Home Blog

ಜೂ.7ರಂದು ಬಿವಿಜಿ ಚಿಕಿತ್ಸಾ ಕೇಂದ್ರಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಅತಿದೊಡ್ಡ ಸಮಗ್ರ ಸೇವಾ ಹಾಗೂ ಸೌಲಭ್ಯ ನಿರ್ವಹಣಾ ಸಂಸ್ಥೆಗಳಲ್ಲಿ ಒಂದಾದ ಭಾರತ ವಿಕಾಸ್ ಗ್ರೂಪ್ (ಬಿವಿಜಿ) ಇದೀಗ ಗದಗ ಜಿಲ್ಲೆಯಲ್ಲಿ ತನ್ನ ಪ್ರಪ್ರಥಮ ಚಿಕಿತ್ಸಾ ಕೇಂದ್ರ ಆರಂಭಿಸುತ್ತಿದ್ದು, ಜೂನ್ 7ರಂದು ನರಗುಂದ ತಾಲೂಕಿನ ವಾಸನ ಗ್ರಾಮದ ಸ್ವಯಂ ಸಂಜೀವಿನಿ ಆಶ್ರಮದಲ್ಲಿ ಬಿವಿಜಿ ಚಿಕಿತ್ಸಾ ಕೇಂದ್ರ ಲೋಕಾರ್ಪಣೆಗೊಳ್ಳಲಿದೆ ಎಂದು ಬಿವಿಜಿ ಲೈಫ್ ಸೈನ್ಸ್ ಸಂಯೋಜಕ ಸಂಜಯ ಡೋಂಗರೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2002ರಲ್ಲಿ ಸ್ಥಾಪನೆಯಾದ ಬಿವಿಜಿ ಸಂಸ್ಥೆ ಇಂದು ದೇಶದಾದ್ಯಂತ ಉದ್ಯೋಗ ಸೃಷ್ಟಿ, ಗುಣಮಟ್ಟದ ಸೇವೆ, ಆರೋಗ್ಯ, ಕೃಷಿ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರವಹಿಸಿದೆ ಎಂದರು.

ಸಂಸ್ಥೆಯ ಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಹನುಮಂತರಾವ್ ಗಾಯ್ಕವಾಡ ಅವರು ಕೇವಲ 19ನೇ ವಯಸ್ಸಿನಲ್ಲಿ ಗ್ರಾಮೀಣ ಯುವಕರ ಸಬಲೀಕರಣಕ್ಕಾಗಿ “ಭಾರತ ವಿಕಾಸ್ ಪ್ರತಿಷ್ಠಾನ” ಆರಂಭಿಸಿದ್ದರು. 1997ರಲ್ಲಿ ಕೇವಲ 8 ಉದ್ಯೋಗಿಗಳು ಮತ್ತು ಒಂದು ಹೌಸ್‌ಕೀಪಿಂಗ್ ಒಪ್ಪಂದದೊಂದಿಗೆ ಆರಂಭವಾದ ಸಂಸ್ಥೆ ಇಂದು ದೇಶದ 20ಕ್ಕೂ ಹೆಚ್ಚು ರಾಜ್ಯಗಳ 70ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, 1 ಲಕ್ಷಕ್ಕೂ ಅಧಿಕ ಸಿಬ್ಬಂದಿಯನ್ನು ಹೊಂದಿದೆ ಎಂದು ಹೇಳಿದರು.

ಬಿವಿಜಿ ಸಂಸ್ಥೆ ಜೀವ ವಿಜ್ಞಾನ ಹಾಗೂ ಆಯುರ್ವೇದ ಕ್ಷೇತ್ರದಲ್ಲೂ ಮಹತ್ವದ ಸಂಶೋಧನೆ ನಡೆಸುತ್ತಿದ್ದು, ಕ್ಯಾನ್ಸರ್, ಲಿವರ್, ಹೃದಯ ರೋಗ, ಸೋರಿಯಾಸಿಸ್ ಸೇರಿದಂತೆ 200ಕ್ಕೂ ಹೆಚ್ಚು ಔಷಧಿಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಮೊದಲ ಬಾರಿಗೆ ಪಾರಂಪರಿಕ ವೈದ್ಯ ಹನುಮಂತ ಮಳಲಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮದ ಸ್ವಯಂ ಸಂಜೀವಿನಿ ಆಶ್ರಮದಲ್ಲಿ ಚಿಕಿತ್ಸಾ ಕೇಂದ್ರ ಆರಂಭಿಸಲಾಗುತ್ತಿದೆ ಎಂದರು.

ಜೂನ್ 7ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಕೇರಳದ ದಿವ್ಯಶ್ರೀ ಸಹಸ್ರಾರಯೋಗೀಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಂಜೀವಕುಮಾರ ಹಂಚಾಟೆ, ಶಾಸಕರಾದ ಎಚ್.ಕೆ. ಪಾಟೀಲ, ಸಿ.ಸಿ. ಪಾಟೀಲ, ನಿವೃತ್ತ ಡಿಜಿಪಿ ಶಂಕರ ಬಿದರಿ, ಮಾಜಿ ಶಾಸಕ ಬಿ.ಆರ್. ಯಾವಗಲ್, ಬಿವಿಜಿ ಸಂಸ್ಥಾಪಕ ಹನುಮಂತರಾವ್ ಗಾಯ್ಕವಾಡ ಹಾಗೂ ಪಾರಂಪರಿಕ ವೈದ್ಯ ಹನುಮಂತ ಮಳಲಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪಾರಂಪರಿಕ ವೈದ್ಯ ಹನುಮಂತ ಮಳಲಿ, ಡಾ. ರವಿಕುಮಾರ ಹಾಗೂ ಡಾ. ವಿದ್ಯಾ ಉಪಸ್ಥಿತರಿದ್ದರು.

ಕೋಟ್

“ಪಾರಂಪರಿಕ ವೈದ್ಯಕೀಯ ಮತ್ತು ಆಧುನಿಕ ಆಯುರ್ವೇದ ಸಂಶೋಧನೆಯನ್ನು ಒಟ್ಟುಗೂಡಿಸುವ ಮಹತ್ವದ ಪ್ರಯತ್ನವೇ ಬಿವಿಜಿ ಚಿಕಿತ್ಸಾ ಕೇಂದ್ರ”

— ಸಂಜಯ ಡೋಂಗರೆ, ಬಿವಿಜಿ ಲೈಫ್ ಸೈನ್ಸ್ ಸಂಯೋಜಕರು

ಜಿ.ಎಸ್. ಪಾಟೀಲರ ಕನಸಿನ ಯೋಜನೆಗೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ನೂತನ ಸಾರಿಗೆ ಬಸ್ ಸೇವೆಗೆ ಬುಧವಾರ ಅಧಿಕೃತ ಚಾಲನೆ ನೀಡಲಾಗಿದ್ದು, ರೋಣ ವಿಧಾನಸಭಾ ಕ್ಷೇತ್ರದ ಜನರಿಗೆ ಬಹುಕಾಲದ ಕನಸಾಗಿದ್ದ ನೇರ ಸಾರಿಗೆ ಸಂಪರ್ಕ ಇದೀಗ ಸಾಕಾರಗೊಂಡಿದೆ.

ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರ ವಿಶೇಷ ಪ್ರಯತ್ನ ಹಾಗೂ ದೂರದೃಷ್ಟಿಯ ಫಲವಾಗಿ ಆರಂಭಗೊಂಡ ಈ ಬಸ್ ಸೇವೆ, ಗ್ರಾಮೀಣ ಭಾಗದ ಜನರಿಗೆ ಶಿಕ್ಷಣ, ಉದ್ಯೋಗ, ವೈದ್ಯಕೀಯ ಹಾಗೂ ವ್ಯಾಪಾರ ಉದ್ದೇಶಗಳಿಗೆ ಬೆಂಗಳೂರಿಗೆ ಸುಲಭವಾಗಿ ಪ್ರಯಾಣಿಸಲು ನೆರವಾಗಲಿದೆ.

ನೂತನ ಬಸ್‌ಗೆ ಪೂಜೆ ಸಲ್ಲಿಸುವ ಮೂಲಕ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಚಾಲನೆ ನೀಡಿ, ರೈತರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ಕ್ಷೇತ್ರದ ಜನರಿಗೆ ಈ ಬಸ್ ಸೇವೆ ಬಹಳ ಅನುಕೂಲಕರವಾಗಲಿದೆ. ಇನ್ನು ಮುಂದೆ ಗ್ರಾಮೀಣ ಭಾಗದ ಜನರು ಸುಗಮವಾಗಿ ಬೆಂಗಳೂರಿಗೆ ತೆರಳಬಹುದು ಎಂದು ಹೇಳಿದರು.

ಗಜೇಂದ್ರಗಡದಿಂದ ಹೊರಡುವ ಈ ನೂತನ ಬಸ್ ಮುಧೋಳ, ಕರಮುಡಿ, ತಿಮ್ಮಾಪುರ ಮಾರ್ಗವಾಗಿ ಮುಂಡರಗಿ, ಹಡಗಲಿ, ಹರಿಹರ, ದಾವಣಗೆರೆ ಹಾಗೂ ಚಿತ್ರದುರ್ಗ ಮೂಲಕ ಬೆಂಗಳೂರನ್ನು ತಲುಪಲಿದೆ.

ಈ ಸೇವೆಯಿಂದ ರೋಣ ಕ್ಷೇತ್ರದ ನೂರಾರು ಗ್ರಾಮಗಳ ಜನರಿಗೆ ನೇರವಾಗಿ ಬೆಂಗಳೂರು ಸಂಪರ್ಕ ದೊರೆತಂತಾಗಿದ್ದು, ವಿಶೇಷವಾಗಿ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ಚಿಕಿತ್ಸೆಗಾಗಿ ರಾಜಧಾನಿಗೆ ತೆರಳುವವರಿಗೆ ದೊಡ್ಡ ಅನುಕೂಲವಾಗಲಿದೆ ಎಂದು ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬಾಳಪ್ಪ ಗಂಗರಾತ್ರಿ, ಶರಣಪ್ಪ ಜೋಗಿನ, ಮಲ್ಲಿಕಾರ್ಜುನ ಇದ್ಲಿ, ಭೀಮಪ್ಪ ರಾಮಜಿ, ಅಲ್ಲಿಸಾಬ ನದಾಫ, ಗಾಳೆಪ್ಪ ಹಳ್ಳಮನವರ, ಹನುಮಪ್ಪ ಪೂಜಾರ, ಸೀತಾ ಜೋಗಿನ, ಭೀಮವ್ವ ಬನಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೋಟ್

“ಇದು ಶಾಸಕ ಜಿ.ಎಸ್. ಪಾಟೀಲರ ಕನಸಿನ ಕೂಸು. ಹಳ್ಳಿಗಳ ಜನರಿಗೆ ಬೆಂಗಳೂರು ಸಂಪರ್ಕ ಕಲ್ಪಿಸುವ ಮಹತ್ವದ ಸೇವೆಯಿದು.”

