ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ.
ಬಂಧಿತ ಕೈದಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಗೋಡೆ ಹಾರಿ ಸಂತೋಷ್, ಮಸ್ತಾನ್ ಹಾಗೂ ಸಾಗರ್ ಪರಾರಿಯಾಗಿದ್ದರು. ಮೂವರ ಬಂಧನಕ್ಕಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು.
ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾಚರಣೆ:
ಕಲಬುರಗಿಯ ಕಪನೂರು ಕೈಗಾರಿಕಾ ಪ್ರದೇಶದಲ್ಲಿ ಸಂತೋಷ್ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧನಕ್ಕೆ ತೆರಳಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸಂತೋಷ್ನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳಿಗೂ ಗಾಯಗಳಾಗಿವೆ. ಗಾಯಾಳು ಪೊಲೀಸರು ಹಾಗೂ ಸಂತೋಷ್ನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಕಮಿಷನರ್ ಡಾ. ಶರಣಪ್ಪ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.
ಟವೆಲ್, ಹಾಸಿಗೆ ಬಳಸಿ ಜೈಲಿನಿಂದ ಪರಾರಿ:
ಸುಮಾರು 15ರಿಂದ 20 ಅಡಿ ಎತ್ತರದ ಕಾರಾಗೃಹದ ಕಾಂಪೌಂಡ್ ಗೋಡೆಯನ್ನು ಟವೆಲ್ ಮತ್ತು ಹಾಸಿಗೆ ಬಳಸಿ ಮೂವರು ಕೈದಿಗಳು ಹಾರಿ ಪರಾರಿಯಾಗಿದ್ದರು. ಬಳಿಕ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಘಟನೆ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿತ್ತು.
ಇದೀಗ ಪರಾರಿಯಾಗಿದ್ದ ಮೂವರ ಪೈಕಿ ಸಂತೋಷ್ ಪೊಲೀಸರ ಬಲೆಗೆ ಬಿದ್ದಿದ್ದು, ಉಳಿದ ಕೈದಿಗಳಾದ ಮಸ್ತಾನ್ ಮತ್ತು ಸಾಗರ್ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

