ನವದೆಹಲಿ: ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ದೇಶದಲ್ಲಿ ಮಾನ್ಸೂನ್ ಕೊರತೆಯ ಆತಂಕ ಎದುರಾಗಿತ್ತು. ಆದರೆ ಜುಲೈ ಮೊದಲ ವಾರದಲ್ಲಿ ದೇಶಾದ್ಯಂತ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಳೆ ಕೊರತೆ ಶೇ.12ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಖಾರಿಫ್ ಬೆಳೆ ಹಂಗಾಮು ಹಾಗೂ ಎಲ್ ನಿನೊದ ಸಂಭಾವ್ಯ ಪರಿಣಾಮ ಕುರಿತು ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಿಸಿದೆ.
ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಜೂನ್ನಿಂದ ಜುಲೈ 7ರವರೆಗಿನ ಮಳೆಯ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. ಗುಜರಾತ್, ಮಧ್ಯಪ್ರದೇಶ, ಛತ್ತೀಸ್ಗಢ ಹಾಗೂ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಸುಮಾರು 10 ದಿನ ತಡವಾಗಿ ಆರಂಭವಾದರೂ, ಜುಲೈ ಮೊದಲ ವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದರು.
ಐಎಂಡಿ ಅಂದಾಜಿನ ಪ್ರಕಾರ, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಮಧ್ಯಮ ಮಟ್ಟಕ್ಕೆ ದುರ್ಬಲವಾಗುವ ಸಾಧ್ಯತೆ ಇದ್ದು, ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಶೇ.30ರಷ್ಟು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.
ಸಭೆಯಲ್ಲಿ ಕೃಷಿ, ವಿದ್ಯುತ್, ಕುಡಿಯುವ ನೀರು, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪಶುಸಂಗೋಪನೆ, ಭೂ ವಿಜ್ಞಾನ, ಹಣಕಾಸು, ರಸಗೊಬ್ಬರ, ಮಾಹಿತಿ ಮತ್ತು ಪ್ರಸಾರ ಸೇರಿದಂತೆ 15ಕ್ಕೂ ಹೆಚ್ಚು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಜಲ ಆಯೋಗದ ಪ್ರತಿನಿಧಿಗಳು ಭಾಗವಹಿಸಿದ್ದರು.
ಖಾರಿಫ್ ಬೆಳೆಗಳ ರಕ್ಷಣೆಗಾಗಿ ಮಳೆ, ಜಲಾಶಯಗಳ ನೀರಿನ ಸಂಗ್ರಹ, ಬೆಳೆ ಬಿತ್ತನೆ, ನೀರಿನ ಲಭ್ಯತೆ, ಕೀಟ ಹಾಗೂ ರೋಗಗಳ ಸ್ಥಿತಿಗತಿಗಳ ಬಗ್ಗೆ ರಾಜ್ಯಗಳೊಂದಿಗೆ ಪ್ರತಿ ವಾರ ಬೆಳೆ-ಹವಾಮಾನ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದಲ್ಲದೆ, ಮಳೆ ಕೊರತೆ ಎದುರಿಸುತ್ತಿರುವ 262 ಜಿಲ್ಲೆಗಳಿಗೆ ವಿಶೇಷ ಕೃಷಿ ಕಾರ್ಯಯೋಜನೆ ವಿಸ್ತರಿಸಲಾಗಿದ್ದು, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಕೃಷಿ ವಿಜ್ಞಾನ ಕೇಂದ್ರಗಳಿಗೆ ಎಲ್ ನಿನೊ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನೀಡಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

