Home Blog

ಯೋಗ ಜೀವನದ ಅವಿಭಾಜ್ಯ ಅಂಗ: ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಯೋಗವು ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಅವಿಭಾಜ್ಯ ಅಂಗವಾಗಿದ್ದು, ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸುವ ಸಮಗ್ರ ಜೀವನ ಪದ್ಧತಿಯಾಗಿದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಸಮೀಪದ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಗದ ಮಹತ್ವವನ್ನು ಧರ್ಮಗ್ರಂಥಗಳು ಪ್ರಾಚೀನ ಕಾಲದಿಂದಲೇ ಸಾರಿದ್ದು, ಇಂದು ಅದು ವಿಶ್ವಾದ್ಯಂತ ಮಾನ್ಯತೆ ಪಡೆದಿದೆ. ಯೋಗವನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡಾಗ ಅದರ ನಿಜವಾದ ಮಹತ್ವ ಅರಿವಾಗುತ್ತದೆ ಎಂದು ಹೇಳಿದರು.

ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಜೂನ್ 21 ವರ್ಷದಲ್ಲಿ ಅತಿ ಹೆಚ್ಚು ಹಗಲು ಇರುವ ದಿನವಾಗಿದ್ದು, ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಉದ್ದೇಶದಿಂದ ಈ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ.

ಯೋಗವು ಭಾರತವು ವಿಶ್ವಕ್ಕೆ ನೀಡಿದ ಶ್ರೇಷ್ಠ ಕೊಡುಗೆಗಳಲ್ಲಿ ಒಂದಾಗಿದ್ದು, ಅದನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ನಸುಕಿನ ಜಾವದಿಂದಲೇ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಯೋಗಗುರುಗಳ ಮಾರ್ಗದರ್ಶನದಲ್ಲಿ ವಿವಿಧ ಯೋಗಾಸನ ಮತ್ತು ಪ್ರಾಣಾಯಾಮಗಳನ್ನು ಅಭ್ಯಾಸ ಮಾಡಿದರು.

ಶಾಸಕ ಡಾ. ಚಂದ್ರು ಲಮಾಣಿ ಕೂಡ ಕಾರ್ಯಕರ್ತರೊಂದಿಗೆ ಯೋಗಾಭ್ಯಾಸದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಅನಿಲ ಮುಳಗುಂದ, ಸೋಮೇಶ ಉಪನಾಳ, ವಿಜಯ ಹತ್ತಿಕಾಳ, ಅಶೋಕ ಶಿರಹಟ್ಟಿ, ಮಹಾದೇವಪ್ಪ ಅಣ್ಣಿಗೇರಿ, ಡಿ.ವೈ. ಹುನಗುಂದ, ಕೃಷ್ಣ ಬಿದರಳ್ಳಿ, ನಿಂಗಪ್ಪ ಬನ್ನಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ಈರಣ್ಣ ಅಕ್ಕೂರ, ಬಾಬಣ್ಣ ವೇರ್ಣೆಕರ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮೊಹರಂ ವೇಳೆ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮ: ಸಿಪಿಐ ವಿಕಾಸ್ ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮೊಹರಂ ಆಚರಣೆಯ ಸಂದರ್ಭದಲ್ಲಿ ಎಲ್ಲರೂ ಸೌಹಾರ್ದತೆ ಮತ್ತು ಸಹೋದರತ್ವದಿಂದ ನಡೆದುಕೊಳ್ಳಬೇಕು. ಯಾರೇ ಆಗಲಿ ಮತೀಯ ಭಾವನೆಗಳಿಗೆ ಧಕ್ಕೆ ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಲ್ ಪೊಲೀಸ್ ಇನ್ಸ್‌ಪೆಕ್ಟರ್ ವಿಕಾಸ್ ಲಮಾಣಿ ಎಚ್ಚರಿಕೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಮೊಹರಂ ಮೆರವಣಿಗೆ ಹಾಗೂ ಅಲೈಕುಣಿ ಕಾರ್ಯಕ್ರಮಗಳ ವೇಳೆ ಎಲ್ಲರೂ ವೈಯಕ್ತಿಕ ಜವಾಬ್ದಾರಿಯಿಂದ ವರ್ತಿಸಬೇಕು. ಮಸೀದಿಗಳ ಸುತ್ತಮುತ್ತ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವ ಮೂಲಕ ಅಹಿತಕರ ಘಟನೆಗಳನ್ನು ತಡೆಯಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪುರಸಭೆ ಸದಸ್ಯ ಗಣೇಶ್ ಮಾತನಾಡಿ, ಮೊಹರಂ ಅತ್ಯಂತ ಭಾವನಾತ್ಮಕ ಹಾಗೂ ಸೂಕ್ಷ್ಮ ಹಬ್ಬವಾಗಿದ್ದು, ಎಲ್ಲರೂ ಸಂಯಮ ಮತ್ತು ಪರಸ್ಪರ ಗೌರವದಿಂದ ಆಚರಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಸೆರೆಗಾರ್ ಹುಚ್ಚಪ್ಪ ಮಾತನಾಡಿ, ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಕೆಲ ಅಪರೂಪದ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲ ಧರ್ಮದ ಜನರು ಹೊಂದಾಣಿಕೆಯಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದಾರೆ. ಈ ಬಾರಿಯೂ ಅದೇ ಸೌಹಾರ್ದತೆ ಮುಂದುವರಿಯಬೇಕು ಎಂದು ಹೇಳಿದರು.

ಬಾರಿಕರ ಬಾಪೂಜಿ ಮಾತನಾಡಿ, ಇಂದಿನ ಯುವಕರು ವಿದ್ಯಾವಂತರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಿದರೆ ಯಾವುದೇ ರೀತಿಯ ವಿವಾದಗಳಿಗೆ ಅವಕಾಶ ಇರುವುದಿಲ್ಲ ಎಂದರು.

ಪತ್ರಕರ್ತ ಸರ್ದಾರ್ ಯಮನೂರಪ್ಪ ಮಾತನಾಡಿ, ಮೊಹರಂ ಹಿಂದೂ-ಮುಸ್ಲಿಂ ಭಾವೈಕ್ಯದ ಸಂಕೇತವಾಗಿದ್ದು, ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಇತ್ತೀಚೆಗೆ ಯುವಕರು ಬೈಕ್ ವೀಲಿಂಗ್ ಹಾಗೂ ಸೈಲೆನ್ಸರ್ ಸದ್ದು ಮಾಡುವ ಮೂಲಕ ಸಾರ್ವಜನಿಕರಿಗೆ, ವಿಶೇಷವಾಗಿ ವೃದ್ಧರಿಗೆ ತೊಂದರೆ ಉಂಟುಮಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.

ಕಡ್ಲೆಬಾಳು ಗ್ರಾಮದ ಮುಸ್ಲಿಂ ಮುಖಂಡರಾದ ಇಮಾಮ್ ಸಾಬ್ ಬಲ್ಲಾಹುಣಿಸಿ ಹಾಗೂ ಕರೀಂಸಾಬ್ ಶಾಂತಿ ಸಭೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರಭಾರಿ ಪಿಎಸ್‌ಐ ಉಮಾಪತಿ ನಾಯಕ್, ನೈರ್ಮಲ್ಯಾಧಿಕಾರಿ ಕೆ. ವಿಜಯಲಕ್ಷ್ಮಿ, ಎಸ್.ಬಿ. ಹನುಮಂತು, ಮಲ್ಲೇಶ್ ನಾಯಕ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಇದಲ್ಲದೆ ಅರಸೀಕೆರೆ ಹನುಮಂತಪ್ಪ, ಸರ್ದಾರ್ ಅಂಬಣ್ಣ, ಚಿಗರಿ ಮಾರುತಿ, ವಿ. ಸೋಮಣ್ಣ, ಎಂ. ಇಮಾಮ್‌ಸಾಬ್, ಬಿ. ಮೌಲಾಸಾಬ್, ಸಣ್ಣ ಬುಡೇನ್‌ಸಾಬ್, ಅಕ್ಕಂಡಿ ಯಮನೂರ್, ಪುಂಡಿ ಜಮಾಲ್‌ಸಾಬ್, ಮೋರಿಗೇರಿ ನಾಗಪ್ಪ, ಕುರದಗಡ್ಡಿ ಸಿದ್ದಪ್ಪ, ಬಂಡಿ ಮಾಬುಸಾಬ್, ಪೈಂಟರ್ ವೀರೇಶ್, ಶಾಮಣ್ಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ದೈವಸ್ಥರು, ಮುಖಂಡರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

“ಮೊಹರಂ ಆಚರಣೆಯಲ್ಲಿ ಎಲ್ಲರೂ ಸ್ನೇಹ, ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಮತೀಯ ಭಾವನೆಗಳಿಗೆ ಧಕ್ಕೆ ತಂದು ಸಮಾಜದ ಶಾಂತಿ ಕದಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.”

– ವಿಕಾಸ್ ಲಮಾಣಿ, ಸಿಪಿಐ, ಹಗರಿಬೊಮ್ಮನಹಳ್ಳಿ

ಯೋಗ ನಿತ್ಯ ಜೀವನದ ಭಾಗವಾಗಲಿ: ಡಾ. ಸಿದ್ದೇಶ್ವರ ಶಿವಸಾಲಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಯೋಗವು ಕೇವಲ ಒಂದು ದಿನದ ಆಚರಣೆಗೆ ಸೀಮಿತವಾಗದೆ, ಪ್ರತಿದಿನದ ಜೀವನದ ಅವಿಭಾಜ್ಯ ಅಂಗವಾಗಿರಬೇಕು ಎಂದು ಡಾ. ಸಿದ್ದೇಶ್ವರ ಶಿವಸಾಲಿ ಹೇಳಿದರು.

ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ, ಏಕಾಗ್ರತೆ ಹಾಗೂ ಆತ್ಮವಿಶ್ವಾಸ ವೃದ್ಧಿಗೆ ಸಹಕಾರಿಯಾಗಿದೆ. ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಯೋಗಾಭ್ಯಾಸದ ಅಭ್ಯಾಸ ಬೆಳೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಜಿ. ಬಸವನಗೌಡ ಮಾತನಾಡಿ, ಯೋಗವು ಆರೋಗ್ಯದ ಜೀವಾಳವಾಗಿದ್ದು, ನಿಯಮಿತ ಅಭ್ಯಾಸದಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಯೋಗದ ವಿವಿಧ ಆಸನಗಳ ಪ್ರದರ್ಶನ, ಸಮೂಹ ಯೋಗಾಭ್ಯಾಸ ಹಾಗೂ ಯೋಗದ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮಗಳು ನಡೆದವು. ವಿದ್ಯಾಕೇಂದ್ರದ ವಿವಿಧ ಪ್ರಕಲ್ಪಗಳ 1,118 ವಿದ್ಯಾರ್ಥಿಗಳು ಸಮೂಹ ಯೋಗಾಸನದಲ್ಲಿ ಭಾಗವಹಿಸಿ ಗಮನ ಸೆಳೆದರು.

ಈ ಸಂದರ್ಭದಲ್ಲಿ ಸಹಕಾರ್ಯದರ್ಶಿ ದುರ್ಗಣ್ಣ, ಪ್ರಧಾನಾಚಾರ್ಯ ಹೆಚ್.ಎ. ರಂಗನಾಥ, ಮಂಜುನಾಥ ನಂದಿ, ನಾರಾಯಣ ಕೆರೂರ, ಸೋಮನಗೌಡ, ಪ್ರಭುದೇವ್, ಮಧುಕರ್, ವಿನಯ್, ಕೆ. ನಾಗರಾಜ, ಆನಂದ್ ಕಡ್ಲಿ ಸೇರಿದಂತೆ ಪಾಲಕರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವೀರೇಶ್ ವಾಲಿ ಸ್ವಾಗತಿಸಿದರು. ಕುಮಾರ್ ಆಚಾರ್ ವಂದಿಸಿದರು. ವಿನಯ್ ಕಾರ್ಯಕ್ರಮ ನಿರೂಪಿಸಿದರು.

ಸೌಹಾರ್ದದ ಹಾದಿಯಲ್ಲಿ ಮೊಹರಂ ಆಚರಿಸಿ: ಸಿಪಿಐ ಅಯ್ಯನಗೌಡ್ರ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಹಿಂದೂ-ಮುಸ್ಲಿಮರ ಭಾವೈಕ್ಯತೆ ಹಾಗೂ ಸೌಹಾರ್ದದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತವಾಗಿ ಆಚರಿಸಬೇಕು ಎಂದು ಮುಂಡರಗಿ ಪೊಲೀಸ್ ಠಾಣೆಯ ಸಿಪಿಐ ಅಯ್ಯನಗೌಡ್ರ ಪಾಟೀಲ ಹೇಳಿದರು.

ಗ್ರಾಮದ ಪೊಲೀಸ್ ಹೊರಠಾಣೆಯಲ್ಲಿ ಮೊಹರಂ ಹಬ್ಬದ ಅಂಗವಾಗಿ ಆಯೋಜಿಸಿದ್ದ ಶಾಂತಿ ಪಾಲನಾ ಸಭೆಯಲ್ಲಿ ಅವರು ಮಾತನಾಡಿದರು. ಹಬ್ಬಗಳು ಸಮಾಜದಲ್ಲಿ ಸೌಹಾರ್ದ, ಸಹಬಾಳ್ವೆ ಮತ್ತು ಪರಸ್ಪರ ವಿಶ್ವಾಸವನ್ನು ಬಲಪಡಿಸುವ ಮಾಧ್ಯಮಗಳಾಗಿವೆ. ಪ್ರತಿವರ್ಷದಂತೆ ಈ ಬಾರಿಯೂ ಮೊಹರಂ ಹಬ್ಬವನ್ನು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಬೇಕು ಎಂದು ತಿಳಿಸಿದರು.

ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಹಬ್ಬದ ಆಚರಣೆಯಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಶಾಂತಿ, ಸೌಹಾರ್ದ ಮತ್ತು ಪರಸ್ಪರ ಗೌರವದ ವಾತಾವರಣದಲ್ಲಿ ಹಬ್ಬವನ್ನು ಆಚರಿಸುವ ಮೂಲಕ ಉತ್ತಮ ಸಂದೇಶ ನೀಡಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಗ್ರಾಮಸ್ಥರು ಮೊಹರಂ ಆಚರಣೆಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಹಬ್ಬವನ್ನು ಶಾಂತಿಯುತ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಿದ್ಧಪ್ಪ ಬಂಡಾರಿ, ಶಿವಾನಂದ ಬಂಡಿ, ರಜಾಕಸಾಬ, ರಾಜೇಸಾಬ ಹಿರೇಮನಿ, ಆರ್. ಆಲೂರ, ರಜಾಸಾಬ ಹುಬ್ಬಳ್ಳಿ, ಸಿದ್ದಪ್ಪ ಹೊಂಬಳ, ಮಳ್ಳಪ್ಪ ಕರಿಗಾರ, ಸೋಮಲಿಂಗಪ್ಪ ತಳಗೇರಿ, ಲಕ್ಷ್ಮಣ ಬೇಟಗೇರಿ, ಕೆ.ಎಂ. ಮಠದ, ಮಹೇಶ ಗುಡ್ಡದ, ಎಸ್.ಐ. ಮಠದ, ಮಹಬೂಬಲಿ ಮೂಲಿಮನಿ, ಹೆಡ್ ಕಾನ್‌ಸ್ಟೇಬಲ್ ಎಸ್.ಎಸ್. ಕಂಚಗಾರ, ಪೊಲೀಸ್ ಸಿಬ್ಬಂದಿಗಳಾದ ಬಾಬುಜಾನ ಕಮ್ಮಾರ, ನಾಗರಾಜ ಪೂಜಾರ ಸೇರಿದಂತೆ ಗ್ರಾಮದ ಹಿರಿಯರು, ಯುವಕರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಯೋಗದಿಂದ ಆರೋಗ್ಯ, ಶಾಂತಿ ಯಶಸ್ಸು ಕಟ್ಟಿಟ್ಟ ಬುತ್ತಿ: ಪ್ರೊ. ಬಾಹುಬಲಿ ಪಿ. ಜೈನ

0
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆದರ್ಶ ಶಿಕ್ಷಣ ಸಮಿತಿಯ ಶ್ರೀ ವಿ.ಆರ್. ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್‌ನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದಿಂದ ಐಕ್ಯೂಎಸಿ ಅಡಿಯಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಯೋಗ ಪ್ರದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ಅಧಿಕಾರಿಗಳಾದ ಪ್ರೊ. ಬಾಹುಬಲಿ ಪಿ. ಜೈನ ಮಾತನಾಡಿ, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದೆ ಎಂದರು. ನಿಯಮಿತ ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಯುತ್ತದೆ ಎಂದು ತಿಳಿಸಿದರು.
ಯೋಗ ಪ್ರದರ್ಶನದ ಬಳಿಕ ಎನ್‌ಎಸ್‌ಎಸ್ ಸ್ವಯಂಸೇವಕರಿಂದ ಸ್ಟಂಟ್ ಪ್ರದರ್ಶನವೂ ನಡೆಯಿತು. ಕಾರ್ಯಕ್ರಮದಲ್ಲಿ ಕಲಾ ವಿಭಾಗದ ಕಾರ್ಯದರ್ಶಿ ಕು. ವರ್ಷ ಕಲ್ಕಂಬಿ, ಕುಮಾರ ಅಂಕುಶ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ-ಸ್ವಯಂಸೇವಕಿಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು

ಮಳೆಗಾಗಿ ವರುಣನ ಮೊರೆ; ಗುರ್ಜಿ ಪೂಜೆ, ಅನ್ನ ಸಂತರ್ಪಣೆ

0

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಮುಂಗಾರು ಮಳೆಗಾಗಿ ವರುಣ ದೇವನ ಕೃಪೆ ಕೋರಿ ಇಲ್ಲಿಯ ರಾಮಲಿಂಗೇಶ್ವರ ಭಜನಾ ಸಂಘದ ಆಶ್ರಯದಲ್ಲಿ ಗುರ್ಜಿ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಸಂಪ್ರದಾಯದಂತೆ ಮಣ್ಣಿನ ಗುರ್ಜಿ ಮೂರ್ತಿಯನ್ನು ಹೊತ್ತುಕೊಂಡ ಬಾಲಕ ಮನೆ ಮನೆಗೆ ತೆರಳಿ ಗುರ್ಜಿ ಆಟವಾಡುತ್ತಾ ಭಿಕ್ಷೆ ಸಂಗ್ರಹಿಸಿದನು. ಗ್ರಾಮಸ್ಥರು ಗುರ್ಜಿ ಮೂರ್ತಿಗೆ ನೀರು ಎರಚಿ ಭಿಕ್ಷೆ ನೀಡಿದರು. ಸಂಗ್ರಹವಾದ ಭಿಕ್ಷೆಯಿಂದ ಅನ್ನ ಸಂತರ್ಪಣೆ ನೆರವೇರಿಸಲಾಯಿತು.

ಇದಕ್ಕೂ ಮುನ್ನ ರಾಮಲಿಂಗೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಳೆದ ಒಂದೂವರೆ ತಿಂಗಳಿನಿಂದ ಸಮರ್ಪಕ ಮಳೆಯಾಗದ ಕಾರಣ ರೈತರು ಬಿತ್ತನೆ ಕಾರ್ಯ ಆರಂಭಿಸಿಲ್ಲ. ಕೆಲವರು ಮಳೆ ನಿರೀಕ್ಷೆಯಲ್ಲಿ ಹೆಸರು ಬಿತ್ತನೆ ಮಾಡಿದ್ದರೂ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದರು.

ಮಳೆಯಾಗಲಿ ಹಾಗೂ ರೈತರ ಸಂಕಷ್ಟ ದೂರವಾಗಲಿ ಎಂಬ ಉದ್ದೇಶದಿಂದ ವರುಣ ದೇವನ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸಲಾಗಿದೆ ಎಂದು ರೈತ ಸಮುದಾಯ ತಿಳಿಸಿತು.

ಗದಗ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ ಜಕ್ಕಲಿಯ ಹೆಮ್ಮೆಯ ಕುವರಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಅವಕಾಶ ದೊರೆತರೆ ರಾಷ್ಟ್ರಮಟ್ಟದಲ್ಲೂ ತಮ್ಮ ಸಾಮರ್ಥ್ಯ ಪ್ರದರ್ಶಿಸಬಹುದು ಎಂಬುದನ್ನು ಸಮೀಪದ ಜಕ್ಕಲಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಸೃಷ್ಠಿ ಉಮೇಶ್ ಮೇಟಿ ಸಾಬೀತುಪಡಿಸಿದ್ದಾರೆ. ಉತ್ತರಾಖಂಡದ ಉತ್ತರಕಾಶಿಯಲ್ಲಿರುವ ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಆಯೋಜಿಸಿದ್ದ ಪ್ರತಿಷ್ಠಿತ ಪರ್ವತಾರೋಹಣ ಹಾಗೂ ಸಾಹಸ ಶಿಬಿರದಲ್ಲಿ ಭಾಗವಹಿಸಿದ್ದ ಅವರು 15,500 ಅಡಿ ಎತ್ತರದ ಹುರ್ರಾ ಟಾಪ್ ಶಿಖರವನ್ನು ಯಶಸ್ವಿಯಾಗಿ ಏರಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಗದಗ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಪಸರಿಸಿದ್ದಾರೆ.

ಗದಗದ ಜೆ.ಟಿ. ಕಾಲೇಜಿನ ವಿದ್ಯಾರ್ಥಿನಿ ಹಾಗೂ 38 ಕೆಎಆರ್ ಬಿಎನ್ ಎನ್‌ಸಿಸಿ ಘಟಕದ ಕೆಡೆಟ್ ಆಗಿರುವ ಸೃಷ್ಠಿ, ಶಿಖರದ ತುದಿಯಲ್ಲಿ ಭಾರತದ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸುವ ಮೂಲಕ ತಮ್ಮ ಸಾಹಸ, ದೇಶಭಕ್ತಿ ಹಾಗೂ ಆತ್ಮವಿಶ್ವಾಸವನ್ನು ಅನಾವರಣಗೊಳಿಸಿದ್ದಾರೆ. ಈ ಸಾಧನೆಯ ಮೂಲಕ ಅವರು ತಮ್ಮ ಕಾಲೇಜು, ಕೆಎಲ್‌ಇ ಸಂಸ್ಥೆ, ಗದಗ ಜಿಲ್ಲೆ ಹಾಗೂ ಜಕ್ಕಲಿ ಗ್ರಾಮದ ಕೀರ್ತಿಯನ್ನು ಎತ್ತಿಹಿಡಿದಿದ್ದಾರೆ.

ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ ಎನ್‌ಸಿಸಿ ಕೆಡೆಟ್‌ಗಳೊಂದಿಗೆ ನಡೆದ ಈ ವಿಶೇಷ ಶಿಬಿರದಲ್ಲಿ ಪರ್ವತಾರೋಹಣ, ಟ್ರೆಕ್ಕಿಂಗ್, ಸಾಹಸ ಕ್ರೀಡೆಗಳು, ಪ್ರತಿಕೂಲ ಪರಿಸ್ಥಿತಿಗಳಲ್ಲಿ ಬದುಕುವ ಕೌಶಲ, ನಾಯಕತ್ವ ಗುಣಗಳ ವಿಕಾಸ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದ ತರಬೇತಿಗಳನ್ನು ನೀಡಲಾಯಿತು. ಈ ಎಲ್ಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ ಸೃಷ್ಠಿ ತಮ್ಮ ಶಿಸ್ತು, ಪರಿಶ್ರಮ ಹಾಗೂ ದೃಢ ಸಂಕಲ್ಪದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಪರ್ವತಾರೋಹಣವು ಕೇವಲ ದೈಹಿಕ ಸಾಮರ್ಥ್ಯದ ಪರೀಕ್ಷೆಯಲ್ಲ, ಮಾನಸಿಕ ದೃಢತೆ, ತಾಳ್ಮೆ, ಧೈರ್ಯ ಹಾಗೂ ಗುರಿ ಸಾಧಿಸುವ ಛಲದ ಪ್ರತೀಕವಾಗಿದೆ. ಇಂತಹ ಸವಾಲಿನ ಪರಿಸ್ಥಿತಿಯಲ್ಲೂ ಶಿಖರವನ್ನು ಯಶಸ್ವಿಯಾಗಿ ಏರಿ ತ್ರಿವರ್ಣ ಧ್ವಜ ಹಾರಿಸಿರುವ ಸೃಷ್ಠಿ ಅವರ ಸಾಧನೆ ಯುವಜನತೆಗೆ ಸ್ಪೂರ್ತಿದಾಯಕವಾಗಿದೆ.

ಸೃಷ್ಠಿ ಅವರ ಸಾಧನೆಗೆ ಪೋಷಕರಾದ ಉಮೇಶ್ ಮೇಟಿ ಹಾಗೂ ಕುಟುಂಬದವರ ನಿರಂತರ ಪ್ರೋತ್ಸಾಹವೂ ಪ್ರಮುಖ ಕಾರಣವಾಗಿದೆ. ಅವರ ಯಶಸ್ಸಿನಿಂದ ಗ್ರಾಮಸ್ಥರು, ಸ್ನೇಹಿತರು, ಶಿಕ್ಷಕರು ಹಾಗೂ ಶಿಕ್ಷಣ ಕ್ಷೇತ್ರದ ಗಣ್ಯರಲ್ಲಿ ಹರ್ಷ ವ್ಯಕ್ತವಾಗಿದೆ.

ಈ ಅಪೂರ್ವ ಸಾಧನೆಗಾಗಿ ಜೆ.ಟಿ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಎನ್‌ಸಿಸಿ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಶಿಖರಗಳನ್ನು ಏರಿ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದ್ದಾರೆ.

“ಹುರ್ರಾ ಟಾಪ್ ಶಿಖರದ ಮೇಲೆ ತ್ರಿವರ್ಣ ಧ್ವಜ ಹಾರಿಸಿರುವುದು ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣ. ಈ ಸಾಧನೆಯನ್ನು ದೇಶ, ಜಿಲ್ಲೆ ಹಾಗೂ ನನ್ನ ಗ್ರಾಮದ ಜನತೆಗೆ ಅರ್ಪಿಸುತ್ತೇನೆ.”

ಸೃಷ್ಠಿ ಉಮೇಶ್ ಮೇಟಿ

ಮಳೆರಾಯನ ಕೃಪೆಗೆ ಧರ್ಮಾಪೂರ ಬಸವಣ್ಣನಿಗೆ ಪರವು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮುಂಗಾರು ಮಳೆ ಕೈಕೊಟ್ಟು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಪಟ್ಟಣದ ಹಳ್ಳದಕೇರಿ ಓಣಿಯ ಭಕ್ತರು ಧರ್ಮಾಪೂರ ಬಸವಣ್ಣನಿಗೆ ವಿಶೇಷ ಪೂಜೆ ಹಾಗೂ ಪರವು ನಡೆಸಿ ಮಳೆಗಾಗಿ ಪ್ರಾರ್ಥಿಸಿದರು.

ಮಳೆ ಕೊರತೆಯ ಸಂದರ್ಭದಲ್ಲಿ ಧರ್ಮಾಪೂರ ಬಸವಣ್ಣನಿಗೆ ಪೂಜೆ ಸಲ್ಲಿಸಿದರೆ ಉತ್ತಮ ಮಳೆಯಾಗುತ್ತದೆ ಎಂಬ ನಂಬಿಕೆ ಈ ಭಾಗದಲ್ಲಿ ತಲೆಮಾರಿನಿಂದಲೂ ನಡೆದುಕೊಂಡು ಬಂದಿದೆ. ಇದೇ ಹಿನ್ನೆಲೆಯಲ್ಲಿ ಸೋಮವಾರ ಹಳ್ಳದಕೇರಿ ಓಣಿಯ ಸಣ್ಣ ದ್ಯಾಮವ್ವ ದೇವಸ್ಥಾನದಿಂದ ಧರ್ಮಾಪೂರ ಬಸವಣ್ಣನ ಭಾವಚಿತ್ರವನ್ನು ಬಂಡಿಯಲ್ಲಿ ಪ್ರತಿಷ್ಠಾಪಿಸಿ ಭವ್ಯ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಹತ್ತಾರು ಜೋಡೆತ್ತುಗಳು, ಭಜನಾ ಮಂಡಳಿಗಳು, ಡೊಳ್ಳು-ವಾದ್ಯಗಳು ಹಾಗೂ ನೂರಾರು ಮಹಿಳೆಯರು ಆರತಿ ಮತ್ತು ಪೂರ್ಣಕುಂಭಗಳೊಂದಿಗೆ ಭಾಗವಹಿಸಿ ಧಾರ್ಮಿಕ ಸಂಭ್ರಮ ಹೆಚ್ಚಿಸಿದರು.

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ. ಚಂದ್ರು ಲಮಾಣಿ, ರಾಜ್ಯಾದ್ಯಂತ ರೈತರು ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದರೂ ಮಳೆ ಅಭಾವದಿಂದ ಬೆಳೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಮತ್ತು ಸಾರ್ವಜನಿಕರು ಭಗವಂತನ ಮೊರೆ ಹೋಗಿದ್ದು, ಮಳೆರಾಯ ಕೃಪೆ ತೋರಿ ಉತ್ತಮ ಮಳೆಯಾಗಲಿ ಎಂದು ಆಶಿಸಿದರು.

ಹಳ್ಳದಕೇರಿ ಭಕ್ತವೃಂದವು ಹಲವು ವರ್ಷಗಳಿಂದ ಧರ್ಮಾಪೂರ ಬಸವಣ್ಣನಿಗೆ ಪರವು ನಡೆಸುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದೆ. ಜನರ ಪ್ರಾರ್ಥನೆ ಫಲಿಸಿ ಉತ್ತಮ ಮಳೆ ಹಾಗೂ ಸಮೃದ್ಧ ಬೆಳೆ ದೊರೆಯಲಿ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮಾಪೂರ ಬಸವಣ್ಣ ಪರವು ಸಮಿತಿ ಸದಸ್ಯರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

“ಮಳೆ ಇಲ್ಲದ ಸಂದರ್ಭದಲ್ಲಿ ಧರ್ಮಾಪೂರ ಬಸವಣ್ಣನಿಗೆ ಪರವು ನಡೆಸುವ ಸಂಪ್ರದಾಯ ಜನರ ಭಕ್ತಿ ಮತ್ತು ನಂಬಿಕೆಯ ಪ್ರತೀಕವಾಗಿದೆ. ರೈತರ ಪ್ರಾರ್ಥನೆಗೆ ಮಳೆರಾಯ ಶೀಘ್ರ ಸ್ಪಂದಿಸಲಿ.”

ಡಾ. ಚಂದ್ರು ಲಮಾಣಿ, ಶಾಸಕ

ಠಾಣೆಯಲ್ಲೇ ವೃದ್ಧ ಸಾವು: ಪೊಲೀಸರಿಂದ ಹಲ್ಲೆ ಆರೋಪ? ಎಎಸ್ಐ ವಿರುದ್ಧ ಕುಟುಂಬಸ್ಥರ ಆಕ್ರೋಶ!

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆದೊಯ್ಯಲಾಗಿದ್ದ ವೃದ್ಧನೊಬ್ಬ ಮೃತಪಟ್ಟಿರುವ ಘಟನೆ ನಡೆದಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕರಿಕಲ್ ಗ್ರಾಮದ 70 ವರ್ಷದ ರಾಜೇಸಾಬ್ ವಾಲಿಕಾರ್ ಮೃತ ವ್ಯಕ್ತಿ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಬಂದಿದ್ದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ನಾರಾಯಣಪುರ ಠಾಣೆಗೆ ವಿಚಾರಣೆಗೆ ಕರೆಸಿಕೊಂಡಿದ್ದರು ಎನ್ನಲಾಗಿದೆ.

ವಿಚಾರಣೆ ವೇಳೆ ಎಎಸ್ಐ ಸಂಗಪ್ಪ ಅವರು ಹಲ್ಲೆ ನಡೆಸಿದ್ದರಿಂದ ರಾಜೇಸಾಬ್ ಕುಸಿದು ಬಿದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಳಿಕ ಪೊಲೀಸರು ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಹಾಗೂ ಠಾಣೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸಂಬಂಧಿಕರು ಹಾಗೂ ಗ್ರಾಮಸ್ಥರು ಎಎಸ್ಐ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದ್ದು, ಮೃತನ ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ವರದಿಯ ಬಳಿಕವೇ ತಿಳಿಯಲಿದೆ.

ಕಾಫಿ ಕುಡಿಯುವ ಸಮಯವೂ ಮುಖ್ಯ; ಈ ಹೊತ್ತಲ್ಲಿ ಸೇವಿಸಿದರೆ ಹೆಚ್ಚು ಲಾಭ!

0

ಕಾಫಿ ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳಲ್ಲಿ ಒಂದಾಗಿದೆ.

ಅನೇಕರು ದಿನದ ಆರಂಭವನ್ನು ಒಂದು ಕಪ್ ಸ್ಟ್ರಾಂಗ್ ಕಾಫಿಯೊಂದಿಗೆ ಮಾಡುತ್ತಾರೆ. ಆದರೆ ಕಾಫಿ ಸೇವನೆಯಿಂದ ಸಂಪೂರ್ಣ ಪ್ರಯೋಜನ ಪಡೆಯಬೇಕಾದರೆ ಅದನ್ನು ಸರಿಯಾದ ಸಮಯದಲ್ಲಿ ಕುಡಿಯುವುದು ಮುಖ್ಯ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಕಾಫಿ ಕುಡಿಯಲು ಯಾವ ಸಮಯ ಉತ್ತಮ?

ತಜ್ಞರ ಪ್ರಕಾರ ಬೆಳಿಗ್ಗೆ 9:30 ರಿಂದ 11:30 ಗಂಟೆಯ ನಡುವಿನ ಅವಧಿ ಕಾಫಿ ಕುಡಿಯಲು ಅತ್ಯುತ್ತಮ ಸಮಯವಾಗಿದೆ. ಈ ವೇಳೆ ದೇಹದಲ್ಲಿನ ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಕಡಿಮೆಯಾಗಿರುತ್ತದೆ. ಈ ಸಮಯದಲ್ಲಿ ಕಾಫಿ ಸೇವಿಸಿದರೆ ದೇಹಕ್ಕೆ ಹೆಚ್ಚಿನ ಚೈತನ್ಯ ದೊರೆಯುವುದರ ಜೊತೆಗೆ ಮೆದುಳು ಚುರುಕಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ.

ಇದೇ ರೀತಿ ಮಧ್ಯಾಹ್ನ 2ರಿಂದ 4 ಗಂಟೆಯ ನಡುವೆಯೂ ಕಾಫಿ ಸೇವಿಸಬಹುದು. ಇದು ಮಧ್ಯಾಹ್ನದ ಆಲಸ್ಯವನ್ನು ದೂರ ಮಾಡಿ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಖಾಲಿ ಹೊಟ್ಟೆಯಲ್ಲಿ ಕಾಫಿ ಸೇವನೆ ಬೇಡ:

ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಇದು ದೇಹದಲ್ಲಿನ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುವುದರ ಜೊತೆಗೆ ಆಮ್ಲೀಯತೆ, ಹೊಟ್ಟೆ ಉರಿ, ಮಲಬದ್ಧತೆ ಸೇರಿದಂತೆ ಹಲವು ಜೀರ್ಣಕ್ರಿಯೆ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಸಂಜೆ ತಡವಾಗಿ ಕಾಫಿ ಕುಡಿಯುವುದು ಸೂಕ್ತವಲ್ಲ:

ಸಂಜೆ 4 ಗಂಟೆಯ ನಂತರ ಕಾಫಿ ಸೇವಿಸುವುದನ್ನು ಸಾಧ್ಯವಾದಷ್ಟು ತಪ್ಪಿಸುವುದು ಉತ್ತಮ. ಕಾಫಿಯಲ್ಲಿರುವ ಕೆಫೀನ್ ದೇಹದಲ್ಲಿ 6 ರಿಂದ 8 ಗಂಟೆಗಳವರೆಗೆ ಪರಿಣಾಮ ಬೀರುವ ಕಾರಣ ರಾತ್ರಿ ನಿದ್ರೆಗೆ ತೊಂದರೆ ಉಂಟಾಗಬಹುದು. ಜೊತೆಗೆ ಹಸಿವಿನ ಮೇಲೂ ಪರಿಣಾಮ ಬೀರಬಹುದು.

ಮಿತವಾದ ಕಾಫಿ ಸೇವನೆಯ ಪ್ರಯೋಜನಗಳು:

  • ಮೆದುಳಿನ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಆಯಾಸವನ್ನು ಕಡಿಮೆ ಮಾಡಿ ಚೈತನ್ಯ ನೀಡುತ್ತದೆ.
  • ಮನಸ್ಥಿತಿಯನ್ನು ಸುಧಾರಿಸಲು ಸಹಕಾರಿಯಾಗುತ್ತದೆ.
  • ಖಿನ್ನತೆಯನ್ನು ನಿಯಂತ್ರಿಸಲು ನೆರವಾಗುತ್ತದೆ.
  • ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಕಾರಿ.
  • ಅಲ್ಝೈಮರ್ ಕಾಯಿಲೆಯ ಅಪಾಯವನ್ನು ತಗ್ಗಿಸಬಹುದು ಎಂದು ಕೆಲವು ಅಧ್ಯಯನಗಳು ಸೂಚಿಸಿವೆ.
  • ಕಾಫಿಯಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹದ ಆರೋಗ್ಯ ರಕ್ಷಣೆಗೆ ನೆರವಾಗುತ್ತವೆ.
  • ತೂಕ ನಿಯಂತ್ರಣಕ್ಕೆ ಸಹಕಾರಿ.
  • ಟೈಪ್-2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುವಲ್ಲಿ ನೆರವಾಗಬಹುದು.

ಆದರೆ ಯಾವುದೇ ಆಹಾರ ಅಥವಾ ಪಾನೀಯದಂತೆ ಕಾಫಿಯನ್ನೂ ಹಿತಮಿತವಾಗಿ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮುಖ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

error: Content is protected !!