Home Blog

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ಸರತಿ ಸಾಲಿನಲ್ಲೇ ಸಿಗಲಿದೆ ಪ್ರಸಾದ!

0

ಹೈದರಾಬಾದ್: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ತಿರುಮಲ ತಿರುಪತಿ ದೇವಸ್ಥಾನ ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ.

ಸರತಿ ಸಾಲಿನಲ್ಲಿ ಕಾಯುವ ಭಕ್ತರಿಗೆ ಪ್ರಸಾದವನ್ನು ತ್ವರಿತವಾಗಿ ವಿತರಿಸಲು ‘ಮೂವಿಂಗ್ ಟೇಬಲ್’ ವ್ಯವಸ್ಥೆ ಪರಿಚಯಿಸಲಾಗಿದೆ.

ಪ್ರಸಾದ ಕೌಂಟರ್‌ಗಳಲ್ಲಿ ಉಂಟಾಗುವ ಜನದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಸುಮಾರು ₹10 ಲಕ್ಷ ವೆಚ್ಚದಲ್ಲಿ ಮೂವಿಂಗ್ ಟೇಬಲ್‌ನ್ನು ವಿನ್ಯಾಸಗೊಳಿಸಿ ಅಳವಡಿಸಲಾಗಿದೆ.

7 ಮೀಟರ್ ಉದ್ದದ ಕನ್ವೇಯರ್ ವ್ಯವಸ್ಥೆ:

ಮೂವಿಂಗ್ ಟೇಬಲ್ ಸುಮಾರು 7 ಮೀಟರ್ ಉದ್ದ ಹೊಂದಿದ್ದು, ಕನ್ವೇಯರ್ ಬೆಲ್ಟ್‌ನಂತೆ ನಿರಂತರವಾಗಿ ಚಲಿಸುತ್ತದೆ. ಟಿಟಿಡಿ ಸಿಬ್ಬಂದಿ ಪ್ರಸಾದದ ತಟ್ಟೆಗಳನ್ನು ಈ ಮೇಜಿನ ಮೇಲೆ ಇರಿಸುತ್ತಾರೆ. ಮೇಜು ಚಲಿಸುತ್ತಾ ಸರತಿ ಸಾಲಿನಲ್ಲಿ ಸಾಗುವುದರಿಂದ ಭಕ್ತರು ತಾವು ನಿಂತಿರುವ ಸ್ಥಳದಲ್ಲೇ ಪ್ರಸಾದವನ್ನು ಪಡೆದುಕೊಳ್ಳಬಹುದಾಗಿದೆ.

ಈ ಹಿಂದೆ ಭಕ್ತರು ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ಕಾದ ಬಳಿಕ ಪ್ರಸಾದ ಪಡೆಯಲು ಪ್ರತ್ಯೇಕವಾಗಿ ಕೌಂಟರ್‌ಗೆ ತೆರಳಬೇಕಾಗಿತ್ತು. ಇದರಿಂದ ಪ್ರಸಾದ ಕೌಂಟರ್‌ಗಳಲ್ಲಿ ಜನಸಂದಣಿ ಉಂಟಾಗುತ್ತಿತ್ತು. ಇದೀಗ ಹೊಸ ವ್ಯವಸ್ಥೆಯಿಂದ ಭಕ್ತರು ಸರತಿ ಸಾಲಿನಿಂದ ಹೊರಬರದೆಯೇ ಪ್ರಸಾದ ಪಡೆಯಲು ಸಾಧ್ಯವಾಗಲಿದೆ.

ಹಲವು ಕಡೆಗಳಿಗೆ ವಿಸ್ತರಣೆ:

ಮೂವಿಂಗ್ ಟೇಬಲ್ ವ್ಯವಸ್ಥೆಯನ್ನು ಈಗಾಗಲೇ ಪ್ರಾಯೋಗಿಕವಾಗಿ ಪರೀಕ್ಷಿಸಲಾಗಿತ್ತು. ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ವ್ಯವಸ್ಥೆಯನ್ನು ಮತ್ತಷ್ಟು ಕಡೆಗಳಿಗೆ ವಿಸ್ತರಿಸಲು ಟಿಟಿಡಿ ನಿರ್ಧರಿಸಿದೆ.

ವೈಕುಂಠಂ ಕ್ಯೂ ಕಾಂಪ್ಲೆಕ್ಸ್-1 ಮತ್ತು 2, ನಾರಾಯಣಗಿರಿ ಶೆಡ್ ಹಾಗೂ ಮುಖ್ಯ ಸರತಿ ಸಾಲುಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಹೊಸ ವ್ಯವಸ್ಥೆಯಿಂದ ಪ್ರಸಾದ ವಿತರಣೆಯಲ್ಲಿ ವೇಗ ಹೆಚ್ಚುವುದರ ಜೊತೆಗೆ ಭಕ್ತರಿಗೆ ಸರತಿ ಸಾಲಿನಲ್ಲೇ ಪ್ರಸಾದ ದೊರೆಯಲಿದೆ. ಇದರಿಂದ ಜನಸಂದಣಿ ಕಡಿಮೆಯಾಗುವ ನಿರೀಕ್ಷೆಯಿದ್ದು, ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ ಕುಸಿತ; ತಪ್ಪಿದ ಭಾರೀ ಅನಾಹುತ!

ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಬೃಹತ್ ಕಬ್ಬಿಣದ ಶೀಟ್‌ವೊಂದು ಏಕಾಏಕಿ ನೆಲಕ್ಕೆ ಬಿದ್ದ ಘಟನೆ ನಡೆದಿದೆ.

ಮಾರತ್‌ಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ತಡರಾತ್ರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಬೃಹತ್ ಕಬ್ಬಿಣದ ಶೀಟ್‌ ಏಕಾಏಕಿ ರಸ್ತೆಗೆ ಬಿದ್ದಿದೆ. ಆ ಸಂದರ್ಭದಲ್ಲಿ ರಸ್ತೆಯಲ್ಲಿ ವಾಹನಗಳು ಅಥವಾ ಬೈಕ್ ಸವಾರರು ಸಂಚರಿಸದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

ಕಬ್ಬಿಣದ ಶೀಟ್‌ ರಸ್ತೆಗೆ ಬೀಳುವ ದೃಶ್ಯ ಕಾರೊಂದರ ಡ್ಯಾಶ್‌ಬೋರ್ಡ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಶೀಟ್‌ ಬಿದ್ದ ರಭಸಕ್ಕೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಹಗಲಿನ ವೇಳೆಯಲ್ಲಿ ಇದೇ ಘಟನೆ ಸಂಭವಿಸಿದ್ದರೆ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇತ್ತು. ಹೀಗಾಗಿ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಘಟನೆಯಿಂದ ಕಾಮಗಾರಿ ಸ್ಥಳದಲ್ಲಿ ಕೈಗೊಳ್ಳಲಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಹಲವು ಪ್ರಶ್ನೆಗಳು ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಿದೆ.

ಕೊಟ್ಟಿಗೆಹಾರದಲ್ಲಿ ಭೀಕರ ಅಪಘಾತ; ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್‌ವೊಂದರ ಮುಂಭಾಗ ರಸ್ತೆ ಬದಿಯಲ್ಲಿ ಸಿಲಿಂಡರ್‌ಗಳನ್ನು ತುಂಬಿಕೊಂಡಿದ್ದ ಲಾರಿಯನ್ನು ನಿಲ್ಲಿಸಲಾಗಿತ್ತು. ಈ ವೇಳೆ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಐವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ:

ಮೃತರು ಹಾಗೂ ಗಾಯಾಳುಗಳು ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು ಎಂದು ತಿಳಿದುಬಂದಿದೆ. ಐವರು ಸ್ನೇಹಿತರು ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಕೊಟ್ಟಿಗೆಹಾರ ಬಳಿ ಕಾರು ನಿಂತಿದ್ದ ಸಿಲಿಂಡರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರತೆಗೆಯಲು ಸ್ಥಳೀಯರು ಮತ್ತು ಪೊಲೀಸರು ಹರಸಾಹಸಪಟ್ಟರು.

ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ:

ಘಟನೆ ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಅಪಘಾತದಿಂದ ಕೆಲಕಾಲ ಈ ಭಾಗದಲ್ಲಿ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸಿ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಅಬ್ಬರ; 4 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ಇಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 9ರಂದು ಕರಾವಳಿ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲೂ ಮಳೆ:

ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರ ಮಳೆಯ ಮುನ್ಸೂಚನೆ ನೀಡಲಾಗಿದೆ.

ಆಗಸ್ಟ್ 9ರಂದು ಉತ್ತರ ಒಳನಾಡಿನಲ್ಲೂ ಮಳೆಯ ಪ್ರಮಾಣ ತುಸು ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಕರಾವಳಿಯಲ್ಲಿ ಭಾರಿ ಮಳೆ ದಾಖಲು:

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 7 ಸೆಂ.ಮೀ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ.

ಆಗಸ್ಟ್ 8ರಂದು ಪಿರಮಿಡ್ ಧ್ಯಾನ ಕೇಂದ್ರದ ವಾರ್ಷಿಕೋತ್ಸವ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿವೇಕಾನಂದ ನಗರದ ಕರಿಯಮ್ಮಕಲ್ಲ ಬಡಾವಣೆಯಲ್ಲಿರುವ ಶ್ರೀ ಶಿವ ಚಿದಂಬರೇಶ್ವರ ಪಿರಮಿಡ್ ಧ್ಯಾನ ಕೇಂದ್ರದ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಆಗಸ್ಟ್ 8 ಸಂಜೆ 5 ಗಂಟೆಗೆ ಕರಿಯಮ್ಮಕಲ್ಲ ದೇವಸ್ಥಾನ ಸಮೀಪದ ಶ್ರೀ ಮುಕ್ಕಣ್ಣೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ.

ಬ್ರಹ್ಮರ್ಷಿ ಪಿತಾಮಹ ಡಾ. ಸುಬಾಷ್ ಪತ್ರಿಜಿ ಅವರ ದಿವ್ಯ ಪ್ರೇರಣೆಯೊಂದಿಗೆ ಹಾಗೂ ಪಿರಮಿಡ್ ಸ್ಪಿರಿಚ್ಯುವಲ್ ಸೊಸೈಟಿ ಮೂವ್‌ಮೆಂಟ್ ಆಶ್ರಯದಲ್ಲಿ ನಿರ್ಮಾಣಗೊಂಡಿರುವ ಧ್ಯಾನ ಕೇಂದ್ರದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಸೀತಾಗಿರಿ ಹಾಗೂ ಅಣ್ಣಿಗೇರಿಯ ಗಿರೀಶ ಆಶ್ರಮದ ಡಾ. ಎ.ಸಿ. ವಾಲಿ ಮಹಾರಾಜರು ವಹಿಸಲಿದ್ದು, ಮುಕ್ಕಣ್ಣೇಶ್ವರ ಮಠದ ಸದ್ಗುರು ಶ್ರೀ ಶಂಕರಾನಂದ ಸ್ವಾಮೀಜಿ ಸಮ್ಮುಖ ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಪಿರಮಿಡ್ ಸೇವೆಯ ರಾಜ್ಯಾಧ್ಯಕ್ಷ ಹಾಗೂ ಬಳ್ಳಾರಿ ಪಿಎಂಸಿ ವ್ಯವಸ್ಥಾಪಕರಾದ ಹಂಪಣ್ಣ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ಹಿರಿಯ ಪಿರಮಿಡ್ ಮಾಸ್ಟರ್ ವಿಶಾಲಾಕ್ಷಿ ಆಕಳವಾಡಿ, ಶಂಕರಹಟ್ಟಿಯ ಹಿರಿಯ ಪಿರಮಿಡ್ ಮಾಸ್ಟರ್ ವಿಶಾಲಾಕ್ಷಿ ಅಥಣಿ, ಶ್ರೀ ಮಲ್ಲಿಕಾರ್ಜುನ ಪಿರಮಿಡ್ ಆಧ್ಯಾತ್ಮಿಕ ಧ್ಯಾನ ಕೇಂದ್ರದ ನಿರ್ಮಾತೃ ರಂಗಣ್ಣ ಕೋಳಿ ಹಾಗೂ ಬಾಗಲಕೋಟೆಯ ಹಿರಿಯ ಪಿರಮಿಡ್ ಮಾಸ್ಟರ್ ರಾಜಶೇಖರ ಅಡಿಕೇನವರ ಭಾಗವಹಿಸಲಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ಪಿರಮಿಡ್ ಮಾಸ್ಟರ್‌ಗಳು, ಧ್ಯಾನಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಪಿರಮಿಡ್ ಧ್ಯಾನ ಕೇಂದ್ರದ ನಿರ್ಮಾತೃ ಪಿ.ಡಿ. ಬಂಕಾಪೂರ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ಜಿಲ್ಲಾ ಶಿಕ್ಷಕರ ಸಂಘಕ್ಕೆ ಮೂವರು ನಾಮನಿರ್ದೇಶಿತ ಸದಸ್ಯರ ಆಯ್ಕೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಘಟಕಕ್ಕೆ ಲಕ್ಷ್ಮೇಶ್ವರ ತಾಲೂಕಿನಿಂದ ಶಿವಾನಂದ ಅಸುಂಡಿ, ಫಕ್ಕಿರೇಶ ತಳವಾರ ಹಾಗೂ ಅಶೋಕ ಅರಗಂಜಿ ಅವರನ್ನು ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ.

ಗದಗದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಪದಗ್ರಹಣ ಹಾಗೂ ಧನ್ಯತಾ ಸಮರ್ಪಣಾ ಸಮಾರಂಭ–2026ರಲ್ಲಿ ನೂತನ ನಾಮನಿರ್ದೇಶಿತ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ಭರಮಗೌಡ್ರ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ನಂದೆಣ್ಣವರ, ಸಹಕಾರ್ಯದರ್ಶಿ ಎಸ್.ವಿ. ಸೋಗಿ, ಸಂಘಟನಾ ಕಾರ್ಯದರ್ಶಿ ಮುತ್ತಣ್ಣ ಹುಬ್ಬಳ್ಳಿ ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಸದಸ್ಯ ಎಂ.ಎಸ್. ಹಿರೇಮಠ, ಶಿರಹಟ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸವಗೌಡ ಪಾಟೀಲ, ಪರಮೇಶ್ವರ ಕಾಳಶೆಟ್ಟಿ, ಯಲ್ಲಪ್ಪ ತಿರಕಣ್ಣವರ, ಎಸ್.ಎಫ್. ಸುಣಗಾರ, ಫಕ್ಕಿರೇಶ ಡಂಬಳ, ಹಂಜಗಿ, ಗಿರೀಶ ನೇಕಾರ ಸೇರಿದಂತೆ ಹಲವರು ನೂತನ ಸದಸ್ಯರಿಗೆ ಶುಭಾಶಯ ಕೋರಿದರು.

ಆಧ್ಯಾತ್ಮವಿಲ್ಲದ ಬದುಕಿಗೆ ಉತ್ಕರ್ಷವಿಲ್ಲ: ರಂಭಾಪುರಿ ಶ್ರೀ

0

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಮನುಷ್ಯನ ಬದುಕು ಭಗವಂತನ ಅಮೂಲ್ಯ ಕೊಡುಗೆಯಾಗಿದ್ದು, ಸುಖ-ಶಾಂತಿಯ ಜೀವನಕ್ಕೆ ಧರ್ಮವೇ ಆಶಾಕಿರಣ. ಉತ್ಕರ್ಷದ ಬದುಕು ಕಟ್ಟಿಕೊಳ್ಳಲು ಆಧ್ಯಾತ್ಮ ಜ್ಞಾನವೇ ಭದ್ರ ಅಡಿಪಾಯ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಭವನದಲ್ಲಿ ನಡೆದ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಮನಸ್ಸನ್ನು ಕೂಡಿಸುವ ಮತ್ತು ಧರ್ಮವನ್ನು ಕಟ್ಟುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ. ಭಾರತೀಯ ಸಂಸ್ಕೃತಿ ಹಾಗೂ ಪರಂಪರೆ ಜನಜೀವನದ ಮೇಲೆ ಅಪಾರ ಪ್ರಭಾವ ಬೀರಿದ್ದು, ಎಲ್ಲ ಜಾತಿ-ಜನಾಂಗದವರು ಅದರ ಪಾವಿತ್ರ್ಯವನ್ನು ಕಾಪಾಡಬೇಕು ಎಂದು ಕರೆ ನೀಡಿದರು.

ಇಂದಿನ ಅಶಾಂತಿ, ಅತೃಪ್ತಿ ಮತ್ತು ಅಸಹನೆಗೆ ತಾಳ್ಮೆ ಹಾಗೂ ಸಹನೆಯ ಕೊರತೆಯೇ ಪ್ರಮುಖ ಕಾರಣವಾಗಿದೆ. ವೀರಶೈವ ಧರ್ಮದಲ್ಲಿ ವಿಶ್ವಬಂಧುತ್ವದ ತತ್ವವನ್ನು ಶ್ರೀ ಜಗದ್ಗುರು ರೇಣುಕಾಚಾರ್ಯರು ಹಾಗೂ ಶಿವಶರಣರು ಉಳಿಸಿ ಬೆಳೆಸಿದ್ದಾರೆ. ಅಶುಭ ಮಾಸವೆಂದು ಪರಿಗಣಿಸಲ್ಪಡುವ ಆಷಾಢವನ್ನು ಇಷ್ಟಲಿಂಗ ಪೂಜೆಯ ಮೂಲಕ ಶುಭಮಾಸವನ್ನಾಗಿ ಪರಿವರ್ತಿಸಿದ ಕೀರ್ತಿ ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಅಥಣಿ ವೀರಣ್ಣ ಮಾತನಾಡಿ, ಧರ್ಮದ ಫಲ ಬೇಕೆನ್ನುವವರು ಮೊದಲು ಧರ್ಮವನ್ನು ಆಚರಿಸಬೇಕು. ಆರೋಗ್ಯ, ಶಿಕ್ಷಣ, ಕಾನೂನು ಮತ್ತು ಧರ್ಮದ ಮೌಲ್ಯಗಳನ್ನು ಪಾಲಿಸದ ಕಾರಣ ಸಮಾಜದಲ್ಲಿ ಅಸಮಾಧಾನ ಹೆಚ್ಚುತ್ತಿದೆ. ಜನಜಾಗೃತಿಗಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ಕೈಗೊಂಡಿರುವ ಧರ್ಮಯಜ್ಞ ಎಲ್ಲರಿಗೂ ದಾರಿದೀಪವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಸರಾಂತ ಲೆಕ್ಕ ಪರಿಶೋಧಕ ಮುಂಡಾಸ್ ವೀರೇಂದ್ರ ಕುಮಾರ್ ಅವರಿಗೆ “ಲೆಕ್ಕ ಪರಿಶೋಧಕ ರತ್ನ” ಪ್ರಶಸ್ತಿ ಪ್ರದಾನ ಮಾಡಿ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.

ಉಪದೇಶಾಮೃತ ನೀಡಿದ ಮಳಲಿ ಸಂಸ್ಥಾನ ಮಠದ ಡಾ. ನಾಗಭೂಷಣ ಶಿವಾಚಾರ್ಯರು, ಮನುಷ್ಯ ದೊಡ್ಡ ಮಾತುಗಳಿಗಿಂತ ದೊಡ್ಡ ಗುಣಗಳನ್ನು ಬೆಳೆಸಿಕೊಳ್ಳಬೇಕು. ಪೂರ್ವಜರು ನೀಡಿದ ಉದಾತ್ತ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗಲೇ ಶ್ರೇಯಸ್ಸು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಣಬೇರು ರಾಜಣ್ಣ, ಸದಸ್ಯ ಎಸ್.ಕೆ. ವೀರಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ಮಾಜಿ ನಾಯಕ ಎ. ನಾಗರಾಜ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಬೆಳಗಿನ ಜಾವ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಭಕ್ತರಿಗೆ ಆಶೀರ್ವಾದ ನೀಡಿದರು. ಬಳಿಕ ಅನ್ನದಾಸೋಹ ನಡೆಯಿತು.

“ಸುಖ-ಶಾಂತಿಯ ಬದುಕಿಗೆ ಧರ್ಮವೇ ಆಶಾಕಿರಣ; ಉತ್ಕರ್ಷದ ಜೀವನಕ್ಕೆ ಆಧ್ಯಾತ್ಮ ಜ್ಞಾನವೇ ನಿಜವಾದ ಅಡಿಪಾಯ.”

– ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು

ಸರ್ಕಾರಿ ಶಾಲೆಗೆ ಎಐ ತಂತ್ರಜ್ಞಾನದ ಸ್ಪರ್ಶ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕೃತಕ ಬುದ್ಧಿಮತ್ತೆ (AI) ಆಧುನಿಕ ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಎಐ ತಂತ್ರಜ್ಞಾನ ಸಹಕಾರಿಯಾಗಲಿದೆ ಎಂದು ಪಟ್ಟಣದ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ)ಯ ಪ್ರಧಾನಗುರು ಎಸ್.ಎಚ್. ಪೂಜಾರ ಹೇಳಿದರು.

ಶಾಲೆಯಲ್ಲಿ ಎಐ ಶಿಕ್ಷಕಿಯಾಗಿ ಸೌಭಾಗ್ಯ ಕೊಲ್ಲಾರಿ ಅವರನ್ನು ನೇಮಕ ಮಾಡಿಕೊಂಡು ಮಾತನಾಡಿದ ಅವರು, ಎಐ ತಂತ್ರಜ್ಞಾನ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಸರ್ಕಾರದ ಈ ಕ್ರಮದಿಂದ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಮತ್ತಷ್ಟು ವೃದ್ಧಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಎಂ.ಎಚ್. ಮಾನೇಗಾರ, ಶಿಕ್ಷಕರಾದ ನೂರಹ್ಮದ್ ನದಾಫ್, ಬಸವರಾಜ ಗೌರಿಮನಿ, ಮಂಜುನಾಥ ಕಲ್ಯಾಣಮಠ, ಗೀತಾ ಪಾಟೀಲ್, ಎಸ್.ವಿ. ತಿಮ್ಮಾಪೂರ, ಗೀತಾ ಕುಂದರಗಿ, ಕವಿತಾ ಬಿನ್ನಾಳ ಹಾಗೂ ಸೌಭಾಗ್ಯ ಕೊಲ್ಲಾರಿ ಉಪಸ್ಥಿತರಿದ್ದರು.

ಕ್ರೀಡೆಯಲ್ಲಿ ಮಿಂಚಿದ ಚಿಕ್ಕಹಂದಿಗೋಳ ಶಾಲೆ

0

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಆತ್ಮವಿಶ್ವಾಸ, ಶಿಸ್ತು ಮತ್ತು ಗುರಿ ಸಾಧಿಸುವ ಛಲ ಬೆಳೆಯುತ್ತದೆ ಎಂದು ಚಿಕ್ಕಹಂದಿಗೋಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಧಾನಗುರು ಎಸ್.ಬಿ. ಅಂಗಡಿ ಹೇಳಿದರು.

ಮುಳಗುಂದ ಸಮೀಪದ ಶ್ಯಾಗೋಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿಕ್ಕಹಂದಿಗೋಳ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.

ಪ್ರಾಥಮಿಕ ಹಂತದಲ್ಲಿಯೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ನಾಯಕತ್ವ ಗುಣ, ಶ್ರದ್ಧೆ, ಸ್ಪರ್ಧಾತ್ಮಕ ಮನೋಭಾವ ಹಾಗೂ ಆರೋಗ್ಯಕರ ಜೀವನಶೈಲಿ ಬೆಳೆಯುತ್ತದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ಬಾಲಕರ ಹಾಗೂ ಬಾಲಕಿಯರ ಖೋ-ಖೋ ಮತ್ತು ವಾಲಿಬಾಲ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ, ಬಾಲಕಿಯರ ತ್ರೋಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ, ವೀರಾಗ್ರಹಿಣಿ ಪ್ರಶಸ್ತಿ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಎಂ.ಎಸ್. ಕುರ್ತಕೋಟಿ, ಶಿಕ್ಷಕರಾದ ಜೆ.ಎಚ್. ಹುಚ್ಚಣ್ಣವರ, ವಿ.ಎಸ್. ಓದುಸುಮಠ, ಬಿ.ಬಿ. ಹುವಿನಹಳ್ಳಿ, ಎಂ.ಎನ್. ನಿಮ್ಮನಾಯ್ಕರ, ಜಯಶ್ರೀ, ಲಕ್ಷ್ಮಿ, ರಾಜೇಶ್ವರಿ, ಚಿನ್ನೂರ ಹಾಗೂ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

“ಪಠ್ಯದಷ್ಟೇ ಕ್ರೀಡೆಯೂ ಮುಖ್ಯ. ಕ್ರೀಡೆ ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು, ಛಲ ಮತ್ತು ದೈಹಿಕ-ಮಾನಸಿಕ ಸದೃಢತೆಯನ್ನು ಬೆಳೆಸುತ್ತದೆ.”

— ಎಸ್.ಬಿ. ಅಂಗಡಿ, ಪ್ರಧಾನಗುರು

ಗುರುವಿನ ಕೃಪೆಯೇ ಬದುಕಿನ ಶ್ರೇಷ್ಠ ಸಂಪತ್ತು: ಫಕ್ಕೀರಯ್ಯ ಸ್ವಾಮೀಜಿ

0

ವಿಜಯಸಾಕ್ಷಿ ಸುದ್ದಿ, ಗದಗ: ಹರ್ಲಾಪೂರದ ಬಸವಾನಂದ ಶಿವಯೋಗಿಗಳ ಶ್ರೀಮಠದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಠದ ಪೂಜ್ಯ ಫಕ್ಕೀರಯ್ಯ ಸ್ವಾಮೀಜಿ ಇಷ್ಟಲಿಂಗ ಪೂಜೆ ಹಾಗೂ ಪಾದಪೂಜೆ ನೆರವೇರಿಸಿ ಭಕ್ತರಿಗೆ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಗುರುವಿನ ಚರಣದಿಂದಲೇ ಜಗತ್ತು ಜಯಂಕರಿಸಿದೆ. ಅಜ್ಞಾನವನ್ನು ದೂರ ಮಾಡಿ ಜ್ಞಾನದೆಡೆಗೆ ಕರೆದೊಯ್ಯುವವರೇ ಗುರು. ಆದ್ದರಿಂದ ಗುರುವಿನ ಸ್ಥಾನ ಜಗತ್ತಿನಲ್ಲಿ ಶ್ರೇಷ್ಠ” ಎಂದು ಹೇಳಿದರು.

ಹಿಂದೂ ಸಂಪ್ರದಾಯದಲ್ಲಿ ಆಷಾಢ ಹುಣ್ಣಿಮೆಯನ್ನು ಗುರುಪೂರ್ಣಿಮೆಯಾಗಿ ಆಚರಿಸಲಾಗುತ್ತದೆ. ಈ ದಿನ ಗುರುಗಳಿಗೆ ಪೂಜೆ ಸಲ್ಲಿಸುವುದರೊಂದಿಗೆ ಅವರ ಮಾರ್ಗದರ್ಶನವನ್ನು ಸ್ಮರಿಸಲಾಗುತ್ತದೆ. ಗುರು ಎನ್ನುವ ಪದದ ಅರ್ಥವೇ ಅಜ್ಞಾನವೆಂಬ ಅಂಧಕಾರವನ್ನು ದೂರ ಮಾಡಿ ಜ್ಞಾನ ನೀಡುವವನು ಎಂಬುದಾಗಿದೆ ಎಂದು ವಿವರಿಸಿದರು.

ಭಾರತದ ಇತಿಹಾಸದಲ್ಲಿ ಗುರು-ಶಿಷ್ಯ ಪರಂಪರೆ ಅತ್ಯಂತ ಶ್ರೇಷ್ಠವಾದದ್ದು. ಗುರು ಗೋವಿಂದ ಭಟ್ಟರು–ಶರೀಫ ಸಾಹೇಬರು, ಅಡವಿ ಸಿದ್ದೇಶ್ವರರು–ನಾಗಲಿಂಗಪ್ಪ, ಗಜದಂಡ ಶಿವಯೋಗಿಗಳು–ಸಿದ್ಧಾರೂಢರು, ಪಂಚಾಕ್ಷರಿ ಗವಾಯಿಗಳು–ಪುಟ್ಟರಾಜ ಗವಾಯಿಗಳು ಸೇರಿದಂತೆ ಅನೇಕ ಮಹನೀಯರ ಗುರು-ಶಿಷ್ಯ ಸಂಬಂಧ ಸಮಾಜಕ್ಕೆ ಆದರ್ಶವಾಗಿದೆ ಎಂದು ತಿಳಿಸಿದರು.

ವೇದವ್ಯಾಸ ಮಹರ್ಷಿಗಳ ಜನ್ಮದಿನವಾಗಿಯೂ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಯೋಗ ಸಂಪ್ರದಾಯದಲ್ಲಿ ಶಿವನು ಸಪ್ತರ್ಷಿಗಳಿಗೆ ಯೋಗವಿದ್ಯೆ ಬೋಧಿಸಿದ ದಿನವೆಂಬ ನಂಬಿಕೆಯೂ ಇದೆ. ಆದ್ದರಿಂದ ಈ ಹಬ್ಬಕ್ಕೆ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿಯೂ ವಿಶೇಷ ಮಹತ್ವವಿದೆ ಎಂದು ಹೇಳಿದರು.

ಚಾತುರ್ಮಾಸದ ಅವಧಿಯಲ್ಲಿ ಸನ್ಯಾಸಿಗಳು ಒಂದೇ ಸ್ಥಳದಲ್ಲಿ ತಂಗಿ ಧರ್ಮಪ್ರವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಾರೆ. ಗುರು-ಶಿಷ್ಯರ ಸಂಬಂಧವು ಸಮಾಜದ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಗಟ್ಟಿಗೊಳಿಸುವ ಶಕ್ತಿಯಾಗಿದೆ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶ್ರೀ ಬಸವಾನಂದ ಸಾಂಸ್ಕೃತಿಕ ಸೇವಾ ಸಂಸ್ಥೆಯ ಸಹ ಕಾರ್ಯದರ್ಶಿ ಕಿಡಿಗಣ್ಣಸ್ವಾಮಿ ವಂದಿಸಿದರು. ಸಂಸ್ಥೆಯ ಕಾರ್ಯದರ್ಶಿ ಸದಾನಂದ ಶಾಸ್ತ್ರಿಗಳು ಕಾರ್ಯಕ್ರಮದ ಮಾಹಿತಿ ನೀಡಿದರು.

“ಅಜ್ಞಾನವನ್ನು ದೂರ ಮಾಡಿ ಜ್ಞಾನದ ಬೆಳಕಿನತ್ತ ಕರೆದೊಯ್ಯುವವರೇ ಗುರು; ಗುರುವಿನ ಸ್ಥಾನ ಎಲ್ಲಕ್ಕಿಂತ ಶ್ರೇಷ್ಠ.”

– ಫಕ್ಕೀರಯ್ಯ ಸ್ವಾಮೀಜಿ