Home Blog

ಬೆಂಗಳೂರಿನಲ್ಲಿ ಶುದ್ಧ ಗಾಳಿ! ವಾಯು ಗುಣಮಟ್ಟ ಉತ್ತಮ ಮಟ್ಟಕ್ಕೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿರುವ ಪರಿಣಾಮ ಕರ್ನಾಟಕದ ಹಲವು ನಗರಗಳಲ್ಲಿ ವಾಯು ಮಾಲಿನ್ಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಆರೋಗ್ಯಕರ ಮಟ್ಟಕ್ಕೆ ತಲುಪಿದೆ.

ಇಂದು ಬಿಡುಗಡೆಯಾದ ವಾಯು ಗುಣಮಟ್ಟ ವರದಿ ಪ್ರಕಾರ, ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ 47 ದಾಖಲಾಗಿದ್ದು, ಇದನ್ನು ‘ಉತ್ತಮ’ ವರ್ಗಕ್ಕೆ ಸೇರಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಸುರಿದ ಮಳೆಯ ಪರಿಣಾಮ ವಾತಾವರಣದಲ್ಲಿದ್ದ ಧೂಳಿನ ಕಣಗಳು ನೆಲಕ್ಕಿಳಿದಿದ್ದು, ನಗರದಲ್ಲಿ ಸ್ವಚ್ಛ ಮತ್ತು ಹಸಿರು ವಾತಾವರಣ ನಿರ್ಮಾಣವಾಗಿದೆ.

ತಜ್ಞರ ಪ್ರಕಾರ, ಗಾಳಿಯಲ್ಲಿದ್ದ ಸೂಕ್ಷ್ಮ ಧೂಳಿನ ಕಣಗಳ ಪ್ರಮಾಣ ಕಡಿಮೆಯಾಗಿರುವುದರಿಂದ ಸಾರ್ವಜನಿಕರು ಹಾಗೂ ಮಕ್ಕಳು ಯಾವುದೇ ಆರೋಗ್ಯ ಸಮಸ್ಯೆಯ ಆತಂಕವಿಲ್ಲದೆ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸಬಹುದು.

ರಾಜ್ಯದ ಇತರೆ ನಗರಗಳಲ್ಲೂ ವಾಯು ಗುಣಮಟ್ಟ ಉತ್ತಮ ಮಟ್ಟದಲ್ಲೇ ದಾಖಲಾಗಿದೆ. ಬೆಳಗಾವಿಯಲ್ಲಿ ಕೇವಲ 16 ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದ್ದು, ಅತ್ಯಂತ ಶುದ್ಧ ವಾತಾವರಣ ಕಂಡುಬಂದಿದೆ. ಗದಗದಲ್ಲಿ 18, ಕೊಪ್ಪಳದಲ್ಲಿ 21 ಹಾಗೂ ಚಿಕ್ಕಬಳ್ಳಾಪುರದಲ್ಲಿ 25 ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದೆ.

ಮೈಸೂರು, ಮಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡ ಭಾಗಗಳಲ್ಲೂ ಮಳೆಯ ಪ್ರಭಾವ ಮುಂದುವರಿದಿದ್ದು, ಗಾಳಿಯ ಗುಣಮಟ್ಟ ಸೂಚ್ಯಂಕ 50ರ ಒಳಗೆ ಉಳಿದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಪ್ಪೆಚಿಪ್ಪು ಹೆಕ್ಕಲು ಹೋಗಿ ಜಲಸಮಾಧಿ! ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಅಳ್ವೆಕೋಡಿ ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ನಿನ್ನೆ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದರೆ, ನಾಪತ್ತೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹವನ್ನು ಇಂದು ಎನ್‌ಡಿಆರ್‌ಎಫ್‌ ಹಾಗೂ ಈಶ್ವರ ಮಲ್ಪೆ ತಂಡದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ. ಈ ಮೂಲಕ ಸಮುದ್ರದ ಅಬ್ಬರಕ್ಕೆ ಒಟ್ಟು 11 ಮಂದಿ ಬಲಿಯಾಗಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ದುರಂತದಲ್ಲಿ ಮೃತರಾದ ಮಾಸ್ತಮ್ಮ ನಾಯ್ಕ್ ಅವರನ್ನು ರಕ್ಷಿಸಲು ಹೋಗಿದ್ದ ಅವರ ಮಗ ಉಮೇಶ್ ನಾಯ್ಕ್ ಕೂಡ ನೀರುಪಾಲಾಗಿರುವುದು ಮನಕಲಕುವಂತಾಗಿದೆ. ತಾಯಿ ನೀರಲ್ಲಿ ಕಪ್ಪೆಚಿಪ್ಪು ಹೆಕ್ಕುತ್ತಿದ್ದಾಗ ಮುಳುಗುತ್ತಿರುವುದನ್ನು ಕಂಡ ಉಮೇಶ್ ತಕ್ಷಣ ರಕ್ಷಣೆಗೆ ಧಾವಿಸಿದ್ದರು. ಆದರೆ ತಾಯಿಯನ್ನು ರಕ್ಷಿಸಲು ಸಾಧ್ಯವಾಗದೆ ಹಿಂದಿರುಗುವ ವೇಳೆ ಮತ್ತಿಬ್ಬರು ಸಹಾಯಕ್ಕಾಗಿ ಅವರ ಕಾಲು ಹಿಡಿದ ಪರಿಣಾಮ ಉಮೇಶ್ ಕೂಡ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಮಂಜುನಾಥ್ ನಾಯ್ಕ್ ತಿಳಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟ ಕುಟುಂಬಗಳ ಸ್ಥಿತಿ ಹೃದಯವಿದ್ರಾವಕವಾಗಿದೆ. ಮಾದೇವ ನಾಯ್ಕ್ ಹಾಗೂ ಲಕ್ಷ್ಮಿ ನಾಯ್ಕ್ ದಂಪತಿ ಸಾವನ್ನಪ್ಪಿದ್ದು, ಅವರ ಮಕ್ಕಳಾದ ದರ್ಶನ (23) ಮತ್ತು ಕೀರ್ತನಾ (20) ಅನಾಥರಾಗಿದ್ದಾರೆ.

ಇನ್ನೊಂದೆಡೆ, ಮೃತ ಲಕ್ಷ್ಮೀ ಶಿವರಾಮ ನಾಯ್ಕ್ ಅವರ ಪತಿ ಈಗಾಗಲೇ 10 ವರ್ಷಗಳ ಹಿಂದೆ ನಿಧನರಾಗಿದ್ದರು. ನಾಲ್ವರು ಮಕ್ಕಳಿಗೆ ತಾಯಿಯೇ ಆಸರೆಯಾಗಿದ್ದರೆ, ಇದೀಗ ಆಕೆಯೂ ಇಲ್ಲದ ಕಾರಣ ಕುಟುಂಬ ದಿಕ್ಕುತೋಚದ ಸ್ಥಿತಿಗೆ ತಲುಪಿದೆ.

ಘಟನೆ ಇಡೀ ಕರಾವಳಿ ಭಾಗವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಇಂದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ ಕೆಲ ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಗಂಟೆಗೆ 40ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಈ ವೇಳೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಇಲಾಖೆ ತಿಳಿಸಿದೆ.

ಇದೇ ವೇಳೆ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಳೆ ಹಾಗೂ ಸಿಡಿಲಿನ ಸಂದರ್ಭ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಮರಗಳ ಕೆಳಗೆ ಹಾಗೂ ವಿದ್ಯುತ್ ಕಂಬಗಳ ಸಮೀಪ ನಿಲ್ಲಬಾರದು ಎಂದು ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಲ್ಲಿ ಮನವಿ ಮಾಡಿವೆ.

ಗ್ಯಾರಂಟಿ ಯೋಜನೆಗಳಲ್ಲಿ ಅಕ್ರಮ ತಡೆಗೆ ಸರ್ಕಾರದ ಕಠಿಣ ಕ್ರಮ! ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೆ ನಿರ್ಧಾರ

ಬೆಂಗಳೂರು: ಪಂಚ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಇದೀಗ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ.

ನಿನ್ನೆ ನಡೆದ ಶಾಸಕರು ಹಾಗೂ ಹಿರಿಯ ನಾಯಕರ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಸುಮಾರು 1 ಕೋಟಿ 64 ಲಕ್ಷ ಮಹಿಳೆಯರು ಪ್ರತಿತಿಂಗಳು ₹2,000 ಸಹಾಯಧನ ಪಡೆಯುತ್ತಿದ್ದು, ಗೃಹಜ್ಯೋತಿ ಯೋಜನೆಯಡಿ 1 ಕೋಟಿ 67 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ.

ಆದರೆ, ಎರಡೂ ಯೋಜನೆಗಳಲ್ಲಿ ಅರ್ಹತೆ ಮೀರಿದವರು ಸೌಲಭ್ಯ ಪಡೆಯುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ಮಾಹಿತಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರ ಹೆಸರಿನಲ್ಲಿಯೂ ಹಣ ಜಮಾ ಆಗುತ್ತಿರುವ ಪ್ರಕರಣಗಳು ವರದಿಯಾಗಿವೆ ಎನ್ನಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಲ್ಲಿಯೂ ಅನರ್ಹರು ಫಲಾನುಭವಿಗಳಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಿ, ಅರ್ಹರಿಗೆ ಮಾತ್ರ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳು ಪ್ರಕಟವಾಗುವ ಸಾಧ್ಯತೆ ಇದೆ.

ಇತ್ತೀಚೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಗೃಹಲಕ್ಷ್ಮಿ ಯೋಜನೆಯಲ್ಲಿ ₹5,000 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಸರ್ಕಾರ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

10 ದಿನದಲ್ಲಿ 4ನೇ ಬಾರಿ ದರ ಏರಿಕೆ! ಮತ್ತೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

ನವದೆಹಲಿ: ದೇಶದ ವಾಹನ ಸವಾರರಿಗೆ ಮತ್ತೆ ತೈಲ ಬೆಲೆ ಏರಿಕೆಯ ಶಾಕ್ ಎದುರಾಗಿದೆ.

ಕೇಂದ್ರ ಸರ್ಕಾರವು ಸೋಮವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಇಂಧನ ದರಗಳು ಗಗನಕ್ಕೇರಿವೆ.

ಹೊಸ ಪರಿಷ್ಕರಣೆಯ ಪ್ರಕಾರ ಪೆಟ್ರೋಲ್ ಪ್ರತಿ ಲೀಟರ್‌ಗೆ ₹2.61 ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ ₹2.71 ಏರಿಕೆ ಮಾಡಲಾಗಿದೆ. ಕಳೆದ 10 ದಿನಗಳಲ್ಲಿ ಇದು ನಾಲ್ಕನೇ ಬಾರಿಗೆ ನಡೆದ ಬೆಲೆ ಏರಿಕೆಯಾಗಿದ್ದು, ಗ್ರಾಹಕರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಈಗ ಲೀಟರ್‌ಗೆ ₹110.89 ಹಾಗೂ ಡೀಸೆಲ್ ದರ ₹98.80ಕ್ಕೆ ತಲುಪಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಸಂಘರ್ಷದ ಪರಿಣಾಮ ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಳವಾಗುತ್ತಿದೆ ಎಂದು ತೈಲ ಕಂಪನಿಗಳು ತಿಳಿಸಿವೆ.

ಮೇ 15ರಂದು ಮೊದಲ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಸುಮಾರು ₹3ರಷ್ಟು ಏರಿಸಲಾಗಿತ್ತು. ನಂತರ ಮೇ 23ರಂದು ಮತ್ತೆ ಏರಿಕೆ ಮಾಡಲಾಗಿದ್ದು, ಇದೀಗ ಮೂರನೇ ಹಂತದಲ್ಲಿ ಮತ್ತಷ್ಟು ಹೆಚ್ಚಳ ಮಾಡಲಾಗಿದೆ. ಎರಡೇ ವಾರದಲ್ಲಿ ನಾಲ್ಕು ಬಾರಿ ತೈಲ ದರ ಏರಿಕೆಯಾಗಿರುವುದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.

“ಪದೇ ಪದೇ ದರ ಏರಿಸಿದರೆ ಹೇಗೆ?” ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ತೈಲ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿ ಸ್ಫೋಟ ಪ್ರಕರಣ: AI ಮತ್ತು ಯೂಟ್ಯೂಬ್ ಬಳಸಿ ಬಾಂಬ್ ತಯಾರಿ – NIA ತನಿಖೆಯಲ್ಲಿ ಸ್ಪೋಟಕ ಮಾಹಿತಿ ಲಭ್ಯ

ನವದೆಹಲಿ: ಕೆಂಪು ಕೋಟೆ ಪ್ರದೇಶದಲ್ಲಿ ನಡೆದ ಕಾರು ಸ್ಫೋಟ ಪ್ರಕರಣದಲ್ಲಿ ಆರೋಪಿಗಳು ಚಾಟ್‌ಜಿಪಿಟಿ ಸೇರಿದಂತೆ ಕೃತಕ ಬುದ್ಧಿಮತ್ತೆ ಉಪಕರಣಗಳು ಹಾಗೂ ಯೂಟ್ಯೂಬ್ ವಿಡಿಯೋಗಳ ಮೂಲಕ ಬಾಂಬ್ ತಯಾರಿಕೆ ಮಾಹಿತಿ ಸಂಗ್ರಹಿಸಿದ್ದರು ಎಂಬ ಗಂಭೀರ ಅಂಶ ಬೆಳಕಿಗೆ ಬಂದಿದೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆ ನಡೆಸುತ್ತಿದ್ದು, 7,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ ಆರೋಪಿಗಳ ಸಂಚು ವಿವರಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಕೆಲವರು ಜಾಗತಿಕ ಉಗ್ರ ಸಂಘಟನೆ ಅಲ್-ಖೈದಾ ಹಾಗೂ ಅದರ ಉಪಘಟಕ ಅನ್ಸಾರ್ ಘಜ್ವತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿದ್ದರು ಎಂಬುದೂ ತನಿಖೆಯಲ್ಲಿ ಹೊರಬಿದ್ದಿದೆ.

ತನಿಖೆಯ ಪ್ರಕಾರ, ಆರೋಪಿಯೊಬ್ಬ “ಇನ್-ಹೌಸ್ ಎಂಜಿನಿಯರ್” ಆಗಿ ಕಾರ್ಯನಿರ್ವಹಿಸಿ ಸುಧಾರಿತ ಸ್ಫೋಟಕ ಸಾಧನ (IED) ತಯಾರಿಕೆಗೆ ತಾಂತ್ರಿಕ ನೆರವು ನೀಡಿದ್ದಾನೆ. ಈತ ಹರಿಯಾಣದ ಫರಿದಾಬಾದ್‌ನಲ್ಲಿರುವ ಖಾಸಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಹಲವು ಬಾರಿ ತಂಗಿದ್ದನೆಂದು ತಿಳಿದುಬಂದಿದೆ.

ಬಾಂಬ್ ತಯಾರಿಕೆಗೆ ಅಮೋನಿಯಂ ನೈಟ್ರೇಟ್ ಸೇರಿದಂತೆ ಇಂಧನ ತೈಲ ಮಿಶ್ರಣಗಳನ್ನು ಬಳಸಲಾಗಿದ್ದು, ಬ್ಯಾಟರಿ ಚಾಲಿತ ಟೈಮಿಂಗ್ ಸಾಧನದ ಮೂಲಕ ಸ್ಫೋಟಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಾಧನವನ್ನು ಅತ್ಯಂತ ಕಡಿಮೆ ಸಮಯದಲ್ಲಿ ಜೋಡಿಸಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

2024ರಲ್ಲಿ ಕೆಂಪು ಕೋಟೆ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು. ಸ್ಫೋಟದ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು NIA ತಿಳಿಸಿದೆ.

ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ಹೋದವರು ನೀರುಪಾಲು: ಒಂದೇ ಕುಟುಂಬದ 8 ಮಂದಿ ಸಾವು!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದವರು ನೀರಿನ ರಭಸಕ್ಕೆ ಸಿಲುಕಿ ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 2 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಒಟ್ಟು 14 ಜನರು ಇಂದು ಬೆಳಗ್ಗೆ ನದಿಗೆ ಕಪ್ಪೆಚಿಪ್ಪು ಸಂಗ್ರಹಿಸಲು ತೆರಳಿದ್ದರು. ಈ ವೇಳೆ ಏಕಾಏಕಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಭಸವಾದ ನೀರಿನ ಸುಳಿಗೆ ಎಲ್ಲರೂ ಸಿಲುಕಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ 4 ಜನರನ್ನು ರಕ್ಷಿಸಲಾಗಿದ್ದು, ಉಳಿದವರಲ್ಲಿ 8 ಮಂದಿ ಮೃತದೇಹಗಳು ಪತ್ತೆಯಾಗಿವೆ. ಮೃತರಲ್ಲಿ ಒಬ್ಬ ಪುರುಷ ಹಾಗೂ 7 ಮಹಿಳೆಯರು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮೃತರನ್ನು ಭಟ್ಕಳದ ಶಿರಾಲಿ ಮೂಲದವರು ಎಂದು ಗುರುತಿಸಲಾಗಿದ್ದು, ಎಲ್ಲರೂ ಒಂದೇ ಕುಟುಂಬದ ಸದಸ್ಯರು ಎಂಬ ಮಾಹಿತಿ ದೊರೆತಿದೆ. ಮೃತದೇಹಗಳನ್ನು ಭಟ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಭಟ್ಕಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯ ಮೀನುಗಾರರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.

ಮಹಿಳೆ ಮೇಲೆ ಅತ್ಯಾಚಾರ ಆರೋಪ? ಬಿಜೆಪಿ ಯುವ ಮೋರ್ಚಾ ಮುಖಂಡನ ಮೇಲೆ FIR ದಾಖಲು!

ಶಿವಮೊಗ್ಗ: ಭದ್ರಾವತಿ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲ ಭರತ್ ಬಿ.ಎಸ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಆರೋಪಿ 23 ವರ್ಷದ ಮಹಿಳೆಯ ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ ಬೆಳೆಸಿಕೊಂಡಿದ್ದಾನೆ. ನಂತರ ದಿನಸಿ ಅಂಗಡಿಗೆ ಪದೇ ಪದೇ ಭೇಟಿ ನೀಡಿ ಮಹಿಳೆಗೆ ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ.

ಏಪ್ರಿಲ್ 11ರಂದು ಮಹಿಳೆಯ ಪತಿ ಮನೆಯಲ್ಲಿ ಇಲ್ಲದ ವೇಳೆ, ಆರೋಪಿ ಮನೆಗೆ ಬಂದಿದ್ದಾಗ ಒಂಟಿಯಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಹೇಳಿದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿ ಹಣದೊಂದಿಗೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಏಪ್ರಿಲ್ 25ರಂದು ಮತ್ತೆ ಅಂಗಡಿಗೆ ಬಂದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ಕೂಡ ಆರೋಪಿಸಲಾಗಿದೆ. ಈ ನಡುವೆ ಪತಿ ಮೊಬೈಲ್ ಪರಿಶೀಲನೆ ವೇಳೆ ಅನುಮಾನಾಸ್ಪದ ಚಾಟ್‌ಗಳು ಕಂಡುಬಂದಿದ್ದು, ನಂತರ ಮಹಿಳೆ ಸಂಪೂರ್ಣ ವಿಷಯವನ್ನು ಬಿಚ್ಚಿಟ್ಟಿದ್ದಾರೆ.

ದಂಪತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಭರತ್ ಬಿ.ಎಸ್ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಧಾರವಾಡದಲ್ಲಿ ಮುಂಗಾರು ಮುನ್ನೆಚ್ಚರಿಕೆ: ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ!

ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಹಾಗೂ ಹವಾಮಾನ ಇಲಾಖೆ ವರದಿ ನೀಡಿದೆ.

ಇದೇ ವೇಳೆ ಜೂನ್ 1ರ ವೇಳೆಗೆ ಮುಂಗಾರು ಕರ್ನಾಟಕಕ್ಕೆ ಪ್ರವೇಶಿಸುವ ಸಾಧ್ಯತೆ ಇದ್ದು, ಇವತ್ತಿನಿಂದಲೇ ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ತಿಳಿಸಲಾಗಿದೆ.

ಕಳೆದ ರಾತ್ರಿಯಿಂದಲೇ ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮುಂದಿನ ಮೂರು ದಿನವೂ ಮುಂದುವರೆಯುವ ಸಾಧ್ಯತೆ ಇದೆ.

ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲೂ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬಾಗಲಕೋಟೆ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯ ಎಚ್ಚರಿಕೆ ಕೂಡ ನೀಡಲಾಗಿದೆ.

ರೈತರು ಕೃಷಿ ಚಟುವಟಿಕೆಗಳಲ್ಲಿ ಜಾಗೃತಿ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ಸಾಲ ಪಡೆದು ವಂಚನೆ: ಕರ್ನಾಟಕ ಬ್ಯಾಂಕ್‌ಗೆ ಮಹಮೊಸ! FIR ದಾಖಲು

ಬೆಂಗಳೂರು: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು 16.53 ಲಕ್ಷ ರೂಪಾಯಿ ಸಾಲ ಪಡೆದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಸೇರಿದಂತೆ ನಾಲ್ವರ ವಿರುದ್ಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿಯ ಪ್ರಕಾರ, ಚಿನ್ನ ಮೌಲ್ಯಮಾಪಕ ರವಿಕುಮಾರ್ ಕೆಲವು ನಕಲಿ ಗ್ರಾಹಕರೊಂದಿಗೆ ಸೇರಿಕೊಂಡು ನಕಲಿ ಚಿನ್ನವನ್ನು ಅಸಲಿ ಚಿನ್ನವೆಂದು ತೋರಿಸಿ ಬ್ಯಾಂಕ್‌ಗೆ ವಂಚನೆ ಮಾಡಿದ್ದಾನೆ. ಬ್ಯಾಂಕ್‌ನ ನಿಯಮಿತ ಮೌಲ್ಯಮಾಪನ ಪ್ರಕ್ರಿಯೆಯನ್ನೇ ದುರುಪಯೋಗಪಡಿಸಿಕೊಂಡು ಈ ವಂಚನೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು, ನಕಲಿ ಗ್ರಾಹಕರಿಗೆ ಸಾಲ ಮಂಜೂರು ಮಾಡಿಸುವ ಮೂಲಕ ಬ್ಯಾಂಕ್‌ಗೆ ಆರ್ಥಿಕ ನಷ್ಟ ಉಂಟುಮಾಡಲಾಗಿದೆ. ನಂತರ ಬ್ಯಾಂಕ್ ಅಧಿಕಾರಿಗಳಿಗೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ವಂಚನೆ ಬಯಲಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ವರ್ತೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಚಿನ್ನ ಮೌಲ್ಯಮಾಪಕ ರವಿಕುಮಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!