Home Blog

ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಕೊಳಚೆ ನೀರು? ಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸೂಚನೆ

ಬೆಂಗಳೂರು/ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.

ಮಳೆಗಾಲದಲ್ಲಿ ದೇವಾಲಯದೊಳಗೆ ಹೊರಗಿನ ಕೊಳಚೆ ನೀರು ಪ್ರವೇಶಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಣ್ಣ ನೀರಾವರಿ ಇಲಾಖೆಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ದೇವಾಲಯದ ಅಭಿಷೇಕದ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ನೀರು ಒಳನುಗ್ಗದಂತೆ ಶಾಶ್ವತ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.

ಈ ಸಂಬಂಧ ಪರಿವರ್ತನ ಗೋಕರ್ಣ ಸಂಸ್ಥೆ ಸಲ್ಲಿಸಿದ್ದ ಮನವಿ ಪತ್ರ ಹಾಗೂ ದೇವಾಲಯದೊಳಗೆ ಕೊಳಚೆ ನೀರು ನಿಂತಿರುವ ಚಿತ್ರಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಕಾಮಗಾರಿಯನ್ನು ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಳೆಗಾಲ ಆರಂಭವಾದ ಬಳಿಕ ಎರಡು ಬಾರಿ ಗರ್ಭಗುಡಿಗೆ ನೀರು ನುಗ್ಗಿ ಭಕ್ತರು ಹಾಗೂ ದೇವಾಲಯ ಆಡಳಿತಕ್ಕೆ ತೊಂದರೆಯಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಸಿಎಂ, ತಮ್ಮ ಕಚೇರಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈ ವೇಳೆ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ ಅವರು ದೇವಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ. ಭಟ್ಕಳ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ವೈದ್ಯ ಅವರು ಗೋಕರ್ಣದ ರಸ್ತೆ ಅಭಿವೃದ್ಧಿ ಮತ್ತು ಕೋಟಿತೀರ್ಥ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದಾರೆ.

ಈ ಕುರಿತು ಮಾತನಾಡಿದ ನಿವೇದಿತ್ ಆಳ್ವಾ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಕಾಳಜಿ ಹೊಂದಿದ್ದು, ಮೊದಲ ಹಂತವಾಗಿ ದೇವಾಲಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಂಕಾಳ ವೈದ್ಯ ಮಾತನಾಡಿ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಲಿದ್ದು, ಮುಂದಿನ ದಿನಗಳಲ್ಲಿ ಗೋಕರ್ಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

SIR ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆರೋಪ: ಸಂಕೇಶ್ವರದಲ್ಲಿ BLO ಅಧಿಕಾರಿಗಳ ವಿರುದ್ಧ ಆಕ್ರೋಶ

ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ.

ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆಗಳಿಗೆ ಭೇಟಿ ನೀಡದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸರ್ಕಾರದ ನಿಯಮದಂತೆ ಮತದಾರರ ಮಾಹಿತಿ ಸಂಗ್ರಹಿಸಬೇಕಿದ್ದರೂ, ಅಧಿಕಾರಿಗಳು ಮನೆಗೆ ಭೇಟಿ ನೀಡದೆ ಫೋನ್ ಕರೆ ಮೂಲಕ ಮಾಹಿತಿ ಪಡೆದು ಅರ್ಜಿಗಳನ್ನು ಭರ್ತಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರಶ್ನಿಸಿದ ಸಾರ್ವಜನಿಕರಿಗೆ BLO ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ರಾಕೆಟ್ ರಂಗೇರಿಸಿದ ತಕ್ಷಶೀಲಾ ಬ್ಯಾಡ್ಮಿಂಟನ್ ಟೂರ್ನಿ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪಟ್ಟಣದ ತಕ್ಷಶೀಲಾ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಯು-14 ಹಾಗೂ ಯು-19 ಬಾಲಕರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರತಿಭಾವಂತ ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.

ಯು-14 ವಿಭಾಗದಲ್ಲಿ ಅಥರ್ವ ಪ್ರಥಮ ಹಾಗೂ ಮನು ದ್ವಿತೀಯ ಸ್ಥಾನ ಪಡೆದರೆ, ಯು-19 ವಿಭಾಗದಲ್ಲಿ ಆಫ್ರಿದಿ ಪ್ರಥಮ ಹಾಗೂ ಸಂತೋಷ್ ನಾಯಕ್ ದ್ವಿತೀಯ ಸ್ಥಾನ ಪಡೆದು ಟ್ರೋಫಿಗೆ ಭಾಜನರಾದರು.

ಕಾರ್ಯಕ್ರಮದ ರೂವಾರಿ ಹಾಗೂ ಕೋಚ್ ಎಂ. ಸುಲೇಮಾನ್ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸುವ ಗುರಿ ಹೊಂದಿದ್ದೇವೆ. ಕ್ರೀಡೆ ಯುವಕರಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುತ್ತದೆ ಎಂದು ಹೇಳಿದರು.

ಟ್ರೋಫಿ ಪ್ರಾಯೋಜಕ ಶೇಕ್ ಅಹಮದ್ ಮಾತನಾಡಿ, ಕ್ರೀಡಾಪಟುಗಳಿಗೆ ಸೂಕ್ತ ಪ್ರೋತ್ಸಾಹ ನೀಡುವುದು ಸಮಾಜದ ಜವಾಬ್ದಾರಿಯಾಗಿದೆ. ಪ್ರತಿಭಾವಂತರಿಗೆ ಬೆಂಬಲ ಸಿಕ್ಕರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಾರೆ ಎಂದರು.

ಟೂರ್ನಿಯ ಪ್ರಾಯೋಜಕ ರಾಘವೇಂದ್ರ ಮಾತನಾಡಿ, ಕ್ರೀಡೆ ಕೇವಲ ಸ್ಪರ್ಧೆಯಲ್ಲ, ವ್ಯಕ್ತಿತ್ವ ರೂಪಿಸುವ ಸಾಧನವೂ ಆಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಸಂಚಿ ಶಿವಕುಮಾರ್ ಮಾತನಾಡಿ, ಇಂದಿನ ಯುವಕರು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆ ಮಾನಸಿಕ ಆರೋಗ್ಯ ವೃದ್ಧಿಸುವುದರ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ಕಲಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮ ಯಶಸ್ವಿಯಾಗಲು ಶಿಕ್ಷಕ ಆಂಜನೇಯ, ಕೋಚ್ ಆತಿಫ್, ತಕ್ಷಶೀಲಾ ಬ್ಯಾಡ್ಮಿಂಟನ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

“ಗ್ರಾಮೀಣ ಭಾಗದ ಮಕ್ಕಳಲ್ಲೂ ಅಪಾರ ಪ್ರತಿಭೆ ಅಡಗಿದೆ. ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದಲೇ ಈ ಟೂರ್ನಿಯನ್ನು ಆಯೋಜಿಸಿದ್ದೇವೆ.”

– ಎಂ. ಸುಲೇಮಾನ್, ಕೋಚ್ ಹಾಗೂ ಟೂರ್ನಿ ಆಯೋಜಕರು

ದುಶ್ಚಟಗಳಿಂದ ದೂರವಿದ್ದರೆ ಯಶಸ್ಸು ಖಚಿತ: ಹಿರಿಯ ಪತ್ರಕರ್ತ ಬಸವರಾಜ ದಂಡಿನ

0

ವಿಜಯಸಾಕ್ಷಿ ಸುದ್ದಿ, ಗದಗ: ದುಶ್ಚಟಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ದುರ್ಬಲಗೊಳಿಸುತ್ತವೆ. ಉತ್ತಮ ಆರೋಗ್ಯ, ಶಿಸ್ತು ಮತ್ತು ನಿರಂತರ ಅಧ್ಯಯನದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಬಸವರಾಜ ದಂಡಿನ ಹೇಳಿದರು.

