Home Blog

ಪ್ರಜ್ವಲ್ ಬಳಿ ಮತ್ತೊಂದು ಮೊಬೈಲ್! ದೇವರ ಫೋಟೋ ಹಿಂದೆ ವಿವೋ ಫೋನ್‌ ಪತ್ತೆ

0

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೆ ಸುದ್ದಿಯಲ್ಲಿದೆ. ಜೈಲಿನಲ್ಲಿರುವ ವಿಐಪಿ ಕೈದಿಗಳ ವಿಚಾರವಾಗಿ ಆಗಾಗ್ಗೆ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮೊಬೈಲ್‌ ಫೋನ್‌ ಪತ್ತೆಯಾಗಿರುವುದು ಕಾರಾಗೃಹ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿದ್ದಾಗ ಮೊಬೈಲ್‌ ಹಾಗೂ ಪೆನ್‌ಡ್ರೈವ್‌ ಹೊಂದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೊಂದು ಮೊಬೈಲ್‌ ಪತ್ತೆಯಾಗಿದೆ. ಇತ್ತೀಚೆಗೆ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಪ್ರಜ್ವಲ್‌ ರೇವಣ್ಣ ಬಳಿ ಮೊಬೈಲ್‌ ಪತ್ತೆಯಾಗಿತ್ತು ಎನ್ನಲಾಗಿದೆ.

ಇದರ ಬೆನ್ನಲ್ಲೇ ಅದೇ ದಿನ ಜೈಲು ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ತಪಾಸಣೆ ನಡೆಸಿದ ವೇಳೆ ಮತ್ತೊಂದು ಮೊಬೈಲ್‌ ಫೋನ್‌ ಪತ್ತೆಯಾಗಿದೆ. ಜೈಲಿನಲ್ಲಿದ್ದ ದೇವರ ಫೋಟೋವೊಂದರ ಹಿಂದೆ ವಿವೋ ಕಂಪನಿಯ ಮೊಬೈಲ್‌ ಇರಿಸಿರುವುದು ಪತ್ತೆಯಾಗಿದೆ.

ಪತ್ತೆಯಾದ ಮೊಬೈಲ್‌ನಲ್ಲಿ ಸಿಮ್‌ ಇರಲಿಲ್ಲ ಹಾಗೂ ಅದು ಸ್ವಿಚ್‌ ಆಫ್‌ ಆಗಿತ್ತು ಎನ್ನಲಾಗಿದೆ. ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಇದನ್ನು ಯಾರು ಬಳಸುತ್ತಿದ್ದರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಜೈಲಿನೊಳಗೆ ಮೊಬೈಲ್‌ ಹೇಗೆ ಪ್ರವೇಶಿಸಿತು, ಅದನ್ನು ಯಾರು ಬಳಸುತ್ತಿದ್ದರು ಹಾಗೂ ಇದರ ಹಿಂದೆ ಯಾರಾದರೂ ಇದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ಫಡ್ನವೀಸ್‌

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಸಹಭಾಗಿತ್ವದ ಯೋಜನೆಗಳಿಗೆ ಹೆಚ್ಚಿನ ಬೆಂಬಲ ನೀಡುವಂತೆ ಪ್ರಧಾನಿಗೆ ಮನವಿ ಮಾಡಿರುವುದಾಗಿ ಫಡ್ನವೀಸ್‌ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ವಿವರಗಳನ್ನು ಫಡ್ನವೀಸ್‌ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಪ್ರಧಾನಮಂತ್ರಿಯವರ ಮಾರ್ಗದರ್ಶನ ಅತ್ಯಂತ ಮಹತ್ವದ್ದಾಗಿದೆ. ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ನೀಡುತ್ತಿರುವ ಬೆಂಬಲಕ್ಕಾಗಿ ಕೃತಜ್ಞನಾಗಿದ್ದೇನೆ ಎಂದು ಫಡ್ನವೀಸ್‌ ತಿಳಿಸಿದ್ದಾರೆ.

ಪ್ರಧಾನಿಯವರೊಂದಿಗಿನ ಭೇಟಿ ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಪ್ರಧಾನಿಯವರೊಂದಿಗೆ ಚರ್ಚೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಮತ್ತಷ್ಟು ಸಹಕಾರ ದೊರೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್‌ ಜೊತೆಗೂ ಮಾತುಕತೆ

ಇದೇ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕೂಡ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಮುಂಬೈ-ವಧವನ್‌ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯ ಭಾಗವಾಗಿರುವ ಉತ್ತನ್‌-ವಿರಾರ್‌ ಸಮುದ್ರ ಸೇತುವೆ ನಿರ್ಮಾಣಕ್ಕೆ ಜಪಾನ್‌ ಇಂಟರ್‌ನ್ಯಾಷನಲ್‌ ಕೋಆಪರೇಷನ್‌ ಏಜೆನ್ಸಿ (JICA)ಯಿಂದ ಹಣಕಾಸು ನೆರವು ಪಡೆಯಲು ಅನುಮೋದನೆ ನೀಡುವಂತೆ ಫಡ್ನವೀಸ್‌ ಮನವಿ ಸಲ್ಲಿಸಿದ್ದಾರೆ.

ಈ ಮನವಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಫಡ್ನವೀಸ್‌ ತಿಳಿಸಿದ್ದಾರೆ. ದೆಹಲಿಯಲ್ಲಿನ ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್‌ ಅವರೊಂದಿಗಿನ ಭೇಟಿಯ ಬಳಿಕ ಮುಖ್ಯಮಂತ್ರಿ ಫಡ್ನವೀಸ್‌ ಮುಂಬೈಗೆ ವಾಪಸಾಗಲಿದ್ದಾರೆ. ಮಂಗಳವಾರ ಮುಂಬೈನ ‘ದಿ ಲಲಿತ್‌’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್‌ ಚೇಂಬರ್‌ ಆಫ್‌ ಕಾಮರ್ಸ್‌ ಆಯೋಜಿಸಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಲಿದ್ದಾರೆ.

ಗದಗ ಪೊಲೀಸರ ಭರ್ಜರಿ ಬೇಟೆ: ₹4.80 ಕೋಟಿ ಮೌಲ್ಯದ ಸ್ವತ್ತು ಪತ್ತೆ, ₹3.68 ಕೋಟಿ ಮೌಲ್ಯದ ವಸ್ತು ವಶ

ಗದಗ: ಕತ್ತಲಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು… ನಂಬಿಸಿ ಹಣ ಎಗರಿಸಿದ ವಂಚಕರು… ಕಣ್ಮರೆಯಾದ ಮೊಬೈಲ್‌ಗಳು… ಕಳ್ಳತನವಾದ ವಾಹನಗಳು… ಹೀಗೆ ಜನರ ಕೈತಪ್ಪಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ಬೆನ್ನತ್ತಿದ ಗದಗ ಜಿಲ್ಲಾ ಪೊಲೀಸರು, ಒಂದು ವರ್ಷದ ಅವಧಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳ ಜಾಡು ಹಿಡಿದಿದ್ದಾರೆ. ಕಳ್ಳರ ಕೈ ಸೇರಿದ್ದ ಚಿನ್ನ–ಬೆಳ್ಳಿ, ನಗದು, ವಾಹನ ಹಾಗೂ ಮೊಬೈಲ್‌ಗಳನ್ನು ಪತ್ತೆಹಚ್ಚಿ ಮತ್ತೆ ವಾರಸುದಾರರ ಕೈಗೆ ಒಪ್ಪಿಸಿದ್ದಾರೆ.

2025ರ ಆಗಸ್ಟ್‌ 1ರಿಂದ 2026ರ ಜುಲೈ 31ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ನಡೆದ ಕಳವು, ಮೋಸ–ವಂಚನೆ ಹಾಗೂ ಮೊಬೈಲ್ ಕಳವು ಪ್ರಕರಣಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹4,80,46,501 ಮೌಲ್ಯದ ಸ್ವತ್ತು ಪತ್ತೆಯಾಗಿದ್ದು, ₹3,68,48,989 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ಸ್ವತ್ತುಗಳನ್ನು ವಾರಸುದಾರರು ಹಾಗೂ ಫಿರ್ಯಾದಿದಾರರಿಗೆ ಹಸ್ತಾಂತರಿಸುವ ‘ಪ್ರಾಪರ್ಟಿ ರಿಟರ್ನ್ ಪರೇಡ್‌’ ಅನ್ನು ಸೋಮವಾರ ಗದಗ ಜಿಲ್ಲಾ ಪೊಲೀಸ್ ಭವನದಲ್ಲಿ ಆಯೋಜಿಸಲಾಗಿತ್ತು.

ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ್ ಪಾಟೀಲ ಅವರ ಸಮ್ಮುಖದಲ್ಲಿ ಹಾಗೂ ಗದಗ ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ತೆಯಾದ ಸ್ವತ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಚಿನ್ನ ಕಳವು ಪ್ರಕರಣಗಳಲ್ಲಿ ಒಟ್ಟು 68 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 51 ಪ್ರಕರಣಗಳನ್ನು ಪತ್ತೆಹಚ್ಚಿ 95 ಆರೋಪಿಗಳನ್ನು ಬಂಧಿಸಲಾಗಿದೆ. ಕಳವಾಗಿದ್ದ 2,785.23 ಗ್ರಾಂ ಚಿನ್ನದ ಪೈಕಿ 1,736.69 ಗ್ರಾಂ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳವಾಗಿದ್ದ ಚಿನ್ನದ ಒಟ್ಟು ಮೌಲ್ಯ ₹2.30 ಕೋಟಿಗೂ ಅಧಿಕವಾಗಿದ್ದು, ಪತ್ತೆಯಾದ ಚಿನ್ನದ ಮೌಲ್ಯ ₹1,65,63,977 ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇನ್ನು ಕಳ್ಳರ ಕಣ್ಣು ಬೆಳ್ಳಿಯ ಮೇಲೂ ಬಿದ್ದಿತ್ತು. ಒಟ್ಟು 55,850.02 ಗ್ರಾಂ ಬೆಳ್ಳಿ ಕಳವಾಗಿದ್ದು, ಅದರಲ್ಲಿ 37,191.39 ಗ್ರಾಂ ಬೆಳ್ಳಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ವಶಪಡಿಸಿಕೊಂಡ ಬೆಳ್ಳಿ ಆಭರಣಗಳ ಅಂದಾಜು ಮೌಲ್ಯ ₹60,52,877.

ನಗದು ಕಳವು ಪ್ರಕರಣಗಳಲ್ಲೂ ಪೊಲೀಸರು ಆರೋಪಿಗಳ ಜಾಡು ಹಿಡಿದಿದ್ದಾರೆ. ಕಳವಾಗಿದ್ದ ₹27,31,000 ನಗದಿನ ಪೈಕಿ ₹7,98,615 ಹಣವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

ಬೈಕ್‌, ಕಾರು ಸೇರಿದಂತೆ ವಾಹನಗಳನ್ನು ಕಳವು ಮಾಡುತ್ತಿದ್ದವರ ಮೇಲೂ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಒಟ್ಟು 36 ವಾಹನ ಕಳವು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 23 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 16 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 40 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ವಾಹನಗಳ ಅಂದಾಜು ಮೌಲ್ಯ ₹17.13 ಲಕ್ಷ ಎಂದು ತಿಳಿಸಲಾಗಿದೆ.

ಮೋಸ–ವಂಚನೆ ಪ್ರಕರಣಗಳಲ್ಲೂ ಪೊಲೀಸರು ಆರೋಪಿಗಳ ಜಾಡು ಹಿಡಿದಿದ್ದಾರೆ. ಒಟ್ಟು 32 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣಗಳನ್ನು ಪತ್ತೆಹಚ್ಚಿ 35 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ₹1.22 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಸ್ವತ್ತಿನ ವಂಚನೆ ನಡೆದಿದ್ದು, ಅದರಲ್ಲಿ ₹37,13,942 ಮೌಲ್ಯದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೊಬೈಲ್ ಕಳವು ಹಾಗೂ ಕಳೆದುಹೋದ ಮೊಬೈಲ್‌ಗಳ ಪತ್ತೆಗೂ ಪೊಲೀಸರು ತಂತ್ರಜ್ಞಾನದ ನೆರವು ಪಡೆದಿದ್ದಾರೆ. CEIR (Central Equipment Identity Register) ವ್ಯವಸ್ಥೆ ಬಳಸಿಕೊಂಡು ಮೊಬೈಲ್‌ಗಳ ಜಾಡು ಪತ್ತೆಹಚ್ಚಲಾಗಿದೆ. ಒಟ್ಟು 1,440 ಮೊಬೈಲ್ ಪ್ರಕರಣಗಳಲ್ಲಿ 965 ಮೊಬೈಲ್‌ಗಳನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಪತ್ತೆಯಾದ ಮೊಬೈಲ್‌ಗಳ ಒಟ್ಟು ಮೌಲ್ಯ ₹97,19,578 ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಒಂದು ವರ್ಷದ ಅವಧಿಯಲ್ಲಿ ನಡೆದ ಈ ಕಾರ್ಯಾಚರಣೆಯ ಅಂಕಿ-ಅಂಶಗಳು ಗಮನ ಸೆಳೆಯುವಂತಿವೆ. ಕಳವು, ಮೋಸ–ವಂಚನೆ ಹಾಗೂ ಮೊಬೈಲ್ ಪತ್ತೆ ಕಾರ್ಯಾಚರಣೆಗಳಲ್ಲಿ ಪೊಲೀಸರು ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪತ್ತೆಹಚ್ಚಿದ್ದಾರೆ. ಕಳ್ಳರ ಕೈ ಸೇರಿದ್ದ ಚಿನ್ನ–ಬೆಳ್ಳಿ, ಕಳವಾದ ನಗದು, ವಾಹನಗಳು ಹಾಗೂ ಕಳೆದುಹೋದ ಮೊಬೈಲ್‌ಗಳು ಮತ್ತೆ ವಾರಸುದಾರರ ಕೈ ಸೇರಿವೆ.

ನಿರಂತರ ತನಿಖೆ, ತಾಂತ್ರಿಕ ನೆರವು ಹಾಗೂ ಪರಿಣಾಮಕಾರಿ ಕಾರ್ಯಾಚರಣೆಯ ಮೂಲಕ ಕಳವು ಮತ್ತು ವಂಚನೆ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಗದಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಡಿವೈಎಸ್ಪಿಗಳಾದ ಮುರ್ತುಜಾ ಖಾದ್ರಿ, ಸಜ್ಜನ, ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಇದ್ದರು.

ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ʼನಿಂದ ಬಿಗ್ ರಿಲೀಫ್!

0

ನವದೆಹಲಿ: ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಮುಂದಿನ ಆದೇಶದವರೆಗೆ ಮುಂದುವರಿಸದಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದರಿಂದ ರಾಹುಲ್ ಗಾಂಧಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಅಲ್ಲದೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ಗೆ ಯಾವುದೇ ವರದಿ ಸಲ್ಲಿಸದಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ್ ಅವರನ್ನೊಳಗೊಂಡ ಪೀಠ ಈ ವಿಚಾರಣೆ ನಡೆಸಿತು. ರಾಹುಲ್ ಗಾಂಧಿ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಹೈಕೋರ್ಟ್, ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಅಲಹಾಬಾದ್ ಹೈಕೋರ್ಟ್ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 20ಕ್ಕೆ ನಿಗದಿಪಡಿಸಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಮುಂದಿನ ಆದೇಶದವರೆಗೆ ಹೈಕೋರ್ಟ್‌ನಲ್ಲಿನ ವಿಚಾರಣೆಯನ್ನು ಮುಂದುವರಿಸದಂತೆ ಸೂಚಿಸಿದೆ.

ಇದೇ ವೇಳೆ ಪ್ರಕರಣದ ವಿಚಾರಣೆ ಅಲಹಾಬಾದ್ ಹೈಕೋರ್ಟ್‌ನಿಂದ ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ರಾಹುಲ್ ಗಾಂಧಿ ಪ್ರತ್ಯೇಕ ಅರ್ಜಿಯನ್ನೂ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ರಾಹುಲ್ ಗಾಂಧಿ ಅವರು ತಮ್ಮ ಆದಾಯಕ್ಕೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ದೂರು ನೀಡಿದ್ದರು. ಈ ಆರೋಪದ ಕುರಿತು ತನಿಖೆ ನಡೆಸುವಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೂಚಿಸಿತ್ತು.

ಈ ವರ್ಷದ ಮೇ ತಿಂಗಳಲ್ಲಿ ನೀಡಿದ್ದ ಆದೇಶದಲ್ಲಿ, ರಾಹುಲ್ ಗಾಂಧಿ ವಿರುದ್ಧ ಮಾಡಲಾಗಿರುವ ಅಕ್ರಮ ಆಸ್ತಿ ಆರೋಪವನ್ನು ಪರಿಶೀಲಿಸುವಂತೆ ಹೈಕೋರ್ಟ್ ಸಿಬಿಐ ಮತ್ತು ಇಡಿಗೆ ನಿರ್ದೇಶನ ನೀಡಿತ್ತು. ಕಾನೂನಿನ ಅಡಿಯಲ್ಲಿ ಅನುಮತಿಸಬಹುದಾದ ಸೂಕ್ತ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬಹುದು ಎಂದು ಹೈಕೋರ್ಟ್ ತಿಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಸಿಬಿಐ-ಇಡಿಗೆ ಪ್ರಶ್ನೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ ಪ್ರಕರಣದ ತನಿಖೆ ಹಾಗೂ ಅದರ ಮಾಹಿತಿ ಮಾಧ್ಯಮಗಳಲ್ಲಿ ಬಹಿರಂಗವಾದ ವಿಚಾರದ ಕುರಿತು ನ್ಯಾಯಪೀಠ ಪ್ರಶ್ನೆಗಳನ್ನು ಕೇಳಿತು.

ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಪ್ರಕರಣದ ವಿಚಾರಣೆ ಹಾಗೂ ದಾಖಲೆಗಳು ಮಾಧ್ಯಮಗಳಿಗೆ ಹೇಗೆ ಸೋರಿಕೆಯಾದವು ಎಂಬುದರ ಬಗ್ಗೆ ನ್ಯಾಯಾಲಯ ಗಮನ ಹರಿಸಬೇಕು ಎಂದು ಮನವಿ ಮಾಡಿದರು.

ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ದೂರಿನ ಕುರಿತು ತನಿಖೆ ನಡೆಯುತ್ತಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಈ ವೇಳೆ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ, ತನಿಖೆಯನ್ನು ಸಿಬಿಐ ಸ್ವಯಂಪ್ರೇರಿತವಾಗಿ ಆರಂಭಿಸಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಎಸ್.ವಿ. ರಾಜು ನಕಾರಾತ್ಮಕ ಉತ್ತರ ನೀಡಿದರು.

ಇದಾದ ಬಳಿಕ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ಸರಿಯಾದತೆಯನ್ನು ಪರಿಶೀಲಿಸಬೇಕಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು. ಒಟ್ಟಿನಲ್ಲಿ, ರಾಹುಲ್ ಗಾಂಧಿ ವಿರುದ್ಧದ ಅಕ್ರಮ ಆಸ್ತಿ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿನ ಮುಂದಿನ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.

