ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ೧೨ನೇ ಶತಮಾನದ ಶರಣರ ತತ್ವಾದರ್ಶಗಳನ್ನು ನೂತನ ದಂಪತಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಬದುಕು ಸಾಗಿಸಬೇಕು ಎಂದು ಮುಂಡರಗಿಯ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು ಹೇಳಿದರು.
ಇಲ್ಲಿನ ಅನ್ನದಾನೀಶ್ವರ ಶಾಖಾ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ಶರಣರ ತತ್ವಚಿಂತನೆ ಪ್ರವಚನ, ಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
ಶಾಖಾ ಮಠ ನಿರ್ಮಾಣದ ಸಂದರ್ಭದಲ್ಲಿ ಈ ಸ್ಥಳದಲ್ಲಿ ಮೂವರು ಶರಣರ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಸಂಶೋಧನೆಯಿಂದ ಅವು ಸುಮಾರು ೪೦೦ ವರ್ಷಗಳಷ್ಟು ಹಳೆಯವು ಎಂಬುದು ತಿಳಿದುಬಂದಿದೆ. ಹೀಗಾಗಿ ಲಕ್ಕುಂಡಿಯ ಅನ್ನದಾನೀಶ್ವರ ಶಾಖಾ ಮಠದ ಗದ್ದುಗೆ ವಿಶೇಷ ಮಹತ್ವ ಹೊಂದಿದೆ ಎಂದು ಶ್ರೀಗಳು ತಿಳಿಸಿದರು.
ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವು ತ್ರಿವಿಧ ದಾಸೋಹ ಪರಂಪರೆಯನ್ನು ಹೊಂದಿದ್ದು, ನಾಡಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಭೂದಾನ ಹಾಗೂ ಧನಸಹಾಯ ನೀಡಿದೆ. ಈ ಹಿನ್ನೆಲೆ ಲಕ್ಕುಂಡಿ ಶಾಖಾ ಮಠದ ಅಭಿವೃದ್ಧಿಗೂ ಜನಪ್ರತಿನಿಧಿಗಳು ಅಗತ್ಯ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಬಿ.ಆರ್. ಯಾವಗಲ್ ಮಾತನಾಡಿ, ನಾಡಿನಲ್ಲಿ ಬರಗಾಲದ ಛಾಯೆ ಆವರಿಸಿರುವ ಸಂದರ್ಭದಲ್ಲಿ ಶರಣರ ತತ್ವಬೋಧನೆಗಳನ್ನು ಸಾರುವ ಪುರಾಣ ಹಾಗೂ ಪ್ರವಚನ ಕಾರ್ಯಕ್ರಮಗಳು ನಡೆಯುತ್ತಿರುವುದು ಶ್ಲಾಘನೀಯ ಎಂದರು.
ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಉತ್ತಮ ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ಶ್ರೀಮಂತಿಕೆಯನ್ನು ಭಾರತ ಹೊಂದಿದೆ. ಅನೇಕ ಶರಣರು ತಾವು ನುಡಿದಂತೆ ನಡೆದು ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಅವರ ತತ್ವಾದರ್ಶಗಳ ಪ್ರವಚನ ಹಾಗೂ ಪುರಾಣಗಳು ಸಮಾಜದಲ್ಲಿನ ಸ್ವಾರ್ಥ ಮತ್ತು ಅಹಂಕಾರವನ್ನು ದೂರ ಮಾಡುವಲ್ಲಿ ಸಹಕಾರಿಯಾಗುತ್ತಿವೆ ಎಂದು ಹೇಳಿದರು.
ಹರ್ಲಾಪುರದ ಡಾ. ಕೊಟ್ಟೂರೇಶ್ವರ ಸ್ವಾಮೀಜಿ ಹಾಗೂ ಕುಕನೂರಿನ ಡಾ. ಮಹಾದೇವ ಸ್ವಾಮೀಜಿ ಮಾತನಾಡಿದರು. ಡಾ. ಗಿರಿಜಾ ಹಸಬಿ, ಷಡಕ್ಷರಯ್ಯ ಬದ್ನಿಮಠ ಹಾಗೂ ವೀರಣ್ಣ ಕರಿಯಲ್ಲಪ್ಪನವರ ಸಂಗೀತ ಸೇವೆ ಸಲ್ಲಿಸಿದರು.
ಶಂಕ್ರಯ್ಯ ಹಿರೇಮಠ, ಯುವ ಧುರೀಣ ವೀರಯ್ಯ ಗಂಧದ, ತಾ.ಪಂ. ಮಾಜಿ ಸದಸ್ಯ ಮಹೇಶ ಮುಸ್ಕಿನಭಾವಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಎಸ್. ಪೂಜಾರ, ನಿವೃತ್ತ ಶಿಕ್ಷಕ ಅಶೋಕ ಬೂದಿಹಾಳ, ಲಕ್ಕುಂಡಿ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ ಅರಹುಣಶಿ, ನಿಂಗಪ್ಪ ಗುಂಜಳ ಹಾಗೂ ಚನ್ನಪ್ಪ ಹೂಗಾರ ವೇದಿಕೆಯಲ್ಲಿದ್ದರು.
ಪ್ರವಚನ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮುತ್ತಪ್ಪ ನೋಟಗಾರ ಸ್ವಾಗತಿಸಿದರು. ಅಂಬರೀಶ ಕರೆಕಲ್ಲ ನಿರೂಪಿಸಿದರು. ಶಿಕ್ಷಕ ಬಸವರಾಜ ಕಣವಿ ವಂದಿಸಿದರು.
ಶರಣರ ತತ್ವಾದರ್ಶಗಳು ಕೇವಲ ಮಾತಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ವಿಶೇಷವಾಗಿ ನೂತನ ದಂಪತಿಗಳು ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದಿಂದ ಜೀವನ ನಡೆಸಿದಾಗ ದಾಂಪತ್ಯ ಬದುಕು ಸುಂದರವಾಗುತ್ತದೆ.
– ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮೀಜಿಗಳು


