Home Blog

ಎರಡು ತೊಲ ಬಂಗಾರಕ್ಕಾಗಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

0

ಬೆಂಗಳೂರು: ವರದಕ್ಷಿಣೆ ಹೆಸರಿನಲ್ಲಿ ನಡೆಯುತ್ತಿರುವ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ತಿಂಗಳ ಗಂಡು ಮಗುವಿಗೆ ಎರಡು ತೊಲ ಚಿನ್ನ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ 45 ವರ್ಷದ ರೋಷನಬಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂಲತಃ ಯಾದಗಿರಿ ಜಿಲ್ಲೆಯವರಾದ ರೋಷನಬಿ ಅವರ ಕುಟುಂಬ ಕಳೆದ ಏಳು ವರ್ಷಗಳಿಂದ ಬೆಂಗಳೂರಿನ ವಿದ್ಯಾರಣ್ಯಪುರದ ಮೇಡಿ ಅಗ್ರಹಾರ ಪ್ರದೇಶದಲ್ಲಿ ನೆಲೆಸಿತ್ತು. ಆರೋಪಿ ಅಕ್ಬರ್, ಎರಡು ತೊಲ ಚಿನ್ನ ನೀಡುವಂತೆ ನಿರಂತರವಾಗಿ ಪತ್ನಿ ಹಾಗೂ ಆಕೆಯ ಕುಟುಂಬದ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಚಿನ್ನ ನೀಡದಿದ್ದರೆ ಕೊಲೆ ಮಾಡುವುದಾಗಿ ಅತ್ತೆಗೆ ಬೆದರಿಕೆ ಹಾಕಿದ್ದ ಆರೋಪವೂ ಕೇಳಿಬಂದಿದೆ.

ಜುಲೈ 10ರಂದು ಅಕ್ಬರ್ ಕೊಡಲಿಯೊಂದಿಗೆ ಮನೆಗೆ ಬಂದು ಯಾವುದೇ ಮಾತುಕತೆಯಿಲ್ಲದೆ ರೋಷನಬಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಘಟನೆ ಕುರಿತು ಮಾತನಾಡಿದ ಮೃತರ ಪುತ್ರಿ ಹಾಗೂ ಆರೋಪಿಯ ಪತ್ನಿ ರಂಜಾನ್, “ಏಳು ವರ್ಷಗಳ ಹಿಂದೆ ನಾವು ಪ್ರೀತಿಸಿ ಮದುವೆಯಾಗಿದ್ದೆವು. ಮದುವೆಯಾದ ದಿನದಿಂದಲೇ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ. ಎರಡನೇ ಮಗು ಜನಿಸಿದ ಬಳಿಕ ಎರಡು ತೊಲ ಚಿನ್ನ ಕೊಡಿಸಬೇಕೆಂದು ನಿರಂತರವಾಗಿ ಜಗಳ ಮಾಡುತ್ತಿದ್ದ. ನಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ ಎಂದು ಹೇಳಿದರೂ ಕೇಳುತ್ತಿರಲಿಲ್ಲ. ಜುಲೈ 10ರಂದು ಕೊಡಲಿಯೊಂದಿಗೆ ಬಂದು ನನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಆರೋಪಿ ಅಕ್ಬರ್ ಮತ್ತು ರಂಜಾನ್ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋಣಾಳ ಗ್ರಾಮದವರಾದ ಅಕ್ಬರ್, ಶಾಲೆಯಲ್ಲಿ ಓದುತ್ತಿದ್ದ ರಂಜಾನ್ ಅವರನ್ನು ಕರೆದುಕೊಂಡು ಹೋಗಿ ಮದುವೆಯಾಗಿದ್ದ ಎಂದು ತಿಳಿದುಬಂದಿದೆ. ಆರಂಭದಲ್ಲಿ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರೂ, ನಂತರ ಸಂಬಂಧಕ್ಕೆ ಒಪ್ಪಿಗೆ ನೀಡಿದ್ದರು. ದಂಪತಿಗೆ ನಾಲ್ಕು ವರ್ಷದ ಹೆಣ್ಣು ಮಗು ಹಾಗೂ ಒಂದು ತಿಂಗಳ ಹಿಂದೆ ಜನಿಸಿದ ಗಂಡು ಮಗು ಇದೆ.

ಮದುವೆಯಾದ ಬಳಿಕದಿಂದಲೇ ಅಕ್ಬರ್ ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಈ ಹಿಂದೆ ಸೀಮೆಎಣ್ಣೆ ಸುರಿದು ಪತ್ನಿಯನ್ನು ಕೊಲ್ಲಲು ಯತ್ನಿಸಿದ್ದ ಎನ್ನುವ ಆರೋಪವೂ ಇದೆ. ಗಂಡು ಮಗು ಜನಿಸಿದ ಬಳಿಕ ಎರಡು ತೊಲ ಚಿನ್ನ ನೀಡುವಂತೆ ಮತ್ತಷ್ಟು ಒತ್ತಡ ಹೇರುತ್ತಿದ್ದು, ಇದೇ ವಿಚಾರದಲ್ಲಿ ಅತ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಕುಟುಂಬಸ್ಥರು ದೂರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

ಅಮೆರಿಕ-ಇರಾನ್ ಸಂಘರ್ಷ: ಭೀಕರ ದಾಳಿಯ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ. 4ರಷ್ಟು ಏರಿಕೆ!

0

ಲಂಡನ್: ಅಮೆರಿಕ ಮತ್ತು ಇರಾನ್ ನಡುವಿನ ಕ್ಷಿಪಣಿ ಹಾಗೂ ವೈಮಾನಿಕ ದಾಳಿಗಳು ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಬೆಲೆಗಳು ಶೇ. 4ಕ್ಕೂ ಅಧಿಕ ಏರಿಕೆ ಕಂಡಿವೆ. ವಿಶ್ವದ ಇಂಧನ ಸರಬರಾಜಿಗೆ ಪ್ರಮುಖ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಭದ್ರತೆ ಕುರಿತು ಆತಂಕ ಹೆಚ್ಚಾಗಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 4.28ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್‌ಗೆ 79.26 ಡಾಲರ್‌ (ಸುಮಾರು ₹7,570) ತಲುಪಿದೆ. ಅದೇ ವೇಳೆ, ವೆಸ್ಟ್ ಟೆಕ್ಸಾಸ್ ಇಂಟರ್‌ಮೀಡಿಯೇಟ್ (WTI) ಕಚ್ಚಾ ತೈಲದ ಬೆಲೆ ಶೇ. 4.37ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್‌ಗೆ 74.53 ಡಾಲರ್‌ (ಸುಮಾರು ₹7,125) ದಾಖಲಾಗಿದೆ.

ವಾರಾಂತ್ಯದಲ್ಲಿ ಇರಾನ್ ತನ್ನ ಮಿಲಿಟರಿ ಕಾರ್ಯಾಚರಣೆಯ ವ್ಯಾಪ್ತಿಯನ್ನು ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್‌ವರೆಗೂ ವಿಸ್ತರಿಸಿತ್ತು. ಇದಕ್ಕೆ ಪ್ರತಿಯಾಗಿ ಅಮೆರಿಕ ಇರಾನ್‌ನ ಹಲವು ಮಿಲಿಟರಿ ನೆಲೆಗಳ ಮೇಲೆ ಮತ್ತೊಂದು ಸುತ್ತಿನ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ಇದರ ನಡುವೆ, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ದಾಳಿ ನಡೆದ ಬಳಿಕ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದಾಗಿ ಇರಾನ್ ಘೋಷಿಸಿದೆ. ಹಡಗುಗಳ ಸಂಚಾರವನ್ನು ಮೇಲ್ವಿಚಾರಣೆ ಮಾಡುವ ಕೆಪ್ಲರ್ ಸಂಸ್ಥೆಯ ಮಾಹಿತಿಯ ಪ್ರಕಾರ, ಭಾನುವಾರ ಈ ಜಲಸಂಧಿಯ ಮೂಲಕ ಕೇವಲ ಆರು ಹಡಗುಗಳು ಮಾತ್ರ ಸಂಚರಿಸಿವೆ. ಕಳೆದ ಐದು ವಾರಗಳಲ್ಲಿ ದಾಖಲಾಗಿರುವ ಅತ್ಯಂತ ಕಡಿಮೆ ಸಂಚಾರ ಇದಾಗಿದೆ.

ಕಳೆದ ತಿಂಗಳು ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ತಗ್ಗಿಸುವ ಉದ್ದೇಶದಿಂದ ಅಮೆರಿಕ ಮತ್ತು ಇರಾನ್ ನಡುವೆ ನಡೆದಿದ್ದ ತಾತ್ಕಾಲಿಕ ಶಾಂತಿ ಒಪ್ಪಂದ ಹಾಗೂ ಮಾತುಕತೆಗಳು ಇತ್ತೀಚಿನ ದಾಳಿಗಳ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ಅಮೆರಿಕದ ದಾಳಿಯನ್ನು ಇರಾನ್ ವಿದೇಶಾಂಗ ಸಚಿವಾಲಯ ತೀವ್ರವಾಗಿ ಖಂಡಿಸಿದೆ. ಈ ಕ್ರಮವು ವಿಶ್ವಸಂಸ್ಥೆಯ ನಿಯಮಾವಳಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಇರಾನ್, ತನ್ನ ವಿರುದ್ಧದ ಯಾವುದೇ ಮಿಲಿಟರಿ ಕಾರ್ಯಾಚರಣೆಗೆ ಅಮೆರಿಕಕ್ಕೆ ತಮ್ಮ ಭೂಭಾಗ ಅಥವಾ ಸೇನಾ ನೆಲೆಗಳನ್ನು ಬಳಸಲು ಅವಕಾಶ ನೀಡುವ ದೇಶಗಳನ್ನು ಶತ್ರು ರಾಷ್ಟ್ರಗಳೆಂದು ಪರಿಗಣಿಸಿ ಅಗತ್ಯ ಪ್ರತಿದಾಳಿ ನಡೆಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದೆ.

ಧರ್ಮಸ್ಥಳ-ಕುಕ್ಕೆ ಸುಬ್ರಹ್ಮಣ್ಯ ಪ್ರವಾಸಕ್ಕೆ KSTDC ಭರ್ಜರಿ ಪ್ಯಾಕೇಜ್; ಬೆಂಗಳೂರಿನಿಂದ 2 ದಿನಗಳ ಯಾತ್ರೆಗೆ ಅವಕಾಶ!

ಬೆಂಗಳೂರು: ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲು ಬಯಸುವ ಪ್ರವಾಸಿಗರಿಗೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವಿಶೇಷ ಅವಕಾಶ ನೀಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಕರಾವಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಪ್ರಮುಖ ಸ್ಥಳಗಳಿಗೆ 2 ದಿನಗಳ ‘ಪ್ರೀಮಿಯಂ ಪ್ರವಾಸ ಪ್ಯಾಕೇಜ್’ ಅನ್ನು ಘೋಷಿಸಿದೆ.

ಎಸಿ ಡಿಲಕ್ಸ್ ಕೋಚ್ ಮೂಲಕ ನಡೆಯುವ ಈ ಪ್ರವಾಸದಲ್ಲಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ವಿಶೇಷ ದರ್ಶನ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಆದಿ ಸುಬ್ರಹ್ಮಣ್ಯ, ಸೌತಡ್ಕ ಮಹಾಗಣಪತಿ ದೇವಸ್ಥಾನ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪ್ರವಾಸದ ಪ್ರಮುಖ ಸ್ಥಳಗಳು:

  • ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ (ವಿಐಪಿ ವಿಶೇಷ ದರ್ಶನ)
  • ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ
  • ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಆದಿ ಸುಬ್ರಹ್ಮಣ್ಯ
  • ಆದಿಚುಂಚನಗಿರಿ ಕ್ಷೇತ್ರ
  • ಐತಿಹಾಸಿಕ ಮಂಜರಾಬಾದ್ ಕೋಟೆ
  • ರಾಮ ಕ್ಷೇತ್ರ
  • ಸೂರ್ಯನಾರಾಯಣ ದೇವಸ್ಥಾನ
  • ಶ್ರೀ ಶಿಶಿಲೇಶ್ವರ ದೇವಸ್ಥಾನ

ಪ್ರವಾಸದ ವೇಳಾಪಟ್ಟಿ:

ಮೊದಲ ದಿನ ಬೆಳಗ್ಗೆ 7.30ಕ್ಕೆ ಬೆಂಗಳೂರಿನ ಯಶವಂತಪುರ ಬಿಎಂಟಿಸಿ ಟಿಟಿಎಂಸಿ ಬಳಿಯ ಕೆಎಸ್‌ಟಿಡಿಸಿ ಬುಕಿಂಗ್ ಕೌಂಟರ್‌ನಿಂದ ಎಸಿ ಬಸ್ ಪ್ರಯಾಣ ಆರಂಭವಾಗಲಿದೆ. ಮಾರ್ಗಮಧ್ಯೆ ಆದಿಚುಂಚನಗಿರಿ ದೇವಸ್ಥಾನ ಹಾಗೂ ಮಂಜರಾಬಾದ್ ಕೋಟೆ ವೀಕ್ಷಣೆ ಬಳಿಕ ಸಂಜೆ ಧರ್ಮಸ್ಥಳ ತಲುಪಿ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಎರಡನೇ ದಿನ ಬೆಳಗ್ಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ವಿಶೇಷ ದರ್ಶನದ ಬಳಿಕ ರಾಮ ಕ್ಷೇತ್ರ, ಸೂರ್ಯನಾರಾಯಣ ದೇವಸ್ಥಾನ, ಶಿಶಿಲೇಶ್ವರ ದೇವಸ್ಥಾನ ಹಾಗೂ ಸೌತಡ್ಕ ಗಣಪತಿ ದೇವಸ್ಥಾನಗಳಿಗೆ ಭೇಟಿ ನೀಡಲಾಗುತ್ತದೆ. ಸಂಜೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ದರ್ಶನ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಆರಂಭಿಸಲಾಗುತ್ತದೆ.

ಪ್ಯಾಕೇಜ್‌ನಲ್ಲಿ ಸೌಲಭ್ಯಗಳು:

  • ಎಸಿ ಡಿಲಕ್ಸ್ ಬಸ್ ಪ್ರಯಾಣ
  • ದೇವಸ್ಥಾನಗಳ ವಿಶೇಷ ದರ್ಶನ ಟಿಕೆಟ್
  • ಧರ್ಮಸ್ಥಳದಲ್ಲಿ ವಸತಿ ವ್ಯವಸ್ಥೆ
  • ಎರಡನೇ ದಿನದ ಬೆಳಗಿನ ಉಪಾಹಾರ

ಪ್ಯಾಕೇಜ್‌ನಲ್ಲಿ ಸೇರಿರದ ವೆಚ್ಚಗಳು:

  • ಮಧ್ಯಾಹ್ನ ಹಾಗೂ ರಾತ್ರಿ ಊಟದ ವೆಚ್ಚ
  • ವೈಯಕ್ತಿಕ ಖರೀದಿ ಮತ್ತು ಇತರೆ ಖರ್ಚು
  • ವೇಳಾಪಟ್ಟಿಯಲ್ಲಿ ಇಲ್ಲದ ಹೆಚ್ಚುವರಿ ಸ್ಥಳಗಳ ಭೇಟಿ

ಪ್ರವಾಸಿಗರು ಮಾನ್ಯ ಗುರುತಿನ ಚೀಟಿ ಕಡ್ಡಾಯವಾಗಿ ಕೊಂಡೊಯ್ಯಬೇಕು. ದೇವಸ್ಥಾನಗಳಿಗೆ ಭೇಟಿ ನೀಡುವಾಗ ಸಾಂಪ್ರದಾಯಿಕ ವಸ್ತ್ರ ಸಂಹಿತೆ ಪಾಲಿಸಬೇಕು ಎಂದು KSTDC ಸೂಚಿಸಿದೆ. ಭಕ್ತರ ದಟ್ಟಣೆ ಹಾಗೂ ಸಂಚಾರ ಪರಿಸ್ಥಿತಿಗೆ ಅನುಗುಣವಾಗಿ ಸಮಯದಲ್ಲಿ ಬದಲಾವಣೆ ಸಾಧ್ಯ ಎಂದು ತಿಳಿಸಿದೆ.

ಮಧುಮೇಹ ನಿಯಂತ್ರಣದಿಂದ ತೂಕ ಇಳಿಕೆಗೆವರೆಗೆ..! ತುಳಸಿ ಬೀಜಗಳನ್ನು ಸೇವಿಸುವುದರಿಂದ ಸಿಗುವ ಆರೋಗ್ಯಕರ ಲಾಭಗಳೇನು?

0

ಹಿಂದೂ ಸಂಪ್ರದಾಯದಲ್ಲಿ ಪವಿತ್ರ ಸ್ಥಾನ ಪಡೆದಿರುವ ತುಳಸಿ ಗಿಡಕ್ಕೆ ಆಯುರ್ವೇದದಲ್ಲಿಯೂ ವಿಶೇಷ ಮಹತ್ವವಿದೆ. ತುಳಸಿ ಎಲೆಗಳು ಶೀತ, ಕೆಮ್ಮು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಗೆ ಉಪಯುಕ್ತವೆಂದು ಪರಿಗಣಿಸಲಾಗುತ್ತದೆ.

ಆದರೆ ತುಳಸಿ ಎಲೆಗಳಷ್ಟೇ ಅಲ್ಲ, ಅದರ ಬೀಜಗಳಲ್ಲಿಯೂ ಹಲವು ಪೌಷ್ಟಿಕಾಂಶಗಳು ಮತ್ತು ಔಷಧೀಯ ಗುಣಗಳಿದ್ದು, ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಸಹಕಾರಿಯಾಗಬಹುದು ಎಂದು ತಜ್ಞರು ತಿಳಿಸುತ್ತಾರೆ.

ತುಳಸಿ ಬೀಜಗಳನ್ನು ನಿಯಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುವುದು, ಜೀರ್ಣಕ್ರಿಯೆ ಸುಧಾರಿಸುವುದು ಹಾಗೂ ತೂಕ ನಿಯಂತ್ರಣಕ್ಕೆ ನೆರವಾಗುವುದು ಸೇರಿದಂತೆ ಹಲವು ಪ್ರಯೋಜನಗಳನ್ನು ಪಡೆಯಬಹುದು.

ತುಳಸಿ ಬೀಜಗಳಿಂದ ಸಿಗುವ ಪ್ರಮುಖ ಆರೋಗ್ಯ ಪ್ರಯೋಜನಗಳು

ರೋಗನಿರೋಧಕ ಶಕ್ತಿ ಹೆಚ್ಚಿಸಲು ನೆರವು:
ತುಳಸಿ ಬೀಜಗಳಲ್ಲಿ ದೇಹದ ರೋಗನಿರೋಧಕ ಶಕ್ತಿಯನ್ನು ಬೆಂಬಲಿಸುವ ಅಂಶಗಳಿವೆ ಎಂದು ಹೇಳಲಾಗುತ್ತದೆ. ತುಳಸಿ ಬೀಜಗಳಿಂದ ತಯಾರಿಸಿದ ಕಷಾಯ ಅಥವಾ ಪಾನೀಯವನ್ನು ಸೇವಿಸುವುದರಿಂದ ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಸಾಮರ್ಥ್ಯಕ್ಕೆ ನೆರವಾಗಬಹುದು.

ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಸಹಕಾರಿ:
ಕೆಲವು ಅಧ್ಯಯನಗಳ ಪ್ರಕಾರ, ತುಳಸಿ ಬೀಜಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನೆರವಾಗಬಹುದು. ಆದಾಗ್ಯೂ, ಮಧುಮೇಹ ಇರುವವರು ವೈದ್ಯರ ಸಲಹೆಯೊಂದಿಗೆ ಮಾತ್ರ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದು ಸೂಕ್ತ.

ಜೀರ್ಣಕ್ರಿಯೆ ಸುಧಾರಿಸುತ್ತದೆ:
ತುಳಸಿ ಬೀಜಗಳು ಫೈಬರ್‌ ಸಮೃದ್ಧವಾಗಿರುವುದರಿಂದ ಜೀರ್ಣಾಂಗದ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡಬಹುದು. ಬೆಳಿಗ್ಗೆ ಸೇವಿಸುವುದರಿಂದ ಮಲಬದ್ಧತೆಯ ಸಮಸ್ಯೆ ಕಡಿಮೆಯಾಗಲು ನೆರವಾಗಬಹುದು.

ತೂಕ ನಿಯಂತ್ರಣಕ್ಕೆ ಸಹಾಯ:
ತುಳಸಿ ಬೀಜಗಳಲ್ಲಿ ಫೈಬರ್ ಅಧಿಕವಾಗಿದ್ದು, ಕಡಿಮೆ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಇವು ಹೊಟ್ಟೆ ತುಂಬಿದ ಅನುಭವವನ್ನು ಹೆಚ್ಚು ಸಮಯ ನೀಡುವುದರಿಂದ ಅತಿಯಾಗಿ ಆಹಾರ ಸೇವಿಸುವುದನ್ನು ನಿಯಂತ್ರಿಸಿ ತೂಕ ಇಳಿಕೆಗೆ ಸಹಕಾರಿಯಾಗಬಹುದು.

ಗ್ಯಾಸ್ಟ್ರಿಕ್ ಸಮಸ್ಯೆಗೆ ಪರಿಹಾರ:
ಹೊಟ್ಟೆ ಉಬ್ಬರ, ಗ್ಯಾಸ್ಟ್ರಿಕ್ ಹಾಗೂ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳನ್ನು ಕಡಿಮೆ ಮಾಡಲು ತುಳಸಿ ಬೀಜಗಳು ಸಹಕಾರಿಯಾಗಬಹುದು. ಒಂದು ಚಮಚ ತುಳಸಿ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿ, ಅವು ಉಬ್ಬಿದ ಬಳಿಕ ಸೇವಿಸಿದರೆ ಜೀರ್ಣಕ್ರಿಯೆಗೆ ನೆರವಾಗುತ್ತದೆ ಎಂದು ಆಯುರ್ವೇದ ತಜ್ಞರು ಸಲಹೆ ನೀಡುತ್ತಾರೆ.

ಸೇವಿಸುವಾಗ ಗಮನಿಸಬೇಕಾದ ವಿಷಯ

ತುಳಸಿ ಬೀಜಗಳನ್ನು ಮಿತ ಪ್ರಮಾಣದಲ್ಲಿ ಮಾತ್ರ ಸೇವಿಸಬೇಕು. ಮಧುಮೇಹ, ರಕ್ತದೊತ್ತಡ ಅಥವಾ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿ ಸೇವಿಸುತ್ತಿರುವವರು ಹಾಗೂ ಗರ್ಭಿಣಿಯರು ವೈದ್ಯರ ಸಲಹೆ ಪಡೆದ ಬಳಿಕವೇ ತುಳಸಿ ಬೀಜಗಳನ್ನು ನಿಯಮಿತ ಆಹಾರದಲ್ಲಿ ಸೇರಿಸಿಕೊಳ್ಳುವುದು ಉತ್ತಮ ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ.

POCSO Case: ಅಪ್ರಾಪ್ತ ಬಾಲಕಿಗೆ ಕಿರುಕುಳ ಆರೋಪ; ಹಿಂದಿ ಕಿರುತೆರೆ ನಟ ರೋಹಿತ್ ಚಂದೇಲ್ ಅರೆಸ್ಟ್

0

ಮುಂಬೈ: ಹಿಂದಿ ಕಿರುತೆರೆಯ ಖ್ಯಾತ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿಯನ್ನು ಹಿಂಬಾಲಿಸುವುದು, ಕಿರುಕುಳ ನೀಡುವುದು ಹಾಗೂ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

29 ವರ್ಷದ ರೋಹಿತ್ ಚಂದೇಲ್ ಅವರು ‘ಪಾಂಡ್ಯ ಸ್ಟೋರ್’ ಹಾಗೂ ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿದ್ದರು. ಪಂತ್ ನಗರ ಪೊಲೀಸರು ದಹಿಸರ್‌ನಲ್ಲಿರುವ ಅವರ ನಿವಾಸದಿಂದ ಬಂಧಿಸಿ, ಬಳಿಕ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯವು ನಟನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ದೂರಿನ ಪ್ರಕಾರ, ನಟ ರೋಹಿತ್ ಅವರು ತಮ್ಮ ವೈಯಕ್ತಿಕ ಮೊಬೈಲ್ ಸಂಖ್ಯೆಯಿಂದ ಬಾಲಕಿಗೆ ಪದೇ ಪದೇ ಕರೆ ಮಾಡುತ್ತಿದ್ದರು ಎನ್ನಲಾಗಿದೆ. ಬೇರೆ ಬೇರೆ ಸಂಖ್ಯೆಗಳ ಮೂಲಕವೂ ಸಂಪರ್ಕಿಸಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಜುಲೈ 5ರಂದು ಮುಂಬೈನ ಉಪನಗರ ಪ್ರದೇಶದಲ್ಲಿ ಬಾಲಕಿಯಿದ್ದ ಸ್ಥಳಕ್ಕೆ ಬಂದಿದ್ದ ನಟ, ಆಕೆಯನ್ನು ಹಿಂಬಾಲಿಸಿ ಗಲಾಟೆ ನಡೆಸಿ, ನಿಂದಿಸಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಮತ್ತು ಬಾಲಕಿಗೆ ಮೊದಲೇ ಪರಿಚಯವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಶಿರಸಿ ಬಳಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲು!

ಕಾರವಾರ: ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಾಸ್ತಿಜಡ್ಡಿ ಗ್ರಾಮದ ಮದನ್ ನಾಯ್ಕ (17) ಹಾಗೂ ಹೊನ್ನಾವರದ ಲೋಹಿತ್ ನಾಯ್ಕ (19) ಎಂದು ಗುರುತಿಸಲಾಗಿದೆ.

ಗ್ರಾಮದ ಹಳ್ಳಕ್ಕೆ ನಿರ್ಮಿಸಲಾಗಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರೂ 15 ಅಡಿ ಆಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶ್ರೀ ಮಾರಿಕಾಂಬ ರೆಸ್ಕ್ಯೂ ಟೀಮ್‌ನ ಗೋಪಾಲ ಗೌಡ ನೇತೃತ್ವದ ತಂಡ ಶೋಧ ಕಾರ್ಯ ನಡೆಸಿ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆದಿದೆ.

ಘಟನಾ ಸ್ಥಳಕ್ಕೆ ಬನವಾಸಿ ಠಾಣೆ ಪಿಎಸ್‌ಐ ಮಹಾಂತಪ್ಪ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕೊಪ್ಪಳದಲ್ಲಿ ದುರಂತ: ವ್ಯಸನ ಮುಕ್ತ ಕೇಂದ್ರದಲ್ಲಿದ್ದ ಪೊಲೀಸ್ ಪೇದೆ ನೇಣಿಗೆ ಶರಣು

ಕೊಪ್ಪಳ: ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಷ್ಟಗಿಯಲ್ಲಿ ನಡೆದಿದೆ.

ಮೃತರನ್ನು ಶರಣಪ್ಪ ಉಪ್ಪಾರ (49) ಎಂದು ಗುರುತಿಸಲಾಗಿದೆ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ಯ ವ್ಯಸನಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಶರಣಪ್ಪ ಅವರು ವ್ಯಸನ ಮುಕ್ತ ಕೇಂದ್ರದಿಂದ ತಮ್ಮನ್ನು ಮನೆಗೆ ಕರೆದುಕೊಂಡು ಹೋಗುವಂತೆ ಪತ್ನಿಗೆ ಕರೆ ಮಾಡಿದ್ದರು. ಆದರೆ ಮನೆಗೆ ಕರೆದುಕೊಂಡು ಹೋಗದಿದ್ದರಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಈ ಘಟನೆ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime news: ಡೆತ್‌ನೋಟ್ ಬರೆದಿಟ್ಟು ನವ ವಿವಾಹಿತೆ ನೇಣಿಗೆ ಶರಣು!

ಬೆಂಗಳೂರು: ಬೆಂಗಳೂರಿನಲ್ಲಿ ನವವಿವಾಹಿತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ಶ್ವೇತಾ (25) ಎಂದು ಗುರುತಿಸಲಾಗಿದೆ.

ಶ್ವೇತಾ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿರುವ ಮಾಹಿತಿ ಲಭ್ಯವಾಗಿದೆ.

ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಶ್ವೇತಾ ಪ್ರೇಮ ವಿವಾಹವಾಗಿದ್ದರು. ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಅವರು, ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರು ಹಾಗೂ ಪರಿಚಿತರಲ್ಲಿ ಆಘಾತ ಮೂಡಿಸಿದೆ.

ಶ್ವೇತಾ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಅವರು ಬರೆದಿಟ್ಟಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ ಏನಿದೆ ಎಂಬ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರೇಮ ವಿವಾಹವಾಗಿ ಕೇವಲ ನಾಲ್ಕು ತಿಂಗಳಲ್ಲೇ ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಘಟನೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಪಟ್ಟವರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯ ಬಳಿಕ ಶ್ವೇತಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.

ಹೈದರ್ ಅಲಿ ಕೊಲೆ ಕೇಸ್: ಗನ್‌ಮ್ಯಾನ್ ಕೋರಿ ಕೋರ್ಟ್ ಮೆಟ್ಟಿಲೇರಿದ ಆರೋಪಿ ಅಬ್ಬಾಸ್!

ಬೆಂಗಳೂರು: ಹೈದರ್ ಅಲಿ ಕೊಲೆ ಪ್ರಕರಣದ ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ಅಬ್ಬಾಸ್, ತನಗೆ ಜೀವಭಯವಿದೆ ಎಂದು ಹೇಳಿ ಪೊಲೀಸ್ ಗನ್‌ಮ್ಯಾನ್ ಭದ್ರತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕೊಲೆ ಹಾಗೂ ಕೋಕಾ ಕಾಯ್ದೆಯಡಿ ಪ್ರಕರಣ ಎದುರಿಸುತ್ತಿರುವ ಆರೋಪಿಯೇ ಪೊಲೀಸ್ ಭದ್ರತೆ ಕೇಳಿರುವುದು ಇದೀಗ ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಅಬ್ಬಾಸ್ ಈಗಾಗಲೇ ಖಾಸಗಿ ಗನ್‌ಮ್ಯಾನ್‌ಗಳ ಭದ್ರತೆ ಹೊಂದಿದ್ದಾರೆ ಎನ್ನಲಾಗಿದೆ. ಖಾಸಗಿ ಭದ್ರತೆ ಇದ್ದರೂ ಪೊಲೀಸ್ ಇಲಾಖೆಯಿಂದ ಗನ್‌ಮ್ಯಾನ್ ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.

2025ರ ಫೆಬ್ರವರಿ 23ರ ರಾತ್ರಿ ರೌಡಿಶೀಟರ್ ಹೈದರ್ ಅಲಿ ಕೊಲೆಯಾಗಿದ್ದರು. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗದ ನಯಾಜ್ ಅಲಿಯಾಸ್ ನಜ್ಜು ಪಾಷ ಹಾಗೂ ಆತನ ಸಹಚರರು ಹೈದರ್ ಅಲಿಯನ್ನು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹೈದರ್ ಅಲಿ ಹತ್ಯೆಗೆ ಕಾಂಗ್ರೆಸ್ ಮುಖಂಡ ಅಬ್ಬಾಸ್ ಹಣಕಾಸಿನ ನೆರವು ನೀಡಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಒಂದೇ ಕ್ಷೇತ್ರದಲ್ಲಿ ಜಿಬಿಎ ಕಾಂಗ್ರೆಸ್ ಅಭ್ಯರ್ಥಿಯಾಗಲು ಹೈದರ್ ಅಲಿ ಮತ್ತು ಅಬ್ಬಾಸ್ ನಡುವೆ ಪೈಪೋಟಿ ಇತ್ತು ಎನ್ನಲಾಗಿದೆ. ಹೈದರ್ ಅಲಿ ಹತ್ಯೆಯಾದರೆ ತನ್ನ ರಾಜಕೀಯ ಹಾದಿ ಸುಲಭವಾಗಲಿದೆ ಎಂಬ ಕಾರಣಕ್ಕೆ ಕೊಲೆಗೆ ಹಣಕಾಸು ನೆರವು ನೀಡಲಾಗಿದೆ ಎಂಬ ಆರೋಪ ಅಬ್ಬಾಸ್ ವಿರುದ್ಧ ಇದೆ.

ಹೈದರ್ ಅಲಿ ಕುಟುಂಬಸ್ಥರು ಕೂಡ ಅಬ್ಬಾಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹೈದರ್ ಅಲಿ ಹತ್ಯೆಯ ಹಿಂದೆ ಅಬ್ಬಾಸ್ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ ಎನ್ನಲಾಗಿದೆ.

ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಅಬ್ಬಾಸ್ ಇದೀಗ ಪೊಲೀಸ್ ಗನ್‌ಮ್ಯಾನ್ ಭದ್ರತೆ ಕೇಳಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೊಲೆ ಹಾಗೂ ಕೋಕಾ ಪ್ರಕರಣದ ಆರೋಪಿಗೆ ಪೊಲೀಸ್ ಗನ್‌ಮ್ಯಾನ್ ನೀಡಲು ಸಾಧ್ಯವೇ? ಅಬ್ಬಾಸ್ ಸಲ್ಲಿಸಿರುವ ಅರ್ಜಿಯ ಹಿಂದೆ ಕೆಲ ಪೊಲೀಸ್ ಅಧಿಕಾರಿಗಳ ಬೆಂಬಲ ಇದೆಯೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಅಬ್ಬಾಸ್ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಒಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲೂ ಪ್ರಕರಣವಿದೆ ಎನ್ನಲಾಗಿದೆ. ಸದ್ಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಹೈದರ್ ಅಲಿ ಕೊಲೆ ಹಾಗೂ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇಷ್ಟೆಲ್ಲ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೂ ಪೊಲೀಸರು ಏಕೆ ಮೌನವಾಗಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಅಬ್ಬಾಸ್ ಗನ್‌ಮ್ಯಾನ್ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದಾಗ, ಅವರ ವಿರುದ್ಧ ಇರುವ ಪ್ರಕರಣಗಳ ಸಂಪೂರ್ಣ ಮಾಹಿತಿಯನ್ನು ಪೊಲೀಸರು ನ್ಯಾಯಾಲಯಕ್ಕೆ ನೀಡಿದ್ದಾರೆಯೇ ಎಂಬ ಪ್ರಶ್ನೆಯೂ ಎದುರಾಗಿದೆ.

ಇನ್ನೊಂದೆಡೆ, ಹೈದರ್ ಅಲಿ ಕೊಲೆ ಹಾಗೂ ಕೋಕಾ ಪ್ರಕರಣದ ತನಿಖೆಯ ಭಾಗವಾಗಿ ಅಶೋಕನಗರ ಪೊಲೀಸರು ಅಬ್ಬಾಸ್ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಿದ್ದರು ಎನ್ನಲಾಗಿದೆ. ಅಬ್ಬಾಸ್ ವಿದೇಶಕ್ಕೆ ತೆರಳುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದರು ಎಂದು ಹೇಳಲಾಗಿದೆ.

ಆದರೆ ಅಬ್ಬಾಸ್ ವಿರುದ್ಧ ಲುಕ್ ಔಟ್ ಸರ್ಕ್ಯುಲರ್ ಹೊರಡಿಸಿದ್ದಕ್ಕೆ ಓರ್ವ ಹಿರಿಯ ಪೊಲೀಸ್ ಅಧಿಕಾರಿ ಗರಂ ಆಗಿದ್ದರು ಎಂಬ ಆರೋಪ ಕೇಳಿಬಂದಿದೆ. “ನಿಮಗೆ ಯಾರು ಲುಕ್ ಔಟ್ ಸರ್ಕ್ಯುಲರ್ ಹಾಕಲು ಹೇಳಿದ್ದು?” ಎಂದು ಅಶೋಕನಗರ ಪೊಲೀಸರನ್ನು ಆ ಅಧಿಕಾರಿ ಪ್ರಶ್ನಿಸಿದ್ದರು ಎನ್ನಲಾಗಿದೆ.

ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧವೇ ಇಲ್ಲದ ಹಿರಿಯ ಅಧಿಕಾರಿ, ಲುಕ್ ಔಟ್ ಸರ್ಕ್ಯುಲರ್ ವಿಚಾರದಲ್ಲಿ ಏಕೆ ಮಧ್ಯಪ್ರವೇಶ ಮಾಡಿದರು ಎಂಬ ಪ್ರಶ್ನೆ ಇದೀಗ ಮೂಡಿದೆ. ಆರೋಪಿಯ ಪರವಾಗಿ ಆ ಹಿರಿಯ ಅಧಿಕಾರಿ ನಿಂತಿದ್ದಾರೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ.

ಕೊಲೆ ಮತ್ತು ಕೋಕಾ ಪ್ರಕರಣದ ಆರೋಪಿಗೆ ಪೊಲೀಸ್ ಗನ್‌ಮ್ಯಾನ್ ಭದ್ರತೆ ನೀಡಿದರೆ ಏನಾಗಬಹುದು? ಅಬ್ಬಾಸ್ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಮಾಹಿತಿಯನ್ನು ನ್ಯಾಯಾಲಯದ ಗಮನಕ್ಕೆ ಪೊಲೀಸರು ತಂದಿದ್ದಾರೆಯೇ? ಲುಕ್ ಔಟ್ ಸರ್ಕ್ಯುಲರ್ ಹೊರಡಿಸಿದ್ದಕ್ಕೆ ಹಿರಿಯ ಅಧಿಕಾರಿ ಆಕ್ರೋಶ ವ್ಯಕ್ತಪಡಿಸಿದ್ದು ಏಕೆ?

ಈ ಎಲ್ಲ ಪ್ರಶ್ನೆಗಳಿಗೆ ಪೊಲೀಸ್ ಇಲಾಖೆಯಿಂದ ಸ್ಪಷ್ಟ ಉತ್ತರ ಸಿಗಬೇಕಿದೆ. ಹೈದರ್ ಅಲಿ ಕೊಲೆ ಪ್ರಕರಣದ ಆರೋಪಿಯ ಗನ್‌ಮ್ಯಾನ್ ಬೇಡಿಕೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಯ ನಡೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ಲಾರಿಗೆ ಕಾರು ಡಿಕ್ಕಿ; ಬಂಧಿಖಾನೆ ಇಲಾಖೆ ವಾರ್ಡರ್ ಸ್ಥಳದಲ್ಲೇ ಸಾವು

ಕಾರು ನಜ್ಜುಗುಜ್ಜು-ಶವ ಹೊರತೆಗೆಯಲು ಹರಸಾಹಸ

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಧಾರವಾಡ ಕೇಂದ್ರ ಕಾರಾಗೃಹದ ವಾರ್ಡರ್ ಸಂಗಪ್ಪ ತಂದೆ ರಂಗಪ್ಪ ಮಜ್ಜಗಿ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಧಾರವಾಡದಿಂದ ಬಾಗಲಕೋಟೆ ಜಿಲ್ಲೆಯ ನೀರಲಗಿ ಗ್ರಾಮಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಂಗಪ್ಪ ಕಾರಿನೊಳಗೆ ಸಿಲುಕಿಕೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರಾದರೂ, ಅಷ್ಟರಲ್ಲೇ ಅವರು ಮೃತಪಟ್ಟಿರುವುದು ದೃಢಪಟ್ಟಿತು.

ಮೃತ ಸಂಗಪ್ಪ ಮಜ್ಜಗಿ ಅವರು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ನರಗುಂದ ಸಿಪಿಐ ಸತ್ಯಪ್ಪ ಮಾಳಗೊಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ಸಂಬಂಧ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.