Home Blog

ವಚನಾನಂದ ಸ್ವಾಮಿ ಪೋಕ್ಸೋ ಪ್ರಕರಣ: ಇಂದು ಕೋರ್ಟ್ ನಲ್ಲಿ ಮಹತ್ವದ ವಿಚಾರಣೆ, ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಗೆ ಮಂಜೂರಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸುವಂತೆ ಕೋರಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಲ್ಲಿ ನಡೆಯಲಿದೆ. ಈ ವಿಚಾರಣೆಯ ಫಲಿತಾಂಶದ ಮೇಲೆ ಪ್ರಕರಣದ ಮುಂದಿನ ಬೆಳವಣಿಗೆಗಳು ನಿರ್ಧಾರವಾಗುವ ಸಾಧ್ಯತೆ ಇದೆ.

ವಚನಾನಂದ ಸ್ವಾಮಿಗೆ ನೀಡಲಾಗಿರುವ ಜಾಮೀನು ರದ್ದುಪಡಿಸುವಂತೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಮೇ 13ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ಮೇ 29ರಂದು ನಡೆಯಬೇಕಾಗಿದ್ದರೂ, ಕೆಲವು ಕಾರಣಗಳಿಂದ ಅದನ್ನು ಜೂನ್ 3ಕ್ಕೆ ಮುಂದೂಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಗ್ರಾಮಾಂತರ ಠಾಣೆಯ ಸಿಪಿಐ ಸುರೇಶ್ ಸಗರಿ ಅವರು ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ವಚನಾನಂದ ಸ್ವಾಮಿ ಪರ ವಕೀಲ ಎಸ್.ವಿ. ಪಾಟೀಲ್ ತಕರಾರು ಅರ್ಜಿ ಸಲ್ಲಿಸಿ ತಮ್ಮ ವಾದ ಮಂಡಿಸಿದ್ದಾರೆ.

ಇಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯ ಜಾಮೀನು ರದ್ದುಪಡಿಸುವ ತೀರ್ಮಾನ ಕೈಗೊಂಡರೆ, ವಚನಾನಂದ ಸ್ವಾಮಿಯ ಬಂಧನದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಅವರು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ತೆರಳಿರುವುದಾಗಿ ತಿಳಿದುಬಂದಿದ್ದು, ಜಾಮೀನು ರದ್ದಾದರೆ ಅಲ್ಲಿಯೇ ಬಂಧಿಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ಹೇಳಿವೆ.

ಪ್ರಕರಣದ ಹಿನ್ನೆಲೆ

ವಚನಾನಂದ ಸ್ವಾಮಿ ವಿರುದ್ಧ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ನಂತರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಬಾಲಕನ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬ ಆರೋಪವನ್ನು ಸ್ವಾಮಿಯ ವಿರುದ್ಧ ಮಾಡಲಾಗಿದೆ.

ಮಠದಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಹರಿಹರದ ಪಂಚಮಸಾಲಿ ಪೀಠದ ಟ್ರಸ್ಟಿಗಳು ಮತ್ತು ವಚನಾನಂದ ಸ್ವಾಮಿ ನಡುವಿನ ವಿವಾದದ ಹಿನ್ನೆಲೆಯಲ್ಲಿ ಮಠದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಮುಂದುವರಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (ಬಿಎನ್ಎಸ್) ಕಲಂ 163ರಡಿ ಜೂನ್ 1ರಿಂದ ಜೂನ್ 15ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಆದೇಶಿಸಿದ್ದಾರೆ. ಮಠದ ಆವರಣದಲ್ಲಿ ಧಾರ್ಮಿಕ ಪೂಜೆಗಳನ್ನು ಹೊರತುಪಡಿಸಿ ಸಭೆ, ಸಮಾರಂಭ, ಪತ್ರಿಕಾಗೋಷ್ಠಿ ಸೇರಿದಂತೆ ಯಾವುದೇ ಸಾರ್ವಜನಿಕ ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.

‘ಇಬ್ಬರು ಹುಡುಗಿಯರು ಸ್ನೇಹಿತರಾಗಿರಬಾರದೇ?’ ವೈರಲ್ ಗಾಸಿಪ್‌ಗೆ ಕೃತಿ ಸನನ್ ತಿರುಗೇಟು

ಮುಂಬೈ: ‘ಕಾಕ್‌ಟೇಲ್ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್ ಸಲಿಂಗಪ್ರೇಮಿ ಜೋಡಿಯಾಗಿ ನಟಿಸುತ್ತಿದ್ದಾರೆ ಎಂಬ ವದಂತಿ ಹರಿದಾಡುತ್ತಿದ್ದ ಬೆನ್ನಲ್ಲೇ ನಟಿ ಕೃತಿ ಸನನ್ ಸಮಾಜದ ಮನೋಭಾವದ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೃತಿ, “ಇಬ್ಬರು ಹುಡುಗರು ಆತ್ಮೀಯವಾಗಿದ್ದರೆ ಅದನ್ನು ಬ್ರೋಮ್ಯಾನ್ಸ್ ಎಂದು ಕರೆಯುತ್ತಾರೆ. ಆದರೆ ಇಬ್ಬರು ಹುಡುಗಿಯರು ಆಪ್ತರಾಗಿದ್ದರೆ ಅವರು ಕೇವಲ ಸ್ನೇಹಿತರಾಗಿರಲು ಸಾಧ್ಯವಿಲ್ಲ ಎಂದು ಯಾಕೆ ಅಂದುಕೊಳ್ಳುತ್ತಾರೆ?” ಎಂದು ಪ್ರಶ್ನಿಸಿದರು.

ಈ ವೇಳೆ ರಶ್ಮಿಕಾ ಮತ್ತು ಕೃತಿ ತಮ್ಮ ಸ್ನೇಹದ ಬಗ್ಗೆ ಮಾತನಾಡಿದ್ದು, ಜಿಮ್‌ನಲ್ಲಿ ಆರಂಭವಾದ ಸ್ನೇಹ ಶೂಟಿಂಗ್ ವೇಳೆಯಲ್ಲೂ ಮುಂದುವರಿದಿತ್ತು ಎಂದು ತಿಳಿಸಿದರು. ಇದಕ್ಕೆ ಹಾಸ್ಯವಾಗಿ ಪ್ರತಿಕ್ರಿಯಿಸಿದ ಶಾಹಿದ್ ಕಪೂರ್, “ನಿಮ್ಮಿಬ್ಬರ ನಡುವಿನ ನ್ಯಾಚುರಲ್ ಕೆಮಿಸ್ಟ್ರಿಯೇ ಈ ವದಂತಿಗೆ ಕಾರಣವಾಗಿರಬಹುದು” ಎಂದರು.

ಬಳಿಕ ನಿರ್ದೇಶಕ ಹೋಮಿ ಅದಾಜಾನಿಯಾ, ಸೆಟ್‌ನಲ್ಲಿ ನಡೆದ ತಮಾಷೆಯ ಮಾತುಕತೆಯೇ ನಂತರ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಗಾಸಿಪ್ ಆಗಿ ಹರಡಿದೆ ಎಂದು ಸ್ಪಷ್ಟಪಡಿಸಿದರು. ಚಿತ್ರದ ಕಥೆಯಲ್ಲಿ ರಶ್ಮಿಕಾ ಮತ್ತು ಕೃತಿ ಸಲಿಂಗಪ್ರೇಮಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

‘ಕಾಕ್‌ಟೇಲ್ 2’ ಚಿತ್ರದಲ್ಲಿ ಶಾಹಿದ್ ಕಪೂರ್, ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಸಿನಿಮಾ ಬಗ್ಗೆ ಈಗಾಗಲೇ ಭಾರಿ ನಿರೀಕ್ಷೆ ಮೂಡಿದೆ.

‘ಮಟ್ಕಾ’ ಮಸ್ತಿಯಲ್ಲಿ ಸಿಲುಕಿದ ಬಸವರಾಜ-ಸಂಗಪ್ಪಶೆಟ್ಟರ್‌ʼಗೆ ಗಡಿಪಾರು ಶಿಕ್ಷೆ!

ಗದಗ: ಜಿಲ್ಲೆಯಲ್ಲಿ ಅನಧಿಕೃತ ಲಾಟರಿ ಹಾಗೂ ಮಟ್ಕಾ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, “ಮಟ್ಕಾ ಆಡಿದ್ರೆ ಗಡಿಪಾರು ಗ್ಯಾರಂಟಿ” ಎಂಬ ಸ್ಪಷ್ಟ ಸಂದೇಶವನ್ನು ಅಧಿಕಾರಿಗಳು ರವಾನಿಸಿದ್ದಾರೆ.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆದ 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಪ್ಲೇಯಿಂಗ್ ಸ್ಕ್ವಾಡ್ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲೆಯಲ್ಲಿ ನಡೆಯುತ್ತಿರುವ ಮಟ್ಕಾ ಹಾಗೂ ಅನಧಿಕೃತ ಲಾಟರಿ ದಂಧೆಗಳನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಮಟ್ಕಾ ಪ್ರಕರಣಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳು ವಿಚಾರಣಾ ಹಂತದಲ್ಲಿದ್ದು, ಅವುಗಳನ್ನು ಶೀಘ್ರ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಡಿಪಾರು ಮಾಡಲಾಗಿರುವ ಆರೋಪಿತರ ಆರ್ಥಿಕ ಚಟುವಟಿಕೆಗಳ ಮೇಲೂ ನಿಗಾ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಜಿಎಸ್‌ಟಿ ಕಾಯ್ದೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ತೆರಿಗೆ ಇಲಾಖೆಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾತನಾಡಿದ ಡಿವೈಎಸ್‌ಪಿ ಮಹಾಂತೇಶ ಸಜ್ಜನ, ಮಟ್ಕಾ ದಂಧೆಯಲ್ಲಿ ನಿರಂತರವಾಗಿ ಭಾಗಿಯಾಗುವವರ ವಿರುದ್ಧ ಗಡಿಪಾರು ಕ್ರಮ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಜನವರಿ 2026ರಲ್ಲಿ ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಡಂಬಳ ‌ಗ್ರಾಮದ ಬಸವರಾಜ ತಂದೆ ಮೈಲಪ್ಪ ದೊಡ್ಡಮನಿ (21) ಎಂಬಾತನನ್ನು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅದೇ ರೀತಿ, ಶಿರಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ ವಿರುಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪಶೆಟ್ಟರ (58) ಎಂಬಾತನನ್ನು ವಿಜಯನಗರ ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಮೂರುಕ್ಕಿಂತ ಹೆಚ್ಚು ಮಟ್ಕಾ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತರ ವಿರುದ್ಧ ಗಡಿಪಾರು ಶಿಕ್ಷೆ ವಿಧಿಸಲಾಗುತ್ತಿದ್ದು, ಈ ಕಠಿಣ ಕ್ರಮದಿಂದ ಜಿಲ್ಲೆಯಲ್ಲಿನ ಮಟ್ಕಾ ದಂಧೆ ಇಳಿಮುಖವಾಗುತ್ತಿದೆ ಎಂದು ಡಿವೈಎಸ್‌ಪಿ ಮಹಾಂತೇಶ ಸಜ್ಜನ ಹೇಳಿದರು.

“ಮಟ್ಕಾ ಹಾಗೂ ಅನಧಿಕೃತ ಲಾಟರಿ ದಂಧೆಯಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯಾದ ಸಿ.ಎನ್. ಶ್ರೀಧರ್ ಹೇಳಿದ್ದಾರೆ.

ಗಡಿಪಾರುಗೊಂಡ ಆರೋಪಿತರು

ಬಸವರಾಜ ತಂದೆ ಮೈಲಪ್ಪ ದೊಡ್ಡಮನಿ (21), ಸಾ: ಡಂಬಳ
ವಿಜಯನಗರ ಜಿಲ್ಲೆ, ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು

ವಿರುಪಾಕ್ಷಪ್ಪ ತಂದೆ ಶಂಕ್ರಪ್ಪ ಸಂಗಪ್ಪಶೆಟ್ಟರ (58), ಸಾ: ಶಿರಹಟ್ಟಿ
ವಿಜಯನಗರ ಜಿಲ್ಲೆ, ಕೊಟ್ಟೂರು ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು

ಕೈ-ಕಾಲು ಕತ್ತರಿಸಿದಾಗಷ್ಟೇ ಕಾನೂನಿನ ಭಯ ಬರುತ್ತೆ?: ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರಣೆ ವೇಳೆ ಹೈಕೋರ್ಟ್ ಆಕ್ರೋಶ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ ಕಾನೂನು ಭಯದ ಕೊರತೆ ಮತ್ತು ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ಪೀಠ, ಸಮಾಜದಲ್ಲಿ ಅಪರಾಧಗಳ ಪ್ರಮಾಣ ಹೆಚ್ಚುತ್ತಿರುವ ಕುರಿತು ಕಟು ಟೀಕೆ ಮಾಡಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, “ಜನರು ಅತ್ಯಂತ ಸುಲಭವಾಗಿ ಅಪರಾಧಗಳನ್ನು ಎಸಗುತ್ತಿದ್ದಾರೆ. ಬಹುಶಃ ಯಾರಾದರೂ ತಪ್ಪು ಮಾಡಿದಾಗ ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಕಾನೂನಿನ ಮಹತ್ವ ಜನರಿಗೆ ಅರ್ಥವಾಗಬಹುದು” ಎಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದರೆಂದು ವರದಿಯಾಗಿದೆ. ಅತ್ಯಾಚಾರ, ಕೊಲೆ ಸೇರಿದಂತೆ ಗಂಭೀರ ಅಪರಾಧಗಳು ಹೆಚ್ಚುತ್ತಿರುವುದಕ್ಕೆ ಕಾನೂನಿನ ಭಯದ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಸೂಚಿಸಿದರು.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದರಿಂದ ಹಲವರು ಕಾನೂನನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ. ಅಪರಾಧಿಗಳನ್ನು ಕಠಿಣವಾಗಿ ಎದುರಿಸದ ಕಾರಣ ಕಾನೂನು ತನ್ನ ಪರಿಣಾಮಕಾರಿತ್ವವನ್ನು ಕಳೆದುಕೊಳ್ಳುತ್ತಿದೆ” ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಜೊತೆಗೆ ಕೆಲವು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಕಠಿಣ ಶಿಕ್ಷಾ ಕ್ರಮಗಳಿರುವುದರಿಂದ ಅಪರಾಧ ಪ್ರಮಾಣ ಕಡಿಮೆ ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದೆ.

ಪ್ರಕರಣದ ಹಿನ್ನೆಲೆ

ಪ್ರಕರಣದ ಆರೋಪಿಯು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ತನ್ನ ಸಹಪಾಠಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ. ದೂರಿನ ಪ್ರಕಾರ, 2023ರ ಜುಲೈನಲ್ಲಿ ಯುವತಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ ಆರೋಪಿ, ಸೆಪ್ಟೆಂಬರ್ 12, 2023ರಂದು ಆಕೆಯನ್ನು ತನ್ನ ಅಪಾರ್ಟ್‌ಮೆಂಟ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯ ನಂತರ ಮಾನಸಿಕ ಆಘಾತಕ್ಕೊಳಗಾದ ಯುವತಿ ಚಿಕಿತ್ಸೆ ಪಡೆದು ಬಳಿಕ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ನಂತರ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಜಾಮೀನು ಅರ್ಜಿ ಮುಂದೂಡಿಕೆ

ಆರೋಪಿ ಪರ ವಕೀಲರು, “ನನ್ನ ಕಕ್ಷಿದಾರ ಈಗಾಗಲೇ ಎರಡು ತಿಂಗಳಿಂದ ಜೈಲಿನಲ್ಲಿದ್ದು, ಇದರಿಂದ ಆತನ ಭವಿಷ್ಯ ಮತ್ತು ವೃತ್ತಿಜೀವನಕ್ಕೆ ಹಾನಿಯಾಗುತ್ತಿದೆ” ಎಂದು ವಾದಿಸಿ ಜಾಮೀನು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಆತ ಇನ್ನೂ ಕೆಲವು ದಿನ ಜೈಲಿನಲ್ಲಿರಲಿ. ಒಂದು ವೇಳೆ ವಿಚಾರಣಾ ನ್ಯಾಯಾಲಯ ಆತನನ್ನು ಅಪರಾಧಿ ಎಂದು ಘೋಷಿಸಿದರೆ, ಮತ್ತೆ ಜೈಲಿಗೇ ಹೋಗಬೇಕಾಗುತ್ತದೆ” ಎಂದು ಮೌಖಿಕವಾಗಿ ಹೇಳಿ, ಜಾಮೀನು ಅರ್ಜಿಯ ವಿಚಾರಣೆಯನ್ನು ಜೂನ್ 8ಕ್ಕೆ ಮುಂದೂಡಿದೆ.

ಗಮನಿಸಬೇಕಾದ ಸಂಗತಿಯೆಂದರೆ, ನ್ಯಾಯಾಲಯದ ಮೌಖಿಕ ಅಭಿಪ್ರಾಯಗಳು ಮತ್ತು ಅಂತಿಮ ಲಿಖಿತ ಆದೇಶಗಳು ಒಂದೇ ಆಗಿರಬೇಕೆಂಬ ನಿಯಮವಿಲ್ಲ. ಪ್ರಕರಣದ ಅಂತಿಮ ತೀರ್ಮಾನವು ವಿಚಾರಣೆ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ನ್ಯಾಯಾಲಯದ ಅಧಿಕೃತ ಆದೇಶದಲ್ಲಿ ನಿರ್ಧಾರವಾಗಲಿದೆ.

₹1,413 ಕೋಟಿ ಆಸ್ತಿ ಘೋಷಿಸಿದ ಡಿಕೆ ಶಿವಕುಮಾರ್: ದೇಶದ ಶ್ರೀಮಂತ ಸಿಎಂ ಆಗಲಿರುವ ಕಾಂಗ್ರೆಸ್ ನಾಯಕ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿರುವ ಆಸ್ತಿ ವಿವರಗಳ ಪ್ರಕಾರ, ಅವರು ಇತರ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹಿಂದಿಕ್ಕಿದ್ದಾರೆ.

2023ರ ವಿಧಾನಸಭೆ ಚುನಾವಣೆಯ ವೇಳೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರು ಒಟ್ಟು 1,413 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ಇದರಲ್ಲಿ 273 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ ಹಾಗೂ 1,140 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಸೇರಿದೆ. ಜೊತೆಗೆ ತಮ್ಮ ಮೇಲೆ 265 ಕೋಟಿ ರೂಪಾಯಿಗೂ ಅಧಿಕ ಸಾಲವಿರುವುದಾಗಿ ಉಲ್ಲೇಖಿಸಿದ್ದರು.

ಶಿಕ್ಷಣ, ರಿಯಲ್ ಎಸ್ಟೇಟ್ ಹಾಗೂ ಉದ್ಯಮ ಕ್ಷೇತ್ರಗಳಲ್ಲಿ ಹೂಡಿಕೆ

ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲಿ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿನ ಭೂಮಿ, ವಾಣಿಜ್ಯ ಕಟ್ಟಡಗಳು, ಶಿಕ್ಷಣ ಸಂಸ್ಥೆಗಳು ಹಾಗೂ ರಿಯಲ್ ಎಸ್ಟೇಟ್ ಹೂಡಿಕೆಗಳು ಪ್ರಮುಖವಾಗಿವೆ. ಶಿಕ್ಷಣ ಕ್ಷೇತ್ರದಲ್ಲಿನ ಸಂಸ್ಥೆಗಳು, ಜಮೀನುಗಳು ಮತ್ತು ವಿವಿಧ ಉದ್ಯಮಗಳಲ್ಲಿ ಹೂಡಿಕೆ ಅವರ ಆಸ್ತಿ ಮೌಲ್ಯವನ್ನು ಗಣನೀಯವಾಗಿ ಹೆಚ್ಚಿಸಿವೆ.

ಇತರ ಸಿಎಂಗಳಿಗಿಂತ ಮುಂಚೂಣಿಯಲ್ಲಿ ಡಿಕೆಶಿ

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು 2024ರ ಚುನಾವಣಾ ಅಫಿಡವಿಟ್‌ನಲ್ಲಿ ಸುಮಾರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸುಮಾರು 648 ಕೋಟಿ ರೂಪಾಯಿ ಆಸ್ತಿ ಹೊಂದಿರುವುದಾಗಿ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ.

ಆದರೆ 1,413 ಕೋಟಿ ರೂಪಾಯಿ ಘೋಷಿತ ಆಸ್ತಿಯೊಂದಿಗೆ ಡಿ.ಕೆ. ಶಿವಕುಮಾರ್ ಅವರು ಈ ಇಬ್ಬರು ಮುಖ್ಯಮಂತ್ರಿಗಳಿಗಿಂತಲೂ ಮುನ್ನಡೆ ಸಾಧಿಸಿ ದೇಶದ ಶ್ರೀಮಂತ ಮುಖ್ಯಮಂತ್ರಿ ಪಟ್ಟಿಗೆ ಏರಿದ್ದಾರೆ.

ದೇಶದ ಶ್ರೀಮಂತ ಶಾಸಕ ಯಾರು?

ದೇಶದ ಶ್ರೀಮಂತ ಶಾಸಕರ ಪಟ್ಟಿಯಲ್ಲಿ ಮಹಾರಾಷ್ಟ್ರದ ಘಾಟ್ಕೋಪರ್ ಪೂರ್ವ ಕ್ಷೇತ್ರದ ಶಾಸಕ ಪರಾಗ್ ಶಾ ಅಗ್ರಸ್ಥಾನದಲ್ಲಿದ್ದಾರೆ. ಅವರು 2024ರ ಚುನಾವಣೆಗೆ ಮುನ್ನ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ 3,383 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದರು.

ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲಿರುವ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ನಾಯಕತ್ವದ ಜೊತೆಗೆ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ವಿಶೇಷ ಗುರುತಿನೊಂದಿಗೆ ಅಧಿಕಾರ ಸ್ವೀಕರಿಸಲು ಸಜ್ಜಾಗಿದ್ದಾರೆ.

ಮಹದೇವಪುರದಲ್ಲಿ ಮಳೆಯ ಅಬ್ಬರ: ಧರೆಗೆ ಉರುಳಿದ ಬೃಹತ್ ಮರ – ನೆಲಕ್ಕಪ್ಪಳಿಸಿದ ವಿದ್ಯುತ್ ಕಂಬ!

ಮಹದೇವಪುರ: ನಿರಂತರ ಮಳೆಯ ಆರ್ಭಟದ ನಡುವೆ ಮಹದೇವಪುರ ಕ್ಷೇತ್ರದ ಕುಂದಲಹಳ್ಳಿ ಕಾಲೋನಿಯಲ್ಲಿ ಬೃಹತ್ ಮರವೊಂದು ಧರೆಗೆ ಉರುಳಿದ ಪರಿಣಾಮ ಎರಡು ಕಾರುಗಳು ಜಖಂಗೊಂಡ ಘಟನೆ ನಡೆದಿದೆ.

ಕುಂದಲಹಳ್ಳಿ ಕಾಲೋನಿಯ 3ನೇ ಕ್ರಾಸ್‌ನಲ್ಲಿ ನಡೆದ ಈ ಘಟನೆಯಲ್ಲಿ ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬವೂ ನೆಲಕ್ಕಪ್ಪಳಿಸಿದೆ. ಘಟನೆಯ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಭಾರಿ ಮಳೆ ಹಾಗೂ ಗಾಳಿಯ ಪರಿಣಾಮ ಮರ ಧರೆಗುರುಳಿರುವ ಸಾಧ್ಯತೆ ಇದ್ದು, ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಜಿಬಿಎ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೃಹತ್ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದರು.

ಮರ ಹಾಗೂ ವಿದ್ಯುತ್ ಕಂಬ ಬಿದ್ದ ಪರಿಣಾಮ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಮಳೆಗಾಲದಲ್ಲಿ ಅಪಾಯಕಾರಿಯಾಗಿರುವ ಮರಗಳನ್ನು ಗುರುತಿಸಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಕಬ್ಬಿನ ಗದ್ದೆಯಲ್ಲಿ ದಿಢೀರ್ ಭೂಮಿ ಕುಸಿತ: ನಿಂಗಾಪುರದಲ್ಲಿ ಆತಂಕ!

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ದಿಢೀರ್ ಭೂಕುಸಿತ ಸಂಭವಿಸಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯೊಂದರಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ಭೂಮಿ ಕುಸಿದಿದ್ದು, ಸುಮಾರು 20 ಅಡಿ ಆಳ ಹಾಗೂ 10 ಅಡಿ ಅಗಲದ ಭಾರಿ ಕುಳಿ ಉಂಟಾಗಿದೆ. ಹೊಲದ ಮಧ್ಯಭಾಗದಲ್ಲಿ ಭೂಮಿ ದಿಢೀರ್ ಕುಸಿದಿರುವ ದೃಶ್ಯವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಭೂಕುಸಿತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅಪರೂಪದ ಘಟನೆಯಿಂದ ಗ್ರಾಮಸ್ಥರಲ್ಲಿ ಭಯ ಮತ್ತು ಕುತೂಹಲ ಮೂಡಿದೆ.

ಭೂ ವಿಜ್ಞಾನಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಭೂಕುಸಿತಕ್ಕೆ ಕಾರಣವಾದ ಅಂಶಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ವರದಿ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸದ್ಯ ಘಟನಾ ಸ್ಥಳದ ಸುತ್ತಮುತ್ತ ಎಚ್ಚರಿಕೆ ವಹಿಸಲಾಗಿದ್ದು, ಜನರು ಕುಸಿತ ಪ್ರದೇಶದ ಸಮೀಪ ತೆರಳದಂತೆ ಸೂಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಕಡಲ ತೀರದಲ್ಲಿ ಯಶ್-ರಾಧಿಕಾ ಭರ್ಜರಿ ಹೂಡಿಕೆ: ಅಲಿಬಾಗ್‌ನಲ್ಲಿ ₹24 ಕೋಟಿ ಆಸ್ತಿ ಖರೀದಿ

ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 24 ಕೋಟಿ ರೂಪಾಯಿ ಮೌಲ್ಯದ ಪ್ರೀಮಿಯಂ ಆಸ್ತಿಯನ್ನು ಖರೀದಿಸುವ ಮೂಲಕ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ.

ರಾಯಗಢ ಜಿಲ್ಲೆಯ ಕಾಮತ್ ಗ್ರಾಮದಲ್ಲಿರುವ ಈ ಆಸ್ತಿ ಸಮುದ್ರಕ್ಕೆ ಮುಖಮಾಡಿರುವ ಪ್ರಮುಖ ಸ್ಥಳದಲ್ಲಿದೆ. ಸುಮಾರು 5,289 ಚದರ ಮೀಟರ್ ವಿಸ್ತೀರ್ಣದ ಕೃಷಿ ಭೂಮಿಯ ಜೊತೆಗೆ ವಸತಿ ಕಟ್ಟಡವೂ ಈ ವ್ಯವಹಾರದಲ್ಲಿ ಒಳಗೊಂಡಿದೆ ಎಂದು ಆಸ್ತಿ ದಾಖಲೆಗಳು ತಿಳಿಸಿವೆ.

ಕಿಹಿಮ್ ಬೀಚ್ ಸಮೀಪದಲ್ಲಿರುವ ಈ ಜಾಗ ಅಲಿಬಾಗ್‌ನ ಅತ್ಯಂತ ಬೇಡಿಕೆಯ ಪ್ರದೇಶಗಳಲ್ಲಿ ಒಂದಾಗಿದೆ. ಪಶ್ಚಿಮ ಭಾಗದಲ್ಲಿ ಸಮುದ್ರ, ಪೂರ್ವ ಭಾಗದಲ್ಲಿ ರಸ್ತೆ ಹಾಗೂ ಬೀಚ್‌ಗೆ ನೇರ ಸಂಪರ್ಕ ಕಲ್ಪಿಸುವ ಮಾರ್ಗ ಈ ಆಸ್ತಿಯ ವಿಶೇಷತೆಯಾಗಿದೆ.

ಮೇ 18ರಂದು ಆಸ್ತಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡಿದ್ದು, ಯಶ್ ಮತ್ತು ರಾಧಿಕಾ ಪಂಡಿತ್ ಈ ವ್ಯವಹಾರಕ್ಕಾಗಿ 1.44 ಕೋಟಿ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಜೊತೆಗೆ ನೋಂದಣಿ ಮತ್ತು ದಾಖಲೆ ನಿರ್ವಹಣಾ ಶುಲ್ಕವನ್ನೂ ಪಾವತಿಸಲಾಗಿದೆ.

ಭಾರತೀಯ ಚಿತ್ರರಂಗದ ಹಲವು ಗಣ್ಯರು ಆಸ್ತಿ ಹೊಂದಿರುವ ಅಲಿಬಾಗ್‌ನಲ್ಲಿ ಇದೀಗ ಯಶ್-ರಾಧಿಕಾ ದಂಪತಿಯೂ ಸೇರ್ಪಡೆಯಾಗಿದ್ದು, ಇದು ಅವರ ಪ್ರಮುಖ ಹೂಡಿಕೆಗಳಲ್ಲಿ ಒಂದಾಗಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳಲ್ಲಿ ನಿರತರಾಗಿರುವ ಯಶ್, ಈ ಆಸ್ತಿ ಖರೀದಿಯ ಮೂಲಕವೂ ಗಮನ ಸೆಳೆದಿದ್ದಾರೆ.

ನಿಮ್ಮ ಮಕ್ಕಳಿಗೆ ಇದೇ ಊಟ ಕೊಡ್ತೀರಾ..?: ಕಳಪೆ ಆಹಾರಕ್ಕೆ ಕಿಡಿಕಾರಿದ ಶಾಸಕ!

ಬೀದರ್: ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಕಳಪೆ ಗುಣಮಟ್ಟದ ಆಹಾರದ ವಿರುದ್ಧ ಬಸವಕಲ್ಯಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ವಸತಿ ನಿಲಯದ ವಿದ್ಯಾರ್ಥಿಗಳು ಕಳಪೆ ಅನ್ನ, ಬ್ಯಾಳಿ, ಸಾಂಬರ್, ಕೊಳೆತ ಟೊಮಾಟೋ ಹಾಗೂ ಹಾಳಾದ ತರಕಾರಿಗಳನ್ನು ಕೈಯಲ್ಲಿ ಹಿಡಿದು ನೇರವಾಗಿ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರ ಕಚೇರಿಗೆ ಧಾವಿಸಿದ ಘಟನೆ ಸಂಚಲನ ಮೂಡಿಸಿದೆ.

ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿಂದ ಹಾಸ್ಟೆಲ್‌ನಲ್ಲಿ ಅತ್ಯಂತ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದು, ತಿನ್ನಲು ಅಸಾಧ್ಯವಾದ ಆಹಾರವನ್ನು ಶಾಸಕರ ಮುಂದೆ ಇಟ್ಟು ಅಳಲು ತೋಡಿಕೊಂಡರು. ವಿದ್ಯಾರ್ಥಿಗಳು ತಂದಿದ್ದ ಕೊಳೆತ ತರಕಾರಿ ಹಾಗೂ ಹಾಳಾದ ಸಾಂಬಾರ್‌ನ್ನು ಕಂಡ ಶಾಸಕ ಶರಣು ಸಲಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

“ನಿಮ್ಮ ಮಕ್ಕಳಿಗೆ ಇದೇ ಊಟ ಮಾಡಿಸುತ್ತೀರಾ..? ಸರ್ಕಾರ ಹಣ ಕೊಡ್ತಿದೆ, ಆದರೆ ವಿದ್ಯಾರ್ಥಿಗಳ ಹೊಟ್ಟೆಗೆ ಹೋಗಬೇಕಾದ ಅನ್ನವನ್ನು ಯಾಕೆ ಕಸಿದುಕೊಳ್ಳುತ್ತಿದ್ದೀರಿ?” ಎಂದು ಅಧಿಕಾರಿಗಳನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡ ಶಾಸಕ, ವಸತಿ ನಿಲಯ ವಾರ್ಡನ್ ವಾಣಿ, ಎಸಿ/ಎಸ್ಟಿ ವಸತಿ ನಿಲಯ ಜಿಲ್ಲಾ ಅಧಿಕಾರಿ ಗಿರೀಶ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಅಷ್ಟೇ ಅಲ್ಲದೆ, ತಮ್ಮ ಕಚೇರಿಗೆ ಬಂದ ವಿದ್ಯಾರ್ಥಿಗಳಿಗೆ ಮಧ್ಯರಾತ್ರಿ ಅನ್ನ-ಸಾಂಬಾರ್ ವ್ಯವಸ್ಥೆ ಮಾಡಿ ಊಟ ಹಾಕಿದ ಶಾಸಕ ಶರಣು ಸಲಗರ ಮಾನವೀಯತೆ ಮೆರೆದರು. ಬಳಿಕ “ ಬೆಳಿಗ್ಗೆ ಹಾಸ್ಟೆಲ್‌ಗೆ ಬನ್ನಿ, ಇದೇ ಊಟವನ್ನು ನೀವು ತಿಂದು ತೋರಿಸಿ” ಎಂದು ಅಧಿಕಾರಿಗಳಿಗೆ ಸವಾಲು ಹಾಕಿದ ಅವರು, “ನಿಮ್ಮನ್ನು ಅಮಾನತ್ತು ಮಾಡುವವರೆಗೂ ನಾನು ಬಿಡಲ್ಲ” ಎಂದು ಎಚ್ಚರಿಕೆ ನೀಡಿದರು.

ಸರ್ಕಾರಿ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆಹಾರದ ಗುಣಮಟ್ಟ ಕುರಿತು ಮತ್ತೆ ಗಂಭೀರ ಪ್ರಶ್ನೆಗಳು ಎದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಮಳೆ ಅಬ್ಬರ: 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ತೀವ್ರ ಮಳೆಯೊಂದಿಗೆ ಸಿಡಿಲು ಬೀಳುವ ಸಾಧ್ಯತೆ ಇರುವುದರಿಂದ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮಳೆ ಮತ್ತು ಸಿಡಿಲಿನ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು ಹಾಗೂ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.

error: Content is protected !!