— ಯಲ್ಲಪ್ಪ ಎಚ್. ಬಾಬರಿ, ರೈತ ಸಂಘ ಜಿಲ್ಲಾಧ್ಯಕ್ಷ

ಅಕ್ರಮ ಸಂಬಂಧ ಶಂಕೆ: ಜೆಜೆ ನಗರದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ!

ಬೆಂಗಳೂರು: ಅಕ್ರಮ ಸಂಬಂಧದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ನಗರದ ಜೆಜೆ ನಗರದಲ್ಲಿ ನಡೆದಿದೆ.

ಮೃತರನ್ನು ಅಕ್ರಂ ಪಾಷಾ (43) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಉಮರ್ ಖಾಲೀದ್ ಎಂಬ ವ್ಯಕ್ತಿಯ ಪತ್ನಿಯೊಂದಿಗೆ ಅಕ್ರಂ ಪಾಷಾ ಅಕ್ರಮ ಸಂಬಂಧ ಹೊಂದಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬುಧವಾರ ರಾತ್ರಿ ಸುಮಾರು 12:30ರ ವೇಳೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಅಕ್ರಂ ಪಾಷಾ ಉಮರ್ ಖಾಲೀದ್ ಅವರ ಮನೆ ಬಳಿ ಬಂದಿದ್ದ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಉಮರ್ ಖಾಲೀದ್ ಚಾಕುವಿನಿಂದ ಹಲ್ಲೆ ನಡೆಸಿದ ಪರಿಣಾಮ ಅಕ್ರಂ ಪಾಷಾ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಉಮರ್ ಖಾಲೀದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್, ರಾತ್ರಿ ಸುಮಾರು 12:30ರ ವೇಳೆಗೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿದ್ದನು ಎಂದು ತಿಳಿಸಿದ್ದಾರೆ. ಬಳಿಕ ಆಸ್ಪತ್ರೆಗೆ ಸಾಗಿಸಿದರೂ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅಕ್ರಮ ಸಂಬಂಧವೇ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಅಕ್ರಂ ಪಾಷಾ ಮತ್ತು ಆರೋಪಿ ಇಬ್ಬರೂ ಕಾರು ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ ಸಂಪೂರ್ಣ ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದಿ ನಾಯಿಯ ಕಾಟಕ್ಕೆ ಬ್ರೇಕ್

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ಪಟ್ಟಣದ ಶ್ರೀ ಅನ್ನದಾನೇಶ್ವರ ಕಾಲೊನಿಯ ನಿವಾಸಿಗಳಿಗೆ ತಲೆನೋವಾಗಿದ್ದ ಬೀದಿ ನಾಯಿ ಹಾಗೂ ಅದರ ಮರಿಯನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ಸೆರೆ ಹಿಡಿದು ಕೊಂಡೊಯ್ದ ಹಿನ್ನೆಲೆಯಲ್ಲಿ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಶ್ರೀ ಅನ್ನದಾನೇಶ್ವರ ಕಾಲೊನಿಯ ಎರಡನೇ ಅಡ್ಡರಸ್ತೆಯಲ್ಲಿ ಅಲೆದಾಡುತ್ತಿದ್ದ ಬೀದಿ ನಾಯಿ ಮತ್ತು ಅದರ ಮರಿ ಹಗಲು-ರಾತ್ರಿ ಎನ್ನದೆ ಬೊಗಳುತ್ತಿದ್ದು, ಸ್ಥಳೀಯರ ನಿದ್ದೆ ಮತ್ತು ನೆಮ್ಮದಿಯನ್ನು ಕದಡಿತ್ತು. ರಾತ್ರಿ ಪೂರ್ತಿ ಎಚ್ಚರದಿಂದ ಕಾಲ ಕಳೆಯಬೇಕಾದ ಪರಿಸ್ಥಿತಿ ನಿವಾಸಿಗಳದ್ದಾಗಿತ್ತು. ಇದರಿಂದ ನಿವಾಸಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಉಂಟಾಗಿತ್ತು ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದರು.

ಇದಲ್ಲದೆ ಮರಿ ನಾಯಿ ಮನೆಗಳಿಗೆ ನುಗ್ಗಿ ಎಲ್ಲೆಂದರಲ್ಲಿ ಹೊಲಸು ಮಾಡುತ್ತಿದ್ದು, ಅದನ್ನು ಸ್ವಚ್ಛಗೊಳಿಸುವುದೇ ನಿವಾಸಿಗಳಿಗೆ ದೊಡ್ಡ ತೊಂದರೆಯಾಗಿತ್ತು.

ಈ ಕುರಿತು ನಿವಾಸಿಗಳು ಕಳೆದ ತಿಂಗಳೇ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಗಮನಕ್ಕೆ ತಂದಿದ್ದು, ಬುಧವಾರ ಪಪಂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೀದಿ ನಾಯಿ ಮತ್ತು ಅದರ ಮರಿಯನ್ನು ಸೆರೆ ಹಿಡಿದರು.

