ಬೆಂಗಳೂರು: ಜೈಲು ಶಿಕ್ಷೆ ಅನುಭವಿಸಿದ ಅವಧಿಯನ್ನೇ ಆಧಾರವನ್ನಾಗಿ ಮಾಡಿಕೊಂಡು ಅಪರಾಧಿಗಳಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಮುಂಬೈನಿಂದ ಬೆಂಗಳೂರಿನ ಕಾರಾಗೃಹಕ್ಕೆ ಸ್ಥಳಾಂತರಗೊಂಡಿರುವ ಅಪರಾಧಿ ಅಂಬರೀಶ್ ಎಸ್. ಕಪಾಡಿಯಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಅರ್ಜಿದಾರ ಕಪಾಡಿಯಾ ಸುಮಾರು 12 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಕಳೆದ 14 ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇನೆ. ಆದ್ದರಿಂದ ಪೆರೋಲ್ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ವೇಳೆ ನ್ಯಾಯಪೀಠ, ಅರ್ಜಿದಾರರು ಆರು ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ಇದು ಪುನರಾವರ್ತಿತ ಅಪರಾಧ ಪ್ರವೃತ್ತಿಯನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ದಾಖಲೆಗಳಲ್ಲಿ ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ದುರುಪಯೋಗದಂತಹ ಗಂಭೀರ ಆರ್ಥಿಕ ಅಪರಾಧಗಳ ಆರೋಪಗಳು ಸಾಬೀತಾಗಿವೆ. ಇಂತಹ ಪ್ರಕರಣಗಳು ಸಾರ್ವಜನಿಕ ವಿಶ್ವಾಸದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದು ಪೀಠ ತಿಳಿಸಿದೆ.
ಇದಲ್ಲದೆ, ಒಂದು ಪ್ರಕರಣ ಸಿಬಿಐ ತನಿಖಾ ವ್ಯಾಪ್ತಿಗೆ ಒಳಪಟ್ಟಿರುವುದೂ ಅಪರಾಧಗಳ ಗಂಭೀರತೆ ಹಾಗೂ ಸಂಕೀರ್ಣತೆಯನ್ನು ಸೂಚಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರ ಹಿಂದಿನ ನಡವಳಿಕೆಯನ್ನು ಪರಿಗಣಿಸಿದರೆ, ತಾತ್ಕಾಲಿಕ ಪೆರೋಲ್ ಸೌಲಭ್ಯ ನೀಡಲು ವಿಶ್ವಾಸ ಮೂಡುವುದಿಲ್ಲ. 14 ವರ್ಷಗಳ ಕಾಲ ಜೈಲಿನಲ್ಲಿದ್ದೇನೆ ಎಂಬ ವಾದವನ್ನು ಪ್ರತ್ಯೇಕವಾಗಿ ಪರಿಗಣಿಸಲು ಸಾಧ್ಯವಿಲ್ಲ. ಅಪರಾಧದ ಸ್ವರೂಪ, ಹಿನ್ನೆಲೆ ಹಾಗೂ ಗಂಭೀರತೆಯನ್ನು ಗಮನಿಸಬೇಕಾಗುತ್ತದೆ. ಶಿಕ್ಷೆಯ ಅವಧಿಯೇ ಪೆರೋಲ್ ಪಡೆಯಲು ಏಕೈಕ ಮಾನದಂಡವಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, 2020ರ ನವೆಂಬರ್ನಲ್ಲಿ ಹೈಕೋರ್ಟ್ ಪೆರೋಲ್ ಅರ್ಜಿಯನ್ನು ಪರಿಗಣಿಸಲು ನಿರ್ದೇಶಿಸಿತ್ತು. ಆದರೆ ಸಿಬಿಐ ಪ್ರಕರಣದ ಹಿನ್ನೆಲೆಯಲ್ಲಿ ಕಪಾಡಿಯಾರನ್ನು ಅಹಮದಾಬಾದ್ ಜೈಲಿಗೆ ವರ್ಗಾಯಿಸಿದ್ದರಿಂದ ಅರ್ಜಿಯ ಬಗ್ಗೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಾದಿಸಿದರು. ಹೀಗಾಗಿ ಎರಡು ತಿಂಗಳ ಪೆರೋಲ್ ಮಂಜೂರು ಮಾಡಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಯಾಗಿ ಸಿಬಿಐ ಪರ ವಕೀಲರು, ಅರ್ಜಿದಾರರು ಆರು ಪ್ರಕರಣಗಳಲ್ಲಿ ಶಿಕ್ಷೆಗೆ ಒಳಗಾಗಿದ್ದು, ಕರ್ನಾಟಕ ಜೈಲು ನಿಯಮಗಳು–1974ರ ನಿಯಮ 192(2)(1)(ಜಿ) ಪ್ರಕಾರ ಪೆರೋಲ್ ಪಡೆಯಲು ಅರ್ಹರಲ್ಲ ಎಂದು ನ್ಯಾಯಾಲಯಕ್ಕೆ ವಾದ ಮಂಡಿಸಿದರು.