Home Blog

ಬೆಂಗಳೂರು ಎಸಿಪಿ ಎಲ್.ವೈ. ರಾಜೇಶ್‌ಗೆ ಡಿಜಿ ಪದಕ: ಡ್ರಗ್ಸ್ ವಿರುದ್ಧದ ಹೋರಾಟಕ್ಕೆ ಗೌರವ!

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಹಾಗೂ ಸಿಸಿಬಿ ಎಸಿಪಿಯಾಗಿರುವ ಎಲ್.ವೈ. ರಾಜೇಶ್ ಅವರಿಗೆ ಅತ್ಯುತ್ತಮ ಸೇವೆಗಾಗಿ ಪ್ರತಿಷ್ಠಿತ ಡಿಜಿ ಪದಕ ಪ್ರದಾನ ಮಾಡಲಾಗಿದೆ.

ಡ್ರಗ್ಸ್ ಮುಕ್ತ ಬೆಂಗಳೂರಿನ ನಿರ್ಮಾಣಕ್ಕೆ ನೀಡಿದ ಕೊಡುಗೆ, ಸಮಾಜಮುಖಿ ಕಾರ್ಯಗಳು ಹಾಗೂ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ನಟ ಜಯಸೂರ್ಯ ಅವರ ತಂದೆಯಾಗಿರುವ ಎಲ್.ವೈ. ರಾಜೇಶ್, ಪೊಲೀಸ್ ಸೇವೆಯ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ವಿಶೇಷ ಶಿಬಿರಗಳನ್ನು ಆಯೋಜಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿಯೂ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ.

ಮಂಡ್ಯದಲ್ಲಿ ಬರದ ಛಾಯೆ: 83% ಮಳೆ ಕೊರತೆ, ಬಿತ್ತನೆ ಕಾರ್ಯಕ್ಕೆ ಭಾರೀ ಹೊಡೆತ!

ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜುಲೈ ತಿಂಗಳು ಕಳೆಯುತ್ತಾ ಬಂದರೂ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಹಚ್ಚಹಸಿರಿನಿಂದ ಕಂಗೊಳಿಸಬೇಕಿದ್ದ ಜಮೀನುಗಳು ಇದೀಗ ಒಣಭೂಮಿಯಾಗಿ ಮಾರ್ಪಟ್ಟಿವೆ.

ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಶೇ.83ರಷ್ಟು ಮಳೆ ಕೊರತೆ ಎದುರಾಗಿದೆ. ಮಳೆಯ ಅಭಾವದಿಂದ ಜಮೀನುಗಳಲ್ಲಿ ತೇವಾಂಶ ಇಲ್ಲದಂತಾಗಿದ್ದು, ಉಳುಮೆ ಮತ್ತು ಬಿತ್ತನೆ ಕಾರ್ಯಗಳು ಸ್ಥಗಿತಗೊಂಡಿವೆ. ಕಾವೇರಿ ನದಿ ಹಾಗೂ ಕೃಷಿ ನೀರಿನ ಮೇಲೆ ಅವಲಂಬಿತವಾಗಿರುವ ರೈತರು ಮಳೆಗಾಗಿ ಆಗಸದತ್ತ ನೋಡುವಂತಾಗಿದೆ.

ಇತ್ತ ಜಿಲ್ಲೆಯ ಜೀವನಾಡಿಯಾಗಿರುವ ಕೆಆರ್‌ಎಸ್ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದೆ. ಸದ್ಯ ಜಲಾಶಯದಲ್ಲಿ ಸುಮಾರು 92 ಅಡಿ ನೀರಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 12 ಟಿಎಂಸಿ ನೀರು ಮಾತ್ರ ಎಂದು ತಿಳಿಸಲಾಗಿದೆ. ಹೀಗಾಗಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದ್ದು, ಕೃಷಿ ಉದ್ದೇಶಕ್ಕೆ ನೀರು ಹರಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಇದರ ಪರಿಣಾಮ ಕಾಲುವೆ ನೀರಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಭಾರಿ ಹೊಡೆತ ಬಿದ್ದಿದೆ. ಜಿಲ್ಲೆಯಲ್ಲಿ ಈ ಬಾರಿ 2.06 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಗುರಿ ಹೊಂದಲಾಗಿತ್ತು. ಆದರೆ ಇದುವರೆಗೆ ಕೇವಲ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದ್ದು, ಶೇ.9ರಷ್ಟು ಪ್ರಗತಿ ಮಾತ್ರ ದಾಖಲಾಗಿದೆ.

ಮಂಡ್ಯ ಜಿಲ್ಲೆಯ ಏಳು ತಾಲೂಕುಗಳಲ್ಲೂ ಬರದ ವಾತಾವರಣ ನಿರ್ಮಾಣವಾಗಿದೆ. ಮಳೆ ಹಾಗೂ ನೀರಿನ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.

RDPR ವಿಶ್ವವಿದ್ಯಾಲಯದ ಟಾಪರ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಪೋಷಕರ ಆರೋಪ

0

ಗದಗ: ತಾಲೂಕಿನ ನಾಗಾವಿ ಸಮೀಪದ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ವಸತಿ ನಿಲಯದಲ್ಲಿ ಎಂ.ಪಿ.ಎಚ್. (ಮಾಸ್ಟರ್ ಆಫ್ ಪಬ್ಲಿಕ್ ಹೆಲ್ತ್) ವ್ಯಾಸಂಗ ಮಾಡುತ್ತಿದ್ದ 24 ವರ್ಷದ ವೀಣಾ ಹಾನಾಪುರ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ವಿದ್ಯಾರ್ಥಿನಿಯ ಸಾವಿನ ಹಿಂದೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಪ್ರಶ್ನೆ ಮೂಡಿದ್ದು, ಪೋಷಕರು ಕೊಲೆ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಗದಗ ಗ್ರಾಮೀಣ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ನಿವಾಸಿ, ಶಿಕ್ಷಕರಾದ ರಾಮಪ್ಪ ಹಾಗೂ ಲಕ್ಷ್ಮೀ ದಂಪತಿ ಪುತ್ರಿಯಾಗಿರುವ ವೀಣಾ, ವಿಶ್ವವಿದ್ಯಾಲಯದ ವಸತಿ ನಿಲಯದ ಕೊಠಡಿಯಲ್ಲಿ ಡಬಲ್ ಬೆಡ್ ಕಾಟ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವ ಮಂಡಿಯೂರಿದ ಸ್ಥಿತಿಯಲ್ಲಿದ್ದಲ್ಲದೆ, ಮುಖದ ಮೇಲೆ ಗಾಯದ ಗುರುತುಗಳು ಹಾಗೂ ಮೂಗಿನಲ್ಲಿ ರಕ್ತಸ್ರಾವ ಕಂಡುಬಂದಿರುವುದರಿಂದ ಇದು ಸಹಜ ಆತ್ಮಹತ್ಯೆಯಲ್ಲ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ವೀಣಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಎಲ್ಲ ಪರೀಕ್ಷೆಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದರು. ಓದಿನಲ್ಲೂ, ನಡವಳಿಕೆಯಲ್ಲೂ ಮಾದರಿಯಾಗಿದ್ದ ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ಯಾವುದೇ ಕಾರಣವಿರಲಿಲ್ಲ ಎಂದು ಪೋಷಕರು ಹೇಳಿದ್ದಾರೆ. ಯಾರೋ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ನೇಣು ಹಾಕಿದ್ದಾರೆ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ತಮಗೆ ಮಾಹಿತಿ ನೀಡುವ ಮುನ್ನವೇ ವಿಶ್ವವಿದ್ಯಾಲಯದ ಸಿಬ್ಬಂದಿ ಮೃತದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ವಿಶ್ವವಿದ್ಯಾಲಯದ ಅಧಿಕಾರಿಗಳ ನಡೆ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ “ನನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಅದು ವೀಣಾ ಅವರ ಕೈಬರಹವಲ್ಲ ಎಂದು ಪೋಷಕರು ಆರೋಪಿಸಿದ್ದು, ಡೆತ್‌ನೋಟ್‌ನ್ನೂ ಯಾರೋ ಸೃಷ್ಟಿಸಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಅಕೌಂಟ್ಸ್ ಅಧಿಕಾರಿ ಪ್ರಶಾಂತ್, ವೀಣಾ ಉತ್ತಮ ವಿದ್ಯಾರ್ಥಿನಿಯಾಗಿದ್ದು, ಶಿಕ್ಷಕರು ಹಾಗೂ ಸಹಪಾಠಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಆಕೆ ಏಕೆ ಈ ರೀತಿಯ ನಿರ್ಧಾರ ಕೈಗೊಂಡರು ಎಂಬುದು ತಿಳಿದಿಲ್ಲ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಕೊಲೆ ಆರೋಪ ಮಾಡಿದ್ದು, ಮತ್ತೊಂದೆಡೆ ಡೆತ್‌ನೋಟ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಆತ್ಮಹತ್ಯೆಯೋ ಅಥವಾ ಬೇರೆ ಯಾವುದೇ ಕಾರಣವೋ ಎಂಬ ಎಲ್ಲ ಆಯಾಮಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ, ವಿಧಿವಿಜ್ಞಾನ ಪರೀಕ್ಷೆ ಹಾಗೂ ತನಿಖೆಯ ಬಳಿಕವೇ ವಿದ್ಯಾರ್ಥಿನಿಯ ಸಾವಿನ ನಿಖರ ಕಾರಣ ಬೆಳಕಿಗೆ ಬರಲಿದೆ.

ಜಿಲ್ಲಾಡಳಿತ ಭವನದಲ್ಲೇ ಲೋಕಾಯುಕ್ತ ಟ್ರ್ಯಾಪ್: ₹15 ಸಾವಿರ ಲಂಚ ಪಡೆಯುವಾಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಕಾರು ಚಾಲಕ ವಶಕ್ಕೆ

0

ಗದಗ: ಹೊರಗುತ್ತಿಗೆ ಸಿಬ್ಬಂದಿಯ ವೇತನ ಬಿಡುಗಡೆ ಮಾಡಿಕೊಡುವುದಕ್ಕಾಗಿ ₹30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಮೊದಲ ಕಂತಿನ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಎ. ಹಳ್ಳೂರು ಹಾಗೂ ಅವರ ಕಾರು ಚಾಲಕ ಮೌಲಾ ಹುಸೇನ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಟ್ರ್ಯಾಪ್ ಮಾಡಿ ವಶಕ್ಕೆ ಪಡೆದಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿಯಾಗಿರುವ ಅಭಿಷೇಕ ಅವರಿಂದ ವೇತನ ಬಿಡುಗಡೆ ಮಾಡಿಕೊಡುವ ನೆಪದಲ್ಲಿ ₹30 ಸಾವಿರಕ್ಕೆ ಬೇಡಿಕೆ ಇಟ್ಟಿದ್ದು, ಮೊದಲ ಕಂತಾಗಿ ₹15 ಸಾವಿರ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದರು.

ಈ ಕಾರ್ಯಾಚರಣೆ ಲೋಕಾಯುಕ್ತ ಡಿಎಸ್ಪಿ ಲೋಕೇಶ್ ಅವರ ನೇತೃತ್ವದಲ್ಲಿ ನಡೆಯಿತು. ಸಿಪಿಐ ಪರಮೇಶ್, ಪಿಎಸ್‌ಐ ತೇಲಿ ಸೇರಿದಂತೆ ಆರು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಗೆ ಇನ್ನು ಕ್ಷಮೆಯಿಲ್ಲ; ಮೋದಿ ಸರ್ಕಾರದಿಂದ 10 ವರ್ಷ ಜೈಲು, ₹10 ಕೋಟಿ ದಂಡದ ಕಠಿಣ ಕಾನೂನು

0

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ಮುಂದುವರಿದಿರುವ ನಡುವೆಯೇ, ಪರೀಕ್ಷಾ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಸಜ್ಜಾಗಿದೆ.

ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ನ್ಯಾಯಾಂಗ ವ್ಯವಸ್ಥೆ ರೂಪಿಸುವ ಪ್ರಸ್ತಾವನೆ ಸಿದ್ಧವಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರಸ್ತಾವಿತ ಕಾನೂನಿನ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತದೆ. ಪ್ರಕರಣ ದಾಖಲಾಗಿದ ದಿನದಿಂದ ಮೂರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಿ ತೀರ್ಪು ನೀಡುವ ವ್ಯವಸ್ಥೆಯನ್ನು ಕಾನೂನಿನಲ್ಲಿ ಸೇರಿಸುವ ಸಾಧ್ಯತೆ ಇದೆ.

ಇದರ ಜೊತೆಗೆ, ಪ್ರಶ್ನೆಪತ್ರಿಕೆ ಸೋರಿಕೆ ಜಾಲದಲ್ಲಿ ಭಾಗಿಯಾಗಿರುವವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾಪವೂ ಸರ್ಕಾರದ ಮುಂದಿದೆ. ತಪ್ಪಿತಸ್ಥರೆಂದು ಸಾಬೀತಾದವರಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 10 ಕೋಟಿ ರೂಪಾಯಿವರೆಗೆ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಂಘಟಿತ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶದಲ್ಲಿ ಜಾರಿಗೆ ಬರುವ ಅತ್ಯಂತ ಕಠಿಣ ಕಾನೂನುಗಳಲ್ಲಿ ಇದೂ ಒಂದಾಗುವ ಸಾಧ್ಯತೆ ಇದೆ.

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸುತ್ತಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಕಠಿಣಾತಿಕಠಿಣ ಕಾನೂನು ಜಾರಿಗೆ ತರುವ ಕುರಿತು ಸರ್ಕಾರ ಮಹತ್ವದ ನಿರ್ಧಾರಗಳತ್ತ ಸಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಾಲಯದ ಅನುಮತಿ ಇಲ್ಲದೆ ಕಲಾಪದ ಆಡಿಯೋ-ವಿಡಿಯೋ ಪ್ರಸಾರಕ್ಕೆ ಸುಪ್ರೀಂ ನಿಷೇಧ!

0

ನವದೆಹಲಿ: ನ್ಯಾಯಾಲಯಗಳ ಕಲಾಪಗಳ ಆಡಿಯೋ ಮತ್ತು ವಿಡಿಯೋಗಳನ್ನು ಸಂಬಂಧಿತ ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳು ಅಥವಾ ಇತರ ಡಿಜಿಟಲ್ ವೇದಿಕೆಗಳಲ್ಲಿ ಹಂಚಿಕೊಳ್ಳುವುದು, ಪ್ರಸಾರ ಮಾಡುವುದು ಹಾಗೂ ಮರುಪ್ರಸಾರ ಮಾಡುವುದನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.

ನ್ಯಾಯಾಲಯದ ಕಲಾಪಗಳ ನೇರಪ್ರಸಾರ ಮತ್ತು ವಿಡಿಯೋಗಳ ಅನಿಯಂತ್ರಿತ ಬಳಕೆಯನ್ನು ನಿಯಂತ್ರಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಆದೇಶದಲ್ಲಿ, ಸಂಬಂಧಿತ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅಥವಾ ಸುಪ್ರೀಂ ಕೋರ್ಟ್‌ನ ಪ್ರಧಾನ ಕಾರ್ಯದರ್ಶಿಯ ಪೂರ್ವಾನುಮತಿ ಇಲ್ಲದೆ ನ್ಯಾಯಾಂಗ ಕಲಾಪಗಳ ಆಡಿಯೋ ಅಥವಾ ವಿಡಿಯೋ ದಾಖಲಾತಿಗಳನ್ನು ಸಾಮಾಜಿಕ ಜಾಲತಾಣಗಳು ಹಾಗೂ ಇತರ ಡಿಜಿಟಲ್ ವೇದಿಕೆಗಳಲ್ಲಿ ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು, ಅಪ್ಲೋಡ್ ಮಾಡುವುದು, ಪ್ರಸಾರ ಮಾಡುವುದು ಅಥವಾ ಯಾವುದೇ ರೀತಿಯಲ್ಲಿ ಮಾರ್ಪಡಿಸಿ ಹಂಚಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಲಾಗಿದೆ.

ನ್ಯಾಯಾಲಯದ ಕಲಾಪಗಳ ವಿಡಿಯೋಗಳನ್ನು ಅನಿಯಂತ್ರಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಪ್ರವೃತ್ತಿಯನ್ನು ಸುಪ್ರೀಂ ಕೋರ್ಟ್ “ಚೀಲದಿಂದ ಹೊರಬಂದ ರಾಕ್ಷಸ” ಎಂದು ಬಣ್ಣಿಸಿದ್ದು, ಇಂತಹ ಕ್ರಮಗಳು ನ್ಯಾಯಾಂಗದ ಘನತೆಗೆ ಧಕ್ಕೆ ತರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ.

ಆದಾಗ್ಯೂ, ಈ ಮಧ್ಯಂತರ ಆದೇಶವು ನ್ಯಾಯಾಲಯದ ಕಲಾಪಗಳ ಕುರಿತು ಮಾಧ್ಯಮಗಳು ಸುದ್ದಿ ವರದಿ ಮಾಡುವ ಹಕ್ಕಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಇದನ್ನು ಸಾಮಾನ್ಯ ಅಥವಾ ತಮಾಷೆಯ ಆದೇಶವೆಂದು ಪರಿಗಣಿಸಬಾರದು ಎಂದೂ ನ್ಯಾಯಪೀಠ ತಿಳಿಸಿದೆ.

ಅರ್ಜಿದಾರರ ಪರವಾಗಿ, ನ್ಯಾಯಾಲಯದ ಕಲಾಪಗಳ ಆಯ್ದ ಹಾಗೂ ಸಂದರ್ಭದಿಂದ ಹೊರತಾದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದರಿಂದ ನ್ಯಾಯಾಂಗದ ಘನತೆ ಕುಗ್ಗುತ್ತಿದ್ದು, ನ್ಯಾಯ ವಿತರಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೂ ಧಕ್ಕೆ ಉಂಟಾಗುತ್ತಿದೆ ಎಂದು ವಾದಿಸಲಾಯಿತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ನಿರ್ಬಂಧ ವಿಧಿಸಿದೆ.

ವಿದ್ಯಾರ್ಥಿಗಳ ಮೇಲಿನ ಪ್ರಕರಣ ಹಿಂಪಡೆದು ಪರಿಹಾರಕ್ಕೆ ಕೇಂದ್ರ ಒಪ್ಪಿಗೆ: ಪ್ರಧಾನ್ ರಾಜೀನಾಮೆ ಬೇಡಿಕೆಗೆ ಸಮಯ ಕೇಳಲಾಗಿದೆ ಎಂದ CJP

0

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಮ್ಮ ಮೂರು ಪ್ರಮುಖ ಬೇಡಿಕೆಗಳ ಪೈಕಿ ಎರಡು ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ತಿಳಿಸಿದೆ.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಹಾಗೂ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಅವರೊಂದಿಗೆ ಎರಡನೇ ಸುತ್ತಿನ ಸಭೆ ನಡೆಸಿದರು.

ಸಭೆಯಲ್ಲಿ ಸಿಜೆಪಿ ಮೂರು ಪ್ರಮುಖ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು, ಪ್ರತಿಭಟನೆಯಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತ್ತು.

ಸಭೆಯ ಬಳಿಕ ಮಾತನಾಡಿದ ಸಿಜೆಪಿ ಮುಖಂಡರು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಹೊರತುಪಡಿಸಿ ಉಳಿದ ಎರಡು ಬೇಡಿಕೆಗಳ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಹೇಳಿದರು. ಈ ಕುರಿತು ಮುಂದಿನ ಸುತ್ತಿನ ಸಭೆ ನಡೆಯಲಿದೆ ಎಂದು ತಿಳಿಸಿದರು.

ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಮಾತನಾಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಶೀಘ್ರದಲ್ಲೇ ಅವರನ್ನು ಸಂಪುಟದಿಂದ ತೆಗೆದುಹಾಕಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಅಲ್ಲದೆ, ನೀಟ್ ಪರೀಕ್ಷೆಯಲ್ಲಿ ಅಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳು ಮತ್ತು ಕಾನೂನು ಪ್ರಕರಣಗಳನ್ನು ಹಿಂಪಡೆಯುವ ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಅವರು ತಿಳಿಸಿದರು.

ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲ ಪಿತ್ರಾರ್ಜಿತವಲ್ಲ: ಮಕ್ಕಳ ಜನ್ಮಸಿದ್ಧ ಹಕ್ಕಿನ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ತಾತನಿಂದ ತಂದೆಗೆ ಬಂದ ಎಲ್ಲ ಆಸ್ತಿಗಳಿಗೂ ಮಕ್ಕಳು ಜನ್ಮಸಿದ್ಧ ಹಕ್ಕು ಹೊಂದಿರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆಸ್ತಿಯ ಮೂಲ, ಅದು ಹೇಗೆ ಸಂಪಾದನೆಯಾಯಿತು ಹಾಗೂ ಅದರ ಕಾನೂನು ಸ್ವರೂಪದ ಆಧಾರದ ಮೇಲೆಯೇ ಅದು ಪಿತ್ರಾರ್ಜಿತ ಆಸ್ತಿಯೇ ಅಥವಾ ಸ್ವಯಾರ್ಜಿತ ಆಸ್ತಿಯೇ ಎಂಬುದನ್ನು ನಿರ್ಧರಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಹೈಕೋರ್ಟ್ ಅಭಿಪ್ರಾಯದ ಪ್ರಕಾರ, ಹಿಂದೂ ಅವಿಭಕ್ತ ಕುಟುಂಬದ ಕೌಟುಂಬಿಕ ಆಸ್ತಿಯಾಗಿ ತಲೆಮಾರುಗಳಿಂದ ಮುಂದುವರಿದಿರುವ ಹಾಗೂ ಜಂಟಿ ಸ್ವರೂಪವನ್ನು ಉಳಿಸಿಕೊಂಡಿರುವ ಆಸ್ತಿಯನ್ನೇ ಸಾಮಾನ್ಯವಾಗಿ ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸಲಾಗುತ್ತದೆ. ಇಂತಹ ಆಸ್ತಿಯಲ್ಲಿ ಮಕ್ಕಳಿಗೆ ಹುಟ್ಟಿನಿಂದಲೇ ಹಕ್ಕು ಇರುತ್ತದೆ.

ಆದರೆ, ತಾತ ತಮ್ಮ ಸ್ವಂತ ಆದಾಯ, ದುಡಿಮೆ ಅಥವಾ ಖರೀದಿಯ ಮೂಲಕ ಸಂಪಾದಿಸಿದ ಸ್ವಯಾರ್ಜಿತ ಆಸ್ತಿಯನ್ನು ನಂತರ ತಂದೆ ಪಡೆದಿದ್ದರೂ, ಅದು ಸ್ವಯಂಚಾಲಿತವಾಗಿ ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ವ್ಯಕ್ತಿಯೊಬ್ಬರು ತಮ್ಮ ಆದಾಯ, ಖರೀದಿ, ಉಡುಗೊರೆ, ಉಯಿಲು ಅಥವಾ ವೈಯಕ್ತಿಕ ಪ್ರಯತ್ನದ ಮೂಲಕ ಗಳಿಸಿದ ಆಸ್ತಿಯನ್ನು ಸ್ವಯಾರ್ಜಿತ ಆಸ್ತಿ ಎಂದು ಕರೆಯಲಾಗುತ್ತದೆ. ಇಂತಹ ಆಸ್ತಿಯ ಮೇಲೆ ಸಂಪೂರ್ಣ ಹಕ್ಕು ಆ ಮಾಲೀಕರಿಗೇ ಇರುತ್ತದೆ. ಅದನ್ನು ಯಾರಿಗೆ ವರ್ಗಾಯಿಸಬೇಕು ಅಥವಾ ಉಯಿಲು ಮಾಡಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರವೂ ಅವರಿಗೆ ಇರುತ್ತದೆ.

ಸ್ವಯಾರ್ಜಿತ ಆಸ್ತಿಯನ್ನು ಮಾಲೀಕರು ಸ್ವಯಂಪ್ರೇರಣೆಯಿಂದ ಹಿಂದೂ ಅವಿಭಕ್ತ ಕುಟುಂಬದ ಆಸ್ತಿಯಾಗಿ ಸೇರಿಸಿದರೆ ಅಥವಾ ಅದು ಕುಟುಂಬದ ಸಾಮೂಹಿಕ ಆಸ್ತಿಯ ಸ್ವರೂಪ ಪಡೆದುಕೊಂಡರೆ ಮಾತ್ರ ಅದರ ಕಾನೂನು ಸ್ವರೂಪ ಬದಲಾಗಬಹುದು. ಕೇವಲ ತಲೆಮಾರಿನಿಂದ ತಲೆಮಾರಿಗೆ ವರ್ಗಾವಣೆಯಾದ ಕಾರಣಕ್ಕೆ ಮಾತ್ರ ಅದು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ತಂದೆಯ ಸ್ವಯಾರ್ಜಿತ ಆಸ್ತಿಯಲ್ಲಿ ಮಕ್ಕಳ ಹಕ್ಕು ಏನು?

ತಂದೆ ಜೀವಂತವಾಗಿರುವವರೆಗೆ ಅವರ ಸ್ವಯಾರ್ಜಿತ ಆಸ್ತಿಯಲ್ಲಿ ಮಕ್ಕಳಿಗೆ ಜನ್ಮಸಿದ್ಧ ಹಕ್ಕು ಇರುವುದಿಲ್ಲ. ಆದರೆ ತಂದೆ ಉಯಿಲು ಮಾಡದೆ ಮೃತಪಟ್ಟರೆ, ಕಾನೂನುಬದ್ಧ ಉತ್ತರಾಧಿಕಾರಿಗಳಾಗಿ ಮಕ್ಕಳು ಆಸ್ತಿಯಲ್ಲಿ ಪಾಲು ಪಡೆಯಬಹುದು. ತಂದೆ ಉಯಿಲಿನ ಮೂಲಕ ಮಕ್ಕಳಿಗೆ ಪಾಲು ನೀಡಿದ್ದರೂ ಅವರಿಗೆ ಹಕ್ಕು ಸಿಗುತ್ತದೆ.

ಇನ್ನು 2005ರ ಹಿಂದೂ ಉತ್ತರಾಧಿಕಾರ (ತಿದ್ದುಪಡಿ) ಕಾಯ್ದೆಯ ಪ್ರಕಾರ, ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರಿಯರಿಗೂ ಪುತ್ರರಷ್ಟೇ ಸಮಾನ ಹಕ್ಕು ಇದೆ. ಆದರೆ ಈ ಕಾಯ್ದೆಯ ಪ್ರಕಾರವೂ ಸ್ವಯಾರ್ಜಿತ ಆಸ್ತಿ ಸ್ವತಃ ಪಿತ್ರಾರ್ಜಿತ ಆಸ್ತಿಯಾಗಿ ಪರಿವರ್ತನೆಯಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಅಮೆರಿಕದಲ್ಲಿ ನೆಲೆಸಿರುವ ಕರ್ನಾಟಕದ ಮಹಿಳೆ ಉಷಾ ಎನ್. ಸ್ವಾಮಿ ಅವರು ತಮ್ಮ ತಾತನ ಆಸ್ತಿಯಲ್ಲಿ ಸಮಾನ ಪಾಲು ನೀಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತಾತನ ನಿಧನದ ಬಳಿಕ ಆಸ್ತಿ ತಂದೆಗೆ ಬಂದಿರುವುದರಿಂದ ಅದು ಪಿತ್ರಾರ್ಜಿತ ಆಸ್ತಿಯಾಗಿದೆ ಮತ್ತು ತಮ್ಮಿಗೂ ಜನ್ಮಸಿದ್ಧ ಹಕ್ಕು ಇದೆ ಎಂದು ಅವರು ವಾದಿಸಿದ್ದರು.

ಆದರೆ, ಆ ಆಸ್ತಿ ಮೂಲತಃ ತಾತನ ಸ್ವಯಾರ್ಜಿತ ಆಸ್ತಿಯಾಗಿದ್ದು, ನಂತರ ತಂದೆಗೆ ಅವರ ಪ್ರತ್ಯೇಕ ಆಸ್ತಿಯಾಗಿ ಬಂದಿರುವುದರಿಂದ ಅದು ಪಿತ್ರಾರ್ಜಿತ ಆಸ್ತಿಯಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಮಹಿಳೆ ಸಲ್ಲಿಸಿದ್ದ ಪಾಲು ಕೋರಿ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಆಸ್ತಿಯ ಸ್ವರೂಪವನ್ನು ನಿರ್ಧರಿಸುವಲ್ಲಿ ಅದರ ಮೂಲ ಮತ್ತು ಕಾನೂನು ಹಿನ್ನೆಲೆಯೇ ಮುಖ್ಯ ಎಂಬುದನ್ನು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

ವಿಶ್ವಕಪ್ ಫೈನಲ್ ಸೋಲಿನ ಬೆನ್ನಲ್ಲೇ ಅರ್ಜೆಂಟೀನಾಗೆ ಮತ್ತೊಂದು ಶಾಕ್: ದಿಗ್ಗಜ ಡಿಫೆಂಡರ್ ನಿಕೋಲಸ್ ಒಟಮೆಂಡಿ ನಿವೃತ್ತಿ ಘೋಷಣೆ

0

ಬ್ಯೂನಸ್ ಐರಿಸ್: 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸೋಲು ಕಂಡ ನೋವಿನಲ್ಲಿರುವ ಅರ್ಜೆಂಟೀನಾ ಫುಟ್ಬಾಲ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಂಡದ ಅನುಭವಿ ಡಿಫೆಂಡರ್ ಹಾಗೂ ದಿಗ್ಗಜ ಆಟಗಾರ ನಿಕೋಲಸ್ ಒಟಮೆಂಡಿ ಅಂತಾರಾಷ್ಟ್ರೀಯ ಫುಟ್ಬಾಲ್‌ಗೆ ನಿವೃತ್ತಿ ಘೋಷಿಸಿದ್ದಾರೆ.

38 ವರ್ಷದ ಒಟಮೆಂಡಿ, ಸ್ಪೇನ್ ವಿರುದ್ಧ ನಡೆದ ಫಿಫಾ ವಿಶ್ವಕಪ್ ಫೈನಲ್‌ವೇ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು ಎಂದು ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇದರೊಂದಿಗೆ ಸುಮಾರು 17 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ಅವರು ತೆರೆ ಎಳೆದಿದ್ದಾರೆ.

ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿರುವ ಒಟಮೆಂಡಿ, “ನನ್ನ ವೃತ್ತಿಜೀವನದ ಅತ್ಯಂತ ಕಠಿಣ ಪದಗಳನ್ನು ಬರೆಯುವ ಸಮಯ ಬಂದಿದೆ. ವಿಶ್ವಕಪ್ ಫೈನಲ್ ನನ್ನ ಕೊನೆಯ ಪಂದ್ಯವಾಗಿತ್ತು. ಫಲಿತಾಂಶ ನಮ್ಮ ನಿರೀಕ್ಷೆಯಂತೆ ಬರದಿದ್ದರೂ, ಕೊನೆಯ ಕ್ಷಣದವರೆಗೂ ಹೋರಾಡಿದ ಈ ತಂಡದ ಭಾಗವಾಗಿರುವ ಹೆಮ್ಮೆ ನನಗಿದೆ. ವಿಶ್ವ ಚಾಂಪಿಯನ್ ಆಗುವ ಕನಸನ್ನು ನನಸಾಗಿಸಲು ಅವಕಾಶ ನೀಡಿದ ಅರ್ಜೆಂಟೀನಾಗೆ ಹೃತ್ಪೂರ್ವಕ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಒಟಮೆಂಡಿ ಅರ್ಜೆಂಟೀನಾ ಪರ ಸುಮಾರು 17 ವರ್ಷಗಳ ಕಾಲ ಪ್ರಮುಖ ಡಿಫೆಂಡರ್ ಆಗಿ ಸೇವೆ ಸಲ್ಲಿಸಿದ್ದಾರೆ. 2022ರ ಫಿಫಾ ವಿಶ್ವಕಪ್ ಹಾಗೂ ಎರಡು ಕೋಪಾ ಅಮೆರಿಕಾ ಪ್ರಶಸ್ತಿಗಳನ್ನು ಗೆದ್ದ ತಂಡದ ಪ್ರಮುಖ ಸದಸ್ಯರಾಗಿದ್ದರು.

ಅವರು ಅರ್ಜೆಂಟೀನಾ ಪರ ಒಟ್ಟು 139 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದು, 2026ರ ಆವೃತ್ತಿ ಸೇರಿದಂತೆ ನಾಲ್ಕು ಫಿಫಾ ವಿಶ್ವಕಪ್‌ಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಸ್ಥಿರ ಪ್ರದರ್ಶನ, ನಾಯಕತ್ವದ ಗುಣ ಹಾಗೂ ಮಹತ್ವದ ಪಂದ್ಯಗಳಲ್ಲಿ ನೀಡಿದ ಕೊಡುಗೆಯಿಂದ ಅವರು ಅರ್ಜೆಂಟೀನಾದ ಶ್ರೇಷ್ಠ ಡಿಫೆಂಡರ್‌ಗಳಲ್ಲಿ ಒಬ್ಬರೆಂದು ಗುರುತಿಸಿಕೊಂಡಿದ್ದಾರೆ.

ಅಮೆರಿಕದಲ್ಲಿ ನಡೆದ 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಅರ್ಜೆಂಟೀನಾ, ಸ್ಪೇನ್ ವಿರುದ್ಧ 1-0 ಗೋಲುಗಳ ಅಂತರದಲ್ಲಿ ಸೋಲು ಅನುಭವಿಸಿತು. ಹೆಚ್ಚುವರಿ ಸಮಯದವರೆಗೆ ಸಾಗಿದ ರೋಚಕ ಹಣಾಹಣಿಯಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ಪ್ರಶಸ್ತಿ ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ಇದರೊಂದಿಗೆ ಒಟಮೆಂಡಿ ಮತ್ತೊಮ್ಮೆ ವಿಶ್ವಕಪ್ ಟ್ರೋಫಿ ಎತ್ತುವ ಕನಸೂ ಭಗ್ನಗೊಂಡಿತು.

