Home Blog

ಅಂಬಾನಿಯ ₹900 ಕೋಟಿ ದೇಣಿಗೆಯ ಲೆಕ್ಕ ಬಹಿರಂಗಪಡಿಸಿ: ರಾಮಮಂದಿರ ದೇಣಿಗೆ ಕುರಿತು ಬಿ.ಕೆ. ಹರಿಪ್ರಸಾದ್ ಪ್ರಶ್ನೆ

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತು ಪಾರದರ್ಶಕತೆ ಇರಬೇಕು ಎಂದು ಆಗ್ರಹಿಸಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಬಿಜೆಪಿ ಹಾಗೂ ರಾಮ ಮಂದಿರ ಟ್ರಸ್ಟ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮ ಮಂದಿರ ದೇಣಿಗೆ ವಿವಾದದ ಕುರಿತು ಶಿವಸೇನೆ ನಾಯಕ ಸಂಜಯ್ ರಾವತ್ ಎತ್ತಿರುವ ಪ್ರಶ್ನೆಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದರು.

ಇತಿಹಾಸದ ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ಮಹಮ್ಮದ್ ಘಜ್ನಿ ಲೂಟಿ ಮಾಡಿದ್ದನ್ನು ಪದೇ ಪದೇ ಉಲ್ಲೇಖಿಸುತ್ತಾರೆ. ಆದರೆ ಘಜ್ನಿಯ ನಂತರ ದೇಶವನ್ನು ಲೂಟಿ ಮಾಡಿರುವವರು ಬಿಜೆಪಿಯವರೇ ಎಂದು ಹರಿಪ್ರಸಾದ್ ಆರೋಪಿಸಿದರು.

ಈ ಹಿಂದೆ ರಾಮ ಮಂದಿರ ನಿರ್ಮಾಣದ ಹೆಸರಿನಲ್ಲಿ ಹಣ ಸಂಗ್ರಹಿಸಲಾಗಿತ್ತು. ಉದ್ಯಮಿ ಮುಕೇಶ್ ಅಂಬಾನಿ ₹900 ಕೋಟಿ ದೇಣಿಗೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಆ ಹಣದ ಲೆಕ್ಕವೂ ಸಾರ್ವಜನಿಕವಾಗಿ ಲಭ್ಯವಿಲ್ಲ ಎಂದು ಅವರು ಆರೋಪಿಸಿದರು.

“ಪೇಜಾವರ ಶ್ರೀಗಳೂ ರಾಮ ಮಂದಿರದ ದೇಣಿಗೆ ಲೆಕ್ಕ ಕೇಳಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶ್ರೀಗಳ ಈ ಪ್ರಶ್ನೆಗೆ ಏನು ಉತ್ತರ ನೀಡುತ್ತಾರೆ? ಅವರು ಶ್ರೀಗಳ ಅಭಿಪ್ರಾಯವನ್ನು ಒಪ್ಪುತ್ತಾರೆಯೇ ಅಥವಾ ವಿರೋಧಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಹರಿಪ್ರಸಾದ್, ಅವರು ಕೇಂದ್ರ ಸಚಿವರು. ಅವರ ಮಾತುಗಳನ್ನು ನಾನು ಏಕೆ ಕೇಳಬೇಕು? ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಪಕ್ಷ ತೊರೆದಾಗ ಅವರ ವಿರುದ್ಧವೇ ಮಾತನಾಡಿದ್ದರು. ಈಗ ಅವರನ್ನೇ ಹೊಗಳುತ್ತಿದ್ದಾರೆ ಎಂದು ಟೀಕಿಸಿದರು.

ರಾಮ ಮಂದಿರ ಟ್ರಸ್ಟ್ ದೇಣಿಗೆಯ ಲೆಕ್ಕ ನೀಡುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಮನ ಹೆಸರಿನಲ್ಲಿಯೂ ಕಳ್ಳತನ ಮತ್ತು ಲೂಟಿ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಕುರಿತು ಸಂಪೂರ್ಣ ಸ್ಪಷ್ಟನೆ ನೀಡಬೇಕು ಎಂದು ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದರು.

ಸಿಬ್ಬಂದಿ ಮಾತ್ರ ಇಷ್ಟೊಂದು ದೊಡ್ಡ ಹಗರಣ ನಡೆಸಲು ಸಾಧ್ಯವೇ? ರಾಮ ಮಂದಿರ ದೇಣಿಗೆ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ

ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರು ನೀಡಿದ ದೇಣಿಗೆ ಹಾಗೂ ಕಾಣಿಕೆ ಹಣದ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣವನ್ನು ತನಿಖೆಯ ಹೆಸರಿನಲ್ಲಿ ಮುಚ್ಚಿಹಾಕುವ ಪ್ರಯತ್ನ ಮಾಡದೆ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಇದು ಕೇವಲ ಹಣದ ಕಳ್ಳತನವಲ್ಲ, ಶ್ರೀರಾಮ ಹಾಗೂ ಅವರ ಮೇಲೆ ಅಪಾರ ಭಕ್ತಿ ಹೊಂದಿರುವ ಲಕ್ಷಾಂತರ ಭಕ್ತರ ನಂಬಿಕೆಗೆ ಮಾಡಿದ ದ್ರೋಹವಾಗಿದೆ ಎಂದು ಹೇಳಿದ್ದಾರೆ.

