Home Blog

ಆ್ಯಪ್ ತಾಂತ್ರಿಕ ದೋಷ- ಗೊಬ್ಬರ ವಿತರಣೆ ಸ್ಥಗಿತ: ಗದಗನಲ್ಲಿ ರೈತರ ಆಕ್ರೋಶ

0

ಗದಗ: ಬಿತ್ತನೆ ಕಾರ್ಯ ಚುರುಕುಗೊಂಡಿರುವ ಮಹತ್ವದ ಸಮಯದಲ್ಲೇ ಗದಗದಲ್ಲಿ ಯೂರಿಯಾ ಗೊಬ್ಬರ ವಿತರಣೆ ಸ್ಥಗಿತಗೊಂಡಿದ್ದು, ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಸಾಲಿನಲ್ಲಿ ನಿಂತಿದ್ದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶನಿವಾರ ನಡೆದಿದೆ.

ನಗರದ ಡಂಬಳ ನಾಕಾ ಬಳಿಯಿರುವ ಶ್ರೀ ಎಂಟರ್ಪ್ರೈಸ್ ಎದುರು ನೂರಾರು ರೈತರು ಯೂರಿಯಾ ಗೊಬ್ಬರಕ್ಕಾಗಿ ಕಾದು ನಿಂತಿದ್ದರು. ಆದರೆ, ಯೂರಿಯಾ ವಿತರಣೆಗೆ ಬಳಸುವ ಆ್ಯಪ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಕಾರಣ ಇಂದು ಗೊಬ್ಬರ ವಿತರಣೆ ಇರುವುದಿಲ್ಲ ಎಂದು ನಾಮಫಲಕ ಅಳವಡಿಸಲಾಗಿತ್ತು. ಇದರಿಂದ ರೈತರು ಕೃಷಿ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗೊಬ್ಬರ ಸಿಗುವ ನಿರೀಕ್ಷೆಯಲ್ಲಿ ಹಲವು ರೈತರು ಹೆಲ್ಮೆಟ್, ಟವೆಲ್, ನೀರಿನ ಬಾಟಲಿ ಇಟ್ಟು ಪಾಳೆ ಹಚ್ಚಿಕೊಂಡು ಮುಂಜಾನೆಯಿಂದಲೇ ಸ್ಥಳದಲ್ಲಿ ಕಾದು ಕುಳಿತಿದ್ದರು. ಇದುವರೆಗೆ ಒಂದು ಎಕರೆಗೆ ಒಂದು ಚೀಲ ಯೂರಿಯಾ ಗೊಬ್ಬರ ವಿತರಣೆ ಮಾಡಲಾಗುತ್ತಿತ್ತು. ಆದರೆ, ಇಂದು ಸಂಪೂರ್ಣ ವಿತರಣೆ ಸ್ಥಗಿತಗೊಂಡಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

“ಇದೀಗ ಬಿತ್ತನೆ ಮಾಡುವ ಸಮಯ. ಇದೇ ಸಂದರ್ಭದಲ್ಲಿ ಗೊಬ್ಬರ ಸಿಗದಿದ್ದರೆ ಬೆಳೆ ಬೆಳೆಸುವುದು ಹೇಗೆ? ಸರ್ಕಾರ ಹಾಗೂ ಕೃಷಿ ಇಲಾಖೆ ಕೂಡಲೇ ಸಮಸ್ಯೆ ಬಗೆಹರಿಸಿ ಯೂರಿಯಾ ವಿತರಣೆ ಆರಂಭಿಸಬೇಕು” ಎಂದು ರೈತರು ಆಗ್ರಹಿಸಿದರು.

ಯೂರಿಯಾ ಕೊರತೆ ಹಾಗೂ ತಾಂತ್ರಿಕ ಸಮಸ್ಯೆಯಿಂದ ಗೊಬ್ಬರ ವಿತರಣೆ ನಿಂತಿರುವುದು ರೈತರಲ್ಲಿ ಆತಂಕ ಮೂಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕೆಂದು ಅನ್ನದಾತರು ಒತ್ತಾಯಿಸಿದ್ದಾರೆ.

ಅಸ್ಸಾಂನ ಜೋರ್ಹತ್ʼನಲ್ಲಿ ಭಾರತೀಯ ವಾಯುಪಡೆಯ AN-32 ವಿಮಾನ ಪತನ

0

ದಿಸ್ಪುರ: ಅಸ್ಸಾಂನ ಜೋರ್ಹಟ್‌ನಲ್ಲಿರುವ ಭಾರತೀಯ ವಾಯುಪಡೆ ನಿಲ್ದಾಣದಲ್ಲಿ ಶನಿವಾರ AN-32 ಸಾರಿಗೆ ವಿಮಾನ ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ವಾಯುಪಡೆ ನಿಲ್ದಾಣದ ಆವರಣದಲ್ಲಿ ಲ್ಯಾಂಡಿಂಗ್ ಅಥವಾ ಚಲನೆಯ ವೇಳೆ ವಿಮಾನ ಪತನಗೊಂಡಿದ್ದು, ಬಳಿಕ ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಘಟನೆಯ ನಂತರ ತುರ್ತು ರಕ್ಷಣಾ ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ.

ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಘಟನೆಯ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾವುನೋವುಗಳು ಅಥವಾ ಗಾಯಾಳುಗಳ ಕುರಿತು ಈವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಭಾರತೀಯ ವಾಯುಪಡೆಯು ಘಟನೆಯನ್ನು ದೃಢಪಡಿಸಿದ್ದು, ಪರಿಸ್ಥಿತಿಯ ಪ್ರಾಥಮಿಕ ಮೌಲ್ಯಮಾಪನದ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

ಮತ್ತೆ ಸುದ್ದಿಯಾದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ: ಏರ್ʼಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಕಾರು ಡ್ರಿಫ್ಟಿಂಗ್ ಮಾಡುತ್ತಾ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

KA 05 NR 0009 ನೋಂದಣಿ ಸಂಖ್ಯೆಯ ಈ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದ್ದು, ಘಟನೆ ನಡೆದ ಸ್ಥಳ ಹಾಗೂ ಕಾಲಾವಧಿ ಕುರಿತು ತನಿಖೆ ಆರಂಭಿಸಲಾಗಿದೆ. ಘಟನೆ ಯಾವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ವೈರಲ್ ವಿಡಿಯೋ ಆಧರಿಸಿ ಮೊದಲು ಪ್ರಕರಣ ದಾಖಲಿಸಿ, ಬಳಿಕ ವಿವರವಾದ ತನಿಖೆ ನಡೆಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಕಾರು ಚಲಾಯಿಸಿದ್ದವರು ಯಾರು, ಆ ವೇಳೆ ವಾಹನದಲ್ಲಿ ಇನ್ನಾರು ಇದ್ದರು ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಕಾರು ಇದೇ ಮೊದಲ ಬಾರಿಗೆ ವಿವಾದಕ್ಕೆ ಸಿಲುಕಿಲ್ಲ. ಈ ಹಿಂದೆ ಮಾರ್ಚ್ 21ರಂದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಸಂದರ್ಭದಲ್ಲಿ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ರಿಕ್ಕಿ ರೈ ಅವರೇ ಕಾರು ಚಲಾಯಿಸಿದ್ದಾಗಿ ಪೊಲೀಸರು ದೃಢಪಡಿಸಿದ್ದರು.