ಆಗಸ್ಟ್ 28ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಬಾಕಿ ಶೂ, ಸಾಕ್ಸ್ ವಿತರಣೆ; ಸಚಿವ ಮಧು ಬಂಗಾರಪ್ಪ ಭರವಸೆ

0

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಬಾಕಿ ಇರುವ ಶೂ ಮತ್ತು ಸಾಕ್ಸ್‌ಗಳನ್ನು ಆಗಸ್ಟ್ 28ರೊಳಗೆ ವಿತರಣೆ ಮಾಡುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕಿಸ್ ಬಾನು ಅವರು ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಆಗಿರುವ ವಿಳಂಬದ ಬಗ್ಗೆ ಪ್ರಶ್ನೆ ಕೇಳಿದರು. ಶಾಲೆಗಳಿಗೆ ಮಕ್ಕಳ ಹಾಜರಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಶೂ ಮತ್ತು ಸಾಕ್ಸ್ ವಿತರಿಸುತ್ತಿದೆ. ಆದರೆ ಇದುವರೆಗೆ ಶೇ.100ರಷ್ಟು ವಿತರಣೆ ಪೂರ್ಣಗೊಂಡಿಲ್ಲ. ಸುಮಾರು 16 ಲಕ್ಷ ವಿದ್ಯಾರ್ಥಿಗಳಿಗೆ ಇನ್ನೂ ಶೂ ಮತ್ತು ಸಾಕ್ಸ್ ವಿತರಣೆ ಆಗಿಲ್ಲ ಎಂದು ಅವರು ಗಮನ ಸೆಳೆದರು.

ಟೆಂಡರ್ ಪಡೆದಿರುವ ಸಂಸ್ಥೆಗಳು ಸಮಯಕ್ಕೆ ಸರಿಯಾಗಿ ಶೂ ಮತ್ತು ಸಾಕ್ಸ್ ಪೂರೈಕೆ ಮಾಡಿಲ್ಲ. ಜೂನ್‌ನಲ್ಲೇ ಶಾಲೆಗಳು ಆರಂಭವಾಗಿದ್ದರೂ ಇನ್ನೂ ಸಂಪೂರ್ಣ ವಿತರಣೆ ಆಗಿಲ್ಲ. ಹೀಗಾಗಿ ಟೆಂಡರ್‌ದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅಗತ್ಯ ಇಂಡೆಂಟ್ ನೀಡದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಬಲ್ಕಿಸ್ ಬಾನು ಆಗ್ರಹಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಜನವರಿ ತಿಂಗಳಾದರೂ ಶೂ ಮತ್ತು ಸಾಕ್ಸ್ ವಿತರಣೆ ಆಗುತ್ತಿರಲಿಲ್ಲ. ಜೊತೆಗೆ ಗುಣಮಟ್ಟದ ಶೂ ಮತ್ತು ಸಾಕ್ಸ್ ಕೂಡ ನೀಡಲಾಗುತ್ತಿರಲಿಲ್ಲ ಎಂದು ಹೇಳಿದರು.

ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗುಣಮಟ್ಟದ ಶೂ ಮತ್ತು ಸಾಕ್ಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಟೆಂಡರ್ ಪಡೆದವರು ಪೂರೈಕೆಯಲ್ಲಿ ವಿಳಂಬ ಮಾಡಿರುವುದರಿಂದ ಅವರಿಗೆ ದಂಡ ವಿಧಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯ ಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದರಿಂದ ಸ್ವಲ್ಪ ಸಮಯ ವಿಳಂಬವಾಗಿದೆ. ಶಾಲಾ ಹಂತದಲ್ಲಿ ಮಕ್ಕಳ ಶೂ ಸೈಜ್‌ಗಳ ಮಾಹಿತಿ ನೀಡುವುದು ತಡವಾದಾಗಲೂ ಸಮಸ್ಯೆ ಉಂಟಾಗುತ್ತದೆ. ಕೆಲವೆಡೆ ಇಂಡೆಂಟ್ ನೀಡುವಲ್ಲಿಯೂ ತಪ್ಪುಗಳಾಗಿವೆ. ಹೀಗಾಗಿ ವಿತರಣೆಯಲ್ಲಿ ವಿಳಂಬವಾಗಿದೆ ಎಂದು ಸಚಿವರು ವಿವರಿಸಿದರು.

ಆದರೆ ಆಗಸ್ಟ್ 28ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗುವುದು ಎಂದು ಸಚಿವರು ಸ್ಪಷ್ಟ ಭರವಸೆ ನೀಡಿದರು.

ಮುಂದಿನ ವರ್ಷದಿಂದ ಇಂತಹ ಸಮಸ್ಯೆಗಳು ಎದುರಾಗದಂತೆ ಮುಂಚಿತವಾಗಿಯೇ ಶೂ ಮತ್ತು ಸಾಕ್ಸ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಯೋಜನೆಗೆ ಸಂಬಂಧಿಸಿದಂತೆ ₹104 ಕೋಟಿ ಹಣ ಬಾಕಿ ಇದ್ದು, ಆದಷ್ಟು ಬೇಗ ಶೂ ಮತ್ತು ಸಾಕ್ಸ್ ವಿತರಣೆ ಪೂರ್ಣಗೊಳಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ಶೂ ಮತ್ತು ಸಾಕ್ಸ್ ವಿತರಣೆಯ ಮೇಲ್ವಿಚಾರಣೆಗಾಗಿ ನೋಡೆಲ್ ಅಧಿಕಾರಿಯನ್ನು ನೇಮಿಸಿ, ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ನಿತಿನ್ ನಬಿನ್ ಹೊಸ ತಂಡ ರಚನೆ: ರಾಜ್ಯದ ನಾಗರಾಜ್ʼಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ, ಸ್ಮೃತಿ ಇರಾನಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ

0

ನವದೆಹಲಿ: ಮುಂಬರುವ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಮಹತ್ವದ ಸಂಘಟನಾ ಬದಲಾವಣೆ ನಡೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ನೇತೃತ್ವದ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು, ಹಲವು ಪ್ರಮುಖ ನಾಯಕರಿಗೆ ರಾಷ್ಟ್ರೀಯ ಮಟ್ಟದ ಜವಾಬ್ದಾರಿಗಳನ್ನು ನೀಡಲಾಗಿದೆ. ಈ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಬಿಜೆಪಿ ತಿಳಿಸಿದೆ.