“ಸದಾಚಾರ, ಸತ್ಯ ಮತ್ತು ಧರ್ಮದ ಪ್ರತೀಕವಾಗಿರುವ ಶ್ರೀರಾಮನ ವಿರುದ್ಧ ಹಾಗೂ ಅವರ ಭಕ್ತರ ವಿಶ್ವಾಸದ ವಿರುದ್ಧ ಈ ಕೃತ್ಯ ಎಸಗಲಾಗಿದೆ. ಈ ಪ್ರಕರಣ ದೇಶದಾದ್ಯಂತ ಜನರನ್ನು ಆಘಾತಕ್ಕೀಡು ಮಾಡಿದೆ” ಎಂದು ಬರೆದಿದ್ದಾರೆ.

ಲಕ್ಷಾಂತರ ಭಕ್ತರು ತಮ್ಮ ಭಕ್ತಿಭಾವದಿಂದ ದೇವಸ್ಥಾನಕ್ಕೆ ಕಾಣಿಕೆ ಹಾಗೂ ದೇಣಿಗೆ ನೀಡುತ್ತಾರೆ. ಆ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡು ಕಳ್ಳತನ ನಡೆಸಿರುವುದು ಗಂಭೀರ ಅಪರಾಧ ಮಾತ್ರವಲ್ಲ, ಧಾರ್ಮಿಕ ನಂಬಿಕೆಗೆ ಮಾಡಿದ ದ್ರೋಹವೂ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದಲ್ಲಿ ಮತ್ತೊಂದು ಪ್ರಮುಖ ಪ್ರಶ್ನೆಯನ್ನು ಎತ್ತಿರುವ ಪ್ರಿಯಾಂಕಾ ಗಾಂಧಿ, “ಕೆಳಮಟ್ಟದ ಸಿಬ್ಬಂದಿ ಮಾತ್ರ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಗಿತಗೊಳಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ದೇಣಿಗೆಯನ್ನು ದುರ್ಬಳಕೆ ಮಾಡಲು ಸಾಧ್ಯವೇ? ಅಥವಾ ಇದರ ಹಿಂದೆ ಪ್ರಭಾವಿ ವ್ಯಕ್ತಿಗಳನ್ನೂ ಒಳಗೊಂಡ ದೊಡ್ಡ ಪಿತೂರಿ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಕರಣವನ್ನು ತನಿಖೆಯ ಹೆಸರಿನಲ್ಲಿ ಮರೆಮಾಚುವ ಬದಲು, ಸಂಪೂರ್ಣ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಈ ಕಳ್ಳತನದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನಿನ ಮುಂದೆ ತಂದು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕಾಂಗ್ರೆಸ್ ನಾಯಕಿ ಒತ್ತಾಯಿಸಿದ್ದಾರೆ.

ಸಮ್ಮತಿಯ ಲೈಂಗಿಕ ಸಂಬಂಧ ಪ್ರಕರಣದಲ್ಲಿ 19 ವರ್ಷದ ಯುವಕನ ಬಂಧನಕ್ಕೆ ಹೈಕೋರ್ಟ್ ಅಸಮಾಧಾನ; ಬಿಡುಗಡೆಗೆ ಆದೇಶ

ಬೆಂಗಳೂರು: ಇಬ್ಬರು ವಯಸ್ಕರ ನಡುವಿನ ಪರಸ್ಪರ ಸಮ್ಮತಿಯ ಪ್ರೀತಿಯ ಸಂಬಂಧವನ್ನು ಸಮಾಜ ಅಥವಾ ಕುಟುಂಬ ಒಪ್ಪುವುದಿಲ್ಲ ಎಂಬ ಕಾರಣಕ್ಕೆ ಅದನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಮ್ಮತಿಯ ಪ್ರೀತಿಯ ಸಂಬಂಧವನ್ನು ಅಪರಾಧೀಕರಣಗೊಳಿಸಲು ಕ್ರಿಮಿನಲ್ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಮದುವೆ ಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದಲ್ಲಿ ಜೈಲು ಸೇರಿದ್ದ 19 ವರ್ಷದ ಯುವಕನನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಬೆಂಗಳೂರು ನಿವಾಸಿ ಎಂ. ಧನುಷ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಮುಂದಿನ ಎಲ್ಲ ನ್ಯಾಯಿಕ ಪ್ರಕ್ರಿಯೆಗಳಿಗೆ ತಡೆ ನೀಡಿದೆ.

