Home Blog

NEET ಪ್ರತಿಭಟನೆ ಹಿಂಸಾಚಾರ ಪ್ರಕರಣಕ್ಕೆ ಬಿಗಿ ಕ್ರಮ: 117 ಶಂಕಿತರ ಫೋಟೋ ಬಿಡುಗಡೆ, ಸಾರ್ವಜನಿಕರ ನೆರವು ಕೋರಿದ ಪಾಟ್ನಾ ಪೊಲೀಸರು

0

ಪಾಟ್ನಾ: NEET ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ವಿದ್ಯಾರ್ಥಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದಲ್ಲಿ ಪಾಟ್ನಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕಲ್ಲು ತೂರಾಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 117 ಶಂಕಿತರ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ.

ಜುಲೈ 22ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ NEET ಪರೀಕ್ಷಾ ಅಕ್ರಮ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಬೃಹತ್ ಪ್ರತಿಭಟನೆ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದೀಗ ಹಿಂಸಾಚಾರಕ್ಕೆ ಕಾರಣರಾದವರ ಪತ್ತೆಗೆ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಬಿಹಾರ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ 117 ಶಂಕಿತರ ಚಿತ್ರಗಳನ್ನು ಹಂಚಿಕೊಂಡಿದ್ದು, ಇವರ ಗುರುತು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

NEET ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಗಾಂಧಿ ಮೈದಾನದಿಂದ ಬಿಹಾರ ವಿಧಾನಸಭೆಯತ್ತ ಬೃಹತ್ ಮೆರವಣಿಗೆ ನಡೆಸಿದ್ದರು.

ಈ ವೇಳೆ ಪ್ರತಿಭಟನಾಕಾರರ ಒಂದು ಗುಂಪು ಹಿಂಸಾಚಾರಕ್ಕೆ ಇಳಿದಿದ್ದು, ಭದ್ರತಾ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮೊದಲು ವಾಟರ್ ಕ್ಯಾನನ್ ಬಳಸಿ ಗುಂಪನ್ನು ಚದುರಿಸಲು ಪ್ರಯತ್ನಿಸಿದರು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಠಿಚಾರ್ಜ್ ನಡೆಸಲಾಯಿತು.

ಪ್ರತಿಭಟನಾಕಾರರ ಗುಂಪೊಂದು ಸ್ಥಳೀಯ ಬಿಜೆಪಿ ಕಚೇರಿ ಬಳಿ ತೆರಳಿ ಕಲ್ಲು ತೂರಾಟ ನಡೆಸಿದ ಘಟನೆ ಕೂಡ ವರದಿಯಾಗಿದೆ. ಬಳಿಕ ಪೊಲೀಸರು ಮತ್ತು ಸ್ಥಳೀಯರ ನೆರವಿನಿಂದ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.

ಸಿಸಿಟಿವಿ ದೃಶ್ಯಗಳು ಹಾಗೂ ವಿವಿಧ ವಿಡಿಯೋಗಳನ್ನು ಪರಿಶೀಲಿಸಿದ ಬಳಿಕ 117 ಶಂಕಿತರನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಶಂಕಿತರ ಗುರುತು ಪತ್ತೆಯಾದ ಬಳಿಕ ಕಾನೂನುಬಾಹಿರ ಕೃತ್ಯ, ಸಾರ್ವಜನಿಕ ಆಸ್ತಿ ಹಾನಿ ಹಾಗೂ ಗಲಭೆ ಆರೋಪಗಳಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಬಿಹಾರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಪ್ರಕರಣ ಇದೀಗ ಬಿಹಾರದ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ.

ಕಾಮಿಕ್ ಕಾನ್ ವೇದಿಕೆಯಲ್ಲಿ ರಾಕಿ ಭಾಯ್ ಅಬ್ಬರ: ಯಶ್ ನೋಡಲು ಮುಗಿಬಿದ್ದ ಅಭಿಮಾನಿಗಳು

ಕ್ಯಾಲಿಫೋರ್ನಿಯಾ: ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರ ಜಾಗತಿಕ ಜನಪ್ರಿಯತೆ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆಯುತ್ತಿರುವ ವಿಶ್ವದ ಪ್ರತಿಷ್ಠಿತ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಕಾರ್ಯಕ್ರಮದಲ್ಲಿ ಯಶ್ ಭಾಗವಹಿಸಿದ್ದು, ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಪಡೆದುಕೊಂಡಿದ್ದಾರೆ.

