ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾಗಿರುವ ಅಸಮಾಧಾನದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದು, ರಾಜೀನಾಮೆ ನೀಡಲು ಮುಂದಾಗುವವರನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಅದನ್ನು ಅಂಗೀಕರಿಸುತ್ತೇನೆ. ಇದೆಲ್ಲವೂ ರಾಜಕೀಯದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ರಾಜಕೀಯ ಭವಿಷ್ಯ ಬೇಕಾದರೆ ಪಕ್ಷವೇ ಮುಖ್ಯ” ಎಂದು ಹೇಳಿದರು.
ಕೆಲವು ಶಾಸಕರು ರಾಜೀನಾಮೆ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ತಮ್ಮ ಹಿಂದಿನ ರಾಜಕೀಯ ಅನುಭವವನ್ನು ಉಲ್ಲೇಖಿಸಿದರು.
“ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ನನಗೂ ಮತ್ತು ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಸಿಗಲಿಲ್ಲ. ಆಗ ನಾವೂ ರಾಜೀನಾಮೆ ನೀಡಬಹುದಿತ್ತು. ಆದರೆ ತಾಳ್ಮೆಯಿಂದ ಇದ್ದೆವು. ವೀರೇಂದ್ರ ಪಾಟೀಲ್ ಅವರ ಅವಧಿಯಲ್ಲಿ ಬಂಗಾರಪ್ಪ ಅವರಿಗೂ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಬಳಿಕ ಅವರು ಮುಖ್ಯಮಂತ್ರಿಯಾದರು. ಮಲ್ಲಿಕಾರ್ಜುನ ಖರ್ಗೆ ಅವರಿಗೂ ಹಲವು ಸಂದರ್ಭಗಳಲ್ಲಿ ಅವಕಾಶ ಸಿಗಲಿಲ್ಲ” ಎಂದು ಹೇಳಿದರು.
ಅಸಮಾಧಾನ ಹೊಂದಿರುವ ಶಾಸಕರಿಗೆ ತಾಳ್ಮೆ ಅಗತ್ಯವಿದೆ ಎಂದು ಸಲಹೆ ನೀಡಿದ ಡಿ.ಕೆ. ಶಿವಕುಮಾರ್, “ಎಲ್ಲಕ್ಕಿಂತ ಪಕ್ಷ ಮುಖ್ಯ. ನಿಗಮ, ಮಂಡಳಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಇರುವವರು ರಾಜೀನಾಮೆ ನೀಡುವಂತೆ ಸೂಚಿಸುತ್ತೇನೆ. ಅಧಿಕಾರ ಹಂಚಿಕೆ ಕುರಿತು ಮೊದಲೇ ಎರಡುವರೆ ವರ್ಷದ ಅವಧಿಯ ಬಗ್ಗೆ ತಿಳಿಸಲಾಗಿತ್ತು” ಎಂದರು.
ಮೊದಲು ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಬಳಿಕ ಶಾಸಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಹೊಸ ಬೆಳವಣಿಗೆಗಳಿದ್ದರೆ ತಾವೇ ಮಾಧ್ಯಮಗಳ ಮುಂದೆ ಮಾಹಿತಿ ನೀಡುವುದಾಗಿ ಹೇಳಿದರು.