ವಿಚಾರಣೆ ವೇಳೆ ದೂರುದಾರಳಾದ ಯುವತಿ ಸ್ವತಃ ನ್ಯಾಯಾಲಯದ ಮುಂದೆ ಹಾಜರಾಗಿ, ತಮ್ಮಿಬ್ಬರ ನಡುವಿನ ಸಂಬಂಧ ಸಂಪೂರ್ಣ ಸಮ್ಮತಿಯದ್ದಾಗಿತ್ತು. ತಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಸಹ ಸಿದ್ಧರಾಗಿದ್ದೇವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ ಮಹತ್ವದ ಆದೇಶ ಹೊರಡಿಸಿದೆ.

ಕ್ರಿಮಿನಲ್ ಕಾನೂನು ಅತ್ಯಂತ ಗಂಭೀರವಾದ ಸಾಧನವಾಗಿದ್ದು, ಕುಟುಂಬದ ಒಪ್ಪಿಗೆ ಇಲ್ಲ ಅಥವಾ ಸಮಾಜಕ್ಕೆ ಮುಜುಗರವಾಗುತ್ತದೆ ಎಂಬ ಕಾರಣಕ್ಕೆ ಇಬ್ಬರು ವಯಸ್ಕರ ನಡುವಿನ ಸಮ್ಮತಿಯ ಸಂಬಂಧವನ್ನು ಅಪರಾಧವೆಂದು ಪರಿಗಣಿಸಲು ಅದನ್ನು ಬಳಸಲು ಅವಕಾಶ ನೀಡಲಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಯುವಕನಿಂದ ಯಾವುದೇ ಬಲವಂತ, ಬೆದರಿಕೆ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಪ್ರಾಥಮಿಕವಾಗಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಇದು ಇಬ್ಬರು ವಯಸ್ಕರ ನಡುವಿನ ಪರಸ್ಪರ ಸಮ್ಮತಿಯ ಸಂಬಂಧವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೇವಲ 19 ವರ್ಷದ ಯುವಕನನ್ನು ಜೈಲಿನಲ್ಲೇ ಮುಂದುವರಿಸುವುದು ಆತನ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಹೊರ ಜಗತ್ತಿಗಿಂತ ಜೈಲಿನ ವಾತಾವರಣವೇ ಆತನಿಗೆ ಹೆಚ್ಚಿನ ಅಪಾಯ ಉಂಟುಮಾಡಬಹುದು ಎಂದು ನ್ಯಾಯಾಲಯ ಹೇಳಿದೆ.

ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆ ನೀಡಿರುವ ಹೈಕೋರ್ಟ್, ಜೈಲು ಅಧಿಕಾರಿಗಳಿಗೆ ಇ-ಮೇಲ್ ಮೂಲಕ ತಕ್ಷಣ ಆದೇಶದ ಪ್ರತಿಯನ್ನು ರವಾನಿಸಿ, ಯುವಕನನ್ನು ಕೂಡಲೇ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಪ್ರಕರಣದ ಹಿನ್ನೆಲೆ

19 ವರ್ಷದ ಧನುಷ್ ಹಾಗೂ ಅದೇ ವಯಸ್ಸಿನ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕ ಯುವತಿಯ ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ಧನುಷ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರ) ಮತ್ತು ಸೆಕ್ಷನ್ 69 (ಮದುವೆಯಾಗುವ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಬಂಧ ಬೆಳೆಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಯುವಕನ ಬಿಡುಗಡೆಗೆ ಆದೇಶ ನೀಡಿ ಮುಂದಿನ ವಿಚಾರಣೆಗೆ ತಡೆ ನೀಡಿದೆ.

ಶಾಲೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅತಿಥಿ ಶಿಕ್ಷಕ: ಹೃದಯಾಘಾತದಿಂದ 29 ವರ್ಷದ ಯುವಕ ಸಾವು

0

ರಾಯಚೂರು: ಮಸ್ಕಿ ತಾಲೂಕಿನ ಮೆದಿಕಿನಾಳ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರೊಬ್ಬರು ವಿದ್ಯಾರ್ಥಿಗಳೊಂದಿಗೆ ಆಟವಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಾಗರಬೆಂಚಿ ಗ್ರಾಮದ 29 ವರ್ಷದ ವೀರನಗೌಡ ಪಾಟೀಲ್ ಮೃತ ಶಿಕ್ಷಕರಾಗಿದ್ದಾರೆ. ಮಧ್ಯಾಹ್ನ ಊಟದ ನಂತರ ಶಾಲಾ ಆವರಣದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ನೆಲಕ್ಕುರುಳಿದ್ದಾರೆ.

ಸಹ ಶಿಕ್ಷಕರು ಹಾಗೂ ಸ್ಥಳೀಯರು ತಕ್ಷಣ ಅವರನ್ನು ಮಸ್ಕಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರೂ, ಆಸ್ಪತ್ರೆಗೆ ತಲುಪುವ ಮುನ್ನವೇ ಅವರು ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಯುವ ವಯಸ್ಸಿನಲ್ಲೇ ಶಿಕ್ಷಕರ ಅಕಾಲಿಕ ನಿಧನ ಶಾಲೆಯ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರಲ್ಲಿ ತೀವ್ರ ದುಃಖ ಮತ್ತು ಆತಂಕ ಮೂಡಿಸಿದೆ.