ಈ ಹಿನ್ನೆಲೆಯಲ್ಲಿ ನಿವಾಸಿಗಳು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕನ್ನಡ ಶಾಲೆಗಳಲ್ಲಿ ಹಬ್ಬದ ಸಂಭ್ರಮ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಹೊಸ ಶೈಕ್ಷಣಿಕ ವರ್ಷದ ಆರಂಭದೊಂದಿಗೆ ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಶಾಲೆಗಳು ಮಕ್ಕಳ ಕಲರವದಿಂದ ಕಂಗೊಳಿಸಿದವು. ತಳಿರು ತೋರಣ, ಬಣ್ಣಬಣ್ಣದ ಅಲಂಕಾರ, ಪುಷ್ಪವೃಷ್ಟಿ, ಸಿಹಿ ಹಂಚಿಕೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನಗಳ ಮೂಲಕ ಶಾಲಾ ಪ್ರಾರಂಭೋತ್ಸವವನ್ನು ವಿವಿಧೆಡೆ ಸಂಭ್ರಮದಿಂದ ಆಚರಿಸಲಾಯಿತು.

ಸಮೀಪದ ತೋಟಗಂಟಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸಿ ಮಾತನಾಡಿದ ವೀರನಗೌಡ ಪಾಟೀಲ, ಸರ್ಕಾರಿ ಕನ್ನಡ ಶಾಲೆಗಳ ಉಳಿವು ಮತ್ತು ಬೆಳವಣಿಗೆಗೆ ಪಾಲಕರು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಕರೆ ನೀಡಿದರು.

“ಒಂದು ಕಾಲದಲ್ಲಿ ತೋಟಗಂಟಿಯ ಸರ್ಕಾರಿ ಶಾಲೆ ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ಇಲ್ಲಿ ಕಲಿತ ಅನೇಕರು ಇಂದು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದಿನ ವಿದ್ಯಾರ್ಥಿಗಳೂ ಉತ್ತಮ ಶಿಕ್ಷಣ ಪಡೆದು ಗ್ರಾಮ ಹಾಗೂ ಶಾಲೆಗೆ ಕೀರ್ತಿ ತರಬೇಕು” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಯಲ್ಲಪ್ಪಗೌಡ ಪಾಟೀಲ, ನಾಗಭೂಷಣ ಬೆಳವಡಿ, ಕಲ್ಲನಗೌಡ ಹೊನ್ನಪ್ಪಗೌಡ್ರ, ಅಂದಾನಗೌಡ ಹೊನ್ನಪ್ಪಗೌಡ್ರ, ಪತ್ರಕರ್ತ ಶಿವಾನಂದ ಗೋಗೇರಿ, ಮುಖ್ಯಶಿಕ್ಷಕ ಆರ್.ಡಿ. ರಂಗಣ್ಣವರ, ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇನ್ನೊಂದೆಡೆ, ಜಕ್ಕಲಿಯ ಪ್ರಾಥಮಿಕ ಶಾಲೆಗಳ ಸಂಕೀರ್ಣದಲ್ಲಿ ಶಾಲಾ ಪ್ರಾರಂಭೋತ್ಸವ ಹಬ್ಬದ ವಾತಾವರಣದಲ್ಲಿ ನಡೆಯಿತು. ಶಾಲೆಯನ್ನು ನವವಧುವಿನಂತೆ ಅಲಂಕರಿಸಲಾಗಿದ್ದು, ಶಾಲೆಗೆ ಆಗಮಿಸಿದ ಮಕ್ಕಳಿಗೆ ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸದಸ್ಯರು ಗುಲಾಬಿ ಹೂವು ನೀಡಿ, ಸಿಹಿ ಹಂಚುವ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು.

ಈ ವೇಳೆ ಎಸ್‌ಡಿಎಂಸಿ ಅಧ್ಯಕ್ಷ ಅಂದಪ್ಪ ಮಾದರ, ಮುಖ್ಯ ಶಿಕ್ಷಕ ಎಸ್.ಬಿ. ಗವಿ, ಹೆಚ್.ಎಸ್. ಬಿಂಗಿ, ಎಸ್.ಎ. ಪಲ್ಲೇದ, ಎಂ.ವಿ. ತಾಳಿಕೋಟಿ ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು.

ಎಸ್‌ಎಜೆಡಿ ಸರ್ಕಾರಿ ಪ್ರೌಢಶಾಲೆಯಲ್ಲಿಯೂ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ, ದಾಖಲಾತಿ ಆಂದೋಲನ ಹಾಗೂ ಪಾಲಕ-ಪೋಷಕರ ಮಹಾಸಭೆ ಅರ್ಥಪೂರ್ಣವಾಗಿ ನಡೆಯಿತು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಪುಷ್ಪವೃಷ್ಟಿ, ಆರತಿ, ಗುಲಾಬಿ ಹೂವು ಹಾಗೂ ಸಿಹಿ ಹಂಚುವ ಮೂಲಕ ಸ್ವಾಗತಿಸಲಾಯಿತು.

ದಾಖಲಾತಿ ಆಂದೋಲನದ ಅಂಗವಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರಭಾತಫೇರಿ ನಡೆಸಿ ಶಿಕ್ಷಣದ ಮಹತ್ವ ಸಾರಿದರು. ಮಕ್ಕಳ ಮುಖದಲ್ಲಿದ್ದ ನಗು ಹಾಗೂ ಉತ್ಸಾಹ ಶಾಲಾ ಆವರಣಕ್ಕೆ ಹೊಸ ಚೈತನ್ಯ ತುಂಬಿತ್ತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷೆ ಸುಜಾತಾ ಕಮ್ಮಾರ, ಮುಖ್ಯಶಿಕ್ಷಕಿ ಎಂ. ಶಾರದಮ್ಮ, ವಿ.ವಿ. ಅಣ್ಣಿಗೇರಿ, ಆರ್.ಡಿ. ಬಡಿಗೇರ, ನೆಹರು ಮನೋಳಿ, ಗೌರಮ್ಮ, ಯು.ಎಸ್. ಕಣವಿ, ಎಸ್.ವಿ. ಗುಗ್ಗರಿ, ಸದಸ್ಯರು, ಪಾಲಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

“ಕನ್ನಡ ಮಾಧ್ಯಮದಲ್ಲೇ ಕಲಿತ ಮಕ್ಕಳು ನಾಡಿನ ಸೇವೆಗೆ ಸಿದ್ಧರಾಗಬೇಕು. ಕನ್ನಡ ಶಾಲೆಗಳ ಉಳಿವು ಪ್ರತಿಯೊಬ್ಬರ ಜವಾಬ್ದಾರಿ.”

133 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್?

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: 2026-27ನೇ ಸಾಲಿನ ತಾಲೂಕು ಪಂಚಾಯಿತಿ ಅಧೀನದ ವಿವಿಧ ಇಲಾಖೆಗಳ ಕ್ರಿಯಾಯೋಜನೆಗಾಗಿ 133 ಕೋಟಿ 43 ಲಕ್ಷ 71 ಸಾವಿರ ರೂಪಾಯಿಗಳ ಅನುದಾನ ಪ್ರಸ್ತಾವನೆ ಸಿದ್ಧಪಡಿಸಿರುವುದಾಗಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪಾಲಯ್ಯನಕೋಟೆ ವಿಶ್ವನಾಥ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ವಿಜಯನಗರ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಶಿಕ್ಷಣ, ಆರೋಗ್ಯ, ಸಮಾಜ ಕಲ್ಯಾಣ, ಬಿಸಿಎಂ, ಶಿಶು ಅಭಿವೃದ್ಧಿ ಯೋಜನೆ, ಕೃಷಿ, ಪಶು ಸಂಗೋಪನೆ ಹಾಗೂ ತಾಲೂಕು ಪಂಚಾಯಿತಿ ಆಡಳಿತ ಸೇರಿದಂತೆ ವಿವಿಧ ಇಲಾಖೆಗಳ ಅನುದಾನ ಪ್ರಸ್ತಾವನೆಗಳನ್ನು ಸಭೆಯಲ್ಲಿ ಮಂಡಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ದಿಡಗೂರು ಮಾತನಾಡಿ, ತಾಲೂಕಿನಲ್ಲಿ ಕಾನೂನು ಪದವಿ ಪಡೆದ 12 ನೂತನ ಅಭ್ಯರ್ಥಿಗಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕಚೇರಿಯ ಸ್ವಚ್ಛತಾ ಸಾಮಗ್ರಿ ಖರೀದಿಗೆ 11 ಲಕ್ಷ ರೂಪಾಯಿ ವೆಚ್ಚ ಮಾಡಲಾಗಿದೆ ಎಂದರು.

ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಕೊಟ್ರೇಶ್ ಮಾತನಾಡಿ, ಸಿಬ್ಬಂದಿ ವೇತನಕ್ಕೆ 32.14 ಲಕ್ಷ ರೂಪಾಯಿ ಸೇರಿದಂತೆ ಇತರೆ ಖರ್ಚುಗಳಿವೆ ಎಂದು ಮಾಹಿತಿ ನೀಡಿದರು.

ಪಶು ಸಂಗೋಪನೆ ಇಲಾಖೆ ಅಧಿಕಾರಿ ಮಾತನಾಡಿ, ಇಲಾಖೆಯ ಕಚೇರಿ ವೆಚ್ಚಕ್ಕೆ 21 ಲಕ್ಷ ರೂಪಾಯಿ ಖರ್ಚಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಸಾಗಾಟ ವೆಚ್ಚವನ್ನು ಸಂಬಂಧಪಟ್ಟ ಸಂಸ್ಥೆಗಳೇ ಭರಿಸಬೇಕಿದ್ದರೂ ಇಲಾಖೆಯಿಂದಲೇ ಹಣ ಪಾವತಿಸಿರುವುದನ್ನು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ತೋಟಗಾರಿಕೆ ಇಲಾಖೆಯ ವಿಜಯ ನಿಚ್ಚಾಪುರ ಮಾತನಾಡಿ, ತಾಲೂಕಿನಲ್ಲಿ ಸುಮಾರು ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದಾಳಿಂಬೆ ಬೆಳೆ ಇದ್ದು, ಅಂತರ್ ಬೆಳೆಯಾಗಿ ಪಪ್ಪಾಯಿ ಬೆಳೆಯಲಾಗುತ್ತಿದೆ ಎಂದು ಹೇಳಿದರು.

ದಾಳಿಂಬೆ ಬೆಳೆಗಳಿಗೆ ದುಂಡಾಣು ರೋಗ ಬಾಧೆ ಕಂಡುಬಂದಿದ್ದು, ಅದಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರವೀಣ ಮಾತನಾಡಿ, ಇಲಾಖೆಯಲ್ಲಿ ಹಿಂದಿನ ಸಾಲಿನ 1.49 ಕೋಟಿ ರೂಪಾಯಿ ಅನುದಾನ ಬಳಕೆ ಮಾಡಲಾಗಿದೆ ಎಂದು ಹೇಳಿದರು.

ಈ ವೇಳೆ ಇಲಾಖೆಯ ನಾಲ್ವರು ಹೊರಗುತ್ತಿಗೆ ನೌಕರರಿಗೆ ಎರಡು ವರ್ಷಗಳಿಂದ ವೇತನ ಸಿಗದೇ ಇರುವ ವಿಷಯ ಸಭೆಯಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಯಿತು.

