Home Blog

ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಸೂಚನೆ ಎದುರಾಗಿದೆ. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಒಂದು ವಾರಕ್ಕೆ ಮುಂದೂಡಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.

ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್‌ ಹಾಗೂ ಸಂದೀಪ್‌ ಮೆಹ್ತಾ ಅವರನ್ನೊಳಗೊಂಡ ಪೀಠ ನಡೆಸಿತು.

ವಿಚಾರಣೆ ವೇಳೆ ತಮಿಳುನಾಡು ಪರ ವಕೀಲರು, CWMA ನಿರ್ದೇಶನಗಳ ಹೊರತಾಗಿಯೂ ಕರ್ನಾಟಕದಿಂದ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ ಎಂದು ವಾದಿಸಿದರು. ನೀರಿನ ಹರಿವು ಕಾಣಿಸುತ್ತಿಲ್ಲ. ಹೀಗಾಗಿ ತಮಿಳುನಾಡಿನ ರೈತರಿಗೆ ನೀರು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಇಂದು ಬೆಳಗ್ಗಿನ ವೇಳೆಗೆ ಜಲಾಶಯದಲ್ಲಿ ಶೇ.76ರಷ್ಟು ನೀರು ಸಂಗ್ರಹವಿದೆ. ನ್ಯಾಯಾಲಯದ ಹಿಂದಿನ ಆದೇಶದ ಪ್ರಕಾರ 64 ಟಿಎಂಸಿ ನೀರು ಬರಬೇಕಾಗಿತ್ತು. ಆದರೆ, ತಮಿಳುನಾಡಿಗೆ ಕೇವಲ 14 ಟಿಎಂಸಿ ನೀರು ಬಂದಿದೆ. ಮಳೆಯ ಕೊರತೆಯನ್ನು ಪರಿಗಣಿಸಿದರೂ ಕನಿಷ್ಠ ಅರ್ಧದಷ್ಟು ನೀರನ್ನು ಹರಿಸಬೇಕಿತ್ತು ಎಂದು ತಮಿಳುನಾಡು ವಾದಿಸಿತು.

ಇದಕ್ಕೆ ಪ್ರತಿಯಾಗಿ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣದಲ್ಲಿ ಭಾರೀ ಅನಿಶ್ಚಿತತೆ ಇದ್ದು, ಅಗಾಧ ಪ್ರಮಾಣದ ಮಳೆ ಕೊರತೆಯಾಗಿದೆ ಎಂದು ತಿಳಿಸಿತು.

CWMA ಈಗಾಗಲೇ ಎರಡು ಪ್ರತ್ಯೇಕ ಆದೇಶಗಳನ್ನು ನೀಡಿದ್ದು, ಮೊದಲ ಆದೇಶದಂತೆ 3,500 ಕ್ಯೂಸೆಕ್‌ ಹಾಗೂ ಎರಡನೇ ಆದೇಶದಂತೆ 12,000 ಕ್ಯೂಸೆಕ್‌ ನೀರು ಹರಿಸಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕದ ಪರ ವಕೀಲರು ವಿವರಿಸಿದರು.

ನಾವು 3,500 ಕ್ಯೂಸೆಕ್‌ಗಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಿದ್ದೇವೆ. ಕರ್ನಾಟಕ ನೀರು ಹರಿಸಿಲ್ಲ ಎಂಬ ತಮಿಳುನಾಡಿನ ವಾದ ಸತ್ಯಕ್ಕೆ ದೂರವಾಗಿದೆ ಎಂದು ಕರ್ನಾಟಕ ತಿಳಿಸಿತು.

CWMAಯ ಎರಡನೇ ಆದೇಶದ ಅನ್ವಯ ಕೆಆರ್‌ಎಸ್‌ ಜಲಾಶಯದಿಂದ ನೀರು ಹರಿಸಲಾಗಿದೆ. ಕೆಆರ್‌ಎಸ್‌ನಿಂದ ಬಿಳಿಗುಂಡ್ಲು ತಲುಪಲು ಸುಮಾರು 48 ಗಂಟೆಗಳ ಸಮಯ ಬೇಕಾಗುತ್ತದೆ. ಹೀಗಾಗಿ ನೀರು ಹರಿಸಿದ ತಕ್ಷಣವೇ ಅದರ ಪರಿಣಾಮ ಬಿಳಿಗುಂಡ್ಲುವಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕರ್ನಾಟಕದ ಪರ ವಾದಿಸಲಾಯಿತು.

ಉಭಯ ರಾಜ್ಯಗಳ ವಾದ-ಪ್ರತಿವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್‌, ನೀರು ಹರಿಯುವಿಕೆಯ ಪ್ರಮಾಣವನ್ನು ಖಚಿತಪಡಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ತಿಳಿಸಿತು.

ಕಾವೇರಿ ನೀರು ಹರಿಸುವ ವಿಚಾರದ ಮುಂದಿನ ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಿದ ನ್ಯಾಯಾಲಯ, ಮುಂದಿನ ವಿಚಾರಣೆಯ ವೇಳೆ ಎರಡೂ ರಾಜ್ಯಗಳು ಅಗತ್ಯ ಅಂಕಿ-ಅಂಶಗಳೊಂದಿಗೆ ಹಾಜರಾಗಬೇಕು ಎಂದು ಸೂಚಿಸಿತು. ಇದೇ ವೇಳೆ CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

IND vs SL: ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ʼನಲ್ಲಿ ಭಾರತ 462 ರನ್ʼಗೆ ಆಲೌಟ್!

0

ಗಾಲೆ: ಗಾಲೆ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 462 ರನ್‌ಗಳಿಗೆ ಆಲೌಟ್ ಆಗಿದೆ. ಮಳೆಯ ಅಡ್ಡಿಯ ನಡುವೆಯೂ ಕನ್ನಡಿಗ ದೇವದತ್ ಪಡಿಕ್ಕಲ್ ಅವರ ಆಕರ್ಷಕ ಶತಕ ಹಾಗೂ ಕೆ.ಎಲ್. ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್‌ನಲ್ಲಿ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಯಶಸ್ವಿ ಜೈಸ್ವಾಲ್ 32 ರನ್ ಗಳಿಸಿ ರನ್‌ಔಟ್ ಆದರು. ಬಳಿಕ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್, ಶ್ರೀಲಂಕಾ ಬೌಲರ್‌ಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಭರ್ಜರಿ ಬ್ಯಾಟಿಂಗ್ ನಡೆಸಿದರು.

ಪಡಿಕ್ಕಲ್ ಕೇವಲ 134 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಗಮನಾರ್ಹ ಇನ್ನಿಂಗ್ಸ್ ಆಡಿದರು. ಶತಕದ ಬಳಿಕವೂ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರಿಸಿದ ಅವರು ಅಂತಿಮವಾಗಿ 230 ಎಸೆತಗಳಲ್ಲಿ 167 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿತ್ತು. ಪಡಿಕ್ಕಲ್ ವಿಕೆಟ್ ಒಪ್ಪಿಸುವ ವೇಳೆಗೆ ಭಾರತದ ಸ್ಕೋರ್ 350 ರನ್‌ಗಳ ಗಡಿ ದಾಟಿತ್ತು.

ಇನ್ನೊಂದೆಡೆ ಅನುಭವಿ ಬ್ಯಾಟರ್ ಕೆ.ಎಲ್. ರಾಹುಲ್ ಕೂಡ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿ 82 ರನ್ ಗಳಿಸಿದರು. ಕೆಳ ಕ್ರಮಾಂಕದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅರ್ಧಶತಕ ಸಿಡಿಸಿ ತಂಡದ ಮೊತ್ತ ಹೆಚ್ಚಿಸಲು ನೆರವಾದರು. ಜುರೆಲ್ 51 ರನ್ ಗಳಿಸಿದ್ದು, ಮಾನವ್ ಸುತಾರ್ ಅವರೊಂದಿಗೆ 55 ರನ್‌ಗಳ ಮಹತ್ವದ ಜೊತೆಯಾಟವಾಡಿದರು. ಈ ಜೊತೆಯಾಟದ ನೆರವಿನಿಂದ ಭಾರತ 400 ರನ್‌ಗಳ ಗಡಿ ದಾಟಿತು.

ಮೂರನೇ ದಿನದ ಆರಂಭದಲ್ಲೇ ಅಸಿತಾ ಫೆರ್ನಾಂಡೊ ಅವರ ಬೌಲಿಂಗ್‌ನಲ್ಲಿ ಪ್ರಸಿದ್ಧ್ ಕೃಷ್ಣ ವಿಕೆಟ್ ಒಪ್ಪಿಸುವುದರೊಂದಿಗೆ ಭಾರತದ ಮೊದಲ ಇನಿಂಗ್ಸ್ 462 ರನ್‌ಗಳಿಗೆ ಅಂತ್ಯಗೊಂಡಿತು.

ಶ್ರೀಲಂಕಾ ಪರ ಎಡಗೈ ಸ್ಪಿನ್ನರ್ ಪ್ರಭಾತ್ ಜಯಸೂರ್ಯ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. 109 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದ ಜಯಸೂರ್ಯ, ಲಂಕಾ ತಂಡದ ಪರ ಯಶಸ್ವಿ ಬೌಲರ್ ಎನಿಸಿಕೊಂಡರು.

ಭಾರತ ಪ್ಲೇಯಿಂಗ್ XI

ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಶ್ರೀಲಂಕಾ ಪ್ಲೇಯಿಂಗ್ XI

ಲಹಿರು ಉದಾರ, ನಿಶಾನ್ ಮಧುಶಂಕ, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸೋನಾಲ್ ದಿನುಶಾ, ನಿರೋಶಾ ಡಿಕ್ವೆಲ್ಲಾ, ಕೇಶರ ನುವಂತ, ಪ್ರಭಾತ್ ಜಯಸೂರ್ಯ, ಲಹಿರು ಕುಮಾರ, ಅಸಿತಾ ಫೆರ್ನಾಂಡೊ.

62 ಎಸೆತಗಳಲ್ಲಿ 39 ರನ್ ಗಳಿಸಿ ಪಂತ್ ಔಟ್: ಟೀಂ ಇಂಡಿಯಾ ವಿಕೆಟ್ ಕೀಪರ್ ವಿರುದ್ಧ ಮೊಹಮ್ಮದ್ ಕೈಫ್ ಅಸಮಾಧಾನ

0

ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮೊತ್ತದತ್ತ ಸಾಗುತ್ತಿದ್ದರೂ, ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರ ವಿಕೆಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪಂತ್ 62 ಎಸೆತಗಳಲ್ಲಿ 39 ರನ್ ಗಳಿಸಿದ್ದ ವೇಳೆ ಅನಗತ್ಯವಾಗಿ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿಕೊಂಡರು. ಪಂತ್ ಅವರ ಈ ಬ್ಯಾಟಿಂಗ್ ನಿರ್ಧಾರವನ್ನು ಭಾರತ ತಂಡದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ತೀವ್ರವಾಗಿ ಟೀಕಿಸಿದ್ದಾರೆ.

ಪಂತ್ ಕ್ರೀಸ್‌ನಲ್ಲಿ ಉತ್ತಮವಾಗಿ ನೆಲೆಯೂರಿದ್ದರು. ಹೀಗಾಗಿ ತಂಡಕ್ಕೆ ದೊಡ್ಡ ಮೊತ್ತ ಕಲೆಹಾಕಲು ನೆರವಾಗುವ ಜವಾಬ್ದಾರಿ ಅವರ ಮೇಲಿತ್ತು. ಆದರೆ ಶ್ರೀಲಂಕಾ ತಂಡ ಎರಡನೇ ಹೊಸ ಚೆಂಡನ್ನು ಪಡೆದ ಬಳಿಕ ಮೊದಲ ಓವರ್‌ನಲ್ಲೇ ಪಂತ್ ಆಕ್ರಮಣಕಾರಿ ಹೊಡೆತಕ್ಕೆ ಮುಂದಾಗಿದ್ದು, ಇದೀಗ ಪ್ರಶ್ನೆಗೆ ಕಾರಣವಾಗಿದೆ.

ಆಫ್ ಸ್ಪಿನ್ನರ್ ಕೇಶರ ನುವಾಂತ ಅವರ ಬೌಲಿಂಗ್‌ನಲ್ಲಿ ಪಂತ್ ಕ್ರೀಸ್‌ನಿಂದ ಮುಂದೆ ಬಂದು ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಕೆಳಭಾಗಕ್ಕೆ ತಾಗಿ ಮಿಡ್-ಆಫ್‌ನಲ್ಲಿದ್ದ ಫೀಲ್ಡರ್ ಕೈ ಸೇರಿತು. ಇದರೊಂದಿಗೆ ಉತ್ತಮವಾಗಿ ಆಡುತ್ತಿದ್ದ ಪಂತ್ ಅವರ ಇನ್ನಿಂಗ್ಸ್ ಅಂತ್ಯಗೊಂಡಿತು.

ಈ ಬಗ್ಗೆ ಸೋನಿ ಸ್ಪೋರ್ಟ್ಸ್ ವಾಹಿನಿಯಲ್ಲಿ ಮಾತನಾಡಿದ ಮೊಹಮ್ಮದ್ ಕೈಫ್, ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಚೆಂಡು ಬಂದಾಗ ಬ್ಯಾಟರ್‌ಗಳು ಹೆಚ್ಚಿನ ಎಚ್ಚರಿಕೆಯಿಂದ ಆಡಬೇಕು ಎಂದು ಹೇಳಿದ್ದಾರೆ. ಶತಕ ಅಥವಾ 150 ರನ್ ಗಳಿಸಿ ಕ್ರೀಸ್‌ನಲ್ಲಿದ್ದ ಬ್ಯಾಟರ್ ಕೂಡ ಹೊಸ ಚೆಂಡು ಬಂದಾಗ ಕನಿಷ್ಠ 5ರಿಂದ 6 ಓವರ್‌ಗಳ ಕಾಲ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆಡುವುದು ಸಾಮಾನ್ಯ ಕ್ರಿಕೆಟ್ ನಿಯಮ ಎಂದು ಕೈಫ್ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಪಂತ್ ಹೊಸ ಚೆಂಡು ಬಂದ ಮೊದಲ ಓವರ್‌ನಲ್ಲೇ ಕ್ರೀಸ್ ಬಿಟ್ಟು ಮುನ್ನುಗ್ಗಿ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿದರು. ಇದು ಪರಿಸ್ಥಿತಿಗೆ ತಕ್ಕ ಕ್ರಿಕೆಟ್ ನಿರ್ಧಾರವಾಗಿರಲಿಲ್ಲ ಎಂದು ಕೈಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶ್ವದ ಅತ್ಯುತ್ತಮ ಆಕ್ರಮಣಕಾರಿ ಬ್ಯಾಟರ್‌ಗಳು ಕೂಡ ತಮ್ಮ ಸ್ವಾಭಾವಿಕ ಆಟದ ವೇಗವನ್ನು ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ನಿಯಂತ್ರಿಸುತ್ತಾರೆ. ಆದರೆ ಈ ಸಂದರ್ಭದಲ್ಲಿ ಪಂತ್ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಕೈಫ್ ಹೇಳಿದ್ದಾರೆ.

ಪಂತ್ ಅವರ ವಿಕೆಟ್ ಪತನದ ಬಳಿಕ ಭಾರತದ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡುಬಂದಿದ್ದು, ತಂಡ ಕೇವಲ 70 ರನ್‌ಗಳ ಅಂತರದಲ್ಲಿ ನಾಲ್ಕು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೂ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 460/9 ರನ್‌ಗಳ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ.

ಆದರೆ ಪಂತ್ ಅವರ ವಿಕೆಟ್ ಶ್ರೀಲಂಕಾ ತಂಡಕ್ಕೆ ಪಂದ್ಯದಲ್ಲಿ ಮರಳಿ ಹಿಡಿತ ಸಾಧಿಸಲು ಅವಕಾಶ ಮಾಡಿಕೊಟ್ಟಿತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯೇ ಪಂತ್ ಅವರ ಪ್ರಮುಖ ಬಲವಾಗಿದ್ದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಅದನ್ನು ನಿಯಂತ್ರಿಸುವುದು ಅಗತ್ಯ ಎಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಕಳಪೆ ಆಹಾರ ನೀಡುವ ಹೋಟೆಲ್ʼಗಳಿಗೆ ₹5 ಲಕ್ಷದವರೆಗೆ ದಂಡ: ಅಡುಗೆ ಕೋಣೆಯಲ್ಲಿ ಸಿಸಿಟಿವಿ ಕಡ್ಡಾಯ – ಯು.ಟಿ. ಖಾದರ್ ಎಚ್ಚರಿಕೆ

0

ಬೆಂಗಳೂರು: ಪಿಜಿ ಹಾಗೂ ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ನೀಡುವುದು ಕಂಡುಬಂದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಖಾಸಗಿ ಹಾಸ್ಟೆಲ್‌ಗಳಲ್ಲೂ ಆಹಾರ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಎಚ್ಚರಿಕೆ ನೀಡಿದ್ದಾರೆ.

ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಕರ್ತವ್ಯ ಪ್ರಜ್ಞೆ ಮೆರೆದ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಆರೋಗ್ಯ ಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧಿಕಾರಿಗಳಿಗೆ ಗೌರವ ಸಮರ್ಪಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡಲು ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಪಿಜಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಯುವಜನರು ಹಾಗೂ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಳಸಿಕೊಂಡು ಹಣ ಗಳಿಸುವ ಪ್ರಯತ್ನ ಮಾಡಬಾರದು. ಪಿಜಿಗಳಲ್ಲಿ ಮತ್ತೆ ಕಳಪೆ ಆಹಾರ ನೀಡುವುದು ಕಂಡುಬಂದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಖಾಸಗಿ ಹಾಸ್ಟೆಲ್‌ಗಳನ್ನೂ ಪರಿಶೀಲನೆ ನಡೆಸಲಾಗುವುದು ಎಂದು ಯು.ಟಿ. ಖಾದರ್‌ ಹೇಳಿದರು.

30 ತಂಡಗಳಿಂದ ಹೋಟೆಲ್‌ಗಳ ತಪಾಸಣೆ

ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳನ್ನು ತಯಾರಿಸುವ ಸ್ಥಳ ಹಾಗೂ ಆಹಾರ ಪದಾರ್ಥಗಳು ಎಲ್ಲಿಂದ ಸರಬರಾಜಾಗುತ್ತವೆ ಎಂಬುದರ ಬಗ್ಗೆಯೂ ತಪಾಸಣೆ ನಡೆಸಲಾಗಿದೆ. ರಾಜ್ಯದಲ್ಲಿ 30 ತಂಡಗಳನ್ನು ರಚಿಸಿ 60ಕ್ಕೂ ಹೆಚ್ಚು ತ್ರೀ-ಸ್ಟಾರ್‌, ಫೈವ್‌-ಸ್ಟಾರ್‌ ಹೋಟೆಲ್‌ಗಳು, 8 ವೇರ್‌ಹೌಸ್‌ಗಳು ಹಾಗೂ 4 ಅಂತಾರಾಷ್ಟ್ರೀಯ ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ವೇಳೆ 30 ಆಹಾರ ಉದ್ದಿಮೆದಾರರಿಗೆ ನೋಟಿಸ್‌ ನೀಡಲಾಗಿದ್ದು, ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಈಗಾಗಲೇ ಕಳಪೆ ಆಹಾರದೊಂದಿಗೆ ಸಿಕ್ಕಿಬಿದ್ದಿರುವ ಹೋಟೆಲ್‌ಗಳಿಗೆ ನೋಟಿಸ್‌ ನೀಡುವುದರ ಜೊತೆಗೆ ₹5 ಲಕ್ಷದವರೆಗೆ ದಂಡ ವಿಧಿಸಲಾಗುವುದು. ದಂಡ ವಿಧಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ರೈಲ್ವೆ ಕ್ಯಾಂಟೀನ್‌, ಮದುವೆ ಮನೆಗಳಲ್ಲೂ ತಪಾಸಣೆ

ಪಿಜಿ ಹಾಗೂ ಖಾಸಗಿ ಹಾಸ್ಟೆಲ್‌ಗಳ ಜೊತೆಗೆ ಬಸ್‌ ನಿಲ್ದಾಣಗಳಲ್ಲಿರುವ ಹೋಟೆಲ್‌ಗಳು, ಮದುವೆ ಮನೆಗಳು ಹಾಗೂ ರೈಲ್ವೆ ಕ್ಯಾಂಟೀನ್‌ಗಳಲ್ಲೂ ಆಹಾರದ ಗುಣಮಟ್ಟ ಪರಿಶೀಲಿಸಲಾಗುವುದು. ವಿಮಾನಗಳಲ್ಲಿ ಪ್ರಯಾಣಿಕರಿಗೆ ನೀಡುವ ಆಹಾರದ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು. ಇದಕ್ಕಾಗಿ ರಾಷ್ಟ್ರೀಯ ಮಟ್ಟದ ಪ್ರಾಕ್ಟೀಸ್‌ ತಂಡವನ್ನು ರಚಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಖಾದರ್‌ ಹೇಳಿದರು.

ಆಹಾರ ಸುರಕ್ಷತಾ ನಿಯಮ ಬದಲಾವಣೆಗೆ ಕೇಂದ್ರಕ್ಕೆ ಮನವಿ

ವಿದೇಶಿ ಕಂಪನಿಗಳ ಚಾಕೊಲೇಟ್‌ಗಳು ಸೇರಿದಂತೆ ಹಲವು ಆಹಾರ ಉತ್ಪನ್ನಗಳು ಭಾರತಕ್ಕೆ ಬರುತ್ತಿವೆ. ಅವುಗಳ ಸಕ್ಕರೆ ಪ್ರಮಾಣ ಸೇರಿದಂತೆ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಕೇಂದ್ರದ ಆಹಾರ ಸುರಕ್ಷತಾ ಕಾಯ್ದೆ ಹಾಗೂ ನಿಯಮಗಳಲ್ಲಿ ಅಗತ್ಯ ಬದಲಾವಣೆ ಮಾಡಬೇಕು. ಈ ಕುರಿತು ಕೇಂದ್ರ ಆಹಾರ ಸಚಿವರಿಗೆ ಮಾಹಿತಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಕೂಲ್‌ಡ್ರಿಂಕ್ಸ್‌ಗಳು ಬೇರೆ ದೇಶಗಳಲ್ಲಿ ಒಂದು ರೀತಿಯ ಗುಣಮಟ್ಟ ಹೊಂದಿದ್ದು, ಭಾರತಕ್ಕೆ ಬಂದಾಗ ಅದರ ರುಚಿ ಹಾಗೂ ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಬೇರೆ ದೇಶಗಳಲ್ಲಿ ಇರುವ ಗುಣಮಟ್ಟವೇ ಭಾರತದಲ್ಲಿಯೂ ಇರಬೇಕು. ಈ ಕುರಿತು ಚರ್ಚಿಸಲು ಅಂತಾರಾಷ್ಟ್ರೀಯ ಆಲ್‌ ಇಂಡಿಯಾ ಫುಡ್‌ ಸೇಫ್ಟಿ ಕಾನ್ಕ್ಲೇವ್‌ ಆಯೋಜಿಸಲಾಗುವುದು ಎಂದು ಹೇಳಿದರು.

ಹೋಟೆಲ್‌ಗಳ ಮುಂದೆ ಕ್ಯೂಆರ್‌ ಕೋಡ್‌

ಹೋಟೆಲ್‌ಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ಮುಕ್ತವಾಗಿ ದೂರು ನೀಡಲು ಪ್ರತಿ ಹೋಟೆಲ್‌ ಹಾಗೂ ಮೆಡಿಕಲ್‌ ಶಾಪ್‌ಗಳ ಮುಂದೆ ಕ್ಯೂಆರ್‌ ಕೋಡ್‌ ಅಳವಡಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೋಟೆಲ್‌ಗಳಿಗಾಗಿ ಟೋಲ್‌ ಫ್ರೀ ನಂಬರ್‌ ಕೂಡ ಬಿಡುಗಡೆ ಮಾಡಲಾಗುವುದು ಎಂದು ಯು.ಟಿ. ಖಾದರ್‌ ಹೇಳಿದರು. ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಯ ವತಿಯಿಂದ ಕ್ಯೂಆರ್‌ ಕೋಡ್‌ ವ್ಯವಸ್ಥೆಯನ್ನು ಬಿಡುಗಡೆ ಮಾಡಲಾಯಿತು.

ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ

ಅಡುಗೆ ಹಾಗೂ ಸ್ವಚ್ಛತೆಗೆ ಸಂಬಂಧಿಸಿದಂತೆ ಪಿಜಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸಲಾಗುವುದು. ಹೋಟೆಲ್‌ಗಳ ಅಡುಗೆ ಕೋಣೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಸೂಚನೆ ನೀಡಲಾಗುವುದು ಎಂದು ಸಚಿವ ಯು.ಟಿ. ಖಾದರ್‌ ತಿಳಿಸಿದರು.

ಬಿಜೆಪಿ ಪಕ್ಷಕ್ಕೆ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಗುಡ್ ಬೈ!

0

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನವಾಲಾ ಅವರು ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆರ್ಥಿಕ ಪರಿಸ್ಥಿತಿ ಹಾಗೂ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಟೆಲಿವಿಷನ್‌ ಚರ್ಚೆಗಳಲ್ಲಿ ಬಿಜೆಪಿಯ ಪ್ರಮುಖ ಹಾಗೂ ಹೆಚ್ಚು ಕಾಣಿಸಿಕೊಳ್ಳುವ ವಕ್ತಾರರಲ್ಲೊಬ್ಬರಾಗಿದ್ದ ಶೆಹಜಾದ್‌ ಪೂನವಾಲಾ, ಜುಲೈ 30ರಂದು ಮೊದಲ ಬಾರಿಗೆ ರಾಜೀನಾಮೆ ಪತ್ರವನ್ನು ಪಕ್ಷಕ್ಕೆ ಕಳುಹಿಸಿದ್ದರು. ಆದರೆ, ಬಿಜೆಪಿ ಅವರ ರಾಜೀನಾಮೆಯನ್ನು ಸ್ವೀಕರಿಸಿರಲಿಲ್ಲ. ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಕ್ಷದ ವತಿಯಿಂದ ಸಲಹೆ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ದೀರ್ಘ ಹಾಗೂ ಕಠಿಣ ಚಿಂತನೆಯ ಬಳಿಕ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿರುವುದಾಗಿ ಶೆಹಜಾದ್‌ ಪೂನವಾಲಾ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ, ರಾಷ್ಟ್ರೀಯ ವಕ್ತಾರ ಸ್ಥಾನ ಹಾಗೂ ಬಿಜೆಪಿಯ ಸಕ್ರಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ನಿತಿನ್‌ ನಬಿನ್‌, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಶೆಹಜಾದ್‌ ಪೂನವಾಲಾ ಕೃತಜ್ಞತೆ ಸಲ್ಲಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಪಕ್ಷ ನೀಡಿದ ವೇದಿಕೆ ಹಾಗೂ ಅವಕಾಶಗಳಿಗಾಗಿ ಬಿಜೆಪಿ ನಾಯಕರಿಗೆ ಧನ್ಯವಾದ ಅರ್ಪಿಸಿರುವ ಅವರು, ಪ್ರೀತಿ, ವಾತ್ಸಲ್ಯ ಹಾಗೂ ಅತ್ಯುನ್ನತ ಗೌರವದ ಭಾವನೆಯೊಂದಿಗೆ ಪಕ್ಷಕ್ಕೆ ಆಭಾರಿಯಾಗಿರುವುದಾಗಿ ತಿಳಿಸಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಶೆಹಜಾದ್‌ ಪೂನವಾಲಾ ಅವರು ತಮ್ಮ ರಾಜಕೀಯ ಪ್ರಯಾಣವನ್ನು ಕಾಂಗ್ರೆಸ್‌ನೊಂದಿಗೆ ಆರಂಭಿಸಿದ್ದರು. ಬಳಿಕ ಬಿಜೆಪಿ ಸೇರ್ಪಡೆಯಾಗಿ ಪಕ್ಷದ ಪ್ರಮುಖ ರಾಷ್ಟ್ರೀಯ ವಕ್ತಾರರಾಗಿ ಗುರುತಿಸಿಕೊಂಡಿದ್ದರು. ಇದೀಗ ಬಿಜೆಪಿಗೆ ರಾಜೀನಾಮೆ ನೀಡಿರುವ ಅವರ ಮುಂದಿನ ರಾಜಕೀಯ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಒಂದೇ ಮನೆಯಲ್ಲಿ ತಂದೆ-ಮಗ ಅನುಮಾನಾಸ್ಪದ ಸಾವು; ಪತ್ನಿ ವಶಕ್ಕೆ, ಕೊಲೆ ಶಂಕೆ

0

ಬೆಂಗಳೂರು: ಬೆಂಗಳೂರಿನ ಚಿಕ್ಕಬಾಣವಾರದ ಗುಡ್ಡೆ ಬಸವಪುರದಲ್ಲಿ ತಂದೆ ಹಾಗೂ 5 ವರ್ಷದ ಮಗ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಅಭಿನವ್‌ (38) ಹಾಗೂ ಅವರ ಪುತ್ರ ಯದುವೀರ್‌ (5) ಎಂದು ಗುರುತಿಸಲಾಗಿದೆ.

ಮೇಲ್ನೋಟಕ್ಕೆ ಇಬ್ಬರ ಸಾವಿನ ಹಿಂದೆಯೂ ಕೊಲೆ ಶಂಕೆ ವ್ಯಕ್ತವಾಗಿದ್ದು, ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಘಟನೆ ನಡೆದ ಸಂದರ್ಭದಲ್ಲಿ ಮೃತ ಅಭಿನವ್‌ ಅವರ ಪತ್ನಿ ಪಕ್ಕದ ಕೊಠಡಿಯಲ್ಲಿದ್ದರು ಎನ್ನಲಾಗಿದ್ದು, ಈ ವಿಚಾರವೂ ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಪೊಲೀಸರು ಮೃತರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಾಣವಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ತಂದೆ-ಮಗನ ಸಾವಿಗೆ ನಿಖರ ಕಾರಣವೇನು ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾವಿನ ಹಿಂದಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ತನಿಖೆಯ ಬಳಿಕ ಹೊರಬರಬೇಕಿದೆ.

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

0

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಆಗಸ್ಟ್ ಮೂರನೇ ವಾರದಲ್ಲೂ ಮುಂದುವರಿದಿದೆ. ಡಾಲರ್ ಮೌಲ್ಯ ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಾಗಿದ್ದು, ಸತತ ಮೂರನೇ ದಿನವೂ ಚಿನ್ನದ ದರ ಏರಿಕೆಯಾಗಿದೆ. ಗುಡ್‌ರಿಟರ್ನ್ಸ್ ವರದಿ ಮಾಡಿರುವ ದರದ ಪ್ರಕಾರ, ಸೋಮವಾರ, ಆಗಸ್ಟ್ 17, 2026ರಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ದಾಖಲಾಗಿದೆ.

24 ಕ್ಯಾರೆಟ್ ಚಿನ್ನದ 1 ಗ್ರಾಂ ದರದಲ್ಲಿ ₹53 ಏರಿಕೆಯಾಗಿದ್ದು, ಇದೀಗ ₹15,566ಕ್ಕೆ ತಲುಪಿದೆ. 10 ಗ್ರಾಂ ಚಿನ್ನದ ಬೆಲೆ ₹530 ಹೆಚ್ಚಳವಾಗಿದ್ದು, ₹1,55,660ಕ್ಕೆ ಏರಿಕೆಯಾಗಿದೆ.

ಇನ್ನು 22 ಕ್ಯಾರೆಟ್ ಚಿನ್ನದ 1 ಗ್ರಾಂ ದರದಲ್ಲಿ ₹50 ಏರಿಕೆಯಾಗಿದ್ದು, ಪ್ರಸ್ತುತ ₹14,270ಕ್ಕೆ ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹500 ಹೆಚ್ಚಳವಾಗಿ ₹1,42,700ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ 1 ಗ್ರಾಂ ಬೆಲೆ ₹15,566 ಇದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ಗ್ರಾಂ ಬೆಳ್ಳಿ ₹250ರಷ್ಟಿದ್ದು, ಒಂದು ಕೆ.ಜಿ. ಬೆಳ್ಳಿಯ ಬೆಲೆ ₹2,50,000 ಇದೆ.

ಡಾಲರ್ ಮೌಲ್ಯ ಇಳಿಕೆಯಾಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಖರೀದಿದಾರರಿಗೆ ತುಸು ಅಗ್ಗವಾಗಿದ್ದು, ಬೇಡಿಕೆ ಹೆಚ್ಚಾಗಿದೆ. ಇದರಿಂದ ಚಿನ್ನದ ದರ ಏರಿಕೆಗೆ ಮತ್ತಷ್ಟು ಬೆಂಬಲ ಸಿಕ್ಕಿದೆ.

ಇದರ ಜೊತೆಗೆ ಅಂತರರಾಷ್ಟ್ರೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಣದುಬ್ಬರದ ಭೀತಿ ತಗ್ಗಿರುವುದು ಹಾಗೂ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಹೆಚ್ಚಿಸುವ ಸಾಧ್ಯತೆ ಕಡಿಮೆಯಾಗಿರುವ ನಿರೀಕ್ಷೆಯೂ ಚಿನ್ನದ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.

ಅಮೆರಿಕ-ಇರಾನ್ ನಡುವಿನ ಒಪ್ಪಂದ ಅಂತಿಮವಾಗದ ಹಿನ್ನೆಲೆಯಲ್ಲಿ ಮುಂದುವರಿದಿರುವ ಅನಿಶ್ಚಿತತೆಯೂ ಹೂಡಿಕೆದಾರರನ್ನು ಸುರಕ್ಷಿತ ಹೂಡಿಕೆಯಾಗಿ ಪರಿಗಣಿಸಲಾಗುವ ಚಿನ್ನದತ್ತ ಆಕರ್ಷಿಸುತ್ತಿದೆ. ಈ ಎಲ್ಲ ಅಂಶಗಳಿಂದಾಗಿ ಚಿನ್ನದ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ.

ತಾರಾಪೀಠ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ: ನಿದ್ದೆಯಲ್ಲಿದ್ದ 7 ಮಂದಿ ಸಜೀವ ದಹನ

0

ಕೋಲ್ಕತ್ತ: ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ಪ್ರಸಿದ್ಧ ತಾರಾಪೀಠದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರಾವಣ ಮಾಸದ ಸೋಮವಾರದ ಹಿನ್ನೆಲೆಯಲ್ಲಿ ದೇವಾಲಯ ಪಟ್ಟಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಹೋಟೆಲ್‌ನಲ್ಲಿ ಜನಸಂದಣಿ ಹೆಚ್ಚಾಗಿತ್ತು.

ತಾರಾಪೀಠ ಪೊಲೀಸ್ ಠಾಣೆಯಿಂದ ಕೆಲವೇ ಅಂತರದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್ ಬಿದೇಶಿನಿಯ ನೆಲಮಹಡಿಯಲ್ಲಿ ಬೆಳಗ್ಗೆ ಸುಮಾರು 5 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ವೇಳೆ ಬಹುತೇಕ ಅತಿಥಿಗಳು ಗಾಢ ನಿದ್ದೆಯಲ್ಲಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿ ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಅತಿಥಿಗಳು ಹೊರಬರಲು ಪರದಾಡಿದ್ದಾರೆ.

ದಟ್ಟ ಹೊಗೆಯಿಂದ ಉಸಿರಾಟಕ್ಕೂ ತೊಂದರೆ:

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ರಾಂಪುರಹಾಟ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಅಗ್ನಿ ಅವಘಡದಿಂದ ಪಾರಾದ ಅತಿಥಿಯೊಬ್ಬರು, ಕ್ಷಣಾರ್ಧದಲ್ಲಿ ಇಡೀ ಹೋಟೆಲ್ ಹೊಗೆಯಿಂದ ತುಂಬಿಕೊಂಡಿತ್ತು. ಉಸಿರಾಡಲು ಸಾಧ್ಯವಾಗದೆ ಹೊರಹೋಗುವ ದಾರಿ ಹುಡುಕಲು ಪರದಾಡಬೇಕಾಯಿತು ಎಂದು ತಿಳಿಸಿದ್ದಾರೆ.

ಹೋಟೆಲ್ ಆಡಳಿತದ ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಘಟನೆ ಬಳಿಕ ಸ್ಥಳೀಯರು, ಸ್ವಯಂಸೇವಕರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಳೆಯ ಕಾರಣ ಬಹುತೇಕ ಅತಿಥಿಗಳು ನಿದ್ದೆಯಲ್ಲಿದ್ದರಿಂದ ಆರಂಭದಲ್ಲಿ ಬೆಂಕಿಯ ತೀವ್ರತೆ ಅರಿವಾಗಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಹಾರದ ಶಿವ ದೇವಾಲಯದಲ್ಲಿ ಭೀಕರ ಕಾಲ್ತುಳಿತ: ಬ್ಯಾರಿಕೇಡ್ ಮುರಿದು 7 ಭಕ್ತರು ಬಲಿ

0

ಪಾಟ್ನಾ: ಬಿಹಾರದ ಲಖಿಸರಾಯ್ ಜಿಲ್ಲೆಯ ಪ್ರಸಿದ್ಧ ಅಶೋಕ ಧಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೂರನೇ ಸೋಮವಾರದಂದು ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 7 ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ. ಶಿವನಿಗೆ ಜಲಾಭಿಷೇಕ ಸಲ್ಲಿಸಲು ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ದೇವಾಲಯದತ್ತ ಹರಿದು ಬಂದಿದ್ದರು. ಬೆಳಗ್ಗೆ 6.30ರಿಂದ 6.45ರ ನಡುವೆ ಸಮೀಪದ ರೈಲು ನಿಲ್ದಾಣಕ್ಕೆ ಎರಡು ರೈಲುಗಳು ಬಂದ ಬಳಿಕ ಭಕ್ತರ ಸಂಖ್ಯೆ ಏಕಾಏಕಿ ಹೆಚ್ಚಾಗಿ, ಸುಮಾರು 50 ಸಾವಿರಕ್ಕೂ ಹೆಚ್ಚು ಜನ ದೇವಾಲಯದ ಆವರಣದಲ್ಲಿ ಸೇರಿದ್ದರು.

ಜನದಟ್ಟಣೆ ಹೆಚ್ಚಿದ ಪರಿಣಾಮ ದೇವಾಲಯದ ಬ್ಯಾರಿಕೇಡ್‌ನ ಒಂದು ಭಾಗ ಮುರಿದು ಬಿದ್ದಿದೆ. ಇದರಿಂದ ಭಕ್ತರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಕ್ಷಣಾರ್ಧದಲ್ಲೇ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಲಖಿಸರಾಯ್ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.

ಘಟನೆಯ ವೇಳೆ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಬಿದ್ದಿದ್ದು, ಅದರಲ್ಲಿ ವಿದ್ಯುತ್ ಹರಿಯುತ್ತಿದೆ ಎಂಬ ವದಂತಿ ಹರಡಿತ್ತು. ಈ ಸುದ್ದಿ ಕೇಳಿ ಭಕ್ತರು ದಿಕ್ಕಾಪಾಲಾಗಿ ಓಡತೊಡಗಿದ್ದು, ಹಲವರು ಕೆಳಗೆ ಬಿದ್ದು ತುಳಿತಕ್ಕೆ ಸಿಲುಕಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ, ದುರಂತಕ್ಕೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ.

ಗಾಯಗೊಂಡವರನ್ನು ಲಖಿಸರಾಯ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರಲ್ಲಿ ಹಾಗೂ ಗಾಯಾಳುಗಳಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಘಟನೆ ಬಳಿಕ ಪೊಲೀಸರು, ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

2019ರಲ್ಲೂ ನಡೆದಿತ್ತು ಕಾಲ್ತುಳಿತ:

ಅಶೋಕ ಧಾಮ ದೇವಾಲಯವು ಶ್ರಾವಣ ಮಾಸದಲ್ಲಿ ಲಕ್ಷಾಂತರ ಭಕ್ತರನ್ನು ಸೆಳೆಯುವ ಪ್ರಮುಖ ಶಿವ ಕ್ಷೇತ್ರವಾಗಿದೆ. ಇದೇ ದೇವಾಲಯದಲ್ಲಿ 2019ರಲ್ಲೂ ಅತಿಯಾದ ಜನದಟ್ಟಣೆಯಿಂದ ಕಾಲ್ತುಳಿತ ಸಂಭವಿಸಿ ಓರ್ವ ಭಕ್ತ ಮೃತಪಟ್ಟಿದ್ದರೆ, ಹಲವರು ಗಾಯಗೊಂಡಿದ್ದರು.

ವಿಜಯ್ ಸರ್ಕಾರದಲ್ಲಿ 2%–4% ಕಮಿಷನ್ ವಸೂಲಿ: ತಮಿಳುನಾಡು ಸಚಿವರ ವಿರುದ್ಧ ಅಣ್ಣಾಮಲೈ ಬಾಂಬ್!

0

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಗಂಭೀರ ಆರೋಪ ಮಾಡಿದ್ದಾರೆ.

ಸರ್ಕಾರದ ಕೆಲ ಸಚಿವರು ಸರ್ಕಾರಿ ಟೆಂಡರ್‌ಗಳಲ್ಲಿ ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಚೆನ್ನೈನಲ್ಲಿ ‘ವೀ ದಿ ಲೀಡರ್ಸ್’ ಸಂಘಟನೆ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅಣ್ಣಾಮಲೈ, ಮುಖ್ಯಮಂತ್ರಿ ವಿಜಯ್ ಭ್ರಷ್ಟಾಚಾರದ ವಿರುದ್ಧ ನಿಲುವು ಹೊಂದಿದ್ದಾರೆ ಎಂದು ಹೇಳಿಕೊಂಡರೂ, ಅವರ ಸಂಪುಟದ ಕೆಲ ಸಚಿವರ ನಡೆ ಅದಕ್ಕೆ ವಿರುದ್ಧವಾಗಿದೆ ಎಂದು ಟೀಕಿಸಿದರು.

‘ಈಗ ಕಮಿಷನ್ ಕೇಳಲು ಆರಂಭಿಸಿದ್ದಾರೆ’:

ಈ ಹಿಂದೆ ಪ್ರಮುಖ ಸರ್ಕಾರಿ ಟೆಂಡರ್‌ಗಳಲ್ಲಿ ಕಿಕ್‌ಬ್ಯಾಕ್ ಪಡೆಯುವ ಪದ್ಧತಿ ಇರಲಿಲ್ಲ. ಆದರೆ ಈಗ ಕೆಲ ಸಚಿವರು ಗುತ್ತಿಗೆದಾರರಿಂದ 2% ರಿಂದ 4% ವರೆಗೆ ಕಮಿಷನ್ ಕೇಳಲು ಆರಂಭಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದರು.

ಭ್ರಷ್ಟಾಚಾರದ ವಿರುದ್ಧ ಮುಖ್ಯಮಂತ್ರಿ ನಿಲುವು ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಸರ್ಕಾರದೊಳಗಿನ ಕೆಲ ಸಚಿವರ ನಡೆ ಬೇರೆ ಚಿತ್ರಣವನ್ನು ತೋರಿಸುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಅಣ್ಣಾಮಲೈ ಅವರ ಈ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅವರ ಆರೋಪಗಳಿಗೆ ಸರ್ಕಾರದಿಂದ ಅಧಿಕೃತ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.