Home Blog

ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಗರ್ಭಿಣಿ ಮಹಿಳೆ ಆತ್ಮಹತ್ಯೆ!

ಕಲಬುರಗಿ: ಒಂದೂವರೆ ವರ್ಷದ ಮಗುವಿನೊಂದಿಗೆ ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಅಂಬಿಕಾ (25) ಹಾಗೂ ಅವರ ಒಂದೂವರೆ ವರ್ಷದ ಪುತ್ರ ಆರಾಧ್ಯ ಎಂದು ಗುರುತಿಸಲಾಗಿದೆ. ಅಂಬಿಕಾ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದುಬಂದಿದೆ.

ಮೂರು ವರ್ಷಗಳ ಹಿಂದೆ ಅಂಬಿಕಾ ಅವರು ವೀರಭದ್ರಪ್ಪ ಎಂಬುವರನ್ನು ವಿವಾಹವಾಗಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಗೆ ತೆರಳಿದ್ದ ಅವರು ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು.

ಈ ವೇಳೆ ಗ್ರಾಮದ ಹೊರವಲಯದಲ್ಲಿರುವ ತೆರೆದ ಬಾವಿಯ ಸಮೀಪ ಅಂಬಿಕಾ ಅವರ ಚಪ್ಪಲಿ ಪತ್ತೆಯಾಗಿದೆ. ಇದರಿಂದ ಅನುಮಾನಗೊಂಡು ಬಾವಿಯಲ್ಲಿ ಶೋಧ ಕಾರ್ಯ ನಡೆಸಿದಾಗ ತಾಯಿ ಮತ್ತು ಮಗುವಿನ ಮೃತದೇಹಗಳು ಪತ್ತೆಯಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ನರೋಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ದುರ್ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮಾರಾಟಕ್ಕೆ ಸಾಗಿಸುತ್ತಿದ್ದ 32 ಲೀಟರ್ ಸೇಂದಿ ಜಪ್ತಿ: ದ್ವಿಚಕ್ರ ವಾಹನ ಸಮೇತ ವ್ಯಕ್ತಿ ಅರೆಸ್ಟ್!

ಹಗರಿಬೊಮ್ಮನಹಳ್ಳಿ: ಅಕ್ರಮವಾಗಿ ಸೇಂದಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿ, ಆತನಿಂದ 32 ಲೀಟರ್ ಸೇಂದಿ ಹಾಗೂ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.

ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ಅಪರಾಧ) ಬೆಳಗಾವಿ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹೊಸಪೇಟೆ ವಿಭಾಗ, ಅಬಕಾರಿ ಉಪ ಆಯುಕ್ತರು ವಿಜಯನಗರ ಜಿಲ್ಲೆ ಹಾಗೂ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಜೂನ್ 24ರಂದು ರಾತ್ರಿ ಸುಮಾರು 8.30 ಗಂಟೆಗೆ ತಾಲೂಕಿನ ಹೊಸ ಆನಂದದೇವನಹಳ್ಳಿ ಗ್ರಾಮದ ಚಂದ್ರು ಡಾಬಾ ಸಮೀಪ ಅಬಕಾರಿ ಉಪನಿರೀಕ್ಷಕ-1 ಮಹಾಂತೇಶ್ ಸವಳಿ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.

ಈ ವೇಳೆ ಕಂದು ಬಣ್ಣದ ಟಿವಿಎಸ್ ಜೂಪಿಟರ್ ಕ್ಲಾಸಿಕ್ (ಕೆಎ-41 ಇವೈ-0511) ದ್ವಿಚಕ್ರ ವಾಹನದಲ್ಲಿ ಮಾರಾಟ ಉದ್ದೇಶದಿಂದ 32 ಲೀಟರ್ ಸೇಂದಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಯಿತು. ಆರೋಪಿಯಿಂದ ಸೇಂದಿ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯಕ್ಕೆ ಪ್ರಥಮ ವರ್ತಮಾನ ವರದಿ ಸಲ್ಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕ ಮಹಾಂತೇಶ್ ಸವಳಿ ಹಾಗೂ ವಲಯ ಕಚೇರಿಯ ಸಿಬ್ಬಂದಿ ವಿಠ್ಠಲ್ ಗೋಶ್ಲೀ ಸೇರಿದಂತೆ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ: ಯುವಕ ಅರೆಸ್ಟ್‌, 5 ಕೆಜಿ ಸಿಲ್ವರ್ ಜಪ್ತಿ!

