Home Blog

ರಾಣಿ ಚೆನ್ನಮ್ಮ ಪಾರ್ಟಿ ಸಂಸ್ಥಾಪಕ ಅಧ್ಯಕ್ಷ ಎಂ.ಬಿ. ದೇಸಾಯಿ ನಿಧನ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಣಿ ಚೆನ್ನಮ್ಮ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಗದುಗಿನ ಹಿರಿಯ ಸಾಮಾಜಿಕ ಧುರೀಣ, ವೀರಶೈವ ಲಿಂಗಾಯತ ಸಮಾಜದ ಮುಖಂಡ ಮಲ್ಲಿಕಾರ್ಜುನ ಬಸಪ್ಪ ದೇಸಾಯಿ (80) ಅವರು ಶನಿವಾರ ಸಂಜೆ 4.30ಕ್ಕೆ ನಿಧನರಾದರು.

ಅಖಿಲ ಕರ್ನಾಟಕ ವೀರರಾಣಿ ಕಿತ್ತೂರು ಚೆನ್ನಮ್ಮ ಸರ್ವಧರ್ಮ ಸಮಾಜ ಸೇವಾ ಸಂಸ್ಥೆ (ರಿ.)ಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಎಂ.ಬಿ. ದೇಸಾಯಿ ಅವರು, ಗದಗ ಜಿಲ್ಲೆಯಾದ್ಯಂತ ಸಮಾಜ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಗದುಗಿನಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ವಿಜಯೋತ್ಸವ ಆಚರಣೆ ಹಾಗೂ ವೀರರಾಣಿ ಕಿತ್ತೂರು ಚೆನ್ನಮ್ಮಳ ಕಂಚಿನ ಪುತ್ಥಳಿ ಸ್ಥಾಪನೆಗೆ ಮುಂದಾಳತ್ವ ವಹಿಸಿ ಹೋರಾಟ ನಡೆಸಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಆ.16ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಗೌರಿಬಿದನೂರು ಬಳಿ ಚಲಿಸುತ್ತಿದ್ದ KSRTC ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

0

ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಗೌರಿಬಿದನೂರು ಕೆಎಸ್‌ಆರ್‌ಟಿಸಿ ಘಟಕಕ್ಕೆ ಸೇರಿದ ಬಸ್‌ ನಗರದಿಂದ ಮರಿಪಡಿಗು ಗ್ರಾಮದತ್ತ ತೆರಳುತ್ತಿತ್ತು. ಎಂ.ಗೊಲ್ಲಹಳ್ಳಿ ಗ್ರಾಮದ ಸಮೀಪ ಬರುತ್ತಿದ್ದ ವೇಳೆ ಬಸ್‌ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣ ಬಸ್‌ ಅನ್ನು ಸುರಕ್ಷಿತವಾಗಿ ನಿಲ್ಲಿಸಿದ್ದಾರೆ. ಬಳಿಕ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ನೋಡನೋಡುತ್ತಿದ್ದಂತೆ ಬೆಂಕಿ ಬಸ್‌ನ ವಿವಿಧ ಭಾಗಗಳಿಗೆ ವ್ಯಾಪಿಸಿದ್ದು, ಬಹುತೇಕ ಬಸ್‌ ಸಂಪೂರ್ಣವಾಗಿ ಸುಟ್ಟುಹೋಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಬಸ್‌ಗೆ ಭಾರೀ ಪ್ರಮಾಣದ ಹಾನಿಯಾಗಿತ್ತು.

ಘಟನೆಗೆ ನಿಖರ ಕಾರಣ ಏನು ಎಂಬುದರ ಕುರಿತು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ತಾಂತ್ರಿಕ ಪರಿಶೀಲನೆ ಬಳಿಕ ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬರಬೇಕಿದೆ.

ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಸರ್ಕಾರಿ ಬಸ್‌ಗಳ ತಾಂತ್ರಿಕ ತಪಾಸಣೆ ಹಾಗೂ ನಿರ್ವಹಣೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂವರ ಎನ್‌ಕೌಂಟರ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌; ಅರಣ್ಯಾಧಿಕಾರಿಗಳ ವಿರುದ್ಧ FIR!

