ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ತಮ್ಮ ಕಾನೂನು ಹೋರಾಟಕ್ಕೆ ಹೊಸ ದಿಕ್ಕು ನೀಡಿದ್ದಾರೆ. ಪ್ರಕರಣದಲ್ಲಿ ವಾದಿಸುತ್ತಿದ್ದ ವಕೀಲರನ್ನು ಬದಲಾಯಿಸಿರುವ ಅವರು, ಹೊಸ ವಕೀಲರ ಮೂಲಕ ಸುಪ್ರೀಂ ಕೋರ್ಟ್ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆಗೆ ಸಂಬಂಧಿಸಿ 60 ಸಾಕ್ಷಿಗಳ ಹೇಳಿಕೆಗಳನ್ನು ಒಂದು ವರ್ಷದೊಳಗೆ ದಾಖಲಿಸಿ ವಿಚಾರಣೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ನಿರ್ದೇಶನ ನೀಡಿತ್ತು. ಇದೀಗ ಆ ಗಡುವು ಕಾರ್ಯಸಾಧ್ಯವಲ್ಲ ಎಂಬ ವಾದದೊಂದಿಗೆ ಅವಧಿಯನ್ನು ಮರುಪರಿಶೀಲಿಸಿ ಕಡಿಮೆ ಅಥವಾ ಪರಿಷ್ಕರಿಸುವಂತೆ ಮನವಿ ಮಾಡಲಾಗಿದೆ.
ಇದೇ ವೇಳೆ ದರ್ಶನ್ ಸೇರಿದಂತೆ ಲಕ್ಷ್ಮಣ್ ಹಾಗೂ ನಾಗರಾಜ್ ಪರವಾಗಿ ವಾದಿಸುತ್ತಿದ್ದ ವಕೀಲ ಸುನೀಲ್ ಕುಮಾರ್ ಅವರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಈ ಕುರಿತು 59ನೇ ಸೆಷನ್ಸ್ ನ್ಯಾಯಾಲಯಕ್ಕೆ ಮೆಮೋ ಸಲ್ಲಿಸಿರುವ ಅವರು, ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಚಾರಣೆ ವೇಳೆ ನ್ಯಾಯಾಲಯ, ಹಿರಿಯ ವಕೀಲ ಹಷ್ಮತ್ ಪಾಷಾ ಅವರು ದರ್ಶನ್ ಪರವಾಗಿ ಹೊಸದಾಗಿ ವಕಾಲತ್ತು ಸಲ್ಲಿಸಿರುವುದನ್ನು ಉಲ್ಲೇಖಿಸಿತು. ಪ್ರಕರಣದ ಎಲ್ಲಾ ದಾಖಲೆಗಳನ್ನು ನೂತನ ವಕೀಲರಿಗೆ ಹಸ್ತಾಂತರಿಸುವಂತೆ ಕೋರ್ಟ್ ಸೂಚನೆ ನೀಡಿದಾಗ, ದಾಖಲೆಗಳನ್ನು ಈಗಾಗಲೇ ಕುಟುಂಬಸ್ಥರ ಮೂಲಕ ಹಸ್ತಾಂತರಿಸಲಾಗಿದೆ ಎಂದು ಸುನೀಲ್ ಕುಮಾರ್ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
ವಕೀಲರ ಬದಲಾವಣೆ, ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಪುನರ್ ಪರಿಶೀಲನಾ ಅರ್ಜಿ ಹಾಗೂ ವಿಚಾರಣಾ ಗಡುವಿನ ಪ್ರಶ್ನೆ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಮತ್ತೊಮ್ಮೆ ರಾಜ್ಯದ ಗಮನ ಸೆಳೆದಿದೆ.