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಅಥವಾ ಸಹಾಯಕ ಅಭಿಯಂತರ ಸಭೆಗೆ ಹಾಜರಾಗದೇ ದ್ವಿತೀಯ ದರ್ಜೆ ಸಹಾಯಕ ಖಾದರ್ ಖಾನ್ ಅವರನ್ನು ಕಳುಹಿಸಿದ್ದಕ್ಕೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.

ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳು ತರಾಟೆಗೆ ತೆಗೆದುಕೊಂಡರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಬಿ. ಪಾಟೀಲ್ ಮಾತನಾಡಿ, ತಾಲೂಕಿನಲ್ಲಿ 50 ಸಾವಿರ ಹೆಕ್ಟೇರ್ ಕೃಷಿ ಭೂಮಿ ಇದ್ದು, ಈ ಬಾರಿ 34 ಮಿ.ಮೀ. ಮಳೆಯ ಕೊರತೆ ಉಂಟಾಗಿದೆ ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ಹಾಗೂ ಗೊಬ್ಬರಗಳ ಸಮರ್ಪಕ ಸಂಗ್ರಹವಿದ್ದು, ಮಳೆ ಬಂದ ತಕ್ಷಣ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಎಲ್ಲಾ ಇಲಾಖೆಗಳ ಅಭಿವೃದ್ಧಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಲೆಕ್ಕಾಧಿಕಾರಿ ತಿಪ್ಪೇಸ್ವಾಮಿ, ಕುದುರಿ ಲಕ್ಷ್ಮೀಬಾಯಿ ಯೋಜನಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಶಿಕ್ಷಣ, ಆರೋಗ್ಯ, ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಅಭಿವೃದ್ಧಿಗೆ 133 ಕೋಟಿ ರೂಪಾಯಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ”

ಉತ್ತರ ಕರ್ನಾಟಕಕ್ಕೆ ಸಚಿವ ಸ್ಥಾನದಲ್ಲಿ ಪ್ರಾತಿನಿಧ್ಯ ಬೇಕು: ಯಲ್ಲಪ್ಪ ಎಚ್. ಬಾಬರಿ

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಹಾಗೂ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಆಗ್ರಹಿಸಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿರುವ ಯಲ್ಲಪ್ಪ ಬಾಬರಿ, “ಕ್ಷೇತ್ರದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುವ ನಾಯಕ ಜಿ.ಎಸ್. ಪಾಟೀಲರು. ಅವರ ಅನುಭವ ಮತ್ತು ಬದ್ಧತೆಯನ್ನು ಪರಿಗಣಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಉತ್ತರ ಕರ್ನಾಟಕ ಭಾಗಕ್ಕೆ ನ್ಯಾಯ ಸಿಗುತ್ತದೆ” ಎಂದು ಹೇಳಿದ್ದಾರೆ.

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ದೊರೆತರೆ ರೋಣ ಕ್ಷೇತ್ರ ಮಾತ್ರವಲ್ಲದೆ ಇಡೀ ಗದಗ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗಿದೆ.

ನೀರಾವರಿ, ಕೃಷಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಜಿ.ಎಸ್. ಪಾಟೀಲರು ವಿಶೇಷ ಕಾಳಜಿ ಹೊಂದಿದ್ದು, ಅವರ ನೇತೃತ್ವದಿಂದ ಜಿಲ್ಲೆಗೆ ಹೆಚ್ಚಿನ ಯೋಜನೆಗಳು ಸಿಗುವ ವಿಶ್ವಾಸವಿದೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.

“ಅನುಭವ, ಹಿರಿತನ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು.”

ಯಲ್ಲಪ್ಪ ಎಚ್. ಬಾಬರಿ

ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್: ಹೋರಾಟಕ್ಕೆ ಸಿಕ್ಕ ಜಯ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುವುದು ಎಂದು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವುದನ್ನು ಎಐಡಿಎಸ್ಓ (ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ) ಸ್ವಾಗತಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಎಐಡಿಎಸ್ಓ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ, “ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಒದಗಿಸಬೇಕು ಎಂಬ ಬೇಡಿಕೆಗೆ ದಶಕಗಳಿಂದ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದರು. ಸರ್ಕಾರದ ಈ ಘೋಷಣೆ ವಿದ್ಯಾರ್ಥಿ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ” ಎಂದು ತಿಳಿಸಿದ್ದಾರೆ.
ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತಲೇ, ಹೊಸ ಶೈಕ್ಷಣಿಕ ವರ್ಷದ ಆರಂಭದಿಂದಲೇ ಈ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಎಐಡಿಎಸ್ಓ ಸರ್ಕಾರವನ್ನು ಆಗ್ರಹಿಸಿದೆ.
ವಿದ್ಯಾರ್ಥಿಗಳ ಶಿಕ್ಷಣದ ಹಕ್ಕು ಹಾಗೂ ಸಂಚಾರದ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಎಂ. ಶಾಂತಿ ಮನವಿ ಮಾಡಿದ್ದಾರೆ.