0

ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಬೇಟೆಗೆ ಬಂದಿದ್ದ ಆರೋಪದ ಮೇಲೆ ಮೂವರು ಮೃತಪಟ್ಟಿರುವ ಎನ್‌ಕೌಂಟರ್‌ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಮೃತ ಆಥೋಣಿಸಾಮಿ ಅವರ ಪತ್ನಿ ಲೂರ್ದಾಮೇರಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಫ್‌ಐಆರ್‌ನಲ್ಲಿ ನಿರ್ದಿಷ್ಟ ಅಧಿಕಾರಿಗಳ ಹೆಸರುಗಳನ್ನು ನಮೂದಿಸದೆ, ‘ಅರಣ್ಯ ಅಧಿಕಾರಿಗಳು, ಹನೂರು ವಿಭಾಗ’ ಎಂದು ಆರೋಪಿಗಳನ್ನು ಉಲ್ಲೇಖಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS)ಯ **103(1)**ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ವಲಯ ಐಜಿ ಬೋರಲಿಂಗಯ್ಯ ಹಾಗೂ ಚಾಮರಾಜನಗರ ಎಸ್‌ಪಿ ಮುತ್ತುರಾಜು ಅವರ ಸಮ್ಮುಖದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇಬ್ಬರೂ ಬೆಳಗ್ಗೆಯಿಂದ ಹನೂರು ಪೊಲೀಸ್ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.

ದೂರಿನಲ್ಲಿ ಏನಿದೆ?

ಲೂರ್ದಾಮೇರಿ ಅವರು ನೀಡಿರುವ ದೂರಿನ ಪ್ರಕಾರ, ಕುಟುಂಬವು ಹಸುಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದೆ. ನಿನ್ನೆ ಹಸುಗಳು ಮೇಯಲು ಕಾಡಿಗೆ ತೆರಳಿದ್ದು, ಬಳಿಕ ವಾಪಸ್ ಬಂದಿರಲಿಲ್ಲ. ಹಸುಗಳನ್ನು ಹುಡುಕಿಕೊಂಡು ಬರಲು ಸಂಜೆ ವೇಳೆ ಪತಿ ಆಥೋಣಿಸಾಮಿ, ಅವರ ಸಹೋದರ ಕುಮಾರ್, ಮೈದುನ ಪೀಟರ್ ಹಾಗೂ ದೊಡ್ಡಪ್ಪನ ಮಗ ಜೋಸೆಫ್ ಕಾಡಿಗೆ ತೆರಳಿದ್ದರು.

ಬೆಳಗ್ಗೆಯಾದರೂ ನಾಲ್ವರೂ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ಜೋಸೆಫ್ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮರಿಯಮಂಗಲ ಗ್ರಾಮದಿಂದ ಸುಮಾರು 4 ಕಿ.ಮೀ. ದೂರದ ಕಾಡಿನಲ್ಲಿ ವಿಶ್ರಾಂತಿ ಪಡೆಯುತ್ತಾ ಮಲಗಿದ್ದ ವೇಳೆ ಬೆಳಗಿನ ಜಾವ ಸುಮಾರು 3ರಿಂದ 5 ಗಂಟೆಯ ನಡುವೆ ಅರಣ್ಯಾಧಿಕಾರಿಗಳು ಏಕಾಏಕಿ ಗುಂಡು ಹಾರಿಸಿದ್ದಾರೆ ಎಂದು ಜೋಸೆಫ್ ತಿಳಿಸಿದ್ದಾಗಿ ಲೂರ್ದಾಮೇರಿ ದೂರಿನಲ್ಲಿ ಹೇಳಿದ್ದಾರೆ.

ಗುಂಡಿನ ದಾಳಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ತಾನು ತಪ್ಪಿಸಿಕೊಂಡು ಬಂದಿರುವುದಾಗಿ ಜೋಸೆಫ್ ತಿಳಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅರಣ್ಯ ಇಲಾಖೆ ಅಧಿಕಾರಿಗಳೇ ತಮ್ಮ ಪತಿಯನ್ನು ಸೇರಿದಂತೆ ಮೂವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಲೂರ್ದಾಮೇರಿ ಆರೋಪಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದು, ಎನ್‌ಕೌಂಟರ್‌ ಪ್ರಕರಣದ ತನಿಖೆ ಮತ್ತಷ್ಟು ಕುತೂಹಲ ಕೆರಳಿಸಿದೆ.

ಹಾಸಿಗೆಯಲ್ಲಿ ಗಂಟೆಗಟ್ಟಲೆ ಮಲಗಿದರೂ ನಿದ್ರೆ ಬರ್ತಿಲ್ವಾ? ಇಲ್ಲಿವೆ ಸುಲಭ ಪರಿಹಾರಗಳು!

0

ಇಂದಿನ ಬ್ಯುಸಿ ಜೀವನಶೈಲಿ, ತಡರಾತ್ರಿವರೆಗೆ ಮೊಬೈಲ್ ಬಳಕೆ, ಅನಿಯಮಿತ ಆಹಾರ ಪದ್ಧತಿ ಹಾಗೂ ಒತ್ತಡದ ಕಾರಣದಿಂದ ಅನೇಕರು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಉತ್ತಮ ನಿದ್ರೆ ಕೇವಲ ಆಯಾಸವನ್ನು ಕಡಿಮೆ ಮಾಡುವುದಷ್ಟೇ ಅಲ್ಲ, ಮನಸ್ಥಿತಿ, ಏಕಾಗ್ರತೆ ಹಾಗೂ ದೈನಂದಿನ ಕಾರ್ಯಕ್ಷಮತೆಯ ಮೇಲೂ ಉತ್ತಮ ಪರಿಣಾಮ ಬೀರುತ್ತದೆ. ಹೀಗಾಗಿ ಉತ್ತಮ ನಿದ್ರೆಗಾಗಿ ಈ 8 ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು ಸಹಾಯಕವಾಗಬಹುದು.

