Home Blog

ಭಾರೀ ಮಳೆ: ಚಿಂಚೋಳಿ ಬಳಿ ಕಿರು ಸೇತುವೆ ಕುಸಿತ; ಸಂಚಾರ ಸ್ಥಗಿತ!

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಭಾರೀ ಮಳೆಯಿಂದ ಕಿರು ಸೇತುವೆ ಕುಸಿದ ಘಟನೆ ನಡೆದಿದೆ.

ಚಿಮ್ಮನಚೋಡ–ನರನಾಳ ಗ್ರಾಮದ ನಡುವೆ ಇರುವ ಈ ಸೇತುವೆ ಕುಸಿತಗೊಂಡ ಪರಿಣಾಮ ಚಿಂಚೋಳಿಯಿಂದ ಭಾಲ್ಕಿಗೆ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸ್ಥಳೀಯರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಇದೇ ವೇಳೆ ಬೆಡಕಪಳ್ಳಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಗ್ರಾಮಸ್ಥರು ತಕ್ಷಣವೇ ಸೂಕ್ತ ಪರಿಹಾರ ಮತ್ತು ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಪ್ರವೇಶಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ವಿಜಯಪುರ: ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜನರ ಮೇಲೆ ಕಾಳಜಿ ಇಲ್ಲದೆ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮೋದಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಜನರು ಹಾಳಾಗಿ ಹೋಗಲಿ ಎಂಬಂತೆ ಬೆಲೆಗಳನ್ನು ಹೆಚ್ಚಿಸುತ್ತಿದೆ” ಎಂದು ಕಿಡಿಕಾರಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಜನರಿಗೆ ಅದರ ಲಾಭ ನೀಡಲಾಗಲಿಲ್ಲ ಎಂದು ಆರೋಪಿಸಿದ ಅವರು, ಆಗಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಲಾಗಿತ್ತು ಎಂದು ಹೇಳಿದರು. ಈಗ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದ ಕಾರಣ ಮತ್ತೆ ದರ ಹೆಚ್ಚಳವಾಗುತ್ತಿದೆ ಎಂದು ಟೀಕಿಸಿದರು.

ಕಚ್ಚಾ ತೈಲ ಬೆಲೆ ಕಡಿಮೆಯಾಗಿದ್ದ ಸಮಯದಲ್ಲಿ ಜನರಿಗೆ ಇಂಧನ ದರ ಕಡಿಮೆ ಮಾಡಿದರೆ ಇಂದು ಈ ರೀತಿಯ ಹೊರೆ ಬೀಳುತ್ತಿರಲಿಲ್ಲ. ಇಂದಿನ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೆಚ್ಚಿಸುವುದರ ಜೊತೆಗೆ ಆರ್ಥಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದರು.

ಇದೇ ವೇಳೆ ‘ಕಾಕ್ರೋಚ್ ಜನತಾ ಪಕ್ಷ’ದ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಅವರು ಒಳ್ಳೆಯ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿರುವುದಾಗಿ ತಿಳಿದುಬರುತ್ತಿದೆ ಎಂದು ಹೇಳಿ, ಪ್ರತಿಭಟನೆ ಮುಂದುವರಿಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಪೋಕ್ಸೊ ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದ ಕಾನ್‌ಸ್ಟೇಬಲ್ ಲೋಕಾಯುಕ್ತ ಬಲೆಗೆ!

ಕಲಬುರಗಿ: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಕ್ರಮ ಕೈಗೊಳ್ಳುವುದಾಗಿ ಹೇಳಿ ಲಂಚ ಪಡೆಯುತ್ತಿದ್ದ ಮಹಿಳಾ ಕಾನ್‌ಸ್ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಜ್ಯೋತಿ ಅವರು 10 ಸಾವಿರ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಂದ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಚಿಂದಿ ಆಯುವ ಮಹಿಳೆಯ ಮಗಳ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಪ್ರಕರಣದ ಚಾರ್ಜ್‌ಶೀಟ್ ಸಲ್ಲಿಕೆ ಹಾಗೂ ಕೇಸ್ ದೂರುದಾರರ ಪರವಾಗಿ ನಡೆಯುವಂತೆ ನೋಡಿಕೊಳ್ಳುವುದಾಗಿ ಹೇಳಿ ಜ್ಯೋತಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ದೂರುದಾರರ ಮಾಹಿತಿಯ ಮೇರೆಗೆ ಲೋಕಾಯುಕ್ತ ಇನ್‌ಸ್ಪೆಕ್ಟರ್ ಅರುಣ್ ಮುರಗುಂಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಹಣ ಸ್ವೀಕರಿಸುತ್ತಿದ್ದ ವೇಳೆ ಕಾನ್‌ಸ್ಟೇಬಲ್ ಜ್ಯೋತಿ ಅವರನ್ನು ವಶಕ್ಕೆ ಪಡೆದಿದೆ.

ಇದೇ ಪ್ರಕರಣದಲ್ಲಿ ಮತ್ತೊಬ್ಬ ಎಎಸ್‌ಐ ಪಾತ್ರವೂ ಶಂಕಿಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ವೇಳೆ ಅವರು ಠಾಣೆಯಿಂದ ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಎಎಸ್‌ಐಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ ಪರಮೇಶ್ವರ್; ರೈತರಿಗೆ ಗುಡ್‌ನ್ಯೂಸ್!

ತುಮಕೂರು: ನೂತನ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ಅವರು ಶನಿವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಶುಭ ಕಾರ್ಯ ಅಥವಾ ಹೊಸ ಜವಾಬ್ದಾರಿಯನ್ನು ಆರಂಭಿಸುವ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುವುದು ತಮ್ಮ ಸಂಪ್ರದಾಯವಾಗಿದೆ ಎಂದು ಹೇಳಿದರು. ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತುಮಕೂರಿಗೆ ಆಗಮಿಸಿದ್ದು, ಶ್ರೀಗಳ ಆಶೀರ್ವಾದ ಪಡೆದು ಕಾರ್ಯಾರಂಭ ಮಾಡಿದ್ದೇನೆ ಎಂದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿ ನಾಲ್ಕು ದಿನಗಳಾಗಿದ್ದು, ರಾಜ್ಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳ ನೀಲನಕ್ಷೆ ಸಿದ್ಧಪಡಿಸಿದ್ದಾರೆ. ಜನರಿಗೆ ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಸರ್ಕಾರ ಕಾರ್ಯನಿರ್ವಹಿಸುತ್ತಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ವೇಗ ನೀಡಲಾಗುವುದು ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ಹಲವು ಜ್ವಲಂತ ಸಮಸ್ಯೆಗಳಿದ್ದು, ಅವುಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಎತ್ತಿನಹೊಳೆ ಯೋಜನೆಯ ನೀರು ಜೂನ್-ಜುಲೈ ವೇಳೆಗೆ ಬರಬೇಕಾಗಿದ್ದರೂ, ಅರಣ್ಯ ಇಲಾಖೆಯ ಕೆಲ ತಾಂತ್ರಿಕ ಅಡಚಣೆಗಳಿಂದ ವಿಳಂಬವಾಗಿದೆ. ಸಮಸ್ಯೆ ಬಗೆಹರಿಸಿ ಶೀಘ್ರವೇ ನೀರು ಹರಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಂದಾಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿರುವ ತಾವು ರಾಜ್ಯದ 97 ಲಕ್ಷ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡಲಿದ್ದೇವೆ ಎಂದರು. ರೈತರು ಭೂ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಿ, ತಮ್ಮ ಭೂಮಿಯ ಮೇಲೆ ಸ್ಪಷ್ಟ ಹಕ್ಕು ದೊರಕುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜನಪರ ಆಡಳಿತ ಹಾಗೂ ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪರಮೇಶ್ವರ್ ತಿಳಿಸಿದರು.

ಸಿಎಂ ಆದರೂ ನಿಮ್ಮ ಮನೆ ಮಗನೇ; ಕನಕಪುರದಲ್ಲಿ ಭಾವನಾತ್ಮಕವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು/ರಾಮನಗರ: ಮುಖ್ಯಮಂತ್ರಿ ಸ್ಥಾನಕ್ಕೇರಿದ ಬಳಿಕ ಮೊದಲ ಬಾರಿಗೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಅದ್ದೂರಿ ಸ್ವಾಗತ ಕೋರಿದರು.

ಈ ವೇಳೆ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, “ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ, ನಿಮ್ಮ ಮನೆ ಮಗ” ಎಂದು ಭಾವನಾತ್ಮಕವಾಗಿ ಹೇಳಿದರು.

ಹಾರೋಹಳ್ಳಿ ಸೇರಿದಂತೆ ಕನಕಪುರ ಕ್ಷೇತ್ರದ ವಿವಿಧ ಭಾಗಗಳಲ್ಲಿ ಮುಖ್ಯಮಂತ್ರಿ ಆಗಮನದ ಹಿನ್ನೆಲೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು, ಬ್ಯಾನರ್‌ಗಳು ಹಾಗೂ ಕಾಂಗ್ರೆಸ್ ಧ್ವಜಗಳಿಂದ ಪಟ್ಟಣ ಸಿಂಗಾರಗೊಂಡಿತ್ತು. ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ರಸ್ತೆ ಬದಿಯಲ್ಲಿ ನಿಂತು ಸ್ವಾಗತ ಕೋರಿದರು.

ಕನಕಪುರಕ್ಕೆ ತೆರಳುವ ಮುನ್ನ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿ ಮಾದರಿಯಾಗಿದರು. ಬಳಿಕ ಹಾರೋಹಳ್ಳಿಗೆ ಆಗಮಿಸಿದ ಅವರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ತೆರೆದ ವಾಹನದಲ್ಲಿ ಭವ್ಯ ರೋಡ್ ಶೋ ನಡೆಸಿದ ಸಿಎಂಗೆ ಜನರು ಹೂಮಳೆ ಸುರಿಸಿ ಸಂಭ್ರಮಿಸಿದರು. ತಮಟೆ, ಡೊಳ್ಳು, ನಗಾರಿ, ಹುಲಿವೇಷ, ಪೂಜಾ ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು. ಮಹಿಳೆಯರು ಪೂರ್ಣಕುಂಭದೊಂದಿಗೆ ಮುಖ್ಯಮಂತ್ರಿ ಅವರನ್ನು ಬರಮಾಡಿಕೊಂಡರು.

ಈ ವೇಳೆ ಹಸಿ ಮೆಣಸಿನಕಾಯಿ, ಒಣ ಮೆಣಸಿನಕಾಯಿ ಹಾಗೂ ಬೆಳ್ಳುಳ್ಳಿಯಿಂದ ತಯಾರಿಸಲಾದ ಬೃಹತ್ ಹಾರ ಎಲ್ಲರ ಗಮನ ಸೆಳೆಯಿತು. ಮುಖ್ಯಮಂತ್ರಿಗೆ ದೃಷ್ಟಿ ತಾಗದಿರಲಿ ಎಂಬ ಉದ್ದೇಶದಿಂದ ಸಿದ್ಧಪಡಿಸಿದ್ದ ಈ ವಿಶೇಷ ಹಾರವನ್ನು ಕ್ರೇನ್ ಮೂಲಕ ಅರ್ಪಿಸಲಾಯಿತು.

ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ನೀವು ನನ್ನನ್ನು ಗೆಲ್ಲಿಸಿದ್ದರಿಂದಲೇ ನಾನು ಮುಖ್ಯಮಂತ್ರಿ ಆಗಿದ್ದೇನೆ. ನಿಮ್ಮ ಆಶೀರ್ವಾದವೇ ನನ್ನ ಶಕ್ತಿ. ನಿಮ್ಮ ಯಾವುದೇ ಸಮಸ್ಯೆ ಇದ್ದರೂ ನಮ್ಮ ಮನೆಯ ಬಾಗಿಲು ಸದಾ ತೆರೆದಿರುತ್ತದೆ. ಜನರ ಸೇವೆಯೇ ನನ್ನ ಮೊದಲ ಆದ್ಯತೆ” ಎಂದು ಹೇಳಿದರು.

ಮುಖ್ಯಮಂತ್ರಿಯವರ ಪ್ರವಾಸದ ಹಿನ್ನೆಲೆಯಲ್ಲಿ ಹಾರೋಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಕ್ರಮದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದರು.

ಇಂದು ದಿನಪೂರ್ತಿ ಕನಕಪುರ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿ, ರಾತ್ರಿ ಕನಕಪುರ ಪಟ್ಟಣದ ಚನ್ನಬಸಪ್ಪ ವೃತ್ತದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

 

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಸೇನಾ ಅಧಿಕಾರಿ ಹುತಾತ್ಮ!

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಉಗ್ರರ ನಿಗ್ರಹ ಕಾರ್ಯಾಚರಣೆಯ ವೇಳೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಂದಕಕ್ಕೆ ಬಿದ್ದು ಹುತಾತ್ಮರಾಗಿರುವ ದುರ್ಘಟನೆ ನಡೆದಿದೆ.

ಹುತಾತ್ಮ ಅಧಿಕಾರಿಯನ್ನು ಬೀರೇಶ್ವರ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಅವರು ಉಗ್ರರ ವಿರುದ್ಧ ನಡೆಯುತ್ತಿದ್ದ ‘ಶೆರಾವಲಿ ಕಾರ್ಯಾಚರಣೆ’ಯಲ್ಲಿ ಸೈನಿಕರ ತಂಡವನ್ನು ಮುನ್ನಡೆಸುತ್ತಿದ್ದರು.

ರಾಜೌರಿ ಜಿಲ್ಲೆಯ ದುರ್ಗಮ ಪರ್ವತ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೀರೇಶ್ವರ್ ಗೋಸ್ವಾಮಿ ಕಾಲು ಜಾರಿ ಆಳವಾದ ಕಂದಕಕ್ಕೆ ಬಿದ್ದಿದ್ದಾರೆ. ತಕ್ಷಣವೇ ಜೊತೆಯಲ್ಲಿದ್ದ ಸೈನಿಕರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಮೇಲಕ್ಕೆ ಕರೆತಂದರು. ಆದರೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ರಾಜೌರಿಯ ಡೋರಿಮಾಲ್-ಗಂಭೀರ್ ಮೊಘಲನ್ ಪ್ರದೇಶದ ದಟ್ಟ ಅರಣ್ಯದಲ್ಲಿ ಕಳೆದ ಮೇ ತಿಂಗಳ ಅಂತ್ಯದಿಂದ ಶೆರಾವಲಿ ಕಾರ್ಯಾಚರಣೆ ನಡೆಯುತ್ತಿದೆ. ಈ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಅಥವಾ ಮೂವರು ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆ ಆರಂಭಿಸಿತ್ತು.

ಮಾಹಿತಿಯ ಪ್ರಕಾರ, ‘ಫೌಜಿ’ ಎಂಬ ಸಂಕೇತ ಹೆಸರಿನ ಪ್ರಮುಖ ಉಗ್ರ ಸೇರಿದಂತೆ ಮೂವರು ಉಗ್ರರು ಪರ್ವತ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸೇನೆ ಸಂಪೂರ್ಣ ಪ್ರದೇಶವನ್ನು ಸುತ್ತುವರಿದು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿದೆ.

ಉಗ್ರರ ಪತ್ತೆಗಾಗಿ ಡ್ರೋನ್‌ಗಳು ಹಾಗೂ ಶ್ವಾನ ದಳದ ಸಹಾಯವನ್ನು ಪಡೆದುಕೊಳ್ಳಲಾಗುತ್ತಿದೆ. ಕಾರ್ಯಾಚರಣೆ ಈಗ 16ನೇ ದಿನಕ್ಕೆ ಕಾಲಿಟ್ಟಿದೆ.

ಬೀರೇಶ್ವರ್ ಗೋಸ್ವಾಮಿ ಅವರ ನಿಧನಕ್ಕೆ ಸೇನೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. ದೇಶದ ಭದ್ರತೆಗಾಗಿ ಅವರು ಸಲ್ಲಿಸಿದ ಸೇವೆ ಮತ್ತು ತ್ಯಾಗ ಸದಾ ಸ್ಮರಣೀಯವಾಗಿರಲಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಮಳೆ ಅಬ್ಬರ; ಕೆಇಬಿಗೆ ನೀರು ನುಗ್ಗಿ ಕತ್ತಲಲ್ಲಿ ಮುಳುಗಿದ ನಗರ!

ಬಳ್ಳಾರಿ: ನಗರದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದ್ದು, ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನರು ರಾತ್ರಿಯಿಡೀ ಪರದಾಡುವಂತಾಯಿತು.

ಮಳೆಯ ಪರಿಣಾಮ ಪ್ರಮುಖ ವಿದ್ಯುತ್ ಕೇಂದ್ರ ಜಲಾವೃತಗೊಂಡು ನಗರದ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಘಟನೆ ನಡೆದಿದೆ.

ಬಳ್ಳಾರಿ ನಗರದ ವಿವಿಧ ಬಡಾವಣೆಗಳಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳು ನೀರಿನಿಂದ ಆವೃತಗೊಂಡವು. ರೇಣುಕಾನಗರ, ರಾಣಿಪೇಟೆ, ಮಿಲ್ಲರ್‌ಪೇಟೆ ಸೇರಿದಂತೆ ಹಲವು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮನೆಯೊಳಗೆ ನೀರು ನುಗ್ಗಿದ್ದರಿಂದ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು ನೀರು ಹೊರಹಾಕಲು ರಾತ್ರಿಯಿಡೀ ಹರಸಾಹಸ ಪಟ್ಟರು.

ಮಳೆಯ ಮತ್ತೊಂದು ದೊಡ್ಡ ಪರಿಣಾಮ ನಗರದ ವಿದ್ಯುತ್ ವ್ಯವಸ್ಥೆಯ ಮೇಲೆ ಬಿದ್ದಿದೆ. ನಗರದ ಬಹುತೇಕ ಭಾಗಗಳಿಗೆ ವಿದ್ಯುತ್ ಪೂರೈಕೆ ಮಾಡುವ ಪ್ರಮುಖ ಕೆಇಬಿ ಕೇಂದ್ರವೇ ಜಲಾವೃತಗೊಂಡಿದೆ. ಕೇಂದ್ರದೊಳಗಿನ ಟ್ರಾನ್ಸ್‌ಫಾರ್ಮರ್‌ಗಳು, ವಿದ್ಯುತ್ ನಿಯಂತ್ರಣ ಸಾಧನಗಳು ಹಾಗೂ ಇತರ ಉಪಕರಣಗಳ ಸುತ್ತ ಮಳೆ ನೀರು ನಿಂತಿದ್ದರಿಂದ ಅಧಿಕಾರಿಗಳು ಆತಂಕಗೊಂಡರು.

ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಕೆಇಬಿ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಹೊರಹಾಕುವ ಕಾರ್ಯಾಚರಣೆ ಆರಂಭಿಸಿದರು. ಶನಿವಾರ ರಾತ್ರಿ 10 ಗಂಟೆಯಿಂದಲೇ ಕಾರ್ಯಾಚರಣೆ ನಡೆಸಲಾಗಿದ್ದು, ರಾತ್ರಿಯಿಡೀ ನೀರು ತೆರವುಗೊಳಿಸಲು ಸಿಬ್ಬಂದಿ ಶ್ರಮಿಸಿದರು. ಆದರೂ ಜಲಾವೃತ ಸಮಸ್ಯೆಯಿಂದ ವಿದ್ಯುತ್ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡು ನಗರದ ಹಲವೆಡೆ ವಿದ್ಯುತ್ ಕಡಿತ ಉಂಟಾಯಿತು.

ಪ್ರತಿವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗುತ್ತಿದ್ದರೂ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಬೇಸತ್ತ ಜನರು ಕೆಇಬಿ ಕಚೇರಿ ಬಳಿ ತೆರಳಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಶೀಘ್ರ ವಿದ್ಯುತ್ ಪೂರೈಕೆ ಪುನರಾರಂಭಿಸುವಂತೆ ಒತ್ತಾಯಿಸಿದರು.

ಮಳೆಯ ಹೊಡೆತಕ್ಕೆ ಸರ್ಕಾರಿ ಕಚೇರಿಗಳೂ ತತ್ತರಿಸಿವೆ. ನಗರದ ಹಳೆ ತಾಲೂಕು ಕಚೇರಿ ಆವರಣ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿತ್ತು. ಇದೇ ಆವರಣದಲ್ಲಿ ಅಂಚೆ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ನೀರಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದರ ಜೊತೆಗೆ ಬ್ರೂಸ್‌ಪೇಟೆ ಪೊಲೀಸ್ ಠಾಣೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳುವ ಸಿಬ್ಬಂದಿ ಮತ್ತು ಸಾರ್ವಜನಿಕರೂ ತೊಂದರೆ ಅನುಭವಿಸಿದರು. ಪ್ರತಿ ಬಾರಿ ಮಳೆ ಬಂದಾಗ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ ಶಾಶ್ವತ ಪರಿಹಾರ ಕಂಡುಕೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಪ್ರಾಪ್ತ ಬಾಲಕಿಗೆ ಮದುವೆ ಆಮಿಷ; ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 3 ವರ್ಷ ಜೈಲು

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.

ವಿರೂಪಾಕ್ಷಿ ಶಿಕ್ಷೆಗೆ ಗುರಿಯಾದ ಆರೋಪಿ. 2023ರ ಅಕ್ಟೋಬರ್ 4ರಂದು ಆತ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದನು. ಮಗಳು ಕಾಣೆಯಾಗಿರುವ ಕುರಿತು ಬಾಲಕಿಯ ತಂದೆ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು, ಆರೋಪಿ ಬಾಲಕಿಯನ್ನು ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದಿರುವುದನ್ನು ಪತ್ತೆಹಚ್ಚಿದ್ದರು. ಪರೀಕ್ಷೆ ಬರೆಯಲು ಬಂದಿದ್ದೇವೆ ಎಂದು ಸಂಬಂಧಿಕರಿಗೆ ಸುಳ್ಳು ಮಾಹಿತಿ ನೀಡಿ ಅವರ ಮನೆಯಲ್ಲಿ ತಂಗಿದ್ದ ಆರೋಪಿ, ಅಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ತನಿಖೆ ಪೂರ್ಣಗೊಳಿಸಿದ ಪೊಲೀಸರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ ನಾರಾಯಣ ಹೆಗಡೆ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿರೂಪಾಕ್ಷಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ 15 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ವಿಧಿಸಲಾದ ದಂಡದ ಮೊತ್ತವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಸವರಾಜ್ ವಾದ ಮಂಡಿಸಿದರು.

ಸಾಕು ಬೆಕ್ಕಿನಿಂದ ತಂದೆ-ಮಗನ ಜೀವ ಉಳಿತು; ಹೊರಬಂದ ಕ್ಷಣವೇ ಮನೆಯ ಮೇಲ್ಛಾವಣಿ ಕುಸಿತ!

ಬಾಗಲಕೋಟೆ: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲ್ಛಾವಣಿ ಕುಸಿದ ಘಟನೆ ನಡೆದಿದ್ದು, ಸಾಕು ಬೆಕ್ಕಿನ ಕಾರಣದಿಂದ ತಂದೆ ಮತ್ತು ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಅಪರೂಪದ ಘಟನೆ ಬೆಳಕಿಗೆ ಬಂದಿದೆ.

ಬಾಗಲಕೋಟೆಯ ವಲ್ಲಭಬಾಯಿ ನಗರದ ನಿವಾಸಿಗಳಾದ ಶಬ್ಬೀರ್ ಬಾಗವಾನ್ ಹಾಗೂ ಅವರ ಪುತ್ರ ಆರ್ಬಾಜ್ ಬಾಗವಾನ್ ಈ ಘಟನೆಯಿಂದ ಪಾರಾದವರು. ಹಣ್ಣಿನ ವ್ಯಾಪಾರ ಮಾಡುತ್ತಿರುವ ಇವರ ಮನೆಗೆ ನಿನ್ನೆ ಸುರಿದ ಭಾರೀ ಮಳೆಯಿಂದ ಹಾನಿಯಾಗಿದೆ.

ಮಳೆಯ ತೀವ್ರತೆಗೆ ಮನೆಯ ಮೇಲ್ಛಾವಣಿಯಿಂದ ಮಣ್ಣಿನ ತುಕಡಿಗಳು ಉದುರಲು ಆರಂಭವಾಗಿದ್ದವು. ಇದೇ ವೇಳೆ ಮನೆಯಲ್ಲಿದ್ದ ಸಾಕು ಬೆಕ್ಕು ಏಕಾಏಕಿ ಹೊರಗೆ ಓಡಿದೆ. ಬೆಕ್ಕಿಗೆ ಹಸಿವಾಗಿರಬಹುದು ಎಂದು ಭಾವಿಸಿದ ಶಬ್ಬೀರ್ ಬಾಗವಾನ್ ಅದನ್ನು ಹಿಡಿಯಲು ಮನೆಯ ಹೊರಗೆ ತೆರಳಿದ್ದಾರೆ. ತಂದೆಯ ಹಿಂದೆ ಮಗ ಆರ್ಬಾಜ್ ಕೂಡ ಹೊರಬಂದಿದ್ದಾರೆ.

ಇಬ್ಬರೂ ಮನೆಯ ಹೊಸ್ತಿಲು ದಾಟಿ ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಇಡೀ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಗ್ಗೆ ಮಾತನಾಡಿದ ಆರ್ಬಾಜ್, “ಮೇಲ್ಛಾವಣಿಯಿಂದ ಮಣ್ಣು ಬೀಳುತ್ತಿದ್ದಾಗ ಬೆಕ್ಕು ಹೊರಗೆ ಓಡಿತು. ಅದನ್ನು ಹಿಡಿಯಲು ತಂದೆ ಹೊರಗೆ ಹೋದರು. ನಾನು ಅವರ ಹಿಂದೆ ಹೋದೆ. ನಾವು ಹೊರಬಂದ ತಕ್ಷಣವೇ ಇಡೀ ಮೇಲ್ಛಾವಣಿ ಕುಸಿಯಿತು. ಬೆಕ್ಕಿನಿಂದಲೇ ನಮ್ಮ ಜೀವ ಉಳಿಯಿತು” ಎಂದು ತಿಳಿಸಿದ್ದಾರೆ.

ಇನ್ನೂ ಘಟನೆಯ ವೇಳೆ ಮನೆಯ ಉಳಿದ ಸದಸ್ಯರು ವಿಜಯಪುರಕ್ಕೆ ಮದುವೆ ಕಾರ್ಯಕ್ರಮದ ನಿಮಿತ್ತ ತೆರಳಿದ್ದ ಕಾರಣ, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಆದರೆ ಮೇಲ್ಛಾವಣಿ ಕುಸಿದ ಪರಿಣಾಮ ಮನೆಯಲ್ಲಿದ್ದ ಪಾತ್ರೆಗಳು, ದವಸ-ಧಾನ್ಯಗಳು ಸೇರಿದಂತೆ ವ್ಯಾಪಾರಕ್ಕಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮಾವಿನ ಹಣ್ಣುಗಳು ಸಂಪೂರ್ಣವಾಗಿ ನಾಶವಾಗಿವೆ. ಇದರಿಂದ ವ್ಯಾಪಾರಿ ಶಬ್ಬೀರ್ ಬಾಗವಾನ್ ಅವರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.

ಸದ್ಯ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ಶಬ್ಬೀರ್ ಬಾಗವಾನ್ ಮನವಿ ಮಾಡಿದ್ದಾರೆ.

ಕೊಪ್ಪಳದಲ್ಲಿ ಭೀಕರ ಘಟನೆ: ತಂದೆ-ಅಕ್ಕನನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಪುತ್ರ!

ಕೊಪ್ಪಳ: ಕುಟುಂಬದೊಳಗಿನ ಕಲಹದ ಹಿನ್ನೆಲೆ ಯುವಕನೊಬ್ಬ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಹತ್ಯೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸ ಅಯೋಧ್ಯ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಪ್ರಗತಿ (19) ಹಾಗೂ ವೆಂಕಟನಾಯ್ಡು (45) ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ತಾಯಿ ಸೌಜನ್ಯ (40) ಅವರನ್ನು ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಸಾಯಿ ವೆಂಕಟಮಣಿ (18) ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ತಂದೆ ಮತ್ತು ಅಕ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ತಾಯಿ ಸೌಜನ್ಯ ಅವರ ಮೇಲೂ ಹಲ್ಲೆ ನಡೆಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೃತ್ಯ ಎಸಗಿದ ಬಳಿಕ ಸಾಯಿ ವೆಂಕಟಮಣಿ ತಾನೂ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಗಾಯಗೊಂಡಿರುವ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

 

error: Content is protected !!