Home Blog

ಹರಪನಹಳ್ಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: 25ಕ್ಕೂ ಹೆಚ್ಚು ಮನೆಗಳಿಗೆ ಹಾನಿ, ಜನಜೀವನ ಅಸ್ತವ್ಯಸ್ತ

ವಿಜಯನಗರ/ದಾವಣಗೆರೆ: ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಶೃಂಗಾರ ಗ್ರಾಮದಲ್ಲಿ 25ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

ಶನಿವಾರ ರಾತ್ರಿ ಸುರಿದ ಮಳೆಗೆ ಮನೆಗಳ ಮೇಲ್ಛಾವಣಿಗಳು ಹಾಗೂ ತಗಡಿನ ಶೀಟುಗಳು ಹಾರಿ ಹೋಗಿದ್ದು, ಕೆಲವು ಮನೆಗಳ ಪಕ್ಕದಲ್ಲಿದ್ದ ಮರಗಳ ಕೊಂಬೆಗಳು ಮನೆಗಳ ಮೇಲೆ ಬಿದ್ದು ಹಾನಿ ಉಂಟುಮಾಡಿವೆ.

ಭಾರೀ ಗಾಳಿ ಮತ್ತು ಮಳೆಯಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೆಲಕಾಲ ವಿದ್ಯುತ್ ವ್ಯತ್ಯಯವೂ ಉಂಟಾಗಿದೆ ಎಂದು ತಿಳಿದುಬಂದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇದೇ ವೇಳೆ ಉಚ್ಚಂಗಿ ಯಲ್ಲಮ್ಮ ದೇವಸ್ಥಾನ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ದೇವಸ್ಥಾನದ ಮೆಟ್ಟಿಲುಗಳ ಮೇಲೆ ನೀರು ಹರಿದ ದೃಶ್ಯಗಳು ಕಂಡುಬಂದಿವೆ.

ಬೇಸಿಗೆಯ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಈ ಮಳೆ ತಂಪು ತಂದಿದ್ದರೂ, ಬಿರುಗಾಳಿಯಿಂದ ಆಸ್ತಿ ಹಾನಿ ಉಂಟಾಗಿದೆ.

ಭಾರತದ ರಾಜತಾಂತ್ರಿಕ ಯಶಸ್ಸು: ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ಹಿಂದಿರುಗಿಸಿದ ನೆದರ್ಲೆಂಡ್ಸ್

ಆಂಸ್ಟರ್‌ಡ್ಯಾಮ್: ಸಾವಿರ ವರ್ಷಗಳಷ್ಟು ಹಳೆಯದಾದ ಚೋಳರ ಕಾಲದ ಅಪರೂಪದ ತಾಮ್ರ ಫಲಕಗಳನ್ನು ನೆದರ್ಲೆಂಡ್ಸ್ ಭಾರತಕ್ಕೆ ಹಿಂದಿರುಗಿಸಿದ್ದು, ಇದನ್ನು ಭಾರತದ ರಾಜತಾಂತ್ರಿಕ ವ್ಯವಸ್ಥೆಯ ಮಹತ್ವದ ಯಶಸ್ಸಾಗಿ ಪರಿಗಣಿಸಲಾಗಿದೆ.

18ನೇ ಶತಮಾನದಲ್ಲಿ ನಾಗಪಟ್ಟಣಂ ಡಚ್ ಆಡಳಿತದ ಅಧೀನದಲ್ಲಿದ್ದ ಸಂದರ್ಭದಲ್ಲಿ, ಭಾರತದಲ್ಲಿನ ಕ್ರಿಶ್ಚಿಯನ್ ಮಿಷನ್‌ಗೆ ಸಂಬಂಧ ಹೊಂದಿದ್ದ ಫ್ಲೋರೆಂಟಿಯಸ್ ಕ್ಯಾಂಪರ್ ಈ ಐತಿಹಾಸಿಕ ಫಲಕಗಳನ್ನು ನೆದರ್ಲೆಂಡ್ಸ್‌ಗೆ ಕೊಂಡೊಯ್ದಿದ್ದರು ಎನ್ನಲಾಗಿದೆ.

ಈ ಅಪರೂಪದ ಪರಂಪರಾ ವಸ್ತುಗಳನ್ನು ಭಾರತಕ್ಕೆ ಮರಳಿ ತರಲು ಭಾರತ ಸರ್ಕಾರವು 2012ರಿಂದ ನಿರಂತರ ಪ್ರಯತ್ನ ನಡೆಸುತ್ತಿತ್ತು. ಹಲವು ಹಂತದ ರಾಜತಾಂತ್ರಿಕ ಮಾತುಕತೆಗಳ ಬಳಿಕ ಇದೀಗ ಈ ಐತಿಹಾಸಿಕ ತಾಮ್ರ ಫಲಕಗಳನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಭಾರತ-ನೆದರ್ಲೆಂಡ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೆದರ್ಲೆಂಡ್ಸ್‌ಗೆ ಭೇಟಿ ನೀಡಿದ್ದ ವೇಳೆ ಈ ಮಹತ್ವದ ಬೆಳವಣಿಗೆ ನಡೆದಿದೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಚೋಳರ ಕಾಲದ ತಾಮ್ರ ಫಲಕಗಳು ಮರಳಿ ಭಾರತಕ್ಕೆ ಬರುತ್ತಿವೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಮತ್ತು ಸಂತೋಷದ ಕ್ಷಣ. 11ನೇ ಶತಮಾನದ ಚೋಳ ತಾಮ್ರ ಫಲಕಗಳನ್ನು ನೆದರ್ಲೆಂಡ್ಸ್‌ನಿಂದ ಭಾರತಕ್ಕೆ ವಾಪಸ್ ತರಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ತಾಮ್ರ ಫಲಕಗಳು ಸುಮಾರು 30 ಕೆಜಿ ತೂಕವಿದ್ದು, ಒಟ್ಟು 21 ಫಲಕಗಳನ್ನು ಒಳಗೊಂಡಿವೆ. ಅವುಗಳನ್ನು ರಾಜ ಚೋಳರ ಮುದ್ರೆ ಹೊಂದಿರುವ ಕಂಚಿನ ಉಂಗುರದ ಮೂಲಕ ಜೋಡಿಸಲಾಗಿದೆ.

ಫಲಕಗಳ ಒಂದು ಭಾಗದಲ್ಲಿ ಸಂಸ್ಕೃತ ಭಾಷೆಯಲ್ಲಿಯೂ, ಮತ್ತೊಂದು ಭಾಗದಲ್ಲಿ ತಮಿಳು ಭಾಷೆಯಲ್ಲಿಯೂ ಶಾಸನ ಕೆತ್ತಲಾಗಿದೆ. ಇವು ಚೋಳರ ಆಡಳಿತ, ಸಂಸ್ಕೃತಿ ಮತ್ತು ಇತಿಹಾಸದ ಮಹತ್ವದ ದಾಖಲೆಗಳಾಗಿ ಪರಿಗಣಿಸಲಾಗುತ್ತಿವೆ.

ಈ ಹಸ್ತಾಂತರವು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ; ಸಿಎನ್‌ಜಿಗೂ ಹೊಡೆತ!

ಬೆಂಗಳೂರು: ದೇಶದಲ್ಲಿ ಇಂಧನ ಬೆಲೆ ಏರಿಕೆ ಮತ್ತೊಮ್ಮೆ ಜನಸಾಮಾನ್ಯರ ಮೇಲೆ ಭಾರೀ ಆರ್ಥಿಕ ಒತ್ತಡವನ್ನು ಉಂಟುಮಾಡಿದೆ.

ಪೆಟ್ರೋಲ್ ಮತ್ತು ಡೀಸೆಲ್ ದರಗಳು ಲೀಟರ್‌ಗೆ 3 ರೂಪಾಯಿ ಏರಿಕೆಯಾದ ಬೆನ್ನಲ್ಲೇ, ಸಿಎನ್‌ಜಿ ಬೆಲೆಯೂ ಕಳೆದ ಎರಡು ದಿನಗಳಲ್ಲಿ ಒಟ್ಟು 3 ರೂಪಾಯಿ ಹೆಚ್ಚಾಗಿದೆ.

ತಜ್ಞರ ಪ್ರಕಾರ ಈ ಏರಿಕೆ ಕೇವಲ ಆರಂಭವಾಗಿದ್ದು, ಜಾಗತಿಕ ತೈಲ ಬಿಕ್ಕಟ್ಟು ಮತ್ತು ಮಾರುಕಟ್ಟೆಯ ಬೆಲೆ ಏರಿಕೆ ಪ್ರವೃತ್ತಿಯನ್ನು ಗಮನಿಸಿದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅಂದಾಜಿನಂತೆ 8 ರಿಂದ 10 ರೂಪಾಯಿಗಳವರೆಗೆ ಹೆಚ್ಚಳವಾಗಬಹುದು ಎಂಬ ಎಚ್ಚರಿಕೆ ನೀಡಲಾಗಿದೆ.

ಈ ಇಂಧನ ಬೆಲೆ ಏರಿಕೆಯ ಪರಿಣಾಮವು ಕೇವಲ ವಾಹನ ಸವಾರರಿಗೆ ಮಾತ್ರ ಸೀಮಿತವಾಗದೇ, ಇಡೀ ಆರ್ಥಿಕ ವ್ಯವಸ್ಥೆಯ ಮೇಲೆಯೂ ಪರಿಣಾಮ ಬೀರುವ ಸಾಧ್ಯತೆ ಇದೆ. ಡೀಸೆಲ್ ದರ ಹೆಚ್ಚಳದಿಂದ ಸರಕು ಸಾಗಣೆ ವೆಚ್ಚ ಹೆಚ್ಚಾಗಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳೂ ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ.

ಪೆಟ್ರೋಲಿಯಂ ಇಲಾಖೆ ಮಾಹಿತಿಯ ಪ್ರಕಾರ ಭಾರತದಲ್ಲಿ ಪ್ರತಿದಿನ ಸರಾಸರಿ 55 ಲಕ್ಷ ಬ್ಯಾರೆಲ್ ಕಚ್ಚಾ ತೈಲಕ್ಕೆ ಬೇಡಿಕೆ ಇದೆ. ಸದ್ಯ ದೇಶದಲ್ಲಿ ಸುಮಾರು 65 ದಿನಗಳಿಗೆ ಸಾಕಾಗುವಷ್ಟು ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹವಿದೆ ಎಂದು ತಿಳಿದುಬಂದಿದೆ.

ಈ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಜನಸಾಮಾನ್ಯರ ಬದುಕಿನ ವೆಚ್ಚವನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ: ತಪ್ಪಿದ ಭಾರೀ ಅನಾಹುತ!

ಭೋಪಾಲ್: ಮಧ್ಯಪ್ರದೇಶದಲ್ಲಿ ತಿರುವನಂತಪುರಂ–ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಈ ಘಟನೆ ಲೂನಿ ರಿಚ್ಛಾ ಮತ್ತು ವಿಕ್ರಮ್‌ಗಢ್ ಅಲೋಟ್ ನಿಲ್ದಾಣಗಳ ನಡುವಿನ ಭಾಗದಲ್ಲಿ ಸಂಭವಿಸಿದೆ.

ಇಂದು ಬೆಳಿಗ್ಗೆ ಸುಮಾರು 5.15ಕ್ಕೆ ತಿರುವನಂತಪುರಂನಿಂದ ನಿಜಾಮುದ್ದೀನ್ ಕಡೆಗೆ ಹೊರಟಿದ್ದ 12431 ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಹಿಂಭಾಗದ SLR ಹಾಗೂ B1 ಕೋಚ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲ್ವೆ ಸಿಬ್ಬಂದಿ ತಕ್ಷಣ ಕ್ರಮ ಕೈಗೊಂಡು ಕೋಚ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರು ಅಥವಾ ರೈಲ್ವೆ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಿತಿಯನ್ನು ತಕ್ಷಣ ನಿಯಂತ್ರಣಕ್ಕೆ ತರುವ ಸಲುವಾಗಿ ಬೆಂಕಿ ತಗುಲಿದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಘಟನೆ ಸಂಬಂಧ ರೈಲ್ವೆ ಇಲಾಖೆ ತನಿಖೆ ಆರಂಭಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನು ಎಂಬುದರ ಕುರಿತು ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರು ಗ್ರಾಮಾಂತರದಲ್ಲಿ ಭೀಕರ ಕೊಲೆ: ಕೇವಲ 200 ರೂ. ಸಾಲದ ವಿವಾದಕ್ಕೆ ವ್ಯಕ್ತಿ ಬಲಿ!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್ ಬಳಿ ಕೇವಲ 200 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಭೀಕರ ಘಟನೆ ನಡೆದಿದೆ.

ಮೃತರನ್ನು ದ್ಯಾವಸಂದ್ರ ಗ್ರಾಮದ ನಿವಾಸಿ ಮಂಜುನಾಥ (40) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅದೇ ಗ್ರಾಮದ ಮುನಿರಾಜ್ (41) ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 12ರಂದು ಅಪ್ಪಕಾರನಹಳ್ಳಿ ಗೇಟ್ ಬಳಿ ಇರುವ ಟೀ ಅಂಗಡಿ ಬಳಿ ಘಟನೆ ನಡೆದಿದ್ದು, ಮುನಿರಾಜ್ ಬೆಳಗ್ಗೆ ಟೀ ಕುಡಿಯಲು ಅಂಗಡಿಗೆ ಬಂದಿದ್ದಾನೆ. ಈ ವೇಳೆ ಹಳೆಯ ಸಾಲದ ವಿಚಾರವಾಗಿ ಮಂಜುನಾಥ್ ಮತ್ತು ಮುನಿರಾಜ್ ನಡುವೆ ಮಾತಿನ ಚಕಮಕಿ ನಡೆದಿದೆ.

ಮುನಿರಾಜ್ ಮತ್ತೆ ಸಾಲದಲ್ಲಿ ಟೀ ಕೊಡುವಂತೆ ಕೇಳಿದ್ದಾನೆ. ಆದರೆ ಮಂಜುನಾಥ್ ಹಳೆಯ ಸಾಲ ವಾಪಸ್ ನೀಡುವಂತೆ ಹೇಳಿದ ಕಾರಣ ಇಬ್ಬರ ನಡುವೆ ಗಲಾಟೆ ಉಂಟಾಗಿದೆ. ಮಾತಿಗೆ ಮಾತು ಬೆಳೆದು ವಾಗ್ವಾದ ತೀವ್ರಗೊಂಡಿದೆ.

ಈ ವೇಳೆ ಸಿಟ್ಟಿಗೆದ್ದ ಮುನಿರಾಜ್, ಪಕ್ಕದಲ್ಲಿದ್ದ ನೀಲಗಿರಿ ಮರದ ದೊಣ್ಣೆಯನ್ನು ತೆಗೆದುಕೊಂಡು ಮಂಜುನಾಥ್ ಅವರ ತಲೆಗೆ ಮನಸೋಯಿಚ್ಚೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮಾಹಿತಿಯ ಪ್ರಕಾರ, ಆರೋಪಿಯಾದ ಮುನಿರಾಜ್ ಈ ಹಿಂದೆ ತನ್ನ ಹೆತ್ತ ತಾಯಿಗೆ ಚಾಕು ಹಾಕಿದ ಪ್ರಕರಣದಲ್ಲಿಯೂ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದು ಈಗ ಈ ಕೊಲೆ ಮಾಡಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಧಾರ್ಮಿಕ ಸೇವೆಯಲ್ಲಿ ರಚಿತಾ ರಾಮ್: ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ!

0

ಕನ್ನಡ ಚಿತ್ರರಂಗದ ಜನಪ್ರಿಯ ನಟಿ, “ಡಿಂಪಲ್ ಕ್ವೀನ್” ಎಂದೇ ಖ್ಯಾತರಾಗಿರುವ ರಚಿತಾ ರಾಮ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಕೊರಗಜ್ಜ ದೈವ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿದ್ದಾರೆ.

ತಾವು ಅಂದುಕೊಂಡ ಕೆಲಸಗಳು ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ಸಲ್ಲಿಸುವ ಹರಕೆ ಹೊತ್ತಿದ್ದ ರಚಿತಾ ರಾಮ್ ಅವರು ಇದೀಗ ಆ ಹರಕೆಯನ್ನು ಪೂರ್ಣಗೊಳಿಸಿದ್ದಾರೆ. ಭಕ್ತಿಭಾವದ ವಾತಾವರಣದಲ್ಲಿ ಈ ಕಾರ್ಯಕ್ರಮ ನೆರವೇರಿದ್ದು, ಸ್ಥಳೀಯ ಭಕ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದಾರೆ.

ರಚಿತಾ ರಾಮ್ ಕನ್ನಡ ಚಿತ್ರರಂಗದ ಹಲವು ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಸದ್ಯ ಅವರು ಧ್ರುವ ಸರ್ಜಾ ಜೊತೆ “ಕ್ರಿಮಿನಲ್” ಹಾಗೂ ನಿನಾಸಂ ಸತೀಶ್ ಜೊತೆ “ಅಯೋಗ್ಯ 2” ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇದಲ್ಲದೆ ತಮಿಳು ಚಿತ್ರರಂಗದ ದೊಡ್ಡ ನಿರ್ಮಾಣ ಸಂಸ್ಥೆಯೊಂದರ ಜೊತೆ ಮಾತುಕತೆ ನಡೆಯುತ್ತಿದ್ದು, ತೆಲುಗಿನಲ್ಲಿ ಎರಡು ಹೊಸ ಸಿನಿಮಾಗಳು ಶೀಘ್ರದಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ.

 

ಮಂಡ್ಯದಲ್ಲಿ ಸಿನಿಮಾಶೈಲಿ ದರೋಡೆ: 26 ಲಕ್ಷ ರೂ. ಹಣ ಕಳವು!

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ನಡೆದಿದೆ.

ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ಐ-20 ಕಾರಿನಲ್ಲಿ ಕಂಪನಿಗಳ ನಡುವೆ ಹಣ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ಐಶ್ವರ್ಯ ಕಾನ್ವೆಂಟ್ ಬಳಿ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆ.

ನಂತರ ಕಾರಿನ ಗಾಜು ಒಡೆದು, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ ಆರೋಪಿಗಳು 26 ಲಕ್ಷ ರೂ. ನಗದು ಹಣವನ್ನು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆ ಬಗ್ಗೆ ತಕ್ಷಣ ಮದ್ದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ವಿ.ಜೆ. ಶೋಭರಾಣಿ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.

ಮಂಗಳೂರಿನಲ್ಲಿ ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿ ದುರ್ಮರಣ!

ಮಂಗಳೂರು: ನಗರದ ಕುಂಟಿಕಾನ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದ್ದು, ಲಿಫ್ಟ್ ಕುಸಿದು ಇನ್‌ಸ್ಟಾ ಮಾರ್ಟ್ ಉದ್ಯೋಗಿಯೊಬ್ಬರು ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಲು ನಿವಾಸಿ ನೌಫಾಲ್ (28) ಮೃತ ದುರ್ದೈವಿ. ಇನ್‌ಸ್ಟಾ ಮಾರ್ಟ್ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್ ಮೂಲಕ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ವಸ್ತುಗಳನ್ನು ಮೇಲ್ಮಹಡಿಗೆ ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್ ಕುಸಿದಿದ್ದು, ಅದರೊಳಗೆ ಸಿಲುಕಿದ ನೌಫಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸ್ಥಳದ ಸಿಸಿ ಕ್ಯಾಮೆರಾದಲ್ಲಿ ದುರಂತದ ದೃಶ್ಯಗಳು ಸೆರೆಯಾಗಿವೆ.

ಘಟನೆ ತಿಳಿಯುತ್ತಿದ್ದಂತೆ ಕದ್ರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಿಫ್ಟ್ ದುರಂತದ ನಿಖರ ಕಾರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ತೀರ್ಮಾನ: ನದಿ ತೀರದ ಜನರಿಗೆ ಎಚ್ಚರಿಕೆ!

ಶಿವಮೊಗ್ಗ: ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ ಹಾಗೂ ಹಿರೇಕೆರೂರು ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ.

ಬಹುಗ್ರಾಮ ನದಿ ನೀರು ಯೋಜನೆಯಡಿ ತುಂಗಭದ್ರಾ ನದಿಯ ನೀರನ್ನು ಅವಲಂಬಿಸಿರುವ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಮೇ 18ರಿಂದ 23ರವರೆಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರನ್ನು ಭದ್ರಾವತಿ ಸಮೀಪದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಹರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನದಿ ತೀರದ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಸೂಚನೆ ನೀಡಲಾಗಿದೆ. ನದಿಯ ಕೆಳಭಾಗದಲ್ಲಿ ಸಾರ್ವಜನಿಕರು ಅನಗತ್ಯವಾಗಿ ತಿರುಗಾಡುವುದು, ದನಕರುಗಳನ್ನು ಮೇಯಿಸುವುದು ಹಾಗೂ ತೋಟಗಾರಿಕೆ ಚಟುವಟಿಕೆ ನಡೆಸುವುದನ್ನು ತಪ್ಪಿಸಬೇಕು ಎಂದು ಎಚ್ಚರಿಸಲಾಗಿದೆ.

ಇದೇ ವೇಳೆ ರೈತರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‌ಸೆಟ್‌ಗಳ ಮೂಲಕ ನೀರನ್ನು ಎತ್ತುವುದನ್ನೂ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಭದ್ರಾ ಜಲಾಶಯ ಯೋಜನೆಯ ಕುಡಿಯುವ ನೀರಿನ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

error: Content is protected !!