ತಮ್ಮ ಕ್ಲಬ್ ವೃತ್ತಿಜೀವನದಲ್ಲಿ ಒಟಮೆಂಡಿ ಪೋರ್ಟೊ, ವೇಲೆನ್ಸಿಯಾ, ಮ್ಯಾಂಚೆಸ್ಟರ್ ಸಿಟಿ ಹಾಗೂ ಬೆನ್ಫಿಕಾ ಸೇರಿದಂತೆ ಯುರೋಪಿನ ಪ್ರಮುಖ ಕ್ಲಬ್‌ಗಳನ್ನು ಪ್ರತಿನಿಧಿಸಿದ್ದಾರೆ. ಇತ್ತೀಚೆಗೆ ಯುರೋಪಿಯನ್ ಫುಟ್ಬಾಲ್‌ಗೆ ವಿದಾಯ ಹೇಳಿ ತಮ್ಮ ತವರಿನ ಕ್ಲಬ್ ರಿವರ್ ಪ್ಲೇಟ್‌ಗೆ ಸೇರ್ಪಡೆಯಾಗಿದ್ದರು.

ಲಿಯೋನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡ 2026ರ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ನಾಕೌಟ್ ಹಂತ ಪ್ರವೇಶಿಸಿದ್ದ ತಂಡ, ಕ್ವಾರ್ಟರ್‌ಫೈನಲ್‌ನಲ್ಲಿ ಈಜಿಪ್ಟ್ ವಿರುದ್ಧ ಹಿನ್ನಡೆಯಿಂದ ಚೇತರಿಸಿಕೊಂಡು ಗೆಲುವು ದಾಖಲಿಸಿತ್ತು.

ಬಳಿಕ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತ್ತು. ಆದರೆ ಪ್ರಶಸ್ತಿ ಸುತ್ತಿನಲ್ಲಿ ಸ್ಪೇನ್ ವಿರುದ್ಧ ಸೋಲುವ ಮೂಲಕ ವಿಶ್ವಕಪ್ ಅಭಿಯಾನ ಅಂತ್ಯಗೊಂಡಿತು.

ನಿಕೋಲಸ್ ಒಟಮೆಂಡಿ ಅವರ ನಿವೃತ್ತಿಯೊಂದಿಗೆ ಅರ್ಜೆಂಟೀನಾ ಫುಟ್ಬಾಲ್ ತನ್ನ ಅತ್ಯಂತ ಅನುಭವಿ ಮತ್ತು ಯಶಸ್ವಿ ಡಿಫೆಂಡರ್‌ಗಳಲ್ಲಿ ಒಬ್ಬರನ್ನು ಕಳೆದುಕೊಂಡಿದೆ.

ಪ್ರಧಾನಿ ಮೋದಿ ತಡವಾಗಿ ಎಚ್ಚೆತ್ತರೂ ಶಿಕ್ಷಣ ಸುಧಾರಣೆಗೆ ಮುಂದಾಗಿರುವುದು ಆಶಾದಾಯಕ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಕುರಿತು ಚರ್ಚೆ ಆರಂಭಿಸಿರುವುದು ಆಶಾದಾಯಕ ಬೆಳವಣಿಗೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಟೆಕ್ ಸಮ್ಮಿಟ್‌ನ ಸಿಇಒಗಳ ಉಪಹಾರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಿಂಗಳಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆಯ ಬಗ್ಗೆ ಚರ್ಚೆಗೆ ಮುಂದಾಗಿರುವುದು ಸ್ವಾಗತಾರ್ಹ. ಈಗ ಇಡೀ ದೇಶವೇ ಎಚ್ಚೆತ್ತುಕೊಂಡಿದೆ. ವಿದ್ಯಾರ್ಥಿಗಳು ಮತ್ತು ಯುವಜನರ ಭವಿಷ್ಯವನ್ನು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಹೇಳಿದರು.

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣ ಕ್ಷೇತ್ರದ ಕುರಿತು ಚರ್ಚೆ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಾವೆಲ್ಲರೂ ದೇಶದ ವಿದ್ಯಾರ್ಥಿ ಮತ್ತು ಯುವಜನರ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸ ಮೂಡಿಸುವ ಕ್ರಮಗಳು ಅತ್ಯಗತ್ಯ” ಎಂದು ಅಭಿಪ್ರಾಯಪಟ್ಟರು.

ಎಲ್ಲರೊಂದಿಗೆ ಮಾತುಕತೆಗೆ ಸಿದ್ಧ

ತಮಿಳುನಾಡು ಮುಖ್ಯಮಂತ್ರಿ ಬರೆದಿರುವ ಪತ್ರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ಈ ವಿಚಾರವನ್ನು ಈಗ ಬಹಿರಂಗಪಡಿಸಲು ಬಯಸುವುದಿಲ್ಲ. ಈ ವಾರ ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ಕೆಲಸಗಳಲ್ಲಿ ನಿರತರಾಗಿದ್ದೇವೆ. ಕೆಲವು ವಿಷಯಗಳಲ್ಲಿ ಎಲ್ಲರೊಂದಿಗೆ ಮಾತನಾಡಲು, ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಒಟ್ಟಾಗಿ ಕೆಲಸ ಮಾಡಲು ನಾವು ಸಿದ್ಧರಾಗಿದ್ದೇವೆ” ಎಂದು ತಿಳಿಸಿದರು.