ಉತ್ತಮ ನಿದ್ರೆಗಾಗಿ ಈ ಅಭ್ಯಾಸಗಳನ್ನು ಪಾಲಿಸಿ:

  • ಪ್ರತಿದಿನ ಒಂದೇ ಸಮಯಕ್ಕೆ ಮಲಗಿ, ಏಳಿ: ನಿಯಮಿತ ನಿದ್ರೆಯ ಸಮಯ ದೇಹದ ನೈಸರ್ಗಿಕ ಬಾಡಿ ಕ್ಲಾಕ್ ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ.

  • ಮಲಗುವ ಮುನ್ನ ಮೊಬೈಲ್ ಬಳಕೆ ಕಡಿಮೆ ಮಾಡಿ: ಮಲಗುವ 30–60 ನಿಮಿಷಗಳ ಮೊದಲು ಮೊಬೈಲ್, ಟಿವಿ ಮತ್ತು ಲ್ಯಾಪ್‌ಟಾಪ್ ಬಳಕೆ ಕಡಿಮೆ ಮಾಡುವುದು ಉತ್ತಮ.

  • ರಾತ್ರಿ ಹಗುರವಾದ ಆಹಾರ ಸೇವಿಸಿ: ಮಲಗುವ ಮುನ್ನ ಅತಿಯಾಗಿ ಅಥವಾ ಭಾರವಾದ ಆಹಾರ ಸೇವಿಸುವುದನ್ನು ತಪ್ಪಿಸಿ.

  • ಸಂಜೆಯ ಬಳಿಕ ಚಹಾ-ಕಾಫಿ ಕಡಿಮೆ ಮಾಡಿ: ಕ್ಯಾಫೀನ್ ಕೆಲವರಲ್ಲಿ ನಿದ್ರೆಯನ್ನು ತಡಮಾಡಬಹುದು.

  • ಹಗಲಿನಲ್ಲಿ ವ್ಯಾಯಾಮ ಮಾಡಿ: ನಿಯಮಿತ ವಾಕಿಂಗ್ ಅಥವಾ ವ್ಯಾಯಾಮ ನಿದ್ರೆಯ ಗುಣಮಟ್ಟ ಸುಧಾರಿಸಲು ಸಹಾಯ ಮಾಡಬಹುದು.

  • ಮಲಗುವ ಕೋಣೆಯನ್ನು ಆರಾಮದಾಯಕವಾಗಿಡಿ: ಶಾಂತ, ಕತ್ತಲೆ ಮತ್ತು ತಂಪಾದ ವಾತಾವರಣ ಉತ್ತಮ ನಿದ್ರೆಗೆ ನೆರವಾಗುತ್ತದೆ.

  • ಮಲಗುವ ಮುನ್ನ ಮನಸ್ಸನ್ನು ಶಾಂತಗೊಳಿಸಿ: ಪುಸ್ತಕ ಓದುವುದು ಅಥವಾ ನಿಧಾನವಾದ ಸಂಗೀತ ಕೇಳುವುದು ಒತ್ತಡ ಕಡಿಮೆ ಮಾಡಲು ಸಹಾಯ ಮಾಡಬಹುದು.

  • ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ರೆ ಮಾಡಬೇಡಿ: ದೀರ್ಘ ಹಗಲಿನ ನಿದ್ರೆ ರಾತ್ರಿ ನಿದ್ರೆಗೆ ಅಡ್ಡಿಯಾಗಬಹುದು.

    ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ನಿರಂತರವಾಗಿ ನಿದ್ರೆ ಬರದಿರುವುದು, ರಾತ್ರಿ ಪದೇಪದೇ ಎಚ್ಚರವಾಗುವುದು, ಜೋರಾಗಿ ಗೊರಕೆ ಹೊಡೆಯುವುದು, ಉಸಿರಾಟದಲ್ಲಿ ತೊಂದರೆ ಉಂಟಾಗುವುದು ಅಥವಾ ಹಗಲಿನಲ್ಲಿ ಅತಿಯಾದ ನಿದ್ರೆ ಹಾಗೂ ಆಯಾಸ ಕಾಣಿಸಿಕೊಂಡರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.

