Home Blog

ಗಜೇಂದ್ರಗಡ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಬಂಧನ, ₹4.50 ಲಕ್ಷ ಮೌಲ್ಯದ ಚಿನ್ನ–ಬೆಳ್ಳಿ ವಶ

0

ಗದಗ: ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಚಿನ್ನ–ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಫೆಬ್ರವರಿ 17ರ ರಾತ್ರಿ 11.45ರಿಂದ 18ರ ಬೆಳಗ್ಗೆ 6.30ರ ನಡುವೆ ಟಗರಗಲ್ಲಿಯಲ್ಲಿರುವ ದೂರುದಾರರ ಮನೆಯಲ್ಲಿ ಕಳ್ಳತನ ನಡೆದಿತ್ತು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.30/2026, ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರ ಮಾರ್ಗದರ್ಶನದಲ್ಲಿ, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಭುಗೌಡ ಪಾಟೀಲ ಹಾಗೂ ಸಿಪಿಐ ವಿಜಯಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಪಿಎಸ್‌ಐ ಪ್ರಕಾಶ ಡಿ ಹಾಗೂ ತಾಂತ್ರಿಕ, ಫಿಂಗರ್‌ಪ್ರಿಂಟ್ ತಂಡದ ಸಹಕಾರದಿಂದ ತನಿಖೆ ಮುಂದುವರಿಸಲಾಯಿತು.

ಫೆಬ್ರವರಿ 23ರಂದು ಕುಷ್ಟಗಿ ರಾಷ್ಟ್ರೀಯ ಹೆದ್ದಾರಿ ಬ್ರಿಜ್ ಹತ್ತಿರ ಪ್ರಮುಖ ಆರೋಪಿ ನಾಗರಾಜ ದೇವರಮನಿ (45) ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳ್ಳತನ ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆಯ ಮೇರೆಗೆ ಶಿವಮ್ಮ ದೇವರಮನಿ (38) ಮತ್ತು ಬಸಮ್ಮ ಎರಿಬಗೇರಿ (40) ಅವರನ್ನು ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ಬಂಧಿಸಲಾಗಿದೆ.

ಆರೋಪಿಗಳಿಂದ 78 ಗ್ರಾಂ 730 ಮಿಲಿ ಚಿನ್ನ (₹3,93,650) ಮತ್ತು 711.47 ಗ್ರಾಂ ಬೆಳ್ಳಿ (₹56,918) ಸೇರಿ ಒಟ್ಟು ₹4,50,568 ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಎಸ್‌ಪಿ ರೋಹನ್ ಜಗದೀಶ ಪ್ರಶಂಸಿಸಿದ್ದಾರೆ.

ಅಂಗವಿಕಲರು–ಅನಾಥರ ಜೊತೆ ದಾನೇಶ್ವರಿ ಹುಟ್ಟುಹಬ್ಬ: ಕುಷ್ಟಗಿ ದಂಪತಿಯ ಮಾನವೀಯ ನಡೆ

0

ಕುಷ್ಟಗಿ: ಪ್ರತಿಯೊಬ್ಬ ತಂದೆ–ತಾಯಿಗೂ ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕೆಂಬ ಆಸೆ ಇರುತ್ತದೆ. ಆದರೆ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ನಿಂಗಪ್ಪ ಜಿಗೇರಿ ಮತ್ತು ರೇಖಾ ಜಿಗೇರಿ ದಂಪತಿಗಳು ತಮ್ಮ ಮಗಳು ದಾನೇಶ್ವರಿ ಅವರ ಎರಡನೇ ವರ್ಷದ ಹುಟ್ಟುಹಬ್ಬವನ್ನು ಸಮಾಜಮುಖಿ ರೀತಿಯಲ್ಲಿ ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇವರು ತಮ್ಮ ಮಗಳ ಹುಟ್ಟುಹಬ್ಬವನ್ನು ಸುರಕ್ಷಾ ಸೇವಾ ಸಂಸ್ಥೆಯಲ್ಲಿ ಇರುವ ಅಂಗವಿಕಲರು ಹಾಗೂ ಅನಾಥರ ವೃದ್ಧಾಶ್ರಮದಲ್ಲಿ ಸರಳವಾಗಿ ಆಚರಿಸಿದರು. ಆಶ್ರಮದ ನಿವಾಸಿಗಳೊಂದಿಗೆ ಕೇಕ್ ಕತ್ತರಿಸಿ ಸಂತೋಷ ಹಂಚಿಕೊಂಡು, ಎಲ್ಲರಿಗೂ ಒಂದು ದಿನದ ವಿಶೇಷ ಭೋಜನ ವ್ಯವಸ್ಥೆ ಮಾಡಿದರು.

“ದುಂದು ವೆಚ್ಚ ಮಾಡುವುದಕ್ಕಿಂತ ಅಗತ್ಯವಿರುವವರೊಂದಿಗೆ ಸಂತೋಷ ಹಂಚಿಕೊಳ್ಳುವುದೇ ಸಾರ್ಥಕ. ಮಕ್ಕಳಿಗೆ ಬಾಲ್ಯದಲ್ಲೇ ಮಾನವೀಯ ಮೌಲ್ಯಗಳನ್ನು ಕಲಿಸಿದರೆ, ಅವರು ದೊಡ್ಡವರಾದ ಬಳಿಕ ತಂದೆ–ತಾಯಿಗಳನ್ನು ದೂರ ಮಾಡುವುದಿಲ್ಲ” ಎಂದು ನಿಂಗಪ್ಪ ಜಿಗೇರಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪುರುಷೋತ್ತಮ ದರಕ ಹಾಗೂ ಕಾರ್ಯಾಧ್ಯಕ್ಷ ಬಾಲಚಂದ್ರ ಕೆ ಉಪಸ್ಥಿತರಿದ್ದರು. ದಂಪತಿಯ ಈ ನಡೆಗೆ ಆಶ್ರಮದ ಸದಸ್ಯರು ಹಾಗೂ ಸ್ಥಳೀಯರು ಹೃತ್ಪೂರ್ವಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

 

ಸಂಕೇತ್ ಕೊಲೆ ಪ್ರಕರಣ: ಕೋಮು ಗಲಭೆ ಹುಟ್ಟು ಹಾಕಲು ಕೃತ್ಯ ಎಸಗಿದಂತಿದೆ – ಸಿ.ಟಿ. ರವಿ

0

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಸಂಕೇತ್ ಕೊಲೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 10ನೇ ತರಗತಿ ಓದುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಹತ್ಯೆ ಮಾಡಲಾಗಿದೆ. ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗಲೇ ಕೊಲೆ ನಡೆದಿದೆ ಎಂದು ಹೇಳಿದ್ದಾರೆ.

ಭಟ್ಕಳ ಮತ್ತು ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂತಹ ಘಟನೆಗಳು ನಡೆದಿರುವುದನ್ನು ಉಲ್ಲೇಖಿಸಿದ ಅವರು, ದೇಶದ ವಿವಿಧ ಕಡೆ ಕೋಮು ಗಲಭೆ ನಡೆಸುವ ಸಂಚಿನ ಹಿನ್ನಲೆಯಲ್ಲಿ ಕೆಲವರ ಬಂಧನಗಳೂ ನಡೆದಿವೆ. ಈ ಎಲ್ಲವನ್ನು ನೋಡಿದಾಗ ಯೋಜಿತವಾಗಿ ಕೋಮು ಗಲಭೆ ಹುಟ್ಟುಹಾಕಲು ಪ್ರಯತ್ನಿಸುತ್ತಿರುವಂತೆ ಕಾಣಿಸುತ್ತಿದೆ ಎಂದು ಹೇಳಿದರು.

ಇಂತಹ ಘಟನೆಗಳಲ್ಲಿ ಒಂದೇ ಸಮುದಾಯದ ಅಪ್ರಾಪ್ತರು ಭಾಗಿಯಾಗಿರುವುದು ಕಾಕತಾಳಿಯನಾ ಅಥವಾ ಯೋಜಿತವೋ ಎಂಬುದರ ಬಗ್ಗೆ ಸಮಗ್ರ ತನಿಖೆ ಅಗತ್ಯ,” ಎಂದು ಅವರು ಒತ್ತಾಯಿಸಿದರು. ಇದೇ ವೇಳೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದೆ ಎಂದು ದೂರಿದ ಅವರು, ರಾಜ್ಯ ಉಡ್ತಾ ಕರ್ನಾಟಕ ಆಗುತ್ತಿರುವಂತಿದೆ. ಎಲ್ಲೆಡೆ ಮಾದಕ ವಸ್ತುಗಳು ಸಿಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಯುವಜನರ ಕಣ್ಣೀರು, ಹೋರಾಟ ನಿಮಗೆ ಕಾಣುತ್ತಿಲ್ಲವೇ? ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ಧಾಳಿ

0

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಇವತ್ತು ಯುವಜನತೆಯ ಜೀವನದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು.

ಯುವಜನತೆ ಕಳೆದ ಎರಡೂವರೆ ವರ್ಷದಿಂದ ಕಣ್ಣೀರು ಹಾಕುತ್ತಿದ್ದಾರೆ. ಪ್ರತಿಭಟನೆ- ಹೋರಾಟ ಮಾಡುತ್ತಿದ್ದಾರೆ; ಇದ್ಯಾವುದನ್ನೂ ಲೆಕ್ಕಿಸದೇ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲೂ ಇದೇ ವಿದ್ಯಾರ್ಥಿಗಳ ಒಕ್ಕೂಟ ಪ್ರತಿಭಟನೆ ಮಾಡಿದರೆ ಲಾಠಿ ಚಾರ್ಜ್ ಮಾಡಿದ್ದರು.

ಆಗಲೂ ಸರಕಾರ ಎಚ್ಚತ್ತುಕೊಳ್ಳಲಿಲ್ಲ ಎಂದು ದೂರಿದರು. ಮುಖ್ಯಮಂತ್ರಿಗಳ ಜೊತೆ ಭೇಟಿಗೆ ಸಮಯ ನಿಗದಿಪಡಿಸಲು ರಾಜ್ಯ ಹೈಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು ಎಂದು ಅವರು ತಿಳಿಸಿದರು.

ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಕುರ್ಚಿ ಕಾಳಗದಲ್ಲಿ ಬ್ಯುಸಿ ಆಗಿದ್ದಾರೆ. ಒಬ್ಬರು ಕುರ್ಚಿ ಉಳಿಸಿಕೊಳ್ಳಲು, ಇನ್ನೊಬ್ಬರು ಕುರ್ಚಿ ಕಸಿದುಕೊಳ್ಳಲು ಮುಂದಾಗಿದ್ದಾರೆಯೇ ವಿನಾ ಈ ಯುವಜನತೆಯ ಸಮಸ್ಯೆ ಆಲಿಸಲು ಇವರಿಗೆ ಸಮಯ ಸಿಗುತ್ತಿಲ್ಲ ಎಂದು ಟೀಕಿಸಿದರು.

ನನ್ನನ್ನು ವಿದ್ಯಾರ್ಥಿಗಳ ಒಕ್ಕೂಟದವರು ಬಂದು ಭೇಟಿ ಮಾಡಿದ್ದರು. 2 ಲಕ್ಷ 85 ಸಾವಿರ ಹುದ್ದೆಗಳು ಇವತ್ತಿಗೂ ಖಾಲಿ ಬಿದ್ದಿವೆ. ಕಾಂಗ್ರೆಸ್ ಸರಕಾರಕ್ಕೆ ಅವುಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ದೆಹಲಿಗೆ ಬರುವಂತೆ ಯಾವುದೇ ಕರೆ ಬಂದಿಲ್ಲ, ಇಲಾಖೆ ವಿಚಾರವಾಗಿ ಹೋಗಬೇಕಿದೆ: ಡಿ.ಕೆ. ಶಿವಕುಮಾರ್

0

ಬೆಂಗಳೂರು: ಮಹದೇವಪ್ಪ ಅವರು ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಪಾರ್ಕ್ ಸರಕಾರಿ ನಿವಾಸ ಹಾಗೂ ಸುತ್ತೂರು ಸದನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ರಾಜ್ಯ ರಾಜಕಾರಣದಲ್ಲಿ ಬದಲಾವಣೆ, ಅಧಿಕಾರ ಹಸ್ತಾಂತರ, ದಲಿತ ಸಿಎಂ ಬಗ್ಗೆ ಆಗುತ್ತಿರುವ ಚರ್ಚೆ ಕುರಿತು ಕೇಳಿದಾಗ, “ಮಹದೇವಪ್ಪ ಅವರ ಹೇಳಿಕೆ ನೋಡಿದೆ. ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ಇಲ್ಲ. ಅವರಿಗೆ ಸಿಎಂ ಬದಲಾವಣೆ ಮಾಹಿತಿ ಇರಬಹುದು, ಆದರೆ ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ” ಎಂದರು.

ಇಲಾಖೆ ವಿಚಾರವಾಗಿ ದೆಹಲಿಗೆ ಹೋಗಬೇಕಿದೆ

ಹೈಕಮಾಂಡ್ ನಿಮ್ಮನ್ನು ಹಾಗೂ ಸಿಎಂ ಅವರನ್ನು ಕರೆದಿದ್ದಾರಾ ಎಂದು ಕೇಳಿದಾಗ, “ನನಗೆ ಯಾವುದೇ ಕರೆ ಬಂದಿಲ್ಲ. ನಾನು ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಗಳ ಮೇಲೆ ದೆಹಲಿಗೆ ಹೋಗಬೇಕಾಗಿದೆ. ನಗರಾಭಿವೃದ್ಧಿ ಇಲಾಖೆ ಯೋಜನೆಗೆ ಸಂಬಂಧಿಸಿದಂತೆ 1 ಲಕ್ಷ ಕೋಟಿ ರೂ. ನೀಡಲಾಗುತ್ತಿದ್ದು, ದೊಡ್ಡ ನಗರಗಳಿಗೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಈ ಬಗ್ಗೆ ನಮ್ಮ ನಗರಾಭಿವೃದ್ಧಿ ಸಚಿವರ ಬಳಿ ಚರ್ಚೆ ಮಾಡಿ, 2 ಹಾಗೂ 3ನೇ ಹಂತದ ನಗರಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಲು ಹೇಳುತ್ತೇನೆ” ಎಂದು ತಿಳಿಸಿದರು.

ಸಚಿವರು, ಶಾಸಕರನ್ನು ನಿಯಂತ್ರಿಸಬೇಕಿರುವುದು ಸಿಎಂ

ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಚಿವರ ಹೇಳಿಕೆಗಳ ಬಗ್ಗೆ ನೀವು ಮೌನವಾಗಿದ್ದೀರಿ ಎಂದು ಕೇಳಿದಾಗ, “ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ” ಎಂದು ತಿಳಿಸಿದರು.

ಪರಮೇಶ್ವರ್ ಅವರಿಗೆ ಮೊದಲು ಕೂಲಿ ಕೊಡಲಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ದೊಡ್ಡವರು” ಎಂದು ತಿಳಿಸಿದರು. ದೆಹಲಿಗೆ ಹೋಗುತ್ತೀರಾ, ಹೈಕಮಾಂಡ್ ನಾಯಕರು ಮೊದಲ ಬಾರಿಗೆ ನಿಮ್ಮನ್ನು ಕರೆಸಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ನಾನು ಇಲ್ಲಿ ಕುಮಾರಕೃಪದಲ್ಲಿ ಇದ್ದೇನೆ” ಎಂದು ತಿಳಿಸಿದರು.

ದರ್ಶನ್ ಪ್ರಕರಣದಲ್ಲಿ ಪೊಲೀಸರ ತನಿಖೆ ಬಗ್ಗೆ ಅನುಮಾನ: ಸ್ಪಷ್ಟನೆ ನೀಡಿದ ಗೃಹ ಸಚಿವ ಜಿ. ಪರಮೇಶ್ವರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆ ತೀವ್ರಗೊಳ್ಳುತ್ತಿದೆ.

ಈ ವೇಳೆ, ಇತರ ಆರೋಪಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡ ಪ್ರಕ್ರಿಯೆ ಕುರಿತು ಅನುಮಾನ ವ್ಯಕ್ತವಾಗಿದೆ. ಮಹಜರ್ ಪ್ರಕ್ರಿಯೆ ವಾಸ್ತವದಲ್ಲಿ ಬೇರೆಡೆ ನಡೆದಿದ್ದರೂ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ನಡೆಸಿದಂತೆ ದಾಖಲಿಸಲಾಗಿದೆ ಎಂಬುದು ಆರೋಪಿಗಳ ಪರ ವಕೀಲರ ವಾದವಾಗಿದೆ.

ಈ ವಿವಾದದ ನಡುವೆ ಗೃಹಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿ, “ವಕೀಲರು ತಮ್ಮ ವಾದ ಮಾಡಲಿ. ಪೊಲೀಸ್ ಇಲಾಖೆ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸಿದೆ. ಅಗತ್ಯವಾದ ಉತ್ತರವನ್ನು ನ್ಯಾಯಾಲಯದಲ್ಲೇ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆ ವೇಳೆ ಈ ವಿಷಯದಲ್ಲಿ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ.

ಬೇಡ್ತಿ–ಶರಾವತಿ ತಿರುವಿಗೆ ವಿರೋಧ: ಶಿರಸಿಯಲ್ಲಿ ಗಂಗಾರತಿ ಮೂಲಕ ನದಿ ರಕ್ಷಣೆ ಕೂಗು

0

ಶಿರಸಿ: ಉತ್ತರ ಕನ್ನಡ ಜಿಲ್ಲೆಗೆ ಪ್ರಸ್ತಾಪಿತ ನದಿ ತಿರುವು ಯೋಜನೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ವಿವಿಧ ನದಿ ಹಾಗೂ ಹಳ್ಳಗಳಿಗೆ ಡ್ಯಾಂ ಕಟ್ಟಿ ಉತ್ತರ ಕರ್ನಾಟಕದ ಕಡೆಗೆ ನೀರು ಹರಿಸುವ ಯೋಜನೆಗೆ ಸಾವಿರಾರು ಕೋಟಿ ವೆಚ್ಚ ಮಾಡುವ ಸರ್ಕಾರದ ನಿರ್ಧಾರಕ್ಕೆ ತಜ್ಞರು ಪಶ್ಚಿಮಘಟ್ಟದ ನಾಶ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಮುರೆಗಾರ್ ಜಲಪಾತದಲ್ಲಿ ನದಿ ಪೂಜೆ ‘ಗಂಗಾರತಿ’ ನಡೆಸಿ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಗಿದೆ. ಇದು ಬೇಡ್ತಿ–ಶರಾವತಿ ನದಿ ತಿರುವು ಯೋಜನೆಯ ಭಾಗವಾಗಿದೆ.

**ಸ್ವರ್ಣವಲ್ಲಿ ಮಠ**ದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ನದಿಗಳು ಭಗವಂತನ ಇಚ್ಛೆಯಂತೆ ಹರಿಯುತ್ತಿವೆ. ಅವುಗಳ ದಿಕ್ಕು ಬದಲಿಸುವುದು ಅಧರ್ಮ. ಧರ್ಮಪೀಠ ಇದನ್ನು ವಿರೋಧಿಸುತ್ತದೆ” ಎಂದು ಹೇಳಿದರು. ಈ ಪೂಜೆ ಅಹಿಂಸಾತ್ಮಕ ಸತ್ಯಾಗ್ರಹವಾಗಿದ್ದು, ಮುಂದೆಯೂ ಪುನರಾವರ್ತನೆ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಜನವರಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ 25 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದೀಗ ಸಹಿ ಸಂಗ್ರಹ ಚಳುವಳಿ ಆರಂಭಿಸಿ, ಸರ್ಕಾರಕ್ಕೆ ತಮ್ಮ ವಿರೋಧ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಅನಂತ್ ಹೆಗಡೆ ಅಶೀಸರ, ನೀರವಾರಿ ತಜ್ಞರೊಂದಿಗೆ ಅಧಿಕಾರಿಗಳನ್ನು ಭೇಟಿ ಮಾಡಿ ಯೋಜನೆ ಕುರಿತು ಚರ್ಚೆ ನಡೆಸುವ ಯೋಜನೆ ಇದೆ ಎಂದು ಹೇಳಿದ್ದಾರೆ.

ನದಿ ತಿರುವು ಯೋಜನೆ ವಿರುದ್ಧದ ಹೋರಾಟ ಇದೀಗ ಆಧ್ಯಾತ್ಮಿಕ ರೂಪ ಪಡೆದುಕೊಂಡಿದ್ದು, ಪರಿಸರ ರಕ್ಷಣೆ ಮತ್ತು ಜನಜಾಗೃತಿ ಎರಡನ್ನೂ ಒಟ್ಟಿಗೆ ಮುಂದುವರಿಸುವ ಸಂಕಲ್ಪ ವ್ಯಕ್ತವಾಗಿದೆ.

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಕೊಲೆ ಪ್ರಕರಣ: ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!

0

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೊಲೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ ರಾಜ್ಯ ಸರ್ಕಾರವು ಒಟ್ಟು 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಪರಿಹಾರ ನೀಡುವಂತೆ ಸೂಚನೆ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೂಲಕ ಅಧಿಕೃತ ಘೋಷಣೆ ಮಾಡಿಸಿದ್ದಾರೆ.

ಪರಿಹಾರ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು, “ಅಪ್ರಾಪ್ತ ಬಾಲಕನ ಸಾವಿಗೆ ಸರ್ಕಾರದಿಂದ ಒಟ್ಟು 15 ಲಕ್ಷ ರೂ. ಮಂಜೂರು ಮಾಡಲಾಗಿದೆ. ಇದರಲ್ಲಿ 10 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಾಗೂ 5 ಲಕ್ಷ ರೂ. ಶಿಕ್ಷಣ ಇಲಾಖೆಯಿಂದ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಘಟನೆ ಬಳಿಕ ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ನಡೆದ ಬಡಾವಣೆಯಲ್ಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಜಾತ್ರೆ ಹಾಗೂ ಮುಂಬರುವ ಹಬ್ಬಗಳ ಹಿನ್ನೆಲೆ ಹೆಚ್ಚುವರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಊರುಗಡೂರು ಭಾಗದಲ್ಲಿ ಔಟ್‌ಪೋಸ್ಟ್ ತೆರೆಯುವ ಮೂಲಕ ವಿಶೇಷ ಪೊಲೀಸ್ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪವನ್ ಹನ್ಸ್ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯಲ್ಲಿ ತುರ್ತು ಭೂಸ್ಪರ್ಶ!

0

ನವದೆಹಲಿ: ಇಬ್ಬರು ಸಿಬ್ಬಂದಿ ಸೇರಿ ಐದು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಪವನ್ ಹನ್ಸ್ ಸಂಸ್ಥೆಯ ಹೆಲಿಕಾಪ್ಟರ್ ಅಂಡಮಾನ್ ಕರಾವಳಿಯ ಹಿಂದೂ ಮಹಾಸಾಗರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಪೋರ್ಟ್‌ಬ್ಲೇರ್‌ನಿಂದ ಮಾಯಾಬಂದರ್‌ಗೆ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಮಾಯಾಬಂದರ್ ಸಮೀಪ ಈ ಘಟನೆ ನಡೆದಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪೋರ್ಟ್‌ಬ್ಲೇರ್‌ನಿಂದ ಇಬ್ಬರು ಸಿಬ್ಬಂದಿ ಹಾಗೂ ಐದು ಪ್ರಯಾಣಿಕರೊಂದಿಗೆ ಹೊರಟಿತ್ತು. ತುರ್ತು ಪರಿಸ್ಥಿತಿಯಲ್ಲಿ ಸಮುದ್ರದಲ್ಲಿ ಭೂಸ್ಪರ್ಶ ಮಾಡಿದ ಬಳಿಕ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಅಮೆರಿಕದಲ್ಲಿ ಭಾರೀ ಹಿಮಪಾತ: 5,600ಕ್ಕೂ ಹೆಚ್ಚು ವಿಮಾನ ರದ್ದು, ಶಾಲೆಗಳಿಗೆ ರಜೆ ಘೋಷಣೆ

0

ನ್ಯೂಯಾರ್ಕ್: ಅಮೆರಿಕದ ಈಶಾನ್ಯ ಭಾಗದಲ್ಲಿ ಭಾರಿ ಹಿಮಬಿರುಗಾಳಿ ಅಪ್ಪಳಿಸಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮೇರಿಲ್ಯಾಂಡಿನಿಂದ ಮೈನೆವರೆಗೆ ವ್ಯಾಪಕ ಹಿಮಪಾತವಾಗಿದ್ದು, ತೀವ್ರ ಗಾಳಿ ಹಾಗೂ ಹಿಮದ ಪರಿಣಾಮ ಸಾರಿಗೆ ವ್ಯವಸ್ಥೆ ಸ್ಥಗಿತಗೊಂಡಿದೆ.

ಹವಾಮಾನ ತಜ್ಞರ ಪ್ರಕಾರ, ಕಳೆದ ಒಂದು ದಶಕದಲ್ಲಿ ಕಂಡ ಅತ್ಯಂತ ಪ್ರಬಲ ಚಂಡಮಾರುತ ಇದಾಗಿದೆ. ಕೆಲವು ಪ್ರದೇಶಗಳಲ್ಲಿ 2 ಅಡಿ (60 ಸೆಂ.ಮೀ.) ಗಿಂತ ಹೆಚ್ಚು ಹಿಮ ಸುರಿದಿದೆ. ಪರಿಣಾಮವಾಗಿ ವ್ಯಾಪಾರ-ವಹಿವಾಟುಗಳಿಗೆ ಅಡ್ಡಿಯುಂಟಾಗಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಅಧಿಕಾರಿಗಳು ಹಲವೆಡೆ ತುರ್ತು ಪರಿಸ್ಥಿತಿ ಘೋಷಿಸಿದ್ದು, ಶಾಲೆಗಳನ್ನು ಮುಚ್ಚಲಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿ, ಜನರು ಕತ್ತಲಲ್ಲಿ ದಿನ ಕಳೆಯುವಂತಾಗಿದೆ.

ವಿಮಾನ ಸಂಚಾರಕ್ಕೂ ಭಾರಿ ಹೊಡೆತ ಬಿದ್ದಿದೆ. ಸೋಮವಾರ ದೇಶಾದ್ಯಂತ 5,600ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಮಂಗಳವಾರ ನಿಗದಿಯಾಗಿದ್ದ ಇನ್ನೂ 2,000 ವಿಮಾನಗಳನ್ನು ರದ್ದುಪಡಿಸಲಾಗಿದೆ. ಸುಮಾರು 2,500 ವಿಮಾನಗಳ ಹಾರಾಟದಲ್ಲಿ ವಿಳಂಬ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಪರಿಸ್ಥಿತಿ ಸಾಮಾನ್ಯವಾಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

error: Content is protected !!