ಜಿಲ್ಲಾ ನ್ಯಾಯಾಲಯಗಳ ಮೇಲೆ ಮತ್ತೆ ಬಾಂಬ್ ಭೀತಿ! ಹಾವೇರಿ, ಧಾರವಾಡ, ಕೊಡಗಿನಲ್ಲಿ ಹೈ ಅಲರ್ಟ್ – ಶಾಲೆಯೂ ಖಾಲಿ

0

ಹಾವೇರಿ: ಹಾವೇರಿ, ಧಾರವಾಡ ಹಾಗೂ ಕೊಡಗು ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ನ್ಯಾಯಾಲಯಗಳ ಜೊತೆಗೆ ಮಡಿಕೇರಿಯ ಕೇಂದ್ರೀಯ ವಿದ್ಯಾಲಯಕ್ಕೂ ಬೆದರಿಕೆ ಸಂದೇಶ ಬಂದಿರುವುದರಿಂದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾರಿ ಬೆದರಿಕೆ ಸಂದೇಶ ಬಂದ ತಕ್ಷಣ ಕಲಾಪಗಳನ್ನು ಸ್ಥಗಿತಗೊಳಿಸಿ, ನ್ಯಾಯಾಧೀಶರು, ವಕೀಲರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನು ಹೊರಗೆ ಸ್ಥಳಾಂತರಿಸಲಾಯಿತು. ಕೋರ್ಟ್ ಆವರಣ, ಕಟ್ಟಡ ಹಾಗೂ ಪಾರ್ಕಿಂಗ್ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ದುಷ್ಕರ್ಮಿಗಳು ಮಧ್ಯಾಹ್ನ 2.15ಕ್ಕೆ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಕಳುಹಿಸಿದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಶನಿವಾರದ ನ್ಯಾಯಾಂಗ ಕಲಾಪಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಮಡಿಕೇರಿಯ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಯಿತು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಶಾಲಾ ಆವರಣದ ಸಂಪೂರ್ಣ ಶೋಧ ನಡೆಸಲಾಗಿದೆ. ಈ ಬೆಳವಣಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿತು.

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಕಳೆದ ಎಂಟು ದಿನಗಳಲ್ಲಿ ಮೂರನೇ ಬಾರಿ ಬಾಂಬ್ ಬೆದರಿಕೆ ಬಂದಿದೆ. ಈ ಬಾರಿ ‘ಅನ್ನನಾಥಮ್ ಅರಿಯಪ್ಪನ್’ ಹೆಸರಿನಲ್ಲಿ ಕಳುಹಿಸಲಾದ ಇ-ಮೇಲ್‌ನಲ್ಲಿ ಮೂರು ಗಂಟೆಯೊಳಗೆ ಬಾಂಬ್ ಸ್ಫೋಟಿಸುವುದಾಗಿ ಉಲ್ಲೇಖಿಸಲಾಗಿದೆ. ಪ್ರತಿ ಬೆದರಿಕೆ ಸಂದೇಶದ ಬಳಿಕ ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಇತ್ತೀಚಿನ ಪ್ರಕರಣದಲ್ಲೂ ತನಿಖೆ ಮುಂದುವರಿದಿದೆ.

ಶಿರಾದಲ್ಲಿ ಭೀಕರ ದುರಂತ! ಪ್ರೇಯಸಿಗೆ ಚಾಕು ಇರಿದು ಕಾರಿನಲ್ಲೇ ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಯುವಕ ಸಜೀವ ದಹನ

0

ತುಮಕೂರು: ಶಿರಾ ತಾಲೂಕಿನ ಜೋಗಿಹಳ್ಳಿ ಸಮೀಪ ಪ್ರೇಮಿಗಳ ನಡುವಿನ ವೈಷಮ್ಯ ರಕ್ತರಂಜಿತ ದುರಂತಕ್ಕೆ ಕಾರಣವಾಗಿದ್ದು, ಯುವತಿಗೆ ಚಾಕುವಿನಿಂದ ಇರಿದ ಬಳಿಕ ಕಾರಿನೊಳಗೆ ಪೆಟ್ರೋಲ್ ಬಾಂಬ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದ್ದು, ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಸಂಭವಿಸಿದ ಸ್ಫೋಟದಲ್ಲಿ ಆತ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾನೆ. ಘಟನೆಯ ವೇಳೆ ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಬೆಂಗಳೂರಿನಿಂದ ಅಂಕೋಲ ಕಡೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಆರೋಪಿ ನಾಗೇಂದ್ರ ಈ ಕೃತ್ಯವನ್ನು ಪೂರ್ವಯೋಜಿತವಾಗಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಆತ ಮೊದಲೇ ಬಾಡಿಗೆ ಕಾರು ಮಾಡಿಕೊಂಡು ಪೆಟ್ರೋಲ್ ಬಾಂಬ್‌ನ್ನು ಜೊತೆಗೆ ತಂದಿದ್ದ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಪ್ರೇಮ ಸಂಬಂಧದ ಹಿನ್ನೆಲೆ ಘಟನೆ ನಡೆದಿರುವ ಸಾಧ್ಯತೆಯನ್ನು ಪೊಲೀಸರು ಎಲ್ಲ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ತುಮಕೂರು ಎಸ್‌ಪಿ ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಸತ್ಯಾಸತ್ಯತೆ ಬಯಲಿಗೆಳೆಯಲು ತನಿಖೆ ಚುರುಕುಗೊಳಿಸಲಾಗಿದೆ.

ಮುಳ್ಳಯ್ಯನಗಿರಿಯಲ್ಲಿ ಟ್ರಾಫಿಕ್‌ ಅಬ್ಬರ! ಆನ್‌ಲೈನ್ ಟಿಕೆಟ್ ನಿಯಮ ಉಲ್ಲಂಘನೆ ಆರೋಪ – ವಾಹನ ದಟ್ಟಣೆಯಿಂದ ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ಸಾಲು-ಸಾಲು ರಜೆ ಪ್ರಯುಕ್ತ ಮುಳ್ಳಯ್ಯನಗಿರಿ, ದತ್ತಪೀಠ ಹಾಗೂ ಗಾಳಿಕೆರೆ ಸೇರಿದಂತೆ ಚಿಕ್ಕಮಗಳೂರಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ದಂಡೇ ಹರಿದು ಬಂದಿದೆ. ಏಕಾಏಕಿ ಸಾವಿರಾರು ವಾಹನಗಳು ಗಿರಿಭಾಗ ಪ್ರವೇಶಿಸಿದ ಪರಿಣಾಮ ಭಾರೀ ಟ್ರಾಫಿಕ್ ಉಂಟಾಗಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಪಂಡರವಳ್ಳಿ–ಸೀತಾಳಯ್ಯನಗಿರಿ ಮಾರ್ಗದ ಕಿರಿದಾದ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ಗಂಟೆಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕಿ ಹೈರಾಣಾಗಿದ್ದಾರೆ. ಸ್ಥಳದಲ್ಲಿ ವಾಹನಗಳ ಉದ್ದನೆಯ ಸಾಲು ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಾಗೂ ಚೆಕ್‌ಪೋಸ್ಟ್ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.

ಈ ನಡುವೆ ಪ್ರವಾಸೋದ್ಯಮ ಇಲಾಖೆಯ ಆನ್‌ಲೈನ್ ಟಿಕೆಟ್ ನಿಯಮ ಪಾಲನೆಯಾಗುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಅಧಿಕೃತ ವ್ಯವಸ್ಥೆಯನ್ನು ಕಡೆಗಣಿಸಿ, ಒಂದೊಂದು ಕಾರಿಗೆ ₹1,000ರಿಂದ ₹1,500 ವರೆಗೆ ಹಣ ಪಡೆದು ಗಿರಿಭಾಗಕ್ಕೆ ಪ್ರವೇಶ ಕಲ್ಪಿಸಲಾಗುತ್ತಿದೆ ಎನ್ನಲಾಗಿದ್ದು, ಇದರಿಂದಲೇ ವಾಹನಗಳ ಸಂಖ್ಯೆ ನಿಯಂತ್ರಣ ತಪ್ಪಿ ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂಬ ಆರೋಪಗಳು ವ್ಯಕ್ತವಾಗಿವೆ.

ಭಕ್ತಿಭಾವದ ಮೇಳ: ಮಂತ್ರಾಲಯದಲ್ಲಿ ‘ರಾಯರ ದರ್ಶನ’ ಆಲ್ಬಂ ಸಾಂಗ್ ಬಿಡುಗಡೆ

ರಾಯಚೂರು: ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ‘ರಾಯರ ದರ್ಶನ’ ಎಂಬ ಭಕ್ತಿಗೀತೆ ಆಲ್ಬಂ ಸಾಂಗ್ ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿದೆ.

ರಾಯರ ಮಠದ ಆವರಣದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಭಕ್ತಿ ಮತ್ತು ಸಂಗೀತದ ಸಂಯೋಜನೆಯೊಂದಿಗೆ ವಿಶೇಷ ಸಾಂಸ್ಕೃತಿಕ ವಾತಾವರಣ ನಿರ್ಮಾಣವಾಯಿತು. ರಾಯರ ಮಠ, ಗುರು ರಾಘವೇಂದ್ರ ಸ್ವಾಮಿಗಳು ಹಾಗೂ ಪ್ರಸ್ತುತ ಪೀಠಾಧಿಪತಿಗಳ ಕುರಿತಾದ ಈ ಆಲ್ಬಂ ಸಾಂಗ್ ಭಕ್ತಿಭಾವವನ್ನು ಪ್ರತಿಬಿಂಬಿಸುವಂತೆ ನಿರ್ಮಿಸಲಾಗಿದೆ.

ಅಜನೀಶ್ ಬಿ ಲೋಕನಾಥ್, ಸಿಆರ್ ಬಾಬಿ ಹಾಗೂ ಎಬಿಬಿಎಸ್ ಸ್ಟುಡಿಯೋ ತಂಡದ ಸಹಯೋಗದಲ್ಲಿ ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಈ ಆಲ್ಬಂ ಸಾಂಗ್ ಅನ್ನು ರೂಪಿಸಿದ್ದು, ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಸಾಂಗ್ ಅನ್ನು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರು ಶ್ರೀನಾಥ್, ತಾರಾ, ಗಿರಿಜಾ ಲೋಕೇಶ್, ಮುಖ್ಯಮಂತ್ರಿ ಚಂದ್ರು, ಸುಧಾರಾಣಿ ಮತ್ತು ನೆನಪಿರಲಿ ಪ್ರೇಮ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು.

ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಕಲಾವಿದರು ಹಾಡು ಮತ್ತು ನೃತ್ಯ ಪ್ರದರ್ಶನಗಳ ಮೂಲಕ ಭಕ್ತಿಭಾವವನ್ನು ಜೀವಂತಗೊಳಿಸಿದರು.

ನಿಶ್ಚಿತಾರ್ಥ ಮಾಡ್ಕೊಂಡಿದ್ದ ಬಾ ಮಾ ಹರೀಶ್‌ ಪುತ್ರ ಉಲ್ಲಾಸ್‌ ಗೌಡ ನಿಧನ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾ ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಟ್ರೆಕ್ಕಿಂಗ್ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗದ ಕೊಡಚಾದ್ರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ.

ಮೃತ ಉಲ್ಲಾಸ್ ಗೌಡ ಅವರ ಮದುವೆ ಚಂದನಾ ಗೌಡ ಅವರೊಂದಿಗೆ ನಿಶ್ಚಿತಗೊಂಡಿತ್ತು. ಕುಟುಂಬದವರು ಈಗಾಗಲೇ ನಿಶ್ಚಿತಾರ್ಥದ ಭಾಗವಾಗಿ ದೀಪದ ಶಾಸ್ತ್ರವನ್ನು ಸರಳವಾಗಿ ನೆರವೇರಿಸಿದ್ದರು. ಮದುವೆ ಇದೇ ವರ್ಷ ನಡೆಯಬೇಕಾಗಿತ್ತು ಎಂದು ಕುಟುಂಬದವರು ತಿಳಿಸಿದ್ದಾರೆ.

ಮದುವೆ ಸಿದ್ಧತೆಗಳು ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ಅಚಾನಕ್ ದುರಂತ ಕುಟುಂಬಕ್ಕೆ ಭಾರೀ ಆಘಾತವನ್ನುಂಟು ಮಾಡಿದೆ. ಭಾ ಮಾ ಹರೀಶ್ ಅವರು ಪುತ್ರನ ವಿವಾಹ ಸಂಭ್ರಮಕ್ಕಾಗಿ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಟ್ರೆಕ್ಕಿಂಗ್ ವೇಳೆ ಉಲ್ಲಾಸ್ ಗೌಡ ಆರೋಗ್ಯ ಹದಗೆಟ್ಟಿದ್ದು, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಅಧಿಕೃತ ವಿವರಗಳು ಇನ್ನಷ್ಟೇ ನಿರೀಕ್ಷಿಸಲಾಗಿವೆ.

ಸಂಭ್ರಮದ ಕೆಂಪೇಗೌಡ ಜಯಂತಿ; ನಾಡಪ್ರಭುವಿಗೆ ವಂದಿಸಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರು ನಿರ್ಮಾತೃ, ಸರ್ವ ಜನಾಂಗದ ನಾಯಕ, ಬೆಂದಕಾಳೂರು ಕಟ್ಟಿದ ದೂರದೃಷ್ಟಿಯ ನಾಯಕ, ಕೆರೆಗಳನ್ನು ನಿರ್ಮಿಸಿದ ಮಣ್ಣಿನ ಮಗ, ಕೋಟೆ ಕೊತ್ತಲಗಳನ್ನು ಕಟ್ಟಿದ ಕಲಿ ವೀರ ಕೆಂಪೇಗೌಡರ 517 ನೇ ಜಯಂತಿಯನ್ನು ಸಿಎಂ‌ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ‌ಅತ್ಯಂತ ಅರ್ಥಪೂರ್ಣವಾಗಿ, ವಿಜೃಂಭಣೆಯಿಂದ ಆಚರಿಸಲಾಯಿತು.

ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಬೃಹತ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಡಿ.ಕೆ. ಶಿವಕುಮಾರ್ ಅವರು 517 ನೇ ಕೆಂಪೇಗೌಡ ಜಯಂತಿಗೆ ಚಾಲನೆ ನೀಡಿದರು.

ಪ್ರತಿಮೆಯ ಪಾದಗಳಿಗೆ ಸಾಂಕೇತಿಕವಾಗಿ ಡಿ.ಕೆ.ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಆದಿಚುಂಚನಗಿರಿಯ ಸ್ವಾಮೀಜಿಗಳಾದ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಸಿರಾ ತಾಲ್ಲೂಕಿನ ಸ್ಪಟಿಕಪುರಿಯ ನಂಜಾವಧೂತ ಸ್ವಾಮೀಜಿ ಹಾಗೂ ವಿಶ್ವ ಒಕ್ಕಲಿಗರ ಸಂಸ್ಥಾನದ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಈ ವೇಳೆ ಜೊತೆಯಾದರು. ನಂತರ ಪ್ರತಿಮೆಯ ಪಕ್ಕದಲ್ಲಿ ನಿರ್ಮಾಣ‌ ಮಾಡಿರುವ ಥೀಮ್ ಪಾರ್ಕ್ ಅನ್ನು ವೀಕ್ಷಿಸಿದರು. ನಂತರ ಶಿವಕುಮಾರ್ ಅವರು ಮಾತನಾಡಿದರು.

“ನಾಡಿನ ಸಮಸ್ತ ಜನರಿಗೆ ಕೆಂಪೇಗೌಡ ಜಯಂತಿ ಶುಭಾಶಯಗಳು. ದೂರದೃಷ್ಟಿಯ ಮಹಾಚೇತನ ಕೆಂಪೇಗೌಡರನ್ನು ಸ್ಮರಿಸುವ ಭಾಗ್ಯ ನಮ್ಮೆಲ್ಲರಿಗೂ ಲಭಿಸಿದೆ. ಕೆಂಪೇಗೌಡರ, ಚಿಂತನೆ, ಆಚಾರ, ವಿಚಾರ ಎಲ್ಲವನ್ನು ಗಮನಲ್ಲಿಟ್ಟುಕೊಂಡು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮ್ಯಾರಥಾನ್ ಓಟ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಕಾರ್ಯಕ್ರಮ, ಮಾಗಡಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಕೋಟೆ ಸಮಗ್ರ ಅಭಿವೃದ್ಧಿ ಕಾರ್ಯ ಹಮ್ಮಿಕೊಂಡಿದ್ದೇವೆ. ಮಾಗಡಿಯಲ್ಲಿರುವ ಕೆಂಪೇಗೌಡರ ಸಮಾಧಿ ಬಳಿ 10 ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು, ಈಗಾಗಲೇ ಐದೂವರೆ ಎಕರೆ ಖರೀದಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಕೆಂಪೇಗೌಡರ ಇತಿಹಾಸ ಪರಿಚಯಕ್ಕೆ ಕಾರ್ಯಯೋಜನೆ ರೂಪಿಸಲು ಸೂಚನೆ:

“ಬೆಂಗಳೂರಿಗೆ ಬರುವವರಿಗೆ ಕೆಂಪೇಗೌಡರ ಗುರುತು ಪರಿಚಯಿಸಲು, ಟ್ರಂಪೆಟ್ ವೃತ್ತದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿಮಾನ ನಿಲ್ದಾಣ ಪ್ರಾಧಿಕಾರದವರಿಗೆ ಸೂಚನೆ ನೀಡಿದ್ದೇವೆ. ಅವರು ಸಧ್ಯದಲ್ಲೇ ಕಾರ್ಯಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಆ ಮೂಲಕ ಬೆಂಗಳೂರಿಗೆ ಬರುವವರು ಕೆಂಪೇಗೌಡರನ್ನು ಸ್ಮರಿಸುವಂತೆ ಮಾಡಲಾಗುವುದು” ಎಂದು ತಿಳಿಸಿದರು.

“ಕಳೆದ ವರ್ಷ ಸುಮ್ಮನಹಳ್ಳಿ ಬಳಿ ಕೆಂಪೇಗೌಡ ಭವನ ನಿರ್ಮಾಣಕ್ಕೆ ಐದು ಎಕರೆ ಜಾಗವನ್ನು ನೀಡಿ ಭೂಮಿ ಪೂಜೆ ಮಾಡಿದ್ದೆವು. ಜೊತೆಗೆ ಅಲ್ಲಿ ಕೆಂಪೇಗೌಡರ ಹೆಸರಿನಲ್ಲಿ ಟೌನ್ ಪ್ಲಾನಿಂಗ್ ಕಾಲೇಜು ಮಾಡಲು ಮಾರ್ಗದರ್ಶನ ನೀಡಲಾಗಿದೆ.

ಹಿಂದಿನ ಸರ್ಕಾರ ಈ ಪ್ರತಿಮೆಯನ್ನು ಚೆನ್ನಾಗಿ ಕಟ್ಟಿದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಈ ಪ್ರತಿಮೆ ಕಾಣುತ್ತಿಲ್ಲ. ಇದರ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂದು ನಾನು, ಸ್ವಾಮೀಜಿಗಳು ಹಾಗೂ ಕೃಷ್ಣ ಬೈರೇಗೌಡರೊಂದಿಗೆ ಚರ್ಚೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರವರಿಗೆ ನಿರ್ದೇಶನ ನೀಡಲಾಗಿದೆ” ಎಂದು ತಿಳಿಸಿದರು.

“108 ಅಡಿಯ ಈ ಕಂಚಿನ ಪ್ರತಿಮೆ ಬಳಿ ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಹಸಿರು ರೂಪಿಸಲಾಗಿದೆ. ಇಲ್ಲಿನ ಕಾಮಗಾರಿ ಮುಗಿದ ಬಳಿಕ ಇದನ್ನು ಉದ್ಘಾಟನೆ ಮಾಡುತ್ತೇವೆ. ಈ ಥೀಮ್ ಪಾರ್ಕ್ ಅನ್ನು ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಣೆ ಮಾಡಲು ಸೂಚಿಸಿದ್ದೇನೆ. ಇದಕ್ಕೆ ಪ್ರಾಧಿಕಾರವೂ ಒಪ್ಪಿದ್ದು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ಪ್ರತಿ ವರ್ಷ ಒಂದೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕ್ರಮ

“ಇನ್ನು ಮುಂದೆ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕೇವಲ ವಿಧಾನಸೌಧ ಹೊರತಾಗಿ, ಬೆಂಗಳೂರಿನ 28 ಕ್ಷೇತ್ರಗಳಲ್ಲಿ ಮಾಡಲು ತೀರ್ಮಾನಿಸಿದ್ದೇವೆ. ಇಂದು ಯಶವಂತಪುರದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದು, ಮುಂದಿನ ವರ್ಷ ಶಾಸಕರೊಂದಿಗೆ ಚರ್ಚಿಸಿ ಬ್ಯಾಟರಾಯನಪುರ, ಯಲಹಂಕ, ಕೆ.ಆರ್ ಪುರ ಅಥವಾ ಬೇರೆ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು.

ಅದರೊಂದಿಗೆ ಮುಂದಿನ 28 ವರ್ಷಗಳ ಕಾಲ ಒಂದೊಂದು ಕ್ಷೇತ್ರದಲ್ಲಿ ಆಚರಣೆ ಮಾಡಲಾಗುವುದು. ಇನ್ನು ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಈ ಕಾರ್ಯಕ್ರಮ ಆಚರಣೆಗೆ ಜಿಬಿಎ ವತಿಯಿಂದ ಆದೇಶ ಮಾಡಲಾಗಿದೆ. ಕೆಂಪೇಗೌಡರ ಆಚಾರ ವಿಚಾರ ಅಳವಡಿಸಿಕೊಂಡು ಬೆಂಗಳೂರಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು. ಬೆಂಗಳೂರಿಗೆ ಹೊಸ ರೂಪ ನೀಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಕೆಂಪೇಗೌಡರು ಎಲ್ಲಾ ವರ್ಗದ ಆಸ್ತಿ

“ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.30 ಕೋಟಿ ವಾಹನಗಳ ಸಂಖ್ಯೆ ಇವೆ. ನಾವು ಎಷ್ಟೇ ಮೆಟ್ರೋ, ಸಾರ್ವಜನಿಕ ಸಾರಿಗೆ ತಂದರೂ ಒಬ್ಬರು ಒಂದೊಂದು ವಾಹನ ಇಟ್ಟುಕೊಂಡಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಸಾಧಿಸಲು ಮುಂದಾಗಿದ್ದೇವೆ.

ನಮ್ಮ ಮುಂದಿನ 2 ವರ್ಷಗಳ ಅವಧಿಯಲ್ಲಿ 500 ಕಿ.ಮೀ ಉದ್ದದ ಮೆಟ್ರೋ ವಿಸ್ತರಣೆಗೆ ಆಲೋಚನೆ ಮಾಡಿದ್ದು, ಕೃಷ್ಣ ಬೈರೇಗೌಡರು ಈ ಬಗ್ಗೆ ಚಿಂತನೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಒಂದು ಜಾತಿಗೆ ಸೀಮಿತವಲ್ಲ. ಇದು ಕೆಂಪೇಗೌಡರ ದೂರದೃಷ್ಟಿ, ಆಚಾರ, ವಿಚಾರಗಳ, ನೀತಿಯನ್ನು ಬಳಸಿಕೊಳ್ಳುವ ಕಾರ್ಯಕ್ರಮವಾಗಿದೆ. ಕೆಂಪೇಗೌಡರು ಎಲ್ಲಾ ವರ್ಗದ ಆಸ್ತಿಯಾಗಿದ್ದಾರೆ” ಎಂದು ತಿಳಿಸಿದರು.