ಗದಗ: ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದಲ್ಲಿ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಮಾಡಿದ್ದ ಆರೋಪಕ್ಕೆ ಮಠದ ಟ್ರಸ್ಟಿಗಳು ತೀವ್ರ ತಿರುಗೇಟು ನೀಡಿದ್ದಾರೆ. ಜೀವ ಬೆದರಿಕೆ ಆರೋಪವನ್ನು ಸಂಪೂರ್ಣ ತಳ್ಳಿಹಾಕಿರುವ ಟ್ರಸ್ಟಿಗಳು, ಪೀಠಾಧಿಪತಿಯವರ ವಿರುದ್ಧವೇ ಜಮೀನು ಮಾರಾಟ, ಲಕ್ಷಾಂತರ ರೂಪಾಯಿ ಹಣ ದುರುಪಯೋಗ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ಬಹಿರಂಗಪಡಿಸಿದ್ದಾರೆ.
ಟ್ರಸ್ಟಿಗಳಾದ ವಸಂತಗೌಡ, ಶಿವರುದ್ರಪ್ಪ ಇಟಗಿ ಹಾಗೂ ಪ್ರಕಾಶ್ ಬಸರಿಗಿಡದ ಮಾತನಾಡಿ, ನಾವು ಗೂಂಡಾಗಳಲ್ಲ, ರೌಡಿಗಳಲ್ಲ. ನಾಲ್ಕು ದಶಕಗಳಿಂದ ಮಠಕ್ಕೆ ಸೇವೆ ಸಲ್ಲಿಸಿರುವ ಭಕ್ತರು. ಶ್ರೀಗಳು ಯಾರದ್ದೋ ಒತ್ತಡಕ್ಕೆ ಒಳಗಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಟ್ರಸ್ಟಿ ಶಿವರುದ್ರಪ್ಪ ಇಟಗಿ, ನಾನು ಶ್ರೀಗಳಿಂದ 10 ಲಕ್ಷ ರೂಪಾಯಿ ಹಣ ಕೇಳಿಲ್ಲ. ಬದಲಿಗೆ ನಾನೇ ಮಠಕ್ಕೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದೇನೆ. ಮಠದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ನನ್ನ ಧ್ವನಿ ಅಡಗಿಸುವ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದೆ ಪೀಠಾಧಿಪತಿ ಕಲ್ಲಯ್ಯಜ್ಜನವರು, ತಾವು ಅಧಿಕಾರ ವಹಿಸಿಕೊಂಡಾಗ ಮಠಕ್ಕೆ 59 ಲಕ್ಷ ರೂಪಾಯಿ ಸಾಲವಿತ್ತು. ಅದನ್ನು ತೀರಿಸಿ ನಾಲ್ಕು ಕೋಟಿ ರೂಪಾಯಿ ಬ್ಯಾಂಕ್ ಠೇವಣಿ ನಿರ್ಮಿಸಿದ್ದೇನೆ. ಮಠದ ಪ್ರತಿಯೊಂದು ರೂಪಾಯಿಗೂ ಲೆಕ್ಕವಿದ್ದರೂ ಟ್ರಸ್ಟಿಗಳು ಅಪಪ್ರಚಾರ ನಡೆಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಸ್ಟಿಗಳು, ಮಠದ ಶಿಕ್ಷಣ ಸಂಸ್ಥೆಗೆ ಸೇರಿದ 11 ಗುಂಟೆ ಬೆಲೆಬಾಳುವ ಜಮೀನನ್ನು ಶ್ರೀಗಳೇ ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಸಂಸ್ಥೆಯ ಲಕ್ಷಾಂತರ ರೂಪಾಯಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ಕುರಿತು ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸತ್ಯ ಸಾಬೀತುಪಡಿಸಲು ಗದ್ದಿಗೆ ಮುಟ್ಟಿ ಆಣೆ ಮಾಡಲು ಸಿದ್ಧ ಎಂದು ತಿಳಿಸಿದ್ದಾರೆ.
ಟ್ರಸ್ಟಿ ಪ್ರಕಾಶ್ ಬಸರಿಗಿಡದ ಮಾತನಾಡಿ, ನಮ್ಮ ಕುಟುಂಬವೇ ಮಠಕ್ಕೆ ಜಮೀನು ದಾನ ಮಾಡಿದೆ. ನಮ್ಮ ಅಜ್ಜನ ಗದ್ದುಗೆ ಬಳಿ ಬಾವಿ ನಿರ್ಮಿಸಲು ಯತ್ನಿಸಿದ್ದನ್ನು ವಿರೋಧಿಸಿದ್ದಕ್ಕೆ ನಮ್ಮ ವಿರುದ್ಧ ದೂರು ನೀಡಲಾಗಿದೆ. ವಾಸ್ತವವಾಗಿ ಶ್ರೀಗಳಿಂದಲೇ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದಾರೆ.
ಪೀಠಾಧಿಪತಿ ಮತ್ತು ಟ್ರಸ್ಟಿಗಳ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ವೀರೇಶ್ವರ ಮಠದ ಆಡಳಿತ ವಿವಾದ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ.