ಶ್ರೀ ಕಾಳಿದಾಸ ಸಂಸ್ಥೆಗೆ ರಜತ ಕಿರೀಟ

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಬೆಳಕು ಹಂಚುತ್ತಾ 25 ವರ್ಷದ ಸಾರ್ಥಕ ಪಯಣ ಪೂರೈಸಿರುವ ಗದುಗಿನ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ಇದೀಗ ರಜತ ಮಹೋತ್ಸವದ ಸಂಭ್ರಮಕ್ಕೆ ಕಾಲಿಟ್ಟಿದೆ. 2002ರಲ್ಲಿ ಆರಂಭವಾದ ಸಂಸ್ಥೆ 2027ಕ್ಕೆ 25 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷವನ್ನು “ರಜತೋತ್ಸವ ವರ್ಷ”ವನ್ನಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಜತ ಮಹೋತ್ಸವ ಸಮಿತಿ ಉಸ್ತುವಾರಿ ಡಾ. ಜಿ.ಬಿ. ಪಾಟೀಲ, ಜೂನ್ 7ರಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಶ್ರೀಗಳ ಅಮೃತ ಹಸ್ತದಿಂದ ರಜತ ಮಹೋತ್ಸವ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.
ಪ್ರಸ್ತುತ ಸಂಸ್ಥೆಯ ಅಡಿಯಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳು, ಮೆಟ್ರಿಕ್ ಪೂರ್ವ ಮತ್ತು ನಂತರದ ವಸತಿ ನಿಲಯಗಳು, ಮಹಿಳಾ ವಸತಿ ನಿಲಯ ಹಾಗೂ ಐಟಿಐ ಕಾಲೇಜುಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಮುಂದಿನ ದಿನಗಳಲ್ಲಿ ವೈದ್ಯಕೀಯ, ವಿಜ್ಞಾನ-ತಂತ್ರಜ್ಞಾನ, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಹಾಗೂ ಕೇಂದ್ರ ಪಠ್ಯಕ್ರಮದ ಶಾಲಾ-ಕಾಲೇಜುಗಳನ್ನು ಆರಂಭಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ನಿವೃತ್ತ ನ್ಯಾಯಾಧೀಶರಾದ ಎಸ್.ಜಿ. ಪಲ್ಲೇದ ಮಾತನಾಡಿ, ರಜತೋತ್ಸವದ ಅಂಗವಾಗಿ ಸಂಸ್ಥೆಯ ಸಾಕ್ಷ್ಯಚಿತ್ರದ ವಿಡಿಯೋ ಕ್ಲಿಪ್ ಬಿಡುಗಡೆಗೊಳ್ಳಲಿದ್ದು, ನೂತನ ಕಟ್ಟಡದ ಆವರಣದಲ್ಲಿ 25 ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಗುವುದು ಎಂದರು.
ಬಳಿಕ ಬಯಲು ಆಂಜನೇಯ ದೇವಸ್ಥಾನದ ಆವರಣದ ವೇದಿಕೆಯಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಭಕ್ತ ಸಾಗರವನ್ನು ಉದ್ದೇಶಿಸಿ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.
ರಜತೋತ್ಸವ ಕಾರ್ಯಕ್ರಮದಲ್ಲಿ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ಹಿರಿಯ ಸಂತ-ರಾಜಕಾರಣಿ ಹಾಗೂ ಮಾಜಿ ಶಾಸಕ ಡಿ.ಆರ್. ಪಾಟೀಲ, ರಾಜ್ಯ ವಿದ್ಯುತ್ ನಿಗಮದ ನಿರ್ದೇಶಕ ಹಾಗೂ ಅಭಿಯಂತರರ ಸಂಘದ ಅಧ್ಯಕ್ಷ ಸಿ. ಬಸವಣ್ಣ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಆಯ್ಕೆಯಾದ ಚಂದ್ರಶೇಖರ ನುಗ್ಗಲಿ ಅವರನ್ನು ಸನ್ಮಾನಿಸಲಾಗುವುದು.
ರಜತೋತ್ಸವದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ 90 ಶೇಕಡಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಇದಲ್ಲದೆ ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಯುವಜನರಿಗೆ ದೇಶಿ ಕ್ರೀಡೋತ್ಸವ, ಮಹಿಳಾ ಸಬಲೀಕರಣ ಕಾರ್ಯಕ್ರಮಗಳು, ಸಾಂಸ್ಕೃತಿಕ ಸ್ಪರ್ಧೆಗಳು, ಕಾನೂನು ಅರಿವು, ಅಪರಾಧ ತಡೆ ಜಾಗೃತಿ ಕಾರ್ಯಕ್ರಮಗಳು, ಸಾವಯವ ಕೃಷಿ ತರಬೇತಿ, ಉದ್ಯೋಗ ಮೇಳ, ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಶಿಬಿರಗಳನ್ನು ಆಯೋಜಿಸಲು ಯೋಜಿಸಲಾಗಿದೆ.
ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಜಾನಪದ ಜಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ವರ್ಷಪೂರ್ತಿ ನಡೆದ ಎಲ್ಲಾ ಚಟುವಟಿಕೆಗಳನ್ನು ಒಳಗೊಂಡ ಸ್ಮರಣ ಸಂಚಿಕೆ ಬಿಡುಗಡೆಗೊಳ್ಳಲಿದೆ.
ಪತ್ರಿಕಾಗೋಷ್ಠಿಯಲ್ಲಿ ಬಿ.ಬಿ. ಭಾವಿಕಟ್ಟಿ, ಫಕೀರಪ್ಪ ಹೆಬಸೂರ, ಆರ್.ಡಿ. ಕಡ್ಲಿಕೊಪ್ಪ, ನೀಲಕಂಠ ಮರಡಿ, ವೈ.ಬಿ. ಭಾನಾಪೂರ, ಆರ್.ಎಂ. ನಿಂಬನಾಯ್ಕ, ಎಸ್.ಡಿ. ಸಿಂಗಟಾಲಕೇರಿ, ಎಸ್.ಎಸ್. ಕರಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
 “ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಮಹದಾಸೆ; ಶಿಕ್ಷಣದ ಜೊತೆಗೆ ಸಮಾಜಮುಖಿ ಮೌಲ್ಯಗಳನ್ನೂ ಬೆಳೆಸುವುದು ನಮ್ಮ ಗುರಿ”
ಡಾ. ಜಿ.ಬಿ. ಪಾಟೀಲ, ರಜತ ಮಹೋತ್ಸವ ಸಮಿತಿ ಉಸ್ತುವಾರಿ

ಪುರಸಭೆ ಮಳಿಗೆ ಟೆಂಡರ್ ವಿಳಂಬಕ್ಕೆ ಆಕ್ರೋಶ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪುರಸಭೆ ವ್ಯಾಪ್ತಿಯ ಹೊಸ ಬಸ್ ನಿಲ್ದಾಣದ ಎದುರಿನ ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ ಮೂರು ವರ್ಷಗಳ ಹಿಂದೆಯೇ ಮುಕ್ತಾಯಗೊಂಡಿದ್ದರೂ ಹೊಸ ಟೆಂಡರ್ ಪ್ರಕ್ರಿಯೆ ಆರಂಭಿಸದಿರುವುದನ್ನು ಖಂಡಿಸಿ ಜಯ ಕರ್ನಾಟಕ ಸಂಘಟನೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ತಕ್ಷಣ ಹೊಸ ಟೆಂಡರ್ ಕರೆಯದಿದ್ದರೆ ಜೂನ್ 9ರಿಂದ ಪುರಸಭೆ ಮಳಿಗೆಗಳ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಜಯ ಕರ್ನಾಟಕ ಸಂಘಟನೆ ಶಿರಹಟ್ಟಿ-ಲಕ್ಷ್ಮೇಶ್ವರ ತಾಲೂಕು ಉಸ್ತುವಾರಿ ರಮೇಶ್ ಹಂಗನಕಟ್ಟಿ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಬಸವರಾಜ ಹಿರೇಮನಿ ಎಚ್ಚರಿಕೆ ನೀಡಿದರು.

ಪುರಸಭೆ ವ್ಯವಸ್ಥಾಪಕಿ ಮಂಜುಳಾ ಹೂಗಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಹೊಸ ಬಸ್ ನಿಲ್ದಾಣದ ಎದುರಿನ 19 ವಾಣಿಜ್ಯ ಮಳಿಗೆಗಳ ಗುತ್ತಿಗೆ ಅವಧಿ 30-03-2023ರಂದು ಅಂತ್ಯಗೊಂಡಿದೆ. ಈ ಕುರಿತು ಈ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಅಂದಿನ ಮುಖ್ಯಾಧಿಕಾರಿಗಳು 15 ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರೂ, ಮೂರು ತಿಂಗಳು ಕಳೆದರೂ ಯಾವುದೇ ಕ್ರಮ ಜರುಗಿಲ್ಲ ಎಂದು ಆರೋಪಿಸಿದರು.

ಕೇವಲ ಅರ್ಜಿ ಸ್ವೀಕರಿಸಿರುವುದಾಗಿ ಹೇಳುವುದನ್ನು ಬಿಟ್ಟು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಿಲ್ಲ. ಹೊಸ ಟೆಂಡರ್ ಕರೆಯದೆ ವಿಳಂಬ ಮಾಡುತ್ತಿರುವುದು ಸಾರ್ವಜನಿಕರಲ್ಲಿ ಅನುಮಾನ ಹುಟ್ಟಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

2023ರಿಂದ 2026ರವರೆಗೆ ಪುರಸಭೆಯಲ್ಲಿ ಕಾರ್ಯನಿರ್ವಹಿಸಿದ ಮುಖ್ಯಾಧಿಕಾರಿಗಳ ಪಾತ್ರವನ್ನು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

ಜೂನ್ 9ರಿಂದ ಪುರಸಭೆ ಮಳಿಗೆಗಳ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಸಂಘಟನೆಗಳು ಎಚ್ಚರಿಸಿವೆ.

ಬಳಿಕ ತಹಸೀಲ್ದಾರ ಧನಂಜಯ ಎಂ. ಹಾಗೂ ಪಿಎಸ್‌ಐ ನಾಗರಾಜ ಗಡದ ಅವರಿಗೆ ಸಹ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಭರಮಣ್ಣ ಶೇರಸೂರಿ, ಸುರೇಶ್ ಹಟ್ಟಿ, ಬಸಣ್ಣ ಮೆಲ್ಮುರಿ, ಮಂಜುನಾಥ ಮುಳಗುಂದ, ಮಹಾಂತೇಶ ಗುದ್ನಾಳ, ಮಹೇಶ್ ಸೂರಣಗಿ, ಸಂಜೀವ ಶೇರಸೂರಿ, ಮೈಲಾರಪ್ಪ ಹೆಗ್ಗಣವರ ಸೇರಿದಂತೆ ಎರಡೂ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

“ಪುರಸಭೆ ಮಳಿಗೆಗಳನ್ನು ಸುಪರ್ದಿಗೆ ಪಡೆದು ಹೊಸ ಟೆಂಡರ್ ಕರೆಯುವವರೆಗೆ ಹೋರಾಟ ಮುಂದುವರಿಯಲಿದೆ”

ಬಸವರಾಜ ಹಿರೇಮನಿ, ಜಿಲ್ಲಾ ಅಧ್ಯಕ್ಷರು

error: Content is protected !!