Home Blog

ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೆಂಗಳೂರು–ಮೈಸೂರುವರೆಗೆ ಹರಡಿದ್ದ ಖೋಟಾ ನೋಟಿನ ಜಾಲ ಪತ್ತೆ

ತುಮಕೂರು: ಸಿನಿಮಾ ಕಥೆ ಹಾಗೂ ಕ್ರೈಂ ವೆಬ್‌ಸೀರಿಸ್‌ಗಳನ್ನೂ ಮೀರಿಸುವ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಹರಡಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿದ್ದಾರೆ.

ಕೇವಲ ಒಂದೇ ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವನ್ನು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಕಲಿ ನೋಟುಗಳ ಮುದ್ರಣ, ಮಾರಾಟ ಹಾಗೂ ಚಲಾವಣೆಯ ವ್ಯವಸ್ಥಿತ ಜಾಲವನ್ನು ಪತ್ತೆಹಚ್ಚಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 500 ರೂಪಾಯಿ ಮುಖಬೆಲೆಯ 60ಕ್ಕೂ ಹೆಚ್ಚು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಒಂದು ನೋಟಿನಿಂದ ಆರಂಭವಾದ ತನಿಖೆ:

ಹುಳಿಯಾರು ಪಟ್ಟಣದ ಅಂಗಡಿಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸಿಗರೇಟ್ ಖರೀದಿಸಿ 500 ರೂಪಾಯಿ ನಕಲಿ ನೋಟು ನೀಡಿ ತೆರಳಿದ್ದರು. ನೋಟಿನ ಬಗ್ಗೆ ಅನುಮಾನಗೊಂಡ ಅಂಗಡಿ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಪೊಲೀಸರು ತನಿಖೆ ಆರಂಭಿಸಿದರು. ಒಂದು ನಕಲಿ ನೋಟಿನ ಸುಳಿವನ್ನು ಬೆನ್ನತ್ತಿದ ಪೊಲೀಸರು, ಅದರ ಮೂಲವನ್ನು ಪತ್ತೆಹಚ್ಚಲು ವಿವಿಧ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದರು.

ತನಿಖೆ ಮುಂದುವರಿದಂತೆ ನಕಲಿ ನೋಟುಗಳ ತಯಾರಿಕೆ, ಮಾರಾಟ ಮತ್ತು ಸಾರ್ವಜನಿಕರ ನಡುವೆ ಚಲಾವಣೆ ಮಾಡುವ ಪ್ರತ್ಯೇಕ ವ್ಯವಸ್ಥೆಯೇ ಇರುವುದು ಪೊಲೀಸರ ಗಮನಕ್ಕೆ ಬಂದಿದೆ.

ನಕಲಿ ನೋಟು ಜಾಲ ಹೇಗೆ ಕಾರ್ಯನಿರ್ವಹಿಸುತ್ತಿತ್ತು?

ಪೊಲೀಸರ ತನಿಖೆಯಲ್ಲಿ ಬೆಂಗಳೂರಿನ ರುದ್ರೇಶ್ ಎಂಬಾತ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಮೈಸೂರಿನ ರವಿ ನಕಲಿ ನೋಟುಗಳನ್ನು ಮಾರಾಟ ಮಾಡುವ ಜವಾಬ್ದಾರಿ ವಹಿಸಿದ್ದ ಎನ್ನಲಾಗಿದೆ.

ಅನಂತಪುರದ ಕುಬೇರಪ್ಪ ಹಾಗೂ ಹನುಮಂತಪ್ಪ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ಇವರಿಂದ ನಕಲಿ ನೋಟುಗಳನ್ನು ಪಡೆದುಕೊಳ್ಳುತ್ತಿದ್ದ ವೆಂಕಟೇಶ್ ಮತ್ತು ತಿಲಕ್ ಕುಮಾರ್ ಅವುಗಳನ್ನು ಸಾರ್ವಜನಿಕರ ನಡುವೆ ಚಲಾವಣೆ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

60ಕ್ಕೂ ಹೆಚ್ಚು ನಕಲಿ ನೋಟು ವಶ

ಬಂಧಿತರಿಂದ 500 ರೂಪಾಯಿ ಮುಖಬೆಲೆಯ 60ಕ್ಕೂ ಹೆಚ್ಚು ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ನಕಲಿ ನೋಟುಗಳ ಮುದ್ರಣಕ್ಕೆ ಬಳಸುತ್ತಿದ್ದ ವಸ್ತುಗಳು ಹಾಗೂ ಇತರ ದಾಖಲೆಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಈ ಜಾಲ ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸಿರುವ ಸಾಧ್ಯತೆ ಇದ್ದು, ಇನ್ನಷ್ಟು ಮಂದಿ ಆರೋಪಿಗಳು ಭಾಗಿಯಾಗಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ದೊಡ್ಡ ಜಾಲದ ಬೇರು ಪತ್ತೆಗೆ ತನಿಖೆ ಚುರುಕು

ನಕಲಿ ನೋಟುಗಳ ಜಾಲದ ಹಿಂದೆ ಇರುವ ಪ್ರಮುಖ ವ್ಯಕ್ತಿಗಳು ಹಾಗೂ ಹಣಕಾಸಿನ ವ್ಯವಹಾರಗಳ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಬಂಧಿತರ ವಿಚಾರಣೆ ಮೂಲಕ ಜಾಲದ ಸಂಪೂರ್ಣ ಮಾಹಿತಿ ಕಲೆಹಾಕಲಾಗುತ್ತಿದೆ.

ಒಂದು ಸಣ್ಣ ಸುಳಿವಿನಿಂದ ಆರಂಭವಾದ ತನಿಖೆ, ರಾಜ್ಯಮಟ್ಟದ ಖೋಟಾ ನೋಟು ಜಾಲವನ್ನು ಬಯಲಿಗೆಳೆದಿರುವುದು ಪೊಲೀಸರ ಕಾರ್ಯಾಚರಣೆಯ ಮಹತ್ವವನ್ನು ತೋರಿಸಿದೆ.

ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಕಂಟೈನರ್: ದೊಡ್ಡ ದುರಂತ ತಪ್ಪಿದ್ದು ಹೇಗೆ?

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ–ನೆಲಮಂಗಲ ರಸ್ತೆ ಅಪಘಾತಗಳ ತಾಣವಾಗುತ್ತಿದ್ದು, ಒಂದೇ ವಾರದಲ್ಲಿ ಮೂರನೇ ಅಪಘಾತ ಸಂಭವಿಸಿದೆ.

ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮದುರೆಯಲ್ಲಿ ಕಂಟೈನರ್ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಘಟನೆ ನಡೆದಿದೆ.

ಶನಿಮಹಾತ್ಮ ದೇವಾಲಯದ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಕಂಟೈನರ್ ಲಾರಿ ಮೊದಲು ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ರಸ್ತೆ ಬದಿಯ ಮೂರು ಅಂಗಡಿಗಳಿಗೆ ನುಗ್ಗಿದೆ.

ಡಿಕ್ಕಿಯ ರಭಸಕ್ಕೆ ಮೂರು ಅಂಗಡಿಗಳು ಹಾನಿಗೊಳಗಾಗಿವೆ. ಆದರೆ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಂಗಡಿಗಳನ್ನು ಮುಚ್ಚಿದ್ದರಿಂದ ದೊಡ್ಡ ದುರಂತ ತಪ್ಪಿದೆ.

ಸ್ಥಳೀಯರ ಪ್ರಕಾರ, ಈ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿವೆ. ವಾಹನಗಳ ಅತಿವೇಗವೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ. ಅಪಘಾತ ತಡೆಯಲು ರಸ್ತೆಯಲ್ಲಿ ಹಂಪ್‌ಗಳನ್ನು ಅಳವಡಿಸುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Rain Alert Karnataka: ರಾಜ್ಯದಲ್ಲಿ ಇಂದು ಮುಂಗಾರು ಅಬ್ಬರ! ಎಲ್ಲೆಲ್ಲಿ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಭಾಗಗಳಲ್ಲಿ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಬೆಂಗಳೂರು, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಜುಲೈ 11ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ರಮೇಣ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ವಿಶೇಷವಾಗಿ ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವ ನಿರೀಕ್ಷೆಯಿದೆ.

ಭಾರೀ ಮಳೆಯಾಗುವ ಪ್ರದೇಶಗಳಲ್ಲಿ ತಗ್ಗು ಪ್ರದೇಶದ ನಿವಾಸಿಗಳು, ನದಿ ತೀರದ ಜನರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

ಕರ್ನಾಟಕದಲ್ಲಿ ಮಲಿನ ನದಿಗಳ ಸಂಖ್ಯೆ 14ಕ್ಕೆ ಏರಿಕೆ: ಅರ್ಕಾವತಿ ಅತ್ಯಂತ ಕಲುಷಿತ ನದಿ!

ಬೆಂಗಳೂರು: ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ಉತ್ಪತ್ತಿಯಾಗುತ್ತಿರುವ ಕೊಳಚೆ ನೀರು ವ್ಯಾಪಕ ಪ್ರಮಾಣದಲ್ಲಿ ಜಲಮೂಲಗಳಿಗೆ ಸೇರುತ್ತಿರುವ ಪರಿಣಾಮ ಕರ್ನಾಟಕದಲ್ಲಿ ಕಲುಷಿತ ನದಿಗಳ ಸಂಖ್ಯೆ 12ರಿಂದ 14ಕ್ಕೆ ಏರಿಕೆಯಾಗಿದೆ.

ಜಲಮೂಲಗಳ ಮಾಲಿನ್ಯ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (NGT) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸಲ್ಲಿಸಿರುವ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ವರದಿ ಪ್ರಕಾರ, ರಾಜ್ಯದ ನಗರ ಪ್ರದೇಶಗಳಲ್ಲಿ ಪ್ರತಿದಿನ 3,356 ದಶಲಕ್ಷ ಲೀಟರ್ ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ಈ ಪೈಕಿ 43 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ (STP) ಮೂಲಕ 621 ದಶಲಕ್ಷ ಲೀಟರ್ ನೀರನ್ನು ಮಾತ್ರ ಸಂಸ್ಕರಿಸಲಾಗುತ್ತಿದೆ. ಉಳಿದ ಕೊಳಚೆ ನೀರು ಸಂಸ್ಕರಣೆಯಾಗದೆ ನೇರವಾಗಿ ನದಿಗಳು ಹಾಗೂ ಇತರ ಜಲಮೂಲಗಳಿಗೆ ಸೇರುತ್ತಿದ್ದು, ಮಾಲಿನ್ಯದ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ.

ಮಂಡಳಿಯ ವರದಿಯಲ್ಲಿ ಅರ್ಕಾವತಿ ನದಿಯನ್ನು ರಾಜ್ಯದಲ್ಲೇ ಅತ್ಯಂತ ಕಲುಷಿತ ನದಿಯಾಗಿ ಗುರುತಿಸಲಾಗಿದೆ. ಹೆಸರಘಟ್ಟದಿಂದ ಕನಕಪುರದವರೆಗಿನ ಅರ್ಕಾವತಿ ನದಿಯ ಹರಿವಿನ ಪ್ರದೇಶ ತೀವ್ರ ಮಾಲಿನ್ಯಕ್ಕೊಳಗಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ ತುಂಗಭದ್ರಾ, ಭದ್ರಾ, ಶಿಂಶಾ, ಲಕ್ಷ್ಮಣತೀರ್ಥ, ಕಾವೇರಿ, ಕಬಿನಿ, ಕಾಗಿಣಾ, ಕೃಷ್ಣಾ, ಭೀಮಾ, ತುಂಗಾ, ದಕ್ಷಿಣ ಪಿನಾಕಿನಿ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ವಿವಿಧ ಭಾಗಗಳೂ ಕಲುಷಿತ ನದಿಗಳ ಪಟ್ಟಿಯಲ್ಲಿ ಸೇರಿವೆ.

ಜಲಮೂಲಗಳ ಸಂರಕ್ಷಣೆಗಾಗಿ ಕೊಳಚೆ ನೀರಿನ ಸಮರ್ಪಕ ಸಂಸ್ಕರಣೆ, ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದ ಸರ್ಕಾರಕ್ಕೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಗದಗ: ಮಳೆಯ ಕೊರತೆಯಿಂದ ಗದಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 2026-27ನೇ ಸಾಲಿನ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾ ಘಟಕವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಧ್ಯಕ್ಷ ಶಂಕರಗೌಡ ಮ. ಜಯನಗೌಡ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದ ಕಾರಣ ರೈತರು ಬಿತ್ತಿದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಹಾಗೂ ಹೊಟ್ಟು ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆ ತೆರೆಯಬೇಕು ಹಾಗೂ ಮೇವಿನ ಬ್ಯಾಂಕ್‌ಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಬರಗಾಲದಿಂದ ರೈತರು ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಕ್ಷಣವೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.

2025-26ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ ರೈತರಿಗೆ ಇದುವರೆಗೆ ಬೆಳೆವಿಮೆ ಪರಿಹಾರ ದೊರೆತಿಲ್ಲ. ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಹಾಗೂ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಬಾಕಿ ಇರುವ ಬೆಳೆವಿಮೆ ಮಂಜೂರು ಮಾಡಬೇಕು. ಜೊತೆಗೆ 2026-27ನೇ ಸಾಲಿನ ಬೆಳೆಹಾನಿ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಿ ರೈತರ ಸಾಲಮನ್ನಾ ಘೋಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಸಂಜೀವ ಹುಡೇದ, ರವಿ ವಗ್ಗನವರ, ವೀರಯ್ಯಸ್ವಾಮಿ ಹಿರೇಮಠ, ಈರಪ್ಪ ಸಿದ್ನೆಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಮಳೆ ಇಲ್ಲದೆ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆವಿಮೆ ಹಾಗೂ ಪರಿಹಾರವನ್ನು ಬಿಡುಗಡೆ ಮಾಡಬೇಕು.”

— ಶಂಕರಗೌಡ ಮ. ಜಯನಗೌಡ್ರ, ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

ಎಂಜಿಆರ್‌ಪಿಆರ್ ವಿಶ್ವವಿದ್ಯಾಲಯಕ್ಕೆ ಕುಲಪತಿಗಳಾಗಿ ಪ್ರೊ. ಡಾ. ನಾಡಗೌಡರ ಅಧಿಕಾರ ಸ್ವೀಕಾರ

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ತಾವರಚಂದ್ ಗೆಹ್ಲೋಟ್ ಅವರು ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರನ್ನು ಕುಲಪತಿಯಾಗಿ ನೇಮಕ ಮಾಡಿದ್ದು, ಗುರುವಾರ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಈ ನೇಮಕ ತಮ್ಮ ಜೀವನದ ಅತ್ಯುನ್ನತ ಗೌರವ ಹಾಗೂ ಮಹತ್ತರ ಜವಾಬ್ದಾರಿಯಾಗಿದ್ದು, ವಿಶ್ವವಿದ್ಯಾಲಯವನ್ನು ಶೈಕ್ಷಣಿಕ ಶ್ರೇಷ್ಠತೆ, ಗುಣಮಟ್ಟದ ಸಂಶೋಧನೆ, ನವೋದ್ಯಮ, ವಿಸ್ತರಣಾ ಚಟುವಟಿಕೆಗಳು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಆದರ್ಶ ಸಂಸ್ಥೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಸಂಸ್ಥಾಪಕ ಕುಲಸಚಿವ ಹಾಗೂ ಪ್ರಭಾರ ಕುಲಪತಿಯಾಗಿ ಸೇವೆ ಸಲ್ಲಿಸಿರುವ ಅನುಭವದಿಂದ ವಿಶ್ವವಿದ್ಯಾಲಯದ ಧ್ಯೇಯ, ದೃಷ್ಟಿಕೋನ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಸಮಗ್ರ ಅರಿವು ಹೊಂದಿದ್ದು, ಎಲ್ಲ ಹಿತಾಸಕ್ತಿಪಕ್ಷಗಳ ಸಹಯೋಗದೊಂದಿಗೆ ಸಂಸ್ಥೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಕಾನೂನು ಶಿಕ್ಷಣ ಕ್ಷೇತ್ರದ ಹಿರಿಯ ಪ್ರಾಧ್ಯಾಪಕರಾಗಿದ್ದು, ಬೋಧನೆ, ಸಂಶೋಧನೆ, ಶೈಕ್ಷಣಿಕ ಆಡಳಿತ ಹಾಗೂ ಸಂಸ್ಥಾ ನಿರ್ಮಾಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಹಾಗೂ ಶೈಕ್ಷಣಿಕ ಮಂಡಳಿಗಳ ಸದಸ್ಯರಾಗಿ, ಕರ್ನಾಟಕ ಕಾನೂನು ಆಯೋಗದ ಸದಸ್ಯರಾಗಿ ಸೇರಿದಂತೆ ಹಲವು ಮಹತ್ವದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

ನೂತನ ಕುಲಪತಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ವಿಶ್ವವಿದ್ಯಾಲಯವು ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿ ರಾಷ್ಟ್ರಮಟ್ಟದಲ್ಲಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸವನ್ನು ವಿಶ್ವವಿದ್ಯಾಲಯ ಕುಟುಂಬ ವ್ಯಕ್ತಪಡಿಸಿದೆ.

ಕೆಪಿಎಸ್ ಕಾರ್ಪೊರೇಟೀಕರಣಕ್ಕೆ ತೀವ್ರ ವಿರೋಧ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಹೆಸರಿನಲ್ಲಿ ಸರ್ಕಾರಿ ಶಾಲೆಗಳ ಆಡಳಿತ ಹಾಗೂ ಶಿಕ್ಷಣ ವ್ಯವಸ್ಥೆಗೆ ಕಾರ್ಪೊರೇಟ್ ಹಸ್ತಕ್ಷೇಪಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಇತ್ತೀಚಿನ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಉಳಿಸಿ ರಾಜ್ಯ ಸಮಿತಿ ಹಾಗೂ ಎಐಡಿಎಸ್ಓ ಎಚ್ಚರಿಕೆ ನೀಡಿವೆ.

ಈ ಕುರಿತು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ರಾಜ್ಯ ಸಮಿತಿಯ ಅಧ್ಯಕ್ಷ ಪ್ರೊ. ಎ. ಮುರಿಗೆಪ್ಪ, ಹಿರಿಯ ಚಿಂತಕ ಡಾ. ಕೆ. ಮರುಳಸಿದ್ದಪ್ಪ, ಸಂಸ್ಕೃತಿ ಚಿಂತಕ ಪ್ರೊ. ಎಸ್.ಜಿ. ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಾಗೂ ರಾಜ್ಯ ಸಮಿತಿಯ ಅಧ್ಯಕ್ಷ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ., ಹಿರಿಯ ಸಾಹಿತಿಗಳಾದ ಡಾ. ಮಾಲತಿ ಪಟ್ಟಣಶೆಟ್ಟಿ ಮತ್ತು ಡಾ. ಹೇಮಾ ಪಟ್ಟಣಶೆಟ್ಟಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ, ಹಿರಿಯ ಹೋರಾಟಗಾರ ಎಸ್.ಆರ್. ಹಿರೇಮಠ, ಲೇಖಕಿ ರೂಪ ಹಾಸನ, ಸಾಮಾಜಿಕ ಹೋರಾಟಗಾರ ಉಗ್ರನರಸಿಂಹೇಗೌಡ, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಕಿರಣ ಗಾಜನೂರು, ಹಿರಿಯ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ಎಐಡಿಎಸ್ಓ ರಾಜ್ಯಾಧ್ಯಕ್ಷ ಅಶ್ವಿನಿ ಕೆ.ಎಸ್. ಹಾಗೂ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಸಹಿ ಹಾಕಿದ್ದಾರೆ.

ಜೂನ್ 18, 2026ರಂದು ಹೊರಡಿಸಿರುವ ಸರ್ಕಾರಿ ಆದೇಶದ ಮೂಲಕ ರಾಜ್ಯದ 1,000 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳಾಗಿ ಮೇಲ್ದರ್ಜೆಗೆ ಏರಿಸುವ ನೆಪದಲ್ಲಿ ಕಾರ್ಪೊರೇಟ್ ಕಂಪನಿಗಳಿಗೆ ಶಾಲಾ ಆಡಳಿತ, ಪಠ್ಯಕ್ರಮ ಹಾಗೂ ಬೋಧನಾ ಪ್ರಕ್ರಿಯೆಯಲ್ಲೇ ಹಸ್ತಕ್ಷೇಪಕ್ಕೆ ಅವಕಾಶ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಲಾಗಿದೆ.

ಖಾಸಗಿ ಸಂಸ್ಥೆಗಳಿಗೆ ಶಿಕ್ಷಕರ ನೇಮಕ, ಕೌಶಲ್ಯಾಧಾರಿತ ಪಠ್ಯಕ್ರಮ ರೂಪಿಸುವ ಅಧಿಕಾರ ನೀಡುವುದು, ಸರ್ಕಾರಿ ಶಾಲೆಗಳಲ್ಲಿ ಸಹ-ಬ್ರ್ಯಾಂಡಿಂಗ್‌ಗೆ ಅವಕಾಶ ಕಲ್ಪಿಸುವುದು ಹಾಗೂ ಶಾಲಾ ಆಡಳಿತ ಮಂಡಳಿಯಲ್ಲಿ ಕಾರ್ಪೊರೇಟ್ ಪ್ರತಿನಿಧಿಗಳನ್ನು ಸೇರಿಸುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಮಾರಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸರ್ಕಾರ ಶಿಕ್ಷಣದ ಸಾಂವಿಧಾನಿಕ ಜವಾಬ್ದಾರಿಯಿಂದ ಹಿಂದೆ ಸರಿಯದೆ, ಸಿಎಸ್ಆರ್ ಮಾರ್ಗಸೂಚಿಗಳನ್ನು ತಕ್ಷಣ ಹಿಂಪಡೆಯಬೇಕು. ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸಿ ಶಿಕ್ಷಣ ತಜ್ಞರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಬೇಕು. ಶಿಕ್ಷಣಕ್ಕೆ ಅಗತ್ಯ ಅನುದಾನವನ್ನು ಬಜೆಟ್‌ನಲ್ಲಿಯೇ ಒದಗಿಸಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಲಾಗಿದೆ.

“ಸಾರ್ವಜನಿಕ ಶಿಕ್ಷಣವನ್ನು ಕಾರ್ಪೊರೇಟ್ ಕಂಪನಿಗಳ ವಶಕ್ಕೆ ಒಪ್ಪಿಸುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ. ಸರ್ಕಾರ ಆದೇಶ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ಪ್ರೇಮಿಗಳೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು.”

ಜು.11ಕ್ಕೆ ‘ನಮ್ಮಭಿಮಾನ’ ಸಮಾರಂಭ

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜುಲೈ 11ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮಭಿಮಾನ’ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯಿಂದ ಸಾವಿರಕ್ಕೂ ಹೆಚ್ಚು ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯ ಎಲ್ಲ ತಾಲೂಕುಗಳಿಂದ ಸುಮಾರು 12 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹಲವರು ಖಾಸಗಿ ವಾಹನ ಹಾಗೂ ರೈಲಿನ ಮೂಲಕ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎಂದು ಹೇಳಿದರು.

ಅಭಿನಂದನಾ ಸಮಾರಂಭದಲ್ಲಿ ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ, 8ನೇ ವೇತನ ಆಯೋಗದ ಶಿಫಾರಸುಗಳ ಜಾರಿ, ಕೇಂದ್ರ ಸರ್ಕಾರಿ ನೌಕರರಿಗೆ ದೊರೆಯುವ ವೇತನ ಹಾಗೂ ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ರಾಜ್ಯದ ಸುಮಾರು 10 ಜಿಲ್ಲೆಗಳ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಸನ್ಮಾನಕ್ಕೆ ಪಾತ್ರರಾಗಲಿದ್ದು, ರಾಜ್ಯಾದ್ಯಂತ 11 ಸಾವಿರ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಗದಗ ಜಿಲ್ಲೆಯಿಂದ 148 ವಿದ್ಯಾರ್ಥಿಗಳಿಗೆ ತಲಾ ₹2 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.

ರಾಜ್ಯದ ವಿವಿಧ ಇಲಾಖೆಗಳ ಸಾವಿರಾರು ನೌಕರರು, ಪದಾಧಿಕಾರಿಗಳು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಡಿ.ಎಸ್. ತಳವಾರ, ಎಂ.ಎಂ. ನಿಟ್ಟಾಲಿ, ಸಿದ್ದಪ್ಪ ಲಿಂಗದಾಳ, ರಾಜು ಕಂಟಿಗೊನ್ನನವರ, ಮುತ್ತು ಮಲಕಶೆಟ್ಟಿ, ಸಂಜೀವಕುಮಾರ ಕುಂದಗೋಳ, ಶರಣು ಸಂಗದಾಳ ಹಾಗೂ ಐ.ಎ. ಗಾಡಗೋಳಿ ಉಪಸ್ಥಿತರಿದ್ದರು.

“ಎಸ್‌ಐಆರ್ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಯ ಮೇಲೆ ಅನಗತ್ಯ ಒತ್ತಡ ಬೀಳದಂತೆ ಸರ್ಕಾರ ಹಾಗೂ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯದಿನಗಳನ್ನು ನಿಗದಿಪಡಿಸಬೇಕು. ಕರ್ತವ್ಯಕ್ಕೆ ಅಡ್ಡಿಪಡಿಸುವ ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.”

— ಡಾ. ಬಸವರಾಜ ಬಳ್ಳಾರಿ
ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಗದಗ ಜಿಲ್ಲಾಧ್ಯಕ್ಷರು

ಜು. 12ರಿಂದ ಜಿಲ್ಲಾದ್ಯಂತ ಹಸಿರು ಅಭಿಯಾನ

ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರ ಸಂರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಂಪರೆಯನ್ನು ಉಳಿಸುವ ಉದ್ದೇಶದಿಂದ ರೋಟರಿ ಜಿಲ್ಲಾ 3170 ವತಿಯಿಂದ ಜುಲೈ 12ರಿಂದ 19ರವರೆಗೆ ಜಿಲ್ಲಾದ್ಯಂತ ಬೃಹತ್ ವೃಕ್ಷಾರೋಪಣ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಗದಗ-ಬೆಟಗೇರಿ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರದೀಪ ಉಗಲಾಟ ತಿಳಿಸಿದರು.

ನಗರದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತೋಟಗಾರಿಕೆ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದು ಕೇವಲ ಗಿಡ ನೆಡುವ ಕಾರ್ಯಕ್ರಮವಲ್ಲ; ಪರಿಸರ ಸಂರಕ್ಷಣೆಯನ್ನು ಜನಾಂದೋಲನವಾಗಿಸುವ ಹಾಗೂ ಮುಂದಿನ ಪೀಳಿಗೆಗೆ ಹಸಿರು ಪರಂಪರೆಯನ್ನು ಉಳಿಸುವ ಮಹತ್ವದ ಅಭಿಯಾನವಾಗಿದೆ ಎಂದರು.

“ಒಬ್ಬ ರೋಟೇರಿಯನ್ – ಒಂದು ಮರ – ಒಂದು ಶಾಶ್ವತ ಪರಂಪರೆ” ಎಂಬ ಧ್ಯೇಯದಡಿ ಪ್ರತಿಯೊಬ್ಬ ರೋಟೇರಿಯನ್ ಕನಿಷ್ಠ ಒಂದು ಗಿಡ ನೆಟ್ಟು ಅದರ ಸಂರಕ್ಷಣೆಯ ಹೊಣೆ ಹೊರುವ ಸಂಕಲ್ಪ ಕೈಗೊಂಡಿದ್ದಾರೆ. ಸ್ಥಳೀಯ ಪರಿಸರಕ್ಕೆ ಹೊಂದುವ ದೇಶೀ ಜಾತಿಯ ಸಸಿಗಳಿಗೆ ಆದ್ಯತೆ ನೀಡಲಾಗಿದ್ದು, ಶಾಲೆಗಳು, ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವೃಕ್ಷಾರೋಪಣ ನಡೆಯಲಿದೆ ಎಂದು ಹೇಳಿದರು.

ಗಿಡ ನೆಡುವುದರ ಜೊತೆಗೆ ಅವುಗಳ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ನಿಯಮಿತವಾಗಿ ನೀರುಣಿಸುವುದು, ಬೇಲಿ ಅಳವಡಿಸುವುದು ಹಾಗೂ ನಿರಂತರ ಮೇಲ್ವಿಚಾರಣೆ ನಡೆಸಲಾಗುವುದು. ಪರಿಸರ ಸಂರಕ್ಷಣೆಗಾಗಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು.

ಅಭಿಯಾನದಲ್ಲಿ ರೋಟರಾಕ್ಟ್ ಹಾಗೂ ಇಂಟರಾಕ್ಟ್ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಸರ್ಕಾರಿ ಇಲಾಖೆಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಪರಿಸರ ಪ್ರೇಮಿಗಳು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದು, ಜೀವ ವೈವಿಧ್ಯತೆ ವೃದ್ಧಿ ಮತ್ತು ಹಸಿರು ಪರಿಸರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶೈಲೇಂದ್ರ ಬಿರಾದಾರ, ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಡಾ. ಆನಂದ ನರಸಣ್ಣವರ, ಎಸ್.ಪಿ. ಹಿರೇಮಠ, ಷಣ್ಮುಖಪ್ಪ ಕವಲೂರ ಉಪಸ್ಥಿತರಿದ್ದರು. ಸುರೇಶ ಕುಂಬಾರ ಉಪನ್ಯಾಸ ನೀಡಿದರು. ಕ್ಲಬ್ ಕಾರ್ಯದರ್ಶಿ ಅಕ್ಷಯ ಶೆಟ್ಟಿ ಸ್ವಾಗತಿಸಿ ವಂದಿಸಿದರು.

“ಗಿಡ ನೆಡುವುದಷ್ಟೇ ಸಾಲದು; ಅದನ್ನು ಮರವಾಗಿ ಬೆಳೆಸುವ ಹೊಣೆಗಾರಿಕೆಯೇ ನಿಜವಾದ ಪರಿಸರ ಸೇವೆ.”

— ಡಾ. ಪ್ರದೀಪ ಉಗಲಾಟ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಸಾಹಿತ್ಯದಲ್ಲೇ ಪರಿಹಾರ: ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

ವಿಜಯಸಾಕ್ಷಿ ಸುದ್ದಿ, ಗದಗ: ಜಗತ್ತಿನ ಪ್ರತಿಯೊಂದು ಸಮಸ್ಯೆಗೆ ವಚನಸಾಹಿತ್ಯದಲ್ಲಿಯೇ ಪರಿಹಾರ ಅಡಗಿದ್ದು, ಬಸವಾದಿ ಶಿವಶರಣರ ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳು ವಿಶ್ವಶಾಂತಿಯ ದಾರಿದೀಪವಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.

ನಗರದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘ ಆಯೋಜಿಸಿದ್ದ 2805ನೇ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಬಸವಾದಿ ಶಿವಶರಣರ ವಚನಗಳು ಜಾತಿ, ಮತ, ಪಂಥ, ಮೌಢ್ಯತೆ ಹಾಗೂ ಭೇದಭಾವಗಳನ್ನು ತೊಡೆದುಹಾಕಿ ಮಾನವಕುಲ ಒಂದೇ ಎಂಬ ಸಂದೇಶ ಸಾರುತ್ತವೆ. ಸಹಕಾರ, ಸಹಬಾಳ್ವೆ ಮತ್ತು ಶಾಂತಿಯ ಬದುಕಿಗೆ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕೆಸಿಸಿ ಬ್ಯಾಂಕ್‌ನ ನಿವೃತ್ತ ಅಧಿಕಾರಿಗಳಾದ ಎಸ್.ವಿ. ಪಾಟೀಲ (ಮುಂಡರಗಿ) ಅವರು, ಸಹಕಾರ ಚಳುವಳಿಯ ವಿಶ್ವಮಟ್ಟದ ಬೆಳವಣಿಗೆ, ಭಾರತದಲ್ಲಿ ಅದರ ವಿಸ್ತರಣೆ ಹಾಗೂ ಕರ್ನಾಟಕದ ಇಂದಿನ ಸಹಕಾರ ಕ್ಷೇತ್ರದ ಸ್ಥಿತಿಗತಿಗಳ ಕುರಿತು ವಿವರಿಸಿದರು.

ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಸಂಗಮ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಜಿ.ಎಂ. ಪಲ್ಲೇದ, ಸಹಕಾರ ಎನ್ನುವುದು ಸಮಾಜಕ್ಕಷ್ಟೇ ಅಲ್ಲ, ಮಾನವ ದೇಹದ ಪ್ರತಿಯೊಂದು ಅಂಗದ ಕಾರ್ಯನಿರ್ವಹಣೆಯಲ್ಲೂ ಅಡಗಿದೆ. ಪರಸ್ಪರ ಸಹಕಾರವಿಲ್ಲದಿದ್ದರೆ ಯಾವುದೇ ವ್ಯವಸ್ಥೆ ಸುಗಮವಾಗಿ ಸಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್. ಚೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆಗೈದ ಸ್ವಾತಿ ಕರಮುಡಿ, ವಿರೂಪಾಕ್ಷಪ್ಪ ನವಲಗುಂದ, ಪೂಜಾ ಗುಗ್ಗರಿ ಹಾಗೂ ರೋಹನ್ ಜೋಗಿನ ಅವರನ್ನು ಪ್ರತಿಭಾ ಸನ್ಮಾನ ಮಾಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಚನ ಸಂಗೀತವನ್ನು ಸಾಯಿಪ್ರಸಾದ ಬಡಿಗೇರ ಹಾಗೂ ಗುರುನಾಥ ಸುತಾರ ನಡೆಸಿಕೊಟ್ಟರು. ಧರ್ಮಗ್ರಂಥ ಪಠಣವನ್ನು ಖುಷಿ ಕಟ್ಟೆಕಾರ, ವಚನ ಚಿಂತನವನ್ನು ಕೋಮಲ ಮುಗಳಿ ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಡಾ. ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಕುಟುಂಬ ಹಾಗೂ ಕೊಟ್ರೇಶ ದಾನಪ್ಪ ಮೆಣಸಿನಕಾಯಿ ಕುಟುಂಬ ವಹಿಸಿಕೊಂಡಿದ್ದರು.

ಸಂಘದ ಅಧ್ಯಕ್ಷ ಡಾ. ಉಮೇಶ ಪುರದ, ಶಿವಾನುಭವ ಸಮಿತಿ ಅಧ್ಯಕ್ಷ ರಮೇಶ ಕಲ್ಲನಗೌಡರ, ಉಪಾಧ್ಯಕ್ಷ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಸಿದ್ಧರಾಮ ಪಟ್ಟೇದ, ಪ್ರತಿಭಾ ಬಡ್ನಿ, ವೀರಣ್ಣ ಗೋಟಡಕಿ, ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಮಠ, ಆದೇಶ ಅಂಗಡಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

“ಬಸವಾದಿ ಶಿವಶರಣರ ವಚನಗಳು ಮಾನವೀಯ ಮೌಲ್ಯಗಳನ್ನು ಬಲಪಡಿಸಿ, ಶಾಂತಿ ಮತ್ತು ಸಹಬಾಳ್ವೆಯ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ.”

— ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು