ಬೆಂಗಳೂರು/ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಮಳೆಗಾಲದಲ್ಲಿ ದೇವಾಲಯದೊಳಗೆ ಹೊರಗಿನ ಕೊಳಚೆ ನೀರು ಪ್ರವೇಶಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ನೀರು ಒಳನುಗ್ಗದಂತೆ ಶಾಶ್ವತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
ಈ ಸಂಬಂಧ ಪರಿವರ್ತನ ಗೋಕರ್ಣ ಸಂಸ್ಥೆ ಸಲ್ಲಿಸಿದ್ದ ಮನವಿ ಪತ್ರ ಹಾಗೂ ದೇವಾಲಯದೊಳಗೆ ಕೊಳಚೆ ನೀರು ನಿಂತಿರುವ ಚಿತ್ರಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಕಾಮಗಾರಿಯನ್ನು ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಮಳೆಗಾಲ ಆರಂಭವಾದ ಬಳಿಕ ಎರಡು ಬಾರಿ ಗರ್ಭಗುಡಿಗೆ ನೀರು ನುಗ್ಗಿ ಭಕ್ತರು ಹಾಗೂ ದೇವಾಲಯ ಆಡಳಿತಕ್ಕೆ ತೊಂದರೆಯಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಸಿಎಂ, ತಮ್ಮ ಕಚೇರಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ವೇಳೆ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ ಅವರು ದೇವಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. ಭಟ್ಕಳ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ವೈದ್ಯ ಅವರು ಗೋಕರ್ಣದ ರಸ್ತೆ ಅಭಿವೃದ್ಧಿ ಮತ್ತು ಕೋಟಿತೀರ್ಥ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದಾರೆ.
ಈ ಕುರಿತು ಮಾತನಾಡಿದ ನಿವೇದಿತ್ ಆಳ್ವಾ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಕಾಳಜಿ ಹೊಂದಿದ್ದು, ಮೊದಲ ಹಂತವಾಗಿ ದೇವಾಲಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮಂಕಾಳ ವೈದ್ಯ ಮಾತನಾಡಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಲಿದ್ದು, ಮುಂದಿನ ದಿನಗಳಲ್ಲಿ ಗೋಕರ್ಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

