Home Blog

ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ! ಅರಣ್ಯ ಇಲಾಖೆ ವಿರುದ್ಧ ಜನರ ಕಿಡಿ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಹಿಂದೆ ಮಾನವ ಬಲಿ ಪಡೆದಿದ್ದ ನರಭಕ್ಷಕ ಚಿರತೆಯನ್ನು ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದ ಅಧಿಕಾರಿಗಳ ಹೇಳಿಕೆ ಪ್ರಶ್ನಾರ್ಥಕವಾಗಿದೆ. ಬೋನಿಗೆ ಬಿದ್ದ ಚಿರತೆಯ ಕತ್ತಿನಲ್ಲಿ ಪತ್ತೆಯಾದ ಕಾಲರ್ ಐಡಿ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.

ಹನೂರು ತಾಲೂಕಿನ ಪೊನ್ನಾಚಿ ಬಳಿಯ ಕಕ್ಕೆಹೊಲ ಗ್ರಾಮದಲ್ಲಿ ಹಸು, ಮೇಕೆ ಸೇರಿದಂತೆ ಸಾಕುಪ್ರಾಣಿಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿತ್ತು. ತಡರಾತ್ರಿ ಬೋನಿಗೆ ಸಿಕ್ಕಿಬಿದ್ದ ಚಿರತೆಯನ್ನು ಪರಿಶೀಲಿಸಿದ ವೇಳೆ ಅದರ ಕತ್ತಿನಲ್ಲಿ ಅಳವಡಿಸಿದ್ದ ಕಾಲರ್ ಐಡಿ ಪತ್ತೆಯಾಗಿದೆ.

ಈ ಚಿರತೆ ಈ ಹಿಂದೆ ತಾಳಬೆಟ್ಟ ಪ್ರದೇಶದಲ್ಲಿ ಪಾದಯಾತ್ರಿಕ ಪ್ರವೀಣ್ ಎಂಬುವವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ಬಳಿಕ ರಂಗಸ್ವಾಮಿವೊಡ್ಡು ಪ್ರದೇಶದಲ್ಲಿ ಸೆರೆ ಹಿಡಿದಿದ್ದ ಚಿರತೆಯನ್ನು ಮೈಸೂರಿನ ಚಾಮುಂಡಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕೃತವಾಗಿ ತಿಳಿಸಿತ್ತು.

ಆದರೆ, ಈಗ ಅದೇ ಚಿರತೆ ಪೊನ್ನಾಚಿ ಪ್ರದೇಶದಲ್ಲಿ ಪತ್ತೆಯಾಗಿರುವುದು ಅರಣ್ಯ ಇಲಾಖೆಯ ಹೇಳಿಕೆಯನ್ನು ಅನುಮಾನಕ್ಕೆ ದೂಡಿದೆ. ಅಧಿಕಾರಿಗಳು ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ, ನರಭಕ್ಷಕ ಚಿರತೆಯನ್ನು ಆದಿವಾಸಿ ಹಾಡಿಗಳು ಮತ್ತು ಗ್ರಾಮಗಳ ಸಮೀಪದ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ ಎಂಬ ಆರೋಪ ತೀವ್ರಗೊಂಡಿದೆ.

ಈ ಬೆಳವಣಿಗೆಗೆ ಕಕ್ಕೆಹೊಲ ಗ್ರಾಮ ಹಾಗೂ ಸುತ್ತಮುತ್ತಲಿನ ಸೋಲಿಗ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. “ಮಾನವ ಜೀವಕ್ಕೆ ಅಪಾಯಕಾರಿಯಾದ ಚಿರತೆಯನ್ನು ನಮ್ಮ ವಾಸಸ್ಥಳದ ಸಮೀಪ ಬಿಡುವುದು ಅತ್ಯಂತ ನಿರ್ಲಕ್ಷ್ಯದ ಕ್ರಮ. ಜಾನುವಾರು ನಷ್ಟದ ಜೊತೆಗೆ ಗ್ರಾಮಸ್ಥರ ಜೀವಕ್ಕೂ ಅಪಾಯ ತಂದೊಡ್ಡಲಾಗಿದೆ” ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ಇಂದು PM-KISAN 23ನೇ ಕಂತು ಬಿಡುಗಡೆ; 9.44 ಕೋಟಿ ರೈತರ ಖಾತೆಗೆ ₹18,880 ಕೋಟಿ ಜಮೆ

