ವಿಜಯಸಾಕ್ಷಿ ಸುದ್ದಿ, ಗದಗ: ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ರಾಜ್ಯದ ಅತ್ಯುತ್ತಮ ಕಾಲೇಜುಗಳ ಸಾಲಿನಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿ. ಅದರಲ್ಲೂ 2025–26ನೇ ಶೈಕ್ಷಣಿಕ ಸಾಲಿನ ರಾಜ್ಯದ ಎಲ್ಲ ಸರಕಾರಿ ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಸಿದ್ಧಲಿಂಗ ನಗರ, ಗದಗ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಕಾಲೇಜಿನ ಬೆಳ್ಳಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಳ್ಳಿ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬೆಳ್ಳಿ ಹಬ್ಬದ ಪೂರ್ವತಯಾರಿಗಾಗಿ ಪ್ರತಿ ಶನಿವಾರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗುವುದು. ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು, ಕಾಲೇಜಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿರುವ ಎಲ್ಲ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಬೆಳ್ಳಿ ಹಬ್ಬದ ಪೂರ್ವತಯಾರಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ರಾಜ್ಯದ ಮಾದರಿ ಕಾಲೇಜಿನ 25 ವರ್ಷಗಳ ಶೈಕ್ಷಣಿಕ ಸಾಧನೆಯನ್ನು ಒಗ್ಗಟ್ಟಿನಿಂದ ಸಂಭ್ರಮಿಸೋಣ ಎಂದು ಅವರು ಹೇಳಿದರು.
ಸಭೆಯಲ್ಲಿ ವಿಶ್ರಾಂತ ಪ್ರಾಚಾರ್ಯ ಚಂದ್ರಶೇಖರ ವಸ್ತ್ರದ, ಪ್ರಾಚಾರ್ಯೆ ಪೂರ್ಣಿಮಾ ಹೊಸಮನಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾಲೇಜು 25 ವರ್ಷಗಳ ಶೈಕ್ಷಣಿಕ ಪಯಣದಲ್ಲಿ ಸಾಧಿಸಿರುವ ಯಶಸ್ಸು ಹಾಗೂ ಹೆಗ್ಗಳಿಕೆಯನ್ನು ಸ್ಮರಿಸಿ, ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸೋಣ. ಹಳೆಯ ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ಮಾಜಿ ಪ್ರಾಚಾರ್ಯರು, ಉಪನ್ಯಾಸಕರು ಎಲ್ಲರೂ ಕೈಜೋಡಿಸಬೇಕು.
— ಸಿದ್ಧಲಿಂಗೇಶ್ವರ ಪಾಟೀಲ, ಮಾಜಿ ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ

