ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ.
ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯ ಪ್ರದೇಶದ ಕಾಡಂಚಿನಲ್ಲಿ ಈ ಘಟನೆ ನಡೆದಿದ್ದು, ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ನಾಡಿಗೆ ಬಂದಿದ್ದ ಆನೆ ತಪ್ಪಾಗಿ ಬ್ಯಾರಿಕೇಡ್ನ ಕಬ್ಬಿಣದ ಕಂಬಗಳ ಮಧ್ಯೆ ಸಿಲುಕಿದೆ. ಇದರಿಂದ ಮುಂದೆ ಅಥವಾ ಹಿಂದೆ ಹೋಗಲು ಸಾಧ್ಯವಾಗದೆ ಆನೆ ತೀವ್ರವಾಗಿ ನರಳಾಡಿದೆ.
ಆನೆಯ ಕಿರುಚಾಟ ಕೇಳಿ ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾವೇರಿ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಆನೆಯನ್ನು ಯಾವುದೇ ಗಾಯಗಳಾಗದಂತೆ ಸುರಕ್ಷಿತವಾಗಿ ಹೊರತೆಗೆಯಲು ಜೆಸಿಬಿ ಹಾಗೂ ಗ್ಯಾಸ್ ಕಟರ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಆನೆಯನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ ಎಂದು ವರದಿಯಾಗಿದೆ.