‘ರಾಮಾಯಣ’ ಚಿತ್ರದ ಪ್ರಚಾರದ ಭಾಗವಾಗಿ ಈ ಅಂತರರಾಷ್ಟ್ರೀಯ ವೇದಿಕೆಗೆ ಆಗಮಿಸಿದ ಯಶ್ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಯಶ್ ವೇದಿಕೆಗೆ ಬರುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.

ಅಭಿಮಾನಿಗಳು ತಮ್ಮ ಮೊಬೈಲ್‌ಗಳಲ್ಲಿ ಯಶ್ ಅವರ ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿಯಲು ಮುಗಿಬಿದ್ದಿದ್ದು, ಅವರೊಂದಿಗೆ ಸೆಲ್ಫಿ ಪಡೆಯಲು ದೊಡ್ಡ ಸಾಲು ಕಂಡುಬಂತು. ‘ರಾಮಾಯಣ’ ಪ್ರಚಾರದ ನಡುವೆ ಯಶ್ ಅವರ ಮುಂಬರುವ ‘ಟಾಕ್ಸಿಕ್’ ಸಿನಿಮಾ ಕೂಡ ಅಭಿಮಾನಿಗಳ ಗಮನ ಸೆಳೆದಿದೆ.

ಚಿತ್ರದ ಜನಪ್ರಿಯ ಒನ್-ಲೈನರ್ ‘ಡ್ಯಾಡಿಸ್ ಹೋಂ’ ಕಾಮಿಕ್ ಕಾನ್ ವೇದಿಕೆಯ ಬಳಿಕ ಮತ್ತೆ ಟ್ರೆಂಡ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಭರ್ಜರಿ ಸಂಭ್ರಮ ವ್ಯಕ್ತಪಡಿಸುತ್ತಿದ್ದಾರೆ.

‘ಕೆಜಿಎಫ್’ ಮೂಲಕ ವಿಶ್ವಾದ್ಯಂತ ಗುರುತಿಸಿಕೊಂಡಿರುವ ಯಶ್, ಇದೀಗ ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಮೂಲಕ ಮತ್ತೊಂದು ಹಂತದ ಜಾಗತಿಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ನಟಿಸುವುದರ ಜೊತೆಗೆ ನಿರ್ಮಾಪಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರ ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬರಲಿದೆ. ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ವೇದಿಕೆಯಲ್ಲಿ ಯಶ್ ಅವರ ಹಾಜರಾತಿ ಕನ್ನಡ ಚಿತ್ರರಂಗದ ಜಾಗತಿಕ ಬೆಳವಣಿಗೆಗೆ ಮತ್ತೊಂದು ದೊಡ್ಡ ಸಾಕ್ಷಿಯಾಗಿದೆ.

‘ನಮ್ಮ ಭಿನ್ನಾಭಿಪ್ರಾಯಕ್ಕಿಂತ ಸಿನಿಮಾ ಮುಖ್ಯ’: ಡಬ್ಬಿಂಗ್ ವಿವಾದದ ನಡುವೆಯೂ ‘ಕರಾವಳಿ’ಗೆ ಶುಭ ಹಾರೈಸಿದ ಪ್ರಜ್ವಲ್

ಬೆಂಗಳೂರು: ‘ಕರಾವಳಿ’ ಚಿತ್ರದ ಡಬ್ಬಿಂಗ್ ವಿವಾದದ ಬಗ್ಗೆ ನಟ ಪ್ರಜ್ವಲ್ ದೇವರಾಜ್ ತಮ್ಮ ನಿಲುವು ಬಹಿರಂಗಪಡಿಸಿದ್ದು, ವೈಯಕ್ತಿಕ ಭಿನ್ನಾಭಿಪ್ರಾಯಗಳಿಗಿಂತ ಸಿನಿಮಾ ಮತ್ತು ಚಿತ್ರತಂಡದ ಶ್ರಮ ಮುಖ್ಯ ಎಂದು ಹೇಳಿದ್ದಾರೆ.

ಜುಲೈ 24ರಂದು ತೆರೆಗೆ ಬಂದಿರುವ ‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ ಶೆಟ್ಟಿ, ಮಿತ್ರ ಹಾಗೂ ರಮೇಶ್ ಅರವಿಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದ ಈ ಸಿನಿಮಾ ಬಿಡುಗಡೆಗೂ ಮುನ್ನ ಹಲವು ಕಾರಣಗಳಿಂದ ಸುದ್ದಿಯಲ್ಲಿತ್ತು.