ನೂತನ ರಾಷ್ಟ್ರೀಯ ಉಪಾಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕದ ಪ್ರೊ. ಎಂ. ನಾಗರಾಜ್ ಅವರಿಗೆ ಸ್ಥಾನ ನೀಡಲಾಗಿದೆ. ಇವರೊಂದಿಗೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಿಂಧಿಯಾ, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌, ರಾಮ್‌ ಮಾಧವ್‌, ಬೈಜಯಂತ್‌ ಜಯ ಪಾಂಡಾ, ಡಿ. ಪುರಂದೇಶ್ವರಿ, ರೇಖಾ ವರ್ಮಾ, ವರ್ಷಾಬೆನ್‌ ನರೇಂದ್ರಭಾಯ್‌ ದೋಷಿ, ಡಾ. ಭಾರತಿ ಪ್ರವೀಣ್‌ ಪವಾರ್‌, ಮನ್‌ಪ್ರೀತ್‌ ಸಿಂಗ್‌ ಬಾದಲ್‌, ಲಾಲ್‌ ಸಿಂಗ್‌ ಆರ್ಯ, ಪ್ರೊ. ತಾರಿಖ್‌ ಮನ್ಸೂರ್‌ ಹಾಗೂ ಡಾ. ಮಧುಚಂದ್ರಾ ಕರ್‌ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹುದ್ದೆಯಲ್ಲಿ ಬಿ.ಎಲ್. ಸಂತೋಷ್‌ ಅವರು ಮುಂದುವರಿಯಲಿದ್ದಾರೆ. ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿಗಳಾಗಿ (ಸಂಘಟನೆ) ಶಿವಪ್ರಕಾಶ್‌ ಹಾಗೂ ಸೌದಾನ್‌ ಸಿಂಗ್‌ ಕಾರ್ಯನಿರ್ವಹಿಸಲಿದ್ದಾರೆ.

ಇನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯಲ್ಲೂ ಹಲವು ಪ್ರಮುಖ ನಾಯಕರಿಗೆ ಸ್ಥಾನ ನೀಡಲಾಗಿದೆ. ವಿನೋದ್‌ ತಾವ್ಡೆ, ಸುನಿಲ್‌ ಬನ್ಸಲ್‌, ತ್ರಿಪುರದ ಮಾಜಿ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇಬ್‌, ಸ್ಮೃತಿ ಇರಾನಿ, ಡಾ. ಸತೀಶ್‌ ಪೂನಿಯಾ, ಗಜೇಂದ್ರ ಪಟೇಲ್‌, ಹರೀಶ್‌ ದ್ವಿವೇದಿ ಹಾಗೂ ಸಂಜಯ್‌ ಭಾಟಿಯಾ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ.

ಆಮ್‌ ಆದ್ಮಿ ಪಕ್ಷದಿಂದ ಬಿಜೆಪಿಗೆ ಬಂದಿರುವ ಸಂದೀಪ್‌ ಪಾಠಕ್‌ ಅವರಿಗೆ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನೀಡಲಾಗಿದೆ. ಈ ಮೂಲಕ ಪಕ್ಷದ ರಾಷ್ಟ್ರೀಯ ಸಂಘಟನೆಯಲ್ಲಿ ವಿವಿಧ ರಾಜ್ಯಗಳ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ನೀಡಲಾಗಿದೆ.

ಇನ್ನು ನೂತನ ರಾಷ್ಟ್ರೀಯ ಉಪಾಧ್ಯಕ್ಷರ ನೇಮಕಾತಿಯಲ್ಲಿ ಮಹಿಳಾ ಪ್ರಾತಿನಿಧ್ಯಕ್ಕೂ ಬಿಜೆಪಿ ಒತ್ತು ನೀಡಿದೆ. ಒಟ್ಟು 13 ರಾಷ್ಟ್ರೀಯ ಉಪಾಧ್ಯಕ್ಷರ ಪೈಕಿ 6 ಮಂದಿ ಮಹಿಳಾ ನಾಯಕರಿಗೆ ಸ್ಥಾನ ನೀಡಲಾಗಿದೆ. ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ನೂತನ ರಾಷ್ಟ್ರೀಯ ತಂಡದ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಬಿಜೆಪಿ ಮುಂದಾಗಿದೆ.

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ ವಿತರಣೆ

0

ಚಾಮರಾಜನಗರ: ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನಲ್ಲಿ ನಡೆದ ಶೂಟೌಟ್‌ನಲ್ಲಿ ಮೃತಪಟ್ಟ ಕುಮಾರ್, ಅಂತೋಣಿ ಸಾಮಿ ಹಾಗೂ ಪೀಟರ್ ಅವರ ಕುಟುಂಬಗಳಿಗೆ ಹನೂರು ಶಾಸಕ ಎಂ.ಆರ್. ಮಂಜುನಾಥ್ ತಲಾ ₹15 ಲಕ್ಷ ಪರಿಹಾರ ವಿತರಿಸಿದ್ದಾರೆ. ಸರ್ಕಾರದಿಂದ ₹5 ಲಕ್ಷ ಹಾಗೂ ವೈಯಕ್ತಿಕವಾಗಿ ₹10 ಲಕ್ಷ ಸೇರಿಸಿ ಒಟ್ಟು ₹45 ಲಕ್ಷ ಪರಿಹಾರವನ್ನು ಮೂರು ಕುಟುಂಬಗಳಿಗೆ ನೀಡಲಾಗಿದೆ. ಪ್ರತಿಭಟನಾನಿರತರಿಗೆ ನೀಡಿದ್ದ ಭರವಸೆಯಂತೆ ಶಾಸಕರು ಮೃತರ ಮನೆಗಳಿಗೆ ತೆರಳಿ ಪರಿಹಾರ ಹಸ್ತಾಂತರಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆಯಲ್ಲಿ ತಪ್ಪಿತಸ್ಥರು ಕಂಡುಬಂದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ಭರವಸೆ ನೀಡಿದ್ದಾರೆ.

ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ಬಳಿಕ ಮೂವರ ಮೃತದೇಹಗಳನ್ನು ತಡರಾತ್ರಿ ಗ್ರಾಮಕ್ಕೆ ತರಲಾಗಿದೆ. ತೋಮಿಯಾರ್ ಪಾಳ್ಯದ ಚರ್ಚ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಪಾದ್ರಿ ಕೆ. ಚಾರ್ಲ್ಸ್ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಬಳಿಕ ಕ್ರೈಸ್ತ ಸಂಪ್ರದಾಯದಂತೆ ಸ್ವಗ್ರಾಮಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.

ಇತ್ತ ಶೂಟೌಟ್ ನಡೆದ ಸ್ಥಳದಲ್ಲಿ ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಎರಡು ದಿನಗಳ ಕಾಲ ಸ್ಥಳ ಮಹಜರು ನಡೆಸಿದ್ದಾರೆ. ಅರಣ್ಯ ಇಲಾಖೆ ಕೂಡ ಪ್ರಕರಣಕ್ಕೆ ಸಂಬಂಧಿಸಿದ ಹಲವು ಸಾಕ್ಷ್ಯಗಳನ್ನು ತನಿಖಾಧಿಕಾರಿಗೆ ಸಲ್ಲಿಸಿದೆ.

ಘಟನೆ ಬಳಿಕ ವಶಕ್ಕೆ ಪಡೆದಿದ್ದ ಸುಮಾರು 30 ಕೆ.ಜಿ. ಜಿಂಕೆ ಮಾಂಸ, ಎರಡು ಒಂಟಿ ನಳಿಕೆಯ ನಾಡ ಬಂದೂಕುಗಳು, ಹೆಡ್‌ಟಾರ್ಚ್‌ಗಳು, ಚಪ್ಪಲಿಗಳು, ಅಡುಗೆ ಪಾತ್ರೆಗಳು, ಸಾಂಬಾರ ಪದಾರ್ಥಗಳು, ಚಾಕು ಹಾಗೂ ಬ್ಯಾಗ್‌ಗಳನ್ನು ಸಾಕ್ಷ್ಯವಾಗಿ ತನಿಖಾಧಿಕಾರಿಗೆ ಹಸ್ತಾಂತರಿಸಲಾಗಿದೆ.

ಪ್ರಕರಣವನ್ನು ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ ಮೃತ ಪೀಟರ್ ಅವರ ಸಹೋದರಿ ಮಾರ್ಗರೇಟ್ ಗಂಭೀರ ಆರೋಪ ಮಾಡಿದ್ದಾರೆ. ಪಂಚನಾಮೆ ಹೆಸರಿನಲ್ಲಿ ತಮ್ಮಿಂದ ಸಹಿ ಪಡೆದು, ತಮ್ಮ ಗಮನಕ್ಕೆ ಬಾರದಂತೆ ಇಬ್ಬರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಹಾಗೂ ಮೃತದೇಹಗಳನ್ನು ಐಸ್‌ಬಾಕ್ಸ್‌ನಲ್ಲೂ ಇರಿಸಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಮಾರ್ಟಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೆಲ್ವಂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಕ್ರೈಸ್ತ ಸಮುದಾಯದ ಪ್ರಮುಖ ನಾಯಕರು ಈ ಘಟನೆಯಲ್ಲಿ ಮೃತ ಕುಟುಂಬಗಳ ನೋವಿಗೆ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಭಾವಿ ಸಮುದಾಯಗಳಿಗೆ ಇಂತಹ ಘಟನೆ ನಡೆದಿದ್ದರೆ ರಾಜ್ಯಾದ್ಯಂತ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿತ್ತು ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

3 ನಿಮಿಷದ Zoom ಕಾಲ್‌ನಲ್ಲಿ 900 ಮಂದಿಗೆ ಗೇಟ್‌ಪಾಸ್: 5 ವರ್ಷ ಬಳಿಕ CEOಗೇ ಮಂಡಳಿಯಿಂದ ಗೇಟ್‌ಪಾಸ್

0

ನ್ಯೂಯಾರ್ಕ್: ಕೋವಿಡ್ ಕಾಲದಲ್ಲಿ ಕೇವಲ ಮೂರು ನಿಮಿಷದ Zoom ಕಾಲ್ ಮೂಲಕ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ಏಕಾಏಕಿ ವಜಾಗೊಳಿಸಿ ಜಾಗತಿಕ ಸುದ್ದಿಯಾಗಿದ್ದ ಭಾರತ ಮೂಲದ ಉದ್ಯಮಿ ವಿಶಾಲ್ ಗರ್ಗ್ ಇದೀಗ ತಾವೇ ತಮ್ಮ ಹುದ್ದೆ ಕಳೆದುಕೊಂಡಿದ್ದಾರೆ. ‘ಬೆಟರ್ ಹೋಮ್ & ಫೈನಾನ್ಸ್’ ಕಂಪನಿಯ CEO ಆಗಿದ್ದ ವಿಶಾಲ್ ಗರ್ಗ್ ಅವರನ್ನು ಕಂಪನಿಯ ಆಡಳಿತ ಮಂಡಳಿಯೇ ಸರ್ವಾನುಮತದಿಂದ ವಜಾಗೊಳಿಸಿದೆ.

ವಿಶಾಲ್ ಗರ್ಗ್ ಅವರ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ, ಸ್ವಭಾವ ಹಾಗೂ ನಂಬಿಕಾರ್ಹತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಮಂಡಳಿ, ಅವರನ್ನು CEO ಹುದ್ದೆಯಿಂದ ತೆಗೆದುಹಾಕಲು ನಿರ್ಧರಿಸಿದೆ. ಕಂಪನಿಯ ಆರ್ಥಿಕ ಕಾರ್ಯಕ್ಷಮತೆಯೂ ಈ ಬೆಳವಣಿಗೆಗೆ ಪ್ರಮುಖ ಹಿನ್ನೆಲೆಯಾಗಿದೆ.

ವಿಶಾಲ್ ಗರ್ಗ್ ಅವರ ನಾಯಕತ್ವದಲ್ಲಿ 2022ರಿಂದ ಕಂಪನಿಯು ಸುಮಾರು 1.5 ಬಿಲಿಯನ್ ಡಾಲರ್ ನಿವ್ವಳ ನಷ್ಟ ಅನುಭವಿಸಿದೆ ಎಂದು ವರದಿಯಾಗಿದೆ. ಇದೇ ಅವಧಿಯಲ್ಲಿ ಕಂಪನಿಯ ಷೇರು ಮೌಲ್ಯ ಶೇ.90ಕ್ಕೂ ಹೆಚ್ಚು ಕುಸಿದಿದೆ.

2021ರ ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್‌ಗೆ ಕೆಲವೇ ದಿನಗಳಿರುವಾಗ ವಿಶಾಲ್ ಗರ್ಗ್ ಮೂರು ನಿಮಿಷಗಳ Zoom ವೆಬಿನಾರ್ ಮೂಲಕ 900ಕ್ಕೂ ಹೆಚ್ಚು ಉದ್ಯೋಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದರು. ಈ ನಿರ್ಧಾರಕ್ಕೆ ಜಾಗತಿಕ ಮಟ್ಟದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಘಟನೆಯ ಬಳಿಕ ಹಲವು ಹಿರಿಯ ಅಧಿಕಾರಿಗಳು ಕಂಪನಿಯಿಂದ ಹೊರನಡೆದಿದ್ದರು. ಕಂಪನಿಯ ಪ್ರತಿಷ್ಠೆಗೂ ದೊಡ್ಡ ಹೊಡೆತ ಬಿದ್ದಿತ್ತು.

ತಮ್ಮ ವರ್ತನೆಗೆ ವಿಶಾಲ್ ಗರ್ಗ್ ನಂತರ ಕ್ಷಮೆಯಾಚಿಸಿದ್ದರೂ, ವಿವಾದದ ಪರಿಣಾಮದಿಂದ ಕಂಪನಿಯ ಮೇಲಿನ ನಕಾರಾತ್ಮಕ ಭಾವನೆ ಸಂಪೂರ್ಣವಾಗಿ ದೂರವಾಗಲಿಲ್ಲ. ಇದರ ಬೆನ್ನಲ್ಲೇ ವ್ಯವಹಾರ ಕುಸಿತ ಹಾಗೂ ಷೇರು ಮೌಲ್ಯದ ಭಾರೀ ಇಳಿಕೆ ಅವರ ನಾಯಕತ್ವದ ಮೇಲೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿತು.

ಇದೀಗ ಕಂಪನಿಯ ಹಂಗಾಮಿ CEO ಆಗಿ ಡೇನಿಯಲ್ ಲೂಯಿಸ್ ಅವರನ್ನು ನೇಮಿಸಲಾಗಿದೆ. ಗಮನಾರ್ಹವೆಂದರೆ, ವಿಶಾಲ್ ಗರ್ಗ್ ಅವರೇ ಲೂಯಿಸ್ ಅವರನ್ನು ಕಂಪನಿಯೊಳಗೆ ಕರೆತಂದಿದ್ದರು ಎನ್ನಲಾಗಿದೆ. ನಂತರ ಅವರು ನಿರ್ದೇಶಕರ ಮಂಡಳಿಗೆ ಸೇರ್ಪಡೆಯಾಗಿದ್ದು, ಮಂಡಳಿಯ ಇತರ ಸದಸ್ಯರನ್ನು ವಿಶಾಲ್ ಗರ್ಗ್ ಅವರನ್ನು ವಜಾಗೊಳಿಸುವ ನಿರ್ಧಾರದತ್ತ ಕರೆದೊಯ್ದರು ಎಂಬ ಮಾಹಿತಿ ಇದೆ.

ವಜಾಗೊಂಡಿರುವುದನ್ನು ಪ್ರಶ್ನಿಸಿರುವ ವಿಶಾಲ್ ಗರ್ಗ್ ಇದೀಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಕಂಪನಿಯನ್ನು ಮತ್ತೆ ಲಾಭದ ಹಾದಿಗೆ ತರುವವರೆಗೆ ವರ್ಷಕ್ಕೆ ಕೇವಲ ಒಂದು ಡಾಲರ್ ವೇತನಕ್ಕೆ ಕೆಲಸ ಮಾಡಲು ಸಿದ್ಧ ಎಂದು ಹೇಳುವ ಮೂಲಕ CEO ಹುದ್ದೆಯನ್ನು ಮರಳಿ ಪಡೆಯುವ ಪ್ರಯತ್ನ ನಡೆಸುತ್ತಿದ್ದಾರೆ.

“ಕತ್ತಲಲ್ಲಿ ಆತ್ಮರಕ್ಷಣೆಗಾಗಿ ಫೈರಿಂಗ್”: ಹನೂರು ಎನ್‌ಕೌಂಟರ್ ಬಗ್ಗೆ ಸದನದಲ್ಲಿ ರಾಮಲಿಂಗಾರೆಡ್ಡಿ ಸ್ಪಷ್ಟನೆ

0

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಘಟನೆ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಸದನಕ್ಕೆ ಸಂಪೂರ್ಣ ಮಾಹಿತಿ ನೀಡಿದ್ದು, ಮೃತರು ತಮ್ಮ ಜಮೀನಿಗೆ ತೆರಳಿರಲಿಲ್ಲ, ಬದಲಾಗಿ ಅರಣ್ಯದೊಳಗೆ 5ರಿಂದ 8 ಕಿಲೋಮೀಟರ್ ಅಕ್ರಮವಾಗಿ ಪ್ರವೇಶಿಸಿದ್ದರು ಎಂದು ಸ್ಪಷ್ಟಪಡಿಸಿದ್ದಾರೆ.

ಶಾಗ್ಯ ಸಮೀಪ ಕಳ್ಳಬೇಟೆಗಾರರು ಅಕ್ರಮವಾಗಿ ಅರಣ್ಯ ಪ್ರವೇಶಿಸಿರುವ ಮಾಹಿತಿ ಹಿಂದಿನ ರಾತ್ರಿ 8 ಗಂಟೆ ಸುಮಾರಿಗೆ ಅರಣ್ಯ ಇಲಾಖೆಗೆ ಲಭ್ಯವಾಗಿತ್ತು. ಮಾಹಿತಿ ಆಧರಿಸಿ 10 ಸಿಬ್ಬಂದಿಯನ್ನು ಒಳಗೊಂಡ ಎರಡು ತಂಡಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿತ್ತು. ಮುಂಜಾನೆ ಸುಮಾರು 5 ಗಂಟೆಗೆ ಅರಣ್ಯದ ಬಂಡೆಯೊಂದರ ಬಳಿ ಬ್ಯಾಟರಿ ಬೆಳಕು ಕಾಣಿಸಿಕೊಂಡಿದ್ದು, ಸಿಬ್ಬಂದಿ ಶರಣಾಗುವಂತೆ ಸೂಚಿಸಿದ್ದರು ಎಂದು ಸಚಿವರು ತಿಳಿಸಿದ್ದಾರೆ.

ಈ ವೇಳೆ ಬೇಟೆಗಾರರ ಕಡೆಯಿಂದ ಅರಣ್ಯ ಸಿಬ್ಬಂದಿಯತ್ತ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಪ್ರತಿಯಾಗಿ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಕತ್ತಲಿನ ವಾತಾವರಣ ಹಾಗೂ ಎತ್ತರದ ಪ್ರದೇಶದ ಕಾರಣ ಎದುರಿನವರ ಚಲನವಲನ ಸ್ಪಷ್ಟವಾಗಿ ಕಾಣಿಸಿರಲಿಲ್ಲ. ಗುಂಡಿನ ಚಕಮಕಿಯಲ್ಲಿ ಅರಣ್ಯ ಸಿಬ್ಬಂದಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಗುಂಡಿನ ದಾಳಿ ನಿಂತ ಬಳಿಕ ಸ್ಥಳಕ್ಕೆ ತೆರಳಿದಾಗ ಮೂವರು ಗುಂಡೇಟಿನಿಂದ ಗಾಯಗೊಂಡಿರುವುದು ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಸಚಿವರು ವಿವರಿಸಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ನಾಡಬಂದೂಕುಗಳು, ಕಾಡತೂಸುಗಳು, ಪಟಾಕಿ, ಮದ್ದಿನ ಬಾಕ್ಸ್, ಮೊಬೈಲ್‌ಗಳು, ಚಾರ್ಜರ್ ಬ್ಯಾಟರಿ ಹಾಗೂ ದಿನಸಿ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ, ಬ್ಯಾಗ್‌ಗಳಲ್ಲಿ ಸುಮಾರು 20ರಿಂದ 35 ಕೆ.ಜಿ. ಜಿಂಕೆ ಮಾಂಸವೂ ಪತ್ತೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅರಣ್ಯ ಸಂರಕ್ಷಣೆ ಇಲಾಖೆಯ ಕರ್ತವ್ಯವಾಗಿದ್ದು, ಪ್ರಕರಣದಲ್ಲಿ ಈಗಾಗಲೇ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಬಳಿಕ ಅರಣ್ಯ ಸಿಬ್ಬಂದಿಯಿಂದ ಉದ್ದೇಶಪೂರ್ವಕವಾಗಿ ತಪ್ಪು ನಡೆದಿರುವುದು ಅಥವಾ ಕಾನೂನು ಉಲ್ಲಂಘನೆಯಾಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ಸದನಕ್ಕೆ ಭರವಸೆ ನೀಡಿದ್ದಾರೆ.

ಇದೇ ವೇಳೆ ಪ್ರಕರಣಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮೃತರ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಲು ತಕ್ಷಣ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣದ ನೈತಿಕ ಹೊಣೆ ಹೊತ್ತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.

KUDAಯಲ್ಲಿ ಕೋಟ್ಯಂತರ ಹಣಕ್ಕೆ ಕನ್ನ! ₹8.43 ಕೋಟಿ ಅಕ್ರಮ ವರ್ಗಾವಣೆ ಬಯಲು; ಹೊರಗುತ್ತಿಗೆ ನೌಕರನಿಗಾಗಿ ಪೊಲೀಸರ ಬೇಟೆ

0

ಕೊಪ್ಪಳ, ಆಗಸ್ಟ್ 17: ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಭಾರೀ ಹಣಕಾಸು ಅಕ್ರಮ ಇದೀಗ ಬಯಲಾಗಿದೆ. ಆಡಿಟ್ ವೇಳೆ ₹8.43 ಕೋಟಿ ಹಣ ಅಕ್ರಮವಾಗಿ ವರ್ಗಾವಣೆಯಾಗಿರುವುದು ಪತ್ತೆಯಾಗಿದ್ದು, ಪ್ರಾಧಿಕಾರದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿರುವ ಶಂಕೆ ತನಿಖೆಗೆ ವೇಗ ನೀಡಿದೆ.

ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕವಾಗದ ಅವಧಿಯನ್ನೇ ಆರೋಪಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. 2022-23ರ ಅವಧಿಯಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು ಒಂದೂವರೆ ವರ್ಷಗಳ ಕಾಲ ಅಧ್ಯಕ್ಷರಿಲ್ಲದ ಪರಿಸ್ಥಿತಿ ಇತ್ತು. ಇದೇ ಸಂದರ್ಭದಲ್ಲಿ ಕೊಪ್ಪಳದ ವಿವಿಧ ಬ್ಯಾಂಕ್‌ಗಳಲ್ಲಿ ಪ್ರಾಧಿಕಾರದ ಹೆಸರಿನಲ್ಲಿ ಅನಧಿಕೃತ ಖಾತೆಗಳನ್ನು ತೆರೆಯಲಾಗಿದೆ ಎಂಬ ಆರೋಪವಿದೆ.

ಈ ಖಾತೆಗಳ ಮೂಲಕ ಒಟ್ಟು ₹8.43 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆಡಿಟ್‌ನಲ್ಲಿ ಬೆಳಕಿಗೆ ಬಂದಿದೆ. ಇಷ್ಟು ದೊಡ್ಡ ಮೊತ್ತದ ಹಣದ ವರ್ಗಾವಣೆ ಒಬ್ಬ ವ್ಯಕ್ತಿಯ ಕೈಚಳಕದಿಂದ ಮಾತ್ರ ಸಾಧ್ಯವಿಲ್ಲ. ಹೀಗಾಗಿ ಪ್ರಕರಣದ ಹಿಂದೆ ಸಂಘಟಿತ ಜಾಲವಿರುವ ಸಾಧ್ಯತೆಯ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಹೊರಗುತ್ತಿಗೆ ನೌಕರ ರವೀಂದ್ರ ಕುಮಾರ್ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿ ಗುರುತಿಸಿಕೊಂಡಿದ್ದಾನೆ. ಹೊಸಪೇಟೆಯಲ್ಲಿ ಇದ್ದುಕೊಂಡೇ ಕೊಪ್ಪಳ ಪ್ರಾಧಿಕಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈತ, ತಾನು ಸರ್ಕಾರಿ ನೌಕರನೆಂದು ಬಿಂಬಿಸಿಕೊಂಡಿದ್ದ ಎನ್ನುವ ಆರೋಪವೂ ಇದೆ.

ನಕಲಿ ಖಾತೆಗಳನ್ನು ಯಾರು ತೆರೆದರು? ಅವುಗಳಿಗೆ ಅನುಮತಿ ನೀಡಿದವರು ಯಾರು? ₹8.43 ಕೋಟಿ ಹಣವನ್ನು ಯಾವ ಖಾತೆಗಳಿಗೆ ವರ್ಗಾಯಿಸಲಾಗಿದೆ? ಅಂದಿನ ಅಧಿಕಾರಿಗಳ ಪಾತ್ರವೇನು? ಎಂಬ ಪ್ರಶ್ನೆಗಳಿಗೆ ತನಿಖೆಯ ಮೂಲಕ ಉತ್ತರ ಸಿಗಬೇಕಿದೆ.

ಸದ್ಯ ರವೀಂದ್ರ ಕುಮಾರ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅಕ್ರಮ ವರ್ಗಾವಣೆಯ ಸಂಪೂರ್ಣ ವಿವರ ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ತನಿಖಾ ತಂಡ ಮಾಹಿತಿ ಕಲೆಹಾಕುತ್ತಿದೆ.