ನಗರದ ಸಂಕೇತ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಆಯೋಜಿಸಿದ್ದ ‘ಸ್ವಾಸ್ಥ ಸಂಕಲ್ಪ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತಮರ ಸಹವಾಸದಿಂದ ಉತ್ತಮ ವಿಚಾರಗಳು ಮೂಡುತ್ತವೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಹಿರಿಯರ ಮಾರ್ಗದರ್ಶನದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗದಗ ತಾಲೂಕು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ ಹುಯಿಲಗೋಳ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಂಗವಾಗಿ ನಡೆದ ವೆಬಿನಾರ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಉತ್ತಮ ಜೀವನಶೈಲಿ, ಆರೋಗ್ಯ ಹಾಗೂ ಮೌಲ್ಯಯುತ ಬದುಕಿನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಮಾರುತಿ ಪೂಜಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಲಕ್ಷ್ಮಿ ಪಾವಸ್ಕಾರ್, ಸೇವಾ ಪ್ರತಿನಿಧಿಗಳಾದ ಸುಜಾತಾ ಪಾಟೀಲ, ಲಕ್ಷ್ಮಿ ಅರಮನಿ, ಜ್ಯೋತಿ ಗೌಡರ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಉತ್ತಮ ಆರೋಗ್ಯ ಮತ್ತು ದುಶ್ಚಟಗಳಿಂದ ದೂರವಿರುವ ಮನೋಭಾವವೇ ಯಶಸ್ಸಿನ ಭದ್ರ ಬುನಾದಿ.”

– ಬಸವರಾಜ ದಂಡಿನ, ಹಿರಿಯ ಪತ್ರಕರ್ತ

ಶಿಕ್ಷಣದ ಮೂಲಕ ಸಮಾಜ ಕಟ್ಟಿದ ಅನ್ನದಾನ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪೂಜ್ಯಗುರು ಅನ್ನದಾನ ಮಹಾಸ್ವಾಮಿಗಳ ದೂರದೃಷ್ಟಿ, ತ್ಯಾಗ ಮತ್ತು ಶಿಕ್ಷಣದ ಮೇಲಿನ ಅಪಾರ ಕಾಳಜಿಯಿಂದ ಆರಂಭವಾದ ಶ್ರೀ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿಯು ಇಂದು ಸಾವಿರಾರು ವಿದ್ಯಾರ್ಥಿಗಳ ಬದುಕಿಗೆ ಬೆಳಕಾಗಿ, ಹೆಣ್ಣುಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆದಿದೆ ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ ಹೇಳಿದರು.

ಪಟ್ಟಣದ ಶ್ರೀ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ, ಶಾಲಾ ಸಂಸತ್ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ ಹಾಗೂ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

1943ರಲ್ಲಿ ಪೂಜ್ಯಗುರು ಅನ್ನದಾನ ಮಹಾಸ್ವಾಮಿಗಳ ಆಶಯದಂತೆ ಸ್ಥಾಪನೆಯಾದ ಸಂಸ್ಥೆ, ಶಿಕ್ಷಣವನ್ನು ಸಮಾಜ ಪರಿವರ್ತನೆಯ ಸಾಧನವನ್ನಾಗಿ ರೂಪಿಸಿಕೊಂಡಿದೆ. ಅದರ ಮುಂದುವರಿದ ಭಾಗವಾಗಿ 1972ರಲ್ಲಿ ಆರಂಭವಾದ ಬಾಲಕಿಯರ ಪ್ರೌಢಶಾಲೆ ಗ್ರಾಮೀಣ ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸಾವಿರಾರು ವಿದ್ಯಾರ್ಥಿನಿಯರ ಭವಿಷ್ಯ ರೂಪಿಸಿದೆ ಎಂದು ಹೇಳಿದರು.

ಈ ಶಾಲೆಯ ಹಳೆಯ ವಿದ್ಯಾರ್ಥಿನಿಯರು ಶಿಕ್ಷಕಿಯರು, ವೈದ್ಯರು, ಅಧಿಕಾರಿಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜ ಸೇವೆಯಲ್ಲಿ ತೊಡಗಿರುವುದು ಸಂಸ್ಥೆಯ ಹೆಮ್ಮೆಯಾಗಿದೆ. ಶಿಕ್ಷಣವು ಕೇವಲ ಉದ್ಯೋಗಕ್ಕಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಮೌಲ್ಯಯುತ ಬದುಕು ರೂಪಿಸುವ ಸಾಧನವಾಗಬೇಕು ಎಂದು ಕರೆ ನೀಡಿದರು.

ಸಾಂಸ್ಕೃತಿಕ ಚಟುವಟಿಕೆಗಳನ್ನು ಉದ್ಘಾಟಿಸಿದ ಎಸ್.ಎ. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ, ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ. ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಕಲೆ, ಸಾಹಿತ್ಯ, ಸಂಗೀತ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಶಾಲಾ ಸಂಸತ್ ಫಲಕವನ್ನು ಉದ್ಘಾಟಿಸಿದ ಅಭಿನವ ಅನ್ನದಾನೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ಅನಸೂಯಾ ಪಾಟೀಲ, ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ವೇದಿಕೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಸಂಸ್ಥಾಪಕರ ದಿನಾಚರಣೆಯನ್ನು ವೀರಣ್ಣ ಹಳ್ಳಿ ನೆರವೇರಿಸಿದರು. ಇದೇ ವೇಳೆ 2005–06ನೇ ಸಾಲಿನ ಹಳೆಯ ವಿದ್ಯಾರ್ಥಿನಿಯರು ಶಾಲೆಗೆ ಪ್ರದರ್ಶನ ಫಲಕವನ್ನು ದೇಣಿಗೆಯಾಗಿ ನೀಡಿ ಉದ್ಘಾಟಿಸಿದರು.

ಶಾಲಾ ಸಂಸತ್ ಸದಸ್ಯರಿಗೆ ಎಸ್. ಶಿವಮೂರ್ತಿ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ಎಸ್.ಎನ್. ಹೂಲಗೇರಿ ವಹಿಸಿದ್ದರು. ಎ.ಟಿ. ಮಳ್ಳಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕರು, ಹಳೆಯ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿನಿಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಮೆಚ್ಚುಗೆ ಪಡೆದರು.

“ಅನ್ನದಾನ ಮಹಾಸ್ವಾಮಿಗಳ ಶಿಕ್ಷಣದ ಕನಸು ಇಂದು ಸಾವಿರಾರು ವಿದ್ಯಾರ್ಥಿನಿಯರ ಬದುಕು ಬೆಳಗಿಸುತ್ತಿದೆ. ಶಿಕ್ಷಣದ ಮೂಲಕ ಸಮಾಜ ಪರಿವರ್ತನೆ ಸಾಧ್ಯ ಎಂಬುದನ್ನು ನಮ್ಮ ಸಂಸ್ಥೆ ಸಾಬೀತುಪಡಿಸಿದೆ.”

– ರವೀಂದ್ರನಾಥ ದೊಡ್ಡಮೇಟಿ, ಪ್ರಧಾನ ಕಾರ್ಯದರ್ಶಿ, ಶ್ರೀ ಅನ್ನದಾನ ವಿಜಯ ವಿದ್ಯಾಪ್ರಸಾರಕ ಸಮಿತಿ

ಜಿಲ್ಲಾಧ್ಯಕ್ಷರಾಗಿ ಶ್ರೀಕಾಂತ ಪೂಜಾರ ನೇಮಕ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಎಸ್‌ಸಿ/ಎಸ್‌ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ಗದಗ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಯುವ ಹೋರಾಟಗಾರ ಶ್ರೀಕಾಂತ ಸಿ. ಪೂಜಾರ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಸಮಿತಿಯ ರಾಜ್ಯಾಧ್ಯಕ್ಷ ಶ್ರವಣಕುಮಾರ ಡಿ. ನಾಯಕ ಆದೇಶ ಹೊರಡಿಸಿದ್ದು, ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಜತೆಗೆ ಎಸ್‌ಸಿ/ಎಸ್‌ಟಿ ಸಮುದಾಯಗಳ ಹೆಸರಿನಲ್ಲಿ ನಡೆಯುವ ನಕಲಿ ಜಾತಿ ಪ್ರಮಾಣ ಪತ್ರಗಳ ದಂಧೆ ವಿರುದ್ಧ ಕಾನೂನುಬದ್ಧ ಹೋರಾಟ ನಡೆಸುವಂತೆ ಸೂಚಿಸಿದ್ದಾರೆ.

ಸಮಿತಿಯ ನಿಯಮಾವಳಿಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಮಾಜಮುಖಿ ಸೇವೆ ಸಲ್ಲಿಸುವಂತೆ ನೂತನ ಜಿಲ್ಲಾಧ್ಯಕ್ಷರಿಗೆ ಅವರು ಶುಭ ಹಾರೈಸಿದ್ದಾರೆ.

ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯವನ್ನು ದೇಶಕ್ಕೇ ಮಾದರಿಯಾಗಿಸುತ್ತೇನೆ: ಕುಲಪತಿ ಡಾ. ಎಸ್.ವಿ. ನಾಡಗೌಡರ

0

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮಗಳ ಅಭಿವೃದ್ಧಿಯಲ್ಲೇ ದೇಶದ ಅಭಿವೃದ್ಧಿ ಅಡಗಿದೆ ಎಂಬ ಮಹಾತ್ಮ ಗಾಂಧೀಜಿಯವರ ಚಿಂತನೆಗೆ ಅನುಗುಣವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ದೇಶಕ್ಕೇ ಮಾದರಿಯಾಗುವ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ನೂತನ ಕುಲಪತಿ ಡಾ. ಎಸ್.ವಿ. ನಾಡಗೌಡರ ಹೇಳಿದರು.

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ನೌಕರರ ಸಂಘದ ಗದಗ ಜಿಲ್ಲಾ ಘಟಕ, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪ್ರಾಚಾರ್ಯರ ಸಂಘದ ವತಿಯಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು.

ಗ್ರಾಮೀಣಾಭಿವೃದ್ಧಿ, ಸ್ಥಳೀಯ ಆಡಳಿತ ಮತ್ತು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಮಾಜಮುಖಿ ಕೌಶಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆ ಹಾಗೂ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ದೊರೆಯುವಂತೆ ವಿಶೇಷ ಯೋಜನೆಗಳನ್ನು ರೂಪಿಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಬಿ.ಜಿ. ಗಿರಿತಮ್ಮಣ್ಣವರ, ಐ.ಬಿ. ಹಾದಿಮನಿ, ಡಾ. ಬಿ.ಎಸ್. ರಾಥೋಡ್, ಎಸ್.ಬಿ. ಹಾವೇರಿ, ರವಿ ಕುಲಕರ್ಣಿ, ಎಸ್.ಎಂ. ಗುಳಗುಳಿ, ಉಪನ್ಯಾಸಕರಾದ ಡಾ. ವೈ.ಆರ್. ಬೇಲೇರಿ, ಎಸ್.ಐ. ಮೇಟಿ, ಶ್ರೀಶೈಲ್ ಬೀರಕಬ್ಬಿ, ಕೆ.ಎಸ್. ಗಂಗನಗೌಡ್ರ, ಬಿ.ಬಿ. ಮಿರ್ಜಿ, ಶರಣು ಚೇಗರೆಡ್ಡಿ, ನಿವೃತ್ತ ಉಪನ್ಯಾಸಕರಾದ ಜಿ.ಎಂ. ಹಕಾರಿ ಉಪಸ್ಥಿತರಿದ್ದರು.

ಪ್ರಾಚಾರ್ಯ ಅಶೋಕ ಅಂಗಡಿ ಸ್ವಾಗತಿಸಿದರು. ಎಂ.ಸಿ. ಕಟ್ಟಿಮನಿ ವಂದಿಸಿದರು.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವನ್ನು ದೇಶದಲ್ಲೇ ಮಾದರಿಯಾಗುವ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.”

– ಡಾ. ಎಸ್.ವಿ. ನಾಡಗೌಡರ, ಕುಲಪತಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ? ಸರ್ಕಾರದ ಮುಂದಿದೆ ಹೊಸ ಪ್ರಸ್ತಾಪ!

ಬೆಂಗಳೂರು: ರಾಷ್ಟ್ರಕವಿ ಕುವೆಂಪು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಮಹತ್ವದ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆದಿದೆ.

ನಾಡಗೀತೆಯಲ್ಲಿ ಜೈನ ಧರ್ಮದ ಜೊತೆಗೆ ‘ಬೌದ್ಧ ಧರ್ಮ’ದ ಹೆಸರನ್ನೂ ಸೇರಿಸಲು ಪ್ರಸ್ತಾಪಿಸಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ನೇತೃತ್ವದ ಸಮಿತಿ ಈ ಸಲಹೆ ನೀಡಿದ್ದು, ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಪ್ರಸ್ತುತ ನಾಡಗೀತೆಯಲ್ಲಿ “ಜೈನರ ಪೂಜ್ಯ ಉದ್ಯಾನ” ಎಂಬ ಸಾಲಿದೆ. ಈ ಸಾಲಿನಲ್ಲಿ ಬೌದ್ಧ ಧರ್ಮದ ಹೆಸರನ್ನೂ ಸೇರಿಸುವ ಕುರಿತು ಸಮಿತಿ ಸಲಹೆ ನೀಡಿದೆ. “ಜೈನ ಬೌದ್ಧರ ಪೂಜ್ಯ ಉದ್ಯಾನ” ಅಥವಾ “ಜೈನರುದ್ಯಾನದ ಜೊತೆಗೆ ಬೌದ್ಧರುದ್ಯಾನ” ಎಂದು ಬದಲಾವಣೆ ಮಾಡಲು ಪ್ರಸ್ತಾಪಿಸಲಾಗಿದೆ.

ಎಲ್ಲ ಧರ್ಮಗಳ ಸಮಾನತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಬೌದ್ಧ ಧರ್ಮದ ಹೆಸರನ್ನು ಸೇರಿಸುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಸಮಿತಿಯ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದ್ದು, ರಾಜ್ಯ ಸರ್ಕಾರ ಒಪ್ಪಿಗೆ ನೀಡಿದರೆ ನಾಡಗೀತೆಯಲ್ಲಿ ಬದಲಾವಣೆ ಜಾರಿಯಾಗುವ ಸಾಧ್ಯತೆ ಇದೆ. ಬಳಿಕ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪರಿಷ್ಕೃತ ನಾಡಗೀತೆ ಬಳಕೆಗೆ ಬರಬಹುದು.

ರಂಗೋಲಿಯ ಮೂಲಕ ಸಂಸ್ಕೃತಿ ಅರಳಿಸಿದ ಮಹಿಳಾ ಮಂಡಳ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸರಾಫ್ ಬಜಾರ್‌ನ ಸಹಸ್ರಾರ್ಜುನ ಸಮುದಾಯ ಭವನದಲ್ಲಿ ಎಸ್‌ಎಸ್‌ಎಸ್‌ಕೆ ಶ್ರೀ ಜಗದಂಬಾ ಮಹಿಳಾ ಮಂಡಳದ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಸಂಸ್ಕಾರ ಭಾರತಿ ರಂಗೋಲಿ ತರಬೇತಿ ಶಿಬಿರ ಯಶಸ್ವಿಯಾಗಿ ಸಂಪನ್ನಗೊಂಡಿತು.

ಜುಲೈ 10ರಿಂದ 12ರವರೆಗೆ ಪ್ರತಿದಿನ ಸಂಜೆ 5ರಿಂದ 8 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಸಮಾಜದ ಮಹಿಳೆಯರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಎಎಸ್‌ಎಸ್ ಕಾಲೇಜಿನ ಪ್ರಾಧ್ಯಾಪಕಿ ಶ್ರೀಮತಿ ಸುಮನ್ ಪಾಟೀಲ (ಕುಲಕರ್ಣಿ) ತರಬೇತಿ ನೀಡಿದರು.

ಮೊದಲ ದಿನ ಸಂಸ್ಕಾರ ಭಾರತಿ ರಂಗೋಲಿಯ ಮೂಲಭೂತ ಅಂಶಗಳಾದ ಚುಕ್ಕಿ, ವೃತ್ತ, ಗೋಪಾದ ಹಾಗೂ ತುರಾಯಿ ವಿನ್ಯಾಸಗಳನ್ನು ಪರಿಚಯಿಸಿದರು. ಎರಡನೇ ದಿನ ಸ್ವಸ್ತಿಕ್, ಗಣೇಶ ಹಾಗೂ ಓಂ ವಿನ್ಯಾಸಗಳನ್ನು ಬಿಡಿಸುವ ವಿಧಾನವನ್ನು ಪ್ರಾಯೋಗಿಕವಾಗಿ ತಿಳಿಸಿಕೊಟ್ಟರು. ಮೂರನೇ ದಿನ ಬಣ್ಣಗಳ ಬಳಕೆ, ಬಣ್ಣಗಳ ಸಂಯೋಜನೆ ಹಾಗೂ ಆಕರ್ಷಕ ರಂಗೋಲಿ ವಿನ್ಯಾಸಗಳ ಕುರಿತು ವಿವರವಾಗಿ ತರಬೇತಿ ನೀಡಿದರು.

ಶಿಬಿರದಲ್ಲಿ ಸುಮಾರು 45ಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿ ಸಂಸ್ಕಾರ ಭಾರತಿ ರಂಗೋಲಿ ಕಲೆಯ ಬಗ್ಗೆ ಪ್ರಾಯೋಗಿಕ ಜ್ಞಾನ ಪಡೆದುಕೊಂಡರು.

Bengaluru Fire News: ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ, ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ.

ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸುತ್ತಿದ್ದಂತೆ ರೋಗಿಗಳು ಭಯಗೊಂಡು ಆಸ್ಪತ್ರೆಯಿಂದ ಹೊರಗೆ ಓಡಿ ಬಂದಿದ್ದಾರೆ. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಹೊಗೆ ಕಾಣಿಸುತ್ತಿದ್ದಂತೆಯೇ ಎಚ್ಚೆತ್ತ ಆಸ್ಪತ್ರೆ ಸಿಬ್ಬಂದಿ ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಇದರಿಂದ ಕೆಲಕಾಲ ಆಸ್ಪತ್ರೆ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ವೇಳೆ ಆಪರೇಷನ್ ಥಿಯೇಟರ್‌ನಲ್ಲಿ ಯಾವುದೇ ರೋಗಿಗಳು ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಳಿಕ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ರಾತ್ರಿ ಸುಮಾರು 9 ಗಂಟೆ ವೇಳೆಗೆ ನಡೆದಿದ್ದು, ಎರಡು ಗಂಟೆ ಕಳೆದರೂ ತಾಲೂಕು ಆರೋಗ್ಯ ಅಧಿಕಾರಿ (THO) ರವಿ ಸ್ಥಳಕ್ಕೆ ಆಗಮಿಸಿಲ್ಲ ಎಂದು ಸ್ಥಳೀಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ.