Home Blog

ಸಾವಿನಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಮುಖ್ಯೋಪಾಧ್ಯಾಯ

0

ವಿಜಯಸಾಕ್ಷಿ ಸುದ್ದಿ, ಗದಗ: ನಿವೃತ್ತ ಮುಖ್ಯೋಪಾಧ್ಯಾಯ ರಾಚಪ್ಪ ವ್ಹಿ. ಕೋರಿ ಅವರು ನಿಧನದ ಬಳಿಕವೂ ಮತ್ತೊಬ್ಬರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ನಗರದ ವಿವೇಕಾನಂದ ನಗರದ ಕರಿಯಮ್ಮಕಲ್ಲು ಬಡಾವಣೆಯ ನಿವಾಸಿ ರಾಚಪ್ಪ ಕೋರಿ ಅವರು ಆ.17ರಂದು ನಿಧನರಾಗಿದ್ದು, ಅವರ ಸ್ವಇಚ್ಛೆಯಂತೆ ಕುಟುಂಬದವರು ನೇತ್ರದಾನ ಹಾಗೂ ದೇಹದಾನ ನೆರವೇರಿಸಿದ್ದಾರೆ.

ನಿಧನದ ಬಳಿಕ ತಜ್ಞ ವೈದ್ಯರ ತಂಡ ನೇತ್ರದಾನದ ಪ್ರಕ್ರಿಯೆ ಪೂರ್ಣಗೊಳಿಸಿತು. ಬಳಿಕ ಆ.18ರಂದು ಮೃತರ ದೇಹವನ್ನು ವೈದ್ಯಕೀಯ ವಿದ್ಯಾರ್ಥಿಗಳ ಅಂಗರಚನಾ ಶಾಸ್ತ್ರ ಅಧ್ಯಯನಕ್ಕಾಗಿ ಗದಗದ ಡಿ.ಜಿ.ಎಂ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯಕ್ಕೆ ದಾನ ಮಾಡಲಾಯಿತು.

ಮೃತರ ಅಂತಿಮ ಇಚ್ಛೆಯನ್ನು ಗೌರವಿಸಿದ ಕುಟುಂಬದ ಈ ಮಾನವೀಯ ಕಾರ್ಯ ಸಾರ್ವಜನಿಕರಲ್ಲಿ ನೇತ್ರದಾನ ಹಾಗೂ ದೇಹದಾನದ ಕುರಿತು ಜಾಗೃತಿ ಮೂಡಿಸುವಂತಾಗಿದೆ. ಮರಣದ ನಂತರವೂ ತಮ್ಮ ದೇಹ ಹಾಗೂ ಅಂಗಾಂಗಗಳು ಮತ್ತೊಬ್ಬರ ಬದುಕಿಗೆ ಮತ್ತು ವೈದ್ಯಕೀಯ ಶಿಕ್ಷಣಕ್ಕೆ ನೆರವಾಗುವಂತೆ ಮಾಡಿರುವುದು ಮಾದರಿ ಕಾರ್ಯವಾಗಿದೆ.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರವೀಣ ವಾರಕರ, ಕಾರ್ಯದರ್ಶಿ ಲಿಂಗರಾಜ ತೋಟದ, ರಮೇಶ ಶಿಗ್ಲಿ, ರಾಜಣ್ಣ ಮಲ್ಲಾಡದ, ಅಶ್ವಥ್ ಸುಲಾಖೆ ಸೇರಿದಂತೆ ಕುಟುಂಬದ ಸದಸ್ಯರು ಹಾಗೂ ಬಂಧು-ಬಳಗದವರು ಉಪಸ್ಥಿತರಿದ್ದರು.

ಸದ್ಭಾವನೆ, ಸೌಹಾರ್ದಕ್ಕೆ ಪ್ರತಿಯೊಬ್ಬರ ಕೊಡುಗೆ ಅಗತ್ಯ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸದ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಸದ್ಭಾವನಾ ದಿನದ ಪ್ರತಿಜ್ಞಾ ವಿಧಿ ಬೋಧಿಸಿ, ಜಾತಿ, ಧರ್ಮ, ಪ್ರದೇಶ, ಮತ ಹಾಗೂ ಭಾಷೆಯ ಭೇದವಿಲ್ಲದೆ ದೇಶದ ಎಲ್ಲ ಜನರ ನಡುವೆ ಭಾವೈಕ್ಯತೆ ಮತ್ತು ಸೌಹಾರ್ದ ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದಲ್ಲಿ ಎಲ್ಲ ಸಮುದಾಯಗಳ ನಡುವೆ ಪರಸ್ಪರ ಗೌರವ ಮತ್ತು ವಿಶ್ವಾಸ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಹರಿ ಜಾತ್ರೆಯ ಅನ್ನದಾಸೋಹಕ್ಕೆ ಅಕ್ಕಿ ಸೇವೆ ಸಮರ್ಪಿಸಿದ ವಸಂತ ಪಡಗದ

0

ವಿಜಯಸಾಕ್ಷಿ ಸುದ್ದಿ, ಗದಗ: ಅವಳಿ ನಗರದ ಒಕ್ಕಲಗೇರಿ ಓಣಿಯ ಗ್ರಾಮದೇವತೆಗಳಾದ ಶ್ರೀ ದ್ಯಾಮವ್ವ ಹಾಗೂ ದುರ್ಗಮ್ಮ ದೇವಿಯರ ಐತಿಹಾಸಿಕ ಹರಿಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಏರ್ಪಡಿಸಿರುವ ಮಹಾ ಅನ್ನಪ್ರಸಾದ ಸೇವೆಗೆ ಬಿಜೆಪಿ ಯುವ ಮುಖಂಡ ವಸಂತ ಪಡಗದ ಅವರು ಭಕ್ತಿಸೇವೆಯಾಗಿ ಅಕ್ಕಿ ಸಮರ್ಪಿಸಿದ್ದಾರೆ.

18 ವರ್ಷಗಳ ಬಳಿಕ ವಿಜೃಂಭಣೆಯಿಂದ ನಡೆಯುತ್ತಿರುವ ಹರಿಜಾತ್ರಾ ಮಹೋತ್ಸವ ಆ.18ರಿಂದ 28ರವರೆಗೆ ನಡೆಯುತ್ತಿದ್ದು, ಜಾತ್ರೆಗೆ ಆಗಮಿಸುವ ಸಾವಿರಾರು ಭಕ್ತರಿಗೆ ಪ್ರತಿದಿನ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಮಹಾ ಅನ್ನಪ್ರಸಾದಕ್ಕೆ ಅಗತ್ಯವಿರುವ ಅಕ್ಕಿಯನ್ನು ಶುಕ್ರವಾರದಿಂದ ಸತತ ಏಳು ದಿನಗಳ ಕಾಲ ವಸಂತ ಪಡಗದ ಅವರು ಭಕ್ತಿಸೇವೆಯಾಗಿ ಒದಗಿಸಲಿದ್ದಾರೆ. ಇದರ ಮೊದಲ ಹಂತವಾಗಿ ಗುರುವಾರ 50ಕ್ಕೂ ಹೆಚ್ಚು ಅಕ್ಕಿ ಚೀಲಗಳನ್ನು ಜಾತ್ರಾ ಸಮಿತಿಯ ಪ್ರಮುಖರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ವಿನೋದ ಮೊರಬದ, ಪ್ರವೀಣ ಕರಿಬಿಷ್ಟಿ, ಮೋಹನ ವರವಿ, ಸುನೀಲ ಮುದೇನಗುಡಿ, ಸೋಮು ಮುಳಗುಂದ, ಬಸವರಾಜ ತುಪ್ಪದ, ಕುಮಾರ ಮಾರನಬಸರಿ, ಶ್ರೀಕಾಂತ ರಾಮಗಿರಿ, ಪ್ರವೀಣ ಹಂದೇಲಿ, ವಿನಾಯಕ ಹೊರಕೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“18 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮ ದೇವಿಯರ ಹರಿಜಾತ್ರೋತ್ಸವದಲ್ಲಿ ವಸಂತ ಪಡಗದ ಹಾಗೂ ಗೆಳೆಯರು ಮಹಾಪ್ರಸಾದಕ್ಕೆ ಅಗತ್ಯವಿರುವ ಅಕ್ಕಿಯನ್ನು ಭಕ್ತಿಸೇವೆಯಾಗಿ ನೀಡುತ್ತಿದ್ದಾರೆ. ಊರಿನ ಗುರು-ಹಿರಿಯರು ಹಾಗೂ ಜಾತ್ರಾ ಸಮಿತಿಯ ಸಹಕಾರದಿಂದ ಈ ಸೇವೆ ನಡೆಯುತ್ತಿದೆ.”

— ವಿನೋದ ಮೊರಬದ

ನಮ್ಮ ಆಚರಣೆಗಳಲ್ಲೂ ವಿಜ್ಞಾನ ಅಡಗಿದೆ: ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದಲ್ಲಿ ಪಾರಂಪರಿಕವಾಗಿ ಆಚರಿಸಿಕೊಂಡು ಬರುತ್ತಿರುವ ಪ್ರತಿಯೊಂದು ಆಚರಣೆಯ ಹಿಂದೆಯೂ ವಿಶಿಷ್ಟ ಕಾರಣವಿದ್ದು, ಅವು ವೈಜ್ಞಾನಿಕ ಅಂಶಗಳನ್ನು ಒಳಗೊಂಡಿವೆ. ವಿಜ್ಞಾನ ಮತ್ತು ಆಧ್ಯಾತ್ಮ ಪರಸ್ಪರ ವಿರೋಧಿಗಳಲ್ಲ, ವಿಜ್ಞಾನದೊಂದಿಗೆ ಹೊಂದಿಕೊಂಡು ಸಾಗುವುದೇ ಆಧ್ಯಾತ್ಮದ ಆಶಯ ಎಂದು ಅಂತೂರ-ಬೆಂತೂರ ಬೂದೀಶ್ವರ ಸಂಸ್ಥಾನ ಮಠದ ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ನಗರದ ಒಕ್ಕಲಗೇರಿ ಓಣಿಯ ದ್ಯಾಮವ್ವನ ಕಟ್ಟೆ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಶ್ರೀ ದ್ಯಾಮವ್ವ ಹಾಗೂ ದುರುಗಮ್ಮ ದೇವಿಯರ ಹರಿಜಾತ್ರೋತ್ಸವದ ಎರಡನೇ ದಿನದ ಸಭಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿಜ್ಞಾನ ವಸ್ತುಗಳ ಮೇಲೆ ಪ್ರಯೋಗ ನಡೆಸಿದರೆ, ಆಧ್ಯಾತ್ಮ ಸ್ವಯಂ ಅನುಭವ, ಜ್ಞಾನ ಹಾಗೂ ತಪಸ್ಸಿನ ಮೂಲಕ ಸತ್ಯವನ್ನು ಅರಿಯುವ ಮಾರ್ಗವಾಗಿದೆ. 12 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳ ಹಾಗೂ ಜಾತ್ರೆಗಳ ಹಿಂದೆಯೂ ವೈಜ್ಞಾನಿಕ ಕಾರಣಗಳಿವೆ. ತುಳಸಿ, ಬಿಲ್ವಪತ್ರೆ ಹಾಗೂ ಬೇವಿನ ಬಳಕೆಯಿಂದಾಗುವ ಪ್ರಯೋಜನಗಳೇ ನಮ್ಮ ಪೂರ್ವಜರ ವೈಜ್ಞಾನಿಕ ಜ್ಞಾನಕ್ಕೆ ಸಾಕ್ಷಿ ಎಂದರು.

ಭಾರತ ವೇದ ಜ್ಞಾನದ ಮೂಲಕ ಜಗತ್ತಿಗೆ ಜ್ಞಾನದ ಗಂಗೆಯನ್ನು ಹರಿಸಿದೆ. ಇಂದಿನ ಎಐ ಯುಗದಲ್ಲಿಯೂ ಮಾನವ ನಿರ್ಮಿತ ಜ್ಞಾನವೇ ಆಧಾರವಾಗಿದೆ. ಹೀಗಾಗಿ ನಮ್ಮ ಆಚರಣೆ, ಸಂಸ್ಕಾರ ಹಾಗೂ ಪರಂಪರೆಯನ್ನು ಅಧ್ಯಯನ ಮಾಡಿ ಮುಂದಿನ ಪೀಳಿಗೆಗೆ ತಲುಪಿಸಬೇಕು. ಜಾತ್ರೆಗಳು ಸಮುದಾಯದ ಒಗ್ಗಟ್ಟು, ಪರಸ್ಪರ ಪ್ರೀತಿ ಮತ್ತು ವಿಶ್ವಾಸಕ್ಕೆ ನಾಂದಿಯಾಗಲಿ ಎಂದು ಆಶಿಸಿದರು.

ಜಾತ್ರಾ ಸಮಿತಿ ಕಾರ್ಯಾಧ್ಯಕ್ಷ ಫಕೀರಪ್ಪ ಹೆಬಸೂರ ಮಾತನಾಡಿ, ದ್ಯಾಮವ್ವ-ದುರುಗಮ್ಮ ದೇವಿಯರ ಜಾತ್ರೆಯ ಇತಿಹಾಸವನ್ನು ವಿವರಿಸಿ, ಭವಿಷ್ಯದಲ್ಲಿ ಭವ್ಯ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

ಬಣಜಿಗ ಸಮಾಜದ ಜಿಲ್ಲಾಧ್ಯಕ್ಷ ಈಶಣ್ಣ ಮುನವಳ್ಳಿ ಮಾತನಾಡಿ, ಜಾತ್ರೆಯ ಯಶಸ್ಸಿನಲ್ಲಿ ತಾಯಂದಿರು ಹಾಗೂ ಯುವಕರ ಪರಿಶ್ರಮ ಪ್ರಮುಖವಾಗಿದೆ. ಜಾತ್ರೆಯ ಇತಿಹಾಸವನ್ನು ಪುಸ್ತಕ ರೂಪದಲ್ಲಿ ದಾಖಲಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಹೇಳಿದರು.

ನಗರಸಭಾ ಸದಸ್ಯ ರಾಘವೇಂದ್ರ ಯಳವತ್ತಿ ಸೇರಿದಂತೆ ಗಣ್ಯರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪೂಜ್ಯಶ್ರೀ ಶಿವಶರಣೆ ನೀಲಮ್ಮ ತಾಯಿ ಅಸುಂಡಿ, ಕೊಟ್ರಪ್ಪ ಕಮತರ, ಡಾ. ಡಿ.ಬಿ. ಬಿಡಿನಹಾಳ, ಆರುಣಕುಮಾರ ಚವ್ಹಾಣ, ಆರ್.ಡಿ. ಕಡ್ಡಿಕೊಪ್ಪ, ಪ್ರಕಾಶ ಕರಿ, ನಗರಸಭಾ ಸದಸ್ಯರಾದ ಲಕ್ಷ್ಮವ್ವ ಭಜಂತ್ರಿ, ಪೂರ್ಣಿಮಾ ಭರದ್ವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುರೇಶ ಮರಳಪ್ಪನವರ ಸ್ವಾಗತಿಸಿದರು. ಬಾಹುಬಲಿ ಜೈನರ ನಿರೂಪಿಸಿದರು. ವಿರೂಪಾಕ್ಷಪ್ಪ ಅಕ್ಕಿ ವಂದಿಸಿದರು. ಬಳಿಕ ಕಾಮಿಡಿ ಕಿಲಾಡಿಯ ಸಂಜು ಬಸಯ್ಯ ಹಾಗೂ ಗದುಗಿನ ನಟರಂಗ ಕಲಾ ಸಂಸ್ಥೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

“ವಿಜ್ಞಾನ ಮತ್ತು ಆಧ್ಯಾತ್ಮ ಪರಸ್ಪರ ವಿರೋಧಿಗಳಲ್ಲ. ನಮ್ಮ ಆಚರಣೆಗಳಲ್ಲಿಯೂ ವೈಜ್ಞಾನಿಕ ಅಂಶಗಳಿದ್ದು, ಅವುಗಳ ಹಿಂದಿನ ಜ್ಞಾನವನ್ನು ಅರಿತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.”

— ಡಾ. ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು

ಅರಸು ಆದರ್ಶ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

0

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದುಳಿದ ವರ್ಗಗಳ ಏಳಿಗೆ ಹಾಗೂ ಸಾಮಾಜಿಕ ಸಮಾನತೆಗೆ ಭದ್ರ ಬುನಾದಿ ಹಾಕಿದ ದಿ. ಡಿ. ದೇವರಾಜ ಅರಸು ಅವರ ಕೊಡುಗೆ ಕರ್ನಾಟಕಕ್ಕೆ ಅಪಾರ. ಅವರು ತೋರಿದ ಸಾಮಾಜಿಕ ನ್ಯಾಯದ ಹಾದಿಯಲ್ಲಿ ಇಂದಿನ ಪೀಳಿಗೆ ಸಾಗಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಕರೆ ನೀಡಿದರು.

ನಗರದ ಮುಳಗುಂದ ರಸ್ತೆಯ ಕನಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ದಿ. ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಬೇಕು ಎಂಬ ದೂರದೃಷ್ಟಿಯಿಂದ ಆಡಳಿತ ನಡೆಸಿದ ಅರಸು ಅವರು ‘ಉಳುವವನೇ ಭೂಮಿಯ ಒಡೆಯ’ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆ ಜಾರಿಗೆ ತಂದು ಲಕ್ಷಾಂತರ ಬಡ ರೈತರಿಗೆ ಭೂಮಿಯ ಹಕ್ಕು ಕಲ್ಪಿಸಿದರು. ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸೂಕ್ತ ಪ್ರಾತಿನಿಧ್ಯ ದೊರಕಿಸಲು ಮೀಸಲಾತಿ ಜಾರಿಗೆ ತಂದರು. ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡಲು ವಸತಿ ನಿಲಯಗಳ ಸ್ಥಾಪನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ಶ್ರೀಧರ್ ಹೇಳಿದರು.

ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಹಾಗೂ ಉಪನ್ಯಾಸಕ ಪ್ರಭಾಕರ ಉಳ್ಳಾಗಡ್ಡಿ ಮಾತನಾಡಿ, ಅರಸು ಅವರು ಶೋಷಿತರು ಹಾಗೂ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಲವು ಸಾಮಾಜಿಕ ಸುಧಾರಣೆಗಳನ್ನು ಜಾರಿಗೆ ತಂದಿದ್ದರು. ಅವರ ಆಡಳಿತದ ಅವಧಿಯಲ್ಲಿ ಕೈಗೊಂಡ ಜನಪರ ಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ವಿ. ಬಳ್ಳಾರಿ ಮಾತನಾಡಿ, ಅರಸು ಅವರು ಹಿಂದುಳಿದ ವರ್ಗಗಳ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿ ವಸತಿ ನಿಲಯಗಳನ್ನು ಆರಂಭಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿದರು. ಗದಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಕಾರದಿಂದ 48ಕ್ಕೂ ಹೆಚ್ಚು ವಸತಿ ನಿಲಯಗಳು ಮತ್ತು ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿವೆ ಎಂದರು.

ಜಿಲ್ಲಾ ಹಾಲುಮತ ಸಂಘದ ಅಧ್ಯಕ್ಷ ಫಕೀರಪ್ಪ ಹೆಬಸೂರ ಮಾತನಾಡಿ, ಅರಸು ಅವರ ಭೂಸುಧಾರಣೆ ಹಾಗೂ ಸಾಮಾಜಿಕ ನ್ಯಾಯದ ಯೋಜನೆಗಳು ಬಡವರು ಮತ್ತು ಶೋಷಿತರಲ್ಲಿ ಆತ್ಮಗೌರವದ ಬದುಕಿಗೆ ದಾರಿ ಮಾಡಿಕೊಟ್ಟಿವೆ. ಇಂದಿನ ಮಕ್ಕಳು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತಹ ವಿಜ್ಞಾನಿಗಳು ಹಾಗೂ ದೇಶಪ್ರೇಮಿಗಳಾಗಿ ಬೆಳೆಯಲು ಪೋಷಕರು ಶಿಕ್ಷಣದ ಜತೆಗೆ ಸಂಸ್ಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ, ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ರಾಜ್ಯ ಹಾಲುಮತ ಸಂಘದ ಅಧ್ಯಕ್ಷ ರುದ್ರಣ್ಣ ಗುಳಗುಳಿ, ಅಲೆಮಾರಿ ಸಂಘದ ಜಿಲ್ಲಾಧ್ಯಕ್ಷ ಹರೀಶ್ ಪೂಜಾರ ಸೇರಿದಂತೆ ಅಧಿಕಾರಿಗಳು, ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ವೀರಣ್ಣ ಅಂಗಡಿ ಹಾಗೂ ಸಂಗಡಿಗರು ದೇವರಾಜ ಅರಸು ಅವರ ಕುರಿತು ಸ್ವರಚಿತ ಗೀತೆ ಹಾಗೂ ನಾಡಗೀತೆ ಪ್ರಸ್ತುತಪಡಿಸಿದರು.

“ಅರಸು ಅವರ ಸಾಧನೆಗಳನ್ನು ಸ್ಮರಿಸುವುದಷ್ಟೇ ಅಲ್ಲ, ಅವರು ತೋರಿದ ಹಾದಿಯಲ್ಲಿ ಸಾಗುವುದು ಹಾಗೂ ಸಮಾಜದ ಏಳಿಗೆಗೆ ಶ್ರಮಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ.”

— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ವಿಶ್ವ ಛಾಯಾಗ್ರಾಹಕರ ದಿನಾಚರಣೆ: ಸಸಿ ನೆಟ್ಟು ಸಂಭ್ರಮ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಹೋಬಳಿ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಟ್ಟಣದ ಶ್ರೀ ವೀರಪ್ಪಜ್ಜನ ಮಠದ ಆವರಣದಲ್ಲಿ ಗುರುವಾರ ವಿಶ್ವ ಛಾಯಾಗ್ರಾಹಕರ 187ನೇ ದಿನಾಚರಣೆಯನ್ನು ಆಚರಿಸಲಾಯಿತು.

ಛಾಯಾಗ್ರಹಣದ ಪಿತಾಮಹ ಲೂಯಿಸ್ ಡಾಗ್ಯುರೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ದಿನಾಚರಣೆಯ ಸ್ಮರಣಾರ್ಥ ಮಠದ ಆವರಣದಲ್ಲಿ ಸಸಿ ನೆಡಲಾಯಿತು.

ಛಾಯಾಗ್ರಹಣವು ಸಮಾಜದ ಮಹತ್ವದ ಘಟನೆಗಳು, ಸಂಸ್ಕೃತಿ ಹಾಗೂ ಪರಂಪರೆಯನ್ನು ದಾಖಲಿಸಿ ಮುಂದಿನ ಪೀಳಿಗೆಗೆ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಡಾ. ಎಲ್.ಎಸ್. ಗೌರಿ, ನಿವೃತ್ತ ಪ್ರಾಚಾರ್ಯ ಬಿ.ಎನ್. ಜಾಲಿಹಾಳ, ಪಪಂ ಮಾಜಿ ಉಪಾಧ್ಯಕ್ಷ ಕುಮಾರಸ್ವಾಮಿ ಕೋರದಾನ್ಯಮಠ, ಈಶ್ವರ ಬೆಟಗೇರಿ, ಮಲ್ಲಯ್ಯ ಗುಂಡಗೋಪೂರಮಠ, ಮಲ್ಲಿಕಾರ್ಜುನ ಬೆಟಗೇರಿ, ಮಮ್ಮದರಫೀಕ ನದಾಫ್, ಸಮೀರ ಬಳಬಟ್ಟಿ, ಪ್ರವೀಣ ಸರ್ವಿ, ಗವಿಸಿದ್ದಪ್ಪ ಗೊಡಚಪ್ಪನವರ, ಚಂದ್ರು ಜೋಳದ, ಮಂಜು ಹುಯಿಲಗೋಳಮಠ, ಸುನೀಲ ಮಳಗಿ, ಮನೋಜ ರಾಯಬಾಗಿ ಸೇರಿದಂತೆ ಛಾಯಾಗ್ರಾಹಕರು ಉಪಸ್ಥಿತರಿದ್ದರು.

ಉರ್ದು ಶಾಲೆಗಳ ಖಾಲಿ ಶಿಕ್ಷಕ ಹುದ್ದೆ ಭರ್ತಿಗೆ ಆಗ್ರಹಿಸಿ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳಲ್ಲಿ ವರ್ಷಗಳಿಂದ ಖಾಲಿ ಇರುವ ಶಿಕ್ಷಕ ಹಾಗೂ ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಉರ್ದು ಶಿಕ್ಷಣ ವ್ಯವಸ್ಥೆಗೆ ನ್ಯಾಯ ಒದಗಿಸಬೇಕು ಎಂದು ಅಖಿಲ ಕರ್ನಾಟಕ ಮುಸ್ಲಿಂ ಮಹಾಸಭಾ ರಾಜ್ಯಾಧ್ಯಕ್ಷ ಮಹ್ಮದಶಫಿ ಎಸ್. ನಾಗರಕಟ್ಟಿ ಆಗ್ರಹಿಸಿದರು.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ ಅವರು, ಶಿಕ್ಷಕರ ಕೊರತೆಯಿಂದ ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತಿದೆ. ಸರ್ಕಾರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತಿರುವುದು ಸ್ವಾಗತಾರ್ಹವಾಗಿದ್ದು, ಉರ್ದು ಶಾಲೆಗಳ ಹುದ್ದೆಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದರು.

ಉರ್ದು ವಿಷಯದಲ್ಲಿ ಬಿ.ಎಡ್., ಟಿ.ಸಿ.ಎಚ್. ಸೇರಿದಂತೆ ಅಗತ್ಯ ವಿದ್ಯಾರ್ಹತೆ ಹೊಂದಿರುವ ಅನೇಕ ಅರ್ಹ ಅಭ್ಯರ್ಥಿಗಳು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಒಂದು ಕಡೆ ಶಿಕ್ಷಕರ ಕೊರತೆ, ಮತ್ತೊಂದೆಡೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗದ ಕೊರತೆ ಇರುವುದರಿಂದ ಸರ್ಕಾರ ಎರಡೂ ಸಮಸ್ಯೆಗಳಿಗೆ ಸಮಗ್ರ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಎಲ್ಲ ಸರ್ಕಾರಿ ಉರ್ದು ಮಾಧ್ಯಮ ಶಾಲೆಗಳ ಖಾಲಿ ಶಿಕ್ಷಕ ಹುದ್ದೆಗಳ ಸಂಪೂರ್ಣ ವಿವರ ಸಂಗ್ರಹಿಸಿ ತಕ್ಷಣ ಭರ್ತಿ ಮಾಡಬೇಕು. ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಸೂಕ್ತ ಅವಕಾಶ ಕಲ್ಪಿಸಬೇಕು. ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನಿಯೋಜಿಸುವುದರ ಜತೆಗೆ ಶಿಕ್ಷಕೇತರ ಹುದ್ದೆಗಳನ್ನೂ ಹಂತ ಹಂತವಾಗಿ ಭರ್ತಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಉರ್ದು ಮಾಧ್ಯಮ ವಿದ್ಯಾರ್ಥಿಗಳಿಗೆ ಇತರ ಮಾಧ್ಯಮದ ವಿದ್ಯಾರ್ಥಿಗಳಂತೆ ಸಮಾನ ಶೈಕ್ಷಣಿಕ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉರ್ದು ಶಾಲೆಗಳ ಸಮಸ್ಯೆಯನ್ನು ಕೇವಲ ಒಂದು ಸಮುದಾಯದ ಬೇಡಿಕೆಯಾಗಿ ಪರಿಗಣಿಸದೆ, ಮಕ್ಕಳ ಶಿಕ್ಷಣದ ಹಕ್ಕು ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಒತ್ತಾಯಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಾಫರ ಡಾಲಾಯತ, ಮಹಬೂಬ್ ಬಾದಷಾ ಖಾಜಿ, ತಾಜುದ್ದೀನ್ ಪಾಪಣ್ಣವರ, ಪ್ರಧಾನ ಕಾರ್ಯದರ್ಶಿ ರಿಯಾಜ್ ಅಹ್ಮದ್ ದೊಡ್ಡಮನಿ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.

Varamahalakshmi 2026: ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆಯಾ? ಯಾವ ರಾಜ್ಯಗಳಲ್ಲಿ ರಜೆ?

0

ನಾಳೆ ಅಂದರೆ ಆಗಸ್ಟ್ 21ರಂದು ವರಮಹಾಲಕ್ಷ್ಮಿ ಹಬ್ಬವನ್ನು ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇದೆಯೇ ಎಂಬ ಗೊಂದಲ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿದೆ.

ತೆಲಂಗಾಣದಲ್ಲಿ ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ ಇಲ್ಲ:

ತೆಲಂಗಾಣ ಸರ್ಕಾರದ 2026ರ ರಜಾಪಟ್ಟಿಯಲ್ಲಿ ಆಗಸ್ಟ್ 21ರ ವರಲಕ್ಷ್ಮಿ ವ್ರತಂ ಅನ್ನು ಐಚ್ಛಿಕ ರಜೆಯಾಗಿ (Optional Holiday) ಸೇರಿಸಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ಕಡ್ಡಾಯ ರಜೆ ಘೋಷಿಸಿಲ್ಲ.

ಸರ್ಕಾರಿ, ಖಾಸಗಿ, CBSE ಹಾಗೂ ICSE ಶಾಲೆಗಳು ತಮ್ಮ ಆಡಳಿತ ಮಂಡಳಿ ಹಾಗೂ ಸ್ಥಳೀಯ ನಿರ್ಧಾರದ ಆಧಾರದ ಮೇಲೆ ರಜೆ ನೀಡಬಹುದು.

ತೆಲಂಗಾಣ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರಜೆ:

ನಲ್ಗೊಂಡ ಜಿಲ್ಲೆಯಲ್ಲಿ ಮಹಿಳಾ ಪ್ರಾಂಶುಪಾಲರ ಹತ್ಯೆ ಖಂಡಿಸಿ ಆಗಸ್ಟ್ 21ರಂದು ತೆಲಂಗಾಣದಾದ್ಯಂತ ಖಾಸಗಿ ಶಾಲೆಗಳು ಬಂದ್‌ಗೆ ಕರೆ ನೀಡಿವೆ ಎಂದು ವರದಿಯಾಗಿದೆ. ಹೀಗಾಗಿ ಹಲವು ಖಾಸಗಿ ಶಾಲೆಗಳು ನಾಳೆ ಬಂದ್ ಇರಬಹುದಾಗಿದೆ. ಆದರೆ ಶಾಲೆ ರಜೆ ಬಗ್ಗೆ ಆಯಾ ಶಿಕ್ಷಣ ಸಂಸ್ಥೆಗಳ ಅಧಿಕೃತ ಸೂಚನೆಯನ್ನು ಪರಿಶೀಲಿಸುವುದು ಸೂಕ್ತ.

ಆಂಧ್ರಪ್ರದೇಶದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ:

ಆಂಧ್ರಪ್ರದೇಶದಲ್ಲಿ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 21ರಂದು ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳಿಗೂ ರಜೆ ನೀಡಲಾಗಿದೆ.

ಪುದುಚೇರಿಯಲ್ಲಿ 2 ದಿನ ರಜೆ:

ಪುದುಚೇರಿಯಲ್ಲಿ SSC CGL ಪರೀಕ್ಷೆ 2025ಕ್ಕೆ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆಯಾಗಿರುವ 69 ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಆಗಸ್ಟ್ 21 ಮತ್ತು 22ರಂದು ಎರಡು ದಿನಗಳ ರಜೆ ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕಿರುವ ಹಿನ್ನೆಲೆಯಲ್ಲಿ ಈ ಶಾಲೆಗಳಿಗೆ ರಜೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸೇರಿ ಸತತ ಮೂರು ದಿನಗಳ ರಜೆ ದೊರೆಯಲಿದೆ.

 

ಬರಿದಾಗಿದ್ದ ಕೆರೆಗೆ ಜೀವಕಳೆ: ತಿಮ್ಮಾಪುರದಲ್ಲಿ ‘ನಮ್ಮೂರು ನಮ್ಮ ಕೆರೆ’ ಯಶಸ್ಸು

0

ವಿಜಯಸಾಕ್ಷಿ ಸುದ್ದಿ, ಗದಗ: ಒಮ್ಮೆ ಬರಿದಾಗಿ ಒಣಗುತ್ತಿದ್ದ ತಿಮ್ಮಾಪುರ ಗ್ರಾಮದ ಕೆರೆಗೆ ಇದೀಗ ಜೀವಕಳೆ ಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 9 ಎಕರೆ ವಿಸ್ತೀರ್ಣದ ಕೆರೆಯನ್ನು ಪುನಶ್ಚೇತನಗೊಳಿಸಿ ಗ್ರಾಮಸ್ಥರ ಬಳಕೆಗೆ ಹಸ್ತಾಂತರಿಸಲಾಯಿತು.

ಕೆರೆ ದೇವರಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ನಾಮಫಲಕ ಅನಾವರಣಗೊಳಿಸಲಾಯಿತು. ನಂತರ ಅಭಿವೃದ್ಧಿಪಡಿಸಿದ ಕೆರೆಯನ್ನು ಗ್ರಾಮಸ್ಥರಿಗೆ ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಹರ್ಲಾಪುರ ಕೊಟ್ಟೂರೇಶ್ವರ ಮಠದ ಶ್ರೀ ಅಭಿನವ ಕೊಟ್ಟೂರೇಶ್ವರ ಸ್ವಾಮಿಗಳು ಆಶೀರ್ವಚನ ನೀಡಿ, ಕೆರೆ ಉಳಿದರೆ ಊರು ಉಳಿಯುತ್ತದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಕೆರೆ ರೈತರು ಹಾಗೂ ಸಾರ್ವಜನಿಕರಿಗೆ ವರದಾನವಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಮಾತನಾಡಿ, ಜಲಸಂರಕ್ಷಣೆ, ಸ್ವ-ಸಹಾಯ ಸಂಘಗಳ ಮೂಲಕ ಮಹಿಳಾ ಸಬಲೀಕರಣ ಹಾಗೂ ರೈತರ ಅಭಿವೃದ್ಧಿಗೆ ಯೋಜನೆ ಒತ್ತು ನೀಡುತ್ತಿದೆ. ಗ್ರಾಮಸ್ಥರ ಸಹಕಾರದಿಂದ ಇಂತಹ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದರು.

ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಮಾತನಾಡಿ, ಕೆರೆ ಅಭಿವೃದ್ಧಿಯಿಂದ ತಿಮ್ಮಾಪುರ ಗ್ರಾಮದ ಸಾವಿರಾರು ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರಾಜ್ಯಾದ್ಯಂತ ಇದುವರೆಗೆ 995 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, ತಿಮ್ಮಾಪುರ ಕೆರೆ ಈ ಅಭಿಯಾನದ ಮತ್ತೊಂದು ಹೆಜ್ಜೆಯಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮನಗೌಡ ದೇಸಾಯಿ ವಹಿಸಿದ್ದರು. ಗದಗ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಗ್ರಾಮ ಪಂಚಾಯಿತಿ ಪಿಡಿಒ ಶಿವಲೀಲಾ ಗೂಳಪ್ಪನವರ, ಗವಿಸಿದ್ದಯ್ಯ ಹಳ್ಳಿಕೇರಿಮಠ ಸೇರಿದಂತೆ ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

“ಕೆರೆ ಉಳಿದರೆ ಊರು ಉಳಿಯುತ್ತದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಪುನಶ್ಚೇತನಗೊಂಡ ಕೆರೆ ರೈತರು ಹಾಗೂ ಸಾರ್ವಜನಿಕರಿಗೆ ವರದಾನವಾಗಿದೆ.”

— ಶ್ರೀ ಅಭಿನವ ಕೊಟ್ಟೂರೇಶ್ವರ ಸ್ವಾಮಿಗಳು

ಶ್ರಾವಣದಲ್ಲಿ ಪುರಾಣ ಶ್ರವಣದಿಂದ ಉತ್ತಮ ಸಂಸ್ಕಾರ: ಶ್ರೀ ಪ್ರಭುಲಿಂಗ ದೇವರು

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶ್ರಾವಣ ಮಾಸವು ಧಾರ್ಮಿಕ ಆಚರಣೆ, ಭಕ್ತಿ ಹಾಗೂ ಸತ್ಕಾರ್ಯಗಳಿಗೆ ವಿಶೇಷವಾದ ಮಾಸ. ಪುರಾಣ ಪ್ರವಚನಗಳ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಬೇಕು ಎಂದು ನೀಲಗುಂದದ ಗುದ್ನೇಶ್ವರ ಮಠದ ಶ್ರೀ ಪ್ರಭುಲಿಂಗ ದೇವರು ಹೇಳಿದರು.

ಪಟ್ಟಣದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಆಯೋಜಿಸಿದ್ದ ಶ್ರೀ ವೀರಭದ್ರೇಶ್ವರ ಪುರಾಣ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ಪುರಾಣಗಳು ಕೇವಲ ಧಾರ್ಮಿಕ ಕಥೆಗಳಲ್ಲ. ಅವು ಸತ್ಯ, ಧರ್ಮ, ನೀತಿ ಹಾಗೂ ಸಂಸ್ಕಾರದ ಸಂದೇಶ ನೀಡುತ್ತವೆ. ಆಧುನಿಕ ಜೀವನಶೈಲಿಯ ನಡುವೆ ಯುವಜನತೆ ನಮ್ಮ ಪರಂಪರೆ ಮತ್ತು ಸಂಸ್ಕೃತಿಯನ್ನು ಮರೆಯದೆ, ಹಿರಿಯರು ಪಾಲಿಸಿಕೊಂಡು ಬಂದ ಧಾರ್ಮಿಕ ಆಚರಣೆಗಳನ್ನು ಮುಂದುವರಿಸಬೇಕು ಎಂದರು.

ಶ್ರಾವಣದಲ್ಲಿ ಪುರಾಣ ಶ್ರವಣ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯುವುದರ ಜತೆಗೆ ಉತ್ತಮ ವಿಚಾರಗಳು ಬದುಕಿನಲ್ಲಿ ಮೂಡುತ್ತವೆ. ಸಮಾಜದಲ್ಲಿ ಒಗ್ಗಟ್ಟು ಹಾಗೂ ಪರಸ್ಪರ ಗೌರವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಜಯಲಕ್ಷ್ಮಿ ಗಡ್ಡದೇವರ ಮಠ ಕಾರ್ಯಕ್ರಮ ಉದ್ಘಾಟಿಸಿದರು. ಬಳಗದ ಅಧ್ಯಕ್ಷೆ ಸುವರ್ಣಭಾಯಿ ಬಹದ್ದೂರ್ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಜಯಲಕ್ಷ್ಮಿ ಮಾಂತ ಶೆಟ್ಟರ್ ಹಾಗೂ ಎಸ್.ಎಫ್. ಆದಿ ಮುಖ್ಯ ಅತಿಥಿಗಳಾಗಿದ್ದರು. ಪ್ರಭು ಏಕಿಕೊಪ್ಪ ಪುರಾಣ ಪ್ರವಚನ ನಡೆಸಿಕೊಟ್ಟರು.

ಎಸ್.ಎಂ. ವಿರಕ್ತಮಠ ವೇದಘೋಷ ನೆರವೇರಿಸಿದರು. ಶಾರಕ್ಕಾ ಮಹಾಂತ ಶೆಟ್ಟರ್ ಸ್ವಾಗತಿಸಿದರು. ಎಸ್.ಎನ್. ಹುಲ್ಲಣ್ಣನವರ್ ಪುಷ್ಪಾರ್ಪಣೆ ಹಾಗೂ ಮಾಲಾರ್ಪಣೆ ನೆರವೇರಿಸಿದರು. ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು, ಬಳಗದ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

“ಪುರಾಣಗಳು ಜೀವನದ ಮೌಲ್ಯ, ಸತ್ಯ, ಧರ್ಮ, ನೀತಿ ಹಾಗೂ ಸಂಸ್ಕಾರದ ಸಂದೇಶವನ್ನು ನೀಡುತ್ತವೆ. ಇವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ.”

— ಶ್ರೀ ಪ್ರಭುಲಿಂಗ ದೇವರು, ಗುದ್ನೇಶ್ವರ ಮಠ, ನೀಲಗುಂದ