ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ನಿಂದ ಮಹತ್ವದ ಸೂಚನೆ ಎದುರಾಗಿದೆ. ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಒಂದು ವಾರಕ್ಕೆ ಮುಂದೂಡಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.
ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ನಾಥ್ ಹಾಗೂ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠ ನಡೆಸಿತು.
ವಿಚಾರಣೆ ವೇಳೆ ತಮಿಳುನಾಡು ಪರ ವಕೀಲರು, CWMA ನಿರ್ದೇಶನಗಳ ಹೊರತಾಗಿಯೂ ಕರ್ನಾಟಕದಿಂದ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿಯುತ್ತಿಲ್ಲ ಎಂದು ವಾದಿಸಿದರು. ನೀರಿನ ಹರಿವು ಕಾಣಿಸುತ್ತಿಲ್ಲ. ಹೀಗಾಗಿ ತಮಿಳುನಾಡಿನ ರೈತರಿಗೆ ನೀರು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.
ಇಂದು ಬೆಳಗ್ಗಿನ ವೇಳೆಗೆ ಜಲಾಶಯದಲ್ಲಿ ಶೇ.76ರಷ್ಟು ನೀರು ಸಂಗ್ರಹವಿದೆ. ನ್ಯಾಯಾಲಯದ ಹಿಂದಿನ ಆದೇಶದ ಪ್ರಕಾರ 64 ಟಿಎಂಸಿ ನೀರು ಬರಬೇಕಾಗಿತ್ತು. ಆದರೆ, ತಮಿಳುನಾಡಿಗೆ ಕೇವಲ 14 ಟಿಎಂಸಿ ನೀರು ಬಂದಿದೆ. ಮಳೆಯ ಕೊರತೆಯನ್ನು ಪರಿಗಣಿಸಿದರೂ ಕನಿಷ್ಠ ಅರ್ಧದಷ್ಟು ನೀರನ್ನು ಹರಿಸಬೇಕಿತ್ತು ಎಂದು ತಮಿಳುನಾಡು ವಾದಿಸಿತು.
ಇದಕ್ಕೆ ಪ್ರತಿಯಾಗಿ ಕರ್ನಾಟಕ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣದಲ್ಲಿ ಭಾರೀ ಅನಿಶ್ಚಿತತೆ ಇದ್ದು, ಅಗಾಧ ಪ್ರಮಾಣದ ಮಳೆ ಕೊರತೆಯಾಗಿದೆ ಎಂದು ತಿಳಿಸಿತು.
CWMA ಈಗಾಗಲೇ ಎರಡು ಪ್ರತ್ಯೇಕ ಆದೇಶಗಳನ್ನು ನೀಡಿದ್ದು, ಮೊದಲ ಆದೇಶದಂತೆ 3,500 ಕ್ಯೂಸೆಕ್ ಹಾಗೂ ಎರಡನೇ ಆದೇಶದಂತೆ 12,000 ಕ್ಯೂಸೆಕ್ ನೀರು ಹರಿಸಲು ನಿರ್ದೇಶಿಸಲಾಗಿದೆ ಎಂದು ಕರ್ನಾಟಕದ ಪರ ವಕೀಲರು ವಿವರಿಸಿದರು.
ನಾವು 3,500 ಕ್ಯೂಸೆಕ್ಗಿಂತಲೂ ಹೆಚ್ಚಿನ ಪ್ರಮಾಣದ ನೀರನ್ನು ಹರಿಸಿದ್ದೇವೆ. ಕರ್ನಾಟಕ ನೀರು ಹರಿಸಿಲ್ಲ ಎಂಬ ತಮಿಳುನಾಡಿನ ವಾದ ಸತ್ಯಕ್ಕೆ ದೂರವಾಗಿದೆ ಎಂದು ಕರ್ನಾಟಕ ತಿಳಿಸಿತು.
CWMAಯ ಎರಡನೇ ಆದೇಶದ ಅನ್ವಯ ಕೆಆರ್ಎಸ್ ಜಲಾಶಯದಿಂದ ನೀರು ಹರಿಸಲಾಗಿದೆ. ಕೆಆರ್ಎಸ್ನಿಂದ ಬಿಳಿಗುಂಡ್ಲು ತಲುಪಲು ಸುಮಾರು 48 ಗಂಟೆಗಳ ಸಮಯ ಬೇಕಾಗುತ್ತದೆ. ಹೀಗಾಗಿ ನೀರು ಹರಿಸಿದ ತಕ್ಷಣವೇ ಅದರ ಪರಿಣಾಮ ಬಿಳಿಗುಂಡ್ಲುವಿನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕರ್ನಾಟಕದ ಪರ ವಾದಿಸಲಾಯಿತು.
ಉಭಯ ರಾಜ್ಯಗಳ ವಾದ-ಪ್ರತಿವಾದವನ್ನು ಆಲಿಸಿದ ಸುಪ್ರೀಂ ಕೋರ್ಟ್, ನೀರು ಹರಿಯುವಿಕೆಯ ಪ್ರಮಾಣವನ್ನು ಖಚಿತಪಡಿಸಿಕೊಳ್ಳಲು ಸಮಯ ಬೇಕಾಗುತ್ತದೆ ಎಂದು ತಿಳಿಸಿತು.
ಕಾವೇರಿ ನೀರು ಹರಿಸುವ ವಿಚಾರದ ಮುಂದಿನ ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಿದ ನ್ಯಾಯಾಲಯ, ಮುಂದಿನ ವಿಚಾರಣೆಯ ವೇಳೆ ಎರಡೂ ರಾಜ್ಯಗಳು ಅಗತ್ಯ ಅಂಕಿ-ಅಂಶಗಳೊಂದಿಗೆ ಹಾಜರಾಗಬೇಕು ಎಂದು ಸೂಚಿಸಿತು. ಇದೇ ವೇಳೆ CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.