ಬೆಂಗಳೂರು: ನಗರದ ಹಲಸೂರಿನ ಕಾರ್ ಸ್ಟ್ರೀಟ್‌ನಲ್ಲಿ ನಡೆದ ಬೆಳ್ಳಿ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ತಮಿಳುನಾಡು ಮೂಲದ ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ತೇಜು ಎಂದು ಗುರುತಿಸಲಾಗಿದ್ದು, ಆತ ಅಂಗಡಿಯ ಗೋಡೆ ಕೊರೆದು ಸುಮಾರು 10 ಕೆಜಿ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಇದೇ ಮೊದಲ ಬಾರಿಗೆ ಆತ ಇಂತಹ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಬಂಧಿತನಿಂದ ಸುಮಾರು 5 ಕೆಜಿ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಳಿದ ಬೆಳ್ಳಿ ಆಭರಣಗಳ ಪತ್ತೆಗಾಗಿ ತನಿಖೆ ಮುಂದುವರಿದಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತನ ಅಂತಿಮ ದರ್ಶನವೂ ಸಿಗಲಿಲ್ಲ; ಚಿತಾಗಾರದಲ್ಲಿ ಕಣ್ಣೀರಿಟ್ಟ ಕೃಷಿ ತಾಪಂಡ

ಬೆಂಗಳೂರು: ಉದ್ಯಮಿ ವೈಶಾಕ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಭಾವುಕ ಬೆಳವಣಿಗೆ ನಡೆದಿದ್ದು, ಅಂತಿಮ ದರ್ಶನಕ್ಕಾಗಿ ಚಾಮರಾಜಪೇಟೆ ಚಿತಾಗಾರಕ್ಕೆ ಬಂದ ನಟಿ ಕೃಷಿ ತಾಪಂಡ ಅವರಿಗೆ ಸ್ನೇಹಿತನ ಮುಖ ನೋಡಲು ಅವಕಾಶ ಸಿಗದೇ ಕಣ್ಣೀರಿಡುತ್ತಾ ವಾಪಸ್ಸಾಗಿದ್ದಾರೆ.

ಚಿತಾಗಾರಕ್ಕೆ ಕೃಷಿ ಆಗಮಿಸುವಷ್ಟರಲ್ಲಿ ವೈಶಾಕ್ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಿದ್ದವು. ಈ ವೇಳೆ ಕುಟುಂಬಸ್ಥರು ಕೃಷಿಗೆ ದರ್ಶನಕ್ಕೆ ಅವಕಾಶ ನೀಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಪರಿಣಾಮ ಕೃಷಿ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ತೆರಳಿದ್ದು, ಕಾರಿನಲ್ಲೇ ಕುಳಿತು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಜೂನ್ 24ರಂದು ಆರ್.ಆರ್.ನಗರದ ಕೃಷಿ ತಾಪಂಡ ನಿವಾಸದಲ್ಲೇ ವೈಶಾಖ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಹಲವು ಬಾರಿ ಕೃಷಿಗೆ ಕರೆ ಮಾಡಿದ್ದಲ್ಲದೆ, ಬದುಕಲು ಇಷ್ಟವಿಲ್ಲ ಎಂದು ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ.

ಘಟನೆ ವೇಳೆ ಕೃಷಿ ನೆಲಮಂಗಲದಲ್ಲಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ವೈಶಾಖ್ ಕುಟುಂಬಕ್ಕೆ ವಿಷಯ ಮುಟ್ಟಿಸಿದ್ದರು. ಬಳಿಕ ಮಧ್ಯರಾತ್ರಿ ಮನೆಗೆ ಬಂದು ನೋಡಿದಾಗ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ರಾಜರಾಜೇಶ್ವರಿ ನಗರ ಪೊಲೀಸರಿಗೆ ಕೃಷಿಯೇ ಮಾಹಿತಿ ನೀಡಿದ್ದರು.

ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ವೈಶಾಖ್ ಮೊಬೈಲ್ ಹಾಗೂ ಇತರೆ ಡಿಜಿಟಲ್ ಮಾಹಿತಿ ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಲಮೇಲದಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಆರೋಪ: ಕಡಗಂಚಿ ಹಾಸ್ಟೆಲ್ ವಿವಾದದ ಬಳಿಕ ಮತ್ತೊಂದು ಸಂಚಲನ

0

ವಿಜಯಪುರ: ಆಲಮೇಲ ಪಟ್ಟಣದಲ್ಲಿ ಕೆಬಿಜೆಎನ್‌ಎಲ್ ಹೊಲಗಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಡಾಬಾದಲ್ಲಿ ಮದ್ಯಪಾನ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿ ಸಮಯದಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿರುವ ಆರೋಪದಡಿ ಸಂಬಂಧಪಟ್ಟವರ ವಿರುದ್ಧ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ವೈರಲ್ ದೃಶ್ಯದಲ್ಲಿ ಹೊಲಗಾಲುವೆ ವಿಭಾಗದ ಮ್ಯಾನೇಜರ್ ಶಶಿಧರ್ ಚೌಹಾನ್, ದ್ವಿತೀಯ ದರ್ಜೆ ಸಹಾಯಕ ಮುರಳಿದರ್ ಕುಲಕರ್ಣಿ ಹಾಗೂ ಸಿಪಾಯಿ ಶಂಕರಯ್ಯ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಧಿಕಾರಿಗಳು ಮಧ್ಯಾಹ್ನ ವೇಳೆಯಲ್ಲಿ ಕಚೇರಿಗೆ ಗೈರಾಗುವುದು ಸಾಮಾನ್ಯವಾಗಿದ್ದು, ಬಾರ್ ಮತ್ತು ಡಾಬಾಗಳಲ್ಲಿ ಸಮಯ ಕಳೆಯುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ.

ಇದರ ಮಧ್ಯೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಹಾಸ್ಟೆಲ್ ವಿವಾದವೂ ಮತ್ತೆ ಚರ್ಚೆಗೆ ಬಂದಿದೆ. ವಿದ್ಯಾರ್ಥಿನಿಯರು ತಡರಾತ್ರಿ ಹುಡುಗರ ಜೊತೆ ಮದ್ಯಪಾನ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದರೆ, ಪ್ರಕರಣವನ್ನು ಮುಚ್ಚಿಹಾಕಲು ವಾರ್ಡನ್ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್ ಆಗಿತ್ತು.

ಎರಡೂ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ.

ಬಿಜೆಪಿಯಲ್ಲಿನ ಅಲ್ಲೋಲ-ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆಯೇ ಕಾರಣ: ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ

ಬೆಂಗಳೂರು: ಬಿಜೆಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಗೊಂದಲಗಳಿಗೆ ಪಕ್ಷದ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ಡಮತದಾನ ಮಾಡಿದ ಶಾಸಕರು ರಾಜೀನಾಮೆ ನೀಡಬೇಕು ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದರು.

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಬಗ್ಗೆ ಅಸೂಯೆಯಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದನ್ನು ಹಾಗೂ ಅಶೋಕ್ ಪ್ರತಿಪಕ್ಷ ನಾಯಕರಾಗಿರುವುದನ್ನು ಅವರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರಿಬ್ಬರಿಗೂ ಹೇಗಾದರೂ ಕೆಟ್ಟ ಹೆಸರು ತಂದು ರಾಜಕೀಯವಾಗಿ ದುರ್ಬಲಗೊಳಿಸುವ ಉದ್ದೇಶ ಹೊಂದಿದ್ದಾರೆ ಎಂದು ಸೋಮಶೇಖರ್ ಟೀಕಿಸಿದರು.

ಬಿಜೆಪಿಯ 63 ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಪ್ರಮಾಣ ಮಾಡಿಸುವ ಅಗತ್ಯವಿಲ್ಲ. ಮೊದಲು ಶೋಭಾ ಕರಂದ್ಲಾಜೆ ಅವರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಪ್ರಮಾಣ ಮಾಡಿಸಿದರೆ ಹಲವು ವಿಚಾರಗಳು ಬಹಿರಂಗವಾಗುತ್ತವೆ ಎಂದು ಅವರು ವ್ಯಂಗ್ಯವಾಡಿದರು.

ಪಕ್ಷ ನಮ್ಮನ್ನು ಈಗಾಗಲೇ ಉಚ್ಚಾಟನೆ ಮಾಡಿದೆ. ಹೀಗಿರುವಾಗ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆ ಏನಿದೆ? ಕೇಂದ್ರ ಸಚಿವೆಯಾಗಿದ್ದರೂ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸಿಲ್ಲ. ವಿಜಯೇಂದ್ರ ಮತ್ತು ಅಶೋಕ್ ಅವರನ್ನು ಪದಚ್ಯುತಿಗೊಳಿಸಿ ರಾಜಕೀಯವಾಗಿ ಅವಮಾನಿಸುವುದೇ ಅವರ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಕ್ಷೇತ್ರಕ್ಕೆ ಅನುದಾನ ದೊರೆತಿರುವ ಹಿನ್ನೆಲೆಯಲ್ಲಿ ನಾವು ಅವರಿಗೆ ಬೆಂಬಲ ನೀಡಿದ್ದೇವೆ ಎಂಬುದನ್ನು ಬಹಿರಂಗವಾಗಿಯೇ ಹೇಳಿದ್ದೇವೆ. ನಮ್ಮ ನಿಲುವಿನ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಸೋಮಶೇಖರ್ ಸ್ಪಷ್ಟಪಡಿಸಿದರು.

ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ: ಕೇಂದ್ರಕ್ಕೆ ಚಂದ್ರಬಾಬು ನಾಯ್ಡು ಮನವಿ

ಕೊಪ್ಪಳ: ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ತುಂಗಭದ್ರಾ ಮಂಡಳಿಯ ಸಹಯೋಗದಲ್ಲಿ ಆಯೋಜಿಸಿದ್ದ ತುಂಗಭದ್ರಾ ಜಲಾಶಯದ ನೂತನ 33 ಸ್ಪಿಲ್‌ವೇ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ ಕೆನ್-ಬೆತ್ವಾ ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ ಪಾರ್ವತಿ-ಕಾಳಿಸಿಂಧು-ಚಂಬಲ್ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಸರ್ಕಾರ ಈಗಾಗಲೇ ಕೈಗೆತ್ತಿಕೊಂಡಿರುವುದನ್ನು ಉಲ್ಲೇಖಿಸಿದ ನಾಯ್ಡು, ಇದೇ ಮಾದರಿಯಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೂ ರಾಷ್ಟ್ರೀಯ ಯೋಜನೆಯ ಮಾನ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ದೇಶದ ನೀರಿನ ಸಮಸ್ಯೆಗೆ ದೀರ್ಘಕಾಲಿಕ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳಲು ನದಿಗಳ ಜೋಡಣೆ ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು. ಆದರೆ ಈ ಪ್ರಕ್ರಿಯೆಯಲ್ಲಿ ಯಾವುದೇ ರಾಜ್ಯದ ಹಕ್ಕುಗಳಿಗೆ ಧಕ್ಕೆಯಾಗಬಾರದು ಎಂದು ಸ್ಪಷ್ಟಪಡಿಸಿದ ಅವರು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ನೀರಿನ ಹಕ್ಕುಗಳನ್ನು ಸಂಪೂರ್ಣವಾಗಿ ರಕ್ಷಿಸುವ ರೀತಿಯಲ್ಲಿ ಯೋಜನೆ ಜಾರಿಯಾಗಬೇಕು ಎಂದು ಒತ್ತಿ ಹೇಳಿದರು.

ಮೂರು ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವ ಸಮಗ್ರ ಕ್ರಿಯಾ ಯೋಜನೆ ರೂಪಿಸುವುದರ ಜೊತೆಗೆ, ಅಗತ್ಯವಿದ್ದಲ್ಲಿ ತಮಿಳುನಾಡಿಗೂ ನೀರು ಪೂರೈಸುವ ವ್ಯವಸ್ಥೆಯನ್ನು ಪರಿಗಣಿಸಬೇಕು ಎಂದು ನಾಯ್ಡು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ 1983ರಲ್ಲಿ ಎನ್.ಟಿ. ರಾಮರಾವ್ ಅವರ ನೇತೃತ್ವದಲ್ಲಿ ಅವಿಭಜಿತ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಒಟ್ಟಾಗಿ ಸೇರಿ ಚೆನ್ನೈ ನಗರದ ಕುಡಿಯುವ ನೀರಿನ ಅಗತ್ಯಕ್ಕಾಗಿ 15 ಟಿಎಂಸಿ ನೀರನ್ನು ಒದಗಿಸಿದ್ದ ಐತಿಹಾಸಿಕ ಉದಾಹರಣೆಯನ್ನು ಅವರು ಸ್ಮರಿಸಿದರು.

