ಬೆಂಗಳೂರು: ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ಡಿ.ಕೆ. ಶಿವಕುಮಾರ್ ಅವರು ಉತ್ತಮ ನಿರ್ಧಾರ ಕೈಗೊಂಡರು ಎಂದು ಹೇಳುತ್ತಾರೆ.
ನನಗೆ ಅಷ್ಟೇ ಸಾಕು. ಈಗ ನಾನು ಬೇರೆಯವರಿಗೆ ಒಪ್ಪಿಸಲು ಆಗದೇ ಇರಬಹು, ಆದರೆ ಸಮಯ ಬಂದಾಗ ಅವರು ಒಪ್ಪುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು.
ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಚಾರವಾಗಿ ನಡೆದ ಚರ್ಚೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.
“ಜಿಬಿಎ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಅನೇಕ ಚರ್ಚೆ ನಡೆಸಿದ್ದಾರೆ. ಅರ್.ಅಶೋಕ್ ಅವರು ಅಶ್ವಥ್ ನಾರಾಯಣ್ ಅವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಇವರ ಸಲಹೆಗಳನ್ನು ನಾನು ಒಪ್ಪುತ್ತೇನೆ. ಜೊತೆಗೆ ಟೀಕೆಯನ್ನೂ ಸಹ ಮಾಡಿದ್ದಾರೆ.
ನಾನು ಟೀಕೆಯನ್ನು ಯಾವಾಗಲೂ ಸ್ವೀಕಾರ ಮಾಡುವವನು. ಟೀಕೆ ಇಲ್ಲದೇ ಹೋದರೆ ಯಾವುದೇ ಮನುಷ್ಯನನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಚಿನ್ನ ಪರೀಕ್ಷೆ ಮಾಡುವಾಗ ಬೆಂಕಿಗೆ ಹಾಕುತ್ತಾರೆ. ಮನುಷ್ಯನನ್ನು ಪರೀಕ್ಷೆ ಮಾಡುವಾಗ ಟೀಕೆಗಳು, ಆಪಾದನೆ ಮಾಡುತ್ತಾರೆ. ಇದನ್ನು ನಾವು ಯಾವ ರೀತಿ ತಿದ್ದಿಕೊಳ್ಳಬೇಕು ಎಂಬುದು ಇಲ್ಲಿ ಮುಖ್ಯವಾದುದು. ಟೀಕೆ ಮಾಡಿದರು ಎಂದ ತಕ್ಷಣ ನಾನು ಸಿಟ್ಟು ಮಾಡಿಕೊಳ್ಳುವುದು ಮಾಡುವುದಿಲ್ಲ” ಎಂದರು.
ಈ ಸದನದಲ್ಲಿ ಈ ಹಿಂದೆ ಇದ್ದ ನಾಯಕರಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಲಕ್ಕಪ್ಪ, ಮೇಲ್ಮನೆಯಲ್ಲಿ ನಾಣಯ್ಯ, ಎಕೆ ಸುಬ್ಬಯ್ಯ, ಎಂ.ಸಿ ನಾಣಯ್ಯ ಸೇರಿದಂತೆ ಅನೇಕರು ಚೆನ್ನಾಗಿ ಚರ್ಚೆ ಮಾಡುತ್ತಿದ್ದರು. ಆಗಿನ ಚರ್ಚೆಸಕಾರಾತ್ಮಕವಾಗಿ ನಡೆಯುತ್ತಿತ್ತು. ಚರ್ಚೆ ಈಗ ನಕರಾತ್ಮಕವಾಗಿ ಹೋಗುತ್ತಿದೆ.
Positive thinkers always have a solution for every problem. Negative thinker always have problem for every solution. ಧನಾತ್ಮಕ ಎಂಬುದು ಯಾವಾಗಲೂ ಇರಬೇಕು. ಆಸಕ್ತಿ ಪಟ್ಟು ಬೆಂಗಳೂರು ಅಭಿವೃದ್ದಿ ಖಾತೆಯನ್ನು ವಹಿಸಿಕೊಂಡಿದ್ದೇನೆ. ನಾನು ಈ ಹಿಂದೆ ನಗರಾಭಿವೃದ್ದಿ ಸಚಿವನಾಗಿದ್ದೆ, ಇಂಧನ ಸಚಿವನಾಗಿದ್ದೆ, ನನಗೆ ಈಗ ಸಾಕಷ್ಟು ಅನುಭವ ಹೊಂದಿದ್ದು ಬೆಂಗಳೂರಿನಲ್ಲೂ ಬದಲಾವಣೆ ಮಾಡಬೇಕು ಎಂದು ಹೊರಟಿದ್ದೇನೆ. ಆದರೂ ಒಂದಷ್ಟು ಜನ ತಪ್ಪು ಕಂಡುಹಿಡಿದರು. ಇದು ವಿರೋಧ ಪಕ್ಷದ ಕರ್ತವ್ಯವೂ ಹೌದು” ಎಂದರು.
“ಕುಮಾರಸ್ವಾಮಿ ಅವರಿಗೆ ಇದೇ ಸದನದಲ್ಲಿ ಒಮ್ಮೆ ಡಿವಿಜಿ ಅವರ ಸಾಲುಗಳನ್ನು ಹೇಳಿದ್ದೆ. ಎದ್ದೆದ್ದು ಬೀಳುತಿಹೆ ಗುದ್ದಾಡಿ ಸೋಲುತಿಹೆ ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ, ಜಗವನ್ನು ಉದ್ದರಿಸುವೆ ಎನುತಿಹೆ ಸಖನೇ ನಿನ್ನ ಉದ್ದಾರ ಎಷ್ಟಾಯಿತೋ ಮಂಕುತಿಮ್ಮ ಎನ್ನುವ ಮಾತು ವಿರೋಧ ಪಕ್ಷದ ನಾಯಕರ ಮಾತು ಕೇಳಿ ನೆನಪಿಗೆ ಬಂತು.
ನಾನು ಬೆಂಗಳೂರು ಅಭಿವೃದ್ಧಿ ಇಲಾಖೆ ಜವಾಬ್ದಾರಿ ಹೊತ್ತುಕೊಂಡ ಮೇಲೆ ಸಾಕಷ್ಟು ಅಧ್ಯಯನ ನಡೆಸಿದ್ದೇನೆ. ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೇನೆ. ಆಗ 70 ಲಕ್ಷ ಇದ್ದ ಜನಸಂಖ್ಯೆ ಈಗ 1.40 ಕೋಟಿ ಆಗಿದೆ. 1.30 ಲಕ್ಷ ವಾಹನಗಳಿವೆ. ಬೇರೆ ನಗರಗಳಲ್ಲಿ ದೊಡ್ಡ ರಸ್ತೆಗಳು ಶೇ.16 ರಷ್ಟಿವೆ. ನಮ್ಮಲ್ಲಿ ಶೇ. 8 ರಷ್ಟು ಮಾತ್ರ ಇದೆ. ಈ ಹಿಂದೆ ನೈಸ್ ರಸ್ತೆ ಮಾಡಿದರೂ ಪೂರ್ಣಗೊಳಿಸಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆ ಅಂದು ಮಾಡಿದ್ದರೆ 3 ಸಾವಿರ ಕೋಟಿಗೆ ಮುಗಿದು ಹೋಗುತ್ತಾ ಇತ್ತು. ಈ ಎಲ್ಲಾ ಕಾರಣಗಳಿಂದ ಸಂಚಾರ ದಟ್ಟಣೆ ಉಂಟಾಗಿದೆ” ಎಂದರು.
“ಬೆಂಗಳೂರು ನಗರದ ಆಡಳಿತ ಸುಧಾರಣೆಗಾಗಿ 2025 ಮೇ 15 ರಂದು ಹೊಸ ನೋಟಿಫಿಕೇಶನ್ ಮಾಡಿ ಪ್ರಸ್ತುತ ಇರುವ ಪ್ರದೇಶಗಳನ್ನು ಸೇರಿ ಐದು ಪಾಲಿಕೆಗಳನ್ನು ಮಾಡಲಾಯಿತು. ಸೆಪ್ಟೆಂಬರ್ 2 ರಂದು 74 ನೇ ತಿದ್ದುಪಡಿ ತರಬೇಕು ಎಂದು ಹೊರಡಲಾಯಿತು. ಏಕಾಏಕಿ ತೀರ್ಮಾನ ಮಾಡಲಿಲ್ಲ. ವಿರೋಧ ಪಕ್ಷದ ನಾಯಕರ ಮಾತಿನಂತೆ ಸದನ ಸಮತಿ ರಚನೆ ಮಾಡಿ ಅವರು ನೀಡಿದ ಸಲಹೆಗಳನ್ನು ತೆಗೆದುಕೊಳ್ಳಲಾಯಿತು.
ಇದರಲ್ಲಿ ತಪ್ಪುಗಳಿದ್ದರೆ ಅದನ್ನೂ ಸಹ ತಿದ್ದುಪಡಿ ಮಾಡಲಾಗುವುದು. ಈಗ 369 ವಾರ್ಡ್ ಗಳನ್ನು ಮಾಡಲಾಗಿದೆ. ಬೆಂಗಳೂರನ್ನು ಯಾವುದೇ ಕಾರಣಕ್ಕೂ ಒಡೆಯುತ್ತಿಲ್ಲ. ಇದು ಆಡಳಿತದ ವಿಕೇಂದ್ರಿಕರಣ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಅದಕ್ಕೆ ಸರ್ಕಾರ ಸಹಾಯ ಬೇಕುತ್ತದೆ ಅದಕ್ಕೆ ಜಿಬಿಎಗೆ ಮುಖ್ಯಮಂತ್ರಿಯವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಬೆಂಗಳೂರಿಗೆ ಪ್ಲಾನಿಂಗ್ ಅಥಾರಿಟಿ ಇರಲಿಲ್ಲ ಅದನ್ನು ಸಹ ಬಗೆಹರಿಸಲಾಗಿದೆ. ಜಿಬಿಎ ಇದರ ಬಗ್ಗೆ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು.
“ಬೆಂಗಳೂರಿನ ಅಭಿವೃದ್ಧಿಗೆ 2008 ಬಿಜೆಪಿ ಸರ್ಕಾರ ಐದು ವರ್ಷಕ್ಕೆ 1960 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ 7 ಸಾವಿರ ಕೋಟಿ ನೀಡಿತ್ತು, ಬಿಜೆಪಿ 12 ಸಾವಿರ ಕೋಟಿಗೆ ಏರಿಕೆ ಮಾಡಿತ್ತು. ಹೀಗೆ ಹಂತ ಹಂತವಾಗಿ ನಾವು 3 ಸಾವಿರ ಕೋಟಿ, 2025 ರಲ್ಲಿ 7 ಸಾವಿರ ಕೋಟಿ ಹಾಗೂ ಮುಖ್ಯಮಂತ್ರಿಯವರ ಅನುದಾನದಲ್ಲಿ ಮತ್ತೆ 1,500 ಕೋಟಿ ನೀಡಿದ್ದಾರೆ. ಈ ವರ್ಷ 7 ಸಾವಿರ ಕೋಟಿ ನೀಡಲಾಗಿದೆ.
ಹೀಗೆ ಕಾಲಕ್ಕೆ ತಕ್ಕಂತೆ ಅನುದಾನ ಜಾಸ್ತಿಯಾಗುತ್ತಾ ಹೋಗಿದೆ. ಬಿಜೆಪಿ 2020 ರಲ್ಲಿ ಬಿಜೆಪಿ ಸರ್ಕಾರ ಮಾಡಿದ ತೆರಿಗೆ ಕಾನೂನನ್ನು ಬದಲಾವಣೆ ಮಾಡಿಲ್ಲ. ನಾವು ಜನರಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದ್ದೇವೆ. ಒಟಿಎಸ್, ಕಡಿಮೆ ದಂಡ ಸೇರಿದಂತೆ ಅನೇಕ ಅವಕಾಶ ಕೊಡಲಾಗಿದೆ. ಒಟಿಎಸ್ ಜಾರಿ ಮಾಡಿದ ಕಾರಣಕ್ಕೆ 1277 ಕೋಟಿ ಹೆಚ್ಚುವರಿ ಆದಾಯ ಬಂದಿದೆ” ಎಂದು ತಿಳಿಸಿದರು.
“ಮೋದಿಯವರು ಏಕೆ ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದು ಕರೆದರು. ಭವಿಷ್ಯದ ಎಲ್ಲಾ ಸವಾಲುಗಳಿಗೆ ಬೆಂಗಳೂರನ್ನು ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಮೂಲಕ ಭಾರತವನ್ನು ನೋಡಲಾಗುತ್ತದೆ ಎಂದು ಹೇಳಿದ್ದರು. ಜಾಗತಿಕ ನಾಯಕರು ಮೊದಲು ದೆಹಲಿಗೆ ಬರುತ್ತಿದ್ದರು ಈಗ ಸಮಯ ಬದಲಾಗಿದೆ ಮೊದಲು ಬೆಂಗಳೂರಿಗೆ ಬರುತ್ತಾರೆ ಎಂದಿದ್ದರು. ಇದು ಕೇವಲ ನಮ್ಮಿಂದ ಮಾತ್ರವಲ್ಲ, ಪ್ರತಿಭಾವಂತ ಯುವಕರು, ನಾಗರೀಕರು ಎಲ್ಲಾ ಸರ್ಕಾರಗಳಿಂದ ಸಾಧ್ಯವಾಗಿದೆ” ಎಂದು ತಿಳಿಸಿದರು.