ಗುರು ರಾಘವೇಂದ್ರ ಸ್ವಾಮಿ ಪವಾಡ? 7 ತಿಂಗಳ ಬಳಿಕ ಮತ್ತೆ ಎದ್ದು ನಡೆದಾಡಿದ MBBS ವಿದ್ಯಾರ್ಥಿನಿ!

0

ಹಾವೇರಿ: ಕಳೆದ ಏಳು ತಿಂಗಳಿಂದ ಅಪರೂಪದ ಆಟೋ ಇಮ್ಯೂನ್ ಸಮಸ್ಯೆಯಿಂದ ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್‌ಚೇರ್‌ಗೆ ಸೀಮಿತವಾಗಿದ್ದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಇದೀಗ ಮತ್ತೆ ನಡೆದಾಡುತ್ತಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ಗಮನ ಸೆಳೆದಿದೆ.

ಕುಟುಂಬಸ್ಥರು ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಅನುಗ್ರಹವೆಂದು ನಂಬಿದ್ದು, ವೈದ್ಯಕೀಯ ಚಿಕಿತ್ಸೆ ಕೂಡ ಈ ಅವಧಿಯಲ್ಲಿ ಮುಂದುವರಿದಿತ್ತು.

ಹಾವೇರಿ ತಾಲೂಕಿನ ನೆಗಳೂರು ಗ್ರಾಮದ 22 ವರ್ಷದ ನಿವೇದಿತಾ ಶಿವಪ್ಪ ನೆಗಳೂರು ಈ ವಿದ್ಯಾರ್ಥಿನಿ. ಕೆಲವು ತಿಂಗಳ ಹಿಂದೆ ಅವರಿಗೆ ಪದೇ ಪದೇ ಮೂರ್ಚೆ ಹೋಗುವ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಆರೋಗ್ಯ ಸ್ಥಿತಿ ಹದಗೆಟ್ಟು ಕೈಕಾಲುಗಳ ಸ್ವಾಧೀನ ಕಳೆದುಕೊಂಡು ವೀಲ್‌ಚೇರ್ ಬಳಸುವ ಪರಿಸ್ಥಿತಿ ಎದುರಾಗಿತ್ತು.

ವೈದ್ಯಕೀಯ ಪರೀಕ್ಷೆ ವೇಳೆ ಆಟೋ ಇಮ್ಯೂನ್ ಸಮಸ್ಯೆಯಿಂದ ಉಂಟಾದ ಪ್ರತಿಕಾಯಗಳು (ಆ್ಯಂಟಿಬಾಡಿ) ಮೆದುಳಿನ ಮೇಲೆ ಪರಿಣಾಮ ಬೀರುತ್ತಿರುವುದು ಪತ್ತೆಯಾಗಿತ್ತು. ಕುಟುಂಬಸ್ಥರು ಹಾವೇರಿ ಹಾಗೂ ಹುಬ್ಬಳ್ಳಿಯ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದ್ದು, ಸುಮಾರು ಐದರಿಂದ ಆರು ಲಕ್ಷ ರೂಪಾಯಿ ವೆಚ್ಚ ಮಾಡಿದ್ದರು. ವೈದ್ಯರ ಸಲಹೆಯಂತೆ ಚಿಕಿತ್ಸೆ ಮುಂದುವರಿದಿದ್ದರೂ ಆರಂಭದಲ್ಲಿ ನಿರೀಕ್ಷಿತ ಚೇತರಿಕೆ ಕಾಣಿಸಿರಲಿಲ್ಲ.

ಕುಟುಂಬಸ್ಥರು ನಿವೇದಿತಾಳನ್ನು ಹೊಸರಿತ್ತಿ ರಾಯರ ಮಠಕ್ಕೆ ಕರೆದೊಯ್ದಿದ್ದರು. ಅಲ್ಲಿ ನಡೆದ 100ನೇ ಸುಶೀಲೇಂದ್ರ ತೀರ್ಥ ಆರಾಧನೆಯ ಸಂದರ್ಭದಲ್ಲಿ ಸುಭುದೇಂದ್ರ ತೀರ್ಥ ಸ್ವಾಮೀಜಿಗಳು ಮಂತ್ರಾಕ್ಷತೆ ಮತ್ತು ರಾಯರ ಭಾವಚಿತ್ರ ನೀಡಿ ಐದು ವಾರಗಳ ಕಾಲ ರಾಯರ ಮಠಕ್ಕೆ ನಡೆದುಕೊಳ್ಳುವಂತೆ ಸಲಹೆ ನೀಡಿದ್ದರು.

ಕುಟುಂಬದ ಹೇಳಿಕೆಯ ಪ್ರಕಾರ, ಮೂರು ವಾರಗಳಲ್ಲೇ ನಿವೇದಿತಾಳ ಆರೋಗ್ಯದಲ್ಲಿ ಸುಧಾರಣೆ ಕಾಣಿಸಿಕೊಂಡಿದ್ದು, ಐದು ವಾರಗಳ ಹರಕೆಯ ಬಳಿಕ ಅವರು ಸ್ವತಃ ನಡೆಯುವ ಮಟ್ಟಿಗೆ ಚೇತರಿಸಿಕೊಂಡಿದ್ದಾರೆ.