“ಪ್ರಸ್ತುತ ದೇಶದಲ್ಲಿ ಒಂದೆಡೆ ಭಾರೀ ಪ್ರವಾಹ ಉಂಟಾಗುತ್ತಿದ್ದರೆ, ಮತ್ತೊಂದೆಡೆ ತೀವ್ರ ಬರಗಾಲ ಎದುರಾಗುತ್ತಿದೆ. ಈ ವರ್ಷ ಎಲ್ ನಿನೋ ಪರಿಣಾಮದಿಂದ ತುಂಗಭದ್ರಾ ಮತ್ತು ಆಲಮಟ್ಟಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರಿನ ಹರಿವು ಬಂದಿಲ್ಲ. ಇಂತಹ ಸವಾಲುಗಳನ್ನು ಎದುರಿಸಲು ದೇಶದ ನದಿಗಳನ್ನು ಪರಸ್ಪರ ಜೋಡಿಸುವುದು ಅತ್ಯಂತ ಅಗತ್ಯವಾಗಿದೆ” ಎಂದು ಹೇಳಿದರು.

ಹೆಚ್ಚುವರಿ ನೀರು ಲಭ್ಯವಿರುವ ನದಿಗಳಿಂದ ನೀರಿನ ಕೊರತೆಯಿರುವ ಪ್ರದೇಶಗಳಿಗೆ ನೀರು ಹರಿಸುವ ಮೂಲಕ ಬರಗಾಲದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಬಹುದು. ಜೊತೆಗೆ ರಾಜ್ಯಗಳು, ಜಿಲ್ಲೆಗಳು ಹಾಗೂ ರೈತರ ನಡುವೆ ಉಂಟಾಗುವ ನೀರಿನ ವಿವಾದಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದು ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟರು.

POCSO Case: ವಚನಾನಂದ ಶ್ರೀಗೆ ಹೈಕೋರ್ಟ್ʼನಿಂದ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

ಬೆಂಗಳೂರು/ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ವಚನಾನಂದ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಹಿನ್ನಡೆ ನೀಡಿದ್ದು, ಈ ಹಿಂದೆ ಮಂಜೂರಾಗಿದ್ದ ನಿರೀಕ್ಷಣಾ (ಮುಂಗಡ) ಜಾಮೀನನ್ನು ರದ್ದುಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣ ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ನೀಡಿರುವ ಕ್ರಮದ ಬಗ್ಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ. ಬಳಿಕ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಆದಾಗ್ಯೂ, ವಚನಾನಂದ ಸ್ವಾಮೀಜಿಗೆ ತಾತ್ಕಾಲಿಕ ನಿರಾಳತೆ ನೀಡಿರುವ ನ್ಯಾಯಾಲಯ, ನಿಯಮಿತ (ರೆಗ್ಯುಲರ್) ಜಾಮೀನು ಕೋರಿ ಅರ್ಜಿ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೆ ನಿರೀಕ್ಷಣಾ ಜಾಮೀನಿನ ರಕ್ಷಣೆ ಮುಂದುವರಿಯಲಿದ್ದು, ತಕ್ಷಣದ ಬಂಧನದಿಂದ ತಾತ್ಕಾಲಿಕ ರಕ್ಷಣೆ ದೊರೆತಂತಾಗಿದೆ.

ಪ್ರಕರಣದ ವಿಚಾರಣೆ ವೇಳೆ, ಸ್ವಾಮೀಜಿ ವಿರುದ್ಧ ಗಂಭೀರ ಸ್ವರೂಪದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದನ್ನು ನ್ಯಾಯಾಲಯ ಗಮನಿಸಿದೆ. ಇಂತಹ ಗಂಭೀರ ಆರೋಪಗಳಿರುವ ಸಂದರ್ಭದಲ್ಲಿ ಪ್ರಕರಣ ದಾಖಲಾಗುವ ಮೊದಲುವೇ ನಿರೀಕ್ಷಣಾ ಜಾಮೀನು ನೀಡಿರುವ ವಿಧಾನ ಕಾನೂನುಬದ್ಧವಾಗಿ ಪ್ರಶ್ನಾರ್ಹವಾಗಿದೆ ಎಂಬ ಅಭಿಪ್ರಾಯವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ.

ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ನಿರೀಕ್ಷಣಾ ಜಾಮೀನು ನೀಡಿದ ಕ್ರಮದ ಬಗ್ಗೆ ಕಳವಳ ವ್ಯಕ್ತಪಡಿಸಿ ವಚನಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿತ್ತು. ಬಳಿಕ ನಡೆದ ಮುಂದಿನ ವಿಚಾರಣೆಯಲ್ಲಿ ಜಾಮೀನು ಆದೇಶವನ್ನು ರದ್ದುಗೊಳಿಸುವ ತೀರ್ಮಾನಕ್ಕೆ ಬಂದಿದೆ.

ಇದೀಗ ವಚನಾನಂದ ಸ್ವಾಮೀಜಿ ನಿಯಮಿತ ಜಾಮೀನು ಕೋರಿ ಸಂಬಂಧಪಟ್ಟ ನ್ಯಾಯಾಲಯದ ಮೊರೆ ಹೋಗುವ ಅವಕಾಶ ಹೊಂದಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳತ್ತ ಪ್ರಕರಣದ ಚಿತ್ತ ನೆಟ್ಟಿದೆ.

ವೈಭವ್ ಸೂರ್ಯವಂಶಿಗೆ ಡ್ರೆಸ್ಸಿಂಗ್ ರೂಮ್ ಪ್ರವೇಶ ನಿಷೇಧ! ಯಾಕೆ ಗೊತ್ತಾ..?

0

ಲಂಡನ್: ಭಾರತದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ವಿರುದ್ಧದ ಪಂದ್ಯದ ವೇಳೆ ತಂಡದ ಮುಖ್ಯ ಡ್ರೆಸ್ಸಿಂಗ್ ರೂಮ್ ಬಳಸಲು ಅವಕಾಶ ನೀಡಲಾಗಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಇದಕ್ಕೆ ಯುನೈಟೆಡ್ ಕಿಂಗ್‌ಡಮ್‌ನ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಟ್ಟುನಿಟ್ಟಿನ ಕಾನೂನುಗಳೇ ಕಾರಣವೆಂದು ತಿಳಿದುಬಂದಿದೆ.

ಕೇವಲ 15 ವರ್ಷದ ವೈಭವ್ ಸೂರ್ಯವಂಶಿ ಇನ್ನೂ ಅಪ್ರಾಪ್ತ ವಯಸ್ಕರಾಗಿರುವುದರಿಂದ, ಯುಕೆಯ ಮಕ್ಕಳ ಸುರಕ್ಷತಾ ನಿಯಮಗಳ ಪ್ರಕಾರ ಅವರನ್ನು ವಯಸ್ಕ ಆಟಗಾರರೊಂದಿಗೆ ಒಂದೇ ಖಾಸಗಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಇರಿಸಲು ಅವಕಾಶವಿಲ್ಲ. ಹೀಗಾಗಿ ಅವರಿಗಾಗಿ ಪ್ರತ್ಯೇಕ ಕೋಣೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ.

ಯುಕೆಯ ಕಾನೂನುಗಳ ಅನ್ವಯ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕ್ರೀಡಾಪಟುಗಳನ್ನು ವಯಸ್ಕರ ಬಟ್ಟೆ ಬದಲಾಯಿಸುವ ಕೊಠಡಿ ಅಥವಾ ಖಾಸಗಿ ಸ್ಥಳಗಳಲ್ಲಿ ಇರಿಸುವುದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ. ಅಪ್ರಾಪ್ತರ ಸುರಕ್ಷತೆ, ಗೌಪ್ಯತೆ ಹಾಗೂ ಹಕ್ಕುಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಗಳನ್ನು ಜಾರಿಗೆ ತರಲಾಗಿದೆ.

ಈ ಹಿನ್ನೆಲೆಯಲ್ಲಿ ವೈಭವ್ ಸೂರ್ಯವಂಶಿ ಪಂದ್ಯ ಹಾಗೂ ತರಬೇತಿ ಅವಧಿಯಲ್ಲಿ ಮಾತ್ರ ತಂಡದೊಂದಿಗೆ ಭಾಗವಹಿಸಬಹುದಾಗಿದ್ದು, ಡ್ರೆಸ್ಸಿಂಗ್ ರೂಮ್ ಸೇರಿದಂತೆ ಕೆಲವು ಖಾಸಗಿ ಸೌಲಭ್ಯಗಳನ್ನು ಪ್ರತ್ಯೇಕವಾಗಿ ಬಳಸಬೇಕಾಗಿದೆ.

ಕಾನೂನು ತಜ್ಞರ ಪ್ರಕಾರ, ಅಪ್ರಾಪ್ತರನ್ನು ವಯಸ್ಕರ ಡ್ರೆಸ್ಸಿಂಗ್ ರೂಮ್‌ನಲ್ಲಿ ಇರಿಸುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿ ಪರಿಗಣಿಸಬಹುದಾಗಿದ್ದು, ಸ್ಥಳೀಯ ನಿಯಮಗಳನ್ನು ಉಲ್ಲಂಘಿಸಿದರೆ ಸಂಬಂಧಿತ ಕ್ರೀಡಾ ಸಂಸ್ಥೆಗಳು ದಂಡ ಅಥವಾ ಕಾನೂನು ಕ್ರಮವನ್ನು ಎದುರಿಸಬೇಕಾಗಬಹುದು.

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಜಾಗತಿಕ ಕ್ರಿಕೆಟ್ ಆಡಳಿತ ಸಂಸ್ಥೆಯಾಗಿದ್ದರೂ, ಪಂದ್ಯ ನಡೆಯುವ ದೇಶದ ಸ್ಥಳೀಯ ಕಾನೂನುಗಳಿಗೆ ಆದ್ಯತೆ ನೀಡಲೇಬೇಕು. ಹೀಗಾಗಿ ಯುಕೆಯಲ್ಲಿ ನಡೆಯುವ ಪಂದ್ಯಗಳ ಸಂದರ್ಭದಲ್ಲಿ ಅಲ್ಲಿನ ಮಕ್ಕಳ ರಕ್ಷಣಾ ನಿಯಮಗಳನ್ನು ಐಸಿಸಿ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಈ ಬೆಳವಣಿಗೆ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ಅಪ್ರಾಪ್ತ ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಇಂತಹ ನಿಯಮಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ತಂಡದ ಸದಸ್ಯನಾಗಿರುವ ಆಟಗಾರನನ್ನು ಪ್ರತ್ಯೇಕವಾಗಿ ಇರಿಸುವುದು ಆತನ ಮಾನಸಿಕ ಸ್ಥೈರ್ಯ ಹಾಗೂ ತಂಡದೊಂದಿಗೆ ಹೊಂದಾಣಿಕೆಗೆ ಪರಿಣಾಮ ಬೀರಬಹುದು ಎಂದು ಕೆಲವು ಮಾಜಿ ಆಟಗಾರರು ಮತ್ತು ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರವು ಸಂಪುಟ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಒಟ್ಟು 13 ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಲಾಗಿದ್ದು, ಆಡಳಿತಾತ್ಮಕ ಕಾರ್ಯಗಳ ಸಮನ್ವಯ ಹಾಗೂ ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಣೆಯ ಜವಾಬ್ದಾರಿ ನೀಡಲಾಗಿದೆ.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದ್ದು, ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಹಾಗೂ ಹಾಸನ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಸಚಿವ ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳು, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ಹಂಚಿಕೆ ಮಾಡಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ.

ಇನ್ನು ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಸಚಿವ ಬೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಹಾಗೆಯೇ, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ಜಿಲ್ಲಾ ಉಸ್ತುವಾರಿ ಹಂಚಿಕೆ ಮೂಲಕ ಸರ್ಕಾರ ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸುವ ಹಾಗೂ ಜಿಲ್ಲಾವಾರು ಅಭಿವೃದ್ಧಿ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶ ಹೊಂದಿದೆ.

error: Content is protected !!