ಬೆಂಗಳೂರು: ರಾಜ್ಯ ಪೊಲೀಸರ ಕಾರ್ಯವೈಖರಿಯ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನಿಜವಾದ ಅಪರಾಧಗಳ ತನಿಖೆಗಿಂತ ಜನರನ್ನು ಅಲೆದಾಡಿಸುವ ಕೆಲಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಕಿಡಿಕಾರಿದೆ.
ಚನ್ನಪಟ್ಟಣದ ಎಂ.ಕೆ. ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2024ರಲ್ಲಿ ಎರಡು ಹಸುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ, ಎರಡು ವರ್ಷಗಳ ಬಳಿಕ 2026ರಲ್ಲಿ ಪೊಲೀಸರು ದೂರುದಾರರ ನೆರೆಮನೆಯವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಈ ಎಫ್ಐಆರ್ ರದ್ದುಪಡಿಸುವಂತೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಹಸುಗಳು ಇನ್ನೂ ಪತ್ತೆಯಾಗಿಲ್ಲವೆಂಬ ಕಾರಣಕ್ಕೆ ಇಡೀ ಕುಟುಂಬದ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿದ ನ್ಯಾಯಾಲಯ, ಸಾಮಾನ್ಯವಾಗಿ ಜನರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ಅನೇಕ ಬಾರಿ ಸುತ್ತಾಡಬೇಕಾಗುತ್ತದೆ. ಆದರೂ ಎಫ್ಐಆರ್ ದಾಖಲಿಸಲು ಪೊಲೀಸರು ಹಿಂಜರಿಯುತ್ತಾರೆ. ಆದರೆ ಎರಡು ವರ್ಷ ಹಳೆಯ ಪ್ರಕರಣದಲ್ಲಿ ತಕ್ಷಣವೇ ಕುಟುಂಬದ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನಿನ ದುರ್ಬಳಕೆ ಎಂದು ತರಾಟೆಗೆ ತೆಗೆದುಕೊಂಡಿತು.
ರಾಜ್ಯ ಸರ್ಕಾರ ಹಾಗೂ ಪೊಲೀಸರು ಹಸುಗಳ ವಿಚಾರದಲ್ಲಿ ಮಾತ್ರ ಸೀಮಿತವಾಗದೇ, ಸಮಾಜದಲ್ಲಿ ನಡೆಯುತ್ತಿರುವ ಗಂಭೀರ ಅಪರಾಧಗಳತ್ತ ಗಮನ ಹರಿಸಬೇಕು. ಜನರನ್ನು ಅನಾವಶ್ಯಕವಾಗಿ ಅಲೆದಾಡಿಸುವ ಪ್ರವೃತ್ತಿ ನಿಲ್ಲಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ವಿರುದ್ಧ ನಡೆಯುತ್ತಿದ್ದ ತನಿಖಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಪೊಲೀಸರ ಅಧಿಕಾರ ದುರ್ಬಳಕೆಯ ಉದಾಹರಣೆಯಾಗಿ ಈ ಪ್ರಕರಣವನ್ನು ಉಲ್ಲೇಖಿಸಿದೆ. ಇಂತಹ ನಡೆಗಳನ್ನು ಸಹಿಸಲಾಗುವುದಿಲ್ಲ ಎಂದು ನ್ಯಾಯಾಲಯ ಎಚ್ಚರಿಸಿದೆ.

