Home Blog

ಪಶ್ಚಿಮ ಬಂಗಾಳ ಚುನಾವಣೆ ವೇಳೆ ಮತಗಟ್ಟೆಗೆ ಆಗಮಿಸಿದ ಆನೆ!

0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಯ ವೇಳೆ ಅಚ್ಚರಿಯ ಘಟನೆ ನಡೆದಿದೆ.

ಝಾರ್ಗ್ರಾಮ್ ಜಿಲ್ಲೆಯ ಮತಗಟ್ಟೆಯೊಂದಕ್ಕೆ ಕಾಡಾನೆಯೊಂದು ಆಗಮಿಸಿದ್ದು ಮತದಾರರು ಹಾಗೂ ಅಧಿಕಾರಿಗಳು ಕೆಲಕಾಲ ಆತಂಕಗೊಂಡಿದ್ದಾರೆ.

ಝಾರ್ಗ್ರಾಮ್ ಜಿಲ್ಲೆಯ ಜಿತುಸೋಲ್ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ಬಳಿ ‘ರಾಮಲಾಲ್’ ಎಂಬ ಹೆಸರಿನ ಕಾಡಾನೆ ಮತದಾನ ಆರಂಭಕ್ಕೂ ಮುನ್ನವೇ ಕಾಣಿಸಿಕೊಂಡಿತ್ತು. ಮತಗಟ್ಟೆ ಸಾಲಿನ ಬಳಿ ಆನೆ ಸುಳಿದಾಡಿದ ಘಟನೆ ಸ್ಥಳದಲ್ಲಿ ಕ್ಷಣಕಾಲ ಗೊಂದಲಕ್ಕೆ ಕಾರಣವಾಯಿತು.

ಆನೆ ಸಮೀಪದಲ್ಲಿದ್ದ ಸರಕು ಸಾಗಣೆ ವಾಹನವನ್ನು ಕುತೂಹಲದಿಂದ ಗಮನಿಸಿದರೂ ಯಾರಿಗೂ ಹಾನಿ ಮಾಡದೆ ಶಾಂತವಾಗಿ ಅಲ್ಲಿಂದ ತೆರಳಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಲೋಧಾಶುಲಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಆನೆಯನ್ನು ಸುರಕ್ಷಿತವಾಗಿ ಅರಣ್ಯದ ಕಡೆಗೆ ಕಳುಹಿಸಿದ್ದಾರೆ. ನಂತರ ಮತದಾನ ಪ್ರಕ್ರಿಯೆ ಯಾವುದೇ ಅಡಚಣೆಯಿಲ್ಲದೆ ಮುಂದುವರಿದಿದೆ.

ಜಂಗಲ್‌ಮಹಲ್ ಪ್ರದೇಶದಲ್ಲಿ ಮಾನವ–ಪ್ರಾಣಿ ಸಂಘರ್ಷ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ವಿಶೇಷ 15 ಸದಸ್ಯರ ತಂಡ ಹಾಗೂ ‘ಐರಾವತ’ ವಾಹನವನ್ನು ನಿಯೋಜಿಸಿದೆ.

ಬೆಂಗಳೂರಿನ ರಾಂಪುರದಲ್ಲಿ ಭೀಕರ ಅಗ್ನಿ ದುರಂತ: 10 ಕಿಮೀ ವ್ಯಾಪ್ತಿಗೆ ದಟ್ಟ ಹೊಗೆ!

ಬೆಂಗಳೂರು: ನಗರದ ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಬಳಿ ಭಾರೀ ಅಗ್ನಿ ದುರಂತ ಸಂಭವಿಸಿದೆ.

ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದೆ.

ಬೆಂಕಿಯ ತೀವ್ರತೆಯಿಂದ ಸುಮಾರು 10 ಕಿಲೋಮೀಟರ್ ವ್ಯಾಪ್ತಿವರೆಗೆ ದಟ್ಟ ಹೊಗೆ ಆವರಿಸಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಕಿಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದಾಂಧಲೆ: ದೈವದ ಪರಿಕರಗಳನ್ನ ಚೆಲ್ಲಾಪಿಲ್ಲಿ ಮಾಡಿದ ಪದವೀಧರ!

ಮಂಗಳೂರು: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಡರಾತ್ರಿ ಅಮಾನವೀಯ ಘಟನೆ ನಡೆದಿದೆ.

ವ್ಯಕ್ತಿಯೋರ್ವ ದೇಗುಲಕ್ಕೆ ನುಗ್ಗಿ ದಾಂಧಲೆ ನಡೆಸಿ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸ್ಥಳೀಯ ನಿವಾಸಿ ಅಜೇಯ್ ಎಂಬಾತ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮೊದಲು ದೇವಸ್ಥಾನದ ಕೆರೆಗೆ ಹಾರಿದ ಆತ, ನಂತರ ಹೆಂಚು ತೆಗೆದು ಒಳನುಗ್ಗಿದ್ದಾನೆ. ದೇಗುಲದ ಒಳಗಿದ್ದ ಪೂಜಾ ಪರಿಕರಗಳು ಹಾಗೂ ದೈವದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ. ಬಳಿಕ ದೇವರ ಮೂರ್ತಿಯನ್ನು ಹಾನಿಗೊಳಿಸಿದ್ದಾನೆ ಎಂದು ತಿಳಿದುಬಂದಿದೆ.

ಅಜೇಯ್ ಇಂಜಿನಿಯರಿಂಗ್ ಪದವೀಧರನಾಗಿದ್ದು, ಮಾನಸಿಕ ಅಸ್ವಸ್ಥತೆಯ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬೇಸಿಗೆಯಲ್ಲಿ ಕಲ್ಲಂಗಡಿ ಸೇವನೆ ಕಿಡ್ನಿಗೆ ಹಾನಿಕಾರಕವೇ? ತಜ್ಞರ ಸ್ಪಷ್ಟನೆ ಹೀಗಿದೆ!

0

ಬೇಸಿಗೆ ಕಾಲದಲ್ಲಿ ದೇಹವನ್ನು ತಂಪಾಗಿಡಲು ಹಾಗೂ ನೀರಿನ ಕೊರತೆಯನ್ನು ತಪ್ಪಿಸಲು ಕಲ್ಲಂಗಡಿ ಹಣ್ಣು ಬಹುಜನಪ್ರಿಯ.

ಸುಮಾರು 90% ನೀರಿನ ಅಂಶ ಹೊಂದಿರುವ ಈ ಹಣ್ಣು ದೇಹವನ್ನು ಹೈಡ್ರೇಟ್ ಆಗಿ ಇಡಲು ಸಹಾಯ ಮಾಡುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಸರಿಯಾದ ಪ್ರಮಾಣದಲ್ಲಿ ಕಲ್ಲಂಗಡಿ ಸೇವಿಸುವುದು ಕಿಡ್ನಿ (Kidney) ಆರೋಗ್ಯಕ್ಕೆ ಹಾನಿಕಾರಕವಲ್ಲ. ಇದರಲ್ಲಿ ವಿಟಮಿನ್ C, ಪೊಟ್ಯಾಸಿಯಮ್ ಹಾಗೂ ಕೆಲವು ಅಮಿನೋ ಆಮ್ಲಗಳು ಇದ್ದು ದೇಹದ ಸಮತೋಲನಕ್ಕೆ ಸಹಕಾರಿ.

ಕಿಡ್ನಿ ಸಮಸ್ಯೆ ಹೊಂದಿರುವವರು ವೈದ್ಯರ ಸಲಹೆಯೊಂದಿಗೆ ಮಿತ ಪ್ರಮಾಣದಲ್ಲಿ ಕಲ್ಲಂಗಡಿ ಹಣ್ಣು ಸೇವಿಸಬಹುದು ಎಂದು ತಜ್ಞರು ಸೂಚಿಸುತ್ತಾರೆ. ಆದರೆ ಗಂಭೀರ ಕಿಡ್ನಿ ಕಾಯಿಲೆ ಇರುವವರು ವೈದ್ಯರ ಮಾರ್ಗದರ್ಶನ ತಪ್ಪದೇ ಪಾಲಿಸಬೇಕು.

ಬಹುಜನರು ಕಲ್ಲಂಗಡಿ ಹಣ್ಣು ಕಿಡ್ನಿಯನ್ನು “ಡಿಟಾಕ್ಸ್” ಮಾಡುತ್ತದೆ ಎಂದು ನಂಬುತ್ತಾರೆ. ಆದರೆ ವೈದ್ಯಕೀಯವಾಗಿ ನೋಡಿದರೆ, ಕಿಡ್ನಿಗಳು ಸ್ವತಃ ದೇಹದ ವಿಷಕಾರಿ ಅಂಶಗಳನ್ನು ಹೊರಹಾಕುವ ಸಾಮರ್ಥ್ಯ ಹೊಂದಿವೆ. ಕಲ್ಲಂಗಡಿ ಕೇವಲ ಹೈಡ್ರೇಶನ್ ನೀಡುತ್ತದೆ.

ಆದರೆ ಅತಿಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ ಮಧುಮೇಹ  ಇರುವವರು ಎಚ್ಚರಿಕೆ ವಹಿಸುವುದು ಅಗತ್ಯ.

ಪೆಟ್ರೋಲ್–ಡೀಸೆಲ್ ದರ ಏರಿಕೆ ಇಲ್ಲ: ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

0

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 25–28 ರೂಪಾಯಿ ಏರಿಕೆಯಾಗಲಿದೆ ಎಂಬ ವರದಿಗಳನ್ನು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಳ್ಳಿಹಾಕಿದ್ದು, ಇಂತಹ ಯಾವುದೇ ದರ ಏರಿಕೆ ಕುರಿತು ಚಿಂತನೆ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವಾಲಯ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳದ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗಳು ತಪ್ಪು ಮತ್ತು ದಾರಿತಪ್ಪಿಸುವಂತಿವೆ ಎಂದು ತಿಳಿಸಿದೆ. ಇಂತಹ ವರದಿಗಳು ನಾಗರಿಕರಲ್ಲಿ ಅನಗತ್ಯ ಭೀತಿ ಹುಟ್ಟಿಸುವ ಉದ್ದೇಶ ಹೊಂದಿವೆ ಎಂದು ಸರ್ಕಾರ ಹೇಳಿದೆ.

ಕೆಲವು ವರದಿಗಳಲ್ಲಿ ಏಪ್ರಿಲ್ 29ರಂದು ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಇಂಧನ ದರ ಏರಿಕೆಯಾಗಬಹುದು ಎಂದು ಹೇಳಲಾಗಿತ್ತು. ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 120 ಡಾಲರ್ ಸಮೀಪಿಸುತ್ತಿರುವ ಹಿನ್ನೆಲೆ ಲೀಟರ್‌ಗೆ 25–28 ರೂಪಾಯಿ ಹೆಚ್ಚಳವಾಗಬಹುದು ಎಂಬ ಅಂದಾಜುಗಳನ್ನೂ ವ್ಯಕ್ತಪಡಿಸಲಾಗಿತ್ತು. ಆದರೆ, ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗದ ಏಕೈಕ ದೇಶ ಭಾರತವೆಂದು ಸರ್ಕಾರ ಪುನರುಚ್ಚರಿಸಿದೆ. ಮಧ್ಯಪ್ರಾಚ್ಯದ ಸಂಘರ್ಷದ ನಡುವೆಯೂ ನಾಗರಿಕರನ್ನು ಬೆಲೆ ಏರಿಕೆಯಿಂದ ರಕ್ಷಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದೆ.

ಇನ್ನೂ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿಮೆ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ದೇಶದ ಎಲ್ಲಾ ರಿಫೈನರಿಗಳು ಸಾಕಷ್ಟು ಕಚ್ಚಾ ತೈಲವನ್ನು ಹೊಂದಿದ್ದು, ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ ಇಂಧನ ಸರಬರಾಜು ಸಮರ್ಪಕವಾಗಿರುವುದರಿಂದ ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ಸಚಿವಾಲಯ ದೃಢಪಡಿಸಿದೆ.

ಮೈಸೂರಿನಲ್ಲಿ ಈಜಲು ಹೋದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಸಾವು!

0

ಮೈಸೂರು: ಅರಣ್ಯ ಇಲಾಖೆಯ ಕ್ಯಾಂಪ್ ಸಮೀಪ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಅರಣ್ಯ ರಕ್ಷಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ನಡೆದಿದೆ.

ಹೆಚ್.ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ನಿವಾಸಿ ಸುಪ್ರೀತ್ (36) ಮೃತ ದುರ್ಧೈವಿಯಾಗಿದ್ದು,  ಎಂದಿನಂತೆ ಕರ್ತವ್ಯ ನಿರ್ವಹಿಸಿ, ರಾತ್ರಿ ಪಾಳಿಯ ಕೆಲಸ ಮುಗಿಸಿದ ನಂತರ ಬುಧವಾರ ಬೆಳಿಗ್ಗೆ ಸುಮಾರು 8 ಗಂಟೆಗೆ ಉದ್ಬೂರು ಗೇಟ್ ಸಮೀಪದ ಕಳ್ಳಬೇಟೆ ತಡೆ ಶಿಬಿರದ ಬಳಿ ತಮ್ಮ ಸಹೋದ್ಯೋಗಿಗಳಾದ ಅಯ್ಯಪ್ಪ ಮತ್ತು ಅಮನ್ ಜೊತೆ ಈಜಲು ತೆರಳಿದ್ದರು.

ಈಜಾಡುತ್ತಿದ್ದ ವೇಳೆ ಸುಪ್ರೀತ್ ಅವರಿಗೆ ಆಯಾಸವಾಗಿದ್ದು, ತಾವು ದಡಕ್ಕೆ ಮರಳುವುದಾಗಿ ಸಹೋದ್ಯೋಗಿಗಳಿಗೆ ತಿಳಿಸಿ ನೀರಿನಿಂದ ಹೊರಬರಲು ಯತ್ನಿಸಿದ್ದಾರೆ. ಆದರೆ ತೀವ್ರ ಆಯಾಸದಿಂದ ನೀರಿನಲ್ಲಿ ಮುಳುಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದ್ಯೋಗಿಗಳ ಕೂಗನ್ನು ಕೇಳಿದ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ಆರಂಭಿಸಿದರು. ಆದರೆ ಪತ್ತೆಯಾಗದ ಹಿನ್ನೆಲೆಯಲ್ಲಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು.

ತಕ್ಷಣವೇ ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ, ಸ್ಥಳೀಯ ನುರಿತ ಈಜುಗಾರರು ಹಾಗೂ ಕೇರಳದಿಂದ ಆಗಮಿಸಿದ ಮುಳುಗು ತಜ್ಞರ ತಂಡ ಶೋಧ ಕಾರ್ಯ ಕೈಗೊಂಡಿತ್ತು. ಗುರುವಾರ ಬೆಳಿಗ್ಗೆ ಸುಮಾರು 6 ಗಂಟೆಗೆ ಸುಪ್ರೀತ್ ಅವರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಯಿತು.

ಮೃತರಿಗೆ ಇಬ್ಬರು ಚಿಕ್ಕ ಮಕ್ಕಳು ಇದ್ದು, ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮನಕಲಕುವಂತಿತ್ತು. ಈ ಕುರಿತು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್: ಇಬ್ಬರ ಬಂಧನ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಯುವತಿಯರಿಗೆ ಬೈಕ್‌ನಲ್ಲಿ ಹಿಂಬದಿಯಿಂದ ಬಂದು ಕಿರುಕುಳ ನೀಡಿದ ಘಟನೆ ನಗರದ ಯಲಹಂಕ ಪ್ರದೇಶದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪಾವಗಡ ಮೂಲದ ಹರೀಶ್ ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದ್ದು, ಇಬ್ಬರೂ ನಗರದಲ್ಲಿ ಡೆಲಿವರಿ ಬಾಯ್ಸ್ ಆಗಿ ಕೆಲಸ ಮಾಡುತ್ತಿದ್ದರು.

ಘಟನೆ ಏಪ್ರಿಲ್ 22ರಂದು ಯಲಹಂಕದಿಂದ ಬಾಗಲೂರು ಕಡೆಗೆ ಸಾಗುವ ಮುಖ್ಯರಸ್ತೆಯಲ್ಲಿ ನಡೆದಿದ್ದು, ಬೈಕ್‌ನಲ್ಲಿ ಬಂದ ಆರೋಪಿಗಳು ಯುವತಿಯರ ಅಂಗಾಂಗಗಳನ್ನು ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾರೆ ಎಂದು ತಿಳಿದುಬಂದಿದೆ.

ಈ ಕೃತ್ಯ ಹಿಂಬದಿಯಿಂದ ಬರುತ್ತಿದ್ದ ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.

ವಿಡಿಯೋ ಆಧಾರವಾಗಿ ತಕ್ಷಣವೇ ಸುವೋಮೋಟೋ ಪ್ರಕರಣ ದಾಖಲಿಸಿಕೊಂಡ ಯಲಹಂಕ ಪೊಲೀಸ್ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮತ್ತೆ ಚರ್ಚೆಗಳು ಆರಂಭವಾಗಿವೆ.

SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

0

ಕೋಲಾರ: ರಾಜ್ಯದಲ್ಲಿ ಈಜಲು ಹೋಗಿ ನೀರುಪಾಲಾಗುವ ಘಟನೆಗಳು ಹೆಚ್ಚುತ್ತಿರುವ ನಡುವೆ, ಎಸ್‌ಎಸ್‌ಎಲ್‌ಸಿ ಫಲಿತಾಂಶದ ಖುಷಿಯಲ್ಲಿದ್ದ ಬಾಲಕನೋರ್ವ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತ ಬಾಲಕನನ್ನು ಕಿರಣ್ (15) ಎಂದು ಗುರುತಿಸಲಾಗಿದ್ದು, ಆತ ಮುಳಬಾಗಿಲು ತಾಲೂಕಿನ ನಿವಾಸಿ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 239 ಅಂಕಗಳನ್ನು ಪಡೆದು ತೇರ್ಗಡೆಯಾದ ಖುಷಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದನು.

ಈ ವೇಳೆ ಈಜಲು ಬಾರದ ಕಾರಣ ಬಾವಿಯ ನೀರಲ್ಲಿ ಮುಳುಗಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಬಾಲಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿ–ಸಾರಿಗೆ ಸಿಬ್ಬಂದಿ ನಡುವೆ ಗಲಾಟೆ: ಬಸ್ ತಡೆದು ಪ್ರತಿಭಟನೆ

0

ಗದಗ: ಬಸ್ ನಿಲ್ಲಿಸದ ವಿಚಾರವಾಗಿ ವಿದ್ಯಾರ್ಥಿಗಳು ಹಾಗೂ ಸಾರಿಗೆ ನೌಕರರ ನಡುವೆ ನಡೆದ ವಾಗ್ವಾದ ಹಲ್ಲೆ ಆರೋಪದ ಮಟ್ಟಕ್ಕೆ ತಲುಪಿದ ಘಟನೆ ನಗರದಲ್ಲಿರುವ ಪುಟ್ಟರಾಜ್ ಗವಾಯಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಬಸ್ ಹತ್ತಲು ಕೈ ತೋರಿಸಿದ್ದರೂ ಚಾಲಕ ಬಸ್ ನಿಲ್ಲಿಸಿಲ್ಲ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಲು ಮುಂದಾದಾಗ ವಿದ್ಯಾರ್ಥಿಗಳು ಮತ್ತು ಸಾರಿಗೆ ಸಿಬ್ಬಂದಿ ನಡುವೆ ಮಾತಿನ ಚಕಮಕಿ ಉಂಟಾಗಿದೆ.

ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ತಲುಪಿದ್ದು, ಸಾರಿಗೆ ನೌಕರರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಹಲ್ಲೆ ಮಾಡಿದ ನೌಕರನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಹರ ಪೊಲೀಸ್ ಠಾಣೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳನ್ನು ಮನವೊಲಿಸಲು ಹರಸಾಹಸ ಪಟ್ಟರು. ಈ ನಡುವೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರು.

ಕೊನೆ ಕ್ಷಣದಲ್ಲಿ ಬಂದವರಿಗೂ ಪರೀಕ್ಷೆ ಬರೆಯಲು ನೆರವಾದ ಕೆಇಎ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಯೋಜಿಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೊದಲ ದಿನವಾದ ಗುರುವಾರ ಅತ್ಯಂತ ಸುಗಮವಾಗಿ ನಡೆಯಿತು.

ರಾಜ್ಯದ 745 ಕೇಂದ್ರಗಳಲ್ಲಿ ನಡೆದ ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆಗೆ ಶೇ.96 ರಷ್ಟು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೊನೆ ಕ್ಷಣದಲ್ಲಿ ಪ್ರವೇಶ ಪತ್ರ ಇಲ್ಲದೆ ಪರದಾಡಿದ ಹಾಗೂ ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹೋಗದೆ ಬೇರೊಂದು ಕೇಂದ್ರಕ್ಕೆ ಹೋಗಿ ಚಡಪಡಿಸುತ್ತಿದ್ದ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮಾಡಿ ಪರೀಕ್ಷೆ ಬರೆಸುವಲ್ಲಿಯೂ ನಮ್ಮ ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನ ಬಿಜಿಎಸ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ಅನ್ವಿ ಸೋಜನ್ ಎಂಬಾತ ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಕಾಲೇಜಿಗೆ ಹೋಗಿದ್ದರು. ಪುನಃ ಅವರು ಮಹಾಲಕ್ಷ್ಮಿ ಲೇಔಟ್ ಕಾಲೇಜಿಗೆ ಹೋಗಲು ತಡವಾಗುತ್ತದೆ ಎನ್ನುವ ಕಾರಣಕ್ಕೆ ಗ್ಲೋಬಲ್ ಕಾಲೇಜಿನಲ್ಲೇ ವಿಶೇಷವಾಗಿ ವ್ಯವಸ್ಥೆ ಮಾಡಿಸಿ ಪರೀಕ್ಷೆ ಬರೆಸಲಾಯಿತು ಎಂದು ಅವರು ವಿವರಿಸಿದರು.

ಇದೇ ರೀತಿ ಸಾಗರದ ಕಾಲೇಜಿನಲ್ಲಿ ಪರೀಕ್ಷೆ ಬರೆಯಬೇಕಿದ್ದ ಚಿನ್ಮಯಿ ಎಂಬಾತ ಶಿವಮೊಗ್ಗದ ಸೈನ್ಸ್ ಫೀಲ್ಡ್‌ ಕಾಲೇಜಿಗೆ ಹೋಗಿದ್ದರು. ವಿಷಯ ತಿಳಿದ ನಂತರ ಕಾಲೇಜಿನ ಪ್ರಾಂಶುಪಾಲರು ಅಲ್ಲೇ ಇದ್ದ ವೀಕ್ಷಕರ ಕಾರಿನಲ್ಲಿ ಆ ಅಭ್ಯರ್ಥಿಯನ್ನು ಸಾಗರಕ್ಕೆ ಕಳುಹಿಸಿ, ಪರೀಕ್ಷೆ ಬರೆಯಲು ನೆರವಾಗಿದ್ದಾರೆ ಎಂದು ಅವರು ಹೇಳಿದರು.

ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ನೇತೃತ್ವದಲ್ಲಿ ಸಿಸಿಟಿವಿ ಕ್ಯಾಮರಾ ಮೂಲಕ‌ ಮೇಲ್ವಿಚಾರಣೆ ಮಾಡಲಾಯಿತು. ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ನಲ್ಲಿ ಬೆಂಗಳೂರು ಹಾಗೂ ಕಲ್ಬುರ್ಗಿ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಮೇಲ್ವಿಚಾರಣೆ ನಡೆಸಲಾಯಿತು ಎಂದು ಅವರು ಹೇಳಿದರು. ಕೆಇಎ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಜೆ.ಗದ್ಯಾಳ್ ಅವರು ಕೂಡ ಪರೀಕ್ಷಾ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಿದರು.

error: Content is protected !!