Home Blog

ಬಿಜೆಪಿ ನಾಯಕರು ಫೋಟೋ ಶೂಟ್ ಬಿಟ್ಟು ನಿತ್ಯ ಸಾರ್ವಜನಿಕ ಸಾರಿಗೆ ಬಳಸುತ್ತಾರಾ?: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿ ನಾಯಕರು ಒಂದು ದಿನದ ಫೋಟೋ ಶೂಟ್ ಬಿಟ್ಟು ಪ್ರತಿನಿತ್ಯ ಮೆಟ್ರೋ, ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುತ್ತಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು. ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಗುರುವಾರ ಮಾತನಾಡಿದರು.

ತಿರುಪತಿಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಂತೆ ಪ್ರಾರ್ಥನೆ ಮಾಡಿರುವುದಾಗಿ ಹೇಳಿದ್ದೀರಿ, ಬೇರೆ ಏನು ಪ್ರಾರ್ಥನೆ ಮಾಡಿಕೊಳ್ಳಲಿಲ್ಲವೇ ಎಂದು ಕೇಳಿದಾಗ, “ಮಾಂಗಲ್ಯ ಎಂಬುದು ನಮ್ಮ ಧರ್ಮದ ಸಂಕೇತ. ಹೆಣ್ಣು ಗಂಡು ಸೇರಿ ವಧು ವರರಾಗುತ್ತಾರೆ, ಅಕ್ಕಿ ಹಾಗೂ ಅರಿಶಿನ ಸೇರಿ ಮಂತ್ರಾಕ್ಷತೆಯಾಗುತ್ತದೆ. ಹಿಂದೂ ಧರ್ಮದಲ್ಲಿ ಈ ಹೆಣ್ಣು ಹಾಗೂ ಗಂಡಿನ ನಡುವೆ ಬಾಂಧವ್ಯ ಬೆಸೆಯುವುದು ಮಾಂಗಲ್ಯ.

ಅದು ದೇವಾನು ದೇವತೆಗಳ ಕಾಲದಿಂದ ನಡೆದುಕೊಂಡು ಬಂದಿದೆ. ನಾವು ದೇವರಿಗೂ ಮಾಗಲ್ಯ ಹಾಕಿರುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಮಾಂಗಲ್ಯವನ್ನು ಖರೀದಿ ಮಾಡಬೇಡ ಎಂದರೆ ಹೇಗೆ? ನೀವು ದುಡಿದ ಹಣದಲ್ಲಿ ನೀವು ಅದನ್ನು ಖರೀದಿ ಮಾಡಿರುತ್ತೀರಿ. ನೀವು ಮದುವೆಯಾಗುವಾಗಲೂ ಚಿನ್ನ ಖರೀದಿ ಮಾಡಬೇಡ, ತಾಳಿ ಕಟ್ಟಬೇಡ ಅರಿಶಿನ ಕೊಂಬು ಕಟ್ಟಿಕೊಳ್ಳಿ ಎಂದರೆ ಹೇಗೆ? ನಿಮ್ಮ ಕೈಯಲ್ಲಿ ಬೆಲೆ ಏರಿಕೆ ತಡೆಯಲು ಆಗಲಿಲ್ಲ,

ಅಡುಗೆ ಎಣ್ಣೆ, ಇಂಧನ ಕಡಿಮೆ ಬಳಸಿ ಎನ್ನುತ್ತಿದ್ದಾರೆ. ಇವರು ಒಂದೆರಡು ದಿನ ಸಾರ್ವಜನಿಕ ಸಾರಿಗೆ ಬಳಸುತ್ತಿದ್ದಾರೆ. ಸೋಮಣ್ಣ ಹಾಗೂ ಇತರೆ ಸಚಿವರು ಹಾಗೂ ಬಿಜೆಪಿ ನಾಯಕರು ದಿನನಿತ್ಯ ಸಾರ್ವಜನಿಕ ಸಾರಿಗೆಯಲ್ಲಿ ಓಡಾಡುತ್ತಾರಾ? ಅವರು ಓಡಾಡುವುದಾದರೆ ನಮ್ಮ ಅಭ್ಯಂತರವಿಲ್ಲ. ಅವರು ಪೆಟ್ರೋಲ್, ಡೀಸೆಲ್ ಉಳಿಸಲಿ, ಎವರು ಅಡುಗೆ ಎಣ್ಣೆ ಬಳಸಿದ ಆಹಾರ ತಿನ್ನುವುದೇ ಬೇಡ. ವಿದೇಶ ಪ್ರವಾಸ ಮಾಡಬೇಡ ಎಂದಿದ್ದಾರೆ. ಅವರು ವಿದೇಶ ಪ್ರವಾಸ ಹೋಗಿರುವುದನ್ನು ನಾನು ಪ್ರಶ್ನೆ ಮಾಡುವುದಿಲ್ಲ” ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳು ಇತಿಹಾಸ ಸೃಷ್ಟಿಸಿವೆ

“ನಮ್ಮ ಸರ್ಕಾರ ಮೂರು ವರ್ಷಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1.34 ಲಕ್ಷ ಕೋಟಿ ಹಣವನ್ನು ವೆಚ್ಚ ಮಾಡಿದ್ದು, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ನೀಡಿದೆ. ಆ ಮೂಲಕ ಇಡೀ ದೇಶದಲ್ಲೇ ಇತಿಹಾಸ ಸೃಷ್ಟಿಸಿದೆ. ನಮ್ಮ ಸರ್ಕಾರಕ್ಕೆ ಮೂರು ವರ್ಷ ತುಂಬಿದೆ. ಆಕ್ಸ್ ಫರ್ಡ್ ವಿವಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧ್ಯಯನ ಮಾಡಿದ್ದು, ಈ ಅಧ್ಯಯನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳನ್ನು Shining a Light in the darkness (ಕತ್ತಲೆಯಲ್ಲಿ ಮೂಡಿದ ಬೆಳಕು) ಎಂದು ಬಣ್ಣಿಸಿದ್ದಾರೆ.

ನಮ್ಮ ಈ ಕಾರ್ಯಕ್ರಮ ದೇಶಕ್ಕೆ ಮಾದರಿ. ನಮ್ಮ ಯೋಜನೆಗಳನ್ನು ಟೀಕೆ ಮಾಡುತಿದ್ದ ಬಿಜೆಪಿ ಮಹಾರಾಷ್ಟ್ರ, ಮಧ್ಯಪ್ರದೇಶ ಹರಿಯಾಣ, ಬಿಹಾರ ಸೇರಿದಂತೆ ಇತರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡಿ ಜಾರಿಗೆ ತಂದಿದ್ದಾರೆ. ಚುನಾವಣೆ ಗೆಲ್ಲಲು ನಮ್ಮ ಮಾದರಿಯನ್ನು ಅನುಸರಿಸುತ್ತಿದ್ದಾರೆ. ತಮ್ಮದೇ ಆದ ಯೋಜನೆಗಳನ್ನು ಜಾರಿ ಮಾಡದೇ, ಕಾಂಗ್ರೆಸ್ ಕಾರ್ಯಕ್ರಮಗಳನ್ನು ಅನುಸರಿಸುತ್ತಿರುವುದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

“ನಮ್ಮ ಸಾಧನೆ ನಮಗೆ ತೃಪ್ತಿ ತಂದಿದೆ. ಗೃಹಲಕ್ಷ್ಮಿ ಮೂಲಕ 1.24 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರದಂತೆ 69,793 ಕೋಟಿ ವಿನಿಯೋಗಿಸಲಾಗಿದೆ. ಗೃಹಜ್ಯೋತಿಯಿಂದ 1.64 ಕೋಟಿ ಕುಟುಂಬಗಳು ಉಪಯೋಗ ಪಡೆದಿದ್ದು ಇದಕ್ಕೆ 26,115 ಕೋಟಿ ವೆಚ್ಚವಾಗಿದೆ.

ಶಕ್ತಿ ಯೋಜನೆ ಮೂಲಕ ಮಹಿಳೆಯರು 726 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿದ್ದು 18,943 ಕೋಟಿ ವೆಚ್ಚ ಮಾಡಲಾಗಿದೆ. ಅನ್ನಭಾಗ್ಯದಿಂದ 4.4 ಕೋಟಿ ಜನರಿಗೆ ಉಪಯೋಗವಾಗಿದ್ದು 11,821 ಕೋಟಿ ವೆಚ್ಚ. ಯುವನಿಧಿಗೆ 950 ಕೋಟಿ ವೆಚ್ಚವಾಗಿದೆ. ನಾವು ಕೊಟ್ಟ ಮಾತಿನಂತೆ ನಡೆದಿದ್ದೇವೆ” ಎಂದು ಹೇಳಿದರು.

“ನಾವು ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆ ನೀಡಿದ್ದು, ಕಂದಾಯ ಇಲಾಖೆಯಿಂದ ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರಿನಲ್ಲಿ ಈ ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಬೆಂಗಳೂರಿನ 23 ಲಕ್ಷ ಜನರಿಗೆ ಇ ಖಾತಾ, ತಾಂಡಾ ಹಾಗೂ ಬೇರೆ ಭಾಗದ ಜನರಿಗೆ ಹಕ್ಕುಪತ್ರಗಳನ್ನು ಉಚಿತವಾಗಿ ವಿತರಣೆ ಮಾಡಿದ್ದೇವೆ.

ಬೆಂಗಳೂರಿನಲ್ಲಿ 7 ಲಕ್ಷ ಆಸ್ತಿ ಮಾಲೀಕರು ತಮ್ಮ ಆಸ್ತಿಗಳನ್ನು ಬಿ ಖಾತಾಯಿಂದ ಎ ಖಾತಾಗೆ ಮಾರ್ಗಸೂಚಿ ದರದ ಕೇವಲ 2% ಶುಲ್ಕದಲ್ಲಿ ಪರಿವರ್ತನೆ ಮಾಡಿಕೊಡಲಾಗುತ್ತಿದೆ. ನನ್ನ ಇ ಖಾತಾ ಅಭಿಯಾನದಲ್ಲಿ 100 ದಿನಗಳಲ್ಲಿ ಅರ್ಜಿ ಹಾಕಿದವರಿಗೆ ಈ ರಿಯಾಯಿತಿ ನೀಡಲಾಗಿದ್ದು, ಈ ಶುಲ್ಕವನ್ನು ಪಾವತಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಇದು ನಮ್ಮ ಸರ್ಕಾರದ ಕ್ರಾಂತಿಕಾರಿ ತೀರ್ಮಾನ ಇದಾಗಿದೆ” ಎಂದರು.

ರಿಷಭ್ ಪಂತ್ʼಗೆ BCCI ಡಬಲ್ ಶಾಕ್: ODI ತಂಡದಿಂದ ಔಟ್, ಟೆಸ್ಟ್ ಉಪನಾಯಕತ್ವಕ್ಕೂ ಗುಡ್ ಬೈ

ಐಪಿಎಲ್ ಮುಕ್ತಾಯವಾದ ಬೆನ್ನಲ್ಲೇ ಟೀಂ ಇಂಡಿಯಾ ಅಫ್ಘಾನಿಸ್ತಾನ ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದ್ದು, ಈ ಸರಣಿಗಳಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಹೊಸ ತಂಡಗಳಲ್ಲಿ ಹಲವು ಯುವ ಆಟಗಾರರಿಗೆ ಅವಕಾಶ ನೀಡಲಾಗಿದ್ದು, ಕೆಲವು ಹಿರಿಯ ಆಟಗಾರರಿಗೆ ಗೇಟ್ ಪಾಸ್ ನೀಡಲಾಗಿದೆ.

ಈ ಪೈಕಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್‌ಗೆ ಬಿಸಿಸಿಐ ಡಬಲ್ ಶಾಕ್ ನೀಡಿದೆ. ಟೆಸ್ಟ್ ತಂಡದ ಉಪನಾಯಕತ್ವದಿಂದ ಅವರನ್ನು ಕೈಬಿಡಲಾಗಿದ್ದು, ಏಕದಿನ ತಂಡದಲ್ಲೂ ಅವಕಾಶ ನೀಡಿಲ್ಲ.

ಕಳೆದ ವರ್ಷ ಶುಭ್‌ಮನ್ ಗಿಲ್ ಗಾಯಗೊಂಡ ಹಿನ್ನೆಲೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರಿಷಭ್ ಪಂತ್ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ ಆ ಸರಣಿಯಲ್ಲಿ ಭಾರತ 0-2 ಅಂತರದಿಂದ ಸೋಲು ಅನುಭವಿಸಿತ್ತು. ಇದೀಗ ಪಂತ್ ಬದಲಿಗೆ ಕೆಎಲ್ ರಾಹುಲ್ ಅವರನ್ನು ಟೆಸ್ಟ್ ತಂಡದ ಉಪನಾಯಕನಾಗಿ ನೇಮಿಸಲಾಗಿದೆ.

ಇನ್ನೊಂದೆಡೆ ಕಳೆದ ಎರಡು ವರ್ಷಗಳಿಂದ ಏಕದಿನ ತಂಡದಲ್ಲಿದ್ದರೂ ಪಂತ್‌ಗೆ ಒಂದೇ ಒಂದು ಪಂದ್ಯದಲ್ಲೂ ಅವಕಾಶ ಸಿಕ್ಕಿರಲಿಲ್ಲ. ಮೊದಲ ಆಯ್ಕೆಯ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಸ್ಥಾನ ಉಳಿಸಿಕೊಂಡಿದ್ದರು. ಈಗ ಪಂತ್ ಅವರನ್ನು ಸಂಪೂರ್ಣವಾಗಿ ಏಕದಿನ ತಂಡದಿಂದ ಕೈಬಿಡಲಾಗಿದ್ದು, ಇಶಾನ್ ಕಿಶನ್‌ಗೆ ಎರಡನೇ ವಿಕೆಟ್ ಕೀಪರ್ ಆಗಿ ಅವಕಾಶ ನೀಡಲಾಗಿದೆ.

ರಿಷಭ್ ಪಂತ್ ಕೊನೆಯ ಬಾರಿಗೆ 2024ರ ಆಗಸ್ಟ್‌ನಲ್ಲಿ ಏಕದಿನ ಪಂದ್ಯವನ್ನಾಡಿದ್ದರು. ಬಳಿಕ ಅಭ್ಯಾಸದ ವೇಳೆ ಗಾಯಗೊಂಡ ಕಾರಣ 2025ರ ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಅವರ ಸ್ಥಾನಕ್ಕೆ ಧ್ರುವ್ ಜುರೆಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು.

ಇದುವರೆಗೆ ಪಂತ್ 31 ಏಕದಿನ ಪಂದ್ಯಗಳಲ್ಲಿ 27 ಇನ್ನಿಂಗ್ಸ್‌ ಆಡಿದ್ದು, 33.50 ಸರಾಸರಿ ಹಾಗೂ 106.21 ಸ್ಟ್ರೈಕ್‌ರೇಟ್‌ನಲ್ಲಿ 871 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ ನಾಲ್ಕು ಅರ್ಧಶತಕಗಳು ಸೇರಿವೆ.

IPL 2026: ಮುಂಬೈ ಇಂಡಿಯನ್ಸ್ʼಗೆ ಶಾಕ್: ಇಬ್ಬರು ಆಟಗಾರರು ಐಪಿಎಲ್ʼಗೆ ಅಲಭ್ಯ

ಐಪಿಎಲ್ 2026 ಟೂರ್ನಿಯಲ್ಲಿ ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ವಿಕೆಟ್ ಕೀಪರ್-ಬ್ಯಾಟರ್ ಕ್ವಿಂಟನ್ ಡಿ ಕಾಕ್ ಹಾಗೂ ಆಲ್ರೌಂಡರ್ ರಾಜ್ ಅಂಗದ್ ಬಾವಾ ಗಾಯದ ಕಾರಣದಿಂದ ಉಳಿದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಈ ಕುರಿತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ದಕ್ಷಿಣ ಆಫ್ರಿಕಾದ ಅನುಭವಿ ಆಟಗಾರ ಕ್ವಿಂಟನ್ ಡಿ ಕಾಕ್ ಕಳೆದ ತಿಂಗಳು ಎಡಗೈ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದರು. ಗಾಯದ ಪರಿಣಾಮ ಅವರು ಈಗಾಗಲೇ ಮುಂಬೈ ತಂಡದ ಕೊನೆಯ ಮೂರು ಪಂದ್ಯಗಳಿಂದ ಹೊರಗುಳಿದಿದ್ದರು.

ಇನ್ನೊಂದೆಡೆ, ಯುವ ಆಲ್ರೌಂಡರ್ ರಾಜ್ ಅಂಗದ್ ಬಾವಾ ಅವರು ಮೇ 14ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಬಲಗೈ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ವೈದ್ಯಕೀಯ ಪರೀಕ್ಷೆಯ ಬಳಿಕ ಅವರಿಗೆ ವಿಶ್ರಾಂತಿ ಅಗತ್ಯವಿರುವುದಾಗಿ ತಂಡದ ವೈದ್ಯಕೀಯ ವಿಭಾಗ ತಿಳಿಸಿದೆ.

ಮುಂಬೈ ಇಂಡಿಯನ್ಸ್ ತಂಡವು ಈ ಸೀಸನ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು, ಈಗಾಗಲೇ ಪ್ಲೇಆಫ್ ಪ್ರವೇಶದ ಅವಕಾಶ ಕಳೆದುಕೊಂಡಿದೆ. ತಂಡಕ್ಕೆ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇದ್ದು, ಇಂದು ಕೋಲ್ಕತ್ತಾದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ.

ಮುಖ್ಯ ಆಟಗಾರರ ಗಾಯದಿಂದ ಮುಂಬೈ ತಂಡದ ಸಮತೋಲನ ಮತ್ತಷ್ಟು ಹದಗೆಟ್ಟಿದ್ದು, ಉಳಿದ ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.

‘ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ’: ರಾಜ್ಯ ಸರ್ಕಾರದ ವಿರುದ್ಧ ರಮೇಶ್ ಜಿಗಜಿಣಗಿ ಕಿಡಿ

ವಿಜಯಪುರ: ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದ ವಿರುದ್ಧ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಅಭಿವೃದ್ಧಿಗಿಂತ ಭ್ರಷ್ಟಾಚಾರ ಮತ್ತು ಕುರ್ಚಿಗಾಗಿ ರಾಜಕಾರಣವೇ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮಹಿಳೆಯರಿಗೆ ಗ್ಯಾರಂಟಿ ಕೊಡುತ್ತೇವೆ ಎಂದು ಹೇಳಿ, ಅದೇ ಹಣವನ್ನು ಕುಟುಂಬದ ಗಂಡಸರ ಜೇಬಿನಿಂದ ವಸೂಲಿ ಮಾಡಲಾಗುತ್ತಿದೆ. ಸಾಮರ್ಥ್ಯ ಇದ್ದರೆ ಗ್ಯಾರಂಟಿ ಕೊಡಿ, ಇಲ್ಲದಿದ್ದರೆ ಸುಳ್ಳು ಭರವಸೆ ಬೇಡ’ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಕಳ್ಳತನ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅವರು ಆರೋಪಿಸಿದರು.

‘ಮೂರು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆ ಶೂನ್ಯ. ಶಾಸಕರಿಗೆ ಅನುದಾನ ಕೊಟ್ಟಿಲ್ಲ. ಪ್ರಧಾನಿ ಮೋದಿ ಮಂಜೂರು ಮಾಡಿದ ರಸ್ತೆಗಳಿಗೆ ಇವರು ಭೂಮಿಪೂಜೆ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಇನ್ನೂ ಮೂರು ವರ್ಷಗಳಲ್ಲಿ ಸರ್ಕಾರ ಮಾಡಿರುವುದು ಅಭಿವೃದ್ಧಿಯಲ್ಲ, ಕುರ್ಚಿಗಾಗಿ ಪರಸ್ಪರ ಗುದ್ದಾಟ ಮಾತ್ರ ಎಂದು ಹೇಳಿದ ಜಿಗಜಿಣಗಿ, ಸಿಎಂ ಸಿದ್ದರಾಮಯ್ಯ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದರು.

ಮಳೆ-ಗಾಳಿಗೆ ಬೆಳೆ ನಾಶ, ಮನೆಗಳಿಗೆ ಹಾನಿ: ದಾವಣಗೆರೆಯಲ್ಲಿ ಪ್ರಕೃತಿ ಆರ್ಭಟ

ದಾವಣಗೆರೆ: ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದ ರೈತರು ಹಾಗೂ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪಪ್ಪಾಯ ಬೆಳೆ ನೆಲಕಚ್ಚಿದರೆ, ಮರ ಬಿದ್ದು ಮನೆ ಹಾಗೂ ಶಾಲಾ ಕಟ್ಟಡಗಳಿಗೆ ಹಾನಿಯಾಗಿದೆ.

ಜಗಳೂರು ತಾಲೂಕಿನ ಸಿದ್ದಮ್ಮನಹಳ್ಳಿ ಮತ್ತು ದೊಣ್ಣೆಹಳ್ಳಿಯಲ್ಲಿ ರೈತರಾದ ತಿಪ್ಪೇಸ್ವಾಮಿ ಹಾಗೂ ಬಸಪ್ಪ ಅವರಿಗೆ ಸೇರಿದ ಎರಡು ಎಕರೆ ಪಪ್ಪಾಯ ತೋಟ ಸಂಪೂರ್ಣ ಹಾನಿಗೊಳಗಾಗಿದೆ. ಗಾಳಿ-ಮಳೆಯ ಅಬ್ಬರಕ್ಕೆ ಗಿಡಗಳು ನೆಲಕ್ಕುರುಳಿದ್ದು, ರೈತರು ಕಂಗಾಲಾಗಿದ್ದಾರೆ.

ಉದ್ದಘಟ್ಟ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕೊಠಡಿ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ಶೀಟ್‌ಗಳು ಒಡೆದು ಹೋಗಿವೆ. ಅಲ್ಲದೆ ಶಾಲೆಯ ಅಡುಗೆ ಕೊಠಡಿ ಗೋಡೆಯಲ್ಲೂ ಬಿರುಕು ಕಾಣಿಸಿಕೊಂಡಿದೆ.

ಭರಮಸಮುದ್ರದಲ್ಲಿ ಮರ ಬಿದ್ದು ಮನೆಯೊಂದು ಜಖಂಗೊಂಡಿದ್ದು, ಹುಚ್ಚವ್ವನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಆಕಳೊಂದು ಸಾವನ್ನಪ್ಪಿದೆ.

ಕೆಲ ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ನೀರು ಹೊರಹಾಕಲು ಪರದಾಡಿದರು. ಅಕಾಲಿಕ ಮಳೆಯಿಂದ ರೈತರು ಸರ್ಕಾರ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

8 ಆಸ್ಪತ್ರೆಗಳಲ್ಲಿ ಸಿಗದ ಬೆಡ್: 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಗಾಯಾಳು

ಚಿಕ್ಕಮಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನೊಬ್ಬನಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಒಂದು ದಿನಪೂರ್ತಿ ಆಂಬುಲೆನ್ಸ್‌ನಲ್ಲೇ ಅಲೆದಾಡಬೇಕಾದ ಮನಕಲಕುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಅರೆನೂರು ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ರವಿ ಎಂಬ ಯುವಕನನ್ನು ಮೊದಲು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರೆಫರ್ ಮಾಡಿದ್ದರು.

ಆದರೆ ಮಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ಸರ್ಜನ್ ಲಭ್ಯವಿಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಲಾಗಿದೆ ಎನ್ನಲಾಗಿದೆ. ಮತ್ತೊಂದು ಆಸ್ಪತ್ರೆಯಲ್ಲಿ 80 ಸಾವಿರ ರೂ. ಮುಂಗಡ ಹಣ ಕೇಳಲಾಗಿದೆ.

ಬಡ ಕೂಲಿ ಕಾರ್ಮಿಕ ಕುಟುಂಬಕ್ಕೆ ಹಣ ಒದಗಿಸಲು ಸಾಧ್ಯವಾಗದೇ, ಗಾಯಾಳುವನ್ನು ಮತ್ತೆ ಆಲ್ದೂರು ಗ್ರಾಮಕ್ಕೆ ಕರೆತಂದು ರಸ್ತೆ ಬದಿಯಲ್ಲಿ ಆಂಬುಲೆನ್ಸ್‌ನಲ್ಲೇ ನಿಲ್ಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಪೋಷಕರು ಮಗನಿಗಾಗಿ ಅಸಹಾಯಕರಾಗಿ ಕಣ್ಣೀರು ಹಾಕುತ್ತಿದ್ದ ದೃಶ್ಯ ಸ್ಥಳೀಯರ ಮನಕಲಕಿದೆ. ಬಳಿಕ ಗ್ರಾಮಸ್ಥರ ಸಲಹೆ ಮೇರೆಗೆ ಯುವಕನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಚಿಕ್ಕಮಗಳೂರಿನಲ್ಲಿ ವೈದ್ಯಕೀಯ ಕಾಲೇಜು ಇದ್ದರೂ ಗಂಭೀರ ರೋಗಿಗಳಿಗೆ ಚಿಕಿತ್ಸೆ ಸಿಗದಿರುವುದು ಆರೋಗ್ಯ ವ್ಯವಸ್ಥೆಯ ವೈಫಲ್ಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಲಯ್ಯ ಎದುರು ಮಂಚು ಮನೋಜ್ ಖಡಕ್ ವಿಲನ್: ಟಾಲಿವುಡ್‌ನಲ್ಲಿ ಹೈವೋಲ್ಟೇಜ್ ಕಾಂಬಿನೇಷನ್

ಹೈದರಾಬಾದ್: ನಂದಮೂರಿ ಬಾಲಕೃಷ್ಣ ಅವರ 111ನೇ ಸಿನಿಮಾದ ಬಗ್ಗೆ ಭಾರೀ ನಿರೀಕ್ಷೆ ಹುಟ್ಟಿಕೊಂಡಿರುವ ಬೆನ್ನಲ್ಲೇ, ಚಿತ್ರತಂಡ ಮತ್ತೊಂದು ದೊಡ್ಡ ಅಪ್‌ಡೇಟ್ ನೀಡಿದೆ. ನಟ ಮಂಚು ಮನೋಜ್ ಈ ಸಿನಿಮಾದಲ್ಲಿ ಮುಖ್ಯ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಗೋಪಿಚಂದ್ ಮಲಿನೇನಿ ನಿರ್ದೇಶನದ ಈ ಬೃಹತ್ ಆಕ್ಷನ್ ಚಿತ್ರವನ್ನು ವೆಂಕಟ ಸತೀಶ್ ಕಿಲಾರು ನಿರ್ಮಿಸುತ್ತಿದ್ದು, ಮಂಚು ಮನೋಜ್ ಪಾತ್ರಕ್ಕೆ ವಿಶೇಷ ತೂಕ ನೀಡಲಾಗಿದೆ ಎನ್ನಲಾಗಿದೆ. ಚಿತ್ರತಂಡದ ಪ್ರಕಾರ, ಮನೋಜ್ ಪಾತ್ರ ಅತ್ಯಂತ ಕ್ರೂರ ಮತ್ತು ಪವರ್‌ಫುಲ್ ಆಗಿದ್ದು, ಬಾಲಯ್ಯ ಜೊತೆಗಿನ ಅವರ ಮುಖಾಮುಖಿ ಸಿನಿಮಾದ ಹೈಲೈಟ್ ಆಗಲಿದೆ.

ಜನ್ಮದಿನದಂದು ಈ ಘೋಷಣೆ ಹೊರಬಿದ್ದ ಹಿನ್ನೆಲೆ ಮಂಚು ಮನೋಜ್ ಅಭಿಮಾನಿಗಳ ಸಂಭ್ರಮ ಮತ್ತಷ್ಟು ಹೆಚ್ಚಾಗಿದೆ. ಈ ಪಾತ್ರಕ್ಕಾಗಿ ಮನೋಜ್ ದೇಹವನ್ನು ಮತ್ತಷ್ಟು ಫಿಟ್ ಮಾಡಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್‌ಗೆ ಜಾಯಿನ್ ಆಗಲಿದ್ದಾರೆ.

ಬಾಲಕೃಷ್ಣ ಮತ್ತು ಮಂಚು ಮನೋಜ್ ನಡುವೆ ಈಗಾಗಲೇ ಉತ್ತಮ ಸ್ನೇಹ ಸಂಬಂಧವಿದೆ. ‘ಊ ಕೊಡತಾರಾ ಉಲಿಕ್ಕಿ ಪಡತಾರಾ’ ಚಿತ್ರದಲ್ಲಿ ಬಾಲಯ್ಯ ವಿಶೇಷ ಪಾತ್ರದಲ್ಲಿ ನಟಿಸಿ ಮನೋಜ್‌ಗೆ ಬೆಂಬಲ ನೀಡಿದ್ದರು. ಇದೀಗ ಇಬ್ಬರೂ ಎದುರುಬದಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರಕ್ಕೆ ಮತ್ತಷ್ಟು ಕ್ರೇಜ್ ತಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಮಂಚು ಮನೋಜ್, ‘ಬಾಲಯ್ಯ ಅವರೊಂದಿಗೆ ನಟಿಸುವುದು ನನ್ನ ಕನಸಾಗಿತ್ತು. ಈ ಅವಕಾಶ ನನ್ನ ಜೀವನದ ಅತ್ಯಂತ ವಿಶೇಷ ಗಿಫ್ಟ್’ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ನೆಗೆಟಿವ್ ಪಾತ್ರಗಳ ಮೂಲಕ ಹೊಸ ಇಮೇಜ್ ಪಡೆದುಕೊಂಡಿರುವ ಮನೋಜ್, ಇದೀಗ ಮತ್ತೊಮ್ಮೆ ದೊಡ್ಡ ಮಟ್ಟದ ಖಳನಾಯಕನಾಗಿ ಮಿಂಚಲು ಸಜ್ಜಾಗಿದ್ದಾರೆ.

ಫ್ಯಾನ್ಸ್ ಮೇಲೆ ರೇಗಿದ ಸೆಕ್ಯೂರಿಟಿ: ಎಲ್ಲರೆದುರೇ ಸಿಬ್ಬಂದಿಗೆ ಬುದ್ಧಿ ಹೇಳಿದ ಜೂನಿಯರ್ ಎನ್ಟಿಆರ್

ಹೈದರಾಬಾದ್: ಅಭಿಮಾನಿಗಳ ಮೇಲೆ ದುರ್ವರ್ತನೆ ತೋರಿದ ತಮ್ಮ ಭದ್ರತಾ ಸಿಬ್ಬಂದಿಯನ್ನು ಜೂನಿಯರ್ ಎನ್ಟಿಆರ್ ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಜನ್ಮದಿನದ ಪ್ರಯುಕ್ತ ಮಂಗಳವಾರ ರಾತ್ರಿ ಜೂನಿಯರ್ ಎನ್ಟಿಆರ್ ನಿವಾಸದ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಮಧ್ಯರಾತ್ರಿ ಮನೆಯ ಹೊರಗೆ ಬಂದ ತಾರಕ್, ಬ್ಯಾರಿಕೇಡ್ ಹಿಂದಿನಿಂದಲೇ ಅಭಿಮಾನಿಗಳಿಗೆ ಕೈಬೀಸಿ ಶುಭಾಶಯ ಸ್ವೀಕರಿಸಿದರು.

ಈ ವೇಳೆ ಕೆಲ ಅಭಿಮಾನಿಗಳು ಮುಂದೆ ಬರಲು ಯತ್ನಿಸಿದಾಗ, ಸೆಕ್ಯೂರಿಟಿ ಸಿಬ್ಬಂದಿ ಅವರನ್ನು ಬಲವಂತವಾಗಿ ಹಿಂದಕ್ಕೆ ತಳ್ಳಲು ಮತ್ತು ಗದರಿಸಲು ಆರಂಭಿಸಿದರು. ಅಭಿಮಾನಿಗಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡ ತಾರಕ್ ತಕ್ಷಣವೇ ಮಧ್ಯಪ್ರವೇಶಿಸಿದ್ದಾರೆ.

ಮುಖ್ಯ ಭದ್ರತಾ ಸಿಬ್ಬಂದಿಯನ್ನು ಕರೆದು, ‘ನೀವೇ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದೀರಿ’ ಎಂದು ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಟನ ಈ ನಡೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದು, ‘ತಾರಕ್ ಯಾವತ್ತೂ ಫ್ಯಾನ್ಸ್ ಪರ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡಲಾಗುತ್ತಿದೆ.

ಇದೇ ವೇಳೆ ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಚಿತ್ರದ ಗ್ಲಿಂಪ್ಸ್ ಕೂಡ ಬಿಡುಗಡೆಗೊಂಡಿದ್ದು, ಅದರಲ್ಲಿ ತಾರಕ್ ಅವರ ರಗಡ್ ಲುಕ್ ಸಖತ್ ವೈರಲ್ ಆಗಿದೆ. ಅಫೀಮು ದಂಧೆಯ ಹಿನ್ನೆಲೆಯ ಕಥೆ ಹೊಂದಿರುವ ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಮೆಲೋನಿಗೆ ‘ಮೆಲೋಡಿ’ ಚಾಕೊಲೇಟ್ ಉಡುಗೊರೆ ಕೊಟ್ಟ ಮೋದಿ! ವಿಡಿಯೋ ವೈರಲ್

ರೋಮ್: ಪ್ರಧಾನಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಭಾರತದ ಪ್ರಸಿದ್ಧ ‘ಮೆಲೋಡಿ’ ಚಾಕೋಲೇಟ್ ಉಡುಗೊರೆಯಾಗಿ ನೀಡಿ ಗಮನ ಸೆಳೆದಿದ್ದಾರೆ. ಈ ಸಂದರ್ಭದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

ಪ್ರಧಾನಿ ಮೋದಿ ಮತ್ತು ಜಾರ್ಜಿಯಾ ಮೆಲೋನಿ ನಡುವಿನ ಸ್ನೇಹವನ್ನು ಸಾಮಾಜಿಕ ಜಾಲತಾಣ ಬಳಕೆದಾರರು ‘ಮೆಲೋಡಿ’ ಎಂದು ಕರೆಯುತ್ತಿದ್ದು, ಇದೀಗ ಅದೇ ಹೆಸರಿನ ಚಾಕೋಲೇಟ್ ಉಡುಗೊರೆ ನೀಡುವ ಮೂಲಕ ಮೋದಿ ಮತ್ತೊಮ್ಮೆ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಈ ವೀಡಿಯೋವನ್ನು ಜಾರ್ಜಿಯಾ ಮೆಲೋನಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಉಡುಗೊರೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಸದ್ಯ ಈ ವೀಡಿಯೋ ಲಕ್ಷಾಂತರ ಮಂದಿಯ ಗಮನ ಸೆಳೆದಿದ್ದು, ಸುಮಾರು 19.6 ಮಿಲಿಯನ್ ವೀಕ್ಷಣೆಗಳನ್ನು ಪಡೆದಿದೆ.

ಪ್ರಧಾನಿ ಮೋದಿ ರೋಮ್‌ಗೆ ಆಗಮಿಸಿದ ವೇಳೆ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದರು. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೆಲೋನಿ, “ವೆಲ್ಕಮ್ ಟು ರೋಮ್, ಮೈ ಫ್ರೆಂಡ್” ಎಂದು ಬರೆದು ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ರೋಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೆಲೋನಿ ಜೊತೆ ಭೋಜನ ಕೂಟದಲ್ಲಿ ಭಾಗವಹಿಸಿದ್ದಾಗಿ ತಿಳಿಸಿದ್ದಾರೆ. ಬಳಿಕ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿರುವುದಾಗಿ ಹೇಳಿದ ಅವರು, ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ: ಆರೋಪಿ ಶಿಕ್ಷೆ ಖಾಯಂಗೊಳಿಸಿದ ಹೈಕೋರ್ಟ್

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ವಿಧಿಸಲಾಗಿದ್ದ ಒಂದು ವರ್ಷದ ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಜೊತೆಗೆ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

ಆರೋಪಿಗಳಾದ ಮಂಜನಾಯ್ಕ ಹಾಗೂ ಶಂಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದ ಭಾರಿ ಪ್ರಮಾಣದ ಮದ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ದಾಖಲೆಗಳನ್ನು ಆರೋಪಿಗಳು ಒದಗಿಸಿಲ್ಲ. ಅಲ್ಲದೆ ಸಾಕ್ಷಿಗಳ ಹೇಳಿಕೆಗಳು ಸಹ ಪ್ರಾಸಿಕ್ಯೂಷನ್ ಪರವಾಗಿಯೇ ಸಾಬೀತಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಸ್ತೆಯಲ್ಲಿ ಸಂಚರಿಸುವ ವಾಹನಗಳ ತಪಾಸಣೆ ನಡೆಸಲು ಪೊಲೀಸರಿಗೆ ಪ್ರತ್ಯೇಕ ಸರ್ಚ್ ವಾರಂಟ್ ಕಡ್ಡಾಯವಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಹಾಗೂ ನ್ಯಾಯಾಲಯದಲ್ಲಿ ಸಾಕ್ಷ್ಯ ನೀಡಿದ ಸಾಕ್ಷಿಗಳಿಗೆ ಆರೋಪಿಗಳ ವಿರುದ್ಧ ಯಾವುದೇ ವೈಯಕ್ತಿಕ ದ್ವೇಷವಿಲ್ಲ. ಹೀಗಾಗಿ ಆರೋಪಿಗಳನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗಿದೆ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಜೊತೆಗೆ ಶಿಕ್ಷೆಗೆ ಗುರಿಯಾದ ಆರೋಪಿಗಳು 2026ರ ಜೂನ್ 5ರೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಬೇಕು ಎಂದು ಆದೇಶಿಸಲಾಗಿದೆ.

ಪ್ರಕರಣದ ಹಿನ್ನೆಲೆ

2014ರ ಸೆಪ್ಟೆಂಬರ್ 14ರಂದು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹರಪನಹಳ್ಳಿ ಸಮೀಪ ಮೋಟಾರ್‌ಸೈಕಲ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು ₹13,200 ಮೌಲ್ಯದ ರಾಜಾ ವಿಸ್ಕಿ ಪ್ಯಾಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿತ್ತು.

ಬಳಿಕ ತನಿಖೆ ನಡೆಸಿದ ಪೊಲೀಸರು ಕರ್ನಾಟಕ ಅಬಕಾರಿ ಕಾಯ್ದೆಯ ಸೆಕ್ಷನ್ 32 ಮತ್ತು 34ರಡಿ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಅರಸೀಕೆರೆಯ ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗಳಿಗೆ ತಲಾ ಒಂದು ವರ್ಷದ ಸರಳ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿತ್ತು.

ಈ ತೀರ್ಪನ್ನು ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಆರೋಪಿಗಳ ಪರ ವಕೀಲರು, ದಾಳಿಗೂ ಮುನ್ನ ಪೊಲೀಸರು ಸರ್ಚ್ ವಾರಂಟ್ ಪಡೆಯದ ಕಾರಣ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ವಾದಿಸಿದ್ದರು. ಆದರೆ ಈ ವಾದವನ್ನು ಹೈಕೋರ್ಟ್ ತಳ್ಳಿ ಹಾಕಿದೆ.

error: Content is protected !!