ಆರಂಭದಲ್ಲಿ ಆರೋಪವನ್ನು ನಿರಾಕರಿಸಿದ್ದ ರಿಕ್ಕಿ ರೈ, ಬಳಿಕ ಸಿಸಿಟಿವಿ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ದಂಡ ಪಾವತಿಸಿದ್ದರು. ಪ್ರಕರಣವು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಇದೀಗ ಮತ್ತೆ ಅದೇ ವಾಹನದಿಂದ ಅತಿವೇಗ ಚಾಲನೆ, ಡ್ರಿಫ್ಟಿಂಗ್ ಹಾಗೂ ಸೈಲೆನ್ಸರ್ ಮodyಫಿಕೇಶನ್ ಸೇರಿದಂತೆ ನಿಯಮ ಉಲ್ಲಂಘನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪರಿಶೀಲನೆ ವೇಳೆ ಆರೋಪಗಳು ದೃಢಪಟ್ಟರೆ ಅತಿವೇಗ ಚಾಲನೆ, ಅಕ್ರಮ ಸೈಲೆನ್ಸರ್ ಬಳಕೆ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ಚಾಲನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

19,000ಕ್ಕೂ ಹೆಚ್ಚು ರನ್, 48 ಶತಕಗಳು: ನ್ಯೂಜಿಲೆಂಡ್ ದಿಗ್ಗಜ ಕೇನ್ ವಿಲಿಯಮ್ಸನ್ ಕ್ರಿಕೆಟ್ʼಗೆ ವಿದಾಯ

0

ವೆಲ್ಲಿಂಗ್ಟನ್: ವಿಶ್ವ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಹಾಗೂ ಸ್ಥಿರ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 16 ವರ್ಷಗಳ ಸುದೀರ್ಘ ವೃತ್ತಿಜೀವನದ ನಂತರ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಪ್ರಸ್ತುತ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ಪ್ರವಾಸದಲ್ಲಿದ್ದು ಟೆಸ್ಟ್ ಸರಣಿ ಆಡುತ್ತಿದೆ. ಲಾರ್ಡ್ಸ್‌ನಲ್ಲಿ ನಡೆದ ಇತ್ತೀಚಿನ ಟೆಸ್ಟ್‌ನಲ್ಲಿ ವಿಲಿಯಮ್ಸನ್ ಭಾಗವಹಿಸಿದ್ದರು. ಆದರೆ ಆ ಪಂದ್ಯದಲ್ಲಿ ಅವರು ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.

35 ವರ್ಷದ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ಅವರು ಒಟ್ಟು 378 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 48 ಶತಕಗಳ ಸಹಿತ 19,346 ರನ್‌ಗಳನ್ನು ದಾಖಲಿಸಿದ್ದಾರೆ. ಈ ಸಾಧನೆಗಳು ಅವರನ್ನು ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳ ಸಾಲಿನಲ್ಲಿ ಸ್ಥಾಪಿಸಿವೆ.

2010ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವಿಲಿಯಮ್ಸನ್ ತಮ್ಮ ತಾಳ್ಮೆಯ ಆಟ, ತಾಂತ್ರಿಕ ನೈಪುಣ್ಯ ಹಾಗೂ ಸ್ಥಿರ ಪ್ರದರ್ಶನದಿಂದ ಜಗತ್ತಿನ ಗಮನ ಸೆಳೆದಿದ್ದರು. ಸ್ಫೋಟಕ ಬ್ಯಾಟಿಂಗ್ ಶೈಲಿಯ ಆಟಗಾರನಲ್ಲದಿದ್ದರೂ, ಅವರು ತಂಡಕ್ಕೆ ಅಗತ್ಯವಾದ ಸಂದರ್ಭಗಳಲ್ಲಿ ನಿರಂತರವಾಗಿ ರನ್ ಗಳಿಸಿ ಗೆಲುವುಗಳಿಗೆ ಕಾರಣರಾಗಿದ್ದರು.

ನಾಯಕನಾಗಿ ಕೂಡ ಅವರು ನ್ಯೂಜಿಲೆಂಡ್ ಕ್ರಿಕೆಟ್‌ಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಾಯಕತ್ವದಲ್ಲಿ ನ್ಯೂಜಿಲೆಂಡ್ 2019ರ ODI ವಿಶ್ವಕಪ್ ಫೈನಲ್ ಪ್ರವೇಶಿಸಿತು. 2021ರಲ್ಲಿ ನಡೆದ ICC ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಸೋಲಿಸಿ ನ್ಯೂಜಿಲೆಂಡ್ ಮೊದಲ ಬಾರಿಗೆ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿತು.

ಶಾಂತ ಸ್ವಭಾವ, ಕ್ರೀಡಾಸ್ಫೂರ್ತಿ ಮತ್ತು ಎದುರಾಳಿಗಳಿಗೆ ಗೌರವ ನೀಡುವ ಗುಣಗಳಿಂದ ಕೇನ್ ವಿಲಿಯಮ್ಸನ್ ವಿಶ್ವದಾದ್ಯಂತ ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಮೈದಾನದಲ್ಲಿ ಅವರ ಶಾಂತತೆ ಮತ್ತು ಸಮತೋಲನದ ವರ್ತನೆ ಅವರನ್ನು ವಿಶೇಷವಾಗಿ ಗುರುತಿಸಿತು.

ನ್ಯೂಜಿಲೆಂಡ್ ಕೋಚ್ ರಾಬ್ ವಾಲ್ಟರ್ಸ್ ಅವರು ಪ್ರತಿಕ್ರಿಯಿಸಿ, ಕೇನ್ ವಿಲಿಯಮ್ಸನ್ ಅವರಂತಹ ಆಟಗಾರರು ಕ್ರಿಕೆಟ್ ಜಗತ್ತಿಗೆ ಅಪರೂಪ ಎಂದು ಹೇಳಿದ್ದಾರೆ. ಅವರ ಪ್ರಭಾವ ನ್ಯೂಜಿಲೆಂಡ್ ಕ್ರಿಕೆಟ್ ಸಂಸ್ಕೃತಿಯಲ್ಲಿ ಮುಂದಿನ ಹಲವು ವರ್ಷಗಳವರೆಗೆ ಉಳಿಯಲಿದೆ ಎಂದು ತಿಳಿಸಿದ್ದಾರೆ.

ಡೀಸೆಲ್ ಖರೀದಿಗೆ ಕೇಂದ್ರದಿಂದ ಹೊಸ ಮಿತಿ: ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ

0

ನವದೆಹಲಿ: ಡೀಸೆಲ್ ಅಕ್ರಮ ದಾಸ್ತಾನು ಹಾಗೂ ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಡೀಸೆಲ್ ಮಾರಾಟಕ್ಕೆ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಿದೆ. ಇದರಂತೆ, ಪೆಟ್ರೋಲ್ ಬಂಕ್‌ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಖರೀದಿಸಲು ಅವಕಾಶ ನೀಡಲಾಗಿದೆ.

ಹೊಸ ಮಾರ್ಗಸೂಚಿಗಳ ಪ್ರಕಾರ, ವಾಣಿಜ್ಯ, ಕೈಗಾರಿಕಾ ಹಾಗೂ ಸಾಂಸ್ಥಿಕ ಬಳಕೆದಾರರು ಇನ್ನು ಮುಂದೆ ಸಾಮಾನ್ಯ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಖರೀದಿಸಲು ಅವಕಾಶ ಇರುವುದಿಲ್ಲ. ಅವರು ವಾಣಿಜ್ಯ ಉದ್ದೇಶಕ್ಕಾಗಿ ನಿಗದಿಪಡಿಸಲಾದ ವಿಶೇಷ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಪ್ರಸ್ತುತ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ದರ ಲೀಟರ್‌ಗೆ 95.20 ರೂ. ಇದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಅದು 134.50 ರೂ. ಆಗಿದೆ. ರಿಟೇಲ್ ಬಂಕ್‌ಗಳಲ್ಲಿ ದರ ಕಡಿಮೆ ಇರುವುದರಿಂದ ದೊಡ್ಡ ವಾಹನಗಳ ಮಾಲೀಕರು ಹಾಗೂ ವಾಣಿಜ್ಯ ಬಳಕೆದಾರರು ಅಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಡೀಸೆಲ್ ಖರೀದಿಸುತ್ತಿರುವುದು ಗಮನಕ್ಕೆ ಬಂದಿತ್ತು. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಇನ್ನೊಂದು ಪ್ರಮುಖ ನಿಯಮದಂತೆ, ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್ ಅನ್ನು ನೇರವಾಗಿ ವಾಹನದ ಇಂಧನ ಟ್ಯಾಂಕ್‌ಗೆ ಮಾತ್ರ ತುಂಬಿಸಬೇಕು. ಕ್ಯಾನ್, ಬ್ಯಾರೆಲ್ ಅಥವಾ ಇತರೆ ಪಾತ್ರೆಗಳಲ್ಲಿ ಡೀಸೆಲ್ ಮಾರಾಟ ಮಾಡುವುದಕ್ಕೆ ಅವಕಾಶ ಇರುವುದಿಲ್ಲ. ಆದರೆ ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷತಾ ಸಂಸ್ಥೆ (PESO) ಅನುಮೋದಿಸಿರುವ ವಿಶೇಷ ಕ್ಯಾನ್‌ಗಳಲ್ಲಿ ಮಾತ್ರ ಡೀಸೆಲ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಜಾಗತಿಕ ತೈಲ ಪೂರೈಕೆ ಸರಪಳಿಯಲ್ಲಿ ಒತ್ತಡ ಉಂಟಾಗಿದ್ದು, ಅದರ ಪರಿಣಾಮ ಭಾರತದಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಿಟೇಲ್ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಮಿತಿಗಳನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನೂತನ ಸಿಎಂ ಡಿಕೆ ಶಿವಕುಮಾರ್ʼಗೆ ಆರಂಭದಲ್ಲೇ ಸಾಲು ಸಾಲು ಸವಾಲು: ಅಧಿಕಾರಿಗಳೊಂದಿಗೆ ಮಹತ್ವದ ಸಭೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಆಡಳಿತದ ಆರಂಭಿಕ ಹಂತದಲ್ಲೇ ಹಲವು ಸವಾಲುಗಳು ಎದುರಾಗಿವೆ. ರಾಜ್ಯ ಸಚಿವ ಸಂಪುಟ ಇನ್ನೂ ಪೂರ್ಣ ಪ್ರಮಾಣದಲ್ಲಿ ರಚನೆಯಾಗದಿರುವುದು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಆಡಳಿತದ ಬಹುತೇಕ ಜವಾಬ್ದಾರಿ ಸದ್ಯ ಅಧಿಕಾರಿಗಳ ಹೆಗಲಿನ ಮೇಲಿದೆ.

ಈ ಹಿನ್ನೆಲೆ ಆಡಳಿತ ಯಂತ್ರಕ್ಕೆ ಚುರುಕು ನೀಡುವ ಹಾಗೂ ಮುಂಗಾರು ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಕಾರ್ಯಯೋಜನೆ ರೂಪಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ, ಭೂಕುಸಿತ ಹಾಗೂ ಮೂಲಸೌಕರ್ಯ ಹಾನಿಯ ಆತಂಕ ಎದುರಾಗಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯ ಪರಿಣಾಮ ಗುಡ್ಡ ಕುಸಿತ ಮತ್ತು ಭೂಕುಸಿತದ ಭೀತಿ ಹೆಚ್ಚಾಗಿದೆ.

ಇನ್ನೊಂದೆಡೆ, ಮುಂಗಾರು ಆರಂಭವಾಗಿರುವುದರಿಂದ ರೈತರು ಬಿತ್ತನೆ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಹಲವು ಜಿಲ್ಲೆಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಎದುರಾಗಿರುವುದರಿಂದ ರೈತರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಆದ್ಯತೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್ಪಿ) ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಹತ್ವದ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಲಿದೆ.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನೇರವಾಗಿ ಸೂಚನೆ ನೀಡಲಿರುವ ಮುಖ್ಯಮಂತ್ರಿ, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ನಿರ್ದೇಶನ ನೀಡಲಿದ್ದಾರೆ. ಮಳೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸುವ ಸಾಧ್ಯತೆ ಇದೆ.

