Home Blog

ತೆರಿಗೆ ವಸೂಲಿಗೆ ಚುರುಕು; ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ನರಗುಂದ: ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಎಚ್ಚರಿಕೆ ನೀಡಿದರು.

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಕರವಸೂಲಿಗಾರರು ಹಾಗೂ ವಾಟರ್‌ಮನ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ಬಾಕಿದಾರರ ಪಟ್ಟಿಯನ್ನು ಸಿದ್ಧಪಡಿಸಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಮೂಲಕ ಮುಂಚಿತವಾಗಿ ಮಾಹಿತಿ ನೀಡಿ ವಸೂಲಾತಿ ಕಾರ್ಯ ಚುರುಕುಗೊಳಿಸಬೇಕು. ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳಿಗೆ ತೆರಳುವ ಮುನ್ನವೇ ಮನೆಗಳಿಗೆ ಭೇಟಿ ನೀಡಿ ತೆರಿಗೆ ವಸೂಲಿ ಮಾಡುವಂತೆ ಸೂಚಿಸಿದರು.

ವಸೂಲಾದ ತೆರಿಗೆ ಮೊತ್ತವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಗ್ರಾಮ ಪಂಚಾಯಿತಿಗಳು ಉತ್ತಮ ಮೂಲಸೌಕರ್ಯ ಹಾಗೂ ಸೇವೆಗಳನ್ನು ಒದಗಿಸಿದಾಗ ಜನರು ಸ್ವಯಂಪ್ರೇರಿತವಾಗಿ ತೆರಿಗೆ ಪಾವತಿಸುತ್ತಾರೆ. ಆದರೆ ಕಡಿಮೆ ತೆರಿಗೆ ವಸೂಲಾತಿಗೆ ಕರವಸೂಲಿಗಾರರನ್ನೇ ಹೊಣೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕಡಿಮೆ ತೆರಿಗೆ ವಸೂಲಾತಿ ಮಾಡಿರುವ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ಪ್ರಶ್ನಿಸಿದ ಅವರು, ವಸೂಲಾತಿ ಕುಂಠಿತವಾಗಲು ಕಾರಣವೇನು, ಈ ಕುರಿತು ಪಿಡಿಒಗಳ ಗಮನಕ್ಕೆ ತಂದಿದ್ದೀರಾ ಎಂದು ವಿಚಾರಿಸಿದರು. ಮುಂದೆಯೂ ಇದೇ ಪರಿಸ್ಥಿತಿ ಮುಂದುವರಿದರೆ ಶಿಸ್ತುಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.

ವಾಟರ್‌ಮನ್‌ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಕೊರತೆಯಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಮೂಲಗಳ ಸಂರಕ್ಷಣೆ ಹಾಗೂ ನೀರಿನ ಮಿತ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಸಂಬಂಧಿತ ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಉತ್ತಮ ಸಾಧಕರಿಗೆ ಗೌರವ

ಸಭೆಯಲ್ಲಿ ಜೂನ್ ತಿಂಗಳಲ್ಲಿ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕೊಣ್ಣೂರು, ಹುಣಶಿಕಟ್ಟಿ, ಶಿರೋಳ ಹಾಗೂ ವಾಸನ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರನ್ನು ತಾಲೂಕು ಪಂಚಾಯಿತಿ ವತಿಯಿಂದ ‘ಜನಾಭಿಪ್ರಾಯ ಚಪ್ಪಾಳೆ’ ಕಾರ್ಯಕ್ರಮದಡಿ ಶಾಲು ಹೊದಿಸಿ, ಮಾಲೆ ಹಾಕಿ ಸಭೆಯಲ್ಲಿ ಉಪಸ್ಥಿತರಿದ್ದವರಿಂದ ಚಪ್ಪಾಳೆ ತಟ್ಟಿಸುವ ಮೂಲಕ ಸನ್ಮಾನಿಸಲಾಯಿತು.

ಮುಂದಿನ ತಿಂಗಳುಗಳಲ್ಲಿಯೂ ಉತ್ತಮ ತೆರಿಗೆ ವಸೂಲಾತಿ ಸಾಧಿಸುವ ಕರವಸೂಲಿಗಾರರನ್ನು ಇದೇ ರೀತಿಯಲ್ಲಿ ಗೌರವಿಸಿ ಪ್ರೋತ್ಸಾಹಿಸಲಾಗುವುದು ಎಂದು ತಿಳಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಯೋಜನಾಧಿಕಾರಿ ಮಹಾಂತೇಶ್ ನಿಟ್ಟಾಲಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮ ಹಾದಿಮನಿ ಹಾಗೂ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಕರವಸೂಲಿಗಾರರು ಮತ್ತು ವಾಟರ್‌ಮನ್‌ಗಳು ಉಪಸ್ಥಿತರಿದ್ದರು.

“ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ತೆರಿಗೆ ವಸೂಲಾತಿ ಹೆಚ್ಚಳ ಅತ್ಯಗತ್ಯ. ಕಡಿಮೆ ತೆರಿಗೆ ಸಂಗ್ರಹಿಸುವ ಕರವಸೂಲಿಗಾರರ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ವಸೂಲಾತಿಯಲ್ಲಿ ಹಿನ್ನಡೆ ಮುಂದುವರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ, ನರಗುಂದ

ಜುಲೈ 23ರಂದು ಡಾ. ಬಸವರಾಜ್ ಬಳ್ಳಾರಿ ಜನ್ಮದಿನ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ಅಮ್ಮ ಫೌಂಡೇಶನ್‌ನ ಮಾರ್ಗದರ್ಶಕರೂ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಅಧ್ಯಕ್ಷರೂ ಆಗಿರುವ ಡಾ. ಬಸವರಾಜ್ ಬಳ್ಳಾರಿ ಅವರ 49ನೇ ಜನ್ಮದಿನದ ಅಂಗವಾಗಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 23ರಂದು ಗದಗ ಜಿಲ್ಲೆಯಲ್ಲಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ತಾಲೂಕಿನ ಆಯ್ದ ಸರ್ಕಾರಿ ಶಾಲೆಗಳ ಸುಮಾರು 1,000 ಬಡ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್ ಹಾಗೂ ಪೆನ್‌ಗಳನ್ನು ವಿತರಿಸಲಾಗುತ್ತದೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಗಳ ಕಿಟ್ ವಿತರಣೆ ಹಾಗೂ ‘ಹಸಿರೇ ಉಸಿರು’ ಧ್ಯೇಯದಡಿ 500 ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.

ಅದೇ ದಿನ ಗದಗದ ನೌಕರರ ಭವನದಲ್ಲಿ ರಕ್ತದಾನ ಶಿಬಿರ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಈ ಕುರಿತು ಅಮ್ಮ ಫೌಂಡೇಶನ್ ಅಧ್ಯಕ್ಷ ಹಾಗೂ ವಕೀಲ ಮೈಲಾರಪ್ಪ ಡಿ.ಎಚ್. ಮಾತನಾಡಿ, ಅಮ್ಮ ಫೌಂಡೇಶನ್ ಸಮಾಜಮುಖಿ ಕಾರ್ಯಗಳಿಗೆ ನಿರಂತರ ಆದ್ಯತೆ ನೀಡುತ್ತಿದ್ದು, ಈ ಬಾರಿ ಸರ್ಕಾರಿ ಶಾಲೆಗಳ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ನೆರವಿಗೆ ವಿಶೇಷ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳ ಆರ್ಥಿಕ ಹೊರೆ ಕಡಿಮೆ ಮಾಡಿ, ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಡಾ. ಬಸವರಾಜ್ ಬಳ್ಳಾರಿ ಅವರ ಜನ್ಮದಿನವನ್ನು ಸೇವಾ ಕಾರ್ಯಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮುಂದೆಯೂ ಸಮಾಜಮುಖಿ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲು ಮಾರ್ಗದರ್ಶಕರ ಮಾರ್ಗದರ್ಶನ ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಅಮ್ಮ ಫೌಂಡೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ.

ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ಸಹಿಸುವುದಿಲ್ಲ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: “ರಾಜ್ಯಪಾಲರ ಪ್ರವಾಸದ ವೇಳೆ ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ನಡೆಯಬಾರದು. ಅಧಿಕಾರಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಅವ್ಯವಸ್ಥೆ ಅಥವಾ ಲೋಪ ಕಂಡುಬಂದರೆ ಸಹಿಸಲಾಗುವುದಿಲ್ಲ” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜುಲೈ 23ರಂದು ನಡೆಯಲಿರುವ ಕರ್ನಾಟಕ ರಾಜ್ಯಪಾಲರ ಗಜೇಂದ್ರಗಡ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಪೂರ್ವಸಿದ್ಧತಾ ಹಾಗೂ ಶಿಷ್ಟಾಚಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯಪಾಲರ ಪ್ರವಾಸಕ್ಕೆ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳು ಶಿಷ್ಟಾಚಾರದಂತೆ ಹಾಗೂ ಯಾವುದೇ ಲೋಪವಿಲ್ಲದಂತೆ ನಡೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ರಾಜ್ಯಪಾಲರು ಸಂಚರಿಸುವ ಮಾರ್ಗದ ರಸ್ತೆಗಳು ಸಂಪೂರ್ಣ ಸುಸ್ಥಿತಿಯಲ್ಲಿರುವಂತೆ ಸಂಬಂಧಿಸಿದ ಇಲಾಖೆಗಳು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ರಸ್ತೆ ಮಾರ್ಗದಲ್ಲಿ ಯಾವುದೇ ಅಡಚಣೆ ಅಥವಾ ಸಂಚಾರ ದಟ್ಟಣೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಗಜೇಂದ್ರಗಡ ಪಟ್ಟಣದ ಟಿಟಿಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ಸಾಧ್ಯತೆ ಇರುವುದರಿಂದ ಜನಸಂದಣಿ ನಿಯಂತ್ರಣ, ವಾಹನ ನಿಲುಗಡೆ, ಕುಡಿಯುವ ನೀರು, ಆರೋಗ್ಯ ಸೇವೆ, ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ತಿಳಿಸಿದರು. ಅಗತ್ಯವಿದ್ದಲ್ಲಿ ಸಾರ್ವಜನಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ವೇದಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು. ಬ್ಯಾಕಪ್ ವ್ಯವಸ್ಥೆಯನ್ನೂ ಸಿದ್ಧವಾಗಿಟ್ಟುಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಅದೇ ರೀತಿ, ರಾಜ್ಯಪಾಲರ ಭದ್ರತೆ, ಶಿಷ್ಟಾಚಾರ, ವೈದ್ಯಕೀಯ ನೆರವು, ಸ್ವಚ್ಛತೆ, ಕುಡಿಯುವ ನೀರು, ಅಗ್ನಿಶಾಮಕ, ಸಂಚಾರ ನಿಯಂತ್ರಣ ಸೇರಿದಂತೆ ಪ್ರತಿಯೊಂದು ವಿಭಾಗವೂ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಜ್ಯಪಾಲರ ಪ್ರವಾಸದ ವೇಳಾಪಟ್ಟಿಯ ವಿವರಗಳನ್ನೂ ನೀಡಲಾಯಿತು. ಜುಲೈ 23ರಂದು ಬೆಳಿಗ್ಗೆ 9.15ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವ ರಾಜ್ಯಪಾಲರು, ರಸ್ತೆ ಮಾರ್ಗವಾಗಿ ಬೆಳಿಗ್ಗೆ 10.50ಕ್ಕೆ ಗಜೇಂದ್ರಗಡ ಪ್ರವಾಸಿ ಮಂದಿರಕ್ಕೆ ತಲುಪಲಿದ್ದಾರೆ. ಬಳಿಕ ಬೆಳಿಗ್ಗೆ 11.15ಕ್ಕೆ ಟಿಟಿಡಿ ಕಲ್ಯಾಣ ಮಂಟಪದ ಆವರಣದಲ್ಲಿ ನಡೆಯಲಿರುವ ಭಗವಾನ್ ಮಹಾವೀರ ಜೈನ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಮಧ್ಯಾಹ್ನ 2 ಗಂಟೆಗೆ ರಸ್ತೆ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿವೈಎಸ್‌ಪಿಗಳಾದ ಮಹಾಂತೇಶ್ ಸಜ್ಜನರ ಹಾಗೂ ಮುರ್ತುಜಾ ಖಾದ್ರಿ, ಸಹಾಯಕ ಆಯುಕ್ತ ಗಂಗಪ್ಪ, ತಹಶೀಲ್ದಾರರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

“ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಿ ರಾಜ್ಯಪಾಲರ ಪ್ರವಾಸವನ್ನು ಯಶಸ್ವಿಗೊಳಿಸಬೇಕು.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಕರ್ನಾಟಕದಲ್ಲಿ ಮಳೆ ಕೊರತೆ: 25 ಜಿಲ್ಲೆಗಳಲ್ಲಿ ಬರದ ಆತಂಕ, ರೈತರಿಗೆ ಸಂಕಷ್ಟ!

ಬೆಂಗಳೂರು: ಎಲ್‌ನಿನೋ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ದಕ್ಷಿಣ ಕನ್ನಡ, ಮೈಸೂರು, ಕೊಡಗು, ಉತ್ತರ ಕನ್ನಡ, ಉಡುಪಿ, ಮಂಡ್ಯ ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಬರದ ಆತಂಕ ಎದುರಾಗಿದೆ. ರಾಜ್ಯದ ಕೇವಲ ಐದು ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಯಷ್ಟು ಮಳೆಯಾಗಿದೆ ಎನ್ನಲಾಗಿದೆ. ಬೆಳಗಾವಿಯಲ್ಲೂ ಕಡಿಮೆ ಮಳೆಯ ಪರಿಣಾಮ ರೈತರು ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಅಲ್ಪ ಪ್ರಮಾಣದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ತಾತ್ಕಾಲಿಕವಾಗಿ ಕಡಿಮೆಯಾಗಿದ್ದರೂ, ಕೃಷಿಗೆ ಅಗತ್ಯವಾದ ನೀರಿನ ಕೊರತೆ ಮುಂದುವರಿದಿದೆ. ಜಲಾಶಯಗಳ ನೀರನ್ನು ಕೃಷಿಗೆ ಬಳಸಲು ರೈತರು ಸಂಕಷ್ಟ ಅನುಭವಿಸುವಂತಾಗಿದೆ.

ಇದರ ನಡುವೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಸುರಿದ ಮಳೆಯಿಂದ ಜಲಾಶಯದ ನೀರಿನ ಮಟ್ಟದಲ್ಲಿ 17 ಅಡಿ ಏರಿಕೆಯಾಗಿದೆ.