ವಿಶೇಷವಾಗಿ ಪ್ರಜ್ವಲ್ ದೇವರಾಜ್ ಅವರ ಪಾತ್ರಕ್ಕೆ ಅವರೇ ಧ್ವನಿ ನೀಡದೇ, ಬೇರೊಬ್ಬರಿಂದ ಡಬ್ಬಿಂಗ್ ಮಾಡಿಸಿರುವ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಪ್ರಜ್ವಲ್, ನಟನ ಧ್ವನಿ ಕೂಡ ಅವರ ಕಲಾತ್ಮಕ ಹಕ್ಕಿನ ಭಾಗವಾಗಿದೆ ಎಂದು ಹೇಳಿದ್ದಾರೆ.

“ನನ್ನ ಅನುಮತಿ ಇಲ್ಲದೆ ನನ್ನ ಪಾತ್ರಕ್ಕೆ ಬೇರೆ ಧ್ವನಿ ಬಳಸಿರುವುದು ಬೇಸರದ ಸಂಗತಿ. ಆದರೆ ಅದಕ್ಕಾಗಿ ಸಿನಿಮಾವನ್ನೇ ನಿಲ್ಲಿಸುವ ನಿರ್ಧಾರ ನಾನು ತೆಗೆದುಕೊಳ್ಳಲಿಲ್ಲ” ಎಂದು ಅವರು ತಿಳಿಸಿದ್ದಾರೆ.

ಸಿನಿಮಾ ಬಿಡುಗಡೆ ತಡೆಯಲು ನ್ಯಾಯಾಲಯದ ಮೊರೆ ಹೋಗುವ ಅವಕಾಶ ಇತ್ತು ಎಂದು ಹೇಳಿದ ಪ್ರಜ್ವಲ್, ಆ ಮಾರ್ಗವನ್ನು ಆಯ್ಕೆ ಮಾಡಲಿಲ್ಲ ಎಂದಿದ್ದಾರೆ.

“ಈ ಸಿನಿಮಾದ ಹಿಂದೆ ಹಲವು ಜನರ ಪರಿಶ್ರಮ ಇದೆ. ಕಲಾವಿದರು, ತಂತ್ರಜ್ಞರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ನನ್ನ ವೈಯಕ್ತಿಕ ಸಮಸ್ಯೆಗಾಗಿ ಎಲ್ಲರ ಶ್ರಮಕ್ಕೆ ಧಕ್ಕೆ ತರುವುದು ನನಗೆ ಇಷ್ಟವಿರಲಿಲ್ಲ” ಎಂದು ಹೇಳಿದ್ದಾರೆ.

‘ಕರಾವಳಿ’ ಬಗ್ಗೆ ತಮಗೆ ಆರಂಭದಿಂದಲೂ ದೊಡ್ಡ ಕನಸು ಮತ್ತು ನಿರೀಕ್ಷೆ ಇತ್ತು. ಕನ್ನಡ ಚಿತ್ರರಂಗಕ್ಕೆ ವಿಭಿನ್ನವಾದ ಸಿನಿಮಾ ನೀಡಬೇಕು ಎಂಬ ಉದ್ದೇಶದಿಂದ ಎಲ್ಲರೂ ಕೆಲಸ ಮಾಡಿದ್ದೇವೆ ಎಂದು ಪ್ರಜ್ವಲ್ ತಿಳಿಸಿದ್ದಾರೆ.

ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವುದು ಸಂತಸ ತಂದಿದೆ. ಆದರೆ, ಸಂಪೂರ್ಣವಾಗಿ ಸಿನಿಮಾದ ಭಾಗವಾಗಲು ಸಾಧ್ಯವಾಗದಿರುವುದು ನೋವು ತಂದಿದೆ ಎಂದು ಅವರು ಹೇಳಿದ್ದಾರೆ.

“ಮನುಷ್ಯರ ನಡುವಿನ ಭಿನ್ನಾಭಿಪ್ರಾಯಗಳು ಕ್ಷಣಿಕ. ಆದರೆ ಒಂದು ಸಿನಿಮಾ ಮತ್ತು ಅದರ ಯಶಸ್ಸು ಎಲ್ಲರಿಗಿಂತ ದೊಡ್ಡದು” ಎಂದು ಪ್ರಜ್ವಲ್ ದೇವರಾಜ್ ತಮ್ಮ ಮಾತು ಮುಗಿಸಿದ್ದಾರೆ. ‘ಕರಾವಳಿ’ ಡಬ್ಬಿಂಗ್ ವಿವಾದವು ಬಿಡುಗಡೆಗೂ ಮುನ್ನ ಭಾರೀ ಚರ್ಚೆಗೆ ಕಾರಣವಾಗಿದ್ದರೂ, ಇದೀಗ ಚಿತ್ರತಂಡದ ಗಮನ ಸಿನಿಮಾ ಯಶಸ್ಸಿನತ್ತ ನೆಟ್ಟಿದೆ.

ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಕ್ರಮಗಳು ಸಮಾಧಾನ ತಂದಿವೆ; ಆರೋಪಿಗಳ ವಿರುದ್ಧ ಕಠಿಣ ಕ್ರಮ ಅಗತ್ಯ – ಸುನೀಲ್ ಕುಮಾರ್

ಬೆಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆ ಸಮಾಧಾನ ತಂದಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ನೀಟ್ ಹಗರಣದ ತನಿಖೆಗೆ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದ್ದು, ಮರು ಪರೀಕ್ಷೆಯನ್ನೂ ನಡೆಸಿ ಯಶಸ್ವಿಯಾಗಿ ಫಲಿತಾಂಶ ಪ್ರಕಟಿಸಲಾಗಿದೆ. ಇದೀಗ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದೆ ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಹೇಳಿಕೆ ವಿದ್ಯಾರ್ಥಿಗಳಿಗೆ ಸಮಾಧಾನ ತಂದಿದೆ. ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ಹೋರಾಟ ನಡೆಸುವುದು ಸರಿಯಾದ ಕ್ರಮ, ಆದರೆ ಅದರ ರಾಜಕೀಯ ಲಾಭ ಪಡೆಯಲು ವಿರೋಧ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಸುನೀಲ್ ಕುಮಾರ್ ಆರೋಪಿಸಿದರು.

ಈಗಾಗಲೇ ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದ ವಿಪಕ್ಷಗಳು: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ!

0

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಐದನೇ ದಿನವೂ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರವಾಗಿ ಲೋಕಸಭೆಯಲ್ಲಿ ಗದ್ದಲ ಮುಂದುವರಿದಿದ್ದು, ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಯವರೆಗೆ ಮುಂದೂಡಲಾಗಿದೆ.

ನೀಟ್ ಪರೀಕ್ಷಾ ಅಕ್ರಮ ಪ್ರಕರಣದ ಕುರಿತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಸದಸ್ಯರು ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನೆ ನಡೆಸಿದರು.

ನೀಟ್ ಪ್ರಕರಣದ ಕುರಿತು ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದರೂ, ಚರ್ಚೆಗೂ ಮುನ್ನವೇ ಶಿಕ್ಷಣ ಸಚಿವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದವು. ಈ ವೇಳೆ ಸದನದಲ್ಲಿ ಭಾರಿ ಗದ್ದಲ ಉಂಟಾಯಿತು.

ಮಧ್ಯಾಹ್ನ 12 ಗಂಟೆಗೆ ಲೋಕಸಭೆ ಪುನಾರಂಭಗೊಂಡ ಕೆಲವೇ ಕ್ಷಣಗಳಲ್ಲಿ ವಿರೋಧ ಪಕ್ಷದ ಸದಸ್ಯರು “Education Minister Resign”, “ಇಸ್ತೀಫಾ, ಇಸ್ತೀಫಾ” ಎಂದು ಘೋಷಣೆ ಕೂಗಿದರು. ಕೆಲ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು ಮುಂದೂಡಿದರು.

ಇದಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾತನಾಡಿ, ನೀಟ್ ವಿಚಾರದಲ್ಲಿ ಚರ್ಚೆಗೆ ವಿರೋಧ ಪಕ್ಷಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಚರ್ಚೆಯಿಂದ ದೂರ ಉಳಿಯಲು ಕಾರಣಗಳನ್ನು ಹುಡುಕುವುದು ದೇಶಕ್ಕೆ ತಪ್ಪು ಸಂದೇಶ ನೀಡುತ್ತದೆ ಎಂದು ಹೇಳಿದರು.

ಸದನದ ಅಧ್ಯಕ್ಷತೆ ವಹಿಸಿದ್ದ ಜಗದಂಬಿಕಾ ಪಾಲ್ ಅವರು, ಪ್ರತಿಭಟನೆ ಕೈಬಿಟ್ಟು ಕಲಾಪ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ಸದಸ್ಯರಲ್ಲಿ ಮನವಿ ಮಾಡಿದರು. ಸರ್ಕಾರ ಚರ್ಚೆಗೆ ಸಿದ್ಧವಿದೆ ಎಂದು ತಿಳಿಸಿದ ಅವರು, ತಮ್ಮ ಅಭಿಪ್ರಾಯಗಳನ್ನು ಸ್ಪೀಕರ್ ಓಂ ಬಿರ್ಲಾ ಅವರ ಗಮನಕ್ಕೆ ತರುವಂತೆ ಸಲಹೆ ನೀಡಿದರು.

ಆದರೆ, ವಿರೋಧ ಪಕ್ಷದ ಸದಸ್ಯರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಘೋಷಣೆ ಮುಂದುವರಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಸೋಮವಾರದವರೆಗೆ ಮುಂದೂಡಲಾಗಿದೆ.

ಹೆಲ್ಮೆಟ್ ಧರಿಸದಿದ್ದನ್ನು ಪ್ರಶ್ನಿಸಿದ್ದಕ್ಕೆ ನ್ಯಾಯಾಧೀಶರ ಕಾರು ತಡೆದು ಗಲಾಟೆ: ಮಾಲೂರಿನಲ್ಲಿ ಮೂವರ ಬಂಧನ

0

ಕೋಲಾರ: ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಮಾಲೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಕಾರನ್ನು ತಡೆದು ಗಲಾಟೆ ನಡೆಸಿದ ಆರೋಪದ ಮೇಲೆ ಮೂವರನ್ನು ಮಾಲೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಾಲೂರು ನಗರದ ಕೆ.ಎಂ. ವಿನಯ್ (24), ಅವರ ತಾಯಿ ಕವಿತಾ (47) ಹಾಗೂ ತಾತ ವೆಂಕಟೇಶ್ (69) ಎಂದು ಗುರುತಿಸಲಾಗಿದೆ.

ಜುಲೈ 19ರಂದು ವಿನಯ್ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಮಾಲೂರು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಗಾಯತ್ರಿ ಅವರ ಕಾರಿಗೆ ಅಡ್ಡ ಬಂದಿದ್ದರು. ಅಲ್ಲದೆ, ಬೈಕ್ ಸವಾರ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಗಮನಿಸಿದ ನ್ಯಾಯಾಧೀಶರು ಸಂಚಾರ ನಿಯಮ ಪಾಲಿಸುವಂತೆ ಪ್ರಶ್ನಿಸಿದ್ದರು.

ಈ ವೇಳೆ ಆಕ್ರೋಶಗೊಂಡ ವಿನಯ್ ನ್ಯಾಯಾಧೀಶರ ಕಾರನ್ನು ತಡೆದು ಗಲಾಟೆ ನಡೆಸಿದ್ದ ಎನ್ನಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ನ್ಯಾಯಾಧೀಶರು ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ನ್ಯಾಯಾಧೀಶರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ, ಸಂಚಾರ ನಿಯಮ ಉಲ್ಲಂಘನೆ, ವಾಹನಕ್ಕೆ ಹಾನಿ ಉಂಟುಮಾಡಿದ ಆರೋಪ, ಅಸಭ್ಯ ವರ್ತನೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪಗಳ ಅಡಿ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಮೂವರನ್ನೂ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದಕ್ಕಾಗಿ ದ್ವಿಚಕ್ರ ವಾಹನ ಸವಾರನಿಗೆ 6 ಸಾವಿರ ರೂ. ದಂಡ ವಿಧಿಸಲಾಗಿದೆ.

ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಪೆರೋಲ್ ಸಾಧ್ಯವಿಲ್ಲ; ಕಾರಾಗೃಹ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೆ ಪೆರೋಲ್ ಮಂಜೂರು ಮಾಡುವ ಅಧಿಕಾರ ಕಾರಾಗೃಹ ಇಲಾಖೆಗೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಟುಂಬಸ್ಥರು ಪುಣ್ಯತಿಥಿಯ ಅಂಗವಾಗಿ ಪೂಜೆ ನೆರವೇರಿಸಲು ಪ್ರಜ್ವಲ್ ರೇವಣ್ಣ ಅವರನ್ನು ಜೈಲಿನಿಂದ ಹೊರತರುವ ಪ್ರಯತ್ನ ನಡೆಸಿದ್ದರು. ಆದರೆ, ಕಾರಾಗೃಹ ಇಲಾಖೆ ಅಧಿಕಾರ ವ್ಯಾಪ್ತಿಯ ಮಿತಿಯನ್ನು ಉಲ್ಲೇಖಿಸಿ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ಪೆರೋಲ್ ಮಂಜೂರು ಮಾಡುವಂತೆ ನ್ಯಾಯಾಲಯದ ಮೊರೆ ಹೋಗುವ ಕುರಿತು ಕುಟುಂಬಸ್ಥರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 15 ದಿನಗಳ ಪೆರೋಲ್ ದೊರೆತರೆ, 30ರಂದು ನಡೆಯಲಿರುವ ಪುಣ್ಯತಿಥಿ ಅಥವಾ ಅದಕ್ಕೂ ಮುನ್ನದ ದಿನ ಸಮಾಧಿ ಬಳಿ ಕರೆದುಕೊಂಡು ಹೋಗಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಉದ್ದೇಶ ಕುಟುಂಬದದ್ದಾಗಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ, ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರು ಭೇಟಿ ಮಾಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅನುಮತಿ ನೀಡಿತ್ತು.

ನ್ಯಾಯಾಲಯದ ಆದೇಶದಂತೆ, ಜೈಲು ಮುಖ್ಯ ಅಧೀಕ್ಷಕರು ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಭೇಟಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿ ವೇಳೆ ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಯಾವುದೇ ಕಾರಣಕ್ಕೆ ಭೇಟಿಗೆ ಅವಕಾಶ ನಿರಾಕರಿಸಿದರೆ, ಅದರ ಕಾರಣವನ್ನು ಸಂಬಂಧಿತ ಕೈದಿಗೆ ಲಿಖಿತ ರೂಪದಲ್ಲಿ ತಿಳಿಸಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ನಿರ್ದೇಶನ ನೀಡಿದೆ.

ನೀಟ್ ಅಕ್ರಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ; ರಾಜೀನಾಮೆ ಅಲ್ಲ, ಶಾಶ್ವತ ಪರಿಹಾರವೇ ಗುರಿ – ಪ್ರಲ್ಹಾದ್ ಜೋಶಿ

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಹಾಗೂ ಅದನ್ನು ಸುತ್ತುವರಿದಿರುವ ರಾಜಕೀಯ ಬೆಳವಣಿಗೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, 2024ರ ಸಾರ್ವಜನಿಕ ಪರೀಕ್ಷೆಗಳು (ಅನುಚಿತ ವಿಧಾನಗಳ ತಡೆ) ಕಾಯ್ದೆಯನ್ನು ಉಲ್ಲೇಖಿಸಿ, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹1 ಕೋಟಿ ದಂಡ ವಿಧಿಸುವ ಕಠಿಣ ಕಾನೂನು ಈಗ ಜಾರಿಯಲ್ಲಿದೆ ಎಂದು ತಿಳಿಸಿದರು.

ವಿರೋಧ ಪಕ್ಷಗಳು, ವಿಶೇಷವಾಗಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರು ಮಾಡುತ್ತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಪ್ರಶ್ನೆಪತ್ರಿಕೆ ಸೋರಿಕೆಗಳು ನಡೆದಾಗ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿರಲಿಲ್ಲ ಎಂದು ಆರೋಪಿಸಿದರು.

ಯುಪಿಎ ಆಡಳಿತದ ಅವಧಿಯಲ್ಲಿ 58 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ರಾಜಸ್ಥಾನದಲ್ಲಿ ಕಳೆದ ಐದು ವರ್ಷಗಳಲ್ಲಿ 19 ಬಾರಿ ಇಂತಹ ಘಟನೆಗಳು ನಡೆದಿವೆ ಎಂದು ಉದಾಹರಣೆ ನೀಡಿದ ಅವರು, ಮೋದಿ ಸರ್ಕಾರ ಮಾತ್ರ ಕಠಿಣ ಕಾನೂನು ಜಾರಿಗೆ ತಂದು, ಫಾಸ್ಟ್‌ ಟ್ರ್ಯಾಕ್ ನ್ಯಾಯಾಲಯಗಳ ಸ್ಥಾಪನೆ ಸೇರಿದಂತೆ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆಗಳನ್ನು ತರಲು ಕ್ರಮ ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು.

ಮರು ಪರೀಕ್ಷೆಗಳನ್ನು 38 ದಿನಗಳೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಹಾಗೂ 11 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಸರ್ಕಾರದ ಮೊದಲ ಆದ್ಯತೆ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆಸುವುದಾಗಿದೆ. ಇದು ಒಬ್ಬರ ರಾಜೀನಾಮೆಯಿಂದ ಪರಿಹಾರವಾಗುವ ಸಮಸ್ಯೆಯಲ್ಲ; ಪರೀಕ್ಷಾ ವ್ಯವಸ್ಥೆಯಲ್ಲಿ ದೀರ್ಘಕಾಲೀನ ಸುಧಾರಣೆಗಳನ್ನು ಜಾರಿಗೆ ತರುವುದೇ ಸರ್ಕಾರದ ಉದ್ದೇಶ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಪ್ರವಾಸೋದ್ಯಮ ಹೂಡಿಕೆಗೆ ಮುಕ್ತ ಆಹ್ವಾನ; ನಿಯಮ ಸರಳೀಕರಣ, ಉದ್ಯೋಗ ಸೃಷ್ಟಿಗೆ ಒತ್ತು – ಕೆ.ಜೆ. ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಂಡು ಖಾಸಗಿ ಹೂಡಿಕೆಯನ್ನು ಹೆಚ್ಚಿಸಲು ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದೆ ಎಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ನಗರದಲ್ಲಿ ನಡೆದ ಮೂರು ದಿನಗಳ ‘ಇಂಡಿಯನ್ ಇಂಟರ್‌ನ್ಯಾಷನಲ್ ಟ್ರಾವೆಲ್ ಮಾರ್ಟ್’ ಪ್ರದರ್ಶನದಲ್ಲಿ ಮಾತನಾಡಿದ ಅವರು, ಹೂಡಿಕೆದಾರರಿಗೆ ಆಡಳಿತಾತ್ಮಕ ತೊಡಕುಗಳು ಎದುರಾಗದಂತೆ ನೋಡಿಕೊಳ್ಳುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಅನಗತ್ಯ ನೌಕರಶಾಹಿ ನಿಯಮಗಳನ್ನು ಸಡಿಲಗೊಳಿಸಿ, ಏಕಗವಾಕ್ಷಿ (Single Window) ಮಂಜೂರಾತಿ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಜೊತೆಗೆ, ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ಆರಂಭಿಸುವ ಖಾಸಗಿ ಹೂಡಿಕೆದಾರರಿಗೆ ಆಕರ್ಷಕ ಸಬ್ಸಿಡಿ ಹಾಗೂ ವಿವಿಧ ಪ್ರೋತ್ಸಾಹಕ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ರಾಜ್ಯದಲ್ಲಿ ಸಾಹಸ ಪ್ರವಾಸೋದ್ಯಮ, ಕರಾವಳಿ ಕ್ರೂಸ್ (ಹಡಗು) ಪ್ರವಾಸೋದ್ಯಮ, ಪರಿಸರ ಸ್ನೇಹಿ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ರೆಸಾರ್ಟ್‌ಗಳ ನಿರ್ಮಾಣಕ್ಕೆ ಖಾಸಗಿ ವಲಯಕ್ಕೆ ಸರ್ಕಾರ ಮುಕ್ತ ಆಹ್ವಾನ ನೀಡಿದೆ. ಈ ಯೋಜನೆಗಳಿಂದ ರಾಜ್ಯಕ್ಕೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುವುದರ ಜೊತೆಗೆ ಸ್ಥಳೀಯ ಮಟ್ಟದಲ್ಲಿ ಲಕ್ಷಾಂತರ ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅವರು ತಿಳಿಸಿದರು.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಆಸಕ್ತಿ ಹೊಂದಿರುವ ಉದ್ಯಮಿಗಳಿಗೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ಆಡಳಿತಾತ್ಮಕ ಸಹಕಾರ ಮತ್ತು ಬೆಂಬಲ ನೀಡಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್ ಪುನರುಚ್ಚರಿಸಿದರು.

ಅಡ್ಡದಾರಿ ಅಲ್ಲ, ಪ್ರಾಮಾಣಿಕತೆಯೇ ಯಶಸ್ಸಿನ ದಾರಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಮೌನ ಮುರಿದ ಸಚಿನ್!

0

ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ದೇಶಾದ್ಯಂತ ಚರ್ಚೆ ಮುಂದುವರಿದಿರುವ ನಡುವೆ, ಭಾರತ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಈ ವಿಚಾರವಾಗಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿದ್ಯಾರ್ಥಿಗಳ ಆತಂಕ ಮತ್ತು ನಿರಾಶೆಯನ್ನು ಅರ್ಥಮಾಡಿಕೊಳ್ಳುವುದಾಗಿ ಹೇಳಿರುವ ಅವರು, ಪ್ರಾಮಾಣಿಕತೆ ಹಾಗೂ ಕಠಿಣ ಪರಿಶ್ರಮವೇ ಯಶಸ್ಸಿನ ನಿಜವಾದ ಮಾರ್ಗ ಎಂದು ಸಂದೇಶ ನೀಡಿದ್ದಾರೆ.

ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿನ್, ತಮ್ಮ ತಂದೆ ನೀಡಿದ ಜೀವನ ಪಾಠವನ್ನು ನೆನಪಿಸಿಕೊಂಡಿದ್ದಾರೆ.

“ನನ್ನ ತಂದೆ ಪ್ರಾಧ್ಯಾಪಕರಾಗಿದ್ದರು. ಬಾಲ್ಯದಲ್ಲಿಯೇ ಅವರು ನನಗೆ ಒಂದು ಅಮೂಲ್ಯ ಪಾಠ ಕಲಿಸಿದ್ದರು. ವಿಫಲತೆ ತಪ್ಪಲ್ಲ, ಆದರೆ ಮೋಸ ಮಾಡುವುದು ದೊಡ್ಡ ತಪ್ಪು. ಯಾವತ್ತೂ ಅಡ್ಡದಾರಿ ಹಿಡಿಯಬೇಡ ಎಂದು ಅವರು ಹೇಳುತ್ತಿದ್ದರು,” ಎಂದು ಸಚಿನ್ ಬರೆದುಕೊಂಡಿದ್ದಾರೆ.

ಸಮಾಜದಲ್ಲಿ ಕಠಿಣ ಪರಿಶ್ರಮಕ್ಕೆ ಗೌರವ ಸಿಗುವ ಸಂಸ್ಕೃತಿ ನಿರ್ಮಾಣವಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಫಲಿತಾಂಶಕ್ಕಿಂತ ಶ್ರಮ ಮತ್ತು ಅರ್ಹತೆಗೆ ಹೆಚ್ಚಿನ ಮೌಲ್ಯ ನೀಡುವ ವ್ಯವಸ್ಥೆ ನಿರ್ಮಿಸುವುದು ಎಲ್ಲರ ಜವಾಬ್ದಾರಿ ಎಂದಿದ್ದಾರೆ.

ವಿದ್ಯಾರ್ಥಿಗಳ ನಿರಾಶೆ ಸಹಜ. ಕಠಿಣ ಪರಿಶ್ರಮದ ಬಳಿಕವೂ ನಿರೀಕ್ಷಿತ ಫಲಿತಾಂಶ ಸಿಗದಿದ್ದಾಗ ಉಂಟಾಗುವ ನೋವನ್ನು ಅರ್ಥಮಾಡಿಕೊಳ್ಳಬಹುದು. ಆದರೆ ಇಂತಹ ಪರಿಸ್ಥಿತಿ ಮತ್ತೆ ಮರುಕಳಿಸದಂತೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಚಿನ್ ಕರೆ ನೀಡಿದ್ದಾರೆ.

ಯುವ ಭಾರತ ಅಪಾರ ಕನಸುಗಳು ಮತ್ತು ಸಾಮರ್ಥ್ಯ ಹೊಂದಿದೆ. ದೇಶದ ಭವಿಷ್ಯ ಯುವಕರ ಕೈಯಲ್ಲಿದ್ದು, ಅವರಿಗೆ ಸರಿಯಾದ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಪೋಷಕರು, ಶಿಕ್ಷಕರು, ಸ್ನೇಹಿತರು ಹಾಗೂ ಬಂಧುಗಳು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಯುವಕರು ಸದಾ ಉತ್ಸಾಹದಿಂದ ಮುನ್ನಡೆಯಲು ಸಹಕಾರ ನೀಡಬೇಕು. ಕಠಿಣ ಪರಿಶ್ರಮಕ್ಕೆ ಯೋಗ್ಯ ಗೌರವ ದೊರೆಯುವ ಹಾಗೂ ಪ್ರಾಮಾಣಿಕತೆಯನ್ನು ಪ್ರೋತ್ಸಾಹಿಸುವ ಸಮಾಜವನ್ನು ನಿರ್ಮಿಸಬೇಕಾಗಿದೆ ಎಂದು ಅವರು ಒತ್ತಿಹೇಳಿದ್ದಾರೆ.

“ಅಂತಿಮವಾಗಿ ಅರ್ಹತೆಯೇ ಗೆಲ್ಲುವಂತಹ ವ್ಯವಸ್ಥೆ ರೂಪಿಸಬೇಕು. ಮಕ್ಕಳ ಕನಸುಗಳು ಮತ್ತು ಭವಿಷ್ಯವನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಶಾಶ್ವತ ಪರಿಹಾರಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ. ಜೈ ಹಿಂದ್,” ಎಂದು ಸಚಿನ್ ತಮ್ಮ ಸಂದೇಶವನ್ನು ಮುಕ್ತಾಯಗೊಳಿಸಿದ್ದಾರೆ.