ಮಗಳ ಆರೋಗ್ಯದಲ್ಲಿ ಕಂಡುಬಂದ ಬದಲಾವಣೆಯಿಂದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದು, ಇದನ್ನು ಗುರು ರಾಘವೇಂದ್ರ ಸ್ವಾಮಿಗಳ ಕೃಪೆ ಮತ್ತು ಆಶೀರ್ವಾದವೆಂದು ನಂಬಿದ್ದಾರೆ. ಚಿಕಿತ್ಸೆ ಮತ್ತು ಚೇತರಿಕೆಯ ಬಳಿಕ ಅವರು ಮಂತ್ರಾಲಯಕ್ಕೂ ಭೇಟಿ ನೀಡುವಂತೆ ಸೂಚನೆ ದೊರೆತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ಸಹಿಸುವುದಿಲ್ಲ: ಕೊಪ್ಪಳದಲ್ಲಿ ಅಧಿಕಾರಿಗಳಿಗೆ ಸಚಿವ ತಂಗಡಗಿ ತರಾಟೆ

0

ಕೊಪ್ಪಳ: ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡದಿದ್ದರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದರು.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬೊಮ್ಮಾಸಾಗರ ತಾಂಡದಲ್ಲಿ ವಿಬಿ-ಜಿ ರಾಮ್-ಜಿ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದ ಅವರು, ಮಳೆ ಕೊರತೆಯ ಈ ಸಂದರ್ಭದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು ಎಂದು ಸೂಚಿಸಿದರು.

ವಿಬಿ-ಜಿ ರಾಮ್-ಜಿ ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿ ಹೆಚ್ಚಿನ ಜನರಿಗೆ ಉದ್ಯೋಗ ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು. ಉದ್ಯೋಗದ ಕೊರತೆಯಿಂದ ಗ್ರಾಮೀಣ ಜನರು ಗುಳೆ ಹೋಗುವ ಪರಿಸ್ಥಿತಿ ಬರಬಾರದು ಎಂದು ಹೇಳಿದರು.

ಕಾರ್ಯಕ್ರಮದ ವೇಳೆ ಗ್ರಾಮಕ್ಕೆ ದಿನಕ್ಕೆ ಒಂದೇ ಬಸ್ ಸಂಚಾರವಿರುವುದರಿಂದ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಸಚಿವರ ಗಮನಕ್ಕೆ ತಂದರು.

ಇದರಿಂದ ಅಸಮಾಧಾನಗೊಂಡ ಸಚಿವ ತಂಗಡಗಿ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, “ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಅಧಿಕಾರಿಗಳಾಗಿ ಇಲ್ಲಿ ಏಕೆ ಇರಬೇಕು? ಮತ್ತೆ ಇಂತಹ ದೂರುಗಳು ಬಂದರೆ ಅಮಾನತು ಕ್ರಮ ಕೈಗೊಳ್ಳಲಾಗುವುದು” ಎಂದು ಖಡಕ್ ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಸ್ಪಂದಿಸದಿದ್ದರೆ ಸಾರ್ವಜನಿಕರು ನೇರವಾಗಿ ತಮ್ಮನ್ನು ಸಂಪರ್ಕಿಸುವಂತೆ ಸಚಿವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್, ಕನಕಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸಂತ್ ಗೌಡ, ತಹಸೀಲ್ದಾರ್ ಚಂದ್ರಶೇಖರ್ ಗಾಳಿ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

0

ಜಕಾರ್ತಾ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಭೂಕಂಪದ ಪರಿಣಾಮ ಹಲವು ಮನೆಗಳು ಹಾಗೂ ಕಟ್ಟಡಗಳು ಕುಸಿದು ಭಾರೀ ಹಾನಿಯಾಗಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಪ್ರಕಾರ, ಇಂಡೋನೇಷ್ಯಾ ಸಮಯ ಬೆಳಿಗ್ಗೆ 5:58ಕ್ಕೆ ಫ್ಲೋರ್ಸ್ ಪ್ರದೇಶದಲ್ಲಿ ಭೂಮಿಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದ ತೀವ್ರತೆಗೆ ಕಟ್ಟಡಗಳು ಕುಸಿಯುತ್ತಿದ್ದಂತೆ ಜನರು ಭಯಭೀತರಾಗಿ ರಸ್ತೆಗಳತ್ತ ಓಡಿ ಜೀವ ಉಳಿಸಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಭೂಕಂಪದ ಬಳಿಕ ಇಂಡೋನೇಷ್ಯಾದ ಹವಾಮಾನಶಾಸ್ತ್ರ ಮತ್ತು ಭೂಭೌತಶಾಸ್ತ್ರ ಸಂಸ್ಥೆ (BMKG) ಸುನಾಮಿ ಅಲೆಗಳ ಸಾಧ್ಯತೆಯ ಬಗ್ಗೆ ಮುನ್ನೆಚ್ಚರಿಕೆ ನೀಡಿತ್ತು. ಕರಾವಳಿ ಪ್ರದೇಶದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿತ್ತು. ಬಳಿಕ ಪರಿಸ್ಥಿತಿ ಪರಿಶೀಲಿಸಿದ ಅಧಿಕಾರಿಗಳು ಸುನಾಮಿ ಎಚ್ಚರಿಕೆಯನ್ನು ಹಿಂತೆಗೆದುಕೊಂಡರು.

ಫ್ಲೋರ್ಸ್ ದ್ವೀಪವು ಭೂಕಂಪ ಪೀಡಿತ ಪ್ರದೇಶವಾಗಿದ್ದು, 1992ರಲ್ಲಿ ಇದೇ ಭಾಗದಲ್ಲಿ 7 ತೀವ್ರತೆಯ ಭೂಕಂಪ ಸಂಭವಿಸಿ ಸುಮಾರು 2,500 ಮಂದಿ ಮೃತಪಟ್ಟಿದ್ದರು. ಈಗಿನ ಭೂಕಂಪದ ಬಳಿಕ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹಾನಿಯ ಪ್ರಮಾಣ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ನಾನು ಸಚಿವನಾಗಿರುವುದೇ ಶ್ರೀರಾಮುಲುಗೆ ಹೊಟ್ಟೆಕಿಚ್ಚು: ಆರೋಪಗಳಿಗೆ ಸದನದಲ್ಲೇ ತಕ್ಕ ಉತ್ತರ ನೀಡುತ್ತೇನೆ ಎಂದ ಬಿ. ನಾಗೇಂದ್ರ

0

ಬಳ್ಳಾರಿ: ನಾನು ಸಚಿವನಾಗಿರುವುದನ್ನು ಮಾಜಿ ಸಚಿವ ಬಿ. ಶ್ರೀರಾಮುಲು ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ನನ್ನ ವಿರುದ್ಧ ವಿನಾಕಾರಣ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ. ನಾಗೇಂದ್ರ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಸ್ಪಷ್ಟನೆ ನೀಡಿದರು. ನನ್ನ ಮೇಲಿರುವುದು ಆರೋಪವೇ ಹೊರತು ನಾನು ಅಪರಾಧಿಯಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಕಾನೂನಾತ್ಮಕವಾಗಿ ನ್ಯಾಯಾಲಯದ ಮುಂದೆ ತಮ್ಮ ವಾದ ಮಂಡಿಸಲು ಎಲ್ಲರಿಗೂ ಅವಕಾಶವಿದೆ ಎಂದು ಹೇಳಿದರು.

ಸದನದಲ್ಲಿ ಪ್ರತಿಪಕ್ಷಗಳಿಗೆ ತಮ್ಮ ವಿರುದ್ಧ ಆರೋಪಗಳನ್ನು ಮಾಡುವುದು ಹಾಗೂ ಹೋರಾಟ ನಡೆಸುವುದು ಹಕ್ಕಾಗಿದೆ. ಅದನ್ನು ಸರ್ಕಾರ ಗೌರವಿಸುತ್ತದೆ. ಆದರೆ, ಮೊದಲು ಸದನದಲ್ಲಿ ಈ ವಿಚಾರ ಚರ್ಚೆಯಾಗಲಿ. ನನ್ನ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಿಗೆ ಸದನದಲ್ಲೇ ತಕ್ಕ ಉತ್ತರ ನೀಡುತ್ತೇನೆ ಎಂದು ಬಿ. ನಾಗೇಂದ್ರ ತಿಳಿಸಿದರು.

ರಾಜ್ಯ ಬಿಜೆಪಿ ಹಾಗೂ ಕೇಂದ್ರ ಸರ್ಕಾರದಲ್ಲಿಯೂ ಹಲವು ಸಚಿವರ ವಿರುದ್ಧ ಪ್ರಕರಣಗಳಿವೆ. ಹಾಗೆಂದು ಎಲ್ಲರೂ ರಾಜೀನಾಮೆ ನೀಡುವುದಿಲ್ಲ. ಕಾನೂನು ತನ್ನದೇ ಆದ ರೀತಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

ತಾವು ದಲಿತ ಕುಟುಂಬದಿಂದ ಬಂದಿರುವುದನ್ನು ಮುಂದಿಟ್ಟುಕೊಂಡು ತಮ್ಮನ್ನು ರಾಜಕೀಯವಾಗಿ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ನಾಗೇಂದ್ರ, ನಾನು ದಲಿತನೆಂಬುದಕ್ಕೆ ಹೆಮ್ಮೆಪಡುತ್ತೇನೆ. ಆದರೆ, ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬರಗಾಲ ಸೇರಿದಂತೆ ಹಲವು ಪ್ರಮುಖ ಸಮಸ್ಯೆಗಳಿವೆ. ಸರ್ಕಾರ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುತ್ತಿದೆ. ಪ್ರತಿಪಕ್ಷಗಳೂ ಜನರ ಸಮಸ್ಯೆಗಳ ಕುರಿತು ನಡೆಯುವ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಸಚಿವ ಬಿ. ನಾಗೇಂದ್ರ ಹೇಳಿದರು.

ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಕ್ಕೆ ಜಮೀರ್ ಗೈರು: ಖಾದರ್ ಸಮರ್ಥನೆ, ಚೌಟ ಆಕ್ರೋಶ

0

ಮಂಗಳೂರು: ಸ್ವಾತಂತ್ರ್ಯೋತ್ಸವದಂದು ಸಚಿವ ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮಕ್ಕೆ ಗೈರುಹಾಜರಾದ ವಿಚಾರ ಇದೀಗ ಆಡಳಿತ ಪಕ್ಷ ಮತ್ತು ಪ್ರತಿಪಕ್ಷದ ನಡುವೆ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಜಮೀರ್ ಪರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬ್ಯಾಟ್ ಬೀಸಿದ್ದರೆ, ಸಂಸದ ಬ್ರಿಜೇಶ್ ಚೌಟ ಸಚಿವರ ವಿರುದ್ಧ ಕಿಡಿಕಾರಿದ್ದಾರೆ.

ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಬಳಿಕ ಮಾತನಾಡಿದ ಯು.ಟಿ. ಖಾದರ್, ಜಮೀರ್ ಅಹ್ಮದ್ ಖಾನ್ ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗದೆ ಪತ್ರ ಬರೆದಿದ್ದಾರೆ. ಅವರ ಪತ್ರದ ಹಿಂದಿನ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು. ಕೆಲ ಪದಗಳನ್ನು ಮಾತ್ರ ಹಿಡಿದುಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುವುದು ಸರಿಯಲ್ಲ ಎಂದರು.

ಜಮೀರ್ ದೇಶದ ಸತ್ಪ್ರಜೆಯಾಗಿದ್ದು, ದೇಶಪ್ರೇಮ ಮತ್ತು ಸೌಹಾರ್ದತೆಯನ್ನು ಸದಾ ಎತ್ತಿಹಿಡಿದಿದ್ದಾರೆ. ಅವರ ದೇಶಪ್ರೇಮವನ್ನು ಪ್ರಶ್ನಿಸುವಂತಿಲ್ಲ ಎಂದು ಖಾದರ್ ಹೇಳಿದರು.

ಕಾರ್ಯಕ್ರಮಕ್ಕೆ ಜಮೀರ್ ಹಾಜರಾಗುತ್ತಾರೆ ಎಂಬ ಮಾಹಿತಿ ಆಧರಿಸಿ ಅವರನ್ನು ನಿಯೋಜಿಸಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಗೈರಾಗಬೇಕಾದ ಹಿನ್ನೆಲೆಯಲ್ಲಿ ಬದಲಿ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟಪಡಿಸಿದರು.

ಪಾನ್ ಮಸಾಲಾ ನಿಷೇಧದ ವಿಚಾರದಲ್ಲೂ ಮಾತನಾಡಿದ ಖಾದರ್, ತಂಬಾಕು, ನಿಕೋಟಿನ್ ಹಾಗೂ ಗುಟ್ಕಾ ಮಿಶ್ರಿತ ಉತ್ಪನ್ನಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ನಷ್ಟವಾಗುವುದಿಲ್ಲ ಎಂದು ಹೇಳಿದರು. 2014ರಲ್ಲಿ ಗುಟ್ಕಾ ನಿಷೇಧಿಸಿದ ಸಂದರ್ಭದಲ್ಲೂ ಅಡಿಕೆ ಬೆಲೆ ಕುಸಿಯಲಿದೆ ಎಂಬ ಅಪಪ್ರಚಾರ ನಡೆದಿತ್ತು. ಆದರೆ ಬಳಿಕ ಅಡಿಕೆ ಧಾರಣೆ ಹೆಚ್ಚಾಗಿತ್ತು ಎಂದು ಅವರು ತಿಳಿಸಿದರು.

ಆರೋಗ್ಯದ ಉದ್ದೇಶದಿಂದ ಕೈಗೊಂಡ ನಿರ್ಧಾರವನ್ನು ರಾಜಕೀಯಗೊಳಿಸಬಾರದು ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ ಖಾದರ್, ಧಾರ್ಮಿಕ ಸಭೆ-ಸಮಾರಂಭಗಳ ಕುರಿತು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದರು.