2,859 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯ ಭರ್ತಿಯಾಗಲು ಇನ್ನೂ 8 ಅಡಿ ಬಾಕಿ ಉಳಿದಿದೆ. ಸದ್ಯ ಜಲಾಶಯಕ್ಕೆ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಶೀಘ್ರದಲ್ಲೇ ಜಲಾಶಯ ತುಂಬುವ ಸಾಧ್ಯತೆ ಇದೆ.

ದೇವಸ್ಥಾನಕ್ಕಿಂತ ಶಾಲೆ ಕಟ್ಟಿದರೆ ಸಮಾಜ ಬೆಳೆಯುತ್ತದೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: “ಒಂದು ದೊಡ್ಡ ದೇವಸ್ಥಾನ ಕಟ್ಟುವುದಕ್ಕಿಂತ 10 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ನಿರ್ಮಿಸಿ. ಮಕ್ಕಳಿಗೆ ನೀಡುವ ಉತ್ತಮ ಶಿಕ್ಷಣವೇ ಸಮಾಜಕ್ಕೆ ನೀಡಬಹುದಾದ ಅತ್ಯುತ್ತಮ ಕೊಡುಗೆ” ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಉದ್ಯಮಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳಿಗೆ ಮನವಿ ಮಾಡಿದರು.

ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಿ, ಖಾಸಗಿ ಶಾಲೆಗಳಿಗೆ ಸಮಾನವಾಗಿ ರೂಪಿಸುವ ಉದ್ದೇಶದಿಂದ ಜಿಲ್ಲೆಯ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (KPS) ಅಭಿವೃದ್ಧಿಪಡಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಅವರು ಕರೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಸಿಎಸ್‌ಆರ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಎಲ್‌ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಸೂರಿನಡಿ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸುವುದು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ 20 ಕರ್ನಾಟಕ ಪಬ್ಲಿಕ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಉಳಿದ ಸುಮಾರು 700ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಕ್ಲಸ್ಟರ್ ಮಾದರಿಯಲ್ಲಿ ಸಂಯೋಜಿಸಿ 37 ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಖಾಸಗಿ ಶಾಲೆಗಳಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಸಾವಿರಾರು ರೂಪಾಯಿ ವೆಚ್ಚ ಮಾಡಲು ಸಾಧ್ಯವಾಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಉಚಿತವಾಗಿ ದೊರೆಯುವಂತೆ ಮಾಡುವುದೇ ಈ ಯೋಜನೆಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಪೊರೇಟ್ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯನ್ನು ಕೇವಲ ಸಣ್ಣಪುಟ್ಟ ಕಾಮಗಾರಿಗಳಿಗೆ ಸೀಮಿತಗೊಳಿಸದೆ, ಶಾಲಾ ಕಟ್ಟಡ, ಸ್ಮಾರ್ಟ್ ಕ್ಲಾಸ್‌ರೂಮ್‌, ಕಂಪ್ಯೂಟರ್ ಲ್ಯಾಬ್‌, ಗ್ರಂಥಾಲಯ, ಬಸ್ ಸೌಲಭ್ಯ, ಶೌಚಾಲಯ ನಿರ್ಮಾಣ ಹಾಗೂ ಶಿಕ್ಷಕರ ವೇತನ ಸೇರಿದಂತೆ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದು ಮನವಿ ಮಾಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಜಿಲ್ಲೆಯ ಕೆಪಿಎಸ್ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶ ಶೇ. 80ರಿಂದ ಶೇ. 90ಕ್ಕೂ ಅಧಿಕ ದಾಖಲಾಗುತ್ತಿದ್ದು, ಇನ್ನೂ 37 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯದ ವಿವರಗಳನ್ನು ಸಿದ್ಧಪಡಿಸಲಾಗಿದೆ ಎಂದರು.

ಪ್ರತಿಯೊಂದು ಶಾಲೆಗೆ ಅಗತ್ಯವಿರುವ ಕೊಠಡಿಗಳು, ಸ್ಮಾರ್ಟ್ ಕ್ಲಾಸ್‌ರೂಮ್‌, ಪ್ರಯೋಗಾಲಯ, ಸಾರಿಗೆ ಸೇರಿದಂತೆ ವಿವಿಧ ಸೌಲಭ್ಯಗಳ ಪಟ್ಟಿಯನ್ನು ಸಿದ್ಧಪಡಿಸಿ, ಕಂಪನಿಗಳಿಗೆ ಕಳುಹಿಸಿ ಸಿಎಸ್‌ಆರ್ ನೆರವು ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಾ. ಶರಣು ಗೊಗೇರಿ, ವಿವಿಧ ಉದ್ಯಮಿಗಳು ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

“ಒಂದು ದೊಡ್ಡ ದೇವಸ್ಥಾನ ಕಟ್ಟುವುದಕ್ಕಿಂತ 10 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಕಟ್ಟಬೇಕು. ಮಕ್ಕಳಿಗೆ ನೀಡುವ ಉತ್ತಮ ಶಿಕ್ಷಣವೇ ಸಮಾಜಕ್ಕೆ ನೀಡಬಹುದಾದ ಅತ್ಯುತ್ತಮ ಕೊಡುಗೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಹೊಲಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದ ಡಿಸಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬೆಳೆಗಳು ಬಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಮಂಗಳವಾರ ಹಗರಿಬೊಮ್ಮನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿ, ರೈತರ ಸಮಸ್ಯೆಗಳನ್ನು ಆಲಿಸಿದರು.

ಹೊಸಪೇಟೆಯಿಂದ ಬೆಳಿಗ್ಗೆ ಪ್ರವಾಸ ಆರಂಭಿಸಿದ ಜಿಲ್ಲಾಧಿಕಾರಿಗಳು ನಂದಿಬಂಡಿ, ಹಂಪಾಪಟ್ಟಣ, ರಾರಾಳ ತಾಂಡಾ, ಆನೆಕಲ್ಲು ಹಾಗೂ ಮಾದೂರು ಗ್ರಾಮಗಳ ವ್ಯಾಪ್ತಿಯ ಮೆಕ್ಕೆಜೋಳ, ಹೈಬ್ರಿಡ್ ಜೋಳ, ಶೇಂಗಾ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಿಸಿದರು. ಮಳೆ ಅಭಾವದಿಂದ ಬೆಳೆಗಳು ಒಣಗುತ್ತಿರುವುದು ಹಾಗೂ ಕೆಲ ರೈತರು ಇನ್ನೂ ಬಿತ್ತನೆ ಮಾಡದೆ ಬೀಜ ಮತ್ತು ಗೊಬ್ಬರವನ್ನು ಮನೆಯಲ್ಲೇ ಸಂಗ್ರಹಿಸಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬೆಳೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಉದ್ದೇಶದಿಂದ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಈ ವೇಳೆ ರೈತರು ತಮ್ಮ ಅಳಲು ತೋಡಿಕೊಂಡರು. ಸಾಲ ಮಾಡಿ ಬೀಜ ಹಾಗೂ ಗೊಬ್ಬರ ಖರೀದಿಸಿದ್ದರೂ ಮಳೆ ಇಲ್ಲದೆ ಬೆಳೆಗಳು ಬಾಡುತ್ತಿವೆ. ಈ ಬಾರಿ ಕೈಗೆ ಬೆಳೆ ಸಿಗುವ ನಿರೀಕ್ಷೆಯೇ ಇಲ್ಲದಂತಾಗಿದೆ. ಸರ್ಕಾರ ತಕ್ಷಣ ಪರಿಹಾರ ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ರಮ್ ಪಾಷಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಉಪ ಕೃಷಿ ನಿರ್ದೇಶಕ ವಾಮದೇವ್, ತಹಶೀಲ್ದಾರ್ ಆರ್. ಕವಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪಿ. ವಿಶ್ವನಾಥ್, ಕೃಷಿ ಅಧಿಕಾರಿ ಎಸ್.ವಿ. ಪಾಟೀಲ್, ಅಧಿಕಾರಿಗಳಾದ ಭೋಜ ನಾಯ್ಕ್, ಶಶಿಕುಮಾರ, ರೈತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಕನ್ನಿಹಳ್ಳಿ ಗ್ರಾಮದಲ್ಲಿ ಈರುಳ್ಳಿ ಬೆಳೆ ಹಾನಿಗೊಳಗಾದ ಜಮೀನುಗಳನ್ನು ಪರಿಶೀಲಿಸಿದ್ದೇನೆ. ಬೆಳೆ ಹಾನಿಯ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು.”

– ಕವಿತಾ ಮನ್ನಿಕೇರಿ, ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲೆ

ಭಾರಿ ಗಾತ್ರದ ವಿಂಡ್‌ಮಿಲ್ ವಾಹನಗಳಿಗೆ ಕರವೇ ತಡೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ–ಮುಳಗುಂದ–ಲಕ್ಷ್ಮೇಶ್ವರ ರಸ್ತೆಯಲ್ಲಿ ಸಂಚರಿಸುತ್ತಿರುವ ಭಾರಿ ಗಾತ್ರದ ವಿಂಡ್‌ಮಿಲ್ (ವಿಂಡ್ ಪವರ್) ಉಪಕರಣ ಸಾಗಣೆ ವಾಹನಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಗದಗ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ನಗರದ ಅಂಜುಮನ್ ಕಾಲೇಜು ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಭಾರಿ ಗಾತ್ರದ ವಾಹನಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಈ ಕುರಿತು ಹಲವು ಬಾರಿ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ, ಸೆರೆಂಟಿಕಾ ಕಂಪನಿಯ ವಿಂಡ್‌ಮಿಲ್ ಉಪಕರಣ ಸಾಗಣೆ ವಾಹನಗಳು ಹಗಲು-ರಾತ್ರಿ ನಿರಂತರವಾಗಿ ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಇದರಿಂದ ರಸ್ತೆಗಳು ಹಾಳಾಗುವುದರ ಜೊತೆಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ನಿತ್ಯ ಸಂಚಾರ ದಟ್ಟಣೆಯಲ್ಲಿ ಸಿಲುಕುವಂತಾಗಿದೆ ಎಂದು ದೂರಿದರು.

ಜಿಲ್ಲಾಸ್ಪತ್ರೆ, ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಅಂಜುಮನ್ ಕಾಲೇಜು ಸೇರಿದಂತೆ ಪ್ರಮುಖ ಸಂಸ್ಥೆಗಳು ಇದೇ ರಸ್ತೆಯಲ್ಲಿದ್ದು, ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯೂ ಇದಾಗಿದೆ. ಪ್ರತಿಭಟನೆ ನಡೆದ ದಿನವೇ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ನಲ್ಲಿದ್ದ ರೋಗಿ ತೀವ್ರ ತೊಂದರೆ ಅನುಭವಿಸಿದ ಘಟನೆ ಕಣ್ಣಾರೆ ಕಂಡಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಭಾರಿ ಗಾತ್ರದ ವಾಹನಗಳಿಗೆ ಪ್ರತ್ಯೇಕ ರಸ್ತೆ ವ್ಯವಸ್ಥೆ ಕಲ್ಪಿಸಿ, ಸಾರ್ವಜನಿಕ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಬೇಕು. ಅಲ್ಲದೆ ಎಚ್.ಪಿ. ಪೆಟ್ರೋಲ್ ಬಂಕ್ ಎದುರಿನ ರಸ್ತೆ ಡಿವೈಡರ್ ತೆರವುಗೊಳಿಸಿ ಹಾನಿಗೊಳಿಸಿರುವ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಬೇಡಿಕೆಗಳನ್ನು ತಕ್ಷಣ ಈಡೇರಿಸದಿದ್ದರೆ ಗದಗ–ಮುಳಗುಂದ–ಲಕ್ಷ್ಮೇಶ್ವರ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾರುತಿ ಈಳಗೇರ, ಕುಮಾರ ರೇವಣ್ಣವರ, ಸಮೀರ್ ಬಾಳಿಕಾಯಿ, ವಿನಾಯಕ ಬಡಿ, ದಾವಲಸಾಬ ತಹಶೀಲ್ದಾರ, ಸಿರಾಜ್ ಹೊಸಮನಿ, ಯೂನಸ್ ಗದಗ, ಸುಲೇಮಾನ ಮಂಜಲಾಪುರ, ತೌಶೀಫ್ ಢಾಲಾಯತ್, ಕೃಷ್ಣಾ ಲಮಾಣಿ ಸೇರಿದಂತೆ ಕರವೇ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾರ್ಮಿಕರ ಪಿಎಫ್‌ಗೂ ಮೋದಿ ಸರ್ಕಾರ ಕತ್ತರಿ: ಕೃಷ್ಣಗೌಡ ಎಚ್. ಪಾಟೀಲ ಆರೋಪ

0

ವಿಜಯಸಾಕ್ಷಿ ಸುದ್ದಿ, ಗದಗ: ಕೇಂದ್ರದ ಮೋದಿ ಸರ್ಕಾರ ಜಾರಿಗೆ ತರಲು ಮುಂದಾಗಿರುವ ‘ಹೊಸ ಭವಿಷ್ಯ ನಿಧಿ (ಪಿಎಫ್) ಯೋಜನೆ–2026’ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾರ್ಮಿಕರ ನಿವೃತ್ತಿ ಭದ್ರತೆಗೆ ಕತ್ತರಿ ಹಾಕಲಾಗುತ್ತಿದೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಾರ್ಮಿಕರ ಕಡ್ಡಾಯ ಪಿಎಫ್ ಕೊಡುಗೆಯನ್ನು ₹1,800ಕ್ಕೆ ಸೀಮಿತಗೊಳಿಸುವ ಮೂಲಕ ಸುಮಾರು 8 ಕೋಟಿ ಕಾರ್ಮಿಕರ ನಿವೃತ್ತಿ ನಿಧಿಗೆ ಶೇ.50ಕ್ಕೂ ಹೆಚ್ಚು ಹೊಡೆತ ಬೀಳಲಿದೆ ಎಂದು ಆರೋಪಿಸಿದ್ದಾರೆ.

2014ರಿಂದ ಕನಿಷ್ಠ ವೇತನ ಮಿತಿಯನ್ನು ₹15 ಸಾವಿರದಲ್ಲೇ ಉಳಿಸಿಕೊಂಡಿರುವ ಕೇಂದ್ರ ಸರ್ಕಾರ, ಹಣದುಬ್ಬರ ಹೆಚ್ಚಾಗಿದ್ದರೂ ಅದನ್ನು ₹21 ಸಾವಿರಕ್ಕೆ ಏರಿಸಿಲ್ಲ. ಹೆಚ್ಚುವರಿ ಪಿಎಫ್ ಉಳಿತಾಯದ ಮೇಲಿನ ತೆರಿಗೆ ವಿನಾಯಿತಿಯನ್ನೂ ಕಡಿತಗೊಳಿಸಿ ಕಾರ್ಮಿಕರ ಮೇಲೆ ಹೆಚ್ಚುವರಿ ಹೊರೆ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಕೇಂದ್ರ ಸರ್ಕಾರ ಕಾರ್ಪೊರೇಟ್ ಸಂಸ್ಥೆಗಳ ತೆರಿಗೆಯನ್ನು ಕಡಿಮೆ ಮಾಡಿ, ಲಕ್ಷಾಂತರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದೆ. ಆದರೆ ದೇಶದ ಬೆನ್ನೆಲುಬಾಗಿರುವ ಕಾರ್ಮಿಕರ ಭವಿಷ್ಯ ನಿಧಿಯನ್ನೇ ಕಡಿತಗೊಳಿಸುತ್ತಿದೆ. ಕೈಗೆ ಹೆಚ್ಚು ಸಂಬಳ ಸಿಗುತ್ತದೆ ಎಂಬುದು ಕೇವಲ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ದೀರ್ಘಾವಧಿಯಲ್ಲಿ ಪಿಎಫ್ ಕೊಡುಗೆ ಕಡಿಮೆಯಾಗುವುದರಿಂದ ನಿವೃತ್ತಿ ನಂತರ ಕಾರ್ಮಿಕರಿಗೆ ದೊಡ್ಡ ಪ್ರಮಾಣದ ಆರ್ಥಿಕ ನಷ್ಟವಾಗಲಿದೆ. ಶೇ.8.25ರಷ್ಟು ಸುರಕ್ಷಿತ ಬಡ್ಡಿಯ ಲಾಭವೂ ಕಡಿಮೆಯಾಗಲಿದ್ದು, ಒಬ್ಬ ಉದ್ಯೋಗಿಗೆ ₹15ರಿಂದ ₹20 ಲಕ್ಷದವರೆಗೆ ನಷ್ಟವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನೂ 30.91 ಲಕ್ಷ ಕಾರ್ಮಿಕರ ₹9,330 ಕೋಟಿ ಪಿಎಫ್ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿರುವ ಅವರು, ಬಡ ಕಾರ್ಮಿಕರ ದುಡಿಮೆಯ ಹಣವನ್ನು ತಡೆಹಿಡಿಯುವ ಮೂಲಕ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ದೂರಿದ್ದಾರೆ.

ಮುಂಬೈ ಇಪಿಎಫ್‌ಒದಲ್ಲಿ ₹18.97 ಕೋಟಿ, ಬೆಂಗಳೂರಿನ ಇಪಿಎಫ್‌ಒ ಸಿಬ್ಬಂದಿ ಸಹಕಾರ ಸಂಘದಲ್ಲಿ ₹70 ಕೋಟಿ ಹಾಗೂ ಉತ್ತರ ಪ್ರದೇಶದ ಯುಪಿಪಿಸಿಎಲ್ ಹಗರಣ ಸೇರಿದಂತೆ ಹಲವು ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ಕಾರ್ಮಿಕರ ಉಳಿತಾಯದ ಹಣದ ಭದ್ರತೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಡಿಜಿಟಲ್ ವ್ಯವಸ್ಥೆಯ ಹೆಸರಿನಲ್ಲಿ ಕಾರ್ಮಿಕರ ಹಣದ ಮೇಲೆ ನಿಯಂತ್ರಣ ಸಾಧಿಸಲು ಸರ್ಕಾರ ಮುಂದಾಗಿದ್ದು, ಭ್ರಷ್ಟಾಚಾರ ತಡೆಯುವ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಕೈಗೊಂಡಿಲ್ಲ. ಇಂತಹ ಧೋರಣೆಯಿಂದ ಕಾರ್ಮಿಕರ ಭವಿಷ್ಯಕ್ಕೆ ದೊಡ್ಡ ಅಪಾಯ ಎದುರಾಗಿದೆ ಎಂದು ಕೃಷ್ಣಗೌಡ ಎಚ್. ಪಾಟೀಲ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

“ಕೈಗೆ ಹೆಚ್ಚು ಸಂಬಳ ಸಿಗುತ್ತದೆ ಎಂಬುದು ಬಿಜೆಪಿ ಸರ್ಕಾರದ ಕಣ್ಣೊರೆಸುವ ತಂತ್ರ. ವಾಸ್ತವದಲ್ಲಿ ಕಾರ್ಮಿಕರ ಭವಿಷ್ಯ ನಿಧಿಯನ್ನೇ ಕಡಿತಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳಿಗೆ ಲಾಭ ಮಾಡಿಕೊಡಲಾಗುತ್ತಿದೆ.”

– ಕೃಷ್ಣಗೌಡ ಎಚ್. ಪಾಟೀಲ, ಅಧ್ಯಕ್ಷರು, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ

ಯಾದಗಿರಿಯಲ್ಲಿ ಅಕ್ರಮ ಅಕ್ಕಿ ದಂಧೆ ಬಯಲು! ಮಾಜಿ ಜಿ.ಪಂ ಸದಸ್ಯನ ಮಗನ ವಿರುಧ್ದ FIR ದಾಖಲು

ಯಾದಗಿರಿ: ಬಡವರಿಗಾಗಿ ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ದಂಧೆ ನಡೆಸುತ್ತಿದ್ದ ಪ್ರಕರಣ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಶಹಾಪುರ ತಾಲೂಕಿನ ಉಕ್ಕಿನಾಳ್ ತಾಂಡಾ ಬಳಿ ಇರುವ ಅಕ್ರಮ ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 82 ಕ್ವಿಂಟಾಲ್ ಸರ್ಕಾರಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ್ ಬಿರಾದಾರ್ ನೇತೃತ್ವದ ತಂಡ, ಪೊಲೀಸರ ಸಹಕಾರದೊಂದಿಗೆ ಸೋಮವಾರ ರಾತ್ರಿ ದಾಳಿ ನಡೆಸಿದೆ. ಈ ವೇಳೆ ಗೋಡೌನ್‌ನಲ್ಲಿ 202 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿಟ್ಟಿದ್ದ 82 ಕ್ವಿಂಟಾಲ್ ಅಕ್ಕಿ ಪತ್ತೆಯಾಗಿದೆ.

ಜಪ್ತಿ ಮಾಡಿದ ಅಕ್ಕಿಯನ್ನು ಲಾರಿಗೆ ತುಂಬಿಸಿ ಸಾಗಿಸಲು ಮುಂದಾದಾಗ ಸ್ಥಳಕ್ಕೆ ಬಂದ ಕೆಲವರು ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. “ಲಾರಿ ಸಮೇತ ಅಕ್ಕಿಯನ್ನು ಸುಟ್ಟು ಹಾಕುತ್ತೇವೆ” ಎಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಲಾರಿಯನ್ನು ಗೋಗಿ ಪೊಲೀಸ್ ಠಾಣೆ ಆವರಣದಲ್ಲಿ ರಾತ್ರಿ ನಿಲ್ಲಿಸಿದ್ದಾರೆ.

ಬಳಿಕ ಮಂಗಳವಾರ ಬೆಳಗ್ಗೆ ಲಾರಿಯನ್ನು ಆಹಾರ ಇಲಾಖೆಯ ಮುಖ್ಯ ಗೋಡೌನ್‌ಗೆ ಕೊಂಡೊಯ್ದು ಅಕ್ಕಿಯನ್ನು ಅನ್‌ಲೋಡ್ ಮಾಡಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಿಶನ್ ರಾಠೋಡ್ ಅವರ ಪುತ್ರ ಲೋಹಿತ್ ರಾಠೋಡ್ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿಸಿ, ಅದನ್ನು ಅಕ್ರಮವಾಗಿ ಸಂಗ್ರಹಿಸಿ ನೆರೆ ರಾಜ್ಯಗಳಿಗೆ ಸಾಗಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಅಕ್ಕಿಯನ್ನು ರೈಸ್ ಮಿಲ್‌ಗಳಲ್ಲಿ ಪಾಲಿಶ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಡವರಿಗಾಗಿ ಮೀಸಲಾದ ಪಡಿತರ ಅಕ್ಕಿ ಅಕ್ರಮ ದಂಧೆಗೆ ಬಳಕೆಯಾಗುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅಕ್ರಮ ಜಾಲದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಖಜಾನೆ ಇಲಾಖೆಯ ಉಪನಿರ್ದೇಶಕರಾಗಿ ಟಿ.ಎಂ. ದೇವರಮನಿ ಅಧಿಕಾರ ಸ್ವೀಕಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಆದೇಶದಂತೆ ಗದಗ ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕರಾಗಿ ಟಿ.ಎಂ. ದೇವರಮನಿ ಅಧಿಕಾರ ಸ್ವೀಕರಿಸಿದರು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ, ಶಾಲು ಹೊದಿಸಿ ನೂತನ ಉಪನಿರ್ದೇಶಕರನ್ನು ಆತ್ಮೀಯವಾಗಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಟಿ.ಎಂ. ದೇವರಮನಿ, ಸರ್ಕಾರದ ನಿಯಮಾನುಸಾರ ಪಾರದರ್ಶಕ, ಜವಾಬ್ದಾರಿಯುತ ಹಾಗೂ ಜನಸ್ನೇಹಿ ಆಡಳಿತಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದೊಂದಿಗೆ ಖಜಾನೆ ಇಲಾಖೆಯ ಕಾರ್ಯನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಸುಗಮವಾಗಿ ನಡೆಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೊಗೇರಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ವಿಭೂತಿ, ಶಿವಕುಮಾರ ಕುರಿ, ಎಂ.ಎಚ್. ಕಂಬಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ನೂತನ ಉಪನಿರ್ದೇಶಕರಿಗೆ ಶುಭ ಹಾರೈಸಿದರು.

ಆತ್ಮೀಯ ವಾತಾವರಣದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ದೇವರಮನಿ ಅವರ ಆಡಳಿತಾವಧಿ ಯಶಸ್ವಿಯಾಗಲೆಂದು ಹಾರೈಸಿದರು.