0

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ದೇಶದ 9.44 ಕೋಟಿಗೂ ಅಧಿಕ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂಪಾಯಿಯಂತೆ ಒಟ್ಟು 18,880 ಕೋಟಿ ರೂಪಾಯಿಗೂ ಹೆಚ್ಚು ಹಣ ನೇರವಾಗಿ ಜಮೆಯಾಗಲಿದೆ.

ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಲವು ಅಭಿವೃದ್ಧಿ ಮತ್ತು ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ವೇದಿಕೆಯಲ್ಲಿ ಪಿಎಂ-ಕಿಸಾನ್ ಯೋಜನೆಯ 23ನೇ ಕಂತಿನ ಹಣವನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ-ಕಿಸಾನ್ ಅಡಿಯಲ್ಲಿ ಅರ್ಹ ರೈತರಿಗೆ ವಾರ್ಷಿಕ 6,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ. ಅದರ ಭಾಗವಾಗಿ ಇದೀಗ 23ನೇ ಕಂತಿನ ಹಣ ಬಿಡುಗಡೆಗೊಳ್ಳುತ್ತಿದೆ.

ಪಶ್ಚಿಮ ಬಂಗಾಳದಲ್ಲಿಯೂ ಈ ಯೋಜನೆಯ ಲಕ್ಷಾಂತರ ರೈತರು ಪ್ರಯೋಜನ ಪಡೆಯಲಿದ್ದು, ಸುಮಾರು 45 ಲಕ್ಷಕ್ಕೂ ಹೆಚ್ಚು ರೈತರಿಗೆ 907 ಕೋಟಿ ರೂಪಾಯಿಗೂ ಅಧಿಕ ಮೊತ್ತ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಕೇಂದ್ರದ ವಿವಿಧ ಕೃಷಿ ಯೋಜನೆಗಳ ಪ್ರಯೋಜನಗಳನ್ನು ತಲುಪಿಸುವ ಉದ್ದೇಶದಿಂದ ಹಲವು ಹೊಸ ಕಾರ್ಯಕ್ರಮಗಳಿಗೂ ಚಾಲನೆ ನೀಡಲಾಗುತ್ತಿದೆ.

ತಾರಕೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಡಿಜಿಟಲ್ ಕೃಷಿ ಮಿಷನ್ ಅಡಿಯಲ್ಲಿ ಅಗ್ರಿ ಸ್ಟ್ಯಾಕ್, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಹಾಗೂ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಸೇರಿದಂತೆ ಹಲವು ಕೃಷಿ ಸಂಬಂಧಿತ ಉಪಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ತಾರಕೇಶ್ವರವು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ಐತಿಹಾಸಿಕ ನಂಟು ಹೊಂದಿದ್ದು, ಬಂಗಾಳದ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಭಾರಿ ದಂಡ; ಸೆಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿ

0

ಕೊಲ್ಕತ್ತಾ: ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡುವ ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ರಸ್ತೆ, ಉದ್ಯಾನವನ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಮತ್ತು ಉಗುಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಹೊಸ ನಿಯಮಗಳು ಸೆಪ್ಟೆಂಬರ್ 1ರಿಂದ ಜಾರಿಗೆ ಬರಲಿವೆ.

ರಾಜ್ಯದ ಪ್ರಮುಖ ನಗರಗಳು ಹಾಗೂ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯುವುದು ಮತ್ತು ಗುಟ್ಕಾ, ಪಾನ್ ಸೇವಿಸಿ ರಸ್ತೆ ಹಾಗೂ ಗೋಡೆಗಳ ಮೇಲೆ ಉಗುಳುವುದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಚಟುವಟಿಕೆಗಳಿಂದ ನಗರಗಳ ಸೌಂದರ್ಯ ಹಾಳಾಗುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಭೀತಿಯೂ ಹೆಚ್ಚುತ್ತಿದೆ ಎಂದು ಸರ್ಕಾರ ತಿಳಿಸಿದೆ.

ಹೊಸ ನಿಯಮದ ಪ್ರಕಾರ, ರಸ್ತೆ, ಫುಟ್‌ಪಾತ್, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಉದ್ಯಾನವನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದು ಅಥವಾ ಉಗುಳುವುದು ಕಂಡುಬಂದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸ್ಥಳದಲ್ಲೇ ದಂಡ ವಿಧಿಸಲಿದ್ದಾರೆ.

ನಿಯಮಗಳ ಪರಿಣಾಮಕಾರಿ ಜಾರಿಗೆ ಪ್ರಮುಖ ರಸ್ತೆಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತದೆ. ನಿಯಮ ಉಲ್ಲಂಘಿಸುವವರನ್ನು ಗುರುತಿಸಿ ದಂಡದ ನೋಟಿಸ್ ಕಳುಹಿಸುವ ವ್ಯವಸ್ಥೆಯನ್ನೂ ರೂಪಿಸಲಾಗಿದೆ.

ಮೊದಲ ಬಾರಿಗೆ ತಪ್ಪು ಮಾಡಿದವರಿಗೆ ನಿಗದಿತ ದಂಡ ವಿಧಿಸಲಾಗುವುದು. ಅದೇ ವ್ಯಕ್ತಿ ಮತ್ತೆ ನಿಯಮ ಉಲ್ಲಂಘಿಸಿದರೆ ದಂಡದ ಮೊತ್ತವನ್ನು ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಿಯಮವನ್ನು ಜಾರಿಗೊಳಿಸಲು ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯಿತಿಗಳಿಗೆ ಅಗತ್ಯ ಅಧಿಕಾರ ನೀಡಲಾಗಿದೆ. ವಾಣಿಜ್ಯ ಸಂಕೀರ್ಣಗಳು, ಮಾರುಕಟ್ಟೆಗಳು, ಹೋಟೆಲ್‌ಗಳು ಮತ್ತು ಇತರೆ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡದ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಇದೇ ವೇಳೆ, ಸೆಪ್ಟೆಂಬರ್ 1ರಿಂದ ದಂಡ ಪ್ರಕ್ರಿಯೆ ಆರಂಭವಾಗುವ ಮುನ್ನ ಇಡೀ ಆಗಸ್ಟ್ ತಿಂಗಳಲ್ಲಿ ರಾಜ್ಯಾದ್ಯಂತ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಸರ್ಕಾರ ಯೋಜಿಸಿದೆ. ಮೈಕ್‌ಗಳ ಮೂಲಕ ಪ್ರಚಾರ, ಪೋಸ್ಟರ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹೊಸ ನಿಯಮಗಳ ಕುರಿತು ಮಾಹಿತಿ ನೀಡಲಾಗುವುದು.

ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಕಾಪಾಡುವುದು ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪಿಡಿಎಸ್ ಅಕ್ಕಿ ಕಳ್ಳರ ಬೆನ್ನತ್ತಿದ ಆಹಾರ ಇಲಾಖೆ ಅಧಿಕಾರಿ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ!

0

ರೋಣ: ಬಡವರ ಹೊಟ್ಟೆ ತುಂಬಬೇಕಿದ್ದ ಅನ್ನಭಾಗ್ಯ ಅಕ್ಕಿಯನ್ನು ಕಾಳಸಂತೆಗೆ ಸಾಗಿಸಲು ಯತ್ನಿಸುತ್ತಿದ್ದ ಜಾಲದ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಲೆಗೆ ಬೀಳಿಸಿರುವ ಘಟನೆ ರೋಣ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಜೂನ್ 18ರಂದು ಬೆಳಿಗ್ಗೆ ರೋಣ-ನರಗುಂದ ರಸ್ತೆಯ ಬಸಲಾಪುರ ಕ್ರಾಸ್ ಬಳಿ ದಾಳಿ ನಡೆಸಲಾಯಿತು. ಈ ವೇಳೆ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ದಾಳಿಯ ವೇಳೆ ಗದಗ ತಾಲೂಕಿನ ಹುಯಿಲಗೋಳ ಗ್ರಾಮದ ನಾಗಪ್ಪ ಭಜಂತ್ರಿ (29) ಹಾಗೂ ಗದಗ-ಬೆಟಗೇರಿಯ ಶ್ರೀಕಾಂತ ಭಜಂತ್ರಿ ಎಂಬುವರು ಬಡವರಿಗೆ ಸರ್ಕಾರ ವಿತರಿಸುವ ಪಿಡಿಎಸ್ ಅಕ್ಕಿಯನ್ನು ಸಂಗ್ರಹಿಸಿ ಕಾಳಸಂತೆಗೆ ಸಾಗಿಸುತ್ತಿರುವುದು ಪತ್ತೆಯಾಗಿದೆ. ಅಧಿಕಾರಿಗಳು ತಕ್ಷಣವೇ ಆಟೋ ತಡೆದು ಪರಿಶೀಲನೆ ನಡೆಸಿದಾಗ 15 ಚೀಲಗಳಲ್ಲಿ ತುಂಬಿದ್ದ ಅಕ್ಕಿ ಪತ್ತೆಯಾಯಿತು.

ತನಿಖೆಯಲ್ಲಿ ಒಟ್ಟು 6 ಕ್ವಿಂಟಲ್ 10 ಕೆ.ಜಿ. ಪಿಡಿಎಸ್ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂಬುದು ಬಹಿರಂಗವಾಗಿದೆ. ಸರ್ಕಾರದ ಯೋಜನೆಯಡಿ ಬಡ ಕುಟುಂಬಗಳಿಗೆ ವಿತರಿಸಬೇಕಿದ್ದ ಅಕ್ಕಿಯನ್ನು ಮಧ್ಯವರ್ತಿಗಳ ಮೂಲಕ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದರೆಂಬ ಶಂಕೆ ವ್ಯಕ್ತವಾಗಿದೆ.

ದಾಳಿಯಲ್ಲಿ ₹13,725 ಮೌಲ್ಯದ 15 ಅಕ್ಕಿ ಚೀಲಗಳು, ₹1.50 ಲಕ್ಷ ಮೌಲ್ಯದ ಆಟೋ ರಿಕ್ಷಾ (ಕೆಎ-26/ಬಿ-6642) ಹಾಗೂ ಅಕ್ಕಿಯ ಮಾದರಿಯನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹1,63,837 ಮೌಲ್ಯದ ವಸ್ತುಗಳು ಅಧಿಕಾರಿಗಳ ವಶಕ್ಕೆ ಬಂದಿವೆ.

ಆಹಾರ ಇಲಾಖೆ ಅಧಿಕಾರಿಗಳ ದೂರಿನ ಮೇರೆಗೆ ರೋಣ ಪೊಲೀಸ್ ಠಾಣೆಯಲ್ಲಿ ಅಗತ್ಯ ವಸ್ತುಗಳ ಕಾಯ್ದೆ-1955 ಹಾಗೂ ಪಿಡಿಎಸ್ ನಿಯಂತ್ರಣ ಆದೇಶ-1992ರ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ದಾಳಿಯ ರೂವಾರಿ ಸುವರ್ಣ ಜಮ್ಮನಕಟ್ಟಿ;

ಪಿಡಿಎಸ್ ಅಕ್ಕಿಯ ಅಕ್ರಮ ಸಾಗಾಟದ ಬಗ್ಗೆ ದೊರೆತ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆಯ ರೂಪುರೇಷೆ ಸಿದ್ಧಪಡಿಸಿದ ರೋಣದ ಆಹಾರ ನಿರೀಕ್ಷಕಿ ಸುವರ್ಣ ಜಮ್ಮನಕಟ್ಟಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಅವರ ಚುರುಕು ಕಾರ್ಯಾಚರಣೆಯಿಂದ ಕಾಳಸಂತೆಗೆ ಸಾಗುತ್ತಿದ್ದ ಅಕ್ಕಿ ಜಾಲ ಬಯಲಿಗೆ ಬಂದಿದ್ದು, ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ರಿಹ್ಯಾಬ್ ಮಾಲೀಕ ಹತ್ಯೆ: ಬೆಂಗಳೂರು ಪುನರ್ವಸತಿ ಕೇಂದ್ರಗಳಲ್ಲಿ ಶುರುವಾಯ್ತು ಭೀತಿ!

0

ಬೆಂಗಳೂರು: ಚಂದ್ರಲೇಔಟ್‌ನಲ್ಲಿರುವ ನ್ಯೂ ಲೈಫ್ ರಿಹ್ಯಾಬ್ ಸೆಂಟರ್ ಮಾಲೀಕ ಶಿವಲಿಂಗಯ್ಯ ಹತ್ಯೆ ಪ್ರಕರಣದ ಬಳಿಕ ನಗರದ ಇತರೆ ಪುನರ್ವಸತಿ ಕೇಂದ್ರಗಳ ಮಾಲೀಕರಲ್ಲಿ ಆತಂಕ ಮನೆ ಮಾಡಿದೆ.

ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಹ್ಯಾಬ್ ಕೇಂದ್ರದಲ್ಲಿದ್ದ ನಿತಿನ್ ಎಂಬಾತನನ್ನು ಬಿಡಿಸಿಕೊಂಡು ಹೋಗುವ ಉದ್ದೇಶದಿಂದಲೇ ಹತ್ಯೆ ನಡೆಸಿರುವ ಸಾಧ್ಯತೆಯನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಈ ಕೃತ್ಯ ಪೂರ್ವನಿಯೋಜಿತವಾಗಿದ್ದು, ಎಂಟರಿಂದ ಒಂಬತ್ತು ಮಂದಿ ದುಷ್ಕರ್ಮಿಗಳು ಸಂಚಿನಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಯ ಬಳಿಕ ಆರೋಪಿಗಳು ಸ್ಥಳದಿಂದ ಒಂದು ಬ್ಯಾಗ್‌ನ್ನು ತೆಗೆದುಕೊಂಡು ಹೋಗಿರುವ ಮಾಹಿತಿ ಲಭ್ಯವಾಗಿದೆ. ಬ್ಯಾಗ್‌ನಲ್ಲಿ ಹಣ ಇತ್ತೇ ಅಥವಾ ರಿಹ್ಯಾಬ್‌ನಲ್ಲಿದ್ದ ವ್ಯಕ್ತಿಯ ಬಟ್ಟೆಗಳಿದ್ದವೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ತುಂಬಾ ದಿನಗಳಿಂದಲೇ ಹತ್ಯೆಯ ಸಂಚು ರೂಪಿಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನೆ ನಡೆದ ವೇಳೆ ಮಾಲೀಕನ ಪುತ್ರ ಹಾಗೂ ಚಾಲಕ ಸ್ಥಳದಲ್ಲಿ ಇರದಿರುವುದನ್ನು ಗಮನಿಸಿ ದುಷ್ಕರ್ಮಿಗಳು ದಾಳಿ ನಡೆಸಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಪ್ರಕರಣದ ಬೆನ್ನಲ್ಲೇ ನಗರದ ಇತರೆ ಪುನರ್ವಸತಿ ಕೇಂದ್ರಗಳ ಕಾರ್ಯವೈಖರಿ ಹಾಗೂ ಭದ್ರತಾ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ.

ಚಂದ್ರಲೇಔಟ್ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಹಂತಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಯರೇ ಹಂಚಿನಾಳದಲ್ಲಿ ಕುಡಿಯುವ ನೀರಿಗೆ ಹಾಹಾಕಾರ! ಕ್ಯಾನ್ ಹಿಡಿದು ಜನರ ಪರದಾಟ

ಕೊಪ್ಪಳ: ಜಿಲ್ಲೆಯ ಯರೇ ಹಂಚಿನಾಳ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಗ್ರಾಮಸ್ಥರು ಶುದ್ಧ ನೀರಿಗಾಗಿ ಪರದಾಡುವಂತಾಗಿದೆ.

ಕುಡಿಯುವ ನೀರು ಪಡೆಯಲು ಗ್ರಾಮಸ್ಥರು ಕ್ಯಾನ್‌ಗಳನ್ನು ಹಿಡಿದು ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವೇ ಬಹುತೇಕ ಗ್ರಾಮಸ್ಥರ ಏಕೈಕ ಆಸರೆಯಾಗಿದ್ದು, ಪ್ರತಿದಿನ ನೀರು ಪಡೆಯಲು ಜನರು ಘಟಕದ ಮುಂದೆ ಕಾದು ನಿಲ್ಲುತ್ತಿದ್ದಾರೆ. ಬೇಸಿಗೆ ಮತ್ತು ಮಳೆಯ ಕೊರತೆಯಿಂದ ಗ್ರಾಮದಲ್ಲಿನ ಪ್ರಮುಖ ನೀರಿನ ಮೂಲವಾದ ಕೆರೆಯಲ್ಲೂ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ.

ನೀರಿನ ಅಭಾವದಿಂದ ಗ್ರಾಮಸ್ಥರ ದೈನಂದಿನ ಜೀವನ ಅಸ್ತವ್ಯಸ್ತಗೊಂಡಿದ್ದು, ಮಹಿಳೆಯರು ಮತ್ತು ವೃದ್ಧರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಆರೋಗ್ಯ ಸಮಸ್ಯೆಗಳು ಎದುರಾಗುವ ಆತಂಕವೂ ವ್ಯಕ್ತವಾಗಿದೆ.

ಗ್ರಾಮಸ್ಥರು ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ.

ಫೇಕ್ ಅಟ್ರಾಸಿಟಿ ಕೇಸ್ ಆರೋಪ; ವಿಷ ಸೇವಿಸಿ ವ್ಯಾಪಾರಿ ಆತ್ಮಹತ್ಯೆ!

ಬೆಂಗಳೂರು: ಸುಳ್ಳು ಅಟ್ರಾಸಿಟಿ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆ.ಆರ್.ಪುರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಡುಗೋಡಿ ಚನ್ನಸಂದ್ರ ನಿವಾಸಿ ಪಾಪಣ್ಣ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ವಿಡಿಯೋ ಸಂದೇಶ ದಾಖಲಿಸಿರುವ ಪಾಪಣ್ಣ, ಎಕೆಜಿ ಕಾಲೋನಿಯ ನಿವಾಸಿಗಳಾದ ಜೋಗಿ ಶೀನಾ, ಪ್ರಶಾಂತ್, ಸಂತೋಷ್, ರಾಧಾ ಹಾಗೂ ಲಲಿತ್ ಕುಮಾರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ವಿಡಿಯೋದಲ್ಲಿ ಮಾತನಾಡಿರುವ ಪಾಪಣ್ಣ, “ಸುಳ್ಳು ಅಟ್ರಾಸಿಟಿ ಪ್ರಕರಣಗಳನ್ನು ದಾಖಲಿಸಿ ಹಣಕ್ಕಾಗಿ ಒತ್ತಡ ಹೇರಲಾಗುತ್ತಿದೆ. 2021ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಿಸಿ, ಅದನ್ನು ವಾಪಸ್ ಪಡೆಯಲು ಲಕ್ಷಾಂತರ ರೂಪಾಯಿ ಪಡೆದಿದ್ದರು. ಇದೀಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಾನು ಬಡ ವ್ಯಾಪಾರಿಯಾಗಿದ್ದು, ಈ ಕಿರುಕುಳದಿಂದ ಮನನೊಂದಿದ್ದೇನೆ” ಎಂದು ಆರೋಪಿಸಿದ್ದಾರೆ.

ಅಲ್ಲದೆ, ತಮ್ಮ ಸಾವಿಗೆ ಜೋಗಿ ಶೀನಾ ಮತ್ತು ಅವರ ಕುಟುಂಬದವರೇ ಕಾರಣ ಎಂದು ಹೇಳಿರುವ ಪಾಪಣ್ಣ, ತಮ್ಮ ಕುಟುಂಬ ಹಾಗೂ ತಂಗಿಯನ್ನು ರಕ್ಷಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಮೃತರು ಮಂಗಳವಾರ ರಾತ್ರಿ ಸುಮಾರು 10.05 ಗಂಟೆಗೆ ವಿಡಿಯೋ ಸಂದೇಶ ಕಳುಹಿಸಿದ್ದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಮಾಹಿತಿ ತಿಳಿದ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಬೆಳಗಿನ ಜಾವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತನ ತಂಗಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಭಾಗ್ಯಶ್ರೀ ನೀಡಿದ ದೂರಿನ ಜೊತೆಗೆ ವಿಡಿಯೋ ಸಾಕ್ಷ್ಯವನ್ನು ಆಧರಿಸಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಎರಡು ಲಾರಿಗಳು!

ಬೆಳಗಾವಿ: ಲಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬೆಳಗಾವಿ ಜಿಲ್ಲೆಯ ಎಂ.ಕೆ. ಹುಬ್ಬಳ್ಳಿ ಸಮೀಪ ನಡೆದಿದೆ.

ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವಿನ ಜೋಳದ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಗೆ ಹಾಲಿನ ಟ್ಯಾಂಕರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದಿವೆ.

ಅಪಘಾತದ ವೇಳೆ ಲಾರಿ ಹಾಗೂ ಟ್ಯಾಂಕರ್ ಚಾಲಕರು ಸಮಯಪ್ರಜ್ಞೆ ಮೆರೆದು ವಾಹನಗಳಿಂದ ಹೊರಬಂದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಉದ್ದನೆಯ ವಾಹನಗಳ ಸರತಿ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು.

ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವೋಟರ್ ಐಡಿ ಇದ್ದವರಿಗೆ ಮಾತ್ರ ಶಕ್ತಿ ಸ್ಮಾರ್ಟ್ ಕಾರ್ಡ್? ದುರ್ಬಳಕೆ ತಡೆಗೆ ಸರ್ಕಾರ ಕ್ರಮ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.

ಯೋಜನೆಯ ದುರ್ಬಳಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸುವ ಪ್ರಕ್ರಿಯೆಯನ್ನು ಸರ್ಕಾರ ಚುರುಕುಗೊಳಿಸಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಕುರಿತು ದೂರುಗಳು ಕೇಳಿಬಂದಿದ್ದವು. ಇದರಿಂದ ಸಾರಿಗೆ ನಿಗಮಗಳಿಗೆ ಆರ್ಥಿಕ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಯೋಜನೆಯಡಿ ರಾಜ್ಯದ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಹೊಂದಿರುವ ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಗೆ ಮಾತ್ರ ಸ್ಮಾರ್ಟ್ ಕಾರ್ಡ್ ನೀಡುವ ಪ್ರಸ್ತಾವನೆ ಇದೆ. ಫಲಾನುಭವಿಗಳು ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ.

ಸ್ಮಾರ್ಟ್ ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಮತ್ತು ವಿಳಾಸದ ವಿವರಗಳು ಅಳವಡಿಕೆಯಾಗಲಿದ್ದು, ಇತರರಿಗೆ ವರ್ಗಾಯಿಸಲು ಅವಕಾಶ ಇರುವುದಿಲ್ಲ. ರಾಜ್ಯಾದ್ಯಂತ ಸುಮಾರು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ ಬೆಂಗಳೂರಿನ ಬಿಎಂಟಿಸಿ ವ್ಯಾಪ್ತಿಯಲ್ಲಿ ಈ ವ್ಯವಸ್ಥೆ ಜಾರಿಯಾಗಲಿದ್ದು, ಬಳಿಕ ಕೆಎಸ್‌ಆರ್‌ಟಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೂ ವಿಸ್ತರಿಸಲಾಗುವುದು.

ಇದಕ್ಕಾಗಿ ಬಿಎಂಟಿಸಿ ಈಗಾಗಲೇ 11 ಸಾವಿರಕ್ಕೂ ಹೆಚ್ಚು ಸುಧಾರಿತ ಇಟಿಎಂ ಯಂತ್ರಗಳನ್ನು ಪಡೆದುಕೊಂಡಿದೆ. ಸ್ಮಾರ್ಟ್ ಕಾರ್ಡ್‌ಗಳಲ್ಲಿ ಎನ್‌ಎಫ್‌ಸಿ ತಂತ್ರಜ್ಞಾನ ಅಳವಡಿಸಲಾಗುತ್ತಿದ್ದು, ಬಸ್‌ಗಳ ಜೊತೆಗೆ ‘ನಮ್ಮ ಮೆಟ್ರೋ’ ಪ್ರಯಾಣಕ್ಕೂ ಬಳಸಲು ಅವಕಾಶ ಕಲ್ಪಿಸುವ ಯೋಜನೆ ಇದೆ.

ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸೈಬರ್ ಕೇಂದ್ರಗಳು ಹಾಗೂ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯಬಹುದಾಗಿದೆ. ಅರ್ಹ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಈ ಕಾರ್ಡ್‌ಗಳನ್ನು ಉಚಿತವಾಗಿ ವಿತರಿಸಲಾಗುವುದು.

ಸರ್ಕಾರದ ಈ ಕ್ರಮವನ್ನು ಹಲವರು ಸ್ವಾಗತಿಸಿದ್ದು, ಯೋಜನೆಯ ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಲು ಇದು ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು; ಬೆಂಗಳೂರಿನಲ್ಲಿ ಕೂಲ್ ಕೂಲ್ ವೀಕೆಂಡ್!

ಬೆಂಗಳೂರು: ನೈಋತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರಾಂತ್ಯದ ದಿನವಾದ ಇಂದು ಬೆಂಗಳೂರಿನಲ್ಲಿ ತಂಪಾದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.

ನಗರದಲ್ಲಿ ಗರಿಷ್ಠ ತಾಪಮಾನ 29 ರಿಂದ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ರಿಂದ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ಹಗಲಿನಲ್ಲಿ ಶೇ.40 ಮತ್ತು ಸಂಜೆ ಹಾಗೂ ರಾತ್ರಿ ವೇಳೆಗೆ ಶೇ.65ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಪಶ್ಚಿಮ ದಿಕ್ಕಿನಿಂದ ಗಂಟೆಗೆ 15 ರಿಂದ 25 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಕೆಲವೊಮ್ಮೆ ಗಾಳಿಯ ವೇಗ 40 ಕಿ.ಮೀ ತಲುಪಬಹುದು ಎಂದು ಇಲಾಖೆ ತಿಳಿಸಿದೆ.

ಆಕಾಶ ಸಾಮಾನ್ಯವಾಗಿ ಮೋಡ ಕವಿದ ವಾತಾವರಣದಿಂದ ಕೂಡಿರಲಿದ್ದು, ಸಂಜೆ ವೇಳೆಗೆ ಎಂ.ಜಿ. ರಸ್ತೆ, ವೈಟ್‌ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಜಯನಗರ ಹಾಗೂ ಯಶವಂತಪುರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾತ್ರಿ ವೇಳೆಗೆ ಚಳಿ ಹಾಗೂ ತಂಪಾದ ಗಾಳಿ ಹೆಚ್ಚಾಗಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗಲಿದ್ದು, ಜೂನ್ 21ರಿಂದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಾಗಿ ಒಣ ಹವಾಮಾನ ಮುಂದುವರಿಯಲಿದ್ದು, ಕೆಲವೆಡೆ ಹಗುರ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಸೆಖೆಯ ವಾತಾವರಣವೂ ಮುಂದುವರಿಯಲಿದೆ.

error: Content is protected !!