ಇತ್ತ ಸಂಸದ ಬ್ರಿಜೇಶ್ ಚೌಟ, ಜಮೀರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ಮಾಡಲು ಸಮಯವಿಲ್ಲ ಎಂಬ ರೀತಿಯ ಹೇಳಿಕೆ ಜವಾಬ್ದಾರಿಯುತ ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಡೀ ಕರ್ನಾಟಕದ ಜನತೆ ತಲೆತಗ್ಗಿಸುವಂತಹ ಹೇಳಿಕೆಯನ್ನು ಸಚಿವರು ನೀಡಿದ್ದಾರೆ. ಮುಖ್ಯಮಂತ್ರಿಗಳು ಜಮೀರ್ ಅವರನ್ನು ಸಚಿವ ಸಂಪುಟದಿಂದ ತಕ್ಷಣ ವಜಾಗೊಳಿಸಬೇಕಿತ್ತು. ಅವರ ಕೋರಿಕೆಯನ್ನು ಮನ್ನಿಸಿ ಬದಲಿಗೆ ಮತ್ತೊಬ್ಬರನ್ನು ಧ್ವಜಾರೋಹಣಕ್ಕೆ ನೇಮಿಸಿರುವುದು ರಾಜ್ಯಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಚೌಟ ವಾಗ್ದಾಳಿ ನಡೆಸಿದರು.

ಜಮೀರ್ ಗೈರುಹಾಜರಿ ಸುತ್ತ ಆಡಳಿತ ಪಕ್ಷದ ಸಮರ್ಥನೆ ಮತ್ತು ಪ್ರತಿಪಕ್ಷದ ವಾಗ್ದಾಳಿ ಮುಂದುವರಿದಿದ್ದು, ಈ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

‘2028ರಲ್ಲಿ ಡಿಕೆಶಿ ಸಿಎಂ ಆಗೋದು ಖಚಿತ’: ಕಾಂಗ್ರೆಸ್ ನಾಯಕತ್ವದ ಬಗ್ಗೆ ಸಚಿವ ತಂಗಡಗಿ ವಿಶ್ವಾಸ

0

ಕೊಪ್ಪಳ: 2028ರ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಮುಂದುವರಿಯಲಿದೆ. ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಶಿವರಾಜ್ ಎಸ್. ತಂಗಡಗಿ ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್‌ನ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆ ವ್ಯಕ್ತಪಡಿಸುತ್ತಿರುವುದು ಸಹಜ. ಪ್ರತಿಯೊಬ್ಬ ಹಿರಿಯ ನಾಯಕನಿಗೂ ತನ್ನ ರಾಜಕೀಯ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕಿದೆ. ಆದರೆ 2028ರಲ್ಲೂ ಮುಖ್ಯಮಂತ್ರಿ ಸ್ಥಾನ ಡಿ.ಕೆ. ಶಿವಕುಮಾರ್ ಅವರದ್ದೇ ಎಂದು ತಂಗಡಗಿ ಹೇಳಿದ್ದಾರೆ.

ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಸಚಿವ ಸ್ಥಾನದ ಬೇಡಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಹಿಟ್ನಾಳ್ ಮುಂದಿನ ದಿನಗಳಲ್ಲಿ ಸಚಿವರಾಗುವ ವಿಶ್ವಾಸವಿದೆ ಎಂದರು. ಜಿಲ್ಲೆಯ ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಅಸಮಾಧಾನ ಅಥವಾ ಮುನಿಸಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಹೇಳಿದರು.

ಐದು ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡ ತಂಗಡಗಿ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರು ಇದೀಗ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಗ್ಯಾರಂಟಿ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಟೀಕಿಸಿದ ಅವರು, ತಮ್ಮ ಪಕ್ಷದೊಳಗಿನ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳುವಂತೆ ಬಿಜೆಪಿಗೆ ಸಲಹೆ ನೀಡಿದರು.

ಅಶೋಕ್, ಸುನೀಲ್ ಕುಮಾರ್ ಹಾಗೂ ಸಿ.ಟಿ. ರವಿ ಅವರ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳಿವೆ ಎಂದು ಆರೋಪಿಸಿದ ತಂಗಡಗಿ, ಬಿಜೆಪಿ ತನ್ನದೇ ಪಕ್ಷದ ಸಮಸ್ಯೆಗಳನ್ನು ಸರಿಪಡಿಸಿಕೊಂಡ ಬಳಿಕ ಕಾಂಗ್ರೆಸ್ ಕುರಿತು ಮಾತನಾಡಲಿ ಎಂದು ತಿರುಗೇಟು ನೀಡಿದರು.