Home Blog

ಕಾವೇರಿ ಮತ್ತು ಮೇಕೆದಾಟು ವಿಚಾರ: ತಮಿಳುನಾಡು ಸಿಎಂ ವಿಜಯ್ʼಗೆ ಬಿ.ವೈ. ವಿಜಯೇಂದ್ರ ಪತ್ರ

ಬೆಂಗಳೂರು: ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರದಲ್ಲಿ ಸಹಕಾರ ನೀಡುವಂತೆ ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಶತಮಾನಗಳಿಂದಲೂ ಇತಿಹಾಸ, ಸಂಸ್ಕೃತಿ, ವಾಣಿಜ್ಯ ಹಾಗೂ ಜನರ ನಡುವಿನ ಆತ್ಮೀಯ ಸಂಬಂಧಗಳ ಮೂಲಕ ಬೆಸೆದುಕೊಂಡಿವೆ ಎಂದು ಪತ್ರದಲ್ಲಿ ವಿಜಯೇಂದ್ರ ಉಲ್ಲೇಖಿಸಿದ್ದಾರೆ.

ಎರಡೂ ರಾಜ್ಯಗಳು ಪರಸ್ಪರ ಗೌರವ ಮತ್ತು ಸದ್ಭಾವನೆಯ ಆಧಾರದ ಮೇಲೆ ಸಹೋದರ ರಾಜ್ಯಗಳಂತೆ ನಡೆದುಕೊಂಡಿವೆ. ಕೋಟ್ಯಂತರ ತಮಿಳು ಜನರು ಕರ್ನಾಟಕವನ್ನು, ಅದರಲ್ಲೂ ವಿಶೇಷವಾಗಿ ಬೆಂಗಳೂರನ್ನು ತಮ್ಮ ನೆಲೆಯನ್ನಾಗಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಅದೇ ರೀತಿ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಅಲ್ಲಿನ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನೆರೆಯ ರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವುಗಳನ್ನು ಯಾವ ರೀತಿಯಲ್ಲಿ ಬಗೆಹರಿಸುತ್ತೇವೆ ಎಂಬುದು ಮುಖ್ಯ ಎಂದು ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ತಿರುಳ್ಳುವರ್ ಪ್ರತಿಮೆ ವಿಚಾರವನ್ನು ಉಲ್ಲೇಖಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ರಾಜತಾಂತ್ರಿಕ ನಡೆ ಹಾಗೂ ಸಹಕಾರದ ಮೂಲಕ ಆ ಸಮಸ್ಯೆ ಬಗೆಹರಿದಿತ್ತು ಎಂದು ಸ್ಮರಿಸಿದ್ದಾರೆ.

ಇದೇ ಮನೋಭಾವದಿಂದ ಕಾವೇರಿ ನೀರಿನ ವಿಚಾರವನ್ನು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಲು ಬೆಂಗಳೂರಿಗೆ ಭೇಟಿ ನೀಡುತ್ತಿರುವ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು, ಕರ್ನಾಟಕದ ರೈತರು ಹಾಗೂ ನಾಗರಿಕರ ಹಿತದೃಷ್ಟಿಯಿಂದ ವಿಚಾರವನ್ನು ಪರಿಗಣಿಸಬೇಕು ಎಂದು ವಿಜಯೇಂದ್ರ ಮನವಿ ಮಾಡಿದ್ದಾರೆ.

ಕಾವೇರಿ ನದಿ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಹಲವು ನಗರಗಳ ಕೋಟ್ಯಂತರ ಜನರ ಜೀವನಾಡಿಯಾಗಿದೆ. ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗರು ಮತ್ತು ತಮಿಳು ಜನರು ಇಬ್ಬರೂ ಕುಡಿಯುವ ನೀರಿಗಾಗಿ ಕಾವೇರಿಯನ್ನೇ ಅವಲಂಬಿಸಿದ್ದಾರೆ. ಅನಿಶ್ಚಿತ ಮುಂಗಾರು ಪರಿಸ್ಥಿತಿಯಲ್ಲಿ ರೈತರು ಹಾಗೂ ಜನರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮೇಕೆದಾಟು ಯೋಜನೆಯನ್ನು ಸಹಕಾರದ ದೃಷ್ಟಿಯಿಂದ ನೋಡುವಂತೆ ವಿಜಯೇಂದ್ರ ಮನವಿ ಮಾಡಿದ್ದಾರೆ. ತಮಿಳುನಾಡಿನ ನ್ಯಾಯಸಮ್ಮತ ನೀರಿನ ಹಕ್ಕಿಗೆ ಯಾವುದೇ ಧಕ್ಕೆಯಾಗದಂತೆ ಈ ಯೋಜನೆ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಹಿತಾಸಕ್ತಿಗಳನ್ನು ರಕ್ಷಿಸುವುದರ ಜೊತೆಗೆ ತಮಿಳುನಾಡಿನ ಹಿತವನ್ನೂ ಗೌರವಿಸುವ ರಾಜತಾಂತ್ರಿಕ ನಿಲುವು ಎರಡೂ ರಾಜ್ಯಗಳ ನಡುವಿನ ಐತಿಹಾಸಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲಿದೆ. ಕಾವೇರಿ ಜನರನ್ನು ವಿಭಜಿಸುವ ಬದಲು ಒಗ್ಗೂಡಿಸುವ ಸೇತುವೆಯಾಗಲಿ ಎಂದು ವಿಜಯೇಂದ್ರ ಪತ್ರದ ಮೂಲಕ ಆಶಯ ವ್ಯಕ್ತಪಡಿಸಿದ್ದಾರೆ.

‘ಶಬರಿ’ ಚಿತ್ರದ ‘ತಂದಾನಿ ತನನೋ’ ವಿಡಿಯೊ ಸಾಂಗ್ ಬಿಡುಗಡೆ! ಸಿನಿಮಾ ತಂಡಕ್ಕೆ ಶುಭ ಕೋರಿದ ಗಣ್ಯರು

ಒರಟ ಶ್ರೀ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಶಬರಿ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದ ಬೆನ್ನಲ್ಲೇ, ಇದೀಗ ಚಿತ್ರದ ‘ತಂದಾನಿ ತನನೋ’ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ನಂತರ ಪ್ರೇಕ್ಷಕರಲ್ಲಿ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಚಿತ್ರದ ವಿಡಿಯೊ ಸಾಂಗ್ ಅನ್ನು ನಿರ್ದೇಶಕ ಓಂ ಪ್ರಕಾಶ್ ರಾವ್, ರಘು ರಾಮ್, ಬಾಲಾಜಿ ವೀರಾಸ್ವಾಮಿ ಹಾಗೂ ಉದ್ಯಮಿ ವಿ. ಬಾಬು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಓಂ ಪ್ರಕಾಶ್ ರಾವ್ ಮತ್ತು ಬಾಲಾಜಿ ವೀರಾಸ್ವಾಮಿ, ‘ತಂದಾನಿ ತನನೋ’ ಹಾಡು ಅತ್ಯಂತ ಮನಮೋಹಕವಾಗಿ ಮೂಡಿಬಂದಿದ್ದು, ಸಂಗೀತ ನಿರ್ದೇಶಕ ಬಿ.ಆರ್. ಹೇಮಂತ್ ಕುಮಾರ್ ಅವರ ಸಂಗೀತ ಮನಸೂರೆಗೊಳ್ಳುವಂತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ, ಸರೆಗಮಪ ಖ್ಯಾತಿಯ ಅಶ್ವಿನ್ ಶರ್ಮಾ ಅವರ ಗಾಯನ ಹಾಡಿನ ಮೆರುಗು ಹೆಚ್ಚಿಸಿದ್ದು, ನಟ ಸಮರ್ಥ್ ಮತ್ತು ಧನ್ವಿ ತಮ್ಮ ಪಾತ್ರಗಳಲ್ಲಿ ಹೊಸಬರೆನ್ನಿಸದಷ್ಟು ಸಹಜ ಅಭಿನಯ ನೀಡಿದ್ದಾರೆ ಎಂದು ಪ್ರಶಂಸಿಸಿದರು.

ಇದೇ ವೇಳೆ ಮಾತನಾಡಿದ ರಘು ರಾಮ್, ಹೊಸ ಪ್ರತಿಭೆಗಳ ಈ ಪ್ರಯತ್ನ ಶ್ಲಾಘನೀಯವಾಗಿದ್ದು, ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಚಿತ್ರದ ನಿರ್ದೇಶಕ ಒರಟ ಶ್ರೀ ಅವರೇ ಈ ಹಾಡಿನ ಸಾಹಿತ್ಯವನ್ನು ರಚಿಸಿದ್ದಾರೆ. ಹಾಡು ಸೃಷ್ಟಿಯಾದ ಹಿನ್ನೆಲೆಯನ್ನು ವಿವರಿಸಿದ ಅವರು, ಚಿತ್ರದಲ್ಲಿ ಸಮರ್ಥ್ ಮತ್ತು ಧನ್ವಿ ಮಾತ್ರವಲ್ಲದೆ ಜೀಪ್ ಕೂಡ ಪ್ರಮುಖ ಪಾತ್ರದಂತೆಯೇ ಕಾಣಿಸಿಕೊಳ್ಳಲಿದೆ ಎಂದು ಹೇಳಿದರು. ಸಸ್ಪೆನ್ಸ್, ಥ್ರಿಲ್ಲರ್ ಸೇರಿದಂತೆ ಹಲವು ಆಸಕ್ತಿಕರ ಅಂಶಗಳನ್ನು ಒಳಗೊಂಡಿರುವ ಕಥೆಯೊಂದಿಗೆ ‘ಶಬರಿ’ ಪ್ರೇಕ್ಷಕರ ಮುಂದೆ ಬರಲಿದೆ ಎಂದು ಮಾಹಿತಿ ನೀಡಿದರು.

ಬರವಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸಿವಿಲ್ ಇಂಜಿನಿಯರ್ ರಮೇಶ್, ಸುಧಾಕರ್ ರೆಡ್ಡಿ ಯಾಕಸಿರಿ ಹಾಗೂ ವಿಷ್ಣುಕಾಂತ್ ಎ. ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಮರ್ಥ್ ಮತ್ತು ಕೃತಿಕಾ ಗೌಡ ನಾಯಕ-ನಾಯಕಿಯಾಗಿ ನಟಿಸಿದ್ದು, ಧನ್ವಿ, ಎಂ.ಕೆ. ಮಠ, ನೀನಾಸಂ ಅಶ್ವತ್, ಸೀತಾ ಹರ್ಷವರ್ಧನ್, ಯೋಗೇಶ್ ವೀರ್, ಮಂಡ್ಯ ಸಿದ್ದು ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ.

ಚಿತ್ರಕ್ಕೆ ಬಿ.ಆರ್. ಹೇಮಂತ್ ಕುಮಾರ್ ಸಂಗೀತ ಸಂಯೋಜನೆ, ಸಾಮ್ರಾಟ್ ನಾಗರಾಜ್ ಛಾಯಾಗ್ರಹಣ, ಕೆ. ಗಿರೀಶ್ ಕುಮಾರ್ ಸಂಕಲನ ಹಾಗೂ ಕೋರ ಚಿನ್ನಯ್ಯ ಸಾಹಸ ನಿರ್ದೇಶನವಿದೆ.

ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ದಾರುಣ ಸಾವು!

ಮೈಸೂರು: ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಬೂದಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಬೂದಳ್ಳಿ ಗ್ರಾಮದ ರಾಜೇಶ್ (32), ನಾಗರಾಜು (35) ಹಾಗೂ ನಾರಾಯಣ್ (40) ಎಂದು ಗುರುತಿಸಲಾಗಿದೆ.

ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಗೂಡು ಕುಸಿದಿದೆ. ಈ ವೇಳೆ ಅವಶೇಷಗಳಡಿ ಸಿಲುಕಿದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಟಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಶೃಂಗೇರಿಯಲ್ಲಿ ಭಾರೀ ಮಳೆ ಅವಾಂತರ! ರಸ್ತೆಗೆ ಬಿದ್ದ ಬೃಹತ್ ಮರ, ಸಿರಿಮನೆ ಫಾಲ್ಸ್ ರಸ್ತೆ ಬಂದ್

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಹಲವೆಡೆ ಮಳೆ ಅವಾಂತರ ಸೃಷ್ಟಿಸಿದೆ.

ಭಾರೀ ಗಾಳಿ-ಮಳೆಯಿಂದಾಗಿ ಹುಲುಗಾರುಬೈಲ್ ಬಳಿ ರಸ್ತೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದ್ದು, ಸಿರಿಮನೆ ಫಾಲ್ಸ್‌ಗೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ.

ರಸ್ತೆ ಮಧ್ಯದಲ್ಲಿ ಮರ ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಭಾನುವಾರ ರಜೆ ದಿನವಾಗಿದ್ದರಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಆದರೆ ರಸ್ತೆ ಬಂದ್ ಆಗಿದ್ದರಿಂದ ಪ್ರವಾಸಿಗರು ಸ್ಥಳದಲ್ಲೇ ಪರದಾಡುವಂತಾಯಿತು.

ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದು, ಸಂಚಾರವನ್ನು ಸುಗಮಗೊಳಿಸುವ ಪ್ರಯತ್ನ ನಡೆಯುತ್ತಿದೆ. ಭಾರೀ ಮಳೆಯ ಪರಿಣಾಮ ಗ್ರಾಮದ ಸುತ್ತಮುತ್ತ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ಇನ್ನೊಂದೆಡೆ, ಶೃಂಗೇರಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ನೀರಿನ ಮಟ್ಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಮಳೆ ಕೊರತೆಯಿಂದ ಕಂಗಾಲಾಗಿದ್ದ ಮಲೆನಾಡಿನ ಚಿತ್ರಣ ಇದೀಗ ಸಂಪೂರ್ಣ ಬದಲಾಗಿದೆ. ಕೇವಲ ಎರಡು ದಿನಗಳ ನಿರಂತರ ಮಳೆಯಿಂದಾಗಿ ನದಿಗಳು, ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ತನ್ನ ವೈಭವ ತೋರಿಸುತ್ತಿದೆ.

 

ದಿನಕ್ಕೆ 5 ಗಂಟೆಗಿಂತ ಕಡಿಮೆ ನಿದ್ರೆ ಮಾಡುತ್ತಿದ್ದೀರಾ? ದೇಹದ ಮೇಲೆ ಬೀಳುವ ಗಂಭೀರ ಪರಿಣಾಮಗಳ ಬಗ್ಗೆ ಇರಲಿ ಎಚ್ಚರ

0

ಆರೋಗ್ಯಕರ ಜೀವನಶೈಲಿಗೆ ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮ ಎಷ್ಟು ಅಗತ್ಯವೋ, ಅಷ್ಟೇ ಮಹತ್ವ ಉತ್ತಮ ಗುಣಮಟ್ಟದ ನಿದ್ರೆಗೂ ಇದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ನಿದ್ರೆಯನ್ನು ಐಷಾರಾಮಿ ವಿಷಯವಾಗಿ ಪರಿಗಣಿಸದೆ, ದೇಹದ ಮೂಲಭೂತ ಅಗತ್ಯಗಳಲ್ಲಿ ಒಂದಾಗಿ ಪರಿಗಣಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅತಿಯಾದ ಮೊಬೈಲ್ ಬಳಕೆ, ಒತ್ತಡದ ಜೀವನಶೈಲಿ ಹಾಗೂ ರಾತ್ರಿ ತಡವಾಗಿ ಮಲಗುವ ಅಭ್ಯಾಸದಿಂದ ಅನೇಕರು ಸಮರ್ಪಕ ನಿದ್ರೆಯಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ದೇಹದ ಜೈವಿಕ ಗಡಿಯಾರ (Biological Clock) ಅಸ್ತವ್ಯಸ್ತಗೊಂಡು ಹಾರ್ಮೋನುಗಳ ಸಮತೋಲನಕ್ಕೂ ಧಕ್ಕೆಯಾಗುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ವೈದ್ಯರ ಪ್ರಕಾರ, ದಿನಕ್ಕೆ ಐದು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವ ಅಭ್ಯಾಸವು ಕೇವಲ ಒಂದು ವಾರದಲ್ಲೇ ದೇಹದಲ್ಲಿ ಹಲವು ನಕಾರಾತ್ಮಕ ಬದಲಾವಣೆಗಳನ್ನು ಉಂಟುಮಾಡುವ ಸಾಧ್ಯತೆ ಇದೆ.

ಸಾಕಷ್ಟು ನಿದ್ರೆ ಇಲ್ಲದಿದ್ದರೆ ಪುರುಷರಲ್ಲಿ ಟೆಸ್ಟೋಸ್ಟೆರಾನ್ ಹಾರ್ಮೋನ್ ಮಟ್ಟ ಕಡಿಮೆಯಾಗುವ ಅಪಾಯವಿದ್ದು, ಇದರಿಂದ ದೈಹಿಕ ಶಕ್ತಿ, ಸ್ನಾಯುಗಳ ಬೆಳವಣಿಗೆ ಹಾಗೂ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀಳಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಅಲ್ಲದೆ, ವ್ಯಾಯಾಮದ ಬಳಿಕ ಸ್ನಾಯುಗಳು ಸಹಜ ಸ್ಥಿತಿಗೆ ಮರಳುವ ಪ್ರಕ್ರಿಯೆಯೂ ನಿಧಾನಗೊಳ್ಳುತ್ತದೆ. ಹೀಗಾಗಿ ಜಿಮ್‌ನಲ್ಲಿ ಎಷ್ಟೇ ವ್ಯಾಯಾಮ ಮಾಡಿದರೂ ಸಮರ್ಪಕ ನಿದ್ರೆ ಇಲ್ಲದಿದ್ದರೆ ಅದರ ಸಂಪೂರ್ಣ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.

ನಿದ್ರೆಯ ಕೊರತೆಯು ಇನ್ಸುಲಿನ್ ಸಂವೇದನೆ ಕಡಿಮೆಯಾಗಲು ಕಾರಣವಾಗಬಹುದು. ಇದರ ಪರಿಣಾಮವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಉಳಿಯುವ ಸಾಧ್ಯತೆ ಇದ್ದು, ದೀರ್ಘಾವಧಿಯಲ್ಲಿ ಮಧುಮೇಹದ ಅಪಾಯ ಹೆಚ್ಚಾಗಬಹುದು. ಜೊತೆಗೆ ಹಸಿವನ್ನು ನಿಯಂತ್ರಿಸುವ ಹಾರ್ಮೋನುಗಳಲ್ಲಿ ವ್ಯತ್ಯಾಸ ಉಂಟಾಗಿ, ಹೆಚ್ಚುವರಿ ಕ್ಯಾಲೊರಿ ಸೇವನೆ ಹಾಗೂ ತೂಕ ಹೆಚ್ಚಳಕ್ಕೂ ಕಾರಣವಾಗಬಹುದು ಎಂದು ವೈದ್ಯರು ಹೇಳಿದ್ದಾರೆ.

ತಜ್ಞರ ಸಲಹೆಯಂತೆ, ದೇಹವು ತನ್ನನ್ನು ತಾನು ದುರಸ್ತಿ ಮಾಡಿಕೊಳ್ಳಲು ಮತ್ತು ಮೆದುಳು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿದಿನ 7 ರಿಂದ 8 ಗಂಟೆಗಳ ಗುಣಮಟ್ಟದ ನಿದ್ರೆ ಅತ್ಯಗತ್ಯ. ರಾತ್ರಿ ಮಲಗುವ ಮುನ್ನ ಮೊಬೈಲ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಕಡಿಮೆ ಮಾಡಿ, ನಿಯಮಿತ ಸಮಯಕ್ಕೆ ಮಲಗುವ ಅಭ್ಯಾಸ ರೂಢಿಸಿಕೊಳ್ಳುವುದು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಕೊಡಗಿನಲ್ಲಿ ವರುಣನ ಆರ್ಭಟ! ತ್ರಿವೇಣಿ ಸಂಗಮ ಜಲಾವೃತ, ತಲಕಾವೇರಿಯಲ್ಲಿ ಜಲವೈಭವ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಹಾಗೂ ಭಾಗಮಂಡಲ ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ನದಿ-ತೊರೆಗಳು ತುಂಬಿ ಹರಿಯುತ್ತಿವೆ.

ಭಾರೀ ಮಳೆಯ ಪರಿಣಾಮವಾಗಿ ಪ್ರಸಿದ್ಧ ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ ನದಿಗಳ ಸಂಗಮ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಹದ ನೀರು ಶ್ರೀ ಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳ ಹಂತದವರೆಗೂ ತಲುಪಿದೆ.

ಮಳೆಯ ಅಬ್ಬರದಿಂದ ಭಾಗಮಂಡಲ–ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೊಂದೆಡೆ, ಕಾವೇರಿ ಉಗಮ ಸ್ಥಾನವಾದ ತಲಕಾವೇರಿ ಕ್ಷೇತ್ರದಲ್ಲೂ ಮಳೆಯ ಅಬ್ಬರ ಜೋರಾಗಿದೆ. ಕ್ಷೇತ್ರದ ಮೆಟ್ಟಿಲುಗಳ ಮೇಲೆಯೇ ಮಳೆ ನೀರು ಹಾಲಿನ ಹೊಳೆಯಂತೆ ರಭಸವಾಗಿ ಹರಿಯುತ್ತಿದ್ದು, ಪ್ರಕೃತಿಯ ಅದ್ಭುತ ದೃಶ್ಯ ಕಂಡುಬಂದಿದೆ.

ಈ ಸುಂದರ ಜಲವೈಭವವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಭಕ್ತರು ಹಾಗೂ ಪ್ರವಾಸಿಗರು ಮೊಬೈಲ್‌ಗಳಲ್ಲಿ ದೃಶ್ಯಗಳನ್ನು ಸೆರೆಹಿಡಿದು ಸಂಭ್ರಮಿಸಿದ್ದಾರೆ.

ಭಾರೀ ಮಳೆಯ ನಡುವೆಯೂ ತಲಕಾವೇರಿ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಗಳು ಮುಂದುವರಿದಿವೆ. ಅರ್ಚಕರ ತಂಡವು ಎಂದಿನಂತೆ ಪೂಜಾ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದು, ಭಕ್ತರು ಮಳೆಯ ನಡುವೆಯೂ ಶ್ರೀ ಕಾವೇರಿ ಮಾತೆಯ ದರ್ಶನ ಪಡೆಯುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

 

KRS Dam Update: ಕೆಆರ್‌ಎಸ್‌ಗೆ ಭಾರೀ ಒಳಹರಿವು! 100 ಅಡಿ ತಲುಪಲು ಕ್ಷಣಗಣನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.

ಇದರಿಂದ ಡ್ಯಾಂ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದ್ದು, ಶೀಘ್ರದಲ್ಲೇ 100 ಅಡಿ ತಲುಪುವ ನಿರೀಕ್ಷೆ ಮೂಡಿದೆ.

ಕಳೆದ ಎರಡು ದಿನಗಳ ಹಿಂದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 92 ಅಡಿಯಷ್ಟಿತ್ತು. ಇದೀಗ ಭಾರೀ ಒಳಹರಿವಿನಿಂದಾಗಿ ನೀರಿನ ಮಟ್ಟ 97 ಅಡಿಗೆ ಏರಿಕೆಯಾಗಿದೆ. ಜಲಾಶಯದಲ್ಲಿದ್ದ ನೀರಿನ ಸಂಗ್ರಹ ಪ್ರಮಾಣವೂ ಹೆಚ್ಚಾಗಿದ್ದು, ಮೊದಲು 17 ಟಿಎಂಸಿ ಇದ್ದ ನೀರು ಇದೀಗ 20.477 ಟಿಎಂಸಿಗೆ ಏರಿಕೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಇದೇ ರೀತಿ ಮಳೆ ಮುಂದುವರಿದರೆ, ಕೆಲವೇ ದಿನಗಳಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದೆ. ಇದರಿಂದ ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳ ನಡುವೆಯೇ ಪ್ರಕೃತಿಯೇ ತಾತ್ಕಾಲಿಕ ನೆಮ್ಮದಿ ನೀಡಿದಂತಾಗಿದೆ.

ಇನ್ನೊಂದೆಡೆ, ಕಬಿನಿ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರ ಪರಿಣಾಮ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ತಮಿಳುನಾಡಿಗೂ ನೀರು ಹರಿದುಹೋಗುತ್ತಿದೆ.

ಜಲಾಶಯಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಕಾವೇರಿ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಉತ್ತಮ ಮಳೆಯಿಂದಾಗಿ ಈ ಬಾರಿ ನೀರಿನ ಸಮಸ್ಯೆ ಕಡಿಮೆಯಾಗುವ ನಿರೀಕ್ಷೆ ರೈತರಲ್ಲಿ ಮೂಡಿದೆ.

 

ಮಲೆನಾಡಿನಲ್ಲಿ ಮಳೆ ರೌದ್ರಾವತಾರ: ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು!

ಶಿವಮೊಗ್ಗ: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮಲೆನಾಡಿನಲ್ಲಿ ಭೀಕರ ಅವಾಂತರ ಸೃಷ್ಟಿಸಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ತಡರಾತ್ರಿ ಸುಮಾರು 2.30ರ ವೇಳೆಗೆ ನಿರಂತರ ಮಳೆಯಿಂದ ಗುಡ್ಡ ಕುಸಿದಿದ್ದು, ಗುಡ್ಡದ ಕೆಳಭಾಗದಲ್ಲಿದ್ದ ಶೆಡ್ ಮೇಲೆ ಮಣ್ಣು ಬಿದ್ದಿದೆ. ಶೆಡ್‌ನಲ್ಲಿ ವಾಸಿಸುತ್ತಿದ್ದ ಕುಟುಂಬದ ಸದಸ್ಯರಾದ ಮಲ್ಲಿಕಾರ್ಜುನ (35), ನಾಗವೇಣಿ (28) ಮತ್ತು ಮೂರು ವರ್ಷದ ಸಂತೋಷ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರು ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾಗಿದ್ದು, ಕೆಲಸದ ನಿಮಿತ್ತ ತೀರ್ಥಹಳ್ಳಿಯಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್‌ನಲ್ಲಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದೇ ವೇಳೆ, ಕೊಡಗು ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಭಾಗಮಂಡಲ ಸ್ನಾನಘಟ್ಟ, ತ್ರಿವೇಣಿ ಸಂಗಮ ಹಾಗೂ ಉದ್ಯಾನವನ ಸಂಪೂರ್ಣ ಜಲಾವೃತಗೊಂಡಿವೆ. ಭಾಗಮಂಡಲ–ತಲಕಾವೇರಿ ರಸ್ತೆ ನೀರಿನಲ್ಲಿ ಮುಳುಗಿರುವ ಕಾರಣ ಸಾರ್ವಜನಿಕರು ಫ್ಲೈಓವರ್ ಮೂಲಕ ಸಂಚಾರ ನಡೆಸುವಂತಾಗಿದೆ.

 

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಿಂದ ದೊಡ್ಡ ತಂಡ ಬಿಜೆಪಿ ಸೇರಲಿದೆ: ನಿರಾಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನ ಅಸಮಾಧಾನಿತ ನಾಯಕರ ದೊಡ್ಡ ತಂಡ ಬಿಜೆಪಿಗೆ ಸೇರ್ಪಡೆಯಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಸ್ಫೋಟಕ ಹೇಳಿಕೆ ನೀಡಿದರು.

ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಹಾಗೂ ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಸಾಕಷ್ಟು ಅಸಮಾಧಾನ ಉಂಟಾಗುವ ಸಾಧ್ಯತೆಯಿದೆ. ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗಲಿದ್ದು, ಈಗಾಗಲೇ ಹಲವು ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

2028ರ ವಿಧಾನಸಭೆ ಚುನಾವಣೆಯವರೆಗೆ ಜನರು ಕಾಂಗ್ರೆಸ್‌ಗೆ ಆಡಳಿತ ನಡೆಸುವ ಅವಕಾಶ ನೀಡಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಕೆಲಸ ಮಾಡಲಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರು ಹಾಗೂ ನಾಯಕರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಸೇರಿದಂತೆ ಪಕ್ಷದಿಂದ ದೂರ ಉಳಿದ ನಾಯಕರು ಮತ್ತೆ ಮುಖ್ಯವಾಹಿನಿಗೆ ಬಂದರೆ ಬಿಜೆಪಿಗೆ ಇನ್ನಷ್ಟು ಬಲ ಸಿಗಲಿದೆ. ಪಕ್ಷ ತೊರೆದ ಎಲ್ಲರನ್ನು ಮರಳಿ ಕರೆತಂದರೆ ಸಂಘಟನೆ ಮತ್ತಷ್ಟು ಸದೃಢವಾಗಲಿದೆ. ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ನಿರಾಣಿ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ಪ್ರಶಾಂತ ನಾಯ್ಕರ್, ಮಹಾಂತೇಶ ನಲವಡಿ, ಸಿದ್ದಪ್ಪ ಪಲ್ಲೇದ, ಮಹಿಳಾ ಘಟಕದ ಕೊಳ್ಳಿ ಸೇರಿದಂತೆ ಅನೇಕರಿದ್ದರು.

ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು ಭೇಟಿ ನೀಡಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಶನಿವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ತನಿಖೆಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದರು.

ಮೃತ ವಿದ್ಯಾರ್ಥಿನಿಯ ಕುಟುಂಬವು ಕೊಲೆ ಆರೋಪ ಮಾಡಿದ್ದು, ವಸತಿ ನಿಲಯದ ಸಿಸಿ ಟಿವಿ ದೃಶ್ಯಾವಳಿಯ ಒಂದು ತಿಂಗಳ ಬ್ಯಾಕ್‌ಅಪ್ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ದೂರು ದಾಖಲಿಸುವ ವೇಳೆ ಪೊಲೀಸರಿಂದ ಒತ್ತಡ ಹೇರಲಾಗಿದೆ ಎಂಬ ಆರೋಪವೂ ಕೇಳಿಬಂದಿದ್ದು, ಪೊಲೀಸ್ ಠಾಣೆಯ ಸಿಸಿ ಟಿವಿ ದೃಶ್ಯಾವಳಿಯನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು.

ರೋಣ ತಾಲೂಕು ಆಸ್ಪತ್ರೆ ಹಾಗೂ ಗದಗಿನ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೆಣ್ಣು ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

ರೋಣ ತಾಲೂಕು ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ಮಹಿಳೆಯರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲೇ ಸ್ಪಂದಿಸಲು ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಜೊತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರ ಅಹವಾಲು ಆಲಿಸಲು ತಿಂಗಳಿಗೆ ಒಂದು ದಿನ ಮೀಸಲಿಡುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿ ವಸತಿ ನಿಲಯಗಳು, ಆಸ್ಪತ್ರೆಗಳು, ಪೊಲೀಸ್ ಠಾಣೆ, ಮಕ್ಕಳ ದತ್ತು ಕೇಂದ್ರ, ಅಲೆಮಾರಿ ಸಮುದಾಯದ ನಿವಾಸಗಳು, ಕೃಷಿ ಕಾರ್ಮಿಕರು ಹಾಗೂ ಕುರಿಗಾಹಿಗಳನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಲಾಗಿದೆ. ಅಲೆಮಾರಿ ಸಮುದಾಯಕ್ಕೆ ಕುಡಿಯುವ ನೀರು, ರಸ್ತೆ, ಶೌಚಾಲಯ ಹಾಗೂ ಗ್ರಂಥಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಹೇಳಿದರು.

ಅಹವಾಲು ಸ್ವೀಕಾರ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ದೇವದಾಸಿಯರು, ಅಲೆಮಾರಿ ಸಮುದಾಯದವರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉದ್ಯೋಗ, ಮನೆ, ಪಿಂಚಣಿ, ಮೂಲಸೌಕರ್ಯ ಹಾಗೂ ಕೌಟುಂಬಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದ್ದಾರೆ. ಮನೆ ಸೌಲಭ್ಯಕ್ಕಾಗಿ ಬಂದ 66 ಅರ್ಜಿಗಳನ್ನು ವಿವಿಧ ವಸತಿ ಯೋಜನೆಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಉಪಸ್ಥಿತರಿದ್ದರು.

“ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆಗೆ ಗೃಹ ಇಲಾಖೆಗೆ ಪತ್ರ ಬರೆಯುತ್ತೇನೆ. ಮಹಿಳೆಯರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ಸಿಗುವಂತೆ ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಬೇಕು.”

ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