ಬೆಂಗಳೂರು: ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿ ಯೋಜನೆಗೆ ಮೊದಲ ದೊಡ್ಡ ಹೂಡಿಕೆ ಸೇರ್ಪಡೆಯಾಗಿದೆ.
ಡಾಬಸಪೇಟೆ–ದೊಡ್ಡಬಳ್ಳಾಪುರ ನಡುವೆ ನಿರ್ಮಾಣವಾಗುತ್ತಿರುವ ಈ ಹೊಸ ಕೈಗಾರಿಕಾ ನಗರದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂ. ಹೂಡಿಕೆಯಲ್ಲಿ ‘ಬಿಸಿನೆಸ್ ಇಂಟೆಲಿಜೆಂಟ್ ಹಬ್’ ಸ್ಥಾಪಿಸಲು ಮುಂದಾಗಿದೆ.
ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ಸಮ್ಮುಖದಲ್ಲಿ ಈ ಸಂಬಂಧ ಒಪ್ಪಂದಕ್ಕೆ ಅಧಿಕೃತ ಅಂಕಿತ ಹಾಕಲಾಯಿತು. ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಹಾಗೂ ಟೊಯೋಟಾ ಕಂಪನಿಯ ಸಿಓಒ ಮತ್ತು ವಿಶೇಷ ಯೋಜನೆ ನಿರ್ದೇಶಕ ಸುದೀಪ್ ದಳವಿ ಒಪ್ಪಂದಕ್ಕೆ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹೂಡಿಕೆಗೆ ಸರ್ಕಾರ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. “ವಿಶ್ವದಲ್ಲೇ ಮೊದಲ ಬಾರಿಗೆ ಈ ರೀತಿಯ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಷಯ” ಎಂದು ಅವರು ಹೇಳಿದರು.
ಸಚಿವ ಎಂ.ಬಿ. ಪಾಟೀಲ್ ಅವರು ಮಾತನಾಡಿ, ಕ್ವಿನ್ ಸಿಟಿಯಲ್ಲಿ ನಡೆಯುತ್ತಿರುವ ಇದು ಪ್ರಥಮ ದೊಡ್ಡ ಹೂಡಿಕೆ ಎಂದು ತಿಳಿಸಿದರು. ಟೊಯೋಟಾ ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಹಂತ ಹಂತವಾಗಿ 1,200 ಕೋಟಿ ರೂ. ಹೂಡಿಕೆ ಮಾಡಲಿದ್ದು, ಇದರಿಂದ ಸುಮಾರು 200 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಜೊತೆಗೆ ಕಂಪನಿಗೆ ಸುಮಾರು 300 ಎಕರೆ ಭೂಮಿ ನೀಡಲಾಗುವುದು ಎಂದರು.
ಕ್ವಿನ್ ಸಿಟಿಯಲ್ಲಿ ವಾಹನ ತಯಾರಿಕೆ, ಪರೀಕ್ಷಾ ಘಟಕಗಳು ಹಾಗೂ ಆಧುನಿಕ ಉತ್ಪಾದನಾ ಕೇಂದ್ರಗಳು ಸ್ಥಾಪನೆಯಾಗಲಿವೆ. ನವೀನತೆ, ಆರೋಗ್ಯ ಸೇವೆ ಮತ್ತು ಐಟಿ ತಂತ್ರಜ್ಞಾನಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳು ಹಾಗೂ ಸಂಶೋಧನಾ ಸಂಸ್ಥೆಗಳು ಕೂಡ ಇಲ್ಲಿ ಹೂಡಿಕೆ ಮಾಡಲು ಮುಂದಾಗಿವೆ ಎಂದು ಮಾಹಿತಿ ನೀಡಲಾಗಿದೆ.
ಒಟ್ಟು 5,800 ಎಕರೆ ಪ್ರದೇಶದಲ್ಲಿ ಹಂತಹಂತವಾಗಿ ಅಭಿವೃದ್ಧಿಯಾಗುತ್ತಿರುವ ಕ್ವಿನ್ ಸಿಟಿ ಯೋಜನೆಗೆ 48 ಸಾವಿರ ಕೋಟಿ ರೂ. ಹೂಡಿಕೆ ನಿರೀಕ್ಷಿಸಲಾಗಿದ್ದು, ಸುಮಾರು 1 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಟೊಯೋಟಾ ಕಂಪನಿಯ ಉನ್ನತ ಪ್ರತಿನಿಧಿಗಳು ಉಪಸ್ಥಿತರಿದ್ದರು.

