ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅರ್ಜಿದಾರ ಹೆಚ್. ಏಕಾಂತಯ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಂಕಜ್ ಮಿಥಲ್ ಅವರ ನೇತೃತ್ವದ ದ್ವಿ-ಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿಯಲ್ಲಿ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಮನವಿ ಮಾಡಲಾಗಿದೆ.
ಇದಕ್ಕೂ ಮೊದಲು, ಮಠದ ಆಸ್ತಿಯನ್ನು ಮಠದ ಆಡಳಿತದ ವಶದಲ್ಲೇ ಇರಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ವಿಚಾರಣೆ ವೇಳೆ ಮಠದ ಭಕ್ತೆಯೊಬ್ಬರು ಮಧ್ಯಪ್ರವೇಶ ಅರ್ಜಿ ಸಲ್ಲಿಸಿ, ಮಠದ ಸ್ವಾಮೀಜಿ ಆಸ್ತಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು. ತಮ್ಮನ್ನೂ ಪ್ರಕರಣದಲ್ಲಿ ಭಾಗಿಯಾಗಲು ಅವಕಾಶ ನೀಡುವಂತೆ ಅವರು ಮನವಿ ಮಾಡಿದರು.
ಈ ಮನವಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಮಧ್ಯಪ್ರವೇಶಕ್ಕೆ ಅನುಮತಿ ನೀಡಿದ್ದು, ಮುಂದಿನ ವಿಚಾರಣೆಯಲ್ಲಿ ಹೆಚ್ಚಿನ ವಿವರಗಳನ್ನು ಪರಿಶೀಲಿಸುವುದಾಗಿ ತಿಳಿಸಿದೆ.

