Home Blog

ಸೆ.17ರಂದು ಮಧುರೈ ಮೀನಾಕ್ಷಿ ದೇವಸ್ಥಾನದ ಮಹಾ ಕುಂಭಾಭಿಷೇಕ; ನವವಧುವಿನಂತೆ ಕಂಗೊಳಿಸಿದ ದೇವಾಲಯ

0

ಮಧುರೈ: ತಮಿಳುನಾಡಿನ ಐತಿಹಾಸಿಕ ಹಾಗೂ ಪ್ರಸಿದ್ಧ ಮಧುರೈ ಅರುಳ್ಮಿಗು ಮೀನಾಕ್ಷಿ ಸುಂದರೇಶ್ವರರ್ ದೇವಸ್ಥಾನದ ಮಹಾ ಕುಂಭಾಭಿಷೇಕ ಮಹೋತ್ಸವ ಸೆಪ್ಟೆಂಬರ್ 17ರಂದು ವೈಭವದಿಂದ ನಡೆಯಲಿದೆ.

ಕುಂಭಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದ ಆವರಣದಲ್ಲಿ ಸಾಂಪ್ರದಾಯಿಕ ಯಾಗಶಾಲೆ ಪೂಜಾ ವಿಧಿವಿಧಾನಗಳಿಗೆ ಚಾಲನೆ ನೀಡಲಾಗಿದೆ. ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ನೂತನವಾಗಿ ಬಣ್ಣ ಬಳಿಯಲಾಗಿದ್ದು, ದೇವಾಲಯದ ಸೌಂದರ್ಯ ಮತ್ತಷ್ಟು ಹೆಚ್ಚಾಗಿದೆ.

ನವವಧುವಿನಂತೆ ಕಂಗೊಳಿಸುತ್ತಿರುವ ಗೋಪುರಗಳು:

ದೇವಾಲಯದ ಪ್ರಸಿದ್ಧ ಪೂರ್ವ, ಪಶ್ಚಿಮ, ಉತ್ತರ ಹಾಗೂ ದಕ್ಷಿಣ ರಾಜಗೋಪುರಗಳಿಗೆ ನೂತನವಾಗಿ ಬಣ್ಣ ಬಳಿಯಲಾಗಿದೆ. ಮೀನಾಕ್ಷಿ ದೇವಿ ಸನ್ನಿಧಿಯ ಗೋಪುರಕ್ಕೂ ಹೊಸ ಬಣ್ಣ ಬಳಿದು ಅಲಂಕರಿಸಲಾಗಿದೆ.

ರಾತ್ರಿಯ ವೇಳೆ ಎಲ್ಲಾ ಗೋಪುರಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಭಕ್ತರು ಹಾಗೂ ಪ್ರವಾಸಿಗರ ಗಮನ ಸೆಳೆಯುತ್ತಿವೆ.

ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಬೃಹತ್ ಕುಂಭಾಭಿಷೇಕ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತ; ಕಾರವಾರ FDA ಪಂಡರಿನಾಥ್ ನಾಯ್ಕ ನಿಧನ!

0

ಕಾರವಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.

ಇದನ್ನು ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ಅವರ ನೆರವಿಗೆ ಧಾವಿಸಿದ್ದಾರೆ. ಬಳಿಕ ತಹಶೀಲ್ದಾರ್ ಅವರ ಜೀಪ್‌ನಲ್ಲಿ ಪಂಡರಿನಾಥ್ ನಾಯ್ಕ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಿಗೆ ಆಘಾತ ಉಂಟುಮಾಡಿದೆ. ಪಂಡರಿನಾಥ್ ನಾಯ್ಕ ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.

ಡಿಜಿಟಲ್ ತಂತ್ರಜ್ಞಾನದಿಂದ ಜನರ ಜೀವನ ಸುಲಭ; ಭಾರತದ ಫಿನ್‌ಟೆಕ್ ಸಾಧನೆ ಬಣ್ಣಿಸಿದ ಪ್ರಧಾನಿ ಮೋದಿ

0

ಮುಂಬೈ: ಸರ್ಕಾರದ ಸುಧಾರಣಾ ಕ್ರಮಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ವೇಗ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮುಂಬೈನಲ್ಲಿ ಮಂಗಳವಾರ ನಡೆದ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಒಂದು ದಶಕದಲ್ಲಿ ಜಾರಿಗೆ ತಂದ ಆರ್ಥಿಕ ಹಾಗೂ ಡಿಜಿಟಲ್ ಸುಧಾರಣೆಗಳಿಂದ ಭಾರತವು ಜಾಗತಿಕ ಫಿನ್‌ಟೆಕ್ ಮತ್ತು ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಪ್ರಮುಖ ಸ್ಥಾನಕ್ಕೇರಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ UPI ಮೈಲಿಗಲ್ಲು:

ಭಾರತದ UPI ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ವಿಶ್ವದ ಡಿಜಿಟಲ್ ವಹಿವಾಟುಗಳಲ್ಲಿ ಭಾರತ ಪ್ರಮುಖ ಪಾಲು ಹೊಂದಿದೆ ಎಂದು ಮೋದಿ ಹೇಳಿದರು.

ಡಿಜಿಟಲ್ ತಂತ್ರಜ್ಞಾನವು ಕೇವಲ ಹಣಕಾಸು ವಹಿವಾಟುಗಳನ್ನು ಸುಲಭಗೊಳಿಸುವುದಕ್ಕೆ ಸೀಮಿತವಾಗಿಲ್ಲ. ಸಾಮಾನ್ಯ ಜನರ ಜೀವನವನ್ನು ಮತ್ತಷ್ಟು ಸುಲಭಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ವಿವರಿಸಿದರು.

ನಿಯಂತ್ರಣ ಸಡಿಲಿಕೆ, ತೆರಿಗೆ ವ್ಯವಸ್ಥೆಯ ಸರಳೀಕರಣ ಹಾಗೂ ಪಾರದರ್ಶಕ ಆಡಳಿತದ ಮೂಲಕ ಭಾರತದಲ್ಲಿ ಉದ್ಯಮ ಸ್ನೇಹಿ ವಾತಾವರಣ ನಿರ್ಮಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಮುಂಬರುವ ದಿನಗಳಲ್ಲಿ ದೇಶದ ತಾಂತ್ರಿಕ ಮೂಲಸೌಕರ್ಯ ಮತ್ತು ಸುಧಾರಣಾ ಕ್ರಮಗಳು ಇನ್ನಷ್ಟು ವೇಗ ಪಡೆದುಕೊಳ್ಳಲಿವೆ ಎಂದು ಅವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಆರ್ಥಿಕ ಅನಿಶ್ಚಿತತೆ ಮುಂದುವರಿದಿದ್ದರೂ ಭಾರತವು ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಿರತೆಯನ್ನು ಕಾಯ್ದುಕೊಂಡಿದೆ ಎಂದು ಮೋದಿ ಹೇಳಿದರು.

ಫಿನ್‌ಟೆಕ್, ಹಸಿರು ಇಂಧನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಜಾಗತಿಕ ಹೂಡಿಕೆಗೆ ಭಾರತ ಉತ್ತಮ ತಾಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜನಧನ್ ಯೋಜನೆ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (DPI) ಮೂಲಕ ಕೋಟ್ಯಂತರ ಜನರನ್ನು ಬ್ಯಾಂಕಿಂಗ್ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗಿದೆ. ಸಾಲ ಹಾಗೂ ವಿವಿಧ ಹಣಕಾಸು ಸೇವೆಗಳನ್ನು ಸಮಾಜದ ತಳಮಟ್ಟದ ಜನರಿಗೂ ತಲುಪಿಸಲು ಇದು ಸಹಕಾರಿಯಾಗಿದೆ ಎಂದು ಪ್ರಧಾನಿ ಹೇಳಿದರು.

‘ವಿಕಸಿತ ಭಾರತ 2047’ ಗುರಿ ಸಾಧಿಸುವಲ್ಲಿ ತಂತ್ರಜ್ಞಾನ ಮತ್ತು ಆರ್ಥಿಕ ನಾವೀನ್ಯತೆಗಳು ಪ್ರಮುಖ ಚಾಲಕ ಶಕ್ತಿಗಳಾಗಲಿವೆ ಎಂದು ನರೇಂದ್ರ ಮೋದಿ ಸ್ಪಷ್ಟಪಡಿಸಿದರು.

ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ತಂತ್ರಜ್ಞಾನದ ಸ್ಪರ್ಶ; 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರ ಖರೀದಿಗೆ ಸಿದ್ಧತೆ

0

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರಮುಖ ರಸ್ತೆಗಳಲ್ಲಿ ಧೂಳು ಮತ್ತು ಕಸದ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ತಂತ್ರಜ್ಞಾನದ ಮೊರೆ ಹೋಗಿವೆ.

ಬೆಂಗಳೂರು ದಕ್ಷಿಣ ಹಾಗೂ ಉತ್ತರ ನಗರ ಪಾಲಿಕೆಗಳ ವ್ಯಾಪ್ತಿಯ ಆರ್ಟಿರಿಯಲ್ ಮತ್ತು ಸಬ್-ಆರ್ಟಿರಿಯಲ್ ರಸ್ತೆಗಳನ್ನು ಸ್ವಚ್ಛಗೊಳಿಸಲು ಅತ್ಯಾಧುನಿಕ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಫೀಲ್ಡ್ ಟ್ರಯಲ್ ಮತ್ತು ತಾಂತ್ರಿಕ ಮೌಲ್ಯಮಾಪನ ನಡೆಯುತ್ತಿದೆ.

ಕ್ಯಾಬಿನೆಟ್ ಅನುಮೋದನೆಯಂತೆ ಒಟ್ಟು 48 ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗುವ ನಿರೀಕ್ಷೆಯಿದೆ.

ಈಗಾಗಲೇ ಔಟರ್ ರಿಂಗ್ ರೋಡ್, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಹಾಗೂ ಮೇಲ್ಸೇತುವೆಗಳಲ್ಲಿ ಯಂತ್ರಗಳ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತಾಂತ್ರಿಕ ಮೌಲ್ಯಮಾಪನ ತಂಡ ಸ್ಥಳ ಪರಿಶೀಲನೆ ನಡೆಸಿದೆ.

5 ದಿನಗಳ ಕಾಲ ತಾಂತ್ರಿಕ ಪರೀಕ್ಷೆ:

ಪ್ರಾಯೋಗಿಕ ಪರೀಕ್ಷೆಯನ್ನು ಒಟ್ಟು 5 ದಿನಗಳ ಕಾಲ ನಡೆಸಲಾಗುತ್ತಿದ್ದು, ಯಂತ್ರಗಳ ಸಾಮರ್ಥ್ಯ, ಕಾರ್ಯಕ್ಷಮತೆ ಹಾಗೂ ರಸ್ತೆ ಸ್ವಚ್ಛತೆಯಲ್ಲಿ ಅವುಗಳ ಪರಿಣಾಮಕಾರಿತ್ವವನ್ನು ಪರಿಶೀಲಿಸಲಾಗುತ್ತಿದೆ.

ಈ ಯಂತ್ರಗಳ ಬಳಕೆಯಿಂದ ಪ್ರಮುಖ ರಸ್ತೆಗಳಲ್ಲಿ ಧೂಳು, ಕಸ ಹಾಗೂ ರಸ್ತೆ ಬದಿಯ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ತೆರವುಗೊಳಿಸಲು ಸಾಧ್ಯವಾಗಲಿದೆ. ಯೋಜನೆ ಸಂಪೂರ್ಣವಾಗಿ ಜಾರಿಗೆ ಬಂದರೆ ದಕ್ಷಿಣ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಧೂಳಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆಯಿದೆ.

ಸಾರ್ವಜನಿಕ ಆರೋಗ್ಯಕ್ಕೂ ಅನುಕೂಲ:

ರಸ್ತೆಗಳಲ್ಲಿ ಧೂಳಿನ ಪ್ರಮಾಣ ಕಡಿಮೆಯಾಗುವುದರಿಂದ ವಾಯು ಗುಣಮಟ್ಟ ಸುಧಾರಿಸುವುದರ ಜತೆಗೆ ಸಾರ್ವಜನಿಕ ಆರೋಗ್ಯಕ್ಕೂ ಅನುಕೂಲವಾಗಲಿದೆ. ಸ್ವಚ್ಛ ರಸ್ತೆಗಳು ವಾಹನ ಸಂಚಾರಕ್ಕೂ ಮತ್ತಷ್ಟು ಅನುಕೂಲ ಕಲ್ಪಿಸಲಿವೆ.

ಬೆಳೆಯುತ್ತಿರುವ ಬೆಂಗಳೂರಿನ ರಸ್ತೆ ಸ್ವಚ್ಛತೆಗೆ ಆಧುನಿಕ ತಂತ್ರಜ್ಞಾನ ಅಳವಡಿಸುವ ಅಗತ್ಯವಿದ್ದು, ಪ್ರಸ್ತುತ ನಡೆಯುತ್ತಿರುವ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳ ಪರೀಕ್ಷೆ ಯಶಸ್ವಿಯಾದರೆ ನಗರದ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಇದು ಮಹತ್ವದ ಹೆಜ್ಜೆಯಾಗಲಿದೆ.

ಗದಗ ಜಿಲ್ಲೆಯಲ್ಲಿ ಡಿಜೆ ಸೌಂಡ್‌ಗೆ ಬ್ರೇಕ್: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕ ಸುವ್ಯವಸ್ಥೆ, ಶಾಂತಿ ಹಾಗೂ ಜನಸಾಮಾನ್ಯರ ನೆಮ್ಮದಿಯ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆ, ಬಾಸ್ ಬೂಸ್ಟರ್, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಮುಂದಿನ ಆದೇಶದವರೆಗೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು) ನಿಯಮಗಳು, 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS), 2023ರ ಕಲಂ 163ರಡಿ ಜಿಲ್ಲಾಧಿಕಾರಿಗಳಿಗೆ ಪ್ರದತ್ತವಾಗಿರುವ ಅಧಿಕಾರ ಬಳಸಿ ಈ ಆದೇಶ ಜಾರಿಗೊಳಿಸಲಾಗಿದೆ.

ವಸತಿ ಪ್ರದೇಶಗಳು ಹಾಗೂ ಆಸ್ಪತ್ರೆ, ಶಾಲೆ, ನ್ಯಾಯಾಲಯ ಮತ್ತು ಧಾರ್ಮಿಕ ಸ್ಥಳಗಳ 100 ಮೀಟರ್ ವ್ಯಾಪ್ತಿಯ ಸೈಲೆಂಟ್ ಝೋನ್‌ಗಳಲ್ಲಿ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ. ಇಳಿಜಾರು ರಸ್ತೆಗಳು, ಸಂಚಾರ ದಟ್ಟಣೆ ಪ್ರದೇಶಗಳು ಹಾಗೂ ಇತರ ಸೂಕ್ಷ್ಮ ಪ್ರದೇಶಗಳಲ್ಲೂ ಶಬ್ದ ನಿಯಂತ್ರಣ ಕಡ್ಡಾಯವಾಗಿದೆ.

ಅಲ್ಲದೆ, ಜಿಲ್ಲೆಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಅಥವಾ ಮೆರವಣಿಗೆಯನ್ನು ತಕ್ಷಣ ಸ್ಥಗಿತಗೊಳಿಸಬಹುದು. ಡಿಜೆ ಹಾಗೂ ಶಬ್ದವರ್ಧಕ ಉಪಕರಣಗಳನ್ನು ಜಪ್ತಿ ಮಾಡುವುದು, ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು ಹಾಗೂ ಗುಂಪನ್ನು ಚದುರಿಸುವ ಕ್ರಮ ಕೈಗೊಳ್ಳಬಹುದು.

ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುವುದರ ಜೊತೆಗೆ ನೀಡಿರುವ ಅನುಮತಿಗಳನ್ನು ರದ್ದುಪಡಿಸುವ ಅಧಿಕಾರವೂ ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯಲ್ಲಿ ಹೆಚ್ಚಿನ ಶಬ್ದ ವ್ಯವಸ್ಥೆ ಬಳಸಬೇಕಾದರೆ ಪೂರ್ವ ಲಿಖಿತ ಅನುಮತಿ ಪಡೆಯಬೇಕು. ನಿಗದಿತ ಶಬ್ದಮಿತಿಯೊಳಗಿನ ಸಾಧನಗಳನ್ನಷ್ಟೇ ಬಳಸಬೇಕು. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸುವ ಕುರಿತು ಆಯೋಜಕರು ಲಿಖಿತ ಮುಚ್ಚಳಿಕೆ ನೀಡಬೇಕು.

ಆದೇಶ ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೋಜಕರೇ ಸಂಪೂರ್ಣ ಹೊಣೆಗಾರರಾಗಿರುತ್ತಾರೆ. ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಜನರ ನೆಮ್ಮದಿಗೆ ಧಕ್ಕೆ ಉಂಟಾಗದಂತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಗಣೇಶೋತ್ಸವಕ್ಕೆ ಪಿಓಪಿ, ಡಿಜೆ ನಿಷೇಧ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪಿಓಪಿ ಗಣಪತಿ ವಿಗ್ರಹ ಹಾಗೂ ಡಿಜೆ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಹಬ್ಬವನ್ನು ಆಚರಿಸಬೇಕು. ನಿಯಮ ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ಎಚ್ಚರಿಸಿದರು.

ಮಂಗಳವಾರ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪಿಸುವ ಮಂಡಳಿಗಳು ಸ್ಥಳೀಯ ಸಂಸ್ಥೆಯಿಂದ ನಿರಾಪೇಕ್ಷಣಾ ಪತ್ರ (ಎನ್‌ಒಸಿ) ಪಡೆದು, ಪೊಲೀಸ್, ಹೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಅಗತ್ಯ ಪರವಾನಗಿ ಪಡೆಯುವುದು ಕಡ್ಡಾಯ. ಏಕಗವಾಕ್ಷಿ ವ್ಯವಸ್ಥೆಯಡಿ ಪರಿಶೀಲನೆ ನಡೆಸಿ ಪರವಾನಗಿ ನೀಡಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಅನುಮತಿ ಪಡೆದ ಪಟಾಕಿ ವ್ಯಾಪಾರಿಗಳು ಮಾತ್ರ ಪಟ್ಟಣದ ಹೊರವಲಯದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಪಟಾಕಿ ಮಾರಾಟ ಮಾಡಬೇಕು. ಅನಧಿಕೃತವಾಗಿ ಮಾರಾಟ ಮಾಡಿದರೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಪಿಎಸ್‌ಐ ಈರಪ್ಪ ರಿತ್ತಿ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪಿಸುವ ಸಂಘಟಕರು ಏಕಗವಾಕ್ಷಿ ವ್ಯವಸ್ಥೆಯಡಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಡಿಜೆ ಹಾಗೂ ಹೆಚ್ಚಿನ ಡೆಸಿಬೆಲ್‌ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ಎಲ್ಲರೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂಗಾರು ಮಳೆ ಕೊರತೆ ಎಫೆಕ್ಟ್; ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಭತ್ತದ ಬಿತ್ತನೆ ಇಳಿಕೆ!

0

ಬೆಂಗಳೂರು: ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆಯಾಗದ ಪರಿಣಾಮ ಭತ್ತದ ಬಿತ್ತನೆ ಪ್ರಮಾಣ ಗಣನೀಯವಾಗಿ ಕುಸಿದಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕರ್ನಾಟಕದಲ್ಲಿ 4.28 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದೆ. ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲೇ ಭತ್ತದ ಬಿತ್ತನೆ ಪ್ರಮಾಣದಲ್ಲಿ ಅತಿ ಹೆಚ್ಚು ಇಳಿಕೆ ಕಂಡುಬಂದಿದೆ.

ದೇಶಾದ್ಯಂತವೂ ಭತ್ತದ ಬಿತ್ತನೆ ಪ್ರಮಾಣ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 438.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದ್ದರೆ, ಈ ವರ್ಷ ಅದು 421.82 ಲಕ್ಷ ಹೆಕ್ಟೇರ್‌ಗೆ ಇಳಿಕೆಯಾಗಿದೆ. ಅಂದರೆ ದೇಶದಲ್ಲಿ ಒಟ್ಟಾರೆ 16.37 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬಿತ್ತನೆ ಕಡಿಮೆಯಾಗಿದ್ದು, ಶೇ.3.71ರಷ್ಟು ಕುಸಿತ ದಾಖಲಾಗಿದೆ.

ಪ್ರಮುಖ ಭತ್ತ ಬೆಳೆಯುವ ಜಿಲ್ಲೆಗಳಲ್ಲೂ ಹಿನ್ನಡೆ:

ಕರ್ನಾಟಕದಲ್ಲಿ ಭತ್ತ ಬೆಳೆಯುವ ಪ್ರಮುಖ ಜಿಲ್ಲೆಗಳಾದ ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಮಂದಗತಿಗೆ ತಲುಪಿವೆ.

ವಿಶೇಷವಾಗಿ ಜೂನ್ ಮತ್ತು ಜುಲೈ ತಿಂಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಭತ್ತದ ಬಿತ್ತನೆ ಮೇಲೆ ನೇರ ಪರಿಣಾಮ ಬೀರಿದೆ. ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ಬಿತ್ತನೆಯನ್ನು ಮುಂದೂಡುವ ಅಥವಾ ಪರ್ಯಾಯ ಬೆಳೆಗಳತ್ತ ಮುಖ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕರ್ನಾಟಕದ ಬಳಿಕ ತೆಲಂಗಾಣದಲ್ಲಿ 3.61 ಲಕ್ಷ ಹೆಕ್ಟೇರ್, ಆಂಧ್ರಪ್ರದೇಶದಲ್ಲಿ 1.91 ಲಕ್ಷ ಹೆಕ್ಟೇರ್, ಉತ್ತರ ಪ್ರದೇಶದಲ್ಲಿ 1.84 ಲಕ್ಷ ಹೆಕ್ಟೇರ್ ಹಾಗೂ ಮಧ್ಯಪ್ರದೇಶದಲ್ಲಿ 1.75 ಲಕ್ಷ ಹೆಕ್ಟೇರ್ ಭತ್ತದ ಬಿತ್ತನೆ ಇಳಿಕೆಯಾಗಿದೆ.

ದ್ವಿದಳ ಧಾನ್ಯ ಬಿತ್ತನೆಯಲ್ಲೂ ಕರ್ನಾಟಕ ಹಿನ್ನಡೆ:

ಭತ್ತದ ಜತೆಗೆ ದ್ವಿದಳ ಧಾನ್ಯಗಳ ಬಿತ್ತನೆಯಲ್ಲೂ ಕರ್ನಾಟಕ ಹಿನ್ನಡೆ ಕಂಡಿದೆ. ದೇಶದಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಾಗಿದೆ. ಕಳೆದ ವರ್ಷ 115.30 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬಿತ್ತನೆಯಾಗಿದ್ದರೆ, ಈ ವರ್ಷ ಅದು 117.13 ಲಕ್ಷ ಹೆಕ್ಟೇರ್‌ಗೆ ಏರಿಕೆಯಾಗಿದೆ. ಒಟ್ಟಾರೆ 1.84 ಲಕ್ಷ ಹೆಕ್ಟೇರ್‌ ಹೆಚ್ಚಳ ದಾಖಲಾಗಿದೆ.

ಆದರೆ ಕರ್ನಾಟಕದಲ್ಲಿ ಮಾತ್ರ 2.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ಬಿತ್ತನೆ ಕಡಿಮೆಯಾಗಿದೆ. ಮಹಾರಾಷ್ಟ್ರದಲ್ಲಿ 2.60 ಲಕ್ಷ ಹೆಕ್ಟೇರ್ ಹಾಗೂ ಒಡಿಶಾದಲ್ಲಿ 0.61 ಲಕ್ಷ ಹೆಕ್ಟೇರ್ ಇಳಿಕೆ ಕಂಡುಬಂದಿದೆ.

ಇದಕ್ಕೆ ವಿರುದ್ಧವಾಗಿ ಉತ್ತರ ಪ್ರದೇಶದಲ್ಲಿ 3.97 ಲಕ್ಷ ಹೆಕ್ಟೇರ್, ಜಾರ್ಖಂಡ್‌ನಲ್ಲಿ 0.98 ಲಕ್ಷ, ತೆಲಂಗಾಣದಲ್ಲಿ 0.90 ಲಕ್ಷ, ರಾಜಸ್ಥಾನದಲ್ಲಿ 0.57 ಲಕ್ಷ ಹಾಗೂ ಮಧ್ಯಪ್ರದೇಶದಲ್ಲಿ 0.38 ಲಕ್ಷ ಹೆಕ್ಟೇರ್ ದ್ವಿದಳ ಧಾನ್ಯಗಳ ಬಿತ್ತನೆ ಹೆಚ್ಚಾಗಿದೆ.

ರೈತರಲ್ಲಿ ಹೆಚ್ಚಿದ ಆತಂಕ:

ಒಟ್ಟಾರೆ, ಮುಂಗಾರು ಮಳೆಯ ಕೊರತೆ ಕರ್ನಾಟಕದ ಕೃಷಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ. ಪ್ರಮುಖ ಆಹಾರ ಬೆಳೆಗಳಾದ ಭತ್ತ ಮತ್ತು ದ್ವಿದಳ ಧಾನ್ಯಗಳ ಬಿತ್ತನೆ ಪ್ರಮಾಣ ಕುಸಿದಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮಳೆ ಹಾಗೂ ನೀರಿನ ಲಭ್ಯತೆ ಹೇಗಿರಲಿದೆ ಎಂಬುದರ ಮೇಲೆ ಕೃಷಿ ಚಟುವಟಿಕೆಗಳ ಪ್ರಗತಿ ಅವಲಂಬಿತವಾಗಿದೆ.

ಗಜಾನನೋತ್ಸವಕ್ಕೆ ಡಿಜೆ ಸಂಪೂರ್ಣ ನಿಷೇಧ: ಎಸ್‌ಪಿ ಮಿಥುನ್

0

ವಿಜಯಸಾಕ್ಷಿ ಸುದ್ದಿ, ಗದಗ: ಈ ಬಾರಿ ಗಜಾನನೋತ್ಸವದ ಮೆರವಣಿಗೆಯಲ್ಲಿ ಡಿಜೆ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಣ್ಣ ಪ್ರಮಾಣದ ಸ್ಪೀಕರ್ ಬಳಸಲು ಅವಕಾಶವಿದ್ದು, ದೊಡ್ಡ ಗಾತ್ರದ ಡಿಜೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್. ಸ್ಪಷ್ಟಪಡಿಸಿದರು.

ಗಜಾನನೋತ್ಸವದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಹಾಲ್‌ನಲ್ಲಿ ಮಂಗಳವಾರ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ 180ಕ್ಕೂ ಹೆಚ್ಚು ಗಜಾನನ ಮಂಡಳಿಗಳ ಪದಾಧಿಕಾರಿಗಳು, ಹಿಂದೂ–ಮುಸ್ಲಿಂ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಡಿಜೆ ಬಳಕೆ ನಿಷೇಧದ ವಿಚಾರಕ್ಕೆ ಕೆಲವು ಹಿಂದೂ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಡಿಜೆ ನಿಷೇಧಿಸುವುದಾದರೆ ದೇಶಾದ್ಯಂತ ಎಲ್ಲ ಧಾರ್ಮಿಕ ಕಾರ್ಯಕ್ರಮಗಳಲ್ಲೂ ಏಕರೂಪವಾಗಿ ನಿಷೇಧ ಜಾರಿಗೊಳಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.

ಪ್ಲೆಕ್ಸ್‌ಗೂ ಅನುಮತಿ ಕಡ್ಡಾಯ

ಗಜಾನನೋತ್ಸವದ ಅಂಗವಾಗಿ ಪ್ಲೆಕ್ಸ್ ಅಳವಡಿಸುವವರು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಪಡೆಯಬೇಕು. ಎಲ್ಲೆಂದರಲ್ಲಿ ಪ್ಲೆಕ್ಸ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಕಾರ್ಯಕ್ರಮ ಮುಗಿದ ಬಳಿಕ ಪ್ಲೆಕ್ಸ್‌ಗಳನ್ನು ತೆರವುಗೊಳಿಸುವ ಜವಾಬ್ದಾರಿ ಆಯೋಜಕರದ್ದೇ ಎಂದು ಎಸ್ಪಿ ಸೂಚಿಸಿದರು.

ಗಜಾನನೋತ್ಸವ ಶಾಂತಿಯುತವಾಗಿ ನಡೆಯಲು ಎಲ್ಲ ಮಂಡಳಿಗಳು ಹಾಗೂ ಸಮುದಾಯಗಳ ಮುಖಂಡರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ದುರ್ಗೇಶ್, ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಸೇರಿದಂತೆ ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, 180ಕ್ಕೂ ಹೆಚ್ಚು ಗಜಾನನ ಮಂಡಳಿಗಳ ಸದಸ್ಯರು ಹಾಗೂ ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ನ್ಯಾಯಬೆಲೆ ಅಂಗಡಿಗಳಲ್ಲಿ ಮಾಹಿತಿ ಫಲಕ ಕಡ್ಡಾಯ: ಎಸ್.ಆರ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ದರ, ವಿತರಿಸಲಾಗುವ ಸಾಮಗ್ರಿಗಳು ಹಾಗೂ ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದ ಅಗತ್ಯ ಮಾಹಿತಿಯುಳ್ಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸುವ ಅಂಗಡಿಗಳಲ್ಲಿ ಮುಖ್ಯಮಂತ್ರಿ ಅವರ ಭಾವಚಿತ್ರ ಸೇರಿದಂತೆ ಯೋಜನೆಗೆ ಸಂಬಂಧಿಸಿದ ಮಾಹಿತಿ ಹಾಗೂ ದರಪಟ್ಟಿ ಒಳಗೊಂಡ ಫಲಕ ಅಳವಡಿಸಬೇಕು. ಯಾವುದೇ ಅಂಗಡಿಯಲ್ಲಿ ಫಲಕ ಅಥವಾ ದರಪಟ್ಟಿ ಇಲ್ಲದಿದ್ದರೆ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಒಂದು ವಾರದೊಳಗೆ ಎಲ್ಲ ಅಂಗಡಿಗಳಲ್ಲೂ ಅಗತ್ಯ ಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುವಾಗ ಲೈನ್‌ಮನ್‌ಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ವಿದ್ಯುತ್ ಕಂಬ, ಲೈನ್ ದುರಸ್ತಿ ಸೇರಿದಂತೆ ಅಪಾಯಕಾರಿ ಕಾಮಗಾರಿಗಳಿಗೆ ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಬಳಸಿಕೊಳ್ಳಬಾರದು. ತರಬೇತಿ ಪಡೆದ ಲೈನ್‌ಮನ್‌ಗಳೇ ಕಾಮಗಾರಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಹಿಂದೆ ಕೆಇಬಿ ಕಾಮಗಾರಿ ವೇಳೆ ಲೈನ್‌ಮನ್‌ಗಳ ನಿರ್ಲಕ್ಷ್ಯದಿಂದ ಮೂವರು ಸಾರ್ವಜನಿಕರು ಮೃತಪಟ್ಟಿರುವ ಘಟನೆಗಳು ನಡೆದಿವೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಕಾಮಗಾರಿ ನಡೆಯುವ ಸ್ಥಳದಲ್ಲಿ ಸಂಬಂಧಿಸಿದ ಲೈನ್‌ಮನ್ ಹಾಜರಿದ್ದು ಸಂಪೂರ್ಣ ಜವಾಬ್ದಾರಿ ವಹಿಸಬೇಕು ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ನಗರ ವಾರ್ಡ್‌ಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಆರು ಸದಸ್ಯರ ಸಮಿತಿ ರಚಿಸಿ ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಿದರು. ಯುವನಿಧಿ ಫಲಾನುಭವಿಗಳಿಗೆ ಮೂರು ತಿಂಗಳ ತರಬೇತಿ ನೀಡಲು ವೇಳಾಪಟ್ಟಿ ಸಿದ್ಧಪಡಿಸುವಂತೆ ತಿಳಿಸಿದರು. ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿ, ಬಸ್‌ಗಳನ್ನು ಮಾಸಿಕ ಡೀಪ್ ಕ್ಲೀನ್ ಮಾಡುವುದರ ಜೊತೆಗೆ ಸುತ್ತಮುತ್ತ ತಂಬಾಕು ಮುಕ್ತ ಪ್ರದೇಶವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.

ಸಭೆಯಲ್ಲಿ ಪ್ರಾಧಿಕಾರದ ಉಪಾಧ್ಯಕ್ಷರಾದ ಸುಧೀರ ಎಸ್. ಬೋಳಾರ, ಮುರಗಯ್ಯಾ ವಿರಕ್ತಮಠ, ರತ್ನಾ ತೇಗೂರಮಠ, ರೇಹನ್ ರಝಾ ಐನಾಪೂರಿ, ಶಾಂತಪ್ಪ ಎಸ್. ಅಕ್ಕಿ, ಸದಸ್ಯರಾದ ಅರವಿಂದ ಏಗನಗೌಡರ, ಬಸಪ್ಪ ಮಹಾಬಲೇಶ್ವರ ಬಾವಕಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿದ್ಯುತ್ ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರನ್ನು ಬಳಸಿಕೊಳ್ಳುವುದರಿಂದ ಅವರ ಜೀವಕ್ಕೆ ಅಪಾಯ ಉಂಟಾಗಬಹುದು. ಪ್ರತಿಯೊಂದು ಕಾಮಗಾರಿಯನ್ನೂ ತರಬೇತಿ ಪಡೆದ ಲೈನ್‌ಮನ್‌ಗಳೇ ನಿರ್ವಹಿಸುವಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.

— ಎಸ್.ಆರ್. ಪಾಟೀಲ, ಅಧ್ಯಕ್ಷ, ಜಿಲ್ಲಾ ಅನುಷ್ಠಾನ ಪ್ರಾಧಿಕಾರ

ಪಂಚ ಗ್ಯಾರಂಟಿಗಳ ಪ್ರಗತಿ

ಯುವನಿಧಿ: 13,215 ಅರ್ಜಿಗಳು ಸ್ವೀಕೃತಿ; 11,886 ಫಲಾನುಭವಿಗಳಿಗೆ ₹36.66 ಕೋಟಿ ಡಿಬಿಟಿ ಮೂಲಕ ಜಮೆ

ಶಕ್ತಿ: 43.78 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ; ₹966.57 ಕೋಟಿ ಸರ್ಕಾರದಿಂದ ಬಿಡುಗಡೆ

ಗೃಹಜ್ಯೋತಿ: 5,73,052 ಫಲಾನುಭವಿಗಳು; ₹825.27 ಕೋಟಿ ಬಿಡುಗಡೆ

ಗೃಹಲಕ್ಷ್ಮಿ: 3,77,301 ಫಲಾನುಭವಿಗಳಿಗೆ ₹2,345.74 ಕೋಟಿ ಬಿಡುಗಡೆ

ಅನ್ನಭಾಗ್ಯ: 3,75,996 ಫಲಾನುಭವಿಗಳು

18 ವರ್ಷ ತುಂಬಿದ ಯುವಕರೇ, ಮತದಾರರ ಪಟ್ಟಿಗೆ ಬನ್ನಿ: ಮುಕುಲ್ ಜೈನ್

0

ವಿಜಯಸಾಕ್ಷಿ ಸುದ್ದಿ, ಗದಗ: 18 ವರ್ಷ ಪೂರ್ಣಗೊಂಡಿರುವ ಹಾಗೂ ಶೀಘ್ರದಲ್ಲೇ 18 ವರ್ಷ ಪೂರೈಸಲಿರುವ ಎಲ್ಲ ಅರ್ಹ ಯುವಕರನ್ನು ಗುರುತಿಸಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಆದ್ಯತೆ ನೀಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR)-2026 ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವುದು ಹಾಗೂ ಅರ್ಹ ನಾಗರಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಪ್ರೇರೇಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸೆ.19 ಹಾಗೂ 20ರಂದು ‘ಯಾವುದೇ ಅರ್ಹ ಮತದಾರ ಮತದಾನದಿಂದ ಹೊರಗುಳಿಯಬಾರದು’ ಎಂಬ ಧ್ಯೇಯವಾಕ್ಯದೊಂದಿಗೆ ವಿಶೇಷ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುವುದು. ಈ ವೇಳೆ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದ ಅರ್ಹ ನಾಗರಿಕರನ್ನು ಗುರುತಿಸಿ, ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಪದವಿ, ಐಟಿಐ, ಪಾಲಿಟೆಕ್ನಿಕ್ ಹಾಗೂ ವಿಶ್ವವಿದ್ಯಾಲಯಗಳ ಪ್ರವೇಶ ನೋಂದಣಿ ಆಧರಿಸಿ 18 ವರ್ಷ ಪೂರ್ಣಗೊಂಡ ಹಾಗೂ ಶೀಘ್ರದಲ್ಲೇ 18 ವರ್ಷ ಪೂರೈಸಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಬೇಕು. ಹೆಸರು, ವಯಸ್ಸು, ಜನ್ಮ ದಿನಾಂಕ ಹಾಗೂ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಅರ್ಹರನ್ನು ಗುರುತಿಸುವಂತೆ ಸೂಚಿಸಿದರು.

ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಕ್ಲಬ್‌ಗಳ (ELC) ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳು ನೋಂದಣಿ ಪ್ರಕ್ರಿಯೆ, ಅಗತ್ಯ ದಾಖಲೆಗಳು, ಅರ್ಹತೆ ಮತ್ತು ಮತದಾನದ ಹಕ್ಕಿನ ಕುರಿತು ವಿದ್ಯಾರ್ಥಿಗಳಿಗೆ ನಿರಂತರ ಜಾಗೃತಿ ಮೂಡಿಸಬೇಕು. ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಪಡೆದು ಚುನಾವಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದರು.

ಎನ್‌ಎಸ್‌ಎಸ್, ಎನ್‌ಸಿಸಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಯುವಕರ ಸಹಯೋಗದಲ್ಲಿ ಸೈಕಲ್, ಬೈಕ್ ರ‍್ಯಾಲಿ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್‌ನ ಡಿಜಿಟಲ್ ಹಾಗೂ ಭೌತಿಕ ಹೋಲ್ಡಿಂಗ್‌ಗಳ ಮೂಲಕವೂ ಮತದಾರರ ನೋಂದಣಿ ಮತ್ತು ಮತದಾನದ ಮಹತ್ವದ ಸಂದೇಶ ತಲುಪಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಅರ್ಹ ಪ್ರತಿಯೊಬ್ಬ ಯುವ ಮತದಾರನ ಹೆಸರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಅಭಿಯಾನದ ಪ್ರಮುಖ ಉದ್ದೇಶ. ಯುವಜನರು ಪ್ರಜಾಪ್ರಭುತ್ವದ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು.

— ಮುಕುಲ್ ಜೈನ್, ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