ವಿಜಯಸಾಕ್ಷಿ ಸುದ್ದಿ, ಗದಗ: ಪ್ರಕೃತಿ ವಿಕೋಪ ಸೇರಿದಂತೆ ವಿವಿಧ ಕಾರಣಗಳಿಂದ ಉಂಟಾಗುವ ಬೆಳೆ ನಷ್ಟದಿಂದ ರೈತರನ್ನು ಆರ್ಥಿಕವಾಗಿ ರಕ್ಷಿಸುವ ಉದ್ದೇಶದಿಂದ ಜಾರಿಯಲ್ಲಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಮುಂಗಾರು-2026 ಅಭಿಯಾನಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೃಷಿಯು ಪ್ರಕೃತಿಯನ್ನು ಅವಲಂಬಿಸಿರುವ ವೃತ್ತಿಯಾಗಿದ್ದು, ಹವಾಮಾನ ವೈಪರೀತ್ಯದಿಂದ ರೈತರಿಗೆ ಅನಿರೀಕ್ಷಿತ ನಷ್ಟ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಇಂತಹ ಸಂದರ್ಭಗಳಲ್ಲಿ ರೈತರ ಆರ್ಥಿಕ ಸಂಕಷ್ಟವನ್ನು ಕಡಿಮೆ ಮಾಡುವಲ್ಲಿ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅತ್ಯಂತ ಪರಿಣಾಮಕಾರಿ ಯೋಜನೆಯಾಗಿದ್ದು, ಜಿಲ್ಲೆಯ ಎಲ್ಲ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಂಡರೆ ಪ್ರಕೃತಿ ವಿಕೋಪ, ಅತಿವೃಷ್ಟಿ, ಅನಾವೃಷ್ಟಿ, ಗಾಳಿ, ನೆರೆ ಸೇರಿದಂತೆ ವಿವಿಧ ಕಾರಣಗಳಿಂದ ಉಂಟಾಗುವ ಬೆಳೆ ಹಾನಿಗೆ ವಿಮಾ ಪರಿಹಾರ ದೊರೆಯಲಿದ್ದು, ರೈತರ ಆದಾಯದ ಸ್ಥಿರತೆ ಹಾಗೂ ಕೃಷಿ ಚಟುವಟಿಕೆಗಳ ನಿರಂತರತೆಗೆ ಇದು ನೆರವಾಗಲಿದೆ ಎಂದು ಹೇಳಿದರು.
ಬೆಳೆ ವಿಮೆ, ನೋಂದಣಿ ಪ್ರಕ್ರಿಯೆ, ಅರ್ಹತೆ ಹಾಗೂ ಕೊನೆಯ ದಿನಾಂಕದ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ವ್ಯಾಪ್ತಿಯ ಕೃಷಿ ಇಲಾಖೆ ಕಚೇರಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು. ಅಲ್ಲದೆ 1800 209 4980 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ಸಿದ್ಧಪಡಿಸಿರುವ ಬೆಳೆ ವಿಮೆ ಜಾಗೃತಿ ಕರಪತ್ರಗಳು ಹಾಗೂ ಪೋಸ್ಟರ್ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಜಿಲ್ಲಾದ್ಯಂತ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯ ರೈತರಿಗೆ ಯೋಜನೆಯ ಸೌಲಭ್ಯ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ, ಉಪ ಕೃಷಿ ನಿರ್ದೇಶಕಿ ಸ್ಪೂರ್ತಿ ಜಿ.ಎಸ್., ಕೃಷಿ ಸಹಾಯಕ ನಿರ್ದೇಶಕ ಮಲ್ಲಯ್ಯ ಕೆ., ತಾಂತ್ರಿಕ ಅಧಿಕಾರಿ ಸಂಜೀವ ಕುಮಾರ, ಕೃಷಿ ಅಧಿಕಾರಿ ಚಿತ್ರಾ ಬಿ.ಎಂ., ವಾರ್ತಾಧಿಕಾರಿ ವಸಂತ ಮಡ್ಲೂರ, ಮಾಂತೇಶ್ ಮದ್ನೂರ, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಇಂಡಸ್ಇಂಡ್ ಜನರಲ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
“ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿಕೊಳ್ಳುವ ಮೂಲಕ ರೈತರು ಪ್ರಕೃತಿ ವಿಕೋಪದಿಂದ ಉಂಟಾಗುವ ಆರ್ಥಿಕ ನಷ್ಟದಿಂದ ರಕ್ಷಣೆ ಪಡೆದುಕೊಳ್ಳಬೇಕು.”
– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

