ಬೆಂಗಳೂರು: ಬಿಜೆಪಿಯೊಳಗಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಗೊಂದಲಗಳಿಗೆ ಪಕ್ಷದ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಣ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ಡಮತದಾನ ಮಾಡಿದ ಶಾಸಕರು ರಾಜೀನಾಮೆ ನೀಡಬೇಕು ಎಂಬ ಶೋಭಾ ಕರಂದ್ಲಾಜೆ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದರು.
ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಬಗ್ಗೆ ಅಸೂಯೆಯಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದನ್ನು ಹಾಗೂ ಅಶೋಕ್ ಪ್ರತಿಪಕ್ಷ ನಾಯಕರಾಗಿರುವುದನ್ನು ಅವರು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇವರಿಬ್ಬರಿಗೂ ಹೇಗಾದರೂ ಕೆಟ್ಟ ಹೆಸರು ತಂದು ರಾಜಕೀಯವಾಗಿ ದುರ್ಬಲಗೊಳಿಸುವ ಉದ್ದೇಶ ಹೊಂದಿದ್ದಾರೆ ಎಂದು ಸೋಮಶೇಖರ್ ಟೀಕಿಸಿದರು.
ಬಿಜೆಪಿಯ 63 ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಪ್ರಮಾಣ ಮಾಡಿಸುವ ಅಗತ್ಯವಿಲ್ಲ. ಮೊದಲು ಶೋಭಾ ಕರಂದ್ಲಾಜೆ ಅವರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಪ್ರಮಾಣ ಮಾಡಿಸಿದರೆ ಹಲವು ವಿಚಾರಗಳು ಬಹಿರಂಗವಾಗುತ್ತವೆ ಎಂದು ಅವರು ವ್ಯಂಗ್ಯವಾಡಿದರು.
ಪಕ್ಷ ನಮ್ಮನ್ನು ಈಗಾಗಲೇ ಉಚ್ಚಾಟನೆ ಮಾಡಿದೆ. ಹೀಗಿರುವಾಗ ನಮ್ಮ ಬಗ್ಗೆ ಮಾತನಾಡುವ ನೈತಿಕ ಹಕ್ಕು ಅವರಿಗೆ ಏನಿದೆ? ಕೇಂದ್ರ ಸಚಿವೆಯಾಗಿದ್ದರೂ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸಿಲ್ಲ. ವಿಜಯೇಂದ್ರ ಮತ್ತು ಅಶೋಕ್ ಅವರನ್ನು ಪದಚ್ಯುತಿಗೊಳಿಸಿ ರಾಜಕೀಯವಾಗಿ ಅವಮಾನಿಸುವುದೇ ಅವರ ಉದ್ದೇಶವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದಿಂದ ಕ್ಷೇತ್ರಕ್ಕೆ ಅನುದಾನ ದೊರೆತಿರುವ ಹಿನ್ನೆಲೆಯಲ್ಲಿ ನಾವು ಅವರಿಗೆ ಬೆಂಬಲ ನೀಡಿದ್ದೇವೆ ಎಂಬುದನ್ನು ಬಹಿರಂಗವಾಗಿಯೇ ಹೇಳಿದ್ದೇವೆ. ನಮ್ಮ ನಿಲುವಿನ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಸೋಮಶೇಖರ್ ಸ್ಪಷ್ಟಪಡಿಸಿದರು.

