ಯಾದಗಿರಿ: ಯಾದಗಿರಿಯ ಕೈಗಾರಿಕಾ ಪ್ರದೇಶದಲ್ಲಿ ಭೀಕರ ದುರಂತ ಸಂಭವಿಸಿದೆ.
ಕೆಮಿಕಲ್ ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಉಸಿರುಗಟ್ಟಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಯಾದಗಿರಿ ತಾಲೂಕಿನ ಕಡೆಚೂರು-ಬಾಡಿಹಾಳ ಕೈಗಾರಿಕಾ ಪ್ರದೇಶದಲ್ಲಿರುವ ಹೈದರಾಬಾದ್ ಮೂಲದ ಖಾಸಗಿ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಫ್ಯಾಕ್ಟರಿಯ ಕೆಮಿಕಲ್ ಸ್ಕ್ರಬ್ಬರ್ನಿಂದ ಅಪಾಯಕಾರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.
ಗ್ಯಾಸ್ನ ಕೆಟ್ಟ ವಾಸನೆ ಹಾಗೂ ವಿಷಕಾರಿ ಪರಿಣಾಮದಿಂದ ಉಸಿರಾಟದ ತೊಂದರೆ ಉಂಟಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಮಧ್ಯಪ್ರದೇಶ ಹಾಗೂ ಆಂಧ್ರಪ್ರದೇಶ ಮೂಲದ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯಲ್ಲಿ ಅಸ್ವಸ್ಥಗೊಂಡ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಕಾರ್ಮಿಕರ ಸಾವಿನ ಹಿನ್ನೆಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

