೆಂಕನಗೌಡ ಗೋವಿಂದಗೌಡ್ರು, ಜೆಡಿಎಸ್ ಮುಖಂಡ

ಕುಮಾರಸ್ವಾಮಿ ವಿರುದ್ಧದ ಹೇಳಿಕೆಗಳು ಖಂಡನೀಯ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದೇ ವ್ಯಕ್ತಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೆ ಕೆಲವು ಸ್ಥಳೀಯ ನಾಯಕರು ಅವರ ಹೆಸರನ್ನು ಬಳಸಿಕೊಂಡು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದು, ಇಂತಹ ಹೇಳಿಕೆಗಳು ಖಂಡನೀಯ ಎಂದು ವೆಂಕನಗೌಡ ಗೋವಿಂದಗೌಡ್ರು ಹೇಳಿದರು.

ಶಿಕ್ಷಕರನ್ನು ಅನ್ಯ ಕಾರ್ಯಗಳಿಂದ ಮುಕ್ತಿಗೊಳಿಸಿ: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಶಿಕ್ಷಕರನ್ನು ಬೋಧನೆಗೆ ಸಂಬಂಧಿಸದ ವಿವಿಧ ಸರ್ಕಾರಿ ಕಾರ್ಯಗಳಿಂದ ಮುಕ್ತಿಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸರ್ಕಾರವನ್ನು ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪದೋನ್ನತಿ ಪಡೆದ ಮುಖ್ಯೋಪಾಧ್ಯಾಯರು ಹಾಗೂ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕಕ್ಕೆ ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ವರ್ಷಗಳಲ್ಲಿ ಶಿಕ್ಷಕರು ಬಿಸಿಯೂಟ ಯೋಜನೆಗೆ ಅಗತ್ಯವಿರುವ ಸಾಮಗ್ರಿಗಳ ಖರೀದಿ, ಹಾಲು ಹಾಗೂ ಮೊಟ್ಟೆ ವಿತರಣೆ, ಬಿಎಲ್‌ಒ ಕಾರ್ಯ, ಜಾನುವಾರು ಗಣತಿ ಸೇರಿದಂತೆ ವಿವಿಧ ಇಲಾಖೆಗಳ ಹೆಚ್ಚುವರಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ಸಮಯದ ಕೊರತೆ ಉಂಟಾಗುತ್ತಿದೆ. ಇದರಿಂದ ಶಿಕ್ಷಣದ ಗುಣಮಟ್ಟ ಕಾಪಾಡಿಕೊಳ್ಳುವಲ್ಲಿ ಅಡಚಣೆಗಳು ಎದುರಾಗುತ್ತಿದ್ದು, ಶಿಕ್ಷಕರನ್ನು ಅನ್ಯ ಕಾರ್ಯಗಳಿಂದ ಮುಕ್ತಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಶಿಕ್ಷಕರು ಸಮಾಜ ಮತ್ತು ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿಯಾಗಿದ್ದು, ಅವರ ಸಂಪೂರ್ಣ ಗಮನ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವತ್ತ ಇರಬೇಕು. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಶಿಕ್ಷಕರಿಗೆ ಅನುಕೂಲಕರ ವಾತಾವರಣ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಂಕನೂರ ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಶೈಕ್ಷಣಿಕ ಪ್ರಗತಿಗೆ ಮುಖ್ಯೋಪಾಧ್ಯಾಯರು ತಮ್ಮ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಂಡದ ಮನೋಭಾವದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸಹಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎಫ್. ಪೂಜಾರ ಮಾತನಾಡಿ, ಶಿಕ್ಷಕರು ಹಾಗೂ ಪದವೀಧರರ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವ ಮೂಲಕ ಪರಿಹಾರಕ್ಕೆ ಶ್ರಮಿಸುತ್ತಿರುವ ಎಸ್.ವಿ. ಸಂಕನೂರ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಸ್. ಮಸನಾಯಕ ಮಾತನಾಡಿ, ಸಂಘಟನೆಯ ಪದಾಧಿಕಾರಿಗಳು ಹಾಗೂ ಪದೋನ್ನತಿ ಪಡೆದ ಮುಖ್ಯೋಪಾಧ್ಯಾಯರು ಶಿಸ್ತು, ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪದವಿ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕಕ್ಕೆ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಎಸ್.ಎಸ್. ಸೋಮಣ್ಣವರ, ಕಾರ್ಯಾಧ್ಯಕ್ಷ ಮಂಜುನಾಥ ಸಿ. ಕೊಕ್ಕರಗುಂದಿ, ಉಪಾಧ್ಯಕ್ಷೆ ಅಮನ್ ಎಸ್. ಗುಳೇದಗುಡ್ಡ, ಖಜಾಂಚಿ ಮಲ್ಲಿಕಾರ್ಜುನ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಫಕ್ಕಿರೇಶ ಬೆಳವಗಿ ಸೇರಿದಂತೆ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಅದೇ ರೀತಿ ಮುಖ್ಯೋಪಾಧ್ಯಾಯರಾಗಿ ಪದೋನ್ನತಿ ಹೊಂದಿದ ಕೆ.ಎ. ಉಪ್ಪಿನ, ಗಿರೀಶ ದಾಸರ, ಜ್ಯೋತಿ ಶೆಟ್ಟರ, ಸಂಜೀವಿನಿ ಕಲಗುಡಿ, ಎಸ್.ಜಿ. ಕೋಲಕಾರ, ಎಸ್.ಎ. ಸಲೋಡ, ಶಾರದಾ ಮುಳಗುಂದಮಠ, ಸಂಜೋತಾ ಪಾಟೀಲ ಹಾಗೂ ವಿಜಯಲಕ್ಷ್ಮಿ ಭಜಂತ್ರಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಎಸ್.ಬಿ. ಹಾವೇರಿ, ಬಿ.ಎಸ್. ಗಿರಿತಮ್ಮಣ್ಣವರ, ಈರಣ್ಣ ಹಾದಿಮನಿ, ಉಪನ್ಯಾಸಕರಾದ ಎಸ್.ಐ. ಮೇಟಿ, ಶ್ರೀಶೈಲ ಬೀರಕಬ್ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಾ. ಅಶೋಕ ಅಂಗಡಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯ ಎ.ಎಸ್. ಪಾಟೀಲ ವಂದಿಸಿದರು.

“ಶಿಕ್ಷಕರ ಸಮಯ ಮತ್ತು ಶಕ್ತಿಯು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದಕ್ಕೆ ಮೀಸಲಾಗಬೇಕು. ಬೋಧನಾ ಕಾರ್ಯಕ್ಕೆ ಅಡ್ಡಿಯಾಗುವ ಅನ್ಯ ಇಲಾಖೆಗಳ ಹೊಣೆಗಾರಿಕೆಗಳಿಂದ ಶಿಕ್ಷಕರನ್ನು ಮುಕ್ತಗೊಳಿಸಿದಾಗ ಮಾತ್ರ ಶಿಕ್ಷಣದ ಗುಣಮಟ್ಟ ಮತ್ತಷ್ಟು ಉತ್ತಮಗೊಳ್ಳಲಿದೆ.”

— ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

ಜೀವಂತ ವೃದ್ಧೆಗೆ ಮರಣ ಪ್ರಮಾಣ ಪತ್ರ; ಅಧಿಕಾರಿಗಳ ಎಡವಟ್ಟಿಗೆ ಬದುಕೇ ಸಂಕಷ್ಟ!

ಹಾವೇರಿ: ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಜೀವಂತವಾಗಿರುವ ವೃದ್ಧೆಯೊಬ್ಬರು ಸರ್ಕಾರಿ ದಾಖಲೆಗಳಲ್ಲಿ ಮೃತಪಟ್ಟವರಾಗಿ ದಾಖಲಾಗಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಅತ್ತಿಗೇರಿ ಗ್ರಾಮದ ಶಿವಗಂಗವ್ವ ತಳಳ್ಳಿ ಅವರ ತಾಯಿ ಶಂಕ್ರವ್ವ ಮೀಳ್ಳಿ ಇತ್ತೀಚೆಗೆ ನಿಧನರಾಗಿದ್ದು, ಮರಣ ಪ್ರಮಾಣ ಪತ್ರಕ್ಕಾಗಿ ಶಿವಗಂಗವ್ವ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಮೃತ ತಾಯಿಯ ಹೆಸರಿನಲ್ಲಿ ಪ್ರಮಾಣ ಪತ್ರ ನೀಡುವ ಬದಲು, ಜೀವಂತವಾಗಿರುವ ಶಿವಗಂಗವ್ವ ಅವರ ಹೆಸರಿನಲ್ಲೇ ಮರಣ ಪ್ರಮಾಣ ಪತ್ರ ನೀಡಿರುವುದು ಬೆಳಕಿಗೆ ಬಂದಿದೆ.