ಕರಾವಳಿ ಭಾಗಗಳಲ್ಲಿ ಭಾರಿ ಮಳೆಯೊಂದಿಗೆ ಚಂಡಮಾರುತದ ಆತಂಕವೂ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಉತ್ತರ ಕರ್ನಾಟಕದ ನದಿ ಪಾತ್ರದ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾದಲ್ಲಿ ನದಿ ತೀರದ ಗ್ರಾಮಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಪೂರ್ವಸಿದ್ಧತೆ ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.

ಮುಂಗಾರು ಅವಾಂತರಗಳನ್ನು ಸಮರ್ಥವಾಗಿ ಎದುರಿಸುವುದು, ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವುದು ಹಾಗೂ ಆಡಳಿತ ಯಂತ್ರವನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು ಈ ಸಭೆಯ ಪ್ರಮುಖ ಉದ್ದೇಶವಾಗಿದೆ.

ಶಿವಮೊಗ್ಗದಲ್ಲಿ ಮತ್ತೆ ರಕ್ತದೋಕುಳಿ: ಗ್ಯಾಂಗ್ ವಾರ್ʼನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

0

ಶಿವಮೊಗ್ಗ: ಕಳೆದ ಕೆಲವು ವರ್ಷಗಳಿಂದ ಶಾಂತವಾಗಿದ್ದ ಮಲೆನಾಡು ನಗರ ಶಿವಮೊಗ್ಗದಲ್ಲಿ ಮತ್ತೆ ಗ್ಯಾಂಗ್‌ವಾರ್ ಸದ್ದು ಮಾಡಿದ್ದು, ರೌಡಿಶೀಟರ್ ಒಬ್ಬನ ಭೀಕರ ಹತ್ಯೆ ನಗರದಲ್ಲಿ ಆತಂಕ ಸೃಷ್ಟಿಸಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎದುರಾಳಿ ಗುಂಪು ನಡೆಸಿದ ದಾಳಿಯಲ್ಲಿ ರೌಡಿಶೀಟರ್ ನರಸಿಂಹ ಮೃತಪಟ್ಟಿದ್ದಾನೆ.

ನಗರದ ಗಾಂಧಿ ಬಜಾರ್‌ನ 1ನೇ ಕ್ರಾಸ್ ವ್ಯಾಪ್ತಿಯ ಕರಿದೇವರ ಕೇರಿಯಲ್ಲಿ ಈ ಘಟನೆ ನಡೆದಿದ್ದು, ಗೋವಿಂದಾಪುರ ಆಶ್ರಯ ಬಡಾವಣೆಯ ನಿವಾಸಿಯಾಗಿದ್ದ ನರಸಿಂಹನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ತಲೆ, ಕೈ ಸೇರಿದಂತೆ ದೇಹದ ಹಲವು ಭಾಗಗಳಿಗೆ ಮನಬಂದಂತೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದಾಳಿಯ ತೀವ್ರತೆಗೆ ನರಸಿಂಹ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯ ಭೀಕರತೆಯಿಂದಾಗಿ ಮೃತದೇಹದ ಕೆಲವು ಭಾಗಗಳು ತೀವ್ರವಾಗಿ ಹಾನಿಗೊಳಗಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಳೆಯ ದ್ವೇಷ ಹಾಗೂ ರೌಡಿ ಗುಂಪುಗಳ ನಡುವಿನ ವೈಷಮ್ಯವೇ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣದ ಹಿನ್ನೆಲೆ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಮೃತ ನರಸಿಂಹ ವಿರುದ್ಧ ಶಿವಮೊಗ್ಗ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಜೂಜಾಟ, ಗಾಂಜಾ ದಂಧೆ, ಕೊಲೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ.

ಘಟನೆಯ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

4,500 ಕೋಟಿ ರೂ. ವಂಚನೆ ಪ್ರಕರಣ: ಶಿವಾನಂದ ನೀಲಣ್ಣವರ್ʼಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಳಗಾವಿ: ಬಹುಕೋಟಿ ರೂಪಾಯಿ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್‌ಗೆ 93ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಲಯವು ₹3 ಲಕ್ಷದ ವೈಯಕ್ತಿಕ ಬಾಂಡ್ ಸಲ್ಲಿಸುವಂತೆ ಹಾಗೂ ವಿಚಾರಣೆ ಪೂರ್ಣಗೊಳ್ಳುವವರೆಗೆ ದೇಶ ತೊರೆಯಬಾರದು ಎಂಬ ಷರತ್ತು ವಿಧಿಸಿ ಜಾಮೀನು ನೀಡಿದೆ.

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕರಾಗಿರುವ ಶಿವಾನಂದ ನೀಲಣ್ಣವರ್ ವಿರುದ್ಧ ಸಾವಿರಾರು ಹೂಡಿಕೆದಾರರಿಗೆ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಭಾರೀ ಪ್ರಮಾಣದ ಹಣ ಸಂಗ್ರಹಿಸಿ ವಂಚನೆ ಎಸಗಿದ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಆರೋಪಗಳ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಥವಾ ಭಾರತೀಯ ಷೇರುಪೇಟೆ ಮತ್ತು ವಿನಿಮಯ ಮಂಡಳಿ (ಸೆಬಿ)ಯಿಂದ ಯಾವುದೇ ಅಧಿಕೃತ ಅನುಮೋದನೆ ಪಡೆಯದೇ, ಹೆಚ್ಚಿನ ಲಾಭಾಂಶದ ಭರವಸೆ ನೀಡಿ ಹೂಡಿಕೆದಾರರಿಂದ ಸಾವಿರಾರು ಕೋಟಿ ರೂಪಾಯಿ ಹಣ ಸಂಗ್ರಹಿಸಲಾಗಿತ್ತು.

ಸುಮಾರು ₹4,500 ಕೋಟಿ ಮೌಲ್ಯದ ವಂಚನೆ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಶಿವಾನಂದ ನೀಲಣ್ಣವರ್ ಸೋಮವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಭೀಕರ ಅಪಘಾತ: ಡಿವೈಡರ್ʼಗೆ ಡಿಕ್ಕಿ ಹೊಡೆದ ಬೆಂಜ್ ಕಾರು, ಯುವತಿ ಸಾವು

0

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಹೊಸಕೋಟೆ ಸಮೀಪದ ದೊಡ್ಡ ಹುಲ್ಲೂರು ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಸಂಚರಿಸುತ್ತಿದ್ದ ಬೆಂಜ್ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವತಿಯ ಗುರುತು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ಕಾರು ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಹೊಸಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್​ʼಸ್ಪೆಕ್ಟರ್!

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆವಿನ್ಯೂ ಇನ್‌ಸ್ಪೆಕ್ಟರ್‌ (ಆರ್‌ಐ) ಮಧುಸೂದನ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಭೂ ದಾಖಲೆಗಳಿಗೆ ಸಂಬಂಧಿಸಿದ ಪೋಡಿ ಕೆಲಸ ಮಾಡಿಕೊಡುವುದಕ್ಕಾಗಿ ರೈತ ನಂಜುಂಡಸ್ವಾಮಿ ಅವರ ಬಳಿ ಮಧುಸೂದನ್ ಒಟ್ಟು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಮೊತ್ತದ ಮುಂಗಡವಾಗಿ ₹10,000 ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹಲಗೂರಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರೈತನಿಂದ ಲಂಚದ ಹಣವನ್ನು ಕೈಯಲ್ಲಿ ಪಡೆದು ಜೇಬಿಗೆ ಹಾಕಿಕೊಳ್ಳುತ್ತಿದ್ದಾಗಲೇ ಅಧಿಕಾರಿಗಳು ಮಧುಸೂದನ್ ಅವರನ್ನು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಸಂಬಂಧ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಲೋಕಾಯುಕ್ತ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು, ಸಾರ್ವಜನಿಕರು ಲಂಚ ಬೇಡಿಕೆ ಸಂಬಂಧ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

error: Content is protected !!