ಈ ಎಡವಟ್ಟಿನ ಬಗ್ಗೆ ಶಿವಗಂಗವ್ವ ಅವರಿಗೆ ಆರಂಭದಲ್ಲಿ ಮಾಹಿತಿ ಇರಲಿಲ್ಲ. ಇತ್ತೀಚೆಗೆ ಬ್ಯಾಂಕ್‌ಗೆ ಹಣ ತೆಗೆಯಲು ಹೋದ ವೇಳೆ ತಮ್ಮ ಹೆಸರಿನಲ್ಲೇ ಮರಣ ಪ್ರಮಾಣ ಪತ್ರ ದಾಖಲಾಗಿರುವ ವಿಷಯ ತಿಳಿದು ಅವರು ಬೆಚ್ಚಿಬಿದ್ದಿದ್ದಾರೆ.

ಅಧಿಕಾರಿಗಳ ತಪ್ಪಿನಿಂದಾಗಿ ಶಿವಗಂಗವ್ವ ಅವರ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳಲ್ಲಿ ಸಮಸ್ಯೆ ಉಂಟಾಗಿದ್ದು, ಅವರಿಗೆ ದೊರೆಯುತ್ತಿದ್ದ ವೃದ್ಧಾಪ್ಯ ವೇತನ ಹಾಗೂ ಪತಿಯ ಪಿಂಚಣಿ ಹಣವೂ ಸ್ಥಗಿತಗೊಂಡಿದೆ. ಇದರಿಂದ ಜೀವನ ನಿರ್ವಹಣೆಯೇ ಕಷ್ಟಕರವಾಗಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿದ ಬಳಿಕ ಶಿವಗಂಗವ್ವ ಹಾಗೂ ಕುಟುಂಬದವರು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಆರಂಭದಲ್ಲಿ ಸೂಕ್ತ ಸ್ಪಂದನೆ ದೊರಕಿಲ್ಲ ಎನ್ನಲಾಗಿದೆ. ಬಳಿಕ ಅಧಿಕಾರಿಗಳು ಒಂದೇ ವಾರದಲ್ಲಿ ಎರಡು ಮರಣ ಪ್ರಮಾಣ ಪತ್ರಗಳನ್ನು ಸೃಷ್ಟಿಸಿದ್ದು, ಮೊದಲು ಮಗಳ ಹೆಸರಿನಲ್ಲಿ ಹಾಗೂ ನಂತರ ತಾಯಿಯ ಹೆಸರಿನಲ್ಲಿ ಪ್ರಮಾಣ ಪತ್ರ ನೀಡಿರುವುದು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ.

ಅಧಿಕಾರಿಗಳ ಈ ಎಡವಟ್ಟಿನ ವಿರುದ್ಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವೃದ್ಧೆಗೆ ನ್ಯಾಯ ಒದಗಿಸುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬೆಂಗಳೂರಿನ ಐಐಎಂ ಕ್ಯಾಂಪಸ್​ನಲ್ಲಿ ಮೊದಲ ಬಾರಿಗೆ ಬಿಎಸ್‌ಸಿ ಕೋರ್ಸ್ ಆರಂಭ!

ಬೆಂಗಳೂರು: ದೇಶದ ಪ್ರತಿಷ್ಠಿತ ನಿರ್ವಹಣಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಎಂ ಬೆಂಗಳೂರು ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಪದವಿ ಶಿಕ್ಷಣ ಕ್ಷೇತ್ರಕ್ಕೆ ಕಾಲಿಡುತ್ತಿದೆ.

ಟಾಟಾ ಟ್ರಸ್ಟ್ಸ್‌ನ ಆರ್ಥಿಕ ಬೆಂಬಲದೊಂದಿಗೆ ಹೊಸ ಅಂಡರ್‌ಗ್ರಾಜುಯೇಟ್ ಶಾಲೆಯನ್ನು ಆರಂಭಿಸುತ್ತಿದ್ದು, 2026ರ ಆಗಸ್ಟ್‌ನಿಂದ ಮೊದಲ ಬ್ಯಾಚ್‌ಗೆ ಪ್ರವೇಶ ನೀಡಲಾಗುತ್ತದೆ.

ಇದುವರೆಗೆ ಎಂಬಿಎ, ಪಿಎಚ್‌ಡಿ ಹಾಗೂ ಉನ್ನತ ನಿರ್ವಹಣಾ ಶಿಕ್ಷಣ ಕೋರ್ಸ್‌ಗಳಿಗೆ ಸೀಮಿತವಾಗಿದ್ದ ಐಐಎಂ ಬೆಂಗಳೂರು, ಇದೀಗ 12ನೇ ತರಗತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗಾಗಿ ನಾಲ್ಕು ವರ್ಷದ ಪೂರ್ಣಾವಧಿ ವಸತಿ ಸಹಿತ ಪದವಿ ಕೋರ್ಸ್‌ಗಳನ್ನು ಪರಿಚಯಿಸಿದೆ.

ಸದ್ಯಕ್ಕೆ ಬಿಎಸ್‌ಸಿ ಎಕನಾಮಿಕ್ಸ್ (ಆನರ್ಸ್) ಹಾಗೂ ಬಿಎಸ್‌ಸಿ ಡಾಟಾ ಸೈನ್ಸ್ (ಆನರ್ಸ್) ಎಂಬ ಎರಡು ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಎಕನಾಮಿಕ್ಸ್ ಕೋರ್ಸ್‌ನಲ್ಲಿ ಡಾಟಾ ಸೈನ್ಸ್ ಮೈನರ್ ವಿಷಯವಾಗಿದ್ದರೆ, ಡಾಟಾ ಸೈನ್ಸ್ ಕೋರ್ಸ್‌ನಲ್ಲಿ ಎಕನಾಮಿಕ್ಸ್ ಮೈನರ್ ವಿಷಯವಾಗಿರಲಿದೆ. ಎರಡೂ ಕೋರ್ಸ್‌ಗಳಲ್ಲಿ ಡಾಟಾ ಸೈನ್ಸ್, ಅರ್ಥಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯಗಳ ಸಮನ್ವಯ ಇರಲಿದೆ.

ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಮೂರು ವರ್ಷಗಳ ಬಳಿಕ ಪದವಿ ಪ್ರಮಾಣಪತ್ರದೊಂದಿಗೆ ನಿರ್ಗಮಿಸಬಹುದಾಗಿದ್ದು, ನಾಲ್ಕು ವರ್ಷ ಪೂರ್ಣಗೊಳಿಸಿದವರಿಗೆ ಆನರ್ಸ್ ಪದವಿ ನೀಡಲಾಗುತ್ತದೆ.

ಈ ಹೊಸ ಶಾಲೆಯ ಸ್ಥಾಪನೆಗೆ ಟಾಟಾ ಟ್ರಸ್ಟ್ಸ್ ಮಹತ್ವದ ಧನಸಹಾಯ ನೀಡಿದ್ದು, ಐಐಎಂ ಬೆಂಗಳೂರಿನ ಸುವರ್ಣ ಮಹೋತ್ಸವ ನಿಧಿ ಸಂಗ್ರಹ ಅಭಿಯಾನದಲ್ಲಿ ಇದು ಅತಿದೊಡ್ಡ ಕೊಡುಗೆಯಾಗಿದೆ. ಈ ಯೋಜನೆಯು ಸಂಸ್ಥೆಯ ಶೈಕ್ಷಣಿಕ ವಿಸ್ತರಣೆಗೆ ಹೊಸ ಆಯಾಮ ನೀಡಲಿದೆ ಎಂದು ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

ಮೊದಲ ಬ್ಯಾಚ್‌ಗೆ ಕೇವಲ 120 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದ್ದು, ಹೊಸ ಪದವಿ ಶಾಲೆಯು ಬನ್ನೇರುಘಟ್ಟ ರಸ್ತೆಯಲ್ಲಿರುವ ಐಐಎಂ ಬೆಂಗಳೂರಿನ ಮುಖ್ಯ ಕ್ಯಾಂಪಸ್‌ನಲ್ಲೇ ಕಾರ್ಯನಿರ್ವಹಿಸಲಿದೆ. ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ಹಾಸ್ಟೆಲ್, ಪ್ರಯೋಗಾಲಯ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಸಂಸ್ಥೆ ಸಿದ್ಧತೆ ನಡೆಸಿದೆ.

ಈ ಕುರಿತು ಮಾತನಾಡಿದ ಐಐಎಂ ಬೆಂಗಳೂರು ನಿರ್ದೇಶಕ ಪ್ರೊ. ಹೃಷಿಕೇಶ್ ಟಿ. ಕೃಷ್ಣನ್, “ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ಜಾಗತಿಕ ಸವಾಲುಗಳನ್ನು ಎದುರಿಸಬಲ್ಲ ಯುವ ನಾಯಕರನ್ನು ರೂಪಿಸುವುದು ನಮ್ಮ ಉದ್ದೇಶ” ಎಂದು ತಿಳಿಸಿದ್ದಾರೆ.

ಟಾಟಾ ಟ್ರಸ್ಟ್ಸ್ ಅಧ್ಯಕ್ಷ ನೋಯೆಲ್ ಟಾಟಾ, “ಒಂದು ಸಂಸ್ಥೆಯ ಆರಂಭಿಕ ಹಂತದಲ್ಲಿ ನೀಡುವ ಬೆಂಬಲವು ಅದರ ಭವಿಷ್ಯದ ಚಾರಿತ್ರ್ಯ ಮತ್ತು ಮಹತ್ವಾಕಾಂಕ್ಷೆಯನ್ನು ರೂಪಿಸುತ್ತದೆ. ಐಐಎಂ ಬೆಂಗಳೂರಿನ ಈ ಹೊಸ ಪ್ರಯತ್ನಕ್ಕೆ ಬೆಂಬಲ ನೀಡುತ್ತಿರುವುದು ನಮ್ಮ ಹೆಮ್ಮೆ” ಎಂದು ಹೇಳಿದ್ದಾರೆ.

ಐಐಎಂ ಬೆಂಗಳೂರಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ದೇವಿ ಶೆಟ್ಟಿ ಅವರು, “ಪದವಿಪೂರ್ವ ಹಂತದಲ್ಲೇ ಪ್ರತಿಭೆಗಳನ್ನು ಪೋಷಿಸುವ ಮೂಲಕ ದತ್ತಾಂಶ ಆಧಾರಿತ ಜಗತ್ತಿನ ಸವಾಲುಗಳಿಗೆ ಸಿದ್ಧವಾಗಿರುವ ಚಿಂತಕರನ್ನು ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಹೇಳಿದ್ದಾರೆ.

ಪ್ರವೇಶ ಪರೀಕ್ಷೆ, ಅರ್ಜಿ ಸಲ್ಲಿಕೆ ಹಾಗೂ ಆಯ್ಕೆ ಪ್ರಕ್ರಿಯೆಯ ಕುರಿತ ಅಧಿಕೃತ ಮಾಹಿತಿಯನ್ನು ಶೀಘ್ರದಲ್ಲೇ ಐಐಎಂ ಬೆಂಗಳೂರಿನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 5 ದಿನ ಮಳೆ ಅಬ್ಬರ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಜೂನ್ 20ರಿಂದ 21ರವರೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದೇ ವೇಳೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಸಿರು ವಲಯ ಮುಂದುವರಿದಿದ್ದು, ಯಾವುದೇ ವಿಶೇಷ ಎಚ್ಚರಿಕೆ ನೀಡಲಾಗಿಲ್ಲ.

ಜೂನ್ 21ರಿಂದ 22ರವರೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆ ಮುಂದುವರಿಯಲಿದ್ದು, ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸಲಹೆ ನೀಡಿದೆ.

ಪ್ರತಿದಿನ ನೆಲ ಒರೆಸುವಾಗ ಈ ಒಂದು ಕೆಲಸ ಮಾಡಿ; ಹಲ್ಲಿ-ಜಿರಳೆ ಕಾಟಕ್ಕೆ ಗುಡ್‌ಬೈ ಹೇಳಿ!

0

ಮನೆಯ ಸ್ವಚ್ಛತೆ ಆರೋಗ್ಯಕರ ಜೀವನಶೈಲಿಯ ಪ್ರಮುಖ ಭಾಗವಾಗಿದೆ.

ಪ್ರತಿನಿತ್ಯ ಮನೆ ಸ್ವಚ್ಛಗೊಳಿಸುವುದರಿಂದ ಧೂಳು ಮತ್ತು ಕೊಳಕು ದೂರವಾಗುವುದಷ್ಟೇ ಅಲ್ಲ, ಹಲ್ಲಿ, ಜಿರಳೆ ಹಾಗೂ ಇತರ ಕೀಟಗಳ ಕಾಟವನ್ನೂ ಕಡಿಮೆ ಮಾಡಬಹುದು. ಸಾಮಾನ್ಯವಾಗಿ ಕೀಟಗಳನ್ನು ಓಡಿಸಲು ರಾಸಾಯನಿಕ ಉತ್ಪನ್ನಗಳನ್ನು ಬಳಸಲಾಗುತ್ತದೆ. ಆದರೆ ಇವು ಆರೋಗ್ಯ ಮತ್ತು ಪರಿಸರದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕೆಲವು ನೈಸರ್ಗಿಕ ಪದಾರ್ಥಗಳನ್ನು ನೆಲ ಒರೆಸುವ ನೀರಿಗೆ ಬೆರೆಸಿ ಬಳಸುವುದರಿಂದ ಮನೆ ಸ್ವಚ್ಛವಾಗಿರುವುದರ ಜೊತೆಗೆ ಕೀಟಗಳ ಕಾಟವನ್ನೂ ತಡೆಯಬಹುದು.

ನಿಂಬೆ ರಸ, ಪುದೀನಾ ಎಣ್ಣೆ, ಕರ್ಪೂರ, ವಿನೆಗರ್, ಬೇವಿನ ಎಣ್ಣೆ, ನೀಲಗಿರಿ ಎಣ್ಣೆ, ಅರಿಶಿನ ಹಾಗೂ ಕಲ್ಲು ಉಪ್ಪು ಮೊದಲಾದ ವಸ್ತುಗಳು ಕೀಟ ನಿವಾರಣೆಗೆ ಸಹಕಾರಿಯಾಗುತ್ತವೆ ಎನ್ನಲಾಗುತ್ತದೆ. ನೆಲ ಒರೆಸುವ ನೀರಿಗೆ ಎರಡು ಚಮಚ ನಿಂಬೆ ರಸ ಅಥವಾ 8 ರಿಂದ 10 ಹನಿ ಪುದೀನಾ ಎಣ್ಣೆ ಸೇರಿಸುವುದರಿಂದ ಹಲ್ಲಿ ಮತ್ತು ಜಿರಳೆಗಳು ದೂರವಿರಬಹುದು. ಅದೇ ರೀತಿ ಕರ್ಪೂರ ಬೆರೆಸಿದ ನೀರು, ಅರ್ಧ ಕಪ್ ವಿನೆಗರ್ ಮಿಶ್ರಿತ ನೀರು ಅಥವಾ ಕೆಲವು ಹನಿ ಬೇವಿನ ಎಣ್ಣೆ ಸೇರಿಸಿದ ನೀರಿನಿಂದ ನೆಲ ಒರೆಸುವುದೂ ಪ್ರಯೋಜನಕಾರಿಯಾಗಿದೆ.

ನೀಲಗಿರಿ ಎಣ್ಣೆಯ 10 ರಿಂದ 12 ಹನಿಗಳನ್ನು ನೀರಿಗೆ ಬೆರೆಸಿ ಬಳಸುವುದರಿಂದ ಮನೆ ತಾಜಾವಾಗಿರುವುದರ ಜೊತೆಗೆ ಕೀಟಗಳ ಕಾಟವೂ ಕಡಿಮೆಯಾಗಬಹುದು. ಸ್ವಲ್ಪ ಅರಿಶಿನ ಅಥವಾ ಕಲ್ಲು ಉಪ್ಪನ್ನು ನೀರಿಗೆ ಸೇರಿಸಿ ನೆಲ ಒರೆಸುವುದರಿಂದ ಸಹ ಸ್ವಚ್ಛತೆ ಹೆಚ್ಚಾಗಿ, ಹಲ್ಲಿ ಮತ್ತು ಜಿರಳೆಗಳು ಮನೆಯೊಳಗೆ ಬರುವುದನ್ನು ತಡೆಯಲು ನೆರವಾಗಬಹುದು. ಈ ಸರಳ ಮತ್ತು ನೈಸರ್ಗಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದರಿಂದ ರಾಸಾಯನಿಕ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ, ಮನೆಗೆ ಸುರಕ್ಷಿತ ಹಾಗೂ ಆರೋಗ್ಯಕರ ವಾತಾವರಣವನ್ನು ನಿರ್ಮಿಸಬಹುದು.

